ಕೇಂದ್ರ ಸರ್ಕಾರ ಜಾರಿ ಮಾಡಿದ್ದ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ » Dynamic Leader
October 21, 2024
ರಾಜ್ಯ

ಕೇಂದ್ರ ಸರ್ಕಾರ ಜಾರಿ ಮಾಡಿದ್ದ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಶವನ್ನು ಉದ್ಘಾಟಿಸಿ, ಬಳಿಕ ರೈತ ಪರ ಬಜೆಟ್ ರೂಪಿಸಲು ರೈತ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು.

ರೈತರು ನೀಡಿದ ಹಕ್ಕೊತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದು ಎಂದು ಹೇಳಿದರು.

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಾರ್ಗದರ್ಶನ ನನಗೆ ಅನುಕೂಲವಾಯಿತು ಎಂದು ಹೇಳಿದರು.

ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಅವರು ಬೆಳೆಸಿದ ರೈತ ಚಳವಳಿ, ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು. ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟಗಳು ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ. ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆಯಾಗಿದೆ ಎಂದು ಹೇಳಿದರು.

ಬಡಗಲಾಪುರ ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದ ರೈತ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್.ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕರಾದ ಕುಮಾರ್ ಸಮತಳ ಸೇರಿ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Related Posts