ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಇಂಡಿಯಾ ಮೈತ್ರಿಕೂಟ Archives » Page 5 of 9 » Dynamic Leader
October 21, 2024
Home Posts tagged ಇಂಡಿಯಾ ಮೈತ್ರಿಕೂಟ (Page 5)
ರಾಜಕೀಯ

ಬೆಳಗಾವಿ: ಬೆಳಗಾವಿಯಲ್ಲಿ ಇಂದು ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್.ಎಸ್.ಎಸ್ ಹೇಳುತ್ತಿದ್ದು, ಇವರಿಂದ ಸಂವಿಧಾನ ಉಳಿಸಬೇಕಾದ ಅನಿವಾರ್ಯ ಸ್ಥಿತಿ ಇದೆ. ಹಾಗಾಗಿ ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಹೇಳಿದರು.

ಅಂಬೇಡ್ಕರ್ ಅವರು ನೀಡಿರುವ ಭಾರತೀಯ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶ, ಸಮ ಸಮಾಜದ ಗ್ಯಾರಂಟಿ ನೀಡುತ್ತದೆ. ಇದಕ್ಕೆ ವಿರುದ್ಧವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ, ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಎಂದರು.

ರಾಜ್ಯದ ಬಡ ಜನರ ತುತ್ತಿನ ಚೀಲ ತುಂಬಿಸುವ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ಪೂರೈಸಲು ಕೋರಿದಾಗ, ಅಕ್ಕಿ ದಾಸ್ತಾನಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ಅಕ್ಕಿ ನೀಡಲು ಒಪ್ಪಲಿಲ್ಲ. ಆದ್ದರಿಂದ ನಮ್ಮ ಸರ್ಕಾರ ಅಕ್ಕಿ ಬದಲು ಕೆಜಿಗೆ 34 ರೂ.ನಂತೆ 5 ಕೆ.ಜಿಗೆ 170 ರೂ. ಹಾಗೆ ಜುಲೈ ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡುತ್ತಿದೆ ಎಂದು ಹೇಳಿದರು.

ಗೃಹಜ್ಯೋತಿಯನ್ನು ಜುಲೈ ತಿಂಗಳಲ್ಲಿ ಜಾರಿ ಮಾಡಲಾಯಿತು. 1.60 ಕೋಟಿ ಫಲಾನುಭವಿಗಳಿಗೆ ಅಂದರೆ ರಾಜ್ಯದ ಸುಮಾರು 92% ಜನರಿಗೆ ಇದರಿಂದ ಲಾಭವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಮನೆ ಯಜಮಾನಿಯರಿಗೆ ತಲಾ 2,000 ರೂ.ನಂತೆ ಆಗಸ್ಟ್ ತಿಂಗಳಿನಿಂದ ಜಾರಿ ಮಾಡಲಾಯಿತು.

ನಿರುದ್ಯೋಗಿ ಪದವೀಧರರಿಗೆ 2 ವರ್ಷಗಳವರೆಗೆ ತಿಂಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದವರಿಗೆ ತಲಾ 2000 ರೂ. ನೀಡುವ ಯುವನಿಧಿ ಯೋಜನೆಯನ್ನು ವಿವೇಕಾನಂದರ ಜನ್ಮದಿನಾಚರಣೆಯಂದು ಜಾರಿ ಮಾಡಲಾಯಿತು. ಈ ಅವಧಿಯಲ್ಲಿ ಬೇಡಿಕೆಯಿರುವ ತರಬೇತಿಯನ್ನು ಯುವಜನರಿಗೆ ನೀಡಿ, ಅವರಿಗೆ ಉದ್ಯೋಗ ದೊರೆಯಲು ಶಕ್ತಿ ತುಂಬಲಾಗುವುದು.

ಹಿಂದೆಯೂ ನಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೆವು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ 5 ಗ್ಯಾರಂಟಿಗಳನ್ನು ನೀಡಿದ್ದು ಜನರಿಗೆ ವಿಶ್ವಾಸ ಬಂದಿದೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ಎಂದು ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು.

ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು. ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ ಎಂದರು, ಲೋಕಸಭಾ ಚುನಾವಣೆ ತನಕ ಮಾತ್ರ ನೀಡಿ, ನಂತರ ನಿಲ್ಲಿಸುತ್ತಾರೆ ಎಂಬ ಸುಳ್ಳುಗಳನ್ನು ಸೃಷ್ಟಿಸಿದ್ದಾರೆ. ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 52,009 ಕೋಟಿ ರೂ.ಗನ್ನು ಇಟ್ಟಿದ್ದೇವೆ. ಅಭಿವೃದ್ಧಿ ಕೆಲಸಗಳಿಗೆ 68 ಸಾವಿರ ಕೋಟಿಗಳನ್ನೂ ಸೇರಿದಂತೆ 2024-25 ರಲ್ಲಿ ಒಟ್ಟು 1.20 ಲಕ್ಷ ಕೋಟಿ ಇಟ್ಟಿದ್ದೇವೆ.

ನಮ್ಮ ಸರ್ಕಾರದ ಬಜೆಟ್ ಗಾತ್ರ 3.71 ಲಕ್ಷ ಕೋಟಿ, ಬೊಮ್ಮಾಯಿಯವರ ಬಜೆಟ್ 23-24ರಲ್ಲಿ 3.09 ಲಕ್ಷ ಕೋಟಿ. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಜನರಿಗೆ ಕಾಂಗ್ರೆಸ್ ನ ಮೇಲೆ ವಿಶ್ವಾಸ ಕಡಿಮೆಯಾಗಲಿ ಎಂದು ಹುನ್ನಾರ ಮಾಡುತ್ತಿದ್ದಾರೆ. ಬಿಜೆಪಿ ಅವರಿಗೆ ಗ್ಯಾರಂಟಿ ಯೋಜನೆಗಳನ್ನು ಕಂಡರೆ ಆಗುವುದಿಲ್ಲ. ಅದನ್ನು ನಿಲ್ಲಿಸಬೇಕೆಂಬುದು ಅವರ ಪಿತೂರಿಯಾಗಿದೆ. ಬಡವರು, ರೈತರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರ ಏಳಿಗೆ ಅವರಿಗೆ ಮುಖ್ಯವಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ರಾಹುಲ್ ಗಾಂಧಿ ಅವರು ದೇಶದ ಉದ್ದಗಲಕ್ಕೂ ಪಾದಯಾತ್ರೆ ಹಾಗೂ ನ್ಯಾಯ ಯಾತ್ರೆ ಮಾಡಿದರು. ದೇಶ ವಿಭಜನೆ ಮಾಡಲು ಮೋದಿಯವರು ಮಾಡಿರುವ ಪ್ರಯತ್ನಗಳಿಂದ ಬೇಸತ್ತಿದ್ದ ಜನರ ಒಡೆದ ಮನಸ್ಸನ್ನು ಒಗ್ಗೂಡಿಸಲು ಯಾತ್ರೆ ಕೈಗೊಂಡು ಯಶಸ್ವಿಯಾದರು ಎಂದು ಭಾರತ್ ಜೋಡೋ ಯಾತ್ರೆಗಳನ್ನು ಸಮರ್ಥಿಸಿಕೊಂಡರು.

ಕಾಂಗ್ರೆಸ್ ಪಕ್ಷ ನೀಡಿರುವ 25 ಗ್ಯಾರಂಟಿಗಳಿಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಯವರು ಸಹಿ ಮಾಡಿ ಹಂಚಿದ್ದಾರೆ. ಬಡಕುಟುಂಬದ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ನೀಡುವ ಮಹಾಲಕ್ಷ್ಮಿ ಯೋಜನೆ, ಯುವನ್ಯಾಯದಡಿ ಮೊದಲ ಉದ್ಯೋಗದ ಜೊತೆಗೆ ವರ್ಷಕ್ಕೆ 1 ಲಕ್ಷ ರೂ. ನೀಡುವ ಯೋಜನೆ, ರೈತರ ಬೆಳೆಗೆ ನ್ಯಾಯಯುತ ಬೆಲೆ, ಸಾಲ ಮನ್ನಾ, ಸ್ವಾಮಿನಾಥನ್ ವರದಿ ಜಾರಿ ಬೇಡಿಕೆಗಳನ್ನು ಈಡೇರಿಸುವ ‘ರೈತ ನ್ಯಾಯ’ ಯೋಜನೆಗಳ ಭರವಸೆ ನೀಡಿದರು.

ನರೇಂದ್ರ ಮೋದಿ ಅವರು ರೈತರ ಸಾಲ ಮನ್ನಾ ಮಾಡಲಿಲ್ಲ. ಸ್ವಾಮಿನಾಥನ್ ವರದಿ ಜಾರಿ ಮಾಡಲಿಲ್ಲ. ಆದರೆ ಅಂಬಾನಿ, ಅದಾನಿಗಳಿಗೆ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ರೈತರ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮಿಷನ್ ಇಲ್ಲ ಎಂದು ಬಿಜೆಪಿಯವರು ಹೇಳುತ್ತಾರೆ. ಸಂಸದ ತೇಜಸ್ವಿ ಸೂರ್ಯ, ರೈತರ ಸಾಲ ಮನ್ನಾ ಮಾಡಿದರೆ ದೇಶಕ್ಕೆ ಒಳಿತಲ್ಲ ಎಂದಿದ್ದಾರೆ. ರೈತರ ಸಾಲ ಮನ್ನಾ ಮಾಡಬಾರದೆಂಬುದು ಬಿಜೆಪಿ ಅವರ ಹಿಡೆನ್ ಅಜೆಂಡಾ ಎಂದು ಕಿಡಿಕಾರಿದರು.

ಅವಕಾಶ ವಂಚಿತರಿಗೆ ನ್ಯಾಯ ನೀಡಲು, ಸರ್ಕಾರದ ಅನುಕೂಲ ದೊರಕಿಸಿಕೊಡಲು ಜಾತಿಗಣತಿ ಅತಿ ಮುಖ್ಯ. ಪಾಲುದಾರಿಕೆ ನ್ಯಾಯ, ಶ್ರಮಿಕ ನ್ಯಾಯ ಯೋಜನೆ ಗ್ಯಾರಂಟಿಗಳನ್ನು ಜಾರಿ ಮಾಡಲಾಗುವುದು. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದೆ. ಹೀಗೆ ದೇಶಾದ್ಯಂತ ಜಾರಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತದೆ. ಆದರೆ ರಾಜ್ಯಕ್ಕೆ 100 ರೂ.ಗೆ ಕೇವಲ 13 ರೂ. ಮರಳಿ ಬರುತ್ತಿದೆ. 11,495 ಕೋಟಿ ರೂ.ಗಳನ್ನು 15ನೇ ಹಣಕಾಸು ಆಯೋಗ ನಿರ್ಧರಿಸಿತ್ತು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಲು ತಿಳಿಸಿದ್ದರೂ ಅವರು ಮಾಡಲಿಲ್ಲ. ರಾಜ್ಯಕ್ಕಾಗಿರುವ ಇಷ್ಟೆಲ್ಲಾ ಅನ್ಯಾಯವನ್ನು ರಾಜ್ಯದ 25 ಸಂಸದರಲ್ಲಿ ಯಾರೊಬ್ಬರೂ ಧ್ವನಿ ಎತ್ತಲಿಲ್ಲ. ಮೋದಿಯವರ ಎದುರು ನಿಂತು ಮಾತನಾಡಲು ಹೆದರುತ್ತಾರೆ. ಆದರೆ ಡಿ.ಕೆ.ಸುರೇಶ್ ಮಾತ್ರ ಪ್ರಶ್ನಿಸಿದ್ದರು.

ರಾಜ್ಯದ ಬಹುತೇಕ ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 23 ರಂದು ಬರಪರಿಹಾರಕ್ಕೆ ಮನವಿ ಮಾಡಲಾಗಿದೆ. ರೂ.18,172 ಕೋಟಿ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಕೇಳಿದೆವು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಾಶವಾಗಿದೆ. ಕೇಂದ್ರ ತಂಡ ಬರಪರಿಹಾರ ಅಧ್ಯಯನ ಮಾಡಿದ್ದಾರೆ. ರಾಜ್ಯದ ಮಂತ್ರಿಗಳು, ನಾನು ಕೇಂದ್ರ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕೋರಿದರೂ ಮನ್ನಣೆ ಸಿಗಲಿಲ್ಲ. ಆದ್ದರಿಂದ ಮನವಿ ಸಲ್ಲಿಸಿದ 7 ತಿಂಗಳ ನಂತರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆವು. ಸುಪ್ರೀಂ ಕೋರ್ಟ್ ಚಾಟಿ ಬೀಸುವ ತನಕ ಒಂದು ರೂ. ಕೊಡಲಿಲ್ಲ. ರೂ.3,454 ಕೋಟಿ ನಂತರ ಕೊಟ್ಟರು.

ರಾಜ್ಯದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಬದಲಿಸಲು ಅವಕಾಶ ಸಿಕ್ಕಿದೆ. ಕರ್ನಾಟಕಕ್ಕೆ ಮೋದಿಯವರು ಕೇವಲ ಚೊಂಬು ನೀಡಿದ್ದಾರೆ. ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜನರು ತಮ್ಮ ಮತಗಳ ಮೂಲಕ ಛಾಟಿ ಬೀಸುತ್ತಾರೆ. ಈ ಬಾರಿ ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಿಂದ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ಮೋದಿಯವರಿಗೆ ಜನ ತಕ್ಕ ಪಾಠ ಕಲಿಸಬೇಕು ಎಂದು ರಾಜ್ಯದ ಜನರಿಗೆ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

ಲೇಖನ

ಡಿ.ಸಿ.ಪ್ರಕಾಶ್ ಸಂಪಾದಕರು

‘ಮೋದಿ ಕುಟುಂಬ, ಮೋದಿ ಕುಟುಂಬ’ ಎಂಬ ಘೋಷವಾಕ್ಯವನ್ನು ಮೋದಿ ಹೊರತುಪಡಿಸಿ ಉಳಿದೆಲ್ಲ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಮೋದಿಯವರ ಕುಟುಂಬದಲ್ಲಿ ಭ್ರಷ್ಟರನ್ನು ಮುಕ್ತಗೊಳಿಸುವುದು ಬಹಿರಂಗವಾದಂತೆ ಇದೀಗ ಲೈಂಗಿಕ ದೌರ್ಜನ್ಯ ಎಸಗಿದ ದುಷ್ಕರ್ಮಿಗಳು ಕೂಡಾ ಸ್ವಚ್ಛಂದವಾಗಿ ಓಡಾಡುತ್ತಿರುವುದು ಬಹಿರಂಗವಾಗಿದೆ! ಬಿಜೆಪಿ ಕೇವಲ ಪಕ್ಷಮಾತ್ರವಲ್ಲ, ಅಪರಾಧಗಳನ್ನು ತೊಳೆಯುವ (Washing Machine) ಯಂತ್ರವೂ ಹೌದು ಎಂದು ಕಾಂಗ್ರೆಸ್ ವ್ಯಂಗ್ಯವಾಡುತ್ತಿದೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಜಿಂದಾಲ್, ಸುವೇಂದು ಅಧಿಕಾರಿ ಮುಂತಾದ ಅಸಂಖ್ಯಾತರ ಮೇಲಿದ್ದ ಅಪರಾಧಗಳನ್ನು ಬಿಜೆಪಿ ಹೇಗೆ ತೆಗೆದುಹಾಕಿತು ಎಂಬುದನ್ನು ಇಂಡಿಯನ್ ಎಕ್ಸ್‌ಪ್ರೆಸ್ (Indian Express) ಗ್ರೂಪ್‌ನ ಮಾಹಿತಿ ದೃಢಪಡಿಸಿದೆ. ಅದರಲ್ಲಿ, ವಿರೋಧ ಪಕ್ಷದಿಂದ ಬಿಜೆಪಿಗೆ ಬಲವಂತವಾಗಿ ಎಳೆದ 25 ಜನರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ 3 ಪ್ರಕರಣಗಳನ್ನು ಶಿಕ್ಷೆಯಿಲ್ಲದೆ ಮುಚ್ಚಲಾಯಿತು ಮತ್ತು 20 ಪ್ರಕರಣಗಳನ್ನು ಕೇಂದ್ರ ಬಿಜೆಪಿ ಸರ್ಕಾರವು ಸ್ಥಗಿತಗೊಳಿಸಿದೆ ಎಂದು ಸ್ಪಷ್ಟಪಡಿಸಿದೆ.

ಈ ಹಿನ್ನಲೆಯಲ್ಲಿ, ಬಿಜೆಪಿ ಅಭ್ಯರ್ಥಿಗಳು, ಎನ್‌ಡಿಎ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಕೇಂದ್ರ ಬಿಜೆಪಿಯಿಂದ ನೇಮಕಗೊಂಡಿರುವ ರಾಜ್ಯಪಾಲರ ದೌರ್ಜನ್ಯಗಳಿಂದ ಬಿಜೆಪಿ ಭ್ರಷ್ಟಾಚಾರ ಮಾತ್ರವಲ್ಲ ಲೈಂಗಿಕ ಅಪರಾಧಿಗಳ ಡೇರೆಯೂ ಆಗಿದೆ ಎಂಬ ಮಾಹಿತಿ ಬಯಲಾಗಿದೆ. ಕರ್ನಾಟಕದಲ್ಲಿ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ವಿಷಯ ತಿಳಿದಿದ್ದರೂ ಮೋದಿ ಅವರ ಪರ ಮತ ಸಂಗ್ರಹಿಸಿದರು.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಬ್ರಿಜ್ ಭೂಷಣ್ ಪುತ್ರ ಕರಣ್ ಭೂಷಣ್‌ಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ. ಕರಣ್ ಭೂಷಣ್ ಮಾತ್ರವಲ್ಲ, ಬಿಜೆಪಿಯ ಸುಮಾರು 44 ಹಾಲಿ ಸಂಸದರ ಮೇಲೂ ಮಹಿಳೆಯರ ವಿರುದ್ಧ ಪ್ರಕರಣಗಳಿವೆ.

ಬಿಜೆಪಿ ಕಾರ್ಯಕಾರಿಣಿಗಳಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದಿಂದ ನಾಮನಿರ್ದೇಶನಗೊಂಡ ರಾಜ್ಯಪಾಲರುಗಳು ಕೂಡ ಲೈಂಗಿಕ ಅಪರಾಧಿಗಳಾಗಿದ್ದಾರೆ ಎಂಬುದಕ್ಕೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ರಾಜಭವನದ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವೇ ಸಾಕ್ಷಿಯಾಗಿದೆ. ಈ ಹಿನ್ನಲೆಯಲ್ಲಿ, ಬಿಜೆಪಿಯಿಂದ ಲೈಂಗಿಕ ವ್ಯಸನಿಗಳು ಅಧಿಕಾರದಲ್ಲಿದ್ದರೆ, ದೇಶದಲ್ಲೂ ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚಾಗುತ್ತವೆ ಎಂಬ ಅಂಶಕ್ಕೆ ಅನುಗುಣವಾಗಿ,

2022ರ ರಾಷ್ಟ್ರೀಯ ಅಪರಾಧ ಸೂಚ್ಯಂಕದ ಪ್ರಕಾರ, *2014ಕ್ಕೆ ಹೋಲಿಸಿದರೆ 2022ರಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಸುಮಾರು 31%ರಷ್ಟು ಹೆಚ್ಚಾಗಿದೆ. ಅಂದರೆ 2022ರಲ್ಲಿ ಕೇಂದ್ರ ಸಚಿವಾಲಯದ ಮಾಹಿತಿ ಪ್ರಕಾರ ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದಂತೆ 4,45,256 ಪ್ರಕರಣಗಳು ದಾಖಲಾಗಿವೆ* ಎಂದು ತಿಳಿದು ಬಂದಿದೆ.

ಆದಾಗ್ಯೂ, ಇದನ್ನೆಲ್ಲ ನೋಡುತ್ತಿರುವ ಮೋದಿಯವರು ಇಂಥದ್ದೇನೂ ಆಗದಂತೆ ಮೌನವಾಗಿ ಇದ್ದಾರೆ. ಆದರೆ, ಅವರು ಮೌನ ಮುರಿಯುತ್ತಿರುವುದು ಕೇವಲ ಮುಸ್ಲಿಮರನ್ನು ದೂಷಿಸಲು ಮತ್ತು ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಹೊರಿಸಲು ಮಾತ್ರವೇ. ಇದು ಪ್ರಜಾಪ್ರಭುತ್ವಕ್ಕೆ ಮತ್ತೊಂದು ಅಪಾಯವಾಗಿದೆ.

ಈ ಹಿನ್ನಲೆಯಲ್ಲಿ, ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿರುವ ಬಿಜೆಪಿಗೆ ಅಪಾಯ ಎಂಬಂತೆ ‘ಇಂಡಿಯಾ’ ಮೈತ್ರಿಕೂಟ ಬಲಗೊಳ್ಳುತ್ತಿರುವುದು ಬಿಜೆಪಿಗೆ ಭಾರೀ ಹಿನ್ನಡೆ ತಂದಿದೆ. ಹೀಗಾಗಿ, ಅತಾಶೆಯಲ್ಲಿರುವ ಬಿಜೆಪಿ ಸೋಲಿನ ಭಯದಿಂದ, ನಾವು ಏನು ಮಾತನಾಡುತ್ತಿದ್ದೇವೆ ಎಂದು ತಿಳಿಯದೆ, ನಾವು ಯಾವ ರೀತಿಯ ಪೋಸ್ಟ್ ಮಾಡುತ್ತಿದ್ದೇವೆ ಎಂದು ಅರ್ಥೈಸಿಕೊಳ್ಳದೇ

ಮುಸ್ಲಿಮರನ್ನು ಶತ್ರುಗಳಂತೆ ಕಾಣುವ ಆರೆಸ್ಸೆಸ್-ಬಿಜೆಪಿ ಧಾರ್ಮಿಕ ಭಿನ್ನಾಭಿಪ್ರಾಯ ಸೃಷ್ಟಿಸುವ ದ್ವೇಷಪೂರಿತ ವಿಡಿಯೋಗಳನ್ನು ಅಂತರ್ಜಾಲದಲ್ಲಿ ಹಾಕುವುದು, ಮತ ಕಳೆದುಕೊಳ್ಳುವ ಭೀತಿಯಿಂದ ಮತ್ತೆ ಪೋಸ್ಟ್‌ಗಳನ್ನು ಅಳಿಸಿ ಹಾಕುವುದು ಇತ್ಯಾದಿಗಳನ್ನು ಮಾಡುತ್ತಿದ್ದಾರೆ. ಇದರಿಂದಾಗಿ 400 ಸೀಟು ವಶಪಡಿಸಿಕೊಳ್ಳುವ ಬಿಜೆಪಿಯ ಹಿಂದಿನ ಘೋಷಣೆ ಮಾಯವಾಗಿದೆ.

ರಾಜಕೀಯ

ಗಿರೀಶ್ ಕುಮಾರ್ ಯಾದಗಿರಿ

ಯಾದಗಿರಿ: ಲೋಕಸಭಾ ಚುನಾವಣೆ ಹಾಗೂ ಸುರಪುರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ನಿರ್ಧರಿಸಿದೆ ಎಂದು ದಸಂಸ ಜಿಲ್ಲಾಧ್ಯಕ್ಷ ಶರಣು ಎಸ್.ನಾಟೇಕ‌ರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸಂಸ ರಾಜ್ಯ ಸಮಿತಿ ಆದೇಶದ ಮೇರೆಗೆ ಜಿಲ್ಲೆಯಲ್ಲಿನ ಲೋಕಸಭಾ ಚುನಾವಣೆ ಹಾಗೂ ಸುರಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

ರಾಯಚೂರು ಲೋಕಸಭೆ ಅಭ್ಯರ್ಥಿ ಜಿ.ಕುಮಾರನಾಯಕ, ಕಲ್ಬುರ್ಗಿ ಅಭ್ಯರ್ಥಿ ಡಾ.ರಾಧಾಕೃಷ್ಣ ದೊಡ್ಡಮನಿ, ಸುರಪುರ ವಿಧಾನಸಭೆ ಉಪಚುನಾವಣೆ ಅಧಿಕೃತ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಇವರಿಗೆ ಬೆಂಬಲಿಸಲು ಭೀಮವಾದ ಸಮಿತಿಯ ಜಿಲ್ಲಾ, ತಾಲ್ಲೂಕು ವತಿಯಿಂದ ಹೋಬಳಿ ಹಾಗೂ ಹಿರಿಯ ಗ್ರಾಮ, ಮಹಿಳಾ ನಗರ ಘಟಕಗಳ ಪದಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಅಮಾಯಕ ಹೆಣ್ಣುಮಕ್ಕಳ ಮೇಲೆ ನಡೆಸಿರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ‘ಪೆನ್ ಡ್ರೈವ್’ ಪ್ರಕರಣ ಬಯಲಿಗೆ ಬಂದ್ದಿದ್ದು ಕೂಡಲೇ ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ.ರೇವಣ್ಣ ಅವರನ್ನು ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕೆಂದು ದಸಂಸ ಭೀಮವಾದ ಒತ್ತಾಯಿಸಿದೆ.

ಇದಕ್ಕೂ ಮುನ್ನ ದಸಂಸ ಜಿಲ್ಲಾ ಸಮಿತಿ ವತಿಯಿಂದ ರಾಜ್ಯದ ಹಿರಿಯ ರಾಜಕಾರಣಿ, ಬುದ್ಧ, ಬಸವ ಅಂಬೇಡ್ಕರ್ ಅನುಯಾಯಿಯಾಗಿದ್ದ ದಲಿತ ಚೇತನ ಮಾಜಿ ಸಚಿವ ಹಾಲಿ ಚಾಮರಾಜನಗರ ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ನಿಧನಕ್ಕೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸುದ್ದಿಗೋಷ್ಠಿಯಲ್ಲಿ  ರಾಜ್ಯ ಸಂಚಾಲಕರಾದ ಭೀಮರಾಯ ಸಿಂಧಿಗೇರಿ, ವಿಭಾಗೀಯ ಸಂಚಾಲಕ ಶಿವಶಂಕರ, ಕಲ್ಬುರ್ಗಿ ಜಿಲ್ಲಾ ಸಂಚಾಲಕರಾದ ಕಾಶಿನಾಥ ಶೆಳ್ಳಗಿ, ಮಾರುತಿ ಕಾಳಗಿ, ಯಾದಗಿರಿ ಜಿಲ್ಲಾ ಸಂ. ಸಂಚಾಲಕರಾದ ಮಹಾದೇವಪ್ಪ ಗುರುಸುಣಿಗಿ, ಮಲ್ಲಪ್ಪ ಲಂಡನ್‌ಕರ್, ಮಲ್ಲಿಕಾರ್ಜುನ ತಳವಾರಗೇರಿ. ಸಿದ್ರಾಮ ನಾಯ್ಕಲ್, ತಾ. ಸಂಚಾಲಕ ಶರಣಪ್ಪ ಯರಗೋಳ, ಶರಣು ಹಾಲಳ್ಳಿ ಇನ್ನಿತರರು ಇದ್ದರು.

ದೇಶ

ನವದೆಹಲಿ: ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡುವ ಬಗ್ಗೆ ಚಿಂತನೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಜಾಮೀನು ನೀಡಿದರೆ ವಿಧಿಸುವ ಷರತ್ತುಗಳ ಬಗ್ಗೆ 7 ರಂದು ವರದಿ ನೀಡುವಂತೆ ಜಾರಿ ಇಲಾಖೆಗೆ ಆದೇಶಿಸಿದೆ.

ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಇದರ ವಿರುದ್ಧ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂಜೀವ್ ಖನ್ನಾ, ಕೇಜ್ರಿವಾಲ್ ವಿಷಯದಲ್ಲಿ ಏನನ್ನೂ ವಶಪಡಿಸಿಕೊಂಡಿಲ್ಲ. ಅಂತಹ ಜಪ್ತಿ ಮಾಡಲಾಗಿದ್ದರೆ, ಕೇಜ್ರಿವಾಲ್ ಅವರು ಈ ದುಷ್ಕೃತ್ಯದಲ್ಲಿ ಹೇಗೆ ತೊಡಗಿದ್ದರು ಎಂಬುದನ್ನು ವಿವರಿಸಬೇಕು. ಚುನಾವಣೆಗೂ ಮುನ್ನ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು ಏಕೆ? ಎಂದು ಪ್ರಶ್ನಿಸಿದ್ದರು.

ಇಂದು (ಮೇ 3) ಪ್ರಕರಣ ವಿಚಾರಣೆಗೆ ಬಂದಾಗ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಲೋಕಸಭೆ ಚುನಾವಣೆಯನ್ನು ಪರಿಗಣಿಸಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವುದನ್ನು ಪರಿಗಣಿಸಬಹುದು ಎಂದು ಹೇಳಿದರು. ಮತ್ತು ಅವರು ಉಲ್ಲೇಖಿಸಿ ಮಾತನಾಡುತ್ತಾ, ಅವರಿಗೆ ಜಾಮೀನು ನೀಡಲು ನಿರ್ಧರಿಸಲಾಗಿಲ್ಲ; ಈ ವಿಷಯದಲ್ಲಿ ನಾವು ಅಭಿಪ್ರಾಯ ಮಂಡಿಸಿದ್ದೇವೆ ಅಷ್ಟೆ; ಯಾವುದೇ ಊಹೆಗಳನ್ನು ಮಾಡಬೇಡಿ. ಒಂದುವೇಳೆ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದರೆ ವಿಧಿಸುವ ಷರತ್ತುಗಳ ಬಗ್ಗೆ ಇದೇ 7 ರಂದು ವರದಿ ನೀಡುವಂತೆ ಜಾರಿ ಇಲಾಖೆಗೆ ನ್ಯಾಯಾಧೀಶರು ಆದೇಶಿಸಿದರು.

ಆಗ ಜಾರಿ ನಿರ್ದೇಶನಾಲಯ ಪರ ವಾದ ಮಂಡಿಸಿದ ವಕೀಲರು, ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿದರೆ, ಅದು ವಿಚಾರಣೆಗೆ ಹಿನ್ನಡೆಯಾಗುತ್ತದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ‘‘ಕೇಜ್ರಿವಾಲ್ ಅವರಿಗೆ ಏಕೆ ಜಾಮೀನು ನೀಡಬಾರದು ಎಂಬ ಬಗ್ಗೆ ಜಾರಿ ನಿರ್ದೇಶನಾಲಯದಿಂದ ವಿಸ್ತೃತ ವಾದವನ್ನು ಇದೇ 7ರಂದು ಆಲಿಸುತ್ತೇವೆ. ಜೈಲಿನಲ್ಲಿದ್ದಾಗ ಕಡತಗಳಿಗೆ ಸಹಿ ಹಾಕಿರುವ ಬಗ್ಗೆಯೂ ವಿವರಣೆ ನೀಡಬೇಕಿದೆ. ಎಂದು ಹೇಳಿ ಪ್ರಕರಣದ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದರು.

ರಾಜಕೀಯ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಉತ್ತರಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಅಧಿಕೃತವಾಗಿ ಘೋಷಿಸಿದೆ.

ಈ ಕುರಿತು ಕಾಂಗ್ರೆಸ್ ಪಕ್ಷದ ಎಕ್ಸ್ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ, ”ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದ ಅಭ್ಯರ್ಥಿಯಾಗಿ ಮತ್ತು ಅಮೇಥಿ ಕ್ಷೇತ್ರಕ್ಕೆ ಕಿಶೋರಿ ಲಾಲ್ ಶರ್ಮಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ” ಎಂದು ಹೇಳಿದೆ.

ಉತ್ತರಪ್ರದೇಶದಲ್ಲಿ ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಕ್ಷೇತ್ರಗಳಾಗಿವೆ. ನೆಹರೂ-ಗಾಂಧಿ ಕುಟುಂಬ ಇಲ್ಲಿ ನಿರಂತರವಾಗಿ ಪೈಪೋಟಿ ನಡೆಸುತ್ತಿದೆ.

ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು 2004 ರಿಂದ 3 ಬಾರಿ ಅಮೇಥಿಯಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಎದುರು ಸೋತಿದ್ದರು. ಆದರೂ ಕೇರಳದ ವಯನಾಡಿನಲ್ಲಿ 2ನೇ ಸ್ಥಾನಕ್ಕೆ ಸ್ಪರ್ಧಿಸಿ ಗೆದ್ದಿದ್ದರು.

ಅದೇ ರೀತಿ, ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಮಾಜಿ ನಾಯಕಿ ಹಾಗೂ ರಾಹುಲ್ ಅವರ ತಾಯಿ ಸೋನಿಯಾ ಗಾಂಧಿ ಅವರು 2004 ರಿಂದ ಸತತ 5 ಬಾರಿ ಉತ್ತರಪ್ರದೇಶದ ರಾಯ್ ಬರೇಲಿಯನ್ನು ಗೆದ್ದಿದ್ದರು. ಈ ಬಾರಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಅಮೇಥಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಮತ್ತು ರಾಯ್‌ಬರೇಲಿಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂದು ಈಗಾಗಲೇ ಹೇಳಲಾಗಿದ್ದರೂ, ಇದೀಗ ರಾಯ್‌ಬರೇಲಿ ಕ್ಷೇತ್ರದ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರನ್ನು ಘೋಷಿಸಲಾಗಿದೆ. ಮೇ 20 ರಂದು ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಗೆ ಐದನೇ ಹಂತದ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಯ್‌ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ರಾಜಕೀಯ

ನವದೆಹಲಿ: ಪ್ರಧಾನಿ ಮೋದಿಯವರ ರಾಜಕೀಯ ಕುಟುಂಬದ ಸದಸ್ಯರಾಗಿರುವ ಕ್ರಿಮಿನಲ್‌ಗಳಿಗೆ ಭದ್ರತೆಯ ಭರವಸೆ ಇದೆಯೇ? ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬಿಜೆಪಿ ಮೈತ್ರಿಕೂಟದ ಸದಸ್ಯ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಪ್ರಕರಣದಿಂದ ಇಡೀ ದೇಶವೇ ತಲೆ ತಗ್ಗಿಸುವಂತಾಗಿದೆ. ಇದನ್ನು ರಾಹುಲ್ ಗಾಂಧಿ ಖಂಡಿಸಿದ್ದಾರೆ. ಈ ಕುರಿತು ಅವರು ತಮ್ಮ ಎಕ್ಸ್ ಪೇಜ್ ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, “ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಪ್ರಧಾನಿ ಮೋದಿ ಮೌನವಾಗಿರುವುದು ಏಕೆ? ಪ್ರಧಾನಿ ಉತ್ತರಿಸಬೇಕು.

ಭಾರತದ ಜನತೆಗೆ ಅನ್ಯಾಯವಾಗುತ್ತಿರುವಾಗ ಪ್ರಧಾನಿ ಮೋದಿ ಅಪರಾಧಿಗಳಿಗೆ ಬೆಂಬಲ ನೀಡುವ ಹಾಗೆ ಮೌನವಹಿಸುತ್ತಿದ್ದಾರೆ. ಇಷ್ಟು ದೊಡ್ಡ ಅಪರಾಧಿ ದೇಶದಿಂದ ಅಷ್ಟು ಸುಲಭವಾಗಿ ತಪ್ಪಿಸಿಕೊಳ್ಳುವುದು ಹೇಗೆ? ಅಪರಾಧಿಗಳಿಗೆ ಪ್ರಧಾನಿ ಮೋದಿಯವರ ಮೌನ ಬೆಂಬಲವು ದೇಶಾದ್ಯಂತ ಅಪರಾಧಿಗಳನ್ನು ಹುರಿದುಂಬಿಸುತ್ತದೆ. ಪ್ರಧಾನಿ ಮೋದಿಯವರ ರಾಜಕೀಯ ಕುಟುಂಬದ ಸದಸ್ಯರಾಗಿರುವ ಕ್ರಿಮಿನಲ್‌ಗಳಿಗೆ ಭದ್ರತೆಯ ಭರವಸೆ ಇದೆಯೇ? ಎಂದು ಕೇಳಿದ್ದಾರೆ.

ರಾಜಕೀಯ

ಉತ್ತರ ಪ್ರದೇಶದ ವಾರಣಾಸಿಯಲ್ಲಿ 7ನೇ ಹಂತದಲ್ಲಿ ಮತದಾನ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೇ 5 ರಂದು ಅಯೋಧ್ಯೆಯಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ‘ರೋಡ್ ಶೋ’ ನಡೆಸಲಿದ್ದಾರೆ.

ಮೂರು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರನ್ನು 2014ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಾಯಿತು. ಅವರು ಉತ್ತರಪ್ರದೇಶದ ವಾರಣಾಸಿಯಿಂದ ಸ್ಪರ್ಧಿಸಿದ್ದರು. 2019ರ ಚುನಾವಣೆಯಲ್ಲೂ ಗೆದ್ದಿರುವ ಮೋದಿ ಮೂರನೇ ಬಾರಿಗೂ ಈ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ.

ಈ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಏಳು ಹಂತಗಳಲ್ಲಿ ನಡೆಯುತ್ತದೆ. ಕೊನೆಯ ಹಂತದಲ್ಲಿ ವಾರಾಣಸಿಯಲ್ಲಿ ಮೇ 5ರ ನಂತರ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಮೇ 5ರಂದು ಅಯೋಧ್ಯೆಯಲ್ಲಿ ಅದ್ಧೂರಿ ‘ರೋಡ್ ಶೋ’ ನಡೆಸಲಿದ್ದಾರೆ.

ಕಳೆದ ಜನವರಿ 22ರಂದು ರಾಮಮಂದಿರ ಉದ್ಘಾಟನೆಗಾಗಿ ಪ್ರಧಾನಿ ಮೋದಿ ಅಯೋಧ್ಯೆಗೆ ಭೇಟಿ ನೀಡಿದ್ದರು. ಇದಕ್ಕೂ ಮುನ್ನ ಅವರು ಕಳೆದ ವರ್ಷ ಡಿಸೆಂಬರ್ 30 ರಂದು ವಾಲ್ಮೀಕಿ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಅಯೋಧ್ಯೆಗೆ ಭೇಟಿ ನೀಡಿದ್ದರು. ಆ ವೇಳೆ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಗಳಲ್ಲಿಯೂ ಮೆರವಣಿಗೆ ಮಾಡಿದ್ದರು. ಇದಕ್ಕಾಗಿ, ಅಯೋಧ್ಯೆಯ ರಸ್ತೆಗಳಲ್ಲಿ ಸಾವಿರಾರು ನಾಗರಿಕರು ಜಮಾಯಿಸಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.

ಇದಾದ ನಂತರ ಮೇ 5 ರಂದು ಶ್ರೀರಾಮನ ದರ್ಶನಕ್ಕಾಗಿ ಪ್ರಧಾನಿ ಮೋದಿ ಅಯೋಧ್ಯೆಗೆ ಬರಲಿದ್ದಾರೆ. ಬಿಜೆಪಿಯ ಪ್ರಮುಖ ನಾಯಕರು ಅಯೋಧ್ಯೆಯಲ್ಲಿ ಮೊಕ್ಕಾಂ ಹೂಡಿ, ಈ ಅಭಿಯಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ರಾಮಮಂದಿರ ಉದ್ಘಾಟನೆಯ ನಂತರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸಲಿದೆ ಎಂದು ಊಹಿಸಲಾಗಿತ್ತು. ಆದರೆ ಇಲ್ಲಿಯವರೆಗೂ ಮುಗಿದಿರುವ ಎರಡು ಹಂತಗಳ ಚುನಾವಣಾ ಪ್ರಚಾರದಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭದ ಬಗ್ಗೆ ಹೆಚ್ಚಾಗಿ ಗಮನ ಸೆಳೆಯಲಿಲ್ಲ ಎಂಬುದು ಗಮನಾರ್ಹ.

ತಮ್ಮ ಸಂಸದ ಕ್ಷೇತ್ರ ವಾರಣಾಸಿಗೆ ಆಗಮಿಸಲಿರುವ ಪ್ರಧಾನಿ ಅಲ್ಲೇ ಉಳಿದು ಸುತ್ತಲಿನ ಕ್ಷೇತ್ರಗಳಲ್ಲೂ ಪ್ರಚಾರ ನಡೆಸಲಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಗುಜರಾತ್ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ತಲಾ 2 ದಿನಗಳ ಕಾಲ ಪ್ರಚಾರ ನಡೆಸಲಿದ್ದಾರೆ. ಅಂತೆಯೇ ಪ್ರಧಾನಿ ಮೋದಿ ಅವರು ಜಾರ್ಖಂಡ್ ಮತ್ತು ಬಿಹಾರದಲ್ಲಿ ನಡೆಯಲಿರುವ ಪ್ರಚಾರ ಸಭೆಗಳಲ್ಲೂ ಭಾಗವಹಿಸಿ ಮಾತನಾಡಲಿದ್ದಾರೆ.

ರಾಜಕೀಯ

ಬೆಳಗಾವಿ: ಗೋಕಾಕ್ ಪಟ್ಟಣದಲ್ಲಿಂದು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುಸ್ಥಾನ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

ಕಾಂಗ್ರೆಸ್ ಪರ ನಿರೀಕ್ಷೆಗೂ ಮೀರಿ ಜನಬೆಂಬಲ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ಪ್ರತಿ ಮನೆಯನ್ನು ತಲುಪಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು 2014 ಹಾಗೂ 2019ರಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಇದು ಈ ಚುನಾವಣೆಯ ಟ್ರಂಪ್ ಕಾರ್ಡ್ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರ ಹಿಂಸಾಚಾರದ ಬಗ್ಗೆ ತುಟಿ ಬಿಚ್ಚಿದ್ದಾರ? ಕೇಂದ್ರ ಬಿಜೆಪಿ ಸರ್ಕಾರ ಏನು ಕ್ರಮ ಕೈಗೊಂಡಿದೆ? ಅಮಿತ್ ಶಾ ಗೃಹ ಸಚಿವರಾಗಿ ವಿಫಲವಾದಂತೆ ಅಲ್ವಾ? ಮಣಿಪುರ ಹಿಂಸಾಚಾರಕ್ಕೆ ಮೋದಿ ಹೊಣೆಯಲ್ಲವೇ? ಎಂದು ಪ್ರಶ್ನಿಸಿದರು.

30 ವರ್ಷಗಳಿಂದ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗುತ್ತಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ಮುಸ್ಲಿಮರ 4% ಮೀಸಲಾತಿಯನ್ನು ರದ್ದು ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಸಮುದಾಯ ಸುಪ್ರೀಂ ಕೋರ್ಟ್ ಗೆ ಹೋದಾಗ, 4% ಮೀಸಲಾತಿಯನ್ನು ಮುಂದುವರೆಸುವುದಾಗಿ ಅವರೇ ಮುಚ್ಚಳಿಕೆಯನ್ನು ಬರೆದುಕೊಟ್ಟಿದ್ದಾರೆ ಎಂದು ಹೇಳಿದರು.  

ಕೇವಲ ರಾಜಕಾರಣಕ್ಕಾಗಿ ಹಾಗೂ ಮತಗಳಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾವನಾತ್ಮಕ ವಿಚಾರಗಳಿಗೆ ಸಂಬಂಧಿಸಿದ ಸುಳ್ಳು ಹೇಳುತ್ತಾರೆ. ಕಾಂಗ್ರೆಸ್ ಪಕ್ಷ ಕಳೆದ ಐದು ದಶಕಗಳಿಂದ ದೇಶದಲ್ಲಿ ಅಧಿಕಾರದಲ್ಲಿತ್ತು, ಎಂದಾದರೂ ಮಹಿಳೆಯರ ತಾಳಿಗಳನ್ನು ಕಸಿದುಕೊಂಡಿದ್ದಾರಾ? ದೇಶದ ಜವಾಬ್ದಾರಿಯುತ ಪ್ರಧಾನಿಯಾಗಿ ಇಂತಹ ಹೇಳಿಕೆಗಳನ್ನು ನೀಡಲು ಕಾರಣ ಅವರ ಸಾಧನೆಶೂನ್ಯ ಆಡಳಿತ. ಕೆಲಸ ಮಾಡಿದ್ದೇನೆ ಓಟು ಕೊಡಿ ಎನ್ನುವ ಬದಲು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿ ಓಟು ಕೇಳುತ್ತಾರೆ ಎಂದರೆ ನೀವೇ ಯೋಚಿಸಿ ಎಂದು ಕಿಡಿಕಾರಿದರು.

Uncategorized

ಬೆಳಗಾವಿ: ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಅವರನ್ನು ಗೆಲ್ಲಿಸಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾರರಲ್ಲಿ ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯೇತರ ಪಕ್ಷಗಳು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಎಂದಿಗೂ ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡದೇ, ಸಾಮಾಜಿಕ ನ್ಯಾಯದ ಪರವಾಗಿದೆ ಎನ್ನುವುದು ಇಡೀ ವಿಶ್ವಕ್ಕೆ ಗೊತ್ತಿದೆ. ಮೋದಿಯವರ ಮಾತು ನಂಬಲು ಜನ ಮೂರ್ಖರಲ್ಲ ಎಂದು ಹೇಳಿದರು.

ನಾವು ಸರ್ಕಾರಿ ನೌಕರರ ಸಂಬಳವನ್ನು ಎಂದಿಗೂ ನಿಲ್ಲಿಸಿಲ್ಲ. ಅಭಿವೃದ್ಧಿ ಜೊತೆಗೆ ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿಗಳಿಗೆ ರೂ.52,009 ಕೋಟಿ, ರೂ.1,20,000 ಕೋಟಿ ಅಭಿವೃದ್ಧಿಗೆ ನೀಡಲಾಗಿದೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಹಾಗೂ ಯುವನಿಧಿ ಗ್ಯಾರಂಟಿಗಳನ್ನು ಜನರಿಗೆ ನೀಡಲಾಗಿದೆ. ಸರ್ಕಾರಿ ಅಧಿಕಾರಿಗಳಿಗೆ ಸಂಬಳ ಕೊಡಲು ದುಡ್ಡಿಲ್ಲ. ಕರ್ನಾಟಕ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದು ಅಪ್ಪಟ ಸುಳ್ಳು ಎಂದು ಹೇಳಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಗಳನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು. 25 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು. ಸಾಮಾಜಿಕ ನ್ಯಾಯ ತರಲು ದೇಶದಾದ್ಯಂತ ಜಾತಿ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು. ಆದ್ದರಿಂದ ಜನರಿಗೆ ಅನುಕೂಲ ಮಾಡಿಕೊಡುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೇ? ಅಥವಾ ಸುಳ್ಳು ಹೇಳುವ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರಬೇಕೇ? ಎಂಬುದನ್ನು ಯೋಚಿಸಿ ನಿರ್ಧರಿಸಿ ಎಂದು ಹೇಳಿದರು.

ಚುನಾವಣೆಯ ಮೂಲಕ ಜನತೆ ಕೊಡುವ ತೀರ್ಪು ದೇಶದ ಭವಿಷ್ಯವನ್ನು ರೂಪಿಸಲಿದೆ. ಯಾವ ಪಕ್ಷ ಅಧಿಕಾರದಲಿದ್ದರೆ ಈ ದೇಶದ ದಲಿತರ, ಹಿಂದುಳಿದವರ, ಅಲ್ಪಸಂಖ್ಯಾತರ ಅಭಿವೃದ್ಧಿಯಾಗುತ್ತದೆ? ದೇಶದ ಸರ್ವತೋಮುಖ ಅಭಿವೃದ್ಧಿಗೆ ಯಾರು ಅಧಿಕಾರದಲ್ಲಿರಬೇಕೆಂದು ಜನರು ತೀರ್ಮಾನ ಮಾಡಬೇಕಾಗುತ್ತದೆ.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಇಡಿ ದೇಶದ ರೈತರ ಸಾಲ ಮನ್ನಾ ಮಾಡಿದ್ದರು. ಅವರು ಈ ದೇಶದ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆಯನ್ನು, ಉದ್ಯೋಗ ಖಾತ್ರಿ ಅಧಿನಿಯಮ, ಮಾಹಿತಿ ಹಕ್ಕು ಅಧಿನಿಯಮ, ಶಿಕ್ಷಣದ ಹಕ್ಕು ಇವುಗಳನ್ನು ಜಾರಿಗೆ ತಂದವರು ಮನಮೋಹನ್ ಸಿಂಗ್ ಅವರು. ಸಾಮಾನ್ಯ ಜನರ ಸಮಸ್ಯೆಗಳನ್ನು ಬಗೆಹರಿಸುವ ಕಾನೂನುಗಳು ಇವು ಎಂದು ಅರ್ಥ ಮಡಿಕೊಳ್ಳಬೇಕು. ಆಹಾರ ಭದ್ರತಾ ಕಾಯ್ದೆ ಇಲ್ಲದೇ ಹೋಗಿದ್ದರೆ ಬಡವರಿಗೆ ಉಚಿತ ಅಕ್ಕಿ ಕೊಡಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಜಾರಿ ಮಾಡಿದ್ದು ನರೇಂದ್ರ ಮೋದಿ ಅಲ್ಲ. ಅದರ ಶ್ರೇಯಸನ್ನು ಪಡೆಯಲು ಮೋದಿ ಅವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಲೇಖನ

ಡಿ.ಸಿ.ಪ್ರಕಾಶ್ ಸಂಪಾದಕರು

ಭಾರತದಾದ್ಯಂತ ಹರಡಿ ಎಲ್ಲೆಡೆ ವ್ಯಾಪಿಸಿರುವ ರೈಲು ಹಳಿಗಳಿಗೆ ಇಲ್ಲಿ ದೊಡ್ಡ ಇತಿಹಾಸವಿದೆ. ಶ್ರೀಮಂತರು, ಮಧ್ಯಮ ವರ್ಗದವರು ಮಾತ್ರವಲ್ಲದೆ ಬಡವರೂ ಸಹ ಕಡಿಮೆ ದರದಲ್ಲಿ ಭಾರತದ ಯಾವುದೇ ಭಾಗಕ್ಕೆ ಪ್ರಯಾಣಿಸಲು ರೈಲುಗಳು ಸಹಾಯ ಮಾಡುತ್ತವೆ.

ಆದರೆ, ಕಳೆದ ಕೆಲವು ವರ್ಷಗಳಿಂದ ರೈಲು ದರವನ್ನು ಹೆಚ್ಚಿಸುವುದು ಮತ್ತು ಬಡವರು ಪ್ರಯಾಣಿಸಬಹುದಾದ ಬೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ಮುಂತಾದ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಇದರಿಂದ ರೈಲು ಪ್ರಯಾಣವನ್ನೇ ಅವಲಂಬಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನರು ತೀವ್ರ ತೊಂದರೆಗೀಡಾಗಿದ್ದಾರೆ. ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಬಗ್ಗೆ ಮಾತನಾಡಿದ್ದಾರೆ.

ಇತ್ತೀಚೆಗಷ್ಟೇ ರಾಹುಲ್ ಗಾಂಧಿ ತಮ್ಮ ಎಕ್ಸ್ ಪೇಜ್ ನಲ್ಲಿ ಸಾಮಾನ್ಯ ಬಡವರ ಪಾಲಿಗೆ ರೈಲು ಪ್ರಯಾಣ ಅಷ್ಟಕ್ಕಷ್ಟೆ ಆಗುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ಅದರಲ್ಲಿ, “ಶ್ರೀಮಂತರನ್ನು ಗಮನದಲ್ಲಿಟ್ಟುಕೊಂಡೇ ಭಾರತೀಯ ರೈಲ್ವೇ ತನ್ನ ನೀತಿಗಳನ್ನು ವಿನ್ಯಾಸಗೊಳಿಸುತ್ತದೆ. ಇದರಲ್ಲಿ ಬಡವರನ್ನು ನಿರ್ಲಕ್ಷಿಸಲಾಗುತ್ತಿದೆ. ರೈಲ್ವೇ ಪ್ರಯಾಣ ದರವನ್ನು ಪ್ರತಿ ವರ್ಷ ಶೇ.10ರಷ್ಟು ಹೆಚ್ಚಿಸಲಾಗುತ್ತಿದೆ. ಭಾರತೀಯ ರೈಲ್ವೇ ಡೈನಾಮಿಕ್ ದರದ ಹೆಸರಿನಲ್ಲಿ ಪ್ರಯಾಣಿಕರಿಂದ ಭಾರಿ ಮೊತ್ತವನ್ನು ಪಡೆಯುತ್ತಿದೆ. ಟಿಕೆಟ್ ರದ್ದತಿಯ ದಂಡವನ್ನೂ ಹೆಚ್ಚಿಸಲಾಗಿದೆ. ರೈಲಿನಲ್ಲಿ ಶ್ರೀಮಂತರೇ ಪ್ರಯಾಣಿಸುವ ಪರಿಸ್ಥಿತಿಯನ್ನು ನಿರ್ಮಾಣ ಮಾಡುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಕೊರೋನಾ ಅವಧಿಯಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗಿದ್ದ ಪ್ರಯಾಣ ದರದ ರಿಯಾಯಿತಿಯನ್ನೂ ಭಾರತೀಯ ರೈಲ್ವೆ ಇಲಾಖೆ ಹಿಂಪಡೆದಿದೆ. ಇದನ್ನು ತಮ್ಮ ಎಕ್ಸ್ ಪೇಜ್ ನಲ್ಲಿ ಉಲ್ಲೇಖಿಸಿರುವ ರಾಹುಲ್ ಗಾಂಧಿ, “ಕಳೆದ ಮೂರು ವರ್ಷಗಳಲ್ಲಿ ರೈಲ್ವೇ ಇಲಾಖೆಯು ಹಿರಿಯ ನಾಗರಿಕರಿಗೆ ನೀಡಲಾಗಿದ್ದ ಪ್ರಯಾಣ ದರ ರಿಯಾಯಿತಿಯನ್ನು ಕಸಿದುಕೊಳ್ಳುವ ಮೂಲಕ 3,700 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಸುಸ್ಥಿತಿಯಲ್ಲಿರುವವರಿಗೆ ಎಸಿ ಕೋಚ್‌ಗಳ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಬಡವರ ಸಾಮಾನ್ಯ ಕೋಚ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ.

“ರೈಲ್ವೇ ಕೋಚ್‌ಗಳ ಉತ್ಪಾದನೆಯಲ್ಲಿ, ಎಸಿ ಕೋಚ್‌ಗಳನ್ನು ಸಾಮಾನ್ಯ ಕೋಚ್‌ಗಳಿಗಿಂತ ಮೂರು ಪಟ್ಟು ಹೆಚ್ಚು ಉತ್ಪಾದಿಸಲಾಗುತ್ತದೆ. ಹೀಗೆ ಕೇವಲ ರೈಲುಗಳನ್ನೇ ತಮ್ಮ ಪ್ರಯಾಣಕ್ಕೆ ಅವಲಂಬಿಸಿರುವ ಶೇ.80ರಷ್ಟು ಜನರಿಗೆ ಭಾರತೀಯ ರೈಲ್ವೇ ದ್ರೋಹ ಬಗೆಯುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಭಾರತೀಯ ರೈಲ್ವೇ ಬಗ್ಗೆ ರಾಹುಲ್ ಗಾಂಧಿ ಹೇಳಿರುವ ಮಾತುಗಳು 100% ಸತ್ಯ ಎಂದು ರೈಲಿನಲ್ಲಿ ನಿತ್ಯ ಪ್ರಯಾಣಿಸುವವರು ಹೇಳುತ್ತಾರೆ. ಪ್ರಧಾನಿ ಮೋದಿ ಅವರು ಪ್ರತಿ ರೈಲು ನಿಲ್ದಾಣಕ್ಕೆ ತೆರಳಿ ‘ವಂದೇ ಭಾರತ್’ ರೈಲುಗಳನ್ನು ಉದ್ಘಾಟಿಸಿದ್ದಾರೆ. ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಬುಲೆಟ್ ಟ್ರೈನ್ ಭರವಸೆ ನೀಡಿದೆ. ಆದರೆ ರೈಲು ಪ್ರಯಾಣವನ್ನೇ ಹೆಚ್ಚು ಅವಲಂಬಿಸಿರುವ ಬಡ ಜನರ ಸೌಲಭ್ಯಗಳ ಬಗ್ಗೆ ಆಡಳಿತಗಾರರಿಗೆ ಯಾವುದೇ ಕಾಳಜಿ ಇಲ್ಲ.

ಪ್ರಮುಖ ನಗರಗಳ ನಡುವೆ ಓಡುವ ‘ವಂದೇ ಭಾರತ್’ ರೈಲುಗಳನ್ನು ಭಾರತೀಯ ರೈಲ್ವೇ ಕ್ಷೇತ್ರದ ಪ್ರಗತಿಯ ಸಂಕೇತವೆಂದು ಆಡಳಿತಗಾರರು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಈ ರೈಲಿನ ಬೋಗಿಗಳು ಸಂಪೂರ್ಣ ಹವಾನಿಯಂತ್ರಿತವಾಗಿದ್ದು ವಿಮಾನದಂತೆಯೇ ಐಷಾರಾಮಿ ಸೌಲಭ್ಯಗಳನ್ನು ಹೊಂದಿದೆ. ರೈಲಿನಲ್ಲಿ ಸ್ವಯಂಚಾಲಿತ ಬಾಗಿಲುಗಳು, ವೈ-ಫೈ, ಜಿಪಿಎಸ್, ಆಡಿಯೋ, ವಿಡಿಯೋ, ಆಧುನಿಕ ಶೌಚಾಲಯಗಳು, ಸ್ವಿವೆಲ್ ಆಸನಗಳು, ಟಚ್ ಸ್ಕ್ರೀನ್‌ನಂತಹ ಆಧುನಿಕ ಸೌಲಭ್ಯಗಳಿವೆ. ‘ಎಸಿ ಚೇರ್ ಕಾರ್’ ಮತ್ತು ‘ಎಕ್ಸಿಕ್ಯುಟಿವ್ ಚೇರ್ ಕಾರ್’ ಎಂಬ ಎರಡು ರೀತಿಯ ಕೋಚ್‌ಗಳನ್ನು ಹೊಂದಿರುವ ವಂದೇ ಭಾರತ್ ರೈಲು ಕೇವಲ ಶ್ರೀಮಂತರಿಗೆ ಮಾತ್ರ ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಬಸ್ ಪ್ರಯಾಣ ದರ ರೈಲು ದರಕ್ಕಿಂತ ಹಲವು ಪಟ್ಟು ಹೆಚ್ಚಿರುವುದರಿಂದ ಬಡವರು ಹಾಗೂ ಮಧ್ಯಮ ವರ್ಗದ ಬಹುತೇಕರು ರೈಲು ಪ್ರಯಾಣಕ್ಕೆ ಆದ್ಯತೆ ನೀಡುತ್ತಾರೆ. ಆದರೆ ಎಲ್ಲಾ ರೈಲುಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಸಾಮಾನ್ಯ ಬೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. 2020ರಲ್ಲಿ, ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಲಾಕ್ ಡೌನ್ ಘೋಷಿಸಿದ್ದ ಸಂದರ್ಭದಲ್ಲಿ, ರೈಲ್ವೆ ಆಡಳಿತವು ಹಲವಾರು ಕ್ರಮಗಳನ್ನು ತೆಗೆದುಕೊಂಡಿತು. ಭಾರತದ ಎಲ್ಲಾ ರೈಲುಗಳಲ್ಲಿ ಕಾಯ್ದಿರಿಸಿದ ಬೋಗಿಗಳನ್ನು ಮಾತ್ರ ಓಡಿಸುವುದು ಮತ್ತು ಹಿರಿಯ ನಾಗರಿಕರಿಗೆ ಪ್ರಯಾಣ ದರದ ರಿಯಾಯಿತಿಯನ್ನು ರದ್ದುಗೊಳಿಸುವುದು ಮುಂತಾದ ಕ್ರಮಗಳನ್ನು ತೆಗೆದುಕೊಳ್ಳಲಾಯಿತು.

ಆ ಸಮಯದಲ್ಲಿ, ಎಲ್ಲಾ ರೈಲು ನಿಲ್ದಾಣಗಳಲ್ಲಿ ನಿಲ್ಲಬಹುದಾದ ಅನೇಕ ‘ಲೋಕಲ್’ ಪ್ಯಾಸೆಂಜರ್ ರೈಲುಗಳನ್ನು ಎಕ್ಸ್‌ಪ್ರೆಸ್ ರೈಲುಗಳಾಗಿ ಪರಿವರ್ತಿಸಲಾಯಿತು. ಎಕ್ಸ್‌ಪ್ರೆಸ್ ರೈಲುಗಳನ್ನು ಸೂಪರ್ ಫಾಸ್ಟ್ (Super Fast) ಎಕ್ಸ್‌ಪ್ರೆಸ್ ರೈಲುಗಳಾಗಿ ಪರಿವರ್ತಿಸಲಾಯಿತು. ಅಲ್ಲದೆ, ಕೊರೋನಾ ಹೆಸರನ್ನು ಬಳಸಿಕೊಂಡು, ಭಾರತದ ಎಲ್ಲಾ ರೈಲುಗಳಲ್ಲಿ ಕಾಯ್ದಿರಿಸದ ಸಾಮಾನ್ಯ ಕೋಚ್‌ಗಳ ಸಂಖ್ಯೆಯನ್ನು ಕಡಿಮೆ ಮಾಡಲಾಯಿತು. ಬದಲಾಗಿ, ಎಸಿ ಕೋಚ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಯಿತು. ಭಾರತೀಯ ರೈಲ್ವೇ ಬಡವರಿಗೆ ವಂಚಿಸುತ್ತಿದೆ ಎಂದು ರೈಲಿನಲ್ಲಿ ನಿತ್ಯ ಸಂಚರಿಸುವ ಜನರ ಯಾತನೆಯಾಗಿದೆ. ಇದನ್ನೇ ರಾಹುಲ್ ಗಾಂಧಿ ಎತ್ತಿ ತೋರಿಸಿದ್ದಾರೆ ಎಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ.

2014ರಲ್ಲಿ 400 ರೂಪಾಯಿ ಇದ್ದ ಅಡುಗೆ ಅನಿಲ ಸಿಲಿಂಡರ್ ಬೆಲೆ ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ 1000 ರೂಪಾಯಿ ದಾಟಿದೆ ಎಂದು ವಿರೋಧ ಪಕ್ಷಗಳು ಹೇಳಿದಾಗ ಜನರಿಗೆ ಸುಲಭವಾಗಿ ಅರ್ಥವಾಗುತ್ತದೆ. ಅದೇ ರೀತಿ ಪ್ರೀಮಿಯಂ ಶುಲ್ಕ, ಡೈನಾಮಿಕ್ ಶುಲ್ಕ ಹೀಗೆ ಹಲವು ಹೆಸರುಗಳಲ್ಲಿ ಹಣ ಸುಲಿಗೆಯಾಗುತ್ತಿರುವಾಗ ಪ್ರಮುಖ ವಿರೋಧ ಪಕ್ಷಗಳು ಅದರ ಬಗ್ಗೆ ಮಾತನಾಡುವುದು ಅನಿವಾರ್ಯವಾಗುತ್ತದೆ. ಅಲ್ಲದೆ, ಮೆಟ್ರೋ, ವಂದೇ ಭಾರತ್ ಮತ್ತು ಬುಲೆಟ್ ರೈಲುಗಳ ಹೆಸರುಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸುವ ಅದೇ ಸಂದರ್ಭದಲ್ಲಿ ಬಡವರು ಬಳಸುವ ರೈಲುಗಳ ಹೊಸ ಯೋಜನೆಗಳನ್ನೂ ಸೇರಿಸಬೇಕು.

ರಾಹುಲ್ ಗಾಂಧಿ ಅವರ ಭಾಷಣ ಚುನಾವಣಾ ಅಖಾಡದಲ್ಲಿ ಸದ್ದು ಮಾಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.