ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
2023 » Page 11 of 76 » Dynamic Leader
October 23, 2024
Home 2023 (Page 11)
ದೇಶ

ಮುಂಬೈ: ಜೆಟ್ ಏರ್ವೇಸ್ ಅಧ್ಯಕ್ಷ ನರೇಶ್ ಗೋಯಲ್, ರೂ.848 ಕೋಟಿ ಬ್ಯಾಂಕ್ ಸಾಲ ಪಡೆದಿದ್ದರು. ಅದರಲ್ಲಿ ರೂ.538 ಕೋಟಿ ಬಾಕಿ ಸಾಲವನ್ನು ಮರುಪಾವತಿ ಮಾಡದೆ ವಂಚಸಿದ್ದ ಪ್ರಕರಣವನ್ನು ಜಾರಿ ನಿರ್ದೇಶನಾಲಯ ದಾಖಲಿಸಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ. ಈ ಹಿನ್ನಲೆಯಲ್ಲಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನರೇಶ್ ಗೋಯಲ್ ಕುಟುಂಬಕ್ಕೆ ಸೇರಿದ ಲಂಡನ್ ಮತ್ತು ದುಬೈನಲ್ಲಿರುವ 17 ಬಂಗಲೆಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಸ್ಥಗಿತಗೊಳಿಸಿದೆ.

ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯದ ವರದಿಯ ಪ್ರಕಾರ, ಲಂಡನ್, ದುಬೈ ಮತ್ತು ಭಾರತದ ವಿವಿಧ ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜೆಟ್ ಏರ್‌ವೇಸ್ ಮತ್ತು ಅದರ ಸಂಸ್ಥಾಪಕ ನರೇಶ್ ಗೋಯಲ್, ಅವರ ಪತ್ನಿ ಅನಿತಾ ಗೋಯಲ್ ಮತ್ತು ಪುತ್ರ ನಿವಾನ್ ಗೋಯಲ್ ಮುಂತಾದವರ ಜೆಟ್ ಏರ್ ಪ್ರೈವೇಟ್ ಲಿಮಿಟೆಡ್ ಮತ್ತು ಜೆಟ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ವಿವಿಧ ವ್ಯಕ್ತಿಗಳು ಮತ್ತು ಕಂಪನಿಗಳ ಹೆಸರಿನಲ್ಲಿದ್ದ 17 ಫ್ಲಾಟ್‌ಗಳು ಹಾಗೂ ಬಂಗಲೆಗಳು ಮತ್ತು ಸಂಕೀರ್ಣಗಳನ್ನು ಮುಚ್ಚಲಾಗಿದೆ.

ವಿಮಾನಯಾನ ಸಂಸ್ಥೆಗೆ ನೀಡಲಾಗಿದ್ದ ಸಾಲವನ್ನು ವಂಚನೆ ಮಾಡಿದ ಆರೋಪದಲ್ಲಿ ಸೆಪ್ಟೆಂಬರ್‌ನಲ್ಲಿ ಬಂಧನಕ್ಕೊಳಗಾಗಿದ್ದ ನರೇಶ್ ಗೋಯಲ್ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಆರೋಪಪಟ್ಟಿ ಸಲ್ಲಿಸಿದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ನವೆಂಬರ್ 2022ರಲ್ಲಿ ಕೆನರಾ ಬ್ಯಾಂಕ್ ಸಲ್ಲಿಸಿದ ದೂರಿನ ಮೇರೆಗೆ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ, ವಿಮಾನಯಾನ ಸಂಸ್ಥೆಯ ಕಾರ್ಯಾಚಟುವಟಿಕೆಗೆ ನೀಡಿದ ಸಾಲದ ಮೊತ್ತವನ್ನು ವೈಯಕ್ತಿಕ ವೆಚ್ಚಗಳಿಗೆ ಬಳಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯವು ಪ್ರಕರಣವನ್ನು ದಾಖಲಿಸಿದೆ. 2011-2019ರ ಅವಧಿಯಲ್ಲಿ ಬಾಹ್ಯ ಲೆಕ್ಕ ಪರಿಶೋಧನಾ ಸಂಸ್ಥೆಯು ನಡೆಸಿದ ಫೋರೆನ್ಸಿಕ್ ಆಡಿಟ್ ಅನ್ನು ಆಧರಿಸಿ ಬ್ಯಾಂಕ್ ದೂರು ದಾಖಲಾಗಿದೆ.

ಕೆನರಾ ಬ್ಯಾಂಕ್ ಸಾಲವನ್ನು 2019ರಲ್ಲಿ ಅನುತ್ಪಾದಕ ಆಸ್ತಿ (NPA) ಎಂದು ಘೋಷಿಸಲಾಗಿದ್ದು, 538 ಕೋಟಿ ಸಾಲದ ಮೊತ್ತದ ವಾಪಸಾತಿ ಮತ್ತು ವಂಚನೆ ಮಾಡಿದ ಆದಾಯವು ಅಪರಾಧದ ಆದಾಯವಲ್ಲದೆ ಬೇರೇನೂ ಅಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳುತ್ತದೆ. ಬ್ಯಾಂಕ್‌ಗಳ ಒಕ್ಕೂಟವು ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್‌ಗೆ ಅದರ ಕಾರ್ಯಾಚರಣೆಯ ಕೆಲಸಕ್ಕಾಗಿಯೇ ಸಾಲಗಳನ್ನು ನೀಡಿತು ಎಂಬುದು ಗಮನಾರ್ಹ.

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ, ನಾಡಬಂಧುಗಳಿಗೆ ರಾಜ್ಯೋತ್ಸವದ ಶುಭ ಕೋರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

“ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು” ಎಂದರು.

“ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು. ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ” ಎಂದು ಹೇಳಿದರು.

“ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ; ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ. ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು, ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ. ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು” ಎಂದು ಹೇಳಿದರು.  

ರಾಜ್ಯ

ಬೆಂಗಳೂರು: ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಹೇಳಿದ್ದಾರೆ.

“ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ” ಎಂದು ಹೇಳಿದ್ದಾರೆ.

“1973ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸಿದ್ದಾರೆ.

ದೇಶ

ಕೋಲ್ಕತ್ತಾ: ಸಂಸತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಮೋದಿ ಮತ್ತು ಅದಾನಿ ವಿರುದ್ಧ ಪ್ರಬಲವಾಗಿ ವಾದ ಮಂಡಿಸುತ್ತಿರುವವರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಪ್ರಮುಖರು. ಇವರು, ಸಂಸತ್ತಿನಲ್ಲಿ ಅದಾನಿಯ ಕುರಿತು ಪ್ರಶ್ನಿಸಲು ಉದ್ಯಮಿ ಹಿರಾನಂದಾನಿಯಿಂದ ಹಣ ಮತ್ತು ಉಡುಗೊರೆಗಳನ್ನು ಲಂಚವಾಗಿ ಪಡೆದರು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ.

ಅಲ್ಲದೆ, ಹಿರಾನಂದಾನಿ ಮತ್ತು ಅವರ ರಿಯಲ್ ಎಸ್ಟೇಟ್ ಕಂಪನಿ ತಮ್ಮ ಸ್ವಂತ ಲಾಭಕ್ಕಾಗಿ ಬಳಸಿಕೊಳ್ಳಲು ಲೋಕಸಭೆಯ ವೆಬ್‌ಸೈಟ್ ಮತ್ತು ತಮ್ಮ ಲಾಗಿನ್ ಐಡಿಯನ್ನು ಮಹುವಾ ಮೊಯಿತ್ರಾ ನೀಡಿದ್ದಾರೆ ಎಂದು ನಿಶಿಕಾಂತ್ ದುಬೆ ಆರೋಪಿಸಿದ್ದಾರೆ. ಈ ಬಗ್ಗೆ ನಿಶಿಕಾಂತ್ ದುಬೆ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ಪತ್ರ ಬರೆದ ನಂತರ, ಈ ವಿಚಾರದಲ್ಲಿ ಕ್ರಮ ಕೈಗೊಂಡಿರುವ ಸಂಸದೀಯ ನೈತಿಕ ಸಮಿತಿ, ನವೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಮಹುವಾ ಮೊಯಿತ್ರಾ ಅವರಿಗೆ ಆದೇಶ ಮಾಡಿತು.

ಈ ಹಿನ್ನಲೆಯಲ್ಲಿ, ನನ್ನನ್ನು ಸಂಸತ್ತಿನಿಂದ ಹೊರಹಾಕಲು ಬಯಸುವವರು ನನ್ನ ತಲೆ ಕೂದಲನ್ನೂ ಮುಟ್ಟಲಾಗದು ಎಂದು ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಹೇಳಿದ್ದಾರೆ. ಸಂಸತ್ತಿನಲ್ಲಿ ಅದಾನಿಯ ಕುರಿತು ಪ್ರಶ್ನಿಸಲು ಉದ್ಯಮಿ ದರ್ಶನ್ ಹಿರಾನಂದಾನಿ ಅವರಿಂದ ಲಂಚವಾಗಿ ಉಡುಗೊರೆ ಪಡೆದಿರುವ ಆರೋಪಕ್ಕೆ ಮೇಲಿನಂತೆ ಮಹುವಾ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಜ್ಯ

ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿ ಮಾತನಾಡಿದರು.

“ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನಲ್‌ಗಳಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ನಾನು ಅಧಿಕಾರ ಕಳ್ಕೊತೀನಿ ಅಂದ್ರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ರು. ಆದರೆ ನಾನು ಅಧಿಕಾರ ಪೂರ್ಣಗೊಳಿಸಿ ಮತ್ತೆ ಎರಡನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಇಂಥಾ ಮೌಡ್ಯದ ಸುದ್ದಿ ಮತ್ತು ಚರ್ಚೆಗಳನ್ನು ಚಾನಲ್‌ಗಳು ಮಾಡಬಾರದು.

ವಸ್ತು ಸ್ಥಿತಿಯನ್ನು ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದರಾಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡ್ತಾರೆ. ಇದು ತಪ್ಪು. ನನ್ನ ಸರ್ಕಾರದಲ್ಲಿ ತಪ್ಪುಗಳಿದ್ದರೆ ಮುಲಾಜಿಲ್ಲದೆ ಬರೆಯಿರಿ. ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ, ಜನಪರವಾಗಿ ಕೆಲಸ ಮಾಡ್ತಾ ಇದೆಯೋ? ಇಲ್ಲವೋ? ಎನ್ನುವುದನ್ನೂ ಪ್ರಾಮಾಣಿಕಕವಾಗಿ ಜನರಿಗೆ ತಲುಪಿಸಬೇಕು.

ನನ್ನ ಬಗ್ಗೆ ಸುಳ್ಳು ಬರೆದಾಗ, ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರಾ ಎಂದು ಕರೆ ಮಾಡಿ ಕೇಳಿಲ್ಲ, ಸರ್ಕಾರ ಒಳ್ಳೆ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿಕೊಳ್ಳಬೇಕು” ಎಂದು ಹೇಳಿದರು.

ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಜಗದ್ಗುರು ನಿರ್ಮಲಾನಂದ ಮಹಾ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಸಚಿವರಾದ ಚಲುವರಾಯಸ್ವಾಮಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ದೇಶ

ಚೆನ್ನೈ: ಸನಾತನ ಕುರಿತು ಸಚಿವ ಉದಯನಿಧಿ ಸ್ಟಾಲಿನ್ ಮಾತನಾಡಿರುವುದು ವಿವಾದಕ್ಕೀಡಾಗಿದ್ದು ಇದಕ್ಕೆ ಸಂಬಂಧಿಸಿದ ಪ್ರಕರಣ ಚೆನ್ನೈ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರಂತೆ ಇಂದು ಪ್ರಕರಣದ ವಿಚಾರಣೆ ನಡೆದಾಗ ಉದಯನಿಧಿ ಪರವಾಗಿ ವಾದ ಮಂಡಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸನಾತನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸನಾತನ ಭಾಷಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ ಕ್ವೋ ವಾರಾಂಟೊ (Quo Warranto) ಪ್ರಕರಣವನ್ನು ವಜಾಗೊಳಿಸಬೇಕು. ಆರೋಪಿಗಳನ್ನು ಸಾಕ್ಷ್ಯ ಕೇಳುವುದು ಸಂವಿಧಾನ ಬಾಹಿರ.

ಆರೋಪ ಸಾಬೀತುಪಡಿಸಲು ಅರ್ಜಿದಾರರೇ ಸಾಕ್ಷ್ಯ ಸಲ್ಲಿಸಬೇಕು ಎಂದು ಸಚಿವ ಉದಯನಿಧಿ ಸ್ಟಾಲಿನ್ ಪರವಾಗಿ ವಾದಿಸಲಾಯಿತು. ಆದ್ದರಿಂದ ಸಾಕ್ಷ್ಯಾಧಾರಗಳನ್ನು ಸಲ್ಲಿಸಲು ವಿಫಲವಾಗಿರುವ ಪ್ರಕರಣವನ್ನು ವಜಾಗೊಳಿಸುವಂತೆ ಮನವಿ ಮಾಡಲಾಗಿತ್ತು.

ನಂತರ, ಮದ್ರಾಸ್ ಹೈಕೋರ್ಟ್ ಸಚಿವರಾದ ಉದಯನಿಧಿ ಸ್ಟಾಲಿನ್, ಶೇಖರ್ ಬಾಬು ಮತ್ತು ಇತರರ ವಿರುದ್ಧದ ಪ್ರಕರಣವನ್ನು ನವೆಂಬರ್ 7 ಕ್ಕೆ ಮುಂದೂಡಿತು.

ರಾಜಕೀಯ

ಬೆಂಗಳೂರು: ಬರಪೀಡಿತ ಜನರಿಗೆ ಬೇಕಾಗಿರುವುದು ನಿಮ್ಮ ಬಾಯಿ ಮಾತಿನ ಸಾಂತ್ವನ ಅಲ್ಲ, ಅವರಿಗೆ ಬೇಕಾಗಿರುವುದು ಪರಿಹಾರ ಎಂದು ರಾಜ್ಯ ಪ್ರವಾಸ ಹೊರಟಿರುವ ರಾಜ್ಯ ಬಿಜೆಪಿ ನಾಯಕರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

‘‘ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಡಿದರಂತೆ’’ ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ. ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ. ಈ ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ನಾಯಕರೇ, ನಿಮ್ಮದೇ ಪಕ್ಷದ ಸರ್ಕಾರ ಕಳುಹಿಸಿರುವ ತಜ್ಞರ ತಂಡವೇ ದೆಹಲಿಯಿಂದ ಬಂದು ಕರ್ನಾಟಕದಲ್ಲಿನ ಬರಪರಿಸ್ಥಿತಿಯನ್ನು ಅಧ್ಯಯನ ಮಾಡಿ ಹೋಗಿದೆ. ಈಗ ನೀವು ಅದೇ ಉದ್ದೇಶದಿಂದ ಇನ್ನೊಂದು ಪ್ರವಾಸಕ್ಕೆ ಹೊರಟಿದ್ದೀರಿ. ಯಾಕೆ, ನಿಮ್ಮದೇ ಸರ್ಕಾರ ಕಳುಹಿಸಿರುವ ಬರ ಅಧ್ಯಯನ ತಂಡದ ಮೇಲೆ ನಿಮಗೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರದ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ಆಗಿರುವ ನಷ್ಟ ಅಂದಾಜು 33,770 ಕೋಟಿ ರೂಪಾಯಿ. ಕೇಂದ್ರ ಸರ್ಕಾರದಿಂದ ನಾವು ಕೇಳಿರುವುದು 17,901 ಕೋಟಿ ರೂಪಾಯಿ ಪರಿಹಾರ. ಕೇಂದ್ರದಿಂದ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಂದಿಲ್ಲ. ಬಿಜೆಪಿ ನಾಯಕರೇ, ರಾಜ್ಯದ ರೈತರ ಬಗ್ಗೆ ನೀವು ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಮೊದಲು ಹೆಚ್ಚು ಪರಿಹಾರಕ್ಕಾಗಿ ಕೇಂದ್ರವನ್ನು ಒತ್ತಾಯಿಸಿ ಎಂದು ಕೇಳಿಕೊಂಡಿದ್ದಾರೆ.

ಡಬಲ್ ಎಂಜಿನ್ ಸರ್ಕಾರ ಬಂದರೆ ರಾಜ್ಯದಲ್ಲಿ ಹಾಲು-ಜೇನಿನ ಹೊಳೆ ಹರಿಯತ್ತದೆ ಎಂದು ಅಮಾಯಕ ಕನ್ನಡಿಗರನ್ನು ನಂಬಿಸಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸಂಸದರನ್ನು ಗೆಲ್ಲಿಸಿಕೊಂಡರಲ್ಲಾ, ಅವರೇನು ಮಾಡುತ್ತಿದ್ದಾರೆ? ಕಳ್ಳೆಕಾಯಿ ತಿನ್ನುತ್ತಿದ್ದಾರಾ? ಅವರೆಂದಾದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಬಾಯಿ ಬಿಟ್ಟಿದ್ದಾರಾ? ಎಂದು ಮೂದಲಿಸಿದರು.

ಬಿಜೆಪಿ ನಾಯಕರೇ ನೀವು ಯಾತ್ರೆ ಮಾಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನೀವು ಯಾತ್ರೆ ಹೊರಡಬೇಕಾಗಿರುವುದು ದೆಹಲಿಗೆ. ನಿಮ್ಮ ಪಕ್ಷದ 25 ಲೋಕಸಭಾ ಸದಸ್ಯರನ್ನು ಕಟ್ಟಿಕೊಂಡು ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೊದಿ ಅವರ ಕಾಲಿಗಾದರೂ ಬಿದ್ದು ಬರಪರಿಹಾರಕ್ಕೆ ಹೆಚ್ಚು ಹಣ ಕೊಡುವಂತೆ ಕೇಳಿ. ನಿಮಗೆ ಕೇಳುವ ಧೈರ್ಯ ಇಲ್ಲ ಎಂದಾದರೆ ಪ್ರಧಾನಿ ಜೊತೆ ಭೇಟಿಗಾಗಿ ನನಗಾದರೂ ಒಂದು ಅಪಾಯಿಂಟ್ ಮೆಂಟ್ ಕೊಡಿಸಿ ಬಿಡಿ ಎಂದು ವ್ಯಂಗ್ಯವಾಡಿದರು.

ನೆಲ-ಜಲ-ಭಾಷೆಯ ವಿಚಾರದಲ್ಲಿ ಕರ್ನಾಟಕಕ್ಕೆ, ಕನ್ನಡಕ್ಕೆ ಮತ್ತು ಕನ್ನಡಿಗರಿಗೆ ಸಾಲು ಸಾಲು ಅನ್ಯಾಯ ಮಾಡಿ ಯಾವ ಮುಖ ಹೊತ್ತು ರಾಜ್ಯ ಪ್ರವಾಸ ಹೊರಟಿದ್ದೀರಿ ರಾಜ್ಯ ಬಿಜೆಪಿ ನಾಯಕರೇ? ಬರಪೀಡಿತ ಜನರಿಗೆ ಬೇಕಾಗಿರುವುದು ನಿಮ್ಮ ಬಾಯಿ ಮಾತಿನ ಸಾಂತ್ವನ ಅಲ್ಲ, ಅವರಿಗೆ ಬೇಕಾಗಿರುವುದು ಪರಿಹಾರ. ಬರಗಾಲದ ನಷ್ಟ – ನೋವನ್ನು ಬಳಸಿಕೊಂಡು ರಾಜಕೀಯ ಬೇಳೆ ಬೇಯಿಸಲು ಹೊರಟಿರುವ ನಿಮ್ಮನ್ನು ಜನ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ, ಜಾಗ್ರತೆಯಿಂದಿರಿ ಎಂದು ಎಚ್ಚರಿಸಿದ್ದಾರೆ.

ವಿದೇಶ

ಬೀಜಿಂಗ್: ಚೀನಾದ ಬೈದು (Baidu) ಮತ್ತು ಅಲಿಬಾಬಾ (Alibaba) ಆನ್‌ಲೈನ್ ನಕ್ಷೆಗಳಿಂದ ಇಸ್ರೇಲ್ ಹೆಸರನ್ನು ತೆಗೆದುಹಾಕಲಾಗಿದೆ. ಪ್ಯಾಲೆಸ್ತೀನ್ ಗೆ ಬೆಂಬಲ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಇಸ್ರೇಲ್ ಮತ್ತು ಹಮಾಸ್ ನಡುವೆ 20 ದಿನಗಳಿಗೂ ಹೆಚ್ಚು ಕಾಲ ಸಂಘರ್ಷ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಚೀನಾದ ಪ್ರಮುಖ ತಂತ್ರಜ್ಞಾನ ಕಂಪನಿಗಳಾದ ಅಲಿಬಾಬಾ ಮತ್ತು ಬೈದು ತಮ್ಮ ಆನ್‌ಲೈನ್ ನಕ್ಷೆಗಳಿಂದ ಇಸ್ರೇಲ್ ಹೆಸರನ್ನು ತೆಗೆದುಹಾಕಿವೆ. ಚೀನಾದ ಪ್ಯಾಲೆಸ್ತೀನ್ ಪರ ನಿಲುವನ್ನು ಬೆಂಬಲಿಸುವ ಸಲುವಾಗಿ ಚೀನಾದ ಕಂಪನಿಗಳು ಈ ಕ್ರಮವನ್ನು ತೆಗೆದುಕೊಂಡಿರಬಹುದು ಎಂದು ಹೇಳಲಾಗುತ್ತದೆ.

ಆದಾಗ್ಯೂ, ಬೈದುವಿನ ಚೈನೀಸ್ ಭಾಷೆಯ ಆನ್‌ಲೈನ್ ನಕ್ಷೆಯಲ್ಲಿ ಅಂತರಾಷ್ಟ್ರೀಯವಾಗಿ ಸೂಚಿಸಲಾದ ಅಳತೆಗಳ ಪ್ರಕಾರ ಇಸ್ರೇಲ್‌ನ ಗಡಿಗಳನ್ನು ಗುರುತಿಸಲಾಗಿದ್ದರೂ ಆ ಪ್ರದೇಶದಲ್ಲಿ ಇಸ್ರೇಲ್ ಹೆಸರನ್ನು ಉಲ್ಲೇಖಿಸಲಾಗಿಲ್ಲ. ಅಲಿಬಾಬಾ ಮತ್ತು ಬೈದು ಕಂಪನಿಗಳು ಈ ಬಗ್ಗೆ ಯಾವುದೇ ಪ್ರತಿಕ್ರಿಯೆಯನ್ನೂ ನೀಡಿಲ್ಲ.

ಇಸ್ರೇಲ್-ಹಮಾಸ್ ಯುದ್ಧದಲ್ಲಿ ಯಾರನ್ನೂ ಬೆಂಬಲಿಸದ ಚೀನಾ ಪ್ಯಾಲೆಸ್ತೀನ್ ಗೆ ಪ್ರತ್ಯೇಕ ರಾಜ್ಯ ನೀಡುವುದೇ ಪರಿಹಾರ ಎಂದು ಹೇಳಿದ್ದು ಗಮನಾರ್ಹ.

ದೇಶ

ನವದೆಹಲಿ: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಮೊಮ್ಮಗ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ‘ನನ್ನ ಶಕ್ತಿ, ನನ್ನ ಅಜ್ಜಿ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ಅವರ ಸ್ಮಾರಕಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪುಷ್ಪ ನಮನ ಸಲ್ಲಿಸಿದರು.

ಈ ಹಿನ್ನಲೆಯಲ್ಲಿ, ಇಂದಿರಾಗಾಂಧಿ ಅವರನ್ನು ಹೊಗಳಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಪೋಸ್ಟ್ ನಲ್ಲಿ, “ನನ್ನ ಶಕ್ತಿ, ನನ್ನ ಅಜ್ಜಿ! ನೀವು ಸರ್ವಸ್ವವನ್ನೂ ತ್ಯಾಗ ಮಾಡಿದ ಭಾರತವನ್ನು ನಾನು ಸದಾ ರಕ್ಷಿಸುತ್ತೇನೆ. ನಿಮ್ಮ ನೆನಪುಗಳು ಸದಾ ನನ್ನೊಂದಿಗೆ, ನನ್ನ ಹೃದಯದಲ್ಲಿ. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅಲ್ಲದೇ ಇಂದಿರಾ ಕುರಿತ ತಮ್ಮ ನೆನಪುಗಳನ್ನು ರಾಹುಲ್ ವಿಡಿಯೋ ರೂಪದಲ್ಲಿ ಬಿಡುಗಡೆ ಮಾಡಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ಕಿಸಿ: https://x.com/RahulGandhi/status/1719201716271219183?s=20

ದೇಶ ರಾಜಕೀಯ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ‘ಸ್ಪೀಕಿಂಗ್ ಫಾರ್ ಇಂಡಿಯಾ ಪಾಡ್‌ಕಾಸ್ಟ್’ ಸರಣಿಯ 3ನೇ ಆಡಿಯೋ ಇಂದು ಬಿಡುಗಡೆಯಾಗಿದೆ. ಅದರಲ್ಲಿ ಮಾತನಾಡಿರುವ ಎಂ.ಕೆ.ಸ್ಟಾಲಿನ್, “ರಾಜಭವನಗಳ ಮೂಲಕ ರಾಜ್ಯ ಸ್ವಾಯತ್ತತೆಯನ್ನು ಬಿಜೆಪಿ ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಭಾರತ ಒಂದು ಸಂಯುಕ್ತ ರಾಷ್ಟ್ರ. ವಿವಿಧ ಸುಂದರವಾದ ಹೂವುಗಳಿಂದ ತುಂಬಿದ ಅದ್ಭುತ ಉದ್ಯಾನ. ಮುಖ್ಯಮಂತ್ರಿ ಆಗಿದ್ದಾಗ ರಾಜ್ಯ ಹಕ್ಕುಗಳ ಬಗ್ಗೆ ಮಾತನಾಡಿದ ನರೇಂದ್ರ ಮೋದಿ, ಪ್ರಧಾನಿಯಾದ ಬಳಿಕ ರಾಜ್ಯದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ.

ಬಿಜೆಪಿ, ರಾಜ್ಯಗಳನ್ನು ರದ್ದುಪಡಿಸಬೇಕೆಂದು ಬಯಸುತ್ತಿದೆ. ಸಿಎಜಿ ಮೂಲಕ ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದ ಅಧಿಕಾರಿಗಳು ಎಲ್ಲರನ್ನೂ ಬಿಜೆಪಿ ಸರ್ಕಾರ ತ್ವರಿತವಾಗಿ ವರ್ಗಾವಣೆ ಮಾಡಿದೆ. ಬಿಜೆಪಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ.

ರಾಜ್ಯಗಳನ್ನು ರಕ್ಷಿಸೋಣ, ಭಾರತವನ್ನು ರಕ್ಷಿಸೋಣ, ಇಂಡಿಯಾ ಮೈತ್ರಿಕೂಟವನ್ನು ಗೆಲ್ಲಿಸೋಣ. ಕೇಂದ್ರದಲ್ಲಿ ಒಕ್ಕೂಟ ಸರ್ಕಾರ; ರಾಜ್ಯಗಳಲ್ಲಿ ಸ್ವಾಯತ್ತತೆ ಸರ್ಕಾರ ಇದುವೇ ನಿಜವಾದ ಪ್ರಜಾಪ್ರಭುತ್ವ ಆಗಿರುತ್ತದೆ” ಎಂದು ಹೇಳಿದರು.