ರಾಜಕೀಯ Archives » Page 19 of 47 » Dynamic Leader
October 24, 2024
Home Archive by category ರಾಜಕೀಯ (Page 19)

ರಾಜಕೀಯ

ದೇಶ ರಾಜಕೀಯ

ರಾಯ್‌ಪುರ: ಪ್ರಧಾನಿ ಮೋದಿ ಎಲ್ಲಿಗೆ ಹೋದರೂ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಛತ್ತೀಸ್‌ಗಢ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಛತ್ತೀಸ್‌ಗಢದ ಪಲೋಡಾ ಬಜಾರ್ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಮಾತನಾಡಿದರು: ಮೋದಿ ಎಲ್ಲಿಗೆ ಹೋದರೂ ನನ್ನನ್ನು ನಿಂದಿಸುತ್ತಿದ್ದಾರೆ. ಆದರೆ ನಾನು ಅದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಮೋದಿ ಗ್ಯಾರಂಟಿ ಎಂದರೆ ಅದು ಅದಾನಿಯ ಗ್ಯಾರಂಟಿಯೇ.

ಛತ್ತೀಸ್‌ಗಢದಲ್ಲಿ ಕೆ.ಜಿ.ಯಿಂದ ಪಿ.ಜಿ.ವರೆಗೆ ಉಚಿತ ಶಿಕ್ಷಣ ನೀಡಲು ಭೂಪೇಶ್ ಬಾಗಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಜಾತಿವಾರು ಜನಗಣತಿ:
ಮಧ್ಯಪ್ರದೇಶದ ದಾಡಿಯಾ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು, “ಮಧ್ಯಪ್ರದೇಶದಲ್ಲಿ ನಾವು (ಕಾಂಗ್ರೆಸ್) ಅಧಿಕಾರಕ್ಕೆ ಬಂದರೆ, ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ. ಜಾತಿವಾರು ಜನಗಣತಿ ನಡೆಸುತ್ತೇವೆ.

ಮಧ್ಯಪ್ರದೇಶದಲ್ಲಿ ರಸಗೊಬ್ಬರಕ್ಕಾಗಿ ರೈತರು ಉದ್ದನೆಯ ಸರತಿ ಸಾಲಿನಲ್ಲಿ ಕಾಯುತ್ತಿದ್ದಾರೆ. ಇಲ್ಲಿ ರಸಗೊಬ್ಬರ ಸಿಗುತ್ತಿಲ್ಲ. ಮಧ್ಯಪ್ರದೇಶದಲ್ಲಿ ಚುನಾವಣಾ ಸಂದರ್ಭದಲ್ಲಿ ರಸಗೊಬ್ಬರದ ಚೀಲಗಳ ಮೇಲೆ ಮೋದಿ ಫೋಟೋ ಅಂಟಿಸಿದ್ದಕ್ಕೆ ಚುನಾವಣಾ ಆಯೋಗ ಗೊಬ್ಬರ ವಿತರಣೆಗೆ ನಿಷೇಧ ಹೇರಿದೆ. ಇದರಿಂದ ಮಧ್ಯಪ್ರದೇಶದ ರೈತರು ಕಂಗಾಲಾಗಿದ್ದಾರೆ” ಎಂದು ಮಾತನಾಡಿದ್ದಾರೆ.

ರಾಜಕೀಯ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಕಾಂಗ್ರೆಸ್ ಎದುರು ಸೋಲನ್ನು ಪ್ರದರ್ಶಿಸಿತು. ಸೋಲಿಗೆ ಹೊಣೆಹೊತ್ತ ಜಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ರಾಜೀನಾಮೆಯನ್ನು ಅಂಗೀಕರಿಸದೇ ವಿಳಂಬ ಮಾಡಿಬಂದ ಬಿಜೆಪಿ ವರಿಷ್ಠರು ಅದರ ಮೇಲೆ ಇದೀಗ ಕ್ರಮ ವಹಿಸಿದ್ದಾರೆ.

ಖಾಲಿಯಿದ್ದ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬಸವನಗೌಡ ಪಾಟೀಲ ಯತ್ನಾಲ್, ಸಿ.ಟಿ.ರವಿ, ಶೋಭ ಕರಂದ್ಲಾಜೆ ಮುಂತಾದವರ ಹೆಸರುಗಳನ್ನು ಕೆಲವರು ತೇಲಿಬಿಟ್ಟಿದ್ದರು. ಅದರೂ ಕೇಂದ್ರದ ಬಿಜೆಪಿ ನಾಯಕರು ಮೌನವಾಗಿಯೇ ಇದ್ದರು. ಡಿಸೆಂಬರ್ 4 ರಿಂದ ಚಳಿಗಾಲದ ಅಧಿವೇಶನದ ದಿನಾಂಕ ನಿಗದಿಯಾಗಿರುವುದರಿಂದ ಎಚ್ಚೆತ್ತುಕೊಂಡ ಕೇಂದ್ರ ಬಿಜೆಪಿ ನಾಯಕರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವುದರ ಮೂಲಕ, ಬಿಜೆಪಿ ಪಕ್ಷವು ಲಿಂಗಾಯತರನ್ನು ಮೂಲೆಗುಂಪು ಮಾಡಿದೆ ಎಂಬ ಅಪಾವಾದಕ್ಕೆ ತೆರೆ ಎಳೆದಿದೆ. ನಿಧಾನವಾದರೂ ಯೋಚಿಸಿ, ಅಳೆದು ತೂಗಿ, ಈ ನೇಮಕವನ್ನು ಮಾಡಲಾಗಿದೆ. ಸಂಘಟನಾ ಚತುರ, ಕ್ರಿಯಾಶೀಲ, ಉತ್ಸಾಹಿ ನಾಯಕ ವಿಜಯೇಂದ್ರ ಯಡಿಯೂರಪ್ಪ ಅವರು ಉತ್ತಮವಾದ ಆಯ್ಕೆ ಎಂಬುದರಲ್ಲಿ ಎರಡು ಮಾತಿಲ್ಲ.

ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, “ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್.ಸಂತೋಷ ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳು.

ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನ್ನ್ಗೆ ಶ್ರೀರಕ್ಷೆ” ಎಂದು ಹೇಳಿದ್ದಾರೆ.

ರಾಜಕೀಯ

ಬೆಂಗಳೂರು: ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ಕಾಂಗ್ರೆಸ್ ಸರಕಾರ, ರೈತರ ಮೇಲೆಯೂ ವಕ್ರದೃಷ್ಟಿ ಬೀರಿದೆ. ಬರ, ವಿದ್ಯುತ್ ಕ್ಷಾಮದಿಂದ ಕಂಗೆಟ್ಟು ಹೋಗಿರುವ ಅನ್ನದಾತರಿಗೆ ಮತ್ತೊಂದು ಬರೆ ಎಳೆದು, ತಾನು ರೈತದ್ರೋಹಿ ಎಂದು ಸಾಬೀತು ಮಾಡಿಕೊಂಡಿದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾಸ್ವಾಮಿ ಹೇಳಿದ್ದಾರೆ.

‘ಗ್ಯಾರಂಟಿಗಳಿಗೆ ಪ್ರಚಾರ ಜಾಸ್ತಿ, ಅಭಿವೃದ್ದಿಗೆ ಹಣ ನಾಸ್ತಿ’ ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ತಲೆದೋರಿದೆ. ರೈತರಿಗೆ ಹೊಸ ವಿದ್ಯುತ್ ಸಂಪರ್ಕಕ್ಕೆ ಕೊಡುತ್ತಿದ್ದ ಸಬ್ಸಿಡಿಗೆ ಕಾಂಗ್ರೆಸ್ ಸರಕಾರ ಕತ್ತರಿ ಹಾಕಿದೆ ಎನ್ನುವ ಸರಕಾರಿ ಆದೇಶ ನೋಡಿ ನನಗೆ ತೀವ್ರ ಆಘಾತ ಉಂಟಾಯಿತು. ಕೇಡುಗಾಲಕ್ಕೆ ಕೋಳಿಯು ಮೊಟ್ಟೆ ಬದಲು ಮರಿಯನ್ನೇ ಹಾಕಿತು ಎನ್ನುವ ಹಾಗೆ ಕಾಂಗ್ರೆಸ್ ಸರಕಾರ ಎರಡು ಕೈಗಳಿಂದಲೂ ರೈತರ ಮೇಲೆ ಮಣ್ಣು ಹಾಕುತ್ತಿದೆ ಎಂದು

ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿದ್ದ ಅನ್ನದಾತರಿಗೆ ಇದುವರೆಗೆ ಟ್ರಾನ್ಸ್ ಫಾರ್ಮ್, ವಿದ್ಯುತ್ ಕಂಬ, ಅಲ್ಯುಮಿನಿಯಂ ತಂತಿ ಇತ್ಯಾದಿಗಳಿಗೆ ಸರಕಾರವೇ ಸಬ್ಸಿಡಿ ಕೊಡುತ್ತಿತ್ತು. ಚುನಾವಣೆಯಲ್ಲಿ ಮತಕ್ಕಾಗಿ ಯಾವ ಹಸ್ತ ರೈತರ ಪಾದ ಮುಟ್ಟಿ ಮತಯಾಚನೆ ಮಾಡಿತೋ, ಈಗ ಅದೇ ಹಸ್ತ ಅಧಿಕಾರ ಸಿಕ್ಕ ಮೇಲೆ ಅನ್ನದಾತನ ಕೊರಳಿಗೆ ಹಗ್ಗ ಬಿಗಿಯತೊಡಗಿದೆ! ಇದಕ್ಕಿಂತ ಪೈಶಾಚಿಕ ಮನಃಸ್ಥಿತಿ ಮತ್ತೊಂದು ಇರಲು ಸಾಧ್ಯವೇ? ಎಂದು ಕಟಕಿಯಾಡಿದ್ದಾರೆ.

ತಮ್ಮ ಪಾಲಿನ 24,000 ರೂಪಾಯಿ ಭರಿಸುವುದಕ್ಕೇ ಇನ್ನಿಲ್ಲದ ಕಡುಕಷ್ಟ ಅನುಭವಿಸುತ್ತಿರುವ ರೈತರು, ಇನ್ನು ಮುಂದೆ ಪೂರ್ಣ ವೆಚ್ಚ ಭರಿಸಬೇಕು ಎಂದು ಸರಕಾರ ಆದೇಶ ಹೊರಡಿಸಿದೆ. ಕಟುಕರ ಕೈಗೆ ಕರ್ನಾಟಕ ಸಿಕ್ಕಿ ನರಳುತ್ತಿದೆ ಎನ್ನುವುದಕ್ಕೆ ಇದಕ್ಕಿಂತ ಪುರಾವೆ ಬೇಕೆ? ಅಧಿಕಾರಕ್ಕೆ ಬಂದಾಗಿನಿಂದ ಸಮಾಧಿ ಸ್ಥಿತಿಯಲ್ಲಿರುವ ಈ ಸರಕಾರವು, ಇಂಥ ಜನದ್ರೋಹಿ ಕೃತ್ಯಗಳಲ್ಲಿ ಬಹಳ ಕ್ರಿಯಾಶೀಲವಾಗಿದೆ! ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಸರಕಾರ ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಲೇಬೇಕು. ಮೊದಲಿನಂತೆ ರೈತರಿಗೆ ಸಬ್ಸಿಡಿ ಕೊಡಬೇಕು. ಒಂದು ವೇಳೆ ಆದೇಶ ವಾಪಸ್ ಪಡೆಯದಿದ್ದರೆ ಜೆಡಿಎಸ್ ಪಕ್ಷ ಸದನದ ಒಳಗೆ, ಹೊರಗೆ ಹೋರಾಟಕ್ಕೆ ಇಳಿಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಬಂಡವಾಳಶಾಹಿ ಮನಃಸ್ಥಿತಿಯ ಲಾಭಕೋರ ಪಕ್ಷ. ಕಸಾಯಿ ಸಂಸ್ಕೃತಿಯ ಕಟುಕ ಪಕ್ಷ. ಅದಕ್ಕೆ ಕರುಣೆ, ದಯೆ, ದಾಕ್ಷಿಣ್ಯ ಎನ್ನುವುದು ಇರುವುದಿಲ್ಲ. ಇಡೀ ಕರ್ನಾಟಕವನ್ನೇ ಎಟಿಎಂ ಮಾಡಿಕೊಂಡು ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರಕಾರ, ಈಗ ರೈತರನ್ನೂ ಕೊಳ್ಳೆ ಹೊಡೆಯುತ್ತಿದೆ. ಒಂದು ಕೈಲಿ ಕೊಟ್ಟು ಹತ್ತು ಕೈಗಳಲ್ಲಿ ಕಿತ್ತುಕೊಳ್ಳುವ ರಾವಣರೂಪಿ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ. ವಿನಾಶಕಾಲೇ ವಿಪರೀತ ಬುದ್ಧಿ! ವಿನಾಶಕಾಲೇ ವಿಪರೀತ ಆಸೆ!! ಎಂದು ಕಿಡಿಕಾರಿದ್ದಾರೆ.

ರಾಜಕೀಯ

ಕರೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ನಾನು ಹಣ ಪಡೆದಿರುವ ಬಗ್ಗೆ ಪುರಾವೆ ಇದ್ದರೆ ಅಣ್ಣಾಮಲೈ ಪ್ರಕಟಿಸಲಿ. ಅಗತ್ಯಬಿದ್ದರೆ ಅಣ್ಣಾಮಲೈ ಅವರ ಆಸ್ತಿ ಮೌಲ್ಯವನ್ನು ನಾನು ಬಹಿರಂಗಪಡಿಸುತ್ತೇನೆ ಎಂದು ಕರೂರು ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ಹೇಳಿದ್ದಾರೆ.

ನಾನೊಬ್ಬ ಮಹಿಳೆಯಾದ್ದರಿಂದ ಆಕೆಯನ್ನು ಬದುಕಲು ಬಿಟ್ಟಿದ್ದೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ. ಇದನ್ನು ಹೇಳಲು ಅಣ್ಣಾಮಲೈ ಯಾರು? ಅಣ್ಣಾಮಲೈ ನನ್ನನ್ನು ಏನು ಮಾಡಬಹುದು? ಜಾರಿ ನಿರ್ದೇಶನಾಲಯದ ಬೇಟೆ ನಾಯಿಗಳನ್ನು (ಅಧಿಕಾರಿಗಳನ್ನು) ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಬಿಜೆಪಿಯವರು ಅಕ್ರಮವಾಗಿ ಬಳಸಿಕೊಳ್ಳುತ್ತಿದ್ದಾರೆ.

ಸಾಧ್ಯವಾದರೆ ಜಾರಿ ಇಲಾಖೆಯನ್ನು ನನ್ನ ಮನೆಗೆ ಕಳುಹಿಸಲಿ. ನನ್ನ ಮನೆಯಲ್ಲಿ ಗಂಜಿಹಾಕಿದ ಕಾಟನ್ ಸೀರೆಗಳನ್ನು ಬಿಟ್ಟು ಬೇರೇನೂ ಸಿಗುವುದಿಲ್ಲ. ಮರಳು ಮಾಫಿಯಾಗಳಿಂದ ಹಣ ಪಡೆದು ಅಣ್ಣಾಮಲೈ ಅವರಂತೆ ಐಷಾರಾಮಿ ಜೀವನ ನಡೆಸಲಿಲ್ಲ. ಮನೆ ಬಾಡಿಗೆ 3.70 ಲಕ್ಷ ರೂ.ಗಳ ಬಗ್ಗೆ ಕೇಳಿದ ಪ್ರಶ್ನೆಗೆ ಅಣ್ಣಾಮಲೈ ಇನ್ನೂ ಪ್ರತಿಕ್ರಿಯಿಸಲಿಲ್ಲ.

ಅವರಂತೆ ನಿನ್ನೆಯ ಮಳೆಯಿಂದ ಇಂದು ಚಿಗುರೊಡೆದ ಅಣಬೆಯಲ್ಲ ನಾನು. ವೈಯಕ್ತಿಕವಾಗಿ ಮಹಿಳೆಯರ ಮೇಲೆ ಕೊಳಕು ರಾಜಕಾರಣ ನಡೆಸುವ ರಾಜಕಾರಣಿ ಅಣ್ಣಾಮಲೈ. ಅವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಪ್ಪು ಕುರಿಯಾಗಿದ್ದರು. 2018ರಲ್ಲಿ ನಡೆದ ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಇರಲಿಲ್ಲ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ ಪರವಾಗಿ ಯಡಿಯೂರಪ್ಪ ಮೂರು ದಿನ ಮುಖ್ಯಮಂತ್ರಿಯಾಗಿದ್ದರು.

ಇದನ್ನೂ ಓದಿ: ಅಲಿಘರ್ ನಗರದ ಹೆಸರನ್ನು ಹರಿಘರ್ ಎಂದು ಬದಲಾಯಿಸಲು ನಿರ್ಧಾರ!

ಯಡಿಯೂರಪ್ಪ ಸರ್ಕಾರವನ್ನು ಉಳಿಸಲು ಆಗ ​​ಚಿಕ್ಕಮಗಳೂರಿನಲ್ಲಿ ಎಸ್ಪಿಯಾಗಿದ್ದ ಅಣ್ಣಾಮಲೈಯನ್ನು ರಾಮನಗರಕ್ಕೆ ವರ್ಗಾಯಿಸಲಾಯಿತು. ಅಣ್ಣಾಮಲೈ ಮೂಲಕ, ರಾಮನಗರದಲ್ಲಿ ಬೀಡುಬಿಟ್ಟಿದ್ದ ಕಾಂಗ್ರೆಸ್ ಶಾಸಕರಿಗೆ ಹಣನೀಡಿ, ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಸೆಳೆಯುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿತ್ತು.

ಆ ಪ್ರಯತ್ನ ವಿಫಲವಾದಾಗ ಅಣ್ಣಾಮಲೈ ಮತ್ತೆ ಚಿಕ್ಕಮಗಳೂರಿಗೆ ವಾಪಸ್ಸಾಗಿ ಮತ್ತೆ ಅಲ್ಲಿಂದ ಬೆಂಗಳೂರಿಗೆ ಬಂದು ಸೇರಿಕೊಂಡರು. ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು. ರಾಜಕೀಯವೇ ಗೊತ್ತಿಲ್ಲದ ಅಣ್ಣಾಮಲೈ ಅವರಿಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನ ಸಿಕ್ಕಿದೆ.

ಮರಳು ಮಾಫಿಯಾಗಳಿಂದ 60 ಲಕ್ಷ ರೂಪಾಯಿ ಪಡೆದಿರುವುದಾಗಿ ಚೆನ್ನೈನಲ್ಲಿರುವ ಬಿಜೆಪಿ ಕಚೇರಿಯ ನೌಕರನ ಮನೆಗೆ ಜಾರಿ ಇಲಾಖೆ ತೆರಳಿತು. ಆದರೆ, ಜಾರಿ ಅಧಿಕಾರಿಗಳು ಸಂಬಂಧಿಸಿದವರನ್ನು ವಿಚಾರಣೆ ನಡೆಸದೆ ವಾಪಸ್ಸು ಹೋಗಿದ್ದು ಏಕೆ ಎಂಬುದಕ್ಕೆ ಉತ್ತರವಿಲ್ಲ. ಯಾವುದೇ ಸರ್ಕಾರಿ ಹುದ್ದೆ ಇಲ್ಲದ ಅಣ್ಣಾಮಲೈ ಅವರಿಗೆ ಅತ್ಯಧಿಕ ಝಡ್ ಕೆಟಗರಿ ರಕ್ಷಣೆ ನೀಡಿರುವುದರಿಂದ ವರ್ಷಕ್ಕೆ 3 ಕೋಟಿ ರೂ. ವರೆಗೆ ಖರ್ಚಾಗುತ್ತಿದೆ.

ಸಂಸದೆಯಾಗಿರುವ ನಾನೇ ವಿಮಾನದ ಪ್ರಥಮ ದರ್ಜೆಯಲ್ಲಿ ಹಾರುವುದಿಲ್ಲ. ಅವರು ನನ್ನನ್ನು ಹೇಗೆ ಪ್ರಶ್ನಿಸಬಹುದು? ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಣ್ಣಾಮಲೈ ಅವರ ಭ್ರಷ್ಟಾಚಾರ ಬಯಲಾಗಲಿದೆ. ಆಗ ಅವರು ಇರಬೇಕಾದ ಸ್ಥಳ ಬೇರಯದಾಗಿರುತ್ತದೆ. ಅಣ್ಣಾಮಲೈ ಕಲೆಕ್ಷನ್ ಕಿಂಗ್ ಆಗಿ ಹರಿದಾಡುತ್ತಿದ್ದಾರೆ. ನಾನು ಕರ್ನಾಟಕದ ಉಪಮುಖ್ಯಮಂತ್ರಿ ಶಿವಕುಮಾರ್ ಅವರಿಂದ ಹಣ ಪಡೆದಿರುವ ಬಗ್ಗೆ ಪುರಾವೆ ಇದ್ದರೆ ಅದನ್ನು ಅಣ್ಣಾಮಲೈ ಬಹಿರಂಗಪಡಿಸಲಿ. ಅಗತ್ಯವಿದ್ದರೆ ಅಣ್ಣಾಮಲೈ ಆಸ್ತಿ ಮೌಲ್ಯದ ಬಗ್ಗೆ ಪ್ರಕಟಿಸುತ್ತೇನೆ. ಎಂದು ಹೇಳಿದರು.

ದೇಶ ರಾಜಕೀಯ

 ಡಿ.ಸಿ.ಪ್ರಕಾಶ್, ಸಂಪಾದಕರು

ಪ್ರಧಾನಿ ನರೇಂದ್ರ ಮೋದಿಯವರು ಬಿಟ್ಟಿಗಳ ವಿರುದ್ಧ ಮಾತನಾಡುತ್ತಿದ್ದರೂ ಬಿಜೆಪಿ ಚುನಾವಣೆಯ ಸಮಯದಲ್ಲಿ ಬಿಟ್ಟಿಗಳೆಂಬ ಅಸ್ತ್ರವನ್ನು ತಪ್ಪದೇ ಹೊರತಂದು ಮತದಾರರ ಮುಂದೆ ಜಳಪಿಸುತ್ತದೆ!

“ವಿರೋಧ ಪಕ್ಷಗಳು ಮತ ಸೆಳೆಯಲು ಉಚಿತ ಕೊಡುಗೆಗಳನ್ನು ನೀಡುತ್ತವೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉಚಿತಗಳ ವಿರುದ್ಧ ಮಾತನಾಡುತ್ತಾರೆ. ಮತ್ತು “ಉಚಿತಗಳು ನಮ್ಮ ಮಕ್ಕಳ ಹಕ್ಕುಗಳನ್ನು ಕಸಿದುಕೊಂಡು ನಮ್ಮ ಅಭಿವೃದ್ಧಿಗೆ ಅಡ್ಡಿಯಾಗುತ್ತವೆ” ಎಂದು ಹೇಳುತ್ತಾರೆ. “ಸ್ವಾರ್ಥ ರಾಜಕಾರಣಕ್ಕಾಗಿ ರಾಜಕೀಯ ಪಕ್ಷಗಳಿಂದ ಘೋಷಿಸಲ್ಪಡುವ ಉಚಿತ ಘೋಷಣೆಗಳು ದೇಶವು ಸ್ವಾವಲಂಬಿಯಾಗುವುದನ್ನು ತಡೆಯುತ್ತದೆ. ಮತ್ತು ಪ್ರಾಮಾಣಿಕ ತೆರಿಗೆದಾರರ ಮೇಲಿನ ಹೊರೆ ಹೆಚ್ಚಿಸುವುದರ ಜೊತೆಗೆ, ಹೊಸ ತಂತ್ರಜ್ಞಾನಗಳಲ್ಲಿನ ಹೂಡಿಕೆಗಳನ್ನು ಸಹ ನಿರ್ಬಂಧಿಸುತ್ತದೆ” ಎಂದು ಪ್ರಧಾನಿ ಮೋದಿ ಎಲ್ಲಡೆಯೂ ಹೇಳುತ್ತಾರೆ.

”ಉಚಿತಗಳನ್ನು ನೀಡುವುದರಿಂದ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಉಚಿತಗಳು ಮುಂದುವರಿದರೆ ಶ್ರೀಲಂಕಾ, ಪಾಕಿಸ್ತಾನದಂತಹ ದೇಶಗಳ ಸ್ಥಿತಿ ಭಾರತಕ್ಕೂ ಬರುತ್ತದೆ” ಎಂಬುದು ಪ್ರಧಾನಿ ಮೋದಿಯವರ ಅಭಿಪ್ರಾಯ. ಮೋದಿ ಅವರು ಉಚಿತಗಳ ವಿರುದ್ಧ ಮಾತನಾಡಲು ಪ್ರಾರಂಭಿಸಿದ ನಂತರ, ಚುನಾವಣಾ ಪ್ರಣಾಳಿಕೆಗಳಲ್ಲಿ ‘ಅಲ್ಪಾವಧಿಯ ಉಚಿತ’ಗಳಿಗೆ ಸಂಬಂಧಿಸಿದ ಘೋಷಣೆಗಳನ್ನು ತಪ್ಪಿಸುವಂತೆ ಬಿಜೆಪಿ ತನ್ನ ರಾಜ್ಯ ಘಟಕಗಳಿಗೆ ಸೂಚನೆ ನೀಡಿದೆ ಎಂದು ವರದಿಗಳಾಗಿವೆ.

ಇದನ್ನೂ ಓದಿ: ಕಾಶ್ಮೀರಿ ಭಯೋತ್ಪಾದಕರ ಕಾಲಿಗೆ ಜಿಪಿಎಸ್ ಸಾಧನ ಅಳವಡಿಕೆ: ಓಡಲು ಸಾಧ್ಯವಿಲ್ಲ; ಅಡಗಿಕೊಳ್ಳಲೂ ಸಾಧ್ಯವಿಲ್ಲ.!

ಉಚಿತಗಳ ವಿರುದ್ಧ ಪ್ರಧಾನಿ ಮೋದಿಯವರ ಹೇಳಿಕೆಗಳಿಗೆ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ. “ನಾವು ಉಚಿತಗಳನ್ನು ನೀಡುವುದಿಲ್ಲ ಶಿಕ್ಷಣ, ವೈದ್ಯಕೀಯ ಮುಂತಾದ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುತ್ತೇವೆ; ಅದು ಉಚಿತಗಳಲ್ಲ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಪ್ರಧಾನಿಯವರು ಉಚಿತಗಳ ವಿರುದ್ಧ ಮಾತನಾಡುತ್ತಿರುವಾಗಲೇ ಬಿಜೆಪಿಯ ಭದ್ರಕೋಟೆಯಾಗಿರುವ ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಬಿಟ್ಟಿ ಭರವಸೆಗಳನ್ನು ನೀಡಿತ್ತು. ಅದೇನೆಂದರೆ, ಹಿರಿಯ ನಾಗರಿಕರಿಗೆ ಉಚಿತ ಬಸ್ ಪ್ರಯಾಣ, ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಕಾಲೇಜು ಹೆಣ್ಣುಮಕ್ಕಳಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಆರ್ಥಿಕವಾಗಿ ಹಿಂದುಳಿದ ಗರ್ಭಿಣಿಯರಿಗೆ ಉಚಿತ ಮಾಸಿಕ ಪೌಷ್ಟಿಕಾಂಶ ಯೋಜನೆ, ಪ್ರತಿ ವರ್ಷ ಎರಡು ಅಡುಗೆ ಅನಿಲ ಸಿಲಿಂಡರ್ ಇತ್ಯಾದಿಗಳು. ‘ಇದರೊಂದಿಗೆ ಬಿಜೆಪಿ ಉಚಿತಗಳ ವಿರುದ್ಧ ತನ್ನ ನಿಲುವನ್ನು ಬದಲಿಸಿಕೊಂಡಿದೆ’ ಎಂದು ವಿರೋಧ ಪಕ್ಷಗಳು ಟೀಕಿಸಿತು.

ಮುಂದೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಕಷ್ಟು ಉಚಿತ ಭರವಸೆಗಳನ್ನು ನೀಡಿತ್ತು. ಕರ್ನಾಟಕದಲ್ಲಿ ಬಡವರಿಗೆ ದಿನಕ್ಕೆ ಅರ್ಧ ಲೀಟರ್ ಹಾಲು, ವರ್ಷಕ್ಕೆ ಮೂರು ಅಡುಗೆ ಅನಿಲ ಸಿಲಿಂಡರ್‌ಗಳು, ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಯಂದು ಬಡವರಿಗೆ ಉಚಿತ ಸಿಲಿಂಡರ್ ನೀಡಲಾಗುವುದು ಮುಂತಾದ ಹತ್ತುಹಲವು ಭರವಸೆಗಳನ್ನು ಬಿಜೆಪಿ ನೀಡಿತ್ತು.

ಇದೀಗ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ರಂಗೇರುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಛತ್ತೀಸ್ ಗಢದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ವಿವಾಹಿತ ಮಹಿಳೆಯರಿಗೆ ವಾರ್ಷಿಕ 12 ಸಾವಿರ ರೂಪಾಯಿಗಳು ನೀಡುವುದಾಗಿ ಭರವಸೆ ನೀಡಿದ್ದಾರೆ. ಅಂದರೆ, ತಮಿಳುನಾಡಿನ ಡಿಎಂಕೆ ಸರ್ಕಾರ ಮಹಿಳೆಯರಿಗೆ 1000 ರೂಪಾಯಿ ಮಹಿಳಾ ಸ್ಟೈಫಂಡ್ ನೀಡುತ್ತಿರುವಂತೆಯೇ ಛತ್ತೀಸ್‌ಗಢದಲ್ಲಿ ಬಿಜೆಪಿ ಯೋಜನೆಯನ್ನು ಘೋಷಿಸಿದೆ. ಇದರಿಂದಾಗಿ ಡಿಎಂಕೆ ಆಡಳಿತದ ಯೋಜನೆಯನ್ನು ಬಿಜೆಪಿ ನಕಲು ಮಾಡುತ್ತಿದೆ ಎಂಬ ಟೀಕೆಯೂ ವ್ಯಕ್ತವಾಗಿದೆ.

ಇದನ್ನೂ ಓದಿ: ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ ಎಂಬುದನ್ನು ಅರಿತುಕೊಳ್ಳಬೇಕು: ಸುಪ್ರೀಂ ಕೋರ್ಟ್!

ಬಿಟ್ಟಿಗಳನ್ನು ವಿರೋಧಿಸುವ ಬಿಜೆಪಿಯವರು ಉಚಿತ ಭರವಸೆಗಳನ್ನು ನೀಡುತ್ತಿರುವುದು ಏಕೆ? ಎಂಬ ಪ್ರಶ್ನೆಯನ್ನೂ ರಾಜಕೀಯ ವಿಮರ್ಶಕರು ಎತ್ತುತ್ತಿದ್ದಾರೆ. ಉಚಿತಗಳು ಎಂದು ಪ್ರಧಾನಿ ಮೋದಿಯಂತಹವರು ಮಾತನಾಡುವುದು ರಾಜ್ಯ ಸರ್ಕಾರಗಳು ಜಾರಿಗೊಳಿಸುವ ಬಡವರ ಕಲ್ಯಾಣ ಯೋಜನೆಗಳನ್ನೇ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಅದನ್ನೇ ಬಿಜೆಪಿ ಮತ್ತು ಸಂಘಪರಿವಾರದವರು ವಿರೋಧಿಸುವುದು.  

ಅದೇ ಸಮಯದಲ್ಲಿ, ದೊಡ್ಡ ಕಾರ್ಪೊರೇಟ್‌ಗಳಿಗೆ ನೀಡುತ್ತಿರುವ ಆ ಉಚಿತಗಳನ್ನು ಬಿಜೆಪಿ ವಿರೋಧಿಸುವುದಿಲ್ಲ! ಕಳೆದ ಒಂಬತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ಸಾಲ ಮನ್ನಾ ಮತ್ತು ತೆರಿಗೆ ವಿನಾಯಿತಿ ಎಂದು 25 ಲಕ್ಷ ಕೋಟಿ ರೂಪಾಯಿಗಳನ್ನು ಬಿಜೆಪಿ ಸರ್ಕಾರ ದೊಡ್ಡ ಕಾರ್ಪೊರೇಟ್ ಕಂಪನಿಗಳಿಗೆ ನೀಡಿದೆ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿವೆ. ಆದರೆ, ಸಣ್ಣಪುಟ್ಟ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಬಡವರಿಗೆ ನೀಡುವ ಮೂಲಭೂತ ಸೌಲಭ್ಯಗಳನ್ನು ಮಾತ್ರ ‘ಉಚಿತ’ ಎಂದು ಬಿಜೆಪಿ ವಿರೋಧಿಸುತ್ತದೆ.

ಇದನ್ನೂ ಓದಿ: ಜೆಡಿಎಸ್ ‘ರೈತ ಸಾಂತ್ವನ ಯಾತ್ರೆ’ಯನ್ನು ವ್ಯಂಗ್ಯವಾಗಿ ಸ್ವಾಗತ ಮಾಡಿದ ಸಿದ್ದರಾಮಯ್ಯಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕುಮಾರಸ್ವಾಮಿ!

ಪ್ರಧಾನಿ ನರೇಂದ್ರ ಮೋದಿಯವರು ಬಿಟ್ಟಿಗಳ ವಿರುದ್ಧ ಮಾತನಾಡುತ್ತಿದ್ದರೂ ಬಿಜೆಪಿ ಚುನಾವಣೆಯ ಸಮಯದಲ್ಲಿ ಬಿಟ್ಟಿಗಳೆಂಬ ಅಸ್ತ್ರವನ್ನು ತಪ್ಪದೇ ಹೊರತಂದು ಮತದಾರರ ಮುಂದೆ ಜಳಪಿಸುತ್ತದೆ! ವಿರೋಧ ಪಕ್ಷಗಳ ಬಿಟ್ಟಿಗಳನ್ನು ಟೀಕಿಸುವ ಮೋದಿ ಅವರು, ಸ್ವಂತ ಪಕ್ಷದ ಬಿಟ್ಟಿ ಘೋಷಣೆಗಳ ಬಗ್ಗೆ ಮಾತನಾಡದೇ ಹಾದುಹೋಗುತ್ತಾರೆ!?

ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

ರಾಜಕೀಯ

ಬೆಂಗಳೂರು: ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆನ್ನೆ ವ್ಯಂಗ್ಯವಾಗಿ ಹೇಳಿದ್ದರು. ಇದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ ಎಂದು ಹೇಳಿದ್ದಾರೆ.

‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ʼಗಂಭೀರ(!?)ʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು? ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ! ಅಲ್ಲವೇ? ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸರಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಸರಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ? ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ? ಎನ್ನುವುದು ನನ್ನ ವಿನಮ್ರ ಪ್ರಶ್ನೆ. ಎಂದು ಕಿಡಿಕಾರಿದ್ದಾರೆ.

236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ; 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಈ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್‌ ಮಂಡಿಸಿ ‘ವಿಶ್ವವಿಖ್ಯಾತ ವಿತ್ತತಜ್ಞ’ರಾಗಿ ಮೆರೆಯುತ್ತಿರುವವರು ನೀವು. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ‘ಜೋಪಾನ’ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ? ಎಂದು ಚೇಡಿಸಿದ್ದಾರೆ

ಹೋಗಲಿ, ನೀವು ಈ ರಾಜ್ಯದ ಮುಖ್ಯಮಂತ್ರಿ… ದೆಹಲಿಗೆ ಹೋಗಿ ಪ್ರಧಾನಿಗಳಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಅದನ್ನೂ ಮಾಡಲಿಲ್ಲ, ಪ್ರತಿಷ್ಠೆ ನಿಮಗೆ. ಪ್ರಧಾನಿಗಳನ್ನು ಸದಾ ನಿಂದಿಸುತ್ತಾ ಕುಳಿತರೆ ಲಾಭವೇನು? ಇಲ್ಲಿ ವರ್ಗಾವಣೆ ದಂಧೆ, ಕಮೀಷನ್ ವಸೂಲಿ, ಆಪರೇಷನ್‌ ಹಸ್ತ, ಡಿನ್ನರ್‌-ಬ್ರೇಕ್‌ ಫಾಸ್ಟ್‌ ಮೀಟಿಂಗುಗಳಲ್ಲಿಯೇ ʼಭಾರೀʼ ಬ್ಯುಸಿ‌ ಆಗಿರುವ ನಿಮಗೆ ದೆಹಲಿಗೆ ಜನರ ಅಹವಾಲು ತೆಗೆದುಕೊಂಡು ಹೋಗಲು ಸಮಯವಾದರೂ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ  

ಇದನ್ನೂ ಓದಿ: ಜೆಡಿಎಸ್ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ: ಸಿದ್ದರಾಮಯ್ಯ

ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ? ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿ ಪ್ರಧಾನಿಗಳನ್ನು,‌ ಸಂಬಂಧಿಸಿದ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ? ಎಷ್ಟು ಅರ್ಜಿ ಕೊಟ್ಟಿದ್ದೀರಿ? ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿನ್ನರ್‌-ಬ್ರೇಕ್‌ ಫಾಸ್ಟ್ ಮೀಟಿಂಗ್‌‌ ಮಾಡಿಕೊಂಡು ಆಪರೇಷನ್‌ ಹಸ್ತದ ಬಗ್ಗೆಯೇ ನಿಮ್ಮ ಸಚಿವರ ಬಳಿ ಅಲವತ್ತುಕೊಳ್ಳುತ್ತಿದ್ದೀರಿ. ಪಂಚರಾಜ್ಯಗಳಿಗೆ ಹಣ ಹಂಚಲು ರಾಜ್ಯವನ್ನು ದೋಚುವುದು ಹೇಗೆಂದು ಗುಟ್ಟು ಗುಟ್ಟಾಗಿ ಪಾಠ ಮಾಡುತ್ತಿದ್ದೀರಿ. ಜೆಡಿಎಸ್‌, ಬಿಜೆಪಿ ಶಾಸಕರು ಹಾಗೂ ಸೋತ ಅಭ್ಯರ್ಥಿಗಳನ್ನು ಆಪರೇಷನ್‌ ಮಾಡಲು ಗುಳ್ಳೆನರಿಗಳಂತೆ ಅವರ ಮನೆಗಳ ಮುಂದೆ ಕತ್ತಲಾದ ಮೇಲೆ ಹೊಂಚು ಹಾಕಿ ಕೂರುತ್ತಿದ್ದೀರಿ ಎಂದು ಕಟಕಿಯಾಡಿದ್ದಾರೆ.

ಕುತ್ತಿಗೆಗೆ ಗ್ಯಾರಂಟಿ ಬೋರ್ಡ್‌ ತಕಲಾಕ್ಕೊಂಡು ಹಾದಿಬೀದಿಯಲ್ಲಿ ಓಡಾಡುತ್ತಿದ್ದೀರಿ. ಐದು ತಿಂಗಳಿಗೇ ಭದ್ರತೆಯ ಗ್ಯಾರಂಟಿ ಇಲ್ಲದೆ ಬಾಲಗ್ರಹಪೀಡಿತ ನಿಮ್ಮ ಸರಕಾರ ಭಿನ್ನಮತಪೀಡಿತವಾಗಿದೆ. ಕುರ್ಚಿ ಉಳಿಸಿಕೊಳ್ಳಲು ನೀವೂ ಹೆಣಗಾಡುತ್ತಿದ್ದೀರಿ. ಹೌದಲ್ಲವೇ? ಆನ್ಸರ್ ಮಾಡಿ ಸನ್ಮಾನ್ಯ  ಸಿದ್ದರಾಮಯ್ಯನವರೇ? ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ದೇಶ ರಾಜಕೀಯ

ಪಾಟ್ನಾ: 1871ರಲ್ಲಿ ಬ್ರಿಟಿಷ್ ಆಳ್ವಿಕೆಯಲ್ಲಿ ಭಾರತದಲ್ಲಿ ಜನಗಣತಿ ನಡೆಸಲಾಯಿತು. ತರುವಾಯ, 1881ರಲ್ಲಿ, ಭಾರತದಲ್ಲಿ ಮೊದಲ ಜಾತಿವಾರು ಜನಗಣತಿಯನ್ನು ನಡೆಸಲಾಯಿತು. ಅದರ ನಂತರ ಅಂತಿಮವಾಗಿ 1931ರಲ್ಲಿ ಜಾತಿವಾರು ಜನಗಣತಿಯನ್ನು ನಡೆಸಲಾಯಿತು. ಸ್ವಾತಂತ್ರ್ಯದ ನಂತರ 1951 ರಲ್ಲಿ ದೇಶವು ತನ್ನ ಮೊದಲ ಜನಗಣತಿಯನ್ನು ನಡೆಸಿತು. ಆದರೆ, ಅದರಲ್ಲಿ ಜಾತಿವಾರು ವಿವರಗಳನ್ನು ತೆಗೆದುಕೊಂಡಿಲ್ಲ.

1931ರ ಜಾತಿವಾರು ಜನಗಣತಿಯ ಪ್ರಕಾರ ಜಾತಿವಾರು ಮೀಸಲಾತಿಯನ್ನು ವರ್ಗೀಕರಿಸಲಾಯಿತು. ಅದು ಇದುವರೆಗೂ ಆಚರಣೆಯಲ್ಲಿದೆ. ಭಾರತದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ 2011ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಷ್ಟ್ರವ್ಯಾಪಿ ಜನಗಣತಿ ನಡೆಸಿ ಪೂರ್ಣಗೊಳಿಸಲಾಯಿತು.

ಆದರೆ, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಅದನ್ನು ಪ್ರಕಟಿಸಲಿಲ್ಲ. ಈ ಹಿನ್ನಲೆಯಲ್ಲಿ, ಜಾತಿವಾರು ಜನಗಣತಿ ನಡೆಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಆದರೆ, ಬಿಜೆಪಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದೆ.

ಏತನ್ಮಧ್ಯೆ, ಜೆಡಿಯು-ಕಾಂಗ್ರೆಸ್-ಆರ್.ಜೆ.ಡಿ ಮೈತ್ರಿ ಸರ್ಕಾರ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಕಳೆದ ತಿಂಗಳು ಜಾತಿವಾರು ಜನಗಣತಿ ಬಿಡುಗಡೆ ಮಾಡಲಾಯಿತು. ಇದರ ಬೆನ್ನಲ್ಲೇ ವಿವಿಧ ರಾಜ್ಯಗಳಲ್ಲಿ ಜಾತಿವಾರು ಜನಗಣತಿ ನಡೆಸುವುದಾಗಿ ಘೋಷಿಸಲಾಗಿದೆ. ಈ ಸಮೀಕ್ಷೆಯಿಂದ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ಮಾತನಾಡುವ ವೇಳೆ, “ಜಾತಿವಾರು ಗಣತಿಯನ್ನು ಬಿಜೆಪಿ ಎಂದಿಗೂ ವಿರೋಧಿಸಿಲ್ಲ “ಎಂದರು. “ಬಿಹಾರದಲ್ಲಿ ನಡೆದ ಜಾತಿವಾರು ಜನಗಣತಿಯಲ್ಲಿ ಯಾದವ ಮತ್ತು ಮುಸ್ಲಿಂ ಸಮುದಾಯದವರ ಸಂಖ್ಯೆ ಹೆಚ್ಚಾಗಿದ್ದು, ಇತರೆ ಸಮುದಾಯಗಳ ಸಂಖ್ಯೆ ಕಡಿಮೆಯಾಗಿದೆ” ಎಂದೂ ಆರೋಪಿಸಿದ್ದಾರೆ.

ಈ ಹಿನ್ನಲೆಯಲ್ಲಿ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಅಮಿತ್ ಶಾ ಅವರ ಆರೋಪವನ್ನು ಖಂಡಿಸಿದ್ದಾರೆ. ಮತ್ತು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಪೋಸ್ಟ್ ನಲ್ಲಿ “ಸುಳ್ಳು ಮತ್ತು ಗೊಂದಲವನ್ನು ಹರಡುವ ಬದಲು, ದಯವಿಟ್ಟು ಇದಕ್ಕೆ ಉತ್ತರಿಸಿ ಅಮಿತ್ ಶಾ ಜೀ” ಎಂದು ಹೇಳಿ 5 ಪ್ರಶ್ನೆಗಳು ಕೇಳಿದ್ದಾರೆ.

1. ಬಿಹಾರದ ಜಾತಿವಾರು ಜನಗಣತಿ ದತ್ತಾಂಶ ತಪ್ಪಾಗಿದ್ದರೆ, ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಲ್ಲಿ ಜಾತಿವಾರು ಜನಗಣತಿ ನಡೆಸಿ ಅದರ ಅಂಕಿ ಸಂಖ್ಯೆ ಮಾಹಿತಿಯನ್ನು ಏಕೆ ಪ್ರಕಟಿಸಲಿಲ್ಲ?

2. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಿಜೆಪಿ ಜಾತಿವಾರು ಜನಗಣತಿಯನ್ನು ಏಕೆ ನಡೆಸಲಿಲ್ಲ?

3. ಕೇಂದ್ರ ಸರ್ಕಾರದಲ್ಲಿ ಎಷ್ಟು ಕ್ಯಾಬಿನೆಟ್ ಮಂತ್ರಿಗಳು 𝐎𝐁𝐂 / 𝐒𝐂 / 𝐒𝐓 ವರ್ಗಕ್ಕೆ ಸೇರಿದ್ದಾರೆ ಮತ್ತು ಎಷ್ಟು ಮಂದಿ 𝐎𝐁𝐂 / 𝐒𝐂 / 𝐒𝐓 ವರ್ಗಕ್ಕೆ ಸೇರಿದವರಲ್ಲ; ಪಟ್ಟಿಯನ್ನು ಪ್ರಕಟಿಸಿ. ಹೀಗಿದ್ದರೂ ಅವರಿಗೆ ಏಕೆ ಅಮುಖ್ಯ ಇಲಾಖೆಗಳನ್ನು ನೀಡಲಾಗಿದೆ.

4. 𝐎𝐁𝐂 / 𝐒𝐂 / 𝐒𝐓 ಬಣದಿಂದ ಎಷ್ಟು ಬಿಜೆಪಿ ಮುಖ್ಯಮಂತ್ರಿಗಳಿದ್ದಾರೆ? ಹಿಂದುಳಿದ ಮತ್ತು ಹಿಂದುಳಿದವರಲ್ಲದ ಮುಖ್ಯಮಂತ್ರಿಗಳ ಹೋಲಿಕೆ ಮಾಡಿ ಶೇಕಡಾವಾರು ಪ್ರಮಾಣವನ್ನು ತಿಳಿಸಿ.

5. ಕೇಂದ್ರ ಕ್ಯಾಬಿನೆಟ್ ಮಂತ್ರಿಗಳಲ್ಲಿ ಬಿಹಾರದಿಂದ ಎಷ್ಟು ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ಮಂತ್ರಿಗಳು ಇದ್ದಾರೆ? ಶೂನ್ಯವೇ 𝟎 ?

ಈ ಪ್ರಶ್ನೆಗಳಿಗೆ ಉತ್ತರಿಸುವುದರಿಂದ ನಿಮ್ಮನ್ನೂ ಸೇರಿಸಿ 8𝟓% ಹಿಂದುಳಿದ ಮತ್ತು ದಲಿತ ಹಿಂದೂಗಳ ಕಣ್ಣು ತೆರೆಯುತ್ತದೆ.” ಎಂದು ಉಲ್ಲೇಖಿಸಿದ್ದಾರೆ.

ದೇಶ ರಾಜಕೀಯ

ಸಿಯೋನಿ: ಮಧ್ಯಪ್ರದೇಶದ ಸಿಯೋನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವಿಲ್ಲ ಎಂದು ಹೇಳಿದ್ದಾರೆ.

“ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ನಮ್ಮ ದೇಶದ ಜನರನ್ನು ಉಳಿಸಲು ನಾವು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿದ್ದೇವೆ. ಮತ್ತು ಬಡವರು ಆಹಾರದ ಕೊರತೆಯಿಂದ ಬಳಲದಂತೆ ನಾವು ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ. ಅದಕ್ಕಾಗಿಯೇ ನಾವು ಜನರಿಗೆ ಉಚಿತ ಪಡಿತರ ವಸ್ತುಗಳನ್ನು ನೀಡಿದವು.

ಗರೀಬ್ ಕಲ್ಯಾಣ್ ಯೋಜನೆಯಡಿ ಉಚಿತ ಆಹಾರ ಧಾನ್ಯಗಳ ವಿತರಣೆಯು ಡಿಸೆಂಬರ್‌ನಲ್ಲಿ ಕೊನೆಗೊಳ್ಳಲಿದೆ. ಆದರೆ ಬಡವರ ನೋವನ್ನು ಅರಿತು ಡಿಸೆಂಬರ್ ನಂತರ ಮುಂದಿನ ಐದು ವರ್ಷಗಳ ಕಾಲ ಒದಗಿಸಲು ನಿರ್ಧರಿಸಿದ್ದೇವೆ.

ನಾನು ಬಡತನದಿಂದ ಎದ್ದು ಬಂದಿದ್ದೇನೆ. ಬಡತನ ಎಂದರೆ ಏನು ಎಂಬುದನ್ನು ಪುಸ್ತಕಗಳಲ್ಲಿ ಓದುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಆದಿವಾಸಿಗಳ ಕಲ್ಯಾಣದ ಬಗ್ಗೆ ಕಾಳಜಿ ಇಲ್ಲ. ಸ್ವಾತಂತ್ರ್ಯಾ ನಂತರ 60 ವರ್ಷಗಳ ಕಾಲ ಕಾಂಗ್ರೆಸ್ ಆಡಳಿತದಲ್ಲಿ ಆದಿವಾಸಿಗಳಿಗೆ ಯಾವುದೇ ಒಳಿತಾಗಲಿಲ್ಲ.

2014ರ ಮೊದಲು ಕಾಂಗ್ರೆಸ್ ಆಡಳಿತದಲ್ಲಿ ಪ್ರತಿ ಯೋಜನೆಯಲ್ಲಿ ಹಲವು ಲಕ್ಷ ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ. ಈಗ ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಇಲ್ಲ. ಬಡವರ ಹಕ್ಕುಗಳಿಗಾಗಿ ನಾವು ಉಳಿಸಿದ ಹಣವನ್ನು ಈಗ ಬಡವರಿಗಾಗಿ ಖರ್ಚು ಮಾಡಲಾಗುತ್ತಿದೆ. ಇದುವೇ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ನಡುವಿನ ದೊಡ್ಡ ವ್ಯತ್ಯಾಸವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಇದಕ್ಕೂ ಮುನ್ನ ಛತ್ತೀಸ್‌ಗಢದ ಬಮಲೇಶ್ವರಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು. ಅವರನ್ನು ದೇವಸ್ಥಾನದ ಆಡಳಿತ ಮಂಡಳಿಯವರು ಸ್ವಾಗತಿಸಿದರು.

ರಾಜಕೀಯ

ಬೆಂಗಳೂರು: ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಬಿಜೆಪಿ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ಹೇಳಿದ್ದಾರೆ.

ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಹೆಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊತೆ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಬಿಜೆಪಿ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ ಎಂದು ಕಿಡಿಕಾರಿದ್ದಾರೆ.

ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದು ವ್ಯಂಗ್ಯವಾಡಿದ್ದಾರೆ.

ರಾಜಕೀಯ

ಬೆಂಗಳೂರು: ಎನ್.ಡಿ.ಆರ್.ಎಫ್‌ ನಿಯಮಾನುಸಾರ ಬರ ಪರಿಹಾರ ಬಿಡುಗಡೆ ಮಾಡಬೇಕಿದ್ದ ಕೇಂದ್ರ ಸರ್ಕಾರ ಅನಗತ್ಯ ವಿಳಂಬ ಮಾಡುತ್ತಿದ್ದು, ಈ ಸಂಬಂಧ ತಾವೇ ಸರ್ವಪಕ್ಷ ನಿಯೋಗ ಕೊಂಡೊಯ್ಯುವುದಾದರೆ ನಾನು ನಿಮ್ಮ ಜೊತೆ ಬರುವುದಾಗಿ ಹೇಳಿದ್ದೆ. ಈಗಲೂ ಕಾಲ ಮಿಂಚಿಲ್ಲ ತಾವು ರಾಜ್ಯದಲ್ಲಿ ಬರ ಅಧ್ಯಯನಕ್ಕಾಗಿ ಪ್ರವಾಸ ಹೋಗುವ ಬದಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯುವುದೇ ಸೂಕ್ತ ಮತ್ತು ಈ ಹೊತ್ತಿನ ಅಗತ್ಯ ನಿರ್ಧಾರವಾಗಿದೆ ಎಂಬುದನ್ನು ಮತ್ತೊಮ್ಮೆ ತಿಳಿಸಬಯಸುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೃಹಲಕ್ಷ್ಮಿ ಯೋಜನೆ ಜಾರಿ ವಿಚಾರದಲ್ಲಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.  

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಮ್ಮ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದುದ್ದು. ಗೃಹಲಕ್ಷ್ಮಿ ಯೋಜನೆ ನಾಡಿನ ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲ ಎಂಬುದು ಮಹಾ ಸುಳ್ಳು. ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯದ 1.08 ಕೋಟಿ ಮಹಿಳೆಯರು ಆಗಸ್ಟ್‌ ತಿಂಗಳಲ್ಲಿ ಯಶಸ್ವಿಯಾಗಿ ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ ಫಲಾನುಭವಿಗಳ ಆಧಾರ್‌ ಸಂಖ್ಯೆ ಬ್ಯಾಂಕ್‌ ಖಾತೆಗೆ ಜೋಡಣೆಯಾಗದಿರುವುದು, ಅರ್ಜಿದಾರರು ಹೆಸರು ಮತ್ತು ವಿಳಾಸದಲ್ಲಿನ ವ್ಯತ್ಯಾಸ ಮುಂತಾದ ಕಾರಣಗಳಿಂದಾಗಿ 9.44 ಲಕ್ಷ ಮಹಿಳೆಯರಿಗೆ ಹಣ ಜಮೆಯಾಗಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮೊದಲ ತಿಂಗಳ ಕಂತಿನ ಹಣ ಶೇ.88ರಷ್ಟು ನೊಂದಣಿಯಾದ ಫಲಾನುಭವಿಗಳ ಖಾತೆಗೆ ಜಮೆ ಆಗಿರುತ್ತದೆ. ಹಣ ಜಮೆ ಆಗದಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ದೋಷ ಸರಿಪಡಿಸುವ ಕಾರ್ಯವನ್ನು ಇಲಾಖೆಯು ಕೈಗೊಂಡಿದ್ದು, ಬರುವ ತಿಂಗಳು ಶೇ.100 ಅರ್ಜಿದಾರ ಯಜಮಾನಿಯರ ಖಾತೆಗೆ ಹಣ ವರ್ಗಾವಣೆ ಮಾಡುವ ಮೂಲಕ ದೇಶದಲ್ಲೇ ಅತಿ ದೊಡ್ಡ ಮೊತ್ತದ ಮಹಿಳಾ ಸಬಲೀಕರಣ ಯೋಜನೆಯನ್ನು ಯಶಸ್ವಿಯಾಗಿ ಪ್ರತಿ ಮನೆಗೆ ತಲುಪಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ವಿದ್ಯುತ್‌ ದರ ಹೆಚ್ಚಳವಾಗಿದೆ ಎಂಬ ಯಡಿಯೂರಪ್ಪ ಅವರ ಹೇಳಿಕೆ ಹಿಂದಿನ ಬಿಜೆಪಿ ಸರ್ಕಾರವನ್ನೇ ಕುರಿತು ಟೀಕೆ ಮಾಡಿದಂತಿದೆ. ಕೆಇಆರ್‌ಸಿ ಮಾರ್ಚ್‌ ತಿಂಗಳಿನಲ್ಲಿ ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಹಿಂದಿನ ಬಿಜೆಪಿ ಸರ್ಕಾರದ ಮುಂದೆ ಮಂಡಿಸಿತ್ತು, ಈ ಪ್ರಸ್ತಾವನೆಗೆ ಬಿಜೆಪಿ ಸರ್ಕಾರ ಅನುಮತಿ ನೀಡಿದ್ದರಿಂದ ಮೇ. 12 ಅಂದರೆ ಚುನಾವಣೆಯ ಫಲಿತಾಂಶ ಬರುವ ಹಿಂದಿನ ದಿನವೇ ಹೊಸ ದರವು ಏಪ್ರಿಲ್‌ 1 ರಿಂದ ಪೂರ್ವಾನ್ವಯ ಆಗುವಂತೆ ಕೆಇಆರ್‌ಸಿ ಜಾರಿಗೊಳಿಸಿತು. ಈ ಸಂಬಂಧ ಗಮನಿಬೇಕಾದ ಇನ್ನೊಂದು ಪ್ರಮುಖ ಅಂಶವೆಂದರೆ. ಈ ಹಿಂದೆ ದರ ನಿಗದಿಪಡಿಸಲು ನಾಲ್ಕು ಸ್ಲ್ಯಾಬ್‌ ಗಳು ಇದ್ದವು, ಈಗ ಅದನ್ನು 2 ಸ್ಲ್ಯಾಬ್‌ ಗಳಿಗೆ ಇಳಿಕೆ ಮಾಡಲಾಗಿದೆ.

0 ಇಂದ 50 ಯುನಿಟ್‌ ವರೆಗೆ ರೂ.4.15, 50 ರಿಂದ 100 ಯುನಿಟ್‌ ವರೆಗೆ ರೂ.5.60, 100 ರಿಂದ 200 ಯುನಿಟ್‌ ವರೆಗೆ ರೂ.7.15 ಹಾಗೂ 250 ಯುನಿಟ್‌ ಗಳಿಗಿಂತ ಹೆಚ್ಚಿನ ಬಳಕೆಗೆ ಯುನಿಟ್‌ ಗೆ ರೂ.8.20 ವಿಧಿಸಲಾಗುತ್ತಿತ್ತು. ಇದನ್ನು ಪರಿಸ್ಕರಿಸಿ ಈಗ ಶೂನ್ಯದಿಂದ 100 ಯುನಿಟ್‌ ಗೆ ರೂ.4.75 ಹಾಗೂ 101 ಗಿಂತ ಮೇಲ್ಪಟ್ಟು ಎಷ್ಟೇ ವಿದ್ಯುತ್‌ ಬಳಕೆ ಮಾಡಿದರೂ ಯುನಿಟ್‌ ಗೆ ರೂ.7 ದರ ವಿಧಿಸಲಾಗುತ್ತಿದೆ. ನಮ್ಮ ಸರ್ಕಾರವು ಬಳಕೆದಾರರ ಹಿಂದಿನ ಒಂದು ವರ್ಷದ ಸರಾಸರಿ ವಿದ್ಯುತ್‌ ಬಳಕೆ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು, ಅದಕ್ಕೆ ಶೇ.10 ಹೆಚ್ಚುವರಿಯಾಗಿ ಸೇರಿಸಿ ಗರಿಷ್ಟ 200 ಯುನಿಟ್‌ ವರೆಗೆ ಉಚಿತ್‌ ವಿದ್ಯುತ್‌ ನೀಡುತ್ತಿರುವುದರಿಂದ ನಿಮ್ಮದೇ ಸರ್ಕಾರ ದರ ಏರಿಕೆ ಮಾಡಿದ್ದರೂ ಆ ಹೊರೆ ನಾಡಿನ 1.58 ಕೋಟಿ ನೊಂದಾಯಿತ ಕುಟುಂಬಗಳನ್ನು ಬಾಧಿಸದಂತೆ ತಡೆದಿದ್ದೇವೆ.

ಕೇಂದ್ರ ಸರ್ಕಾರ 2021ರಲ್ಲಿ ಹೊಸ ಎಲೆಕ್ಟ್ರಿಸಿಟಿ ನಿಯಮ ( Timely Recovery of Costs due to Change in Law ) ವನ್ನು ಜಾರಿಗೆ ತಂದಿತು. ಈ ನಿಯಮದ ಪ್ರಕಾರ ಇಂಧನ ಮತ್ತು ವಿದ್ಯುತ್‌ ಖರೀದಿ ಹೊಂದಾಣಿಕೆ ದರವನ್ನು ರಾಜ್ಯ ಸರ್ಕಾರಗಳು ಭರಿಸದೆ ಬಳಕೆದಾರರ ಮೇಲೆಯೇ ವಿಧಿಸಬೇಕು ಎಂದು ಆದೇಶ ಹೊರಡಿಸಿತು. ಇದನ್ನು 13 ಮಾರ್ಚ್‌ 2023ರಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಇಆರ್‌ಸಿ ಏಪ್ರಿಲ್‌ 1 ರಿಂದ ಅನ್ವಯ ಆಗುವಂತೆ ಗ್ರಾಹಕರಿಂದ ವಸೂಲಿ ಮಾಡಲು ನಿರ್ಧರಿಸಿತು. ಆದರೆ ಈ ವೇಳೆಗೆ ಚುನಾವಣಾ ನೀತಿ ಸಂಹಿತ ಜಾರಿಯಲ್ಲಿ ಇದ್ದುದ್ದರಿಂದ ಮೇ. 12 ರಿಂದ ಬಾಕಿ ಹಣವನ್ನು ವಸೂಲಿ ಮಾಡಲು ಆರಂಭಿಸಿತು. ಈ ಎರಡು ಕಾರಣಗಳಿಂದ ವಿದ್ಯುತ್‌ ದರ ಹೆಚ್ಚಳವಾಗಿದೆ ಆದರೆ ಇದಕ್ಕೆ ಕಾರಣ ನಮ್ಮ ಸರ್ಕಾರವಲ್ಲ, ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಮತ್ತು ಕೇಂದ್ರದ ಬಿಜೆಪಿ ಸರ್ಕಾರವಾಗಿದೆ.

ವಿದ್ಯುತ್‌ ಕೊರತೆಯಿದ್ದು, ಇದನ್ನು ನೀಗಿಸಲು ಸರ್ಕಾರ ಯಾವ ಕ್ರಮ ಕೈಗೊಂಡಿಲ್ಲ ಎಂದು ಯಡಿಯೂರಪ್ಪ ಅವರು ಆರೋಪ ಮಾಡಿದ್ದಾರೆ. ರೈತರಿಗೆ ಮೂರು ಪಾಳಿಯಲ್ಲಿ ನಿರಂತರ 5 ಗಂಟೆಗಳ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಉತ್ತರ ಪ್ರದೇಶದಿಂದ 300 ಮೆ.ವ್ಯಾ ಮತ್ತು ಪಂಜಾಬ್‌ ನಿಂದ 600 ಮೆ.ವ್ಯಾ ವಿದ್ಯುತ್‌ ಖರೀದಿಗೆ ಸೂಚನೆ ನೀಡಲಾಗಿದ್ದು, ಪ್ರಕ್ರಿಯೆ ನಡೆಯುತ್ತಿದೆ. ವಿದ್ಯುತ್‌ ಕಾಯ್ದೆಯ ಸೆಕ್ಷನ್‌ 11 ಜಾರಿ, ರಾಜ್ಯದ ಎಲ್ಲಾ ವಿದ್ಯುತ್‌ ಉತ್ಪಾದನಾ ಘಟಕಗಳು ಗರಿಷ್ಠ ವಿದ್ಯುತ್‌ ಉತ್ಪಾದಿಸಿ ರಾಜ್ಯದ ಗ್ರಿಡ್‌ ಗೆ ಪೂರೈಸುವಂತೆ ಆದೇಶಿಸಲಾಗಿದೆ. ರಾಜ್ಯದ ಶಾಖೋತ್ಪನ್ನ ವಿದ್ಯುತ್‌ ಘಟಕಗಳಿಗೆ ಮರುಚಾಲನೆ ನೀಡಲಾಗಿದೆ. ಎಲ್ಲಾ ಕಲ್ಲಿದ್ದಲು ಸಂಸ್ಥೆಗಳಿಂದ 15 ಲಕ್ಷ ಮೆಟ್ರಿಕ್‌ ಟನ್‌ ಪಡೆಯಲು ಕ್ರಮ ವಹಿಸಲಾಗಿದೆ. ಅಲ್ಪಾವಧಿ ಆಧಾರದಲ್ಲಿ 1300 ಮೆ.ವ್ಯಾ ವಿದ್ಯುತ್‌ ಖರೀದಿಗೆ ಕ್ರಮ ವಹಿಸಲಾಗಿದೆ. ಕೆಪಿಸಿಎಲ್‌ ನ ಅನಿಲ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಕಾರ್ಯಾಚರಣೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ.

ವಿದ್ಯುತ್‌ ಸಮಸ್ಯೆಗಳನ್ನು ಬಗೆಹರಿಸುವ ದೀರ್ಘಾವಧಿಯ ಪ್ರಯತ್ನವಾಗಿ ಪಾವಗಡದಲ್ಲಿ ಹೆಚ್ಚುವರಿಯಾಗಿ 300 ಮೆ.ವ್ಯಾ ಮತ್ತು ಕಲಬುರಗಿಯಲ್ಲಿ 500 ಮೆ.ವ್ಯಾ ಸೋಲಾರ್‌ ಪಾರ್ಕ್‌ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಛತ್ತೀಸ್‌ ಗಡದಲ್ಲಿ ಖಾಸಗಿ / ಜಂಟಿ ಹೂಡಿಕೆಯಡಿ ಕ್ಯಾಪ್ಟೀವ್‌ ಕಲ್ಲಿದ್ದಲು ಗಣಿ ಆರಂಭಕ್ಕೆ ಕ್ರಮ ವಹಿಸಲಾಗುತ್ತಿದೆ. 2013ರಲ್ಲಿ ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದಾಗ ರಾಜ್ಯದ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯವು 14,825 ಮೆ.ವ್ಯಾ ಇತ್ತು, 2018ರ ವೇಳೆಗೆ ಇದನ್ನು 26,025 ಮೆ.ವ್ಯಾ ಗೆ ಏರಿಕೆ ಮಾಡಿದ್ದೆವು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳಾದಿಯಾಗಿ ಸಚಿವರು, ಶಾಸಕರು ಎಲ್ಲರೂ 40% ಕಮಿಷನ್‌ ಹಿಂದೆ ಬಿದ್ದಿದ್ದರಿಂದ ಉತ್ಪಾದನಾ ಸಾಮರ್ಥ್ಯ ಹೆಚ್ಚಳವಾಗುವ ಬದಲಿಗೆ, ಹಿಂದಿಗಿಂತಲೂ ಕಡಿಮೆಯಾಗಿತ್ತು.

ರಾಜ್ಯವನ್ನು ತೀವ್ರ ಬರಪರಿಸ್ಥಿತಿ ಆವರಿಸಿರುವ ಹಿನ್ನೆಲೆಯಲ್ಲಿ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಬರದಿಂದಾಗಿ ಒಟ್ಟು ರೂ.33,710 ಕೋಟಿ ಬೆಳೆಹಾನಿಯಾಗಿದ್ದು, ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ನಮ್ಮ ಸರ್ಕಾರದ ಸಚಿವರುಗಳಾದ ಎನ್.ಚಲುವರಾಯಸ್ವಾಮಿ, ಪ್ರಿಯಾಂಕ್‌ ಖರ್ಗೆ ಮತ್ತು ಕೃಷ್ಣ ಬೈರೇಗೌಡ ಅವರು ಕೇಂದ್ರದ ಕೃಷಿ ಕಾರ್ಯದರ್ಶಿಯವರನ್ನು ಪ್ರತ್ಯೇಕವಾಗಿ ಭೇಟಿಮಾಡಿ ರಾಜ್ಯದ ಬರಪರಿಸ್ಥಿತಿಯ ಮಾಹಿತಿಯನ್ನು ನೀಡಿದ್ದಾರೆ.

ಇಷ್ಟೆಲ್ಲಾ ಮಾಡಿದರೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯಾಗಲೀ, ಅನುದಾನವಾಗಲೀ ಯಾವುದು ಬಂದಿಲ್ಲ. ಎನ್.ಡಿ.ಆರ್.ಎಫ್‌ ನಿಯಮಾನುಸಾರ ಬರ ಪರಿಹಾರ ಬಿಡುಗಡೆ ಮಾಡಬೇಕಿದ್ದ ಕೇಂದ್ರ ಸರ್ಕಾರ ಅನಗತ್ಯ ವಿಳಂಬ ಮಾಡುತ್ತಿದ್ದು, ಈ ಸಂಬಂಧ ತಾವೇ ಸರ್ವಪಕ್ಷ ನಿಯೋಗ ಕೊಂಡೊಯ್ಯುವುದಾದರೆ ನಾನು ನಿಮ್ಮ ಜೊತೆ ಬರುವುದಾಗಿ ಹೇಳಿದ್ದೆ. ಈಗಲೂ ಕಾಲ ಮಿಂಚಿಲ್ಲ ತಾವು ರಾಜ್ಯದಲ್ಲಿ ಬರ ಅಧ್ಯಯನಕ್ಕಾಗಿ ಪ್ರವಾಸ ಹೋಗುವ ಬದಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕೊಂಡೊಯ್ಯುವುದೇ ಸೂಕ್ತ ಮತ್ತು ಈ ಹೊತ್ತಿನ ಅಗತ್ಯ ನಿರ್ಧಾರವಾಗಿದೆ ಎಂಬುದನ್ನು ಮತ್ತೊಮ್ಮೆ ತಿಳಿಸಬಯಸುತ್ತೇನೆ. 5/6

ಯಡಿಯೂರಪ್ಪ ಅವರು ಬೆಂಗಳೂರು ನಗರದ ಸಬ್‌ ಅರ್ಬನ್‌ ರೈಲು ಯೋಜನೆಗೆ ಕೇಂದ್ರ ಸರ್ಕಾರವು ರೂ. 450 ಕೋಟಿ ಬಿಡುಗಡೆ ಮಾಡಿದೆ ಎಂದಿದ್ದಾರೆ. ಇದು ಅರ್ಧ ಸತ್ಯ ಮಾತ್ರ. ವಾಸ್ತವ ಬೇರೆ ಇದ್ದು ನಾಡಿಗೆ ಆಗುತ್ತಿರುವ ಅನ್ಯಾಯ ಮುಚ್ಚಿಟ್ಟಿರುವುದು ಯಡಿಯೂರಪ್ಪ ಅವರೇ ಹೊರತು ನಾನಲ್ಲ. 2018-19ರ ಕೇಂದ್ರ ಬಜೆಟ್‌ ಭಾಷಣದಲ್ಲಿ ಅಂದಿನ ವಿತ್ತ ಸಚಿವರಾಗಿದ್ದ ಅರುಣ್‌ ಜೇಟ್ಲಿ ಅವರು ರೂ.17,000 ಕೋಟಿ ವೆಚ್ಚದಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ಕೇಂದ್ರ ಸರ್ಕಾರವು ಯೋಜನೆ ರೂಪಿಸಲಿದೆ ಎಂದು ಹೇಳಿದ್ದರು. ಕೇಂದ್ರ ಸರ್ಕಾರದ ಈ ಘೋಷಣೆಯನ್ನು ಬಿಜೆಪಿ ತನ್ನ 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಕೂಡ ಸೇರಿಸಿಕೊಂಡಿತ್ತು. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ, “ಕೇಂದ್ರ ಸರ್ಕಾರ ಘೋಷಿಸಿದ ರೂ.17,000 ಕೋಟಿ ಅನುದಾನ ಬಳಸಿಕೊಂಡು ಬೆಂಗಳೂರಿನ ಉಪನಗರ ರೈಲು ಜಾಲವನ್ನು ಪೂರ್ಣಗೊಳಿಸುತ್ತೇವೆ” ಎಂದು ಹೇಳಿತ್ತು. ಇದರರ್ಥ ಕೇಂದ್ರ ಸರ್ಕಾರವು ಸಬ್‌ ಅರ್ಬನ್‌ ರೈಲು ಯೋಜನೆಗೆ ಬಜೆಟ್‌ ನಲ್ಲಿ 17,000 ಕೋಟಿ ರೂ. ನಿಗದಿಪಡಿಸಿದೆ ಎಂದು ರಾಜ್ಯ ಬಿಜೆಪಿಯೇ ಒಪ್ಪಿಕೊಂಡಿತ್ತು.

ಆದರೆ ಆ ಆರ್ಥಿಕ ವರ್ಷ ಬಿಡಿಗಾಸು ಹಣವನ್ನು ಕೂಡ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರಲಿಲ್ಲ. 2019ರ ಜುಲೈನಲ್ಲಿ ಆಪರೇಷನ್‌ ಕಮಲದ ಮೂಲಕ ರಾಜ್ಯದ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಅಧಿಕಾರಕ್ಕೆ ಬಂದ ಕರ್ನಾಟಕ ಬಿಜೆಪಿ, ಜನರಿಗೆ ದ್ರೋಹ ಬಗೆಯಲು ಮುಂದಾಯಿತು. ಕೇಂದ್ರ ಸರ್ಕಾರವು ಯೋಜನೆಗೆ ಅನುದಾನ ಕೊಡಲು ಮನಸ್ಸಿಲ್ಲದೆ ಫೆಬ್ರವರಿ 2020ರಲ್ಲಿ ಮಂಡಿಸಿದ 2020-21ರ ಕೇಂದ್ರ ಬಜೆಟ್‌ ನಲ್ಲಿ ಸಬ್ ಅರ್ಬನ್ ರೈಲು ಯೋಜನೆಗೆ ತಾನು ಕೇವಲ 20% ಅನುದಾನ ನೀಡುವುದಾಗಿ, ಮತ್ತೆ 20% ರಾಜ್ಯ ಸರ್ಕಾರ ಹಾಗೂ ಉಳಿದ 60% ಹಣವನ್ನು ರಾಜ್ಯಕ್ಕೆ ಸಾಲ ಕೊಡಿಸುವುದಾಗಿ ಘೋಷಿಸಿತು. ಅಂದಿನ ರಾಜ್ಯ ಬಿಜೆಪಿ ಸರ್ಕಾರ ಇದಕ್ಕೆ ಚಕಾರವೆತ್ತದೆ ಸಮ್ಮತಿಸಿತು. ಈ ಹೊಸ ಬದಲಾವಣೆಯ ನಂತರ 2022-23ರಲ್ಲಿ ಕೇಂದ್ರ ಸರ್ಕಾರ ರೂ.450 ಕೋಟಿ ಅನುದಾನವನ್ನು ನಿಗದಿ ಮಾಡಿತ್ತು, ಆದರೆ ಕೊಟ್ಟಿದ್ದು ರೂ.50 ಕೋಟಿ ಮಾತ್ರ. ನಂತರ ಪ್ರಸಕ್ತ ಸಾಲಿನಲ್ಲಿ ರೂ.1350 ಕೋಟಿ ನಿಗದಿ ಮಾಡಿ, ಈ ವರೆಗೆ ಕೇವಲ ರೂ.450 ಕೋಟಿ ಬಿಡುಗಡೆ ಮಾಡಿದೆ. ಅಂದು ಮೋದಿ ಸರ್ಕಾರದ ಜೊತೆ ಸೇರಿ ನಾಡಿಗೆ ಅನ್ಯಾಯ ಮಾಡಿದ್ದ ಯಡಿಯೂರಪ್ಪ ಅವರೇ ಇಂದು ಸಬ್‌ ಅರ್ಬನ್‌ ರೈಲು ಯೋಜನೆಗೆ ಕಾಂಗ್ರೆಸ್‌ ನಿರಾಸಕ್ತಿ ತೋರುತ್ತಿದೆ ಎಂದು ಆರೋಪ ಮಾಡುತ್ತಿರುವುದು ವಿಪರ್ಯಾಸವಾಗಿದೆ ಎಂದು ಹೇಳಿದ್ದಾರೆ.