ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿದ ಸಿದ್ದರಾಮಯ್ಯ! » Dynamic Leader
October 21, 2024
ರಾಜ್ಯ

ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿದ ಸಿದ್ದರಾಮಯ್ಯ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನೂತನ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಆಸ್ಪತ್ರೆಗಳಲ್ಲಿ ಬಡವರಿಗೆ ಹೆಚ್ಚು ಆಸಕ್ತಿಯಿಂದ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡಬೇಕು. ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಿದ್ದಾರೆ ಹಾಗಾಗಿ ಸಮಾಜದ ದೃಷ್ಟಿಯಿಂದ ಇದು ಒಳ್ಳೆಯದು ಎಂದು ಹೇಳಿದರು.

ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ವಾರಕ್ಕೆ ಮೂರು ಬಾರಿ ಮಾಡಿಸಿಕೊಳ್ಳಬೇಕಾಗುತ್ತದೆ. ಒಮ್ಮೆ ಮಾಡಿಸಿದರೆ 2,000 ರೂ.ಗಳಿಗಿಂತ ಹೆಚ್ಚಿದೆ. ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗ. ಅದಕ್ಕಾಗಿ ಸರ್ಕಾರ ಬಡವರಿಗೆ ಸಹಾಯಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ 219 ಡಯಾಲಿಸಿಸ್ ಕೇಂದ್ರಗಳಿವೆ. 800 ಯಂತ್ರಗಳನ್ನು ಈ ಕೇಂದ್ರಗಳಲ್ಲಿ ಅಳವಡಿಸುವ ಕೆಲಸವಾಗುತ್ತಿದೆ. ಹಿಂದೆ ನಮ್ಮ ಸರ್ಕಾರವಿದ್ದಾಗ ಹಾಗೂ ಈಗಲೂ ಕೂಡ ಸಾಧ್ಯವಾದ ಮಟ್ಟಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಿಕೊಡಬೇಕೆಂಬ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಸಣ್ಣ ವಯಸ್ಸಿನವರಿಗೂ ಕಿಡ್ನಿ ಸಮಸ್ಯೆ ಬರುತ್ತದೆ. ಅದಕ್ಕಾಗಿ ಸರ್ಕಾರ ಎಷ್ಟು ಸಾಧ್ಯವೋ ಅಷ್ಟು ಜನರಿಗೆ ಡಯಾಲಿಸಿಸ್ ಮಾಡಿಸುವ ಕೆಲಸ ಮಾಡುತ್ತಿದೆ. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಈ ಸೇವೆ ದೊರಕಬೇಕು. ಜನರಿಗೆ ಹತ್ತಿರದಲ್ಲಿಯೇ ಈ ಸೇವೆ ಪಡೆಯಬಹುದು ಎಂದು ಹೇಳಿದರು.

ಏಕಬಳಕೆ ಮಾಡುವ ಡಯಾಲೈಸರ್ ಗಳನ್ನು ಪರಿಚಯಿಸಲಾಗಿದೆ. ಇದರಿಂದ ಸೋಂಕು ಕಡಿಮೆ ಮಾಡಬಹುದಾಗಿದೆ. ಡಯಾಲಿಸಿಸ್ ಕೇಂದ್ರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಅನುದಾನ ಒದಗಿಸಿಕೊಟ್ಟಿದೆ. ರಾಜ್ಯ ಸರ್ಕಾರ ಶೇ.60 ಹಾಗೂ ಕೇಂದ್ರ ಸರ್ಕಾರ ಶೇ.40 ರಷ್ಟು ಅನುದಾನ ನೀಡಲಿದೆ. ಆದರೆ ಹೆಸರು ಮಾತ್ರ ಪ್ರಧಾನಮಂತ್ರಿ ಡಯಾಲಿಸಿಸ್ ಎಂದಿದೆ. ಹೆಚ್ಚಾಗಿ ಅನುದಾನ ಒದಗಿಸುವುದು ರಾಜ್ಯ ಸರ್ಕಾರ ಎಂದು ಕಿಡಿಕಾರಿದರು.

ಸಮಾಜದಲ್ಲಿ ಅಸಮಾನತೆ ಇದ್ದು ಬಹಳ ಜನ ಕಷ್ಟದಲ್ಲಿ ಕೈತೊಳೆಯುವ ಪರಿಸ್ಥಿತಿ ಇದೆ. ಅಸಮಾನತೆ ಹೋಗಲಾಡಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಅಸಮಾನತೆ ಹೋಗಲಾಡಿಸಲು 5 ಗ್ಯಾರಂಟಿ ಕಾರ್ಯಕ್ರಮಗಳು ಪ್ರಮುಖ ಪಾತ್ರ ವಹಿಸಲಿವೆ. ಶಕ್ತಿ ಯೋಜನೆಯಡಿ ಮಹಿಳೆಯರು 141 ಕೋಟಿ ಬಾರಿ ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ಶಕ್ತಿ ಯೋಜನೆಯನ್ನು ಸಮರ್ಥಿಸಿಕೊಂಡರು.

1.18 ಕೋಟಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ, 5 ಕೆಜಿ ಅಕ್ಕಿಗೆ 170 ರೂಪಾಯಿ, ಪ್ರತಿ ತಿಂಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಯುವನಿಧಿ ಕಾರ್ಯಕ್ರಮ ನಿರುದ್ಯೋಗಿ ಯುವಕರಿಗೆ ಜಾರಿಯಾಗಿದೆ. ಜನರ ಕೊಳ್ಳುವ ಶಕ್ತಿ ಹೆಚ್ಚು ಮಾಡಲು ಈ ಯೋಜನೆಗಳನ್ನು ಜಾರಿಗೆ ತರುತ್ತಿದ್ದೇವೆ ಎಂದು ಹೇಳಿದರು.

ಡಯಾಲಿಸಿಸ್ ಸೇವೆಯನ್ನು ಹೆಚ್ಚು ಮಾಡುವ ಕೆಲಸ ಮಾಡುತ್ತೇವೆ. ಆರೋಗ್ಯ ಇಲಾಖೆಯನ್ನು ಸಚಿವ ದಿನೇಶ್ ಗುಂಡೂರಾವ್ ಸುಧಾರಣೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಕೆ.ಸಿ.ಜನರಲ್ ಆಸ್ಪತ್ರೆ ತಾಯಿ ಮಕ್ಕಳ ಆಸ್ಪತ್ರೆ ಆಗಬೇಕು. ಶವಾಗಾರ, ಅಡುಗೆ ಮನೆ, ಜೈವಿಕ ತ್ಯಾಜ್ಯ ಕೊಠಡಿ, ಮೂಲಭೂತ ಸೌಕರ್ಯಗಳನ್ನು 150 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಇದನ್ನು ಸಚಿವ ಸಂಪುದಲ್ಲಿಟ್ಟು ಒಪ್ಪಿಗೆ ಪಡೆಯಲಾಗುವುದು ಎಂದು ಭರವಸೆ ನೀಡಿದರು.

Related Posts