ರಾಜಕೀಯ Archives » Page 2 of 47 » Dynamic Leader
October 23, 2024
Home Archive by category ರಾಜಕೀಯ (Page 2)

ರಾಜಕೀಯ

ರಾಜಕೀಯ

‘ಪಾಕಿಸ್ತಾನ ಪ್ರತಿ ಹನಿ ನೀರಿಗೂ ಕೈಚಾಚಲಿದೆ; ಮೂರು ಭಾಗವಾಗಲಿದೆ’ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ಪಾಕಿಸ್ತಾನ ಭಯೋತ್ಪಾದನೆಯನ್ನು ಹರಡುತ್ತಲೇ ಇದೆ. 1960ರ ಭಾರತ-ಪಾಕಿಸ್ತಾನ ನದಿ ನೀರಿನ ಒಪ್ಪಂದವನ್ನು ದುರ್ಬಳಕೆ ಮಾಡಿಕೊಂಡಿದೆ. ಇದೇ ರೀತಿ ಮುಂದುವರಿದರೆ ಸದ್ಯ ಭಿಕ್ಷಾಪಾತ್ರೆ ಹೊತ್ತಿರುವ ಪಾಕಿಸ್ತಾನ ಭವಿಷ್ಯದಲ್ಲಿ ಪ್ರತಿ ಹನಿ ನೀರಿಗೂ ಕೈಚಾಚುವ ಪರಿಸ್ಥಿತಿ ಉಂಟಾಗುತ್ತದೆ. ಆ ದೇಶ ಮೂರು ಭಾಗವಾಗಿ ಒಡೆಯುತ್ತದೆ.

ಇದೀಗ ಪಾಕಿಸ್ತಾನ ಎರಡು ಕಾರಣಗಳಿಗಾಗಿ ತತ್ತರಿಸಿ ಹೋಗಿದೆ. ಮೊದಲನೆಯದು, ಆ ದೇಶವು ತನ್ನದೇ ಆದ ಚಟುವಟಿಕೆಗಳಿಂದ ತೊಂದರೆಯಲ್ಲಿ ಸಿಲುಕಿಕೊಂಡಿದೆ. ಎರಡನೆಯದು, ಬಲೂಚಿಸ್ತಾನದ ಜನರನ್ನು ವಿದೇಶಿಯರಂತೆ ಪರಿಗಣಿಸುವುದರಿಂದ ಆ ರಾಜ್ಯದ ಯಾರೂ ಪಾಕಿಸ್ತಾನದೊಂದಿಗೆ ಸಂಬಂಧ ಹೊಂದಲು ಬಯಸುತ್ತಿಲ್ಲ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಹಿಂದೆ ಸರಿಯಬೇಕು. ಬಿಜೆಪಿ ಸರ್ಕಾರದ ಕ್ರಮಗಳು, ವಿಶೇಷ ಸ್ಥಾನಮಾನವನ್ನು ನೀಡುವ ವಿಧಿ 370 ಮತ್ತು 35A ರದ್ದತಿಯಿಂದಾಗಿ, ಜಮ್ಮು ಮತ್ತು ಕಾಶ್ಮೀರವು ಭಯೋತ್ಪಾದನೆ ಮತ್ತು ಭ್ರಷ್ಟಾಚಾರದಿಂದ ಮುಕ್ತವಾಗಿದೆ. ಪ್ರವಾಸಿಗರು ಸುಲಭವಾಗಿ ಅಲ್ಲಿಗೆ ಹೋಗಬಹುದಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಜಮ್ಮು ಮತ್ತು ಕಾಶ್ಮೀರ ಈಗ ಭಯೋತ್ಪಾದನೆಯ ಬೆದರಿಕೆಯಿಂದ ಬದಲಾಗಿ ಮತ್ತೆ ಪ್ರವಾಸಿ ತಾಣವಾಗಿ ರೂಪುಗೊಳ್ಳುತ್ತಿದೆ. ಅಲ್ಲದೆ, ದೆಹಲಿ-ಕಾಶ್ಮೀರಕ್ಕೆ ವಂದೇ ಭಾರತ್ ರೈಲು ಕೂಡ ಒದಗಿಸಲಾಗಿದೆ.

ಇಲ್ಲಿನ ಬಹರ್ವಾಲ್, ಗುಜ್ಜರ್, ದಲಿತ ಮತ್ತು ವಾಲ್ಮೀಕಿ ಸಮುದಾಯಗಳು ದೀರ್ಘಕಾಲದಿಂದ ತಮ್ಮ ಹಕ್ಕುಗಳನ್ನು ಪಡೆಯಲೂ ಸಾಧ್ಯವಾಗುತ್ತಿರಲಿಲ್ಲ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಉಪಕ್ರಮವು ಅವರಿಗೆ ಉದ್ಯೋಗಾವಕಾಶಗಳನ್ನು ಒದಗಿಸಿದೆ ಮತ್ತು ಅವರ ಜೀವನಮಟ್ಟವನ್ನು ಸುಧಾರಿಸಿದೆ.

ಈಗಾಗಲೇ ಕಾಶ್ಮೀರದಲ್ಲಿದ್ದ ರಾಜಕಾರಣಿಗಳು ವಿದೇಶಗಳಲ್ಲಿ ಮತ್ತು ದೆಹಲಿಯನ್ನು ಆಶ್ರಯಿಸಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯನ್ನು ಮರೆತಿದ್ದಾರೆ’ ಎಂದು ಹೇಳಿದ್ದಾರೆ.

ರಾಜಕೀಯ

ಮುಂಬೈ: ದೀಪಾವಳಿ ಮತ್ತು ಸಾಥ್ ಪೂಜೆಯ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ನಿರ್ಧರಿಸಲು ರಾಜಕೀಯ ಪಕ್ಷಗಳು ವಿನಂತಿಸಿವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಎರಡು ದಿನಗಳ ಕಾಲ ಮುಂಬೈನಲ್ಲಿ ರಾಜಕೀಯ ಪಕ್ಷಗಳು ಮತ್ತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ನಾವು ಕಾಂಗ್ರೆಸ್, ಶಿವಸೇನೆ (ಉದ್ದವ್ ತಂಡ) ಆಮ್ ಆದ್ಮಿ ಪಕ್ಷ ಸೇರಿದಂತೆ 11 ರಾಜಕೀಯ ಪಕ್ಷದ ನಾಯಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದೇವೆ. ಅದರ ಆಧಾರದ ಮೇಲೆ ಮುಂಬರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದೇವೆ.

ದೀಪಾವಳಿ ಮತ್ತು ಸಾಥ್ ಪೂಜೆಯ ಮೊದಲೇ ಚುನಾವಣಾ ದಿನಾಂಕವನ್ನು ಘೋಷಿಸಲು ಅವರು ಒತ್ತಾಯಿಸಿದ್ದಾರೆ. ಒಟ್ಟು ಮತದಾರರು 9.59 ಕೋಟಿ, ಇದರಲ್ಲಿ 4.59 ಕೋಟಿ ಪುರುಷರು ಮತ್ತು 4.64 ಕೋಟಿ ಮಹಿಳೆಯರು ಮತದಾನದ ಹಕ್ಕು ಹೊಂದಿದ್ದಾರೆ. 18 ವರ್ಷ ಪೂರೈಸಿದ 19.48 ಲಕ್ಷ ಪ್ರಥಮ ಬಾರಿ ಮತದಾರರಿದ್ದಾರೆ. ಒಟ್ಟು 288 ವಿಧಾನಸಭಾ ಕ್ಷೇತ್ರಗಳೀದ್ದು, ಎಸ್‌ಸಿ 29 ಕ್ಷೇತ್ರಗಳು, ಎಸ್‌ಟಿ 25 ಕ್ಷೇತ್ರಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಮತ್ತು ಮಹಾಯುತಿ ಮೈತ್ರಿಕೂಟದ ನಡುವೆ ಭಾರಿ ಪೈಪೋಟಿ ಏರ್ಪಟ್ಟಿದೆ.

ರಾಜಕೀಯ ಸಿನಿಮಾ

ಡಿಯರ್ ಪವನ್ ಕಲ್ಯಾಣ್, ನಾನು ನಿಮ್ಮ ಪತ್ರಿಕಾಗೋಷ್ಠಿಯನ್ನು ನೋಡಿದೆ. ನಾನು ಹೇಳಿದ್ದನ್ನು ನೀವು ತಪ್ಪಾಗಿ ಅರ್ಥೈಸಿಕೋಂಡು ಮಾತನಾಡಿರುವುದು ಆಶ್ಚರ್ಯಕರವಾಗಿದೆ – ನಟ ಪ್ರಕಾಶ್ ರಾಜ್

ತಿರುಪತಿ ಲಡ್ಡು ವಿಚಾರದಲ್ಲಿ ‘ಸನಾತನ ಧರ್ಮ ಸಂರಕ್ಷಣಾ ಮಂಡಳಿ’ ಸ್ಥಾಪಿಸಬೇಕು ಎಂದು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿರುವುದಕ್ಕೆ ನಟ ಪ್ರಕಾಶ್ ರಾಜ್, “ನೀವು ಉಪಮುಖ್ಯಮಂತ್ರಿಯಾಗಿರುವ ರಾಜ್ಯದಲ್ಲೇ ಈ ಘಟನೆ ನಡೆದಿದೆ.

ದಯವಿಟ್ಟು ವಿಚಾರಿಸಿ, ತಪ್ಪಿತಸ್ಥರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಿ. ಈ ಸಮಸ್ಯೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಬೃಹದಾಕಾರವಾಗಿ ಬಿಂಬಿಸಿ ಏಕೆ ಭಯವನ್ನು ಹರಡುತ್ತಿದ್ದೀರಿ? ದೇಶವು ಈಗಾಗಲೇ ಸಾಕಷ್ಟು ಹಿಂಸಾತ್ಮಕ ಉದ್ವಿಗ್ನತೆಯನ್ನು ಹೊಂದಿದೆ. ಕೇಂದ್ರದಲ್ಲಿರುವ ನಿಮ್ಮ ಸ್ನೇಹಿತರಿಗೆ ಧನ್ಯವಾದಗಳು” ಎಂದು ಹೇಳಿದ್ದರು.

ಇದಕ್ಕಾಗಿ ನಟ ಪ್ರಕಾಶ್ ರಾಜ್ ಅವರನ್ನು ಪವನ್ ಕಲ್ಯಾಣ್ ತೀವ್ರವಾಗಿ ಟೀಕಿಸಿದ್ದರು. “ನಮ್ಮ ಭಾವನೆಗಳನ್ನು ಗೇಲಿ ಮಾಡಬೇಡಿ. ಈ ಘಟನೆ ನಿಮಗೆ ತಮಾಷೆಯಾಗಿ ಕಾಣಿಸಬಹುದು. ಆದರೆ ನಮಗೆ ಹಾಗಲ್ಲ. ಇದು ಆಳವಾದ ನೋವನ್ನು ಉಂಟುಮಾಡಿದೆ. ಸನಾತನ ಧರ್ಮದ ಬಗ್ಗೆ ಮಾತನಾಡುವ ಮುನ್ನ 100 ಬಾರಿ ಯೋಚಿಸಿ” ಎಂದು ಹೇಳಿದ್ದರು.

ಇದಕ್ಕೆ ತಮ್ಮ ‘ಎಕ್ಸ್’ ಪೇಜ್ ನಲ್ಲಿ ಪ್ರತಿಕ್ರಿಯೆ ನೀಡಿರುವ ನಟ ಪ್ರಕಾಶ್ ರಾಜ್, “ಡಿಯರ್ ಪವನ್ ಕಲ್ಯಾಣ್, ನಾನು ನಿಮ್ಮ ಪತ್ರಿಕಾಗೋಷ್ಠಿಯನ್ನು ನೋಡಿದೆ. ನಾನು ಹೇಳಿದ್ದನ್ನು ನೀವು ತಪ್ಪಾಗಿ ಅರ್ಥೈಸಿಕೋಂಡು ಮಾತನಾಡಿರುವುದು ಆಶ್ಚರ್ಯಕರವಾಗಿದೆ.

ವಿದೇಶದಲ್ಲಿ ಶೂಟಿಂಗ್ ನಲ್ಲಿ ಇದ್ದೇನೆ. ಅದನ್ನು ಮುಗಿಸಿಕೊಂಡು 30ನೇ ತಾರೀಖಿನ ನಂತರ ನಿಮ್ಮ ಪ್ರತಿಯೊಂದು ಪ್ರಶ್ನೆಗೂ ಉತ್ತರ ಕೊಡುತ್ತೇನೆ. ಅಷ್ಟರೊಳಗೆ ನನ್ನ ಹಳೆಯ ಪೋಸ್ಟ್‌ಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ ಎಂದು ಭಾವಿಸುತ್ತೇನೆ” ಎಂದು ಹೇಳಿದ್ದಾರೆ.

ರಾಜಕೀಯ

ಬೆಂಗಳೂರು: ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ವಿಸ್ತೃತವಾದ ಪ್ರತಿಕ್ರಿಯೆ ನೀಡುತ್ತೇನೆ ಎಂದು ಇಂದು ನಡೆದ ಮಾಧ್ಯಮ ಘೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ.

ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ಎಸ್ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.

ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ಎಸ್ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.

ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ.

ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.

ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.

ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ.

ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.

ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ.

ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ಮನವಿ ಮಾಡುತ್ತೇನೆ.

ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.

ಇದೇ ಬಿಜೆಪಿ, ಜೆಡಿಎಸ್  ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.

ಇಂದು ನನ್ನ ವಿರುದ್ಧ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್‌ಸಿಎಸ್‌ಪಿ/ಟಿಎಸ್‌‌ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ.

ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು.

ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ.

ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶಾದ್ಯಂತ ನಡೆಸುತ್ತಿದೆ.

ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ. ಎಂದು ಹೇಳಿದರು.

ರಾಜಕೀಯ

“ರಾಜ್ಯಪಾಲರು ಕುಮಾರಸ್ವಾಮಿ ಹಾಗೂ ಇತರ ಬಿಜೆಪಿ ನಾಯಕರ ಬಗೆಗಿನ ದೂರುಗಳನ್ನು ಮುಚ್ಚಿಡಲು ಪ್ರಯತ್ನಿಸಿದ್ದು ಜಗಜ್ಜಾಹೀರಾಗಿದೆ” ಕಾಂಗ್ರೆಸ್

ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

“ಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ” ಎಂದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

“ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​​, ಮುಖ್ಯಮಂತ್ರಿ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ” ಎಂದಿದೆ. ಮುಖ್ಯಮಂತ್ರಿ ಪರ ವಕೀಲರ ವಾದಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು. ರಾಜ್ಯಪಾಲರು ಮೇಲ್ನೋಟಕ್ಕೆ ಅಪರಾಧದ ಅಂಶಗಳಿವೆಯೇ ಎಂಬುದನ್ನಷ್ಟೇ ಸೆಕ್ಷನ್ 17 ಎ ಅಡಿಯಲ್ಲಿ ನೋಡಬೇಕು. ರಾಜ್ಯಪಾಲರು ತೀರ್ಪು ನೀಡಿಲ್ಲ ಮತ್ತು ನೀಡುತ್ತಿಲ್ಲ. ತನಿಖೆಗೆ ಅನುಮತಿಯಷ್ಟೇ ನೀಡುತ್ತಿದ್ದಾರೆ. ಹೀಗಾಗಿ ಅವರು ವಿವರವಾದ ಕಾರಣಗಳನ್ನು ಕೊಡಬೇಕಿಲ್ಲ. ಕೊಟ್ಟರೆ ತನಿಖಾಧಿಕಾರಿ ಮೇಲೆ ಪ್ರಭಾವ ಬೀರಿದಂತೆ ಆಗುವ ಸಾಧ್ಯತೆ ಇರುತ್ತದೆ ಎಂದು ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು.

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್ ಪಕ್ಷ “ಹೋರಾಟ ಮುಂದುವರೆಯಲಿದೆ, ಸರ್ಕಾರವನ್ನು ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನಕ್ಕೆ, ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರು ಕುಮಾರಸ್ವಾಮಿ ಹಾಗೂ ಇತರ ಬಿಜೆಪಿ ನಾಯಕರ ಬಗೆಗಿನ ದೂರುಗಳನ್ನು ಮುಚ್ಚಿಡಲು ಪ್ರಯತ್ನಿಸಿದ್ದು ಜಗಜ್ಜಾಹೀರಾಗಿದೆ, ಈ ಬಗ್ಗೆ ದೂರುಗಳು ಹೇಗೆ ಸೋರಿಕೆಯಾದವು ಎಂದು ರಾಜ್ಯಪಾಲರ ಪ್ರಶ್ನೆಯೇ ಅವರ ತಾರತಮ್ಯದ ರಾಜಕೀಯಕ್ಕೆ ಪುರಾವೆ ಒದಗಿಸುತ್ತವೆ” ಎಂದು ಹೇಳಿದೆ.

ದೇಶ ರಾಜಕೀಯ

ಚಂಡೀಗಢ: ಹರಿಯಾಣದ ಮಹಿಳೆಯರಿಗೆ ತಿಂಗಳಿಗೆ 2,100 ರೂ., ಅಗ್ನಿ ಯೋಧರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ.

ಅಕ್ಟೋಬರ್ 5 ರಂದು ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲು ಬಿಜೆಪಿ ಗಂಭೀರತೆ ತೋರಿಸುತ್ತಿದೆ. ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ನಾಯಕ ಜೆ.ಪಿ.ನಡ್ಡಾ ವಿಧಾನಸಭೆ ಚುನಾವಣೆಗೆ ಪ್ರಣಾಳಿಕ ಬಿಡುಗಡೆ ಮಾಡಿದರು.

ಭರವಸೆಗಳೇನು?
ಹರಿಯಾಣದ ಎಲ್ಲ ಮಹಿಳೆಯರಿಗೆ ಮಾಸಿಕ ರೂ.2100 ಸಹಾಯಧನ ನೀಡಲಾಗುವುದು.

ಅಂತ್ಯೋದಯ ಯೋಜನೆಯಡಿ ಪ್ರತಿ ಸಿಲಿಂಡರ್‌ಗೆ ರೂ.500 ಸಬ್ಸಿಡಿ ನೀಡಲಾಗುವುದು.

ದಕ್ಷಿಣ ಹರಿಯಾಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅರಾವಳಿ ಫಾರೆಸ್ಟ್ ಸಫಾರಿ ಪಾರ್ಕ್ ಅನ್ನು ಸ್ಥಾಪಿಸಲಾಗುವುದು.

ವೃತ್ತಿಪರ ಶಿಕ್ಷಣವನ್ನು ಕಲಿಯುತ್ತಿರುವ ಪರಿಶಿಷ್ಟ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುವುದು.

ಹರಿಯಾಣದಲ್ಲಿ ವಾಸಿಸುವ ಅಗ್ನಿ ಯೋಧರಿಗೆ ಕಡ್ಡಾಯವಾಗಿ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂಬಿತ್ಯಾದಿ ಭರವಸೆಗಳನ್ನು ಬಿಜೆಪಿ ನೀಡಿದೆ.

ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಮಾಸಿಕ 2 ಸಾವಿರ ರೂ.ಗಳನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ 2,100 ರೂ.ಗಳನ್ನು ಘೋಷಿಸಿರುವುದು ಗಮನಾರ್ಹ.

ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿದ ನಡ್ಡಾ, “ಕಾಂಗ್ರೆಸ್ ಚುನಾವಣಾ ಭರವಸೆಗಳು ಖಾಲಿ ಕಾಗದ. ಅವರು ಕರ್ತವ್ಯಕ್ಕಾಗಿ ಭರವಸೆ ನೀಡುತ್ತಿದ್ದಾರೆ. ಚುನಾವಣೆ ಭರವಸೆ ನೀಡಿ ಜನರನ್ನು ವಂಚಿಸುತ್ತಾರೆ. 10 ವರ್ಷಗಳ ಹಿಂದೆ ಹರಿಯಾಣದಲ್ಲಿ ಕಾಂಗ್ರೆಸ್ ಆಡಳಿತ ಹೇಗಿತ್ತು? ಅವರ ಆಡಳಿತವು ಭೂ ಹಗರಣಗಳಿಗೆ ಹೆಸರುವಾಸಿಯಾಗಿದೆ. ನಾವು ಹರಿಯಾಣ ಜನತೆಗೆ ಅವಿರತ ಸೇವೆ ಸಲ್ಲಿಸುತ್ತಿದ್ದೇವೆ” ಎಂದು ಹೇಳಿದರು.

ರಾಜಕೀಯ

ಬೆಂಗಳೂರು: ಓರ್ವ ಜನಪ್ರತಿನಿಧಿಯಾಗಿ ಮಹಿಳೆಯರ ಬಗ್ಗೆ ಇಷ್ಟೊಂದು ಕೀಳುಮಟ್ಟದ ಮಾತುಗಳನ್ನಾಡಿರುವ ಶಾಸಕ ಮುನಿರತ್ನ ರವರ ನಡೆ ಅತ್ಯಂತ ಖಂಡನೀಯ ಮತ್ತು ಅವರ ಶಾಸಕತ್ವವನ್ನು ಈ ಕೂಡಲೇ ರದ್ದು ಪಡಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಒತ್ತಾಸಿದ್ದಾರೆ.

ಮಾನ್ಯ ಸಭಾಪತಿಗಳು ಮುನಿರತ್ನ ಅವರ ಶಾಸಕತ್ವವನ್ನು ಈ ಕೂಡಲೇ ರದ್ದು ಪಡಿಸಬೇಕು ಎಂದು ಒತ್ತಾಯಿಸಿರುವ ಅವರು, “ಇದು ಕೇವಲ ಒಕ್ಕಲಿಗ ಸಮುದಾಯಕ್ಕೆ ಮಾತ್ರವಲ್ಲ ಇಡೀ ಮಹಿಳಾ ಸಮೂಹಕ್ಕೆ ಮಾಡಿದ ಅವಮಾನವಾಗಿದೆ. ಮಹಿಳೆಯರ ಬಗ್ಗೆ ಇವರಿಗೆ ಎಷ್ಟು ಗೌರವವಿದೆ ಎಂಬುದು ಇವರ ಈ ಕೃತ್ಯದಿಂದ ಬಹಿರಂಗಗೊಂಡಿದೆ. ಇಂತಹ ಶಾಸಕರಿಗೆ ನೈತಿಕತೆಯ ಪಾಟದ ಅಗತ್ಯವಿದೆ” ಎಂದು ಹೇಳಿದ್ದಾರೆ.

“ಚಿತ್ರರಂಗದಿಂದ ಬಂದು ರಾಜಕೀಯ ರಂಗದಲ್ಲಿ ಸಭ್ಯತೆ ಮೆರೆದವರು ಅದೆಷ್ಟೋ ಮಂದಿಯಿದ್ದಾರೆ. ಆದರೆ ಇವರು, ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚೆಲುವರಾಜು ರವರಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದೂ ಅಲ್ಲದೇ ಅವರ ಪತ್ನಿಯನ್ನು ನಿಂದಿಸುವ ಹಂತಕ್ಕೆ ತಲುಪಿದ್ದಾರೆಂದರೆ ಇವರಲ್ಲಿ ಅಹಂಕಾರ ಪೊಗರು ಅವೆಷ್ಟಿವೆ ಎಂಬುದನ್ನು ಅಂದಾಜಿಸಬಹುದು” ಎಂದು ಕಿಡಿಕಾರಿದ್ದಾರೆ.

“ಜನಪ್ರತಿನಿಧಿ ಎನಿಸಿಕೊಳ್ಳಲು ಇವರೆಷ್ಟು ಅರ್ಹರು? ಜನರು ಜನಪ್ರತಿನಿಧಿಗಳನ್ನು ಆರಿಸುವಾಗ ಅವರ ನೈತಿಕತೆಯನ್ನು ಕೂಡಾ ಮಾನದಂಡವನ್ನಾಗಿಸಬೇಕು. ಇಲ್ಲದಿದ್ದಲ್ಲಿ ಇಂತಹದ್ದು ಮರುಕಳಿಸುತ್ತದೆ” ಎಂದು ಅವರು ಹೇಳಿದ್ದಾರೆ.

ದೇಶ ರಾಜಕೀಯ

ಒಂದು ದೇಶ ಒಂದು ಚುನಾವಣೆ ಅಪ್ರಾಯೋಗಿಕ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಂದು ದೇಶ ಒಂದು ಚುನಾವಣೆ ಯೋಜನೆಗೆ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ, ಒಂದು ದೇಶ ಒಂದು ಚುನಾವಣೆ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನು ಕಾಂಗ್ರೆಸ್ ಖಂಡಿಸಿದೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, “ಒಂದು ದೇಶ ಒಂದು ಚುನಾವಣೆ ಯೋಜನೆಯನ್ನು ನಾವು ವಿರುಧಿಸುತ್ತೇವೆ. ಅಪ್ರಾಯೋಗಿಕವಾದದ್ದು. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಒಂದು ದೇಶ ಒಂದು ಚುನಾವಣೆಯನ್ನು ಜಾರಿಗೆ ತರಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಅಗತ್ಯಕ್ಕೆ ತಕ್ಕಂತೆ ಚುನಾವಣೆ ನಡೆಯಬೇಕು” ಎಂದು ಹೇಳಿದರು.

ರಾಜಕೀಯ

ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

“ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ” ಎಂದು ಹೇಳಿದರು.

“ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371ಜೆ ಕಾನೂನು ತರಲಾಗಿದ್ದು, ಇದಕ್ಕಾಗಿ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ನಮ್ಮ ಸರ್ಕಾರವೇ ಪ್ರಯತ್ನಿಸಿದ್ದು ಹೊರತು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿತ್ತು” ಎಂದು ಆರೋಪಿಸಿದರು.

“ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ” ಎಂದು ಹೇಳಿದರು.

“ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಸಂಬಂಧಪಟ್ಟ ಉಪಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್‌ಪೆಕ್ಟರನ್ನು ಅಮಾನತ್ತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟು, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು” ಎಂದು ಹೇಳಿದರು.

ದೇಶ ರಾಜಕೀಯ

ಮುಂಬೈ, ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೆಲ ದಿನಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿ ವಾಷಿಂಗ್ಟನ್ ಪ್ರಾಂತ್ಯದ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದ ವೇಳೆ, ನಿರೂಪಕರು ಭಾರತದಲ್ಲಿ ಮೀಸಲಾತಿ ಕುರಿತು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದರು. ಆ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ಭಾರತದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳು ದೊರೆತಾಗ ಮೀಸಲಾತಿಯನ್ನು ಕೊನೆಗೊಳಿಸುವ ಬಗ್ಗೆ ಕಾಂಗ್ರೆಸ್ ಚಿಂತಿಸುತ್ತದೆ” ಎಂದು ಹೇಳಿದರು.

ಏತನ್ಮಧ್ಯೆ, ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸಲು ರಾಹುಲ್ ಗಾಂಧಿ ಬಯಸುತ್ತಿದ್ದಾರೆ ಎಂಬ ತಪ್ಪು ಕಲ್ಪನೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಯಿತು.

ಈ ಹಿನ್ನೆಲೆಯಲ್ಲಿ, ಮೀಸಲಾತಿ ರದ್ದು ಮಾಡುವುದಾಗಿ ಹೇಳಿದ ರಾಹುಲ್ ಗಾಂಧಿಯ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಶಿವಸೇನೆ (ಏಕನಾಥ್ ಶಿಂಧೆ ಕಡೆಯವರು) ಶಾಸಕ ಸಂಜಯ್ ಗಾಯಕ್ವಾಡ್ (Sanjay Gaikwad) ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ, ಶಾಸಕ ಸಂಜಯ ಗಾಯಕ್ವಾಡ್ ಮಾತನಾಡಿ, “ರಾಹುಲ್ ಗಾಂಧಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆ ರದ್ದು ಮಾಡಬೇಕೆಂದು ವಿದೇಶದಲ್ಲಿ ಮಾತನಾಡಿದ್ದಾರೆ. ಇದು ಕಾಂಗ್ರೆಸ್‌ನ ನಿಜವಾದ ಮುಖವನ್ನು ತೋರಿಸುತ್ತದೆ. ಮೀಸಲಾತಿ ರದ್ದು ಮಾಡುತ್ತೇನೆ ಎಂದು ಹೇಳಿರುವ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುತ್ತೇನೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.