ರಾಜಕೀಯ Archives » Page 5 of 47 » Dynamic Leader
October 22, 2024
Home Archive by category ರಾಜಕೀಯ (Page 5)

ರಾಜಕೀಯ

ರಾಜಕೀಯ

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ಸಮುದಾಯದ ನಾಯಕರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ. ಒಳಮೀಸಲಾತಿಯನ್ನು ದಲಿತ ಸಮುದಾಯ ಒಮ್ಮತದಿಂದ ಒಪ್ಪಿಕೊಂಡು ಅನುಷ್ಠಾನಕ್ಕೆ ಬೆಂಬಲ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ” ಎಂದು ಹೇಳಿದ್ದಾರೆ.

“ಸಚಿವರಾದ  ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಮತ್ತು ಮಾಜಿ ಸಚಿವ ಹೆಚ್.ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ ಮತ್ತು ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ನನ್ನನ್ನು ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸಿದರು. ಒಳಮೀಸಲಾತಿ ಜಾರಿ ವಿಚಾರದಲ್ಲಿ ನನ್ನ ಬದ್ಧತೆಯನ್ನು ಅವರಿಗೆ ತಿಳಿಸಿದೆ.

ನಾನು, ನಮ್ಮ ಪಕ್ಷ ಮತ್ತು ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಪರವಾದ ಖಚಿತ ಮತ್ತು ದೃಢ ನಿಲುವು ಇದೆ. ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿಯ ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ” ಎಂದಿದ್ದಾರೆ.

“ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕೆನೆಪದರದ ವಿಚಾರ ಪ್ರಸ್ತಾಪವಾಗಿರುವುದು ಕೆಲವರಲ್ಲಿ ಗೊಂದಲ ಉಂಟು ಮಾಡಿದೆ. ನ್ಯಾಯಾಲಯದ ತೀರ್ಪಿನ ವಿಶ್ಲೇಷಣೆಗೆ ನಾನು ಹೋಗುವುದಿಲ್ಲ. ನಾನು ಅರ್ಥಮಾಡಿಕೊಂಡಂತೆ ಒಳ ಮೀಸಲಾತಿ ಜಾರಿಗೊಳಿಸಲು ಕೆನೆಪದರದ ವಿಚಾರ ಅಡ್ಡಿಯಾಗಲಾರದು. ಕೆನೆಪದರದ ಬಗ್ಗೆ ಇಡೀ ದಲಿತ ಸಮುದಾಯದ ನಿಲುವೇ ನನ್ನ ನಿಲುವೂ ಆಗಿದೆ” ಎಂದು ಸ್ಪಷ್ಟ ಪಡಿಸಿದ್ದಾರೆ.

“ಭಾರತೀಯ ಜನತಾ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ವಿರೋಧಿಗಳಾದ ಈ ಬಿಜೆಪಿ ನಾಯಕರ ಈ ಕುಟಿಲತನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ದಲಿತ ಸಮುದಾಯಕ್ಕೆ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ರಾಜಕೀಯ

ಬೆಂಗಳೂರು: “ನೇರ ಭಾಗಿಯಾಗದ ಆರ್ಥಹೀನ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರನ್ನು ಯೋಜಿಸಿ ಸಿಲುಕಿಸಲಾಗಿದೆ.  ಈ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಘಿ ಪ್ರೇರಿತ ಪಕ್ಷಗಳು ಹೊರಟಿವೆ. ಇದು ಜಾತಿ ಹಾಗೂ ಕೋಮು ಭ್ರಷ್ಟರ ನಡೆಯಾಗಿದೆ” ಎಂದು ಕರ್ನಾಟಕ ಮುಸ್ಲಿಂ ಯುನಿಟಿ (KMU)ಯ ರಾಜ್ಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್ ಹೇಳಿದ್ದಾರೆ.

“ಜನಪರ ಆಡಳಿತವನ್ನು ಸಹಿಸಲಾರದೆ, ರಾಜ್ಯದಲ್ಲಿ ಕೋಮುವಾದಿಗಳು ಮತ್ತು ಜಾತಿವಾದಿ ಪಟ್ಟಭದ್ರ ಹಿತಾಸಕ್ತಿಗಳು ಅಧಿಕಾರದ ಖುರ್ಚಿಯ ಆಸೆಗಾಗಿ ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಇದರ ಪ್ರೇರಣೆಯ ಭಾಗವಾಗಿಯೇ ರಾಜ್ಯಪಾಲರು ಈ ಆದೇಶವನ್ನು ನೀಡಿದ್ದಾರೆ ಎಂಬ ಗುಮಾನಿ ಪ್ರತಿ ಕರ್ನಾಟಕದ ಪ್ರಜೆಗೂ ಮೂಡಿದೆ” ಎಂದು ಹೇಳಿದ್ದಾರೆ.

“ಪ್ರಮುಖ ಹಾಗೂ ವಿಷೆಶವಾಗಿ ಶೋಷಿತ, ದಲಿತ, ಅಹಿಂದ, ಮುಖಂಡರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮೊದಲಿನಿಂದಲೂ ದೊಡ್ಡ ಮಟ್ಟದ ಷಡ್ಯಂತ್ರ ರೂಪಿಸಿದ್ದಾರೆ ಎಂಬುದು ಬಹಿರಂಗದ ಸತ್ಯದ ವಿಷಯ” ಎಂದು ಹೇಳಿದ್ದಾರೆ.

“ಈಗಾಗಲೇ ನಡೆಯುತ್ತಿರುವ ರಾಷ್ಟ್ರ ಮಟ್ಟದಲ್ಲಿ ಹಿಂದುಳಿದ ನಾಯಕರನ್ನು ಮೂಲೆಗುಂಪು ಮಾಡುವ ಪ್ರಕ್ರಿಯೆಯಲ್ಲಿ ಈಗ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿರುವುದರ ಹಿಂದೆ ಹಲವಾರು ರಾಜಕೀಯ ಕಾರಣಗಳಿವೆ.

ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಿ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ನಾಯಕತ್ವವನ್ನು ಕೊನೆಗಾಣಿಸಬಹುದು, ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಭವಿಷ್ಯದಲ್ಲಿ ಕರ್ನಾಟಕದ ರಾಜಕಾರಣದಿಂದ ಹಿಂದುಳಿದ ವರ್ಗಗಳನ್ನು ಅಧಿಕಾರದಿಂದ ದೂರ ಇಡಬಹುದು ಮತ್ತು ಸಿದ್ದರಾಮಯ್ಯರವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಆ ಮೂಲಕ ರಾಜ್ಯದ ಸಮಸ್ತ ಹಿಂದುಳಿದ ವರ್ಗಗಳು ಅಧಿಕಾರ ನಡೆಸಲು ಅಸಮರ್ಥರು ಎಂದು ಬಿಂಬಿಸಬಹುದು ಎನ್ನುವ ಹುನ್ನಾರದಿಂದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಮತ್ತು ವಾಲ್ಮೀಕಿ ನಿಗಮದ ವಿವಾದದಲ್ಲಿ ಅವರ ಹೆಸರನ್ನು ತಳಕು ಹಾಕಲಾಗುತ್ತಿದೆ; ಇದು ಖಂಡನೀಯ. ಅಲ್ಲದೆ ಇದು ಕೋಮುವಾದಿ ರಾಜಕೀಯದ ಭಾಗವೇ ಆಗಿದೆ” ಎಂದು ಕಿಡಿಕಾರಿದ್ದಾರೆ.

“ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತಮ್ಮ ಸರಕಾರದಲ್ಲೇ ತನಿಖಾ ಆಯೋಗವನ್ನು ರಚಿಸಿರುವ ದೇಶದ ಏಕೈಕ ರಾಜಕಾರಣಿ ಸಿದ್ದರಾಮಯ್ಯ. ಇದು ಪ್ರತಿ ಅಹಿಂದ ವರ್ಗಗಳ ಹೆಮ್ಮೆಯು ಕೂಡ” ಎಂದು ಶ್ಲಾಘಿಸಿದ್ದಾರೆ.

“ಹಿಂದೆಯೂ ಸಹ ಹಿಂದುಳಿದ ವರ್ಗಗಳ ನಾಯಕರಾದ ದೇವರಾಜ ಅರಸು, ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರಂಸಿಂಗ್ ಮತ್ತಿತರರ ವಿರುದ್ಧ ಇಂತಹುದೇ ಷಡ್ಯಂತ್ರಗಳನ್ನು ರೂಪಿಸಲಾಗಿತ್ತು. ಆದರೆ, ಅಂದಿನ ಅಂತಹ ಅಹಿಂದ ವಿರೋಧಿ ಕುತಂತ್ರಗಳು ಇಂದು ನಡೇಯುವುದಿಲ್ಲ. ಇಂದು ಮುಸ್ಲಿಂ, ದಲಿತ, ಶೋಷಿತ ಸಮುದಾಯಗಳು ಜಾಗೃತವಾಗಿವೆ. ಎಂಬುದನ್ನು ಕರ್ನಾಟಕದ ಕೋಮುವಾದಿ ಹಾಗೂ ಜಾತಿವಾದಿ ಶಕ್ತಿಗಳು ಆರಿಯ ಬೇಕಿದೆ.

ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ನಾಯಕರು ಈ ಮಟ್ಟದ ಕೊಳಕು ಹಾಗೂ ಅಪ್ರಬುದ್ಧ ರಾಜಕೀಯಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ. ಇಂತಹ ಹಿಂದುಳಿದ, ದಲಿತ, ಅಲ್ಪಸಂಖ್ಯಾತ, ಶೋಷಿತರ ವಿರೋಧಿಗಳಿಗೆ ತಕ್ಕ ಪಾಠವನ್ನು ಕಲಿಸುವ ಅನಿವಾರ್ಯತೆಯನ್ನು ನೀವೇ ರಾಜ್ಯದಲ್ಲಿ ನಿರ್ಮಾಣ ಮಾಡುತ್ತೀದ್ದೀರ” ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

“ರಾಜ್ಯ ಸರ್ಕಾರವನ್ನು ಅಸ್ಥಿರ ಗೊಳಿಸಿ, ಸಿದ್ದರಾಮಯ್ಯರವರನ್ನು ದುರ್ಬಲ ಗೊಳಿಸುವ ಈ ನೀಚ ಕುತಂತ್ರವನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿ ತಾಲೂಕುಗಳಲ್ಲೂ ಹೋರಾಟ ನಡೆಸಲಾಗುವುದು” ಎಂದು ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವ ಮಾನ್ಯ ರಾಜ್ಯಪಾಲರು ಒಂದು ರಾಜಕೀಯ ಪಕ್ಷದ ಪ್ರತಿನಿದಿಯಂತೆ ವರ್ತಿಸುತ್ತಿರುವುದು ಅಕ್ಷಮ್ಯ ಹಾಗೂ ಸಂವಿಧಾನ ವಿರೋಧಿಯಾಗಿದೆ. ಇದು ಪ್ರಜಾಪ್ರಭುತ್ವದ ನಡೆಯಲ್ಲ” ಎಂದು ಖಂಡಿಸಿದ್ದಾರೆ.  

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿಯು ರಾಜಕೀಯ ಪ್ರೇರಿತವಾಗಿ ಮಾಡಿರುವ ಸುಳ್ಳು ಆರೋಪವನ್ನೇ ಆಧಾರವಾಗಿಟ್ಟುಕೊಂಡು, ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ವಾಗಿದೆ. ಇದನ್ನು ಕರ್ನಾಟಕ ಮುಸ್ಲಿಂ ಯುನಿಟಿ (KMU) ಖಂಡಿಸುತ್ತದೆ” ಎಂದು ಹೇಳಿದ್ದಾರೆ.

“ಬಿಜೆಪಿ ಮತ್ತು ಮಿತ್ರಪಕ್ಷದ ಹತ್ತಾರು ಹಗರಣಗಳ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜಭವನದಲ್ಲಿ ವರ್ಷಗಳಿಂದ ಬಾಕಿ ಉಳಿದಿದ್ದರೂ ರಾಜ್ಯಪಾಲರು ಯಾಕೆ ತಲೆ ಕೆಡಿಸಿಕೊಂಡಿಲ್ಲ? ಎಂಬ ನಾಗರೀಕರ ಪ್ರಶ್ನೆಗೆ ರಾಜಭವನ ಉತ್ತರಿಸಬೇಕಿದೆ.

ರಾಜಭವನ ಕೇಸರೀಕರಣ ಗೊಳ್ಳಬಾರದು ಮತ್ತು ರಾಜ್ಯಪಾಲರು ಒಂದು ಪಕ್ಷದ ಏಜೆಂಟ್ ರಂತೆ ವರ್ತಿಸಬಾರದು. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಮೂಲಕ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಬೆಲೆ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ವಿರುದ್ಧದ ಅನ್ಯಾಯ, ಸಂವಿಧಾನ ವಿರೋಧಿ, ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆತರುವ ರಾಜ್ಯಪಾಲರ ಈ ನಡೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸುತ್ತದೆ” ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್ ಹೇಳಿದ್ದಾರೆ.  

ರಾಜಕೀಯ

“ಇಸ್ಮಾಯಿಲ್ ತಮಟಗಾರ ಮೇಲೆ ಈ ಹಿಂದೆಯೂ ಸಹ ಹತ್ಯೆಗೆ ಯತ್ನ ನಡೆದಿದ್ದು, ಇವರ ಹಾಗೂ ಇವರ ಕುಟುಂಬಕ್ಕೆ ಜೀವ ಭಯ ಇರುವುದರಿಂದ ಸೂಕ್ತ ರಕ್ಷಣೆ ಒದಗಿಸಬೇಕು” – ಕರ್ನಾಟಕ ಮುಸ್ಲಿಂ ಯುನಿಟಿ

ಜಾತ್ಯತೀತ ಮುಖಂಡರು, ಹಿರಿಯ ಸಮಾಜ ಸೇವಕರು, ಮುಸ್ಲಿಂ ರಾಜಕೀಯ ನಾಯಕರು ಹಾಗೂ ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷರಾಗಿರುವ ಇಸ್ಮಾಯಿಲ್ ತಮಟಗಾರ ರವರ ಮನೆ ಹಾಗೂ ಕುಟುಂಬಸ್ಥರ ಮೇಲೆ ನಡೆದ ದಾಳಿಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸಿದೆ.

ಇಂತಹ ಸಮಾಜ ವಿರೋಧಿ ಕೃತ್ಯಗಳನ್ನು ತಡೆಯಲು ಅವಳಿ ನಗರದ ಪೊಲೀಸರು ಮುಂದಾಗಬೇಕು ಎಂದು ಹೇಳಿರುವ ಕರ್ನಾಟಕ ಮುಸ್ಲಿಂ ಯುನಿಟಿ (KMU)ಯ ರಾಜ್ಯಾಧ್ಯಕ್ಷ ಜಬ್ಬಾರ್ ಕಲ್ಬುರ್ಗಿ ಅವರು, “ಇಸ್ಮಾಯಿಲ್ ತಮಟಗಾರರ ಮನೆ ಹಾಗೂ ಕುಟುಂಬಸ್ಥರ ಮೇಲೆ ನಡೆದ ದಾಳಿಯ ಕುರಿತು ಸೂಕ್ತ ಹಾಗೂ ಶೀಘ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಅವಳಿ ನಗರದ ಪೊಲೀಸ್ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

“ಈ ಹಿಂದೆಯೂ ಸಹ ಇವರ ಮೇಲೆ ಹತ್ಯೆಗೆ ಯತ್ನ ನಡೆದಿದ್ದು, ಇವರ ಹಾಗೂ ಇವರ ಕುಟುಂಬಕ್ಕೆ ಜೀವ ಭಯ ಇರುವುದರಿಂದ ಸೂಕ್ತ ರಕ್ಷಣೆ ಒದಗಿಸಬೇಕು” ಎಂದೂ ಹೇಳಿದ್ದಾರೆ.

“ಈ ಕೃತ್ಯ ಮಾಡಿರುವ ಹಾಗೂ ಈ ಕುತಂತ್ರದ ಹಿಂದೆ ಯಾರು ಇದ್ದಾರೆಂಬುದನ್ನು ಪೋಲೀಸರು ತನಿಖೆ ನಡೆಸಿ, ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮವನ್ನು ಅತಿ ಶೀಘ್ರವಾಗಿ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅವಳಿ ನಗರದ ಪೊಲೀಸ್ ಇಲಾಖೆಯ ವಿರುದ್ಧ ರಾಜ್ಯದಾದಂತ್ಯ ಕರ್ನಾಟಕ ಮುಸ್ಲಿಂ ಯುನಿಟಿ (KMU) ಹೋರಾಟ ನಡೆಸಲಿದೆ” ಎಂದು ಹೇಳಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ!

ಆಗಸ್ಟ್ 5, 2019 ರಂದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ಇದ್ದಕ್ಕಿದ್ದಂತೆ ರದ್ದುಗೊಳಿಸಿತು. ಇದು ದೇಶದಾದ್ಯಂತ ಭಾರೀ ಆಘಾತವನ್ನುಂಟು ಮಾಡಿತ್ತು. ಎಲ್ಲಾ ವಿರೋಧ ಪಕ್ಷಗಳು ಹೋರಾಟಕ್ಕೆ ಧುಮುಕಿದವು. ಆದರೂ, ಕೇಂದ್ರ ಸರ್ಕಾರ ತನ್ನ ನಿಲುವಿನಲ್ಲಿ ಅಚಲವಾಗಿತ್ತು.

ಕೇಂದ್ರ ಸರ್ಕಾರದ ಈ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಈ ಪ್ರಕರಣಗಳು ದೀರ್ಘ ಕಾಲದಿಂದ ಬಾಕಿ ಉಳಿದಿದ್ದು, ಕಳೆದ ವರ್ಷ ಆಗಸ್ಟ್‌ನಿಂದ ವಿಚಾರಣೆ ನಡೆದು ಡಿಸೆಂಬರ್‌ನಲ್ಲಿ ತೀರ್ಪು ನೀಡಲಾಯಿತು. ಕೇಂದ್ರ ಸರ್ಕಾರದ ನಿರ್ಧಾರವನ್ನು ಒಪ್ಪಿಕೊಂಡ ನ್ಯಾಯಾಲಯವು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 2024 ರೊಳಗೆ ಚುನಾವಣೆ ನಡೆಸಬೇಕು ಎಂದು ಆದೇಶಿಸಿತ್ತು.

ಏತನ್ಮಧ್ಯೆ, ಕಳೆದ ತಿಂಗಳು ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರವೇ ಚುನಾವಣೆ ನಡೆಸಿ ರಾಜ್ಯ ಸ್ಥಾನಮಾನ ನೀಡುವುದಾಗಿ ಹೇಳಿದ್ದರು.

ಈ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ದಿನಾಂಕಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಅದರಂತೆ 90 ಸ್ಥಾನಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಗುತ್ತಿದೆ. ಅಂದರೆ ಸೆಪ್ಟೆಂಬರ್ 18ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಇದಕ್ಕಾಗಿ ಆಗಸ್ಟ್ 20 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 27. ಅದೇ ರೀತಿ ನಾಮಪತ್ರ ಹಿಂಪಡೆಯಲು ಆಗಸ್ಟ್ 30 ಕೊನೆಯ ದಿನವಾಗಿದೆ.

ಸೆ.25ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಇದಕ್ಕಾಗಿ ಆಗಸ್ಟ್ 29 ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಸೆಪ್ಟೆಂಬರ್ 9 ಕೊನೆಯ ದಿನವಾಗಿದೆ.

ಮೂರನೇ ಹಂತದ ಚುನಾವಣೆಗೆ ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಇದಕ್ಕೆ ನಾಮಪತ್ರ ಸಲ್ಲಿಕೆ ಸೆಪ್ಟೆಂಬರ್ 5 ರಂದು ಆರಂಭವಾಗಲಿದೆ. ಸೆಪ್ಟೆಂಬರ್ 12 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ. ಅಕ್ಟೋಬರ್ 4 ರಂದು ಮೂರು ಹಂತಗಳ ಮತ ಎಣಿಕೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 87 ಲಕ್ಷ ಜನರು ಮತದಾನ ಮಾಡಲು ಅರ್ಹರಾಗಿದ್ದಾರೆ. ಈ ಪೈಕಿ 3.71 ಲಕ್ಷ ಜನರು ಮೊದಲ ತಲೆಮಾರಿನ ಮತದಾರರು. ಚುನಾವಣಾ ಆಯೋಗದ ಪ್ರಕಾರ, ನಗರ ಪ್ರದೇಶದಲ್ಲಿ 2332 ಮತ್ತು ಗ್ರಾಮೀಣ ಪ್ರದೇಶದಲ್ಲಿ 9506 ಒಟ್ಟು 11,838 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಅಲ್ಲದೆ, ಜಮ್ಮು ಮತ್ತು ಕಾಶ್ಮೀರದ 90 ವಿಧಾನಸಭಾ ಕ್ಷೇತ್ರಗಳಲ್ಲಿ 74 ಸಾಮಾನ್ಯ ಮತ್ತು 16 ಮೀಸಲು (ಎಸ್‌ಟಿ 9. ಎಸ್‌ಸಿ 7) ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ವಿಶೇಷ ಸ್ಥಾನಮಾನ ರದ್ದಾದ ನಂತರ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿರುವುದು ಗಮನಾರ್ಹ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ದಿನಾಂಕ ಘೋಷಣೆ ಮಾಡಿರುವುದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ರಾಜಕೀಯ

“ಬಂಗಾಳಕೊಲ್ಲಿಯಲ್ಲಿ ಅಮೆರಿಕದ ಪ್ರಾಬಲ್ಯಕ್ಕೆ ಅವಕಾಶ ನೀಡಿದ್ದರೆ ನಾನೇ ಅಧಿಕಾರದಲ್ಲಿ ಮುಂದುವರಿಯುತ್ತಿದ್ದೆ” ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.

ಅವಾಮಿ ಲೀಗ್ ಸದಸ್ಯೆ ಶೇಖ್ ಹಸೀನಾ ಅವರು 2009ರಲ್ಲಿ ಎರಡನೇ ಬಾರಿಗೆ ಬಾಂಗ್ಲಾದೇಶದ ಪ್ರಧಾನಿಯಾದರು. ಆ ಬಳಿಕ ಸತತ 5 ಬಾರಿ ಸಂಸತ್ ಚುನಾವಣೆಯಲ್ಲಿ ಸೋಲದೆ ಗೆದ್ದು ಪ್ರಧಾನಿಯಾದರು.

ಆದರೆ, ಬಾಂಗ್ಲಾದೇಶದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ವಾರಸುದಾರರಿಗೆ ಮೀಸಲಾತಿ ನೀಡಿರುವುದನ್ನು ವಿರೋಧಿಸಿ ಬಾಂಗ್ಲಾದಲ್ಲಿ ನಡೆದ ಪ್ರತಿಭಟನೆಯಲ್ಲಿ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸುಪ್ರೀಂ ಕೋರ್ಟ್‌ನ ತೀರ್ಪಿನಿಂದಾಗಿ ಪ್ರತಿಭಟನೆ ಶಮನಗೊಂಡಿದ್ದ ಹಿನ್ನೆಲೆಯಲ್ಲಿ, ಕೆಲ ದಿನಗಳ ಹಿಂದೆ ಮತ್ತೆ ಪ್ರತಿಭಟನೆ ಭುಗಿಲೆದ್ದಿತ್ತು.

ಈ ಪ್ರತಿಭಟನೆಯ ತೀವ್ರತೆಯನ್ನು ಗ್ರಹಿಸಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದರು. ಇದರ ಬೆನ್ನಲ್ಲೇ ಇದೀಗ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಏತನ್ಮಧ್ಯೆ ಶೇಖ್ ಹಸೀನಾ ಅವರು ಬಾಂಗ್ಲಾದೇಶದಿಂದ ಪಲಾಯನ ಮಾಡಿದ ಕುರಿತು ಬರೆದಿರುವ ಪತ್ರ ಪ್ರಕಟವಾಗಿದೆ.

ಆ ಪತ್ರದಲ್ಲಿ, “ಬಾಂಗ್ಲಾದೇಶದಲ್ಲಿ ಮತ್ತಷ್ಟು ಹಿಂಸಾಚಾರ ಮತ್ತು ಪ್ರಾಣಹಾನಿ ತಡೆಯಲು ರಾಜೀನಾಮೆ ನೀಡಿದ್ದೇನೆ. ವಿದ್ಯಾರ್ಥಿಗಳ ಶವಗಳ ಮೇಲೇರಿ ವಿರೋಧಿಗಳು ಅಧಿಕಾರಕ್ಕೆ ಬರುವುದನ್ನು ನಾನು ತಡೆದಿದ್ದೇನೆ. ಬಂಗಾಳಕೊಲ್ಲಿಯನ್ನು ಆಳಲು ಅಮೆರಿಕಕ್ಕೆ ಅವಕಾಶ ನೀಡುವುದರ ಜೊತೆಗೆ, ನಮ್ಮ ದೇಶಕ್ಕೆ ಸೇರಿದ ಸೇಂಟ್ ಮಾರ್ಟಿನ್ ದ್ವೀಪಗಳ ಸಾರ್ವಭೌಮತ್ವವನ್ನು ಅವರಿಗೆ ಹಸ್ತಾಂತರಿಸಿದ್ದರೆ ನಾನು ಅಧಿಕಾರದಲ್ಲಿರುತ್ತಿದ್ದೆ.

ಈಗಲಾದರೂ ಪ್ರತ್ಯೇಕತಾವಾದಿಗಳ ಕುತಂತ್ರಕ್ಕೆ ಬಲಿಯಾಗಬೇಡಿ ಎಂದು ದೇಶದ ಜನತೆಗೆ ಮನವಿ ಮಾಡುತ್ತೇನೆ. ಅವಾಮಿ ಲೀಗ್‌ ಪಕ್ಷದವರು ಭರವಸೆ ಕಳೆದುಕೊಳ್ಳಬಾರದು. ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ. ನಾನು ವಿಫಲವಾಗಿರಬಹುದು. ಆದರೆ, ನಮ್ಮ ಕುಟುಂಬ ಮತ್ತು ನನ್ನ ತಂದೆ ಯಾರಿಗಾಗಿ ಪ್ರಾಣ ತ್ಯಾಗ ಮಾಡಿದರೋ ಅವರು ಗೆದ್ದಿದ್ದಾರೆ” ಎಂದು ಅದರಲ್ಲಿ ಹೇಳಿದೆ.

ರಾಜಕೀಯ

ಮೈಸೂರು: ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ ಮತ್ತು ಅಧಿಕಾರ ದುರ್ಬಳಕೆ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್ ನ ಜನತಂತ್ರ ವಿರೋಧಿ ನಡೆಯನ್ನು ವಿರೋಧಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

“ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ. ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ದೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ” ಎಂದು ಹೇಳಿದರು.

“ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ. ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ.

ಜೆಡಿಎಸ್ ನ ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ‘ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು’ ಎಂದು ದೇವೇಗೌಡರು ಹೇಳಿದ್ದರು. ‘ನರೇಂದ್ರ ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ’ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ” ಎಂದು ಕಿಡಿಕಾರಿದರು.

“ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ.

ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು. ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ.

ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಲುಗಾಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

“ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ.

ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ವಿಶೇಷ ತನಿಖಾ ದಳ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ಎಸ್‌ಐಟಿ ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ ಎಸ್‌ಐಟಿ ಯವರು ತನಿಖೆ ನಡೆಸಿದ್ದಾರೆ. ಆದರೂ, ಇಡಿಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು.

ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ” ಎಂದರು.

“ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು? ಸುಪ್ರೀಂಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ?

ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ”? ಎಂದು ಆಕ್ರೋಶ ವ್ಯಕ್ತಪಡಿಸಿದರು.

“15 ಬಜೆಟ್ ಮಂಡಿಸಿದ್ದೇನೆ. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ, ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ” ಎಂದು ಸವಾಲೆಸದರು.

ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ. ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮದ್ರೋಹ ಅಲ್ಲವೇ?” ಎಂದು ಕಿಡಿಕಾರಿದರು.  

“ಮುಡಾ ವಿಚಾರದಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸ್ಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಹೀಗಿದ್ದಾಗ ಇದರಲ್ಲಿ ನನ್ನ ಪಾತ್ರ ಏನಿದೆ?

ನಮ್ಮ ಜಮೀನು ಅಕ್ರಮವಾಗಿ ವಶಕ್ಕೆ ಪಡೆದು ಸೈಟು, ಪಾರ್ಕ್, ರಸ್ತೆ ಮಾಡಿ ಹಂಚಿಬಿಟ್ಟರು. ಇಲ್ಲಿ ತಪ್ಪು ಮಾಡಿರುವುದು ಮುಡಾ. ತಪ್ಪು ಒಪ್ಪಿಕೊಂಡು ನಂತರ ನನ್ನ ಕುಟುಂಬಕ್ಕೆ ಬದಲಿ ನಿವೇಶನ ನೀಡಿದ್ದಾರೆ. ನನ್ನ ಪತ್ನಿ ಬದಲಿ ಜಮೀನು ಕೊಡಿ ಎಂದು ಅರ್ಜಿ ಹಾಕಿದ್ದರೇ ವಿನಃ ಯಾವುದೇ ನಿರ್ಧಿಷ್ಟ ಜಾಗದಲ್ಲಿ ನಿವೇಶನ ಕೊಡಿ ಎಂದು ಕೇಳಿರಲಿಲ್ಲ.

ನಿವೇಶನ ಕೊಟ್ಟವರು ಜಿಜೆಪಿ ಸರ್ಕಾರದವರು. ಈಗ ಹಗರಣ ನಡೆದಿದೆ ಎನ್ನುತ್ತಿರುವವರು ಅವರೇ. ಇದರಲ್ಲೇ ಅವರ ಉದ್ದೇಶ ಏನಿದೆ ಎಂಬುದನ್ನು ರಾಜ್ಯದ ಜನ ಅರ್ಥಮಾಡಿಕೊಳ್ಳಬೇಕು” ಎಂದು ಮನವಿ ಮಾಡಿದರು.

ರಾಜಕೀಯ

ಮೈಸೂರು: ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಹೇಳಿದರು.

“ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ” ಎಂದು ಹೇಳಿದರು.

“ಮುಡಾ ಅಕ್ರಮವಾಗಿ ನಮ್ಮ ಜಮೀನನ್ನು ಸ್ವಾಧೀನ ಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ 2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ” ಎಂದು ಹೇಳಿದರು.

“ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ” ಎಂದು ಕಿಡಿಕಾರಿದರು.

“ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ” ಎಂದು ಹೇಳಿದರು.

“ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ” ಎಂದು ಗುಡುಗಿದರು.

ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂಬ ವಿಶ್ವಾಸವಿದೆ” ಎಂದು ಹೇಳಿದರು.

ರಾಜಕೀಯ

ಮೈಸೂರು: “ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಬಿಜೆಪಿ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಅಪಾದಿಸಿದರು.

“ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಕಿಡಿಕಾರಿದರು.

“ನಿನ್ನೆ ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು ನಾನು ಸಭೆಗೆ ಹೋಗದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟೀಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟೀಸನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ” ಎಂದು ಹೇಳಿದರು.

“ಕೆ.ಜೆ.ಅಬ್ರಹಾಂ ಅವರ ಇತಿಹಾಸ ನೋಡಿದರೆ ಅವರೊಬ್ಬ ಬ್ಲಾಕ್ ಮೇಲರ್ ಎಂದು ಗೊತ್ತಾಗುತ್ತದೆ. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ.

ಅಬ್ರಹಾಂ ಅವರು ಜುಲೈ 26 ರಂದು ಬೆಳಿಗ್ಗೆ 11.30ಕ್ಕೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರ ಬೆಂಬಲದಿಂದ ಆಯ್ಕೆಯಾದ ಮುಖ್ಯಮಂತ್ರಿಗೆ ನೋಟೀಸು ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಏನು ನೋಡದೇ ಆತುರವಾಗಿ ನಿರ್ಧಾರ ಮಾಡಿದ್ದಾರೆ. ಅಂದೇ ನೋಟೀಸು ನೀಡಿದ್ದಾರೆ” ಎಂದು ಕಿಡಿಕಾರಿದರು.

“ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2.00 ಗಂಟೆಗೆ ನೋಟೀಸನ್ನು ಆತುರವಾಗಿ ಕೊಟ್ಟಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ಇಂದ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? ನನ್ನ ತಪ್ಪು ಏನೂ ಇಲ್ಲದೆ ಇದ್ದರೂ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

“ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿಮಂಡಲದವರು; ನಾವು ಸಲಹೆ ನೀಡಿಲ್ಲ. ಮುಖ್ಯ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ. ಮೂಡಾ ಪ್ರಕರಣದ ಬಗ್ಗೆ ನ್ಯಾಯಾಂಗ ಆಯೋಗವನ್ನು ಜುಲೈ 14 ರಂದು ಸರ್ಕಾರ ರಚಿಸಿದೆ; ಆಯೋಗದ ವರದಿಯನ್ನು ನಿರೀಕ್ಷಿಸಲಾಗಿದೆ. ತನಿಖೆ ನಡೆಸಿ ತಪ್ಪುಗಳಾಗಿದ್ದರೆ ವರದಿ ಸಲ್ಲಿಸುತ್ತಾರೆ. ಅದನ್ನೂ ಪರಿಗಣಿಸದೆ ರಾಜ್ಯಪಾಲರು ನೋಟೀಸು ನೀಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ಇಂದ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? ನನ್ನ ತಪ್ಪು ಏನೂ ಇಲ್ಲದೆ ಇದ್ದರೂ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ” ಎಂದು ಹೇಳಿದರು.

“ರಾಜ್ಯಪಾಲರ ನೋಟೀಸಿನಿಂದ ಆರ್.ಅಶೋಕ್ ಅವರು ಹೆದರಿರಬಹುದು, ನನಗೆ ಯಾಕೆ ಹೆದರಿಕೆಯಾಗಬೇಕು? ಕಾನೂನಿನ ರೀತ್ಯಾ ಅವರು ನೋಟೀಸು ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪು ಮಾಡಿಲ್ಲ” ಎಂದು ಪುನರುಚ್ಚಿಸಿದರು.

“ಬಿಜೆಪಿ ಪಾದಯಾತ್ರೆ ಮಾಡುವ ಬಗ್ಗೆ ನಮ್ಮ ಅಭ್ಯಂತರವಿಲ್ಲ. ಕೇಂದ್ರ ಸಚಿವರು ಹಾಗೂ ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಪಾದಯಾತ್ರೆ ಬೇಡ ಎಂದರು. ಮಳೆ ಹೆಚ್ಚಾಗಿದೆ, ಜಲಾಶಯಗಳು ತುಂಬಿ ಪ್ರವಾಹ ಬಂದಿದೆ ಅದರ ಕಡೆಗೆ ಗಮನ ನೀಡಬೇಕೆಂದು ಹೇಳಿದರು. ಈಗ ಅದು ಮರೆತುಹೋಯಿತೇ? ಹಾಗಾದರೆ ಅವರು ಈಗ ಸ್ವ ಇಚ್ಛೆಯಿಂದ ಮಾಡುತ್ತಿಲ್ಲ ಎಂದಾಯಿತು” ಎಂದು ಲೇವಡಿ ಮಾಡಿದರು.

“ಮಳೆಯಿಂದ ಮನೆ ಬಿದ್ದಿರುವುದು, ರಸ್ತೆ ಹಾಳಾಗಿರುವುದು, ಸೇತುವೆಗಳು, ವಿದ್ಯುತ್ ಕಂಬಗಳು ಬಿದ್ದಿರುವುದ್ದರ ಬಗ್ಗೆ ವರದಿ ತರಿಸಲಾಗುತ್ತಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಎಷ್ಟು ಕೊಡಬೇಕೋ ಅಷ್ಟು ಪರಿಹಾರ ನೀಡಿ ಮನೆಯನ್ನೂ ಕಟ್ಟಿಕೊಡಲಾಗುವುದು” ಎಂದು ಮಳೆ ಸಂತ್ರಸ್ತರಿಗೆ ಭರವಸೆ ನೀಡಿದರು.

ರಾಜಕೀಯ

ನವದೆಹಲಿ: ರಾಜಧಾನಿ ದೆಹಲಿಯ ನಾನಾ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನೂತನ ಸಂಸತ್ ಭವನದ ಮಧ್ಯಭಾಗದಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ಸೋರುವ ಜಾಗದಲ್ಲಿ ಪ್ಲಾಸ್ಟಿಕ್ ಬಕೆಟ್ ಇಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಸತ್ತಿನ ಸಂಕೀರ್ಣದಲ್ಲಿ ಮಳೆ ನೀರು ಸಂಗ್ರಹವಾಗಿದ್ದು, ಹೊಸ ಕಟ್ಟಡದ ಮಧ್ಯ ಭಾಗದಲ್ಲಿ ಮಳೆ ನೀರು ಸೋರಿಕೆಯಾಗಿರುವುದನ್ನು ಪ್ರತಿಪಕ್ಷಗಳು ತೀವ್ರವಾಗಿ ಟೀಕಿಸಿವೆ.

ಈ ಹಿನ್ನೆಲೆಯಲ್ಲಿ, ನೂತನ ಸಂಸತ್ ಭವನದಲ್ಲಿ ಮಳೆ ನೀರು ಸೋರಿಕೆ ವಿಚಾರವಾಗಿ ಲೋಕಸಭೆಯಲ್ಲಿ ಚರ್ಚಿಸಲು ಕಾಂಗ್ರೆಸ್ ಸಂಸದ ಡಾ.ಮಾಣಿಕಂ ಠಾಕೂರ್ ಮುಂದೂಡಿಕೆ ನಿಲುವಳಿ ಸೂಚನೆ ನೀಡಿದ್ದಾರೆ.

ಆ ನೋಟಿಸ್‌ನಲ್ಲಿ ‘ಸಂಸತ್ತಿನ ಕೇಂದ್ರ ಭಾಗದಲ್ಲಿ ಮಳೆ ನೀರು ಸೋರಿಕೆ ವಿಚಾರವನ್ನು ನಿಲುವಳಿ ಸೂಚನೆಯಡಿ ಚರ್ಚಿಸಬೇಕು. ಸರ್ವ ಪಕ್ಷಗಳ ಸಂಸದರನ್ನೊಳಗೊಂಡ ವಿಶೇಷ ಸಮಿತಿ ರಚಿಸಿ ಸಂಸತ್ ಭವನ ಪರಿಶೀಲನೆ ನಡೆಸಬೇಕು’ ಎಂದು ಕೇಳಿಕೊಂಡಿದ್ದಾರೆ.

ದೇಶ ರಾಜಕೀಯ

 ಡಿ.ಸಿ.ಪ್ರಕಾಶ್

ಬಿಹಾರದಲ್ಲಿ, 2022 ರ ದ್ವಿತೀಯಾರ್ಧದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ನಿತೀಶ್ ಕುಮಾರ್, ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅದೇ ವರ್ಷದ ಅಕ್ಟೋಬರ್‌ನಲ್ಲಿ ರಾಜ್ಯ ಮಟ್ಟದ ಜಾತಿವಾರು ಸಮೀಕ್ಷೆಯನ್ನು ಬಿಡುಗಡೆ ಮಾಡಿದರು.

ಜೊತೆಗೆ, ರಾಜ್ಯ ಸರ್ಕಾರಿ ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸುವುದಾಗಿಯೂ ಭರವಸೆ ನೀಡಿದರು. ಅಂದಿನಿಂದ, ಕಾಂಗ್ರೆಸ್ ಸೇರಿದಂತೆ ‘ಇಂಡಿಯಾ ಮೈತ್ರಿಕೂಟ’ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ಜಾತಿವಾರು ಜನಗಣತಿ ನಡೆಸುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿವೆ.

ಆದರೆ, ಈ ಬಗ್ಗೆ ಮೌನ ವಹಿಸಿದ್ದ ಬಿಜೆಪಿ ಸರ್ಕಾರ ಲೋಕಸಭೆ ಚುನಾವಣೆಯಲ್ಲಿ ಎಸ್.ಸಿ, ಎಸ್.ಟಿ ಮೀಸಲಾತಿಯನ್ನು ಕಸಿಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಪ್ರಚಾರ ಮಾಡಿತ್ತು. ಜಾತಿವಾರು ಗಣತಿಯನ್ನು ಬೆಂಬಲಿಸುವ ನಿತೀಶ್ ಕುಮಾರ್ ಮತ್ತು ಇತರರ ಬೆಂಬಲದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರವೂ ಬಿಜೆಪಿ ಈ ವಿಷಯದಲ್ಲಿ ಮೌನವಾಗಿದೆ.

ಆದರೂ, ಸರ್ಕಾರದ ಎಲ್ಲಾ ಯೋಜನೆಗಳು ಹಿಂದುಳಿದ, ಪರಿಶಿಷ್ಟ ಮತ್ತು ಬುಡಕಟ್ಟು ಜನರಿಗೆ ಸರಿಯಾಗಿ ಸಿಗುವಂತೆ ಮಾಡಲು ರಾಷ್ಟ್ರಮಟ್ಟದಲ್ಲಿ ಜಾತಿವಾರು ಜನಗಣತಿ ನಡೆಸಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಈ ಹಿನ್ನೆಲೆಯಲ್ಲಿ, 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಕಳೆದ ವಾರ ಮಂಡಿಸಲಾಗಿತ್ತು. ಈ ಕುರಿತು ಲೋಕಸಭೆಯಲ್ಲಿ ಸೋಮವಾರ (ಜುಲೈ 29) ರಂದು ದಿನ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಕೇಂದ್ರ ಬಜೆಟ್‌ ತಯಾರಿಸುವಲ್ಲಿ 20 ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಆದರೆ ಹಿಂದುಳಿದ, ಪರಿಶಿಷ್ಟ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ಒಬ್ಬ ವ್ಯಕ್ತಿಯನ್ನೂ ಅದರಲ್ಲಿ ಸೇರಿಸಲಾಗಿಲ್ಲ.

ದೇಶದ ಶೇ.73ರಷ್ಟು ಜನಸಂಖ್ಯೆ ಹೊಂದಿರುವ ಈ ಮೂರು ಸಮುದಾಯಗಳಿಗೆ ಬಜೆಟ್ ನಲ್ಲಿ ಏನೂ ಸಿಗಲಿಲ್ಲ. ಇಂದಿನ ಭಾರತದಲ್ಲಿ ಕಮಲ ಆಕಾರದ ಚಕ್ರವ್ಯೂಹ ಇದೆ. ಯುವಕರು, ರೈತರು, ಮಹಿಳೆಯರು, ಸಣ್ಣ ಮತ್ತು ಮಧ್ಯಮ ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಇದನ್ನು ಮೋದಿ, ಅಮಿತ್ ಶಾ, ಮೋಹನ್ ಭಾಗವತ್, ಅಜಿತ್ ದೋವಲ್, ಅಂಬಾನಿ ಮತ್ತು ಅದಾನಿ ಮುಂತಾದ ಆರು ಜನರು ನಿಯಂತ್ರಿಸುತ್ತಾರೆ” ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಸಂಸದ ಅನುರಾಗ್ ಠಾಕೂರ್ ಅವರು ರಾಹುಲ್ ಗಾಂಧಿ ವಿರುದ್ಧ ಜಾತಿ, ಧರ್ಮದ ಆಧಾರದಲ್ಲಿ ಪರೋಕ್ಷ ವಾಗ್ದಾಳಿ ನಡೆಸಿದ್ದು, ಪ್ರಧಾನಿ ಮೋದಿ ಇದನ್ನು ಹೊಗಳಿದ್ದು ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

ನಿನ್ನೆ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣಕ್ಕೆ ಪ್ರತಿಕ್ರಿಯಿಸಿದ ಅನುರಾಗ್ ಠಾಕೂರ್, “ತನ್ನ ಜಾತಿ ಗೊತ್ತಿಲ್ಲದ ವ್ಯಕ್ತಿ ಜಾತಿವಾರು ಗಣತಿ ಬಗ್ಗೆ ಮಾತನಾಡುತ್ತಿದ್ದಾರೆ. ಅಲ್ಲದೆ, ಕೆಲವರು ಆಕಸ್ಮಿಕವಾಗಿ ಹಿಂದೂಗಳಾಗಿದ್ದಾರೆ. ಆದ್ದರಿಂದ, ಮಹಾಭಾರತದ ಬಗ್ಗೆ ಅವರ ಜ್ಞಾನವು ಹಾಗೆ ಆಗಿರುತ್ತದೆ” ಎಂದು ವಾಗ್ದಾಳಿ ನಡೆಸಿದರು.

ಅನುರಾಗ್ ಠಾಕೂರ್

ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, “ಆದಿವಾಸಿ, ದಲಿತ ಮತ್ತು ಹಿಂದುಳಿದವರ ಸಮಸ್ಯೆಗಳನ್ನು ಯಾರೇ ಎತ್ತಿದರೂ ಅವರನ್ನು ನಿಂದಿಸಲಾಗುತ್ತದೆ. ಆದಾಗ್ಯೂ, ನಾನು ಇದನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ಅನುರಾಗ್ ಠಾಕೂರ್ ನನ್ನನ್ನು ನಿಂದಿಸಿ ಅವಮಾನ ಮಾಡಿದ್ದಾರೆ.

ಆದರೆ, ನಾನು ಅವರಿಂದ ಯಾವುದೇ ಕ್ಷಮೆಯನ್ನು ಬಯಸುವುದಿಲ್ಲ. ನೀವು ನನ್ನನ್ನು ಎಷ್ಟು ಬೇಕಾದರೂ ಅವಮಾನಿಸಬಹುದು. ಸಂಸತ್ತಿನಲ್ಲಿ ಜಾತಿವಾರು ಜನಗಣತಿಯನ್ನು ನಾವು ಅಂಗೀಕರಿಸುತ್ತೇವೆ” ಎಂದರು. ಮತ್ತೊಂದೆಡೆ, ಸಮಾಜವಾದಿ ನಾಯಕ ಅಖಿಲೇಶ್ ಯಾದವ್, “ಅದು ಹೇಗೆ ಒಬ್ಬರ ಜಾತಿಯನ್ನು ಕೇಳುವುದು?” ಎಂದು ಅನುರಾಗ್ ಠಾಕೂರ್ ಅವರನ್ನು ಪ್ರಶ್ನಿಸಿದರು.

ಅಲ್ಲದೆ, ಅನೇಕ ವಿರೋಧ ಪಕ್ಷದ ಸಂಸದರು ಸಹ ಅನುರಾಗ್ ಠಾಕೂರ್ ಅವರ ಇಂತಹ ಭಾಷಣವನ್ನು ವಿರೋಧಿಸಿದರು. ಆದರೆ, ಸದನದಲ್ಲಿ ನಡೆದ ಈ ಘಟನೆಗೆ ಇನ್ನಷ್ಟು ತುಪ್ಪ ಸುರಿಯುವ ಸಲುವಾಗಿ ಪ್ರಧಾನಿ ಮೋದಿ, ನನ್ನ ಯುವ ಮತ್ತು ಶಕ್ತಿಯುತ ಸಹೋದ್ಯೋಗಿ ಅನುರಾಗ್ ಠಾಕೂರ್ ಅವರ ಈ ಭಾಷಣ, ಕೇಳಲೇಬೇಕು. ಸತ್ಯ ಮತ್ತು ಹಾಸ್ಯದ ಈ ಪರಿಪೂರ್ಣ ಮಿಶ್ರಣವು ಇಂಡಿಯಾ ಮೈತ್ರಿಕೂಟದ ಕೊಳಕು ರಾಜಕೀಯವನ್ನು ಬಹಿರಂಗಪಡಿಸುತ್ತದೆ” ಎಂದು ಟ್ವೀಟ್ ಮಾಡಿ, ಅನುರಾಗ್ ಠಾಕೂರ್ ಅವರು ಸದನದಲ್ಲಿ ಮಾಡಿದ ಭಾಷಣದ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಪುಟ X ನಲ್ಲಿ ಹಂಚಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ಅನುರಾಗ್ ಠಾಕೂರ್ ಅವರು ಅಖಿಲೇಶ್ ಯಾದವ್ ಅವರ ಹಳೆಯ ವಿಡಿಯೋವನ್ನು ಕಟ್ ಮಾಡಿ, “ನೀವು ಜಾತಿಯ ಬಗ್ಗೆ ಅದು ಹೇಗೆ ಕೇಳಬಹುದು ಅಖಿಲೇಶ್ ಯಾದವ್?” ಎಂದು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

ಮತ್ತೊಂದೆಡೆ, ಕಮ್ಯುನಿಸ್ಟ್ ಪಕ್ಷದ ಸಂಸದ ಸಿ.ವೆಂಕಟೇಶನ್ ಅವರು ತಮ್ಮ ಎಕ್ಸ್ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ, “ನಿನ್ನೆ ಸಂಸತ್ತಿನಲ್ಲಿ, ‘ತನ್ನ ಜಾತಿ ಗೊತ್ತಿಲ್ಲದ ವ್ಯಕ್ತಿ ಜಾತಿವಾರು ಗಣತಿ ಬಗ್ಗೆ ಮಾತನಾಡಬಹುದಾ?’ ಎಂದು ರಾಹುಲ್ ಗಾಂಧಿ ಬಗ್ಗೆ ಅನುರಾಗ್ ಠಾಕೂರ್ ಮಾತನಾಡಿದರು.

ಈ ಭಾಷಣವನ್ನು ಎಲ್ಲರೂ ಕೇಳಲೇಬೇಕಾದ ಅತ್ಯುತ್ತಮ ಭಾಷಣ ಎಂದು ಪ್ರಧಾನಿ ತಮ್ಮ ‘ಎಕ್ಸ್’ ಸೈಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ದೇಶದ ಅತ್ಯುನ್ನತ ಸದನಗಳಲ್ಲಿ ಬಿಜೆಪಿಯ ಧ್ವನಿ ಎಷ್ಟು ನೋವಿನಿಂದ ಹೊರಹೊಮ್ಮುತ್ತಿದೆ ಎಂಬುದನ್ನು ನೋಡಿ” ಎಂದು ಟೀಕಿಸಿದ್ದಾರೆ. ಅವರನ್ನು ಅನುಸರಿಸಿ ಹಲವು ವಿರೋಧ ಪಕ್ಷಗಳ ನಾಯಕರು, ಅನುರಾಗ್ ಠಾಕೂರ್ ಅವರ ಕ್ರಮವನ್ನು ಖಂಡಿಸುತ್ತಾ, ಮೋದಿಯವರ ಹೊಗಳಿಕೆಯನ್ನು ಟೀಕಿಸುತ್ತಿದ್ದಾರೆ.

ಅಲ್ಲದೆ, ಅನುರಾಗ್ ಠಾಕೂರ್ ಅವರ ವೀಡಿಯೊವನ್ನು ವೀಕ್ಷಿಸಲು ಮೋದಿಯವರ ಮನವಿಗೆ ವಿರುದ್ಧವಾಗಿ ಕಾಂಗ್ರೆಸ್ ಪಕ್ಷವು, ಇದು ಸಂಸತ್ತಿನ ವಿಶೇಷ ಹಕ್ಕುಗಳ ಉಲ್ಲಂಘನೆ ಮತ್ತು ಅಸಂವಿಧಾನಿಕ ಎಂದು ಲೋಕಸಭೆಯ ರೂಲ್ ಬುಕ್ ಚಾಪ್ಟರ್ 20ರ ರೂಲ್ ನಂಬರ್ 222ರ ಪ್ರಕಾರ ಮೋದಿಯವರ ವಿರುದ್ಧ ಹಕ್ಕುಚ್ಯುತಿ (Privilege Motion Notice) ಮಂಡಿಸಿದೆ.