ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಡಿ.ಕೆ.ಶಿವಕುಮಾರ್ Archives » Page 2 of 4 » Dynamic Leader
October 17, 2024
Home Posts tagged ಡಿ.ಕೆ.ಶಿವಕುಮಾರ್ (Page 2)
ರಾಜಕೀಯ

ಕರೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ನಾನು ಹಣ ಪಡೆದಿರುವ ಬಗ್ಗೆ ಪುರಾವೆ ಇದ್ದರೆ ಅಣ್ಣಾಮಲೈ ಪ್ರಕಟಿಸಲಿ. ಅಗತ್ಯಬಿದ್ದರೆ ಅಣ್ಣಾಮಲೈ ಅವರ ಆಸ್ತಿ ಮೌಲ್ಯವನ್ನು ನಾನು ಬಹಿರಂಗಪಡಿಸುತ್ತೇನೆ ಎಂದು ಕರೂರು ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ಹೇಳಿದ್ದಾರೆ.

ನಾನೊಬ್ಬ ಮಹಿಳೆಯಾದ್ದರಿಂದ ಆಕೆಯನ್ನು ಬದುಕಲು ಬಿಟ್ಟಿದ್ದೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ. ಇದನ್ನು ಹೇಳಲು ಅಣ್ಣಾಮಲೈ ಯಾರು? ಅಣ್ಣಾಮಲೈ ನನ್ನನ್ನು ಏನು ಮಾಡಬಹುದು? ಜಾರಿ ನಿರ್ದೇಶನಾಲಯದ ಬೇಟೆ ನಾಯಿಗಳನ್ನು (ಅಧಿಕಾರಿಗಳನ್ನು) ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಬಿಜೆಪಿಯವರು ಅಕ್ರಮವಾಗಿ ಬಳಸಿಕೊಳ್ಳುತ್ತಿದ್ದಾರೆ.

ಸಾಧ್ಯವಾದರೆ ಜಾರಿ ಇಲಾಖೆಯನ್ನು ನನ್ನ ಮನೆಗೆ ಕಳುಹಿಸಲಿ. ನನ್ನ ಮನೆಯಲ್ಲಿ ಗಂಜಿಹಾಕಿದ ಕಾಟನ್ ಸೀರೆಗಳನ್ನು ಬಿಟ್ಟು ಬೇರೇನೂ ಸಿಗುವುದಿಲ್ಲ. ಮರಳು ಮಾಫಿಯಾಗಳಿಂದ ಹಣ ಪಡೆದು ಅಣ್ಣಾಮಲೈ ಅವರಂತೆ ಐಷಾರಾಮಿ ಜೀವನ ನಡೆಸಲಿಲ್ಲ. ಮನೆ ಬಾಡಿಗೆ 3.70 ಲಕ್ಷ ರೂ.ಗಳ ಬಗ್ಗೆ ಕೇಳಿದ ಪ್ರಶ್ನೆಗೆ ಅಣ್ಣಾಮಲೈ ಇನ್ನೂ ಪ್ರತಿಕ್ರಿಯಿಸಲಿಲ್ಲ.

ಅವರಂತೆ ನಿನ್ನೆಯ ಮಳೆಯಿಂದ ಇಂದು ಚಿಗುರೊಡೆದ ಅಣಬೆಯಲ್ಲ ನಾನು. ವೈಯಕ್ತಿಕವಾಗಿ ಮಹಿಳೆಯರ ಮೇಲೆ ಕೊಳಕು ರಾಜಕಾರಣ ನಡೆಸುವ ರಾಜಕಾರಣಿ ಅಣ್ಣಾಮಲೈ. ಅವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಪ್ಪು ಕುರಿಯಾಗಿದ್ದರು. 2018ರಲ್ಲಿ ನಡೆದ ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಇರಲಿಲ್ಲ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ ಪರವಾಗಿ ಯಡಿಯೂರಪ್ಪ ಮೂರು ದಿನ ಮುಖ್ಯಮಂತ್ರಿಯಾಗಿದ್ದರು.

ಇದನ್ನೂ ಓದಿ: ಅಲಿಘರ್ ನಗರದ ಹೆಸರನ್ನು ಹರಿಘರ್ ಎಂದು ಬದಲಾಯಿಸಲು ನಿರ್ಧಾರ!

ಯಡಿಯೂರಪ್ಪ ಸರ್ಕಾರವನ್ನು ಉಳಿಸಲು ಆಗ ​​ಚಿಕ್ಕಮಗಳೂರಿನಲ್ಲಿ ಎಸ್ಪಿಯಾಗಿದ್ದ ಅಣ್ಣಾಮಲೈಯನ್ನು ರಾಮನಗರಕ್ಕೆ ವರ್ಗಾಯಿಸಲಾಯಿತು. ಅಣ್ಣಾಮಲೈ ಮೂಲಕ, ರಾಮನಗರದಲ್ಲಿ ಬೀಡುಬಿಟ್ಟಿದ್ದ ಕಾಂಗ್ರೆಸ್ ಶಾಸಕರಿಗೆ ಹಣನೀಡಿ, ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಸೆಳೆಯುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿತ್ತು.

ಆ ಪ್ರಯತ್ನ ವಿಫಲವಾದಾಗ ಅಣ್ಣಾಮಲೈ ಮತ್ತೆ ಚಿಕ್ಕಮಗಳೂರಿಗೆ ವಾಪಸ್ಸಾಗಿ ಮತ್ತೆ ಅಲ್ಲಿಂದ ಬೆಂಗಳೂರಿಗೆ ಬಂದು ಸೇರಿಕೊಂಡರು. ನಂತರ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕಾಯಿತು. ರಾಜಕೀಯವೇ ಗೊತ್ತಿಲ್ಲದ ಅಣ್ಣಾಮಲೈ ಅವರಿಗೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನ ಸಿಕ್ಕಿದೆ.

ಮರಳು ಮಾಫಿಯಾಗಳಿಂದ 60 ಲಕ್ಷ ರೂಪಾಯಿ ಪಡೆದಿರುವುದಾಗಿ ಚೆನ್ನೈನಲ್ಲಿರುವ ಬಿಜೆಪಿ ಕಚೇರಿಯ ನೌಕರನ ಮನೆಗೆ ಜಾರಿ ಇಲಾಖೆ ತೆರಳಿತು. ಆದರೆ, ಜಾರಿ ಅಧಿಕಾರಿಗಳು ಸಂಬಂಧಿಸಿದವರನ್ನು ವಿಚಾರಣೆ ನಡೆಸದೆ ವಾಪಸ್ಸು ಹೋಗಿದ್ದು ಏಕೆ ಎಂಬುದಕ್ಕೆ ಉತ್ತರವಿಲ್ಲ. ಯಾವುದೇ ಸರ್ಕಾರಿ ಹುದ್ದೆ ಇಲ್ಲದ ಅಣ್ಣಾಮಲೈ ಅವರಿಗೆ ಅತ್ಯಧಿಕ ಝಡ್ ಕೆಟಗರಿ ರಕ್ಷಣೆ ನೀಡಿರುವುದರಿಂದ ವರ್ಷಕ್ಕೆ 3 ಕೋಟಿ ರೂ. ವರೆಗೆ ಖರ್ಚಾಗುತ್ತಿದೆ.

ಸಂಸದೆಯಾಗಿರುವ ನಾನೇ ವಿಮಾನದ ಪ್ರಥಮ ದರ್ಜೆಯಲ್ಲಿ ಹಾರುವುದಿಲ್ಲ. ಅವರು ನನ್ನನ್ನು ಹೇಗೆ ಪ್ರಶ್ನಿಸಬಹುದು? ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಣ್ಣಾಮಲೈ ಅವರ ಭ್ರಷ್ಟಾಚಾರ ಬಯಲಾಗಲಿದೆ. ಆಗ ಅವರು ಇರಬೇಕಾದ ಸ್ಥಳ ಬೇರಯದಾಗಿರುತ್ತದೆ. ಅಣ್ಣಾಮಲೈ ಕಲೆಕ್ಷನ್ ಕಿಂಗ್ ಆಗಿ ಹರಿದಾಡುತ್ತಿದ್ದಾರೆ. ನಾನು ಕರ್ನಾಟಕದ ಉಪಮುಖ್ಯಮಂತ್ರಿ ಶಿವಕುಮಾರ್ ಅವರಿಂದ ಹಣ ಪಡೆದಿರುವ ಬಗ್ಗೆ ಪುರಾವೆ ಇದ್ದರೆ ಅದನ್ನು ಅಣ್ಣಾಮಲೈ ಬಹಿರಂಗಪಡಿಸಲಿ. ಅಗತ್ಯವಿದ್ದರೆ ಅಣ್ಣಾಮಲೈ ಆಸ್ತಿ ಮೌಲ್ಯದ ಬಗ್ಗೆ ಪ್ರಕಟಿಸುತ್ತೇನೆ. ಎಂದು ಹೇಳಿದರು.

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ, ನಾಡಬಂಧುಗಳಿಗೆ ರಾಜ್ಯೋತ್ಸವದ ಶುಭ ಕೋರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

“ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು” ಎಂದರು.

“ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು. ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ” ಎಂದು ಹೇಳಿದರು.

“ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ; ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ. ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು, ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ. ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು” ಎಂದು ಹೇಳಿದರು.  

ರಾಜಕೀಯ

ಬೆಂಗಳೂರು: ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ, ಬೆಂಗಳೂರಿಗೆ ಸೇರಿಸುವೆ’ ಎಂದು ನೀಡಿರುವ ಹೇಳಿಕೆ ಸರಿಯಲ್ಲ. ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಿಕೊಂಡು, ತಮ್ಮ ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಅವರು ಕನಕಪುರ ಜನರ ನೆಪ ಹೇಳಿಕೊಂಡು ಈ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಹೇಳಿದ್ದಾರೆ.

‘ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿಟ್ಟುಕೊಳ್ಳಿ’ ಎನ್ನುವ ಅವರ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ. ಅಷ್ಟೇ ಅಲ್ಲ; ಕನಕಪುರ ಜನರಿಗೆ ಮಂಕುಬೂದಿ ಎರಚುವ ಹುನ್ನಾರ ಎಂದು ಕಿಡಿಕಾರಿದ್ದಾರೆ.

‘ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು ಆಗುವುದಿಲ್ಲ, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ’ ಎನ್ನುವ ಇವರು; ಇಷ್ಟು ದಿನ ಶಾಸಕರಾಗಿ, ಸಚಿವರಾಗಿ ಉಪ ಮುಖ್ಯಮಂತ್ರಿ ಆಗಿ ಮಾಡಿದ್ದೇನು? ತಮ್ಮ ಜೇಬು ತುಂಬಿಸಿಕೊಂಡಿದ್ದು, ತಮ್ಮ ಮನೆಯನ್ನು ಉದ್ಧಾರ ಮಾಡಿಕೊಂಡಿದ್ದಷ್ಟೇ. ಇಷ್ಟಕ್ಕೂ ಕನಕಪುರ ಸುತ್ತಮುತ್ತ ಯಾರ ಆಸ್ತಿಗಳಿವೆ? ಅದರಲ್ಲಿ ಬೇನಾಮಿಗಳು ಎಷ್ಟು? ಎಲ್ಲೆಲ್ಲಿ ಅಕ್ರಮವಾಗಿ ಬೇಲಿ ಹಾಕಲಾಗಿದೆ? ಅವೆಲ್ಲಾ ಅಕ್ರಮಗಳನ್ನು ಸಕ್ರಮ ಮಾಡಿಕೊಳ್ಳಲು ಬೆಂಗಳೂರು ಸೇರ್ಪಡೆಯ ನಾಟಕ! ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಕನಕಪುರಕ್ಕೆ ಒಂದು ಮೆಡಿಕಲ್ ಕೊಟ್ಟಿದ್ದರೂ ರಾಮನಗರ ಮೆಡಿಕಲ್ ಕಾಲೇಜನ್ನು ಕದ್ದು ಒಯ್ಯವುದರ ಹಿಂದೆಯೂ ಇದೇ ದುಷ್ಟ ತಂತ್ರ ಅಡಗಿದೆ. ಕನಕಪುರಕ್ಕೆ 52 ಕೀ.ಮೀ. ದೂರದಲ್ಲಿದೆ ಬೆಂಗಳೂರು. 25 ಕೀ.ಮೀ. ದೂರದಲ್ಲಿದೆ ರಾಮನಗರ. ಜನರಿಗೆ ಯಾವುದು ಅನುಕೂಲ? ದಿನ ಬೆಳಗಾದರೆ ಕನಕಪುರದವರು ಬೆಂಗಳೂರಿಗೆ ಅಲೆಯಬೇಕೆ? ಉಪ ಮುಖ್ಯಮಂತ್ರಿಗಳ ಒಳ ಉದ್ದೇಶದ ಬಗ್ಗೆ ಅನೇಕ ಅನುಮಾನಗಳು ಸಹಜವಾಗಿಯೇ ಮೂಡುತ್ತವೆ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕನಕಪುರ ತಾಲೂಕನ್ನು ಬೆಂಗಳೂರು ನಗರದೊಂದಿಗೆ ಸೇರಿಸಲು ಡಿ.ಕೆ.ಶಿವಕುಮಾರ್ ಭರವಸೆ!

2006-2007ರಲ್ಲಿ ಕನಕಪುರ ಹೇಗಿತ್ತು? ಡಿಕೆಶಿ ಅವರು ನೆನಪು ಮಾಡಿಕೊಳ್ಳಬೇಕು. ಆಗಲೇ ಪಟ್ಟಣದ ಡಬಲ್ ರಸ್ತೆ ನಿರ್ಮಾಣ, ಕನಕಪುರ ಹೆಬ್ಬಾಗಿಲಿನಲ್ಲಿರುವ ಸೇತುವೆ ನಿರ್ಮಾಣಕ್ಕೆ ಯೋಜನೆ ಕೊಟ್ಟವನು ನಾನು. ಸಂಗಮದಲ್ಲಿ ಪ್ರವಾಹ ಬಂದಾಗಲೆಲ್ಲಾ ಅನೇಕರು ಹಗ್ಗ ಕಟ್ಟಿಕೊಂಡು ರಸ್ತೆ ದಾಟಲು ಹೋಗಿ ಸಾವನ್ನಪ್ಪುತ್ತಿದ್ದರು. ಇದನ್ನು ತಪ್ಪಿಸಲು ಅಲ್ಲಿ ಸೇತುವೆ ನಿರ್ಮಿಸಿ ಮಹದೇಶ್ವರ ಬೆಟ್ಟಕ್ಕೆ ಸುಲಭ ಸಂಪರ್ಕ ಕಲ್ಪಿಸುವ ಯೋಜನೆಗೆ ಇದೇ ಡಿ.ಕೆ.ಶಿವಕುಮಾರ್ ಅವರು 2006ರಲ್ಲಿಯೇ ವಿರೋಧ ಮಾಡಿದ್ದರು!

ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸುವ ಮಾತು!! ನದಿಯಲ್ಲಿ ಜನರು ಕೊಚ್ಚಿಕೊಂಡು ಹೋಗಿ ಸತ್ತರೂ ಪರವಾಗಿಲ್ಲ. ಆದರೆ, ಇವರ ರಿಯಲ್ ಎಸ್ಟೇಟ್ ವ್ಯವಹಾರ ಪೊಗದಸ್ತಾಗಿ ಸಾಗಬೇಕು. ಸದ್ಯ ಬೆಂಗಳೂರಿನಿಂದ ಕನಕಪುರಕ್ಕೆ ಸುರಂಗ ಕೊರೆಸುವೆ ಎಂದು ಹೇಳಲಿಲ್ಲ.. ಅದೇ ನಮ್ಮ ಪುಣ್ಯ ಎಂದು ವ್ಯಂಗ್ಯವಾಡಿದರು.

ಕನಕಪುರ ಮೆಡಿಕಲ್ ಕಾಲೇಜು ಚಿಕ್ಕಬಳ್ಳಾಪುರ ಪಾಲಾದ ಮೇಲೆ ಮೈತ್ರಿ ಸರಕಾರದ ಅವಧಿಯಲ್ಲಿ ಕನಕಪುರಕ್ಕೆ ಮತ್ತೊಂದು ಮೆಡಿಕಲ್ ಕಾಲೇಜ್ ಮಂಜೂರು ಮಾಡಿದ್ದೆ. ಆದರೆ, ಇದೇ ಮಹಾನುಭಾವರೇ ಮೈತ್ರಿ ಸರಕಾರವನ್ನು ತೆಗೆದ ಪರಿಣಾಮ ಆ ಯೋಜನೆ ನೆನೆಗುದಿಗೆ ಬಿತ್ತು. ಯೋಜನೆಯೂ, ಅದರ 350 ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವೂ ಅಲ್ಲಿಯೇ ಉಳಿಯಿತು. ಉಪ ಮುಖ್ಯಮಂತ್ರಿ ಆದವರು ಆ ಯೋಜನೆಯನ್ನು ಪೂರ್ಣಗೊಳಿಸಬೇಕೆ? ಅಥವಾ ರಾಮನಗರ ಮೆಡಿಕಲ್ ಕಾಲೇಜ್ ಅನ್ನು ಹೈಜಾಕ್ ಮಾಡಲು ಹುನ್ನಾರ ನಡೆಸಬೇಕೇ? ಎಂದು ಪ್ರಶ್ನಿಸಿದರು.

ರಾಮನಗರ ಜಿಲ್ಲೆ ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳ ಜನರ ಬಹುಕಾಲದ ಕನಸು. ಆ ಕನಸನ್ನು ನಾನು ನನಸು ಮಾಡಿದ್ದೇನೆ. ಈಗ ತಮ್ಮ ಸ್ವಾರ್ಥಕ್ಕಾಗಿ ರಾಮನಗರ ಜಿಲ್ಲೆ ಜನರ ಬೆನ್ನಿಗೆ ಚೂರಿ ಹಾಕಿ ಕನಕಪುರದ ಜನರ ಹಿತಕ್ಕೆ ಕೊಡಲಿಪೆಟ್ಟು ಹಾಕುವ ಹುನ್ನಾರ ನಡೆದಿದೆ. ಇದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕನಕಪುರ ಸೇರಿ 4 ವಿಧಾನಸಭೆ ಕ್ಷೇತ್ರಗಳ ಜನರೂ ಒಟ್ಟಾಗಿ ಒಂದೇ ಜಿಲ್ಲೆಯಲ್ಲಿ ಉಳಿಯಲಿದ್ದಾರೆ. ಡಿ.ಕೆ.ಶಿವಕುಮಾರ್ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ: ತನ್ನ ನಿಲುವನ್ನು ಬದಲಿಸಿಕೊಂಡ ಚೀನಾ!

ಬೆಂಗಳೂರು ರಾಜಕೀಯ

ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರದ ಶಿವನಹಳ್ಳಿಯ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನಿಮ್ಮ ಆಸ್ತಿಗಳನ್ನ ಹೆಚ್ಚು ಮಾಡುವ ಶಕ್ತಿಯನ್ನು ಭಗವಂತ ನನಗೆ ಕೊಟ್ಟಿದ್ದಾನೆ. ಯಾರು ಸಹ ನಿಮ್ಮ ಆಸ್ತಿಗಳನ್ನು ಮಾರಿಕೊಳ್ಳಬೇಡಿ. ನಾವು ಬೆಂಗಳೂರು ಗ್ರಾಮಾಂತರ ಅಲ್ಲ… ರಾಮನಗರ ಅಲ್ಲ… ಬೆಂಗಳೂರು ನಗರದವರು ಎಂದು ಹೇಳುವ ಮೂಲಕ ಕನಕಪುರ ತಾಲೂಕನ್ನು ಬೆಂಗಳೂರು ನಗರದೊಂದಿಗೆ ಸೇರಿಸುವ ಇಂಗಿತವನ್ನು ವ್ಯಕ್ತಪಡಿಸಿದರು.

ನಿಮ್ಮ ಜೋಬಿಗೆ ನಾನು ದುಡ್ಡು ಹಾಕಲು ಆಗೋದಿಲ್ಲ. ಪ್ರತಿಯೊಬ್ಬರಿಗೂ ಮನೆ ಕೊಡಿಸಲು ಆಗೋದಿಲ್ಲ. ಆದರೆ ನಿಮ್ಮ ಆಸ್ತಿಯ ಮೌಲ್ಯವು ಒಂದು ಇದ್ದರೆ ಅದನ್ನು 10ರಷ್ಟು ಹೆಚ್ಚು ಮಾಡಬಹುದು. ಅಷ್ಟು ಶಕ್ತಿಯನ್ನು ದೇವರು ನನಗೆ ಕೊಟ್ಟಿದ್ದಾನೆ. ಆ ಕೆಲಸವನ್ನು ನಾನು ಮಾಡಿದ್ದೇನೆ. ನಿಮ್ಮ ಮಕ್ಕಳಿಗೆ, ಮೊಮ್ಮಕ್ಕಳಿಗೆ ನನ್ನಿಂದ ಏನೂ ಕೊಡಲು ಆಗೋದಿಲ್ಲ, ಆಸ್ತಿಯನ್ನು ಮಾತ್ರ ನೀಡಲು ಸಾಧ್ಯ ಎಂದರು.

ನೀವು ರಾಮನಗರದವರು ಅಲ್ಲ, ಬೆಂಗಳೂರು ಜಿಲ್ಲೆಯವರು; ಇದನ್ನು ನಿಮ್ಮ ತಲೆಯಲ್ಲಿ ಇಟ್ಟುಕೊಳ್ಳಿ. ಸುಮ್ಮನೆ ನಮ್ಮನ್ನು ರಾಮನಗರ ಅಂತ ಹೇಳುವ ಮೂಲಕ ನಮ್ಮನ್ನು ಮೂಲೆ ಗುಂಪು ಮಾಡಿದ್ದಾರೆ. ಸುಮ್ಮನೆ ಯಾರೋ ಹೆಸರು ಮಾಡಿಕೊಳ್ಳಬೇಕು ಎಂಬುದಕ್ಕಾಗಿ ಇದನ್ನು ಮಾಡಿದ್ದಾರೆ. ದೇವಸ್ಥಾನದಲ್ಲಿ ನಿಂತು ಇದನ್ನು ಹೇಳುತ್ತಿದ್ದೇನೆ. ನಾನೇನು ಮಾಡಬೇಕೋ ಅದನ್ನು ಮಾಡ್ತೀನಿ, ಮುಂದಿನ ದಿನಗಳಲ್ಲಿ ಅಡಿಗಳಲ್ಲಿ ಇಲ್ಲಿ ಭೂಮಿ ವ್ಯವಹಾರ ನಡೆಯುತ್ತದೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಇಸ್ರೇಲ್‌ಗೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಹಕ್ಕಿದೆ: ತನ್ನ ನಿಲುವನ್ನು ಬದಲಿಸಿಕೊಂಡ ಚೀನಾ!

ರಾಜಕೀಯ

ಬೆಂಗಳೂರು: ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ. ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ. ತಮಿಳುನಾಡಿಗೆ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೇಕೆದಾಟು ಪಾದಯಾತ್ರೆ ಹೈಡ್ರಾಮಾ ಆಡಿ, ಕನ್ನಡಿಗರ ತಲೆ ಮೇಲೆ ಮಕ್ಮಲ್ ಟೋಪಿ ಇಟ್ಟ ಕಾಂಗ್ರೆಸ್, ಈಗ I.N.D.I.A.ಗೆ ಜೀವದಾನ ಮಾಡಲು ರಾಜ್ಯದ ಕಾವೇರಿ ಹಿತವನ್ನೇ ಬಲಿದಾನ ಮಾಡಿದೆ. ಅಂದುಕೊಂಡಿದ್ದೇ ಆಗಿದ್ದು; ನಮ್ಮ ಭಯ ನಿಜವಾಗಿದೆ. ಕಾಂಗ್ರೆಸ್ ಸರಕಾರ ಕನ್ನಡಿಗರಿಗೆ, ಅದರಲ್ಲೂ ಅನ್ನದಾತರಿಗೆ ಘೋರ ವಿಶ್ವಾಸದ್ರೋಹ ಎಸಗಿದೆ.

ಮಳೆ ಅಭಾವದಿಂದ ಜಲಾಶಯಗಳು ತುಂಬಿಲ್ಲ. ರೈತರ ಬೆಳೆಗೆ ನೀರಿಲ್ಲ, ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ. ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟಿದೆ ಸರಕಾರ. ಕನ್ನಡಿಗರಿಗೆ ವಂಚಿಸಿ ರಾಜಾರೋಷವಾಗಿ ನೀರು ಹರಿಸುವ ಮೂಲಕ ತಮಿಳುನಾಡು ಜತೆ ರಾಜಕೀಯ ಚೌಕಾಬಾರ ಆಡುತ್ತಿದೆ! ಇದೇನು ಇನ್ನೊಂದು ಗ್ಯಾರಂಟಿನಾ?

2024ರ ಲೋಕಸಭೆ ಗೆಲುವಿಗೆ ಕಾವೇರಿ ಹಿತವನ್ನು ನೆರೆರಾಜ್ಯಕ್ಕೆ ಅಡವಿಟ್ಟಿದೆ ಹಸ್ತಪಕ್ಷ ಸರಕಾರ! ತಮಿಳುನಾಡಿಗೆ ಬೆದರಿ ಶರಣಾಗಿದೆ!! ಕಾವೇರಿ ಜಲನಿರ್ವಹಣಾ ಪ್ರಾಧಿಕಾರದ ಸಭೆಯಿಂದಲೇ ಹೊರನಡೆದ, ರಾಜ್ಯದ ವಿರುದ್ಧ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದ ರಾಜ್ಯದೆದುರು ದೈನೇಸಿಯಾಗಿ ಮಂಡಿಯೂರಿದ್ದು ಕನ್ನಡಿಗರ ಸ್ವಾಭಿಮಾನಕ್ಕೆ ಕೊಟ್ಟ ಕೊಡಲಿಪೆಟ್ಟು.

1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡ ಅವರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸೆಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ.

ಸಂಕಷ್ಟ ಸ್ಥಿತಿಯ ಬಗ್ಗೆ ಕಾಂಗ್ರೆಸ್ ಸರಕಾರ ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಡಲಿಲ್ಲ ಯಾಕೆ? ಕಾನೂನು ತಜ್ಞರ ಜತೆ ಪ್ರತಿಪಕ್ಷ ಮುಖಂಡರ ಜತೆ ಸಮಾಲೋಚನೆ ನಡೆಸದೇ ವಾಯುವೇಗದಲ್ಲಿ ತಮಿಳುನಾಡಿಗೆ ನೀರು ಹರಿಸಿದ ಒಳಗುಟ್ಟೇನು? ಜನತೆಗೆ ಗೊತ್ತಾಗಬೇಕಿದೆ.

ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಯವರು ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ಅವರು ಸ್ಪಷ್ಟಪಡಿಸಬೇಕಿದೆ. ಕಾವೇರಿ ಕೀಲಿ ಕೇಂದ್ರ ಬಳಿ ಇದೆ ಎಂದಾದರೆ ಇವರ ಹೊಣೆ ಏನು? ಆ ಕೀಲಿ ಈಗ ಸ್ಟಾಲಿನ್ ಅವರ ಕೈಯ್ಯಲ್ಲಿದೆಯೋ ಅಥವಾ ಸೋನಿಯಾ ಗಾಂಧಿ ಅವರ ಕೈಯ್ಯಲ್ಲಿದೆಯೋ?

ಇದನ್ನೂ ಓದಿ: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹ!

ತಾಕತ್ತಿದ್ದರೆ ಕೋರ್ಟಿಗೆ ಹೋಗಿ ಎಂದು ರೈತರಿಗೆ ಉಪ ಮುಖ್ಯಮಂತ್ರಿಗಳು ಹೇಳಿರುವುದು ದರ್ಪ, ದುರಹಂಕಾರದ ಪರಾಕಾಷ್ಠೆ. ನಿತ್ಯವೂ ಸಾವಿರಾರು ಕ್ಯೂಸೆಕ್ ಕಾವೇರಿ ನೀರು ನೆರೆರಾಜ್ಯಕ್ಕೆ ಹರಿದು ಹೋಗುತ್ತಿದೆ. ಇನ್ನೂ 10 ಟಿಎಂಸಿ ಬಿಡುತ್ತೇವೆ ಎಂದು ಅವರು ಹೇಳಿರುವುದು ಸರಿಯಲ್ಲ?

ಕನ್ನಡಿಗರು ಕೊಟ್ಟ ಪೆನ್ ಈಗ ಗನ್ ರೂಪ ತಳೆದಿದೆಯಾ ಹೇಗೆ? ಕನ್ನಡಿಗರನ್ನು ಕೇಳಿಕೇಳಿ ಪಡೆದುಕೊಂಡ ಪೆನ್ ಈಗ ಪೆಚ್ಚಗೆ, ತೆಪ್ಪಗೆ ಮಲಗಿದೆಯಾ? ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರವೇ ರಾಜ್ಯದ ಜಲ ಸಂಕಷ್ಟದ ಬಗ್ಗೆ ಸಭೆಯಲ್ಲೇ ಅಂಕಿ-ಅಂಶ ಸಮೇತ ಹೇಳಿದೆ. ಪಾಪ ಜಲ ಸಂಪನ್ಮೂಲ ಸಚಿವರಿಗೆ ಈ ಬಗ್ಗೆ ಮಾಹಿತಿ ಇಲ್ಲವೇ? ಎಂದು ಕಿಡಿಕಾರಿದ್ದಾರೆ.

ಕಾವೇರಿ ವಿಷಯದಲ್ಲಿ ಕಾಂಗ್ರೆಸ್ಸಿನದು ಸದಾ ಎರಡು ನಾಲಿಗೆ! ಕಾವೇರಿ ಪಾಲಿಗೆ ಆ ಪಕ್ಷ ನಯವಂಚನೆ,ನಂಬಿಕೆ ದ್ರೋಹದ ಪ್ರತೀಕ.ಅಧಿಕಾರಕ್ಕೆ ಬಂದು 100 ದಿನ ಕಳೆಯುವ ಮುನ್ನವೇ ಕೊಳ್ಳಿ ಇಡುವ ಕೆಲಸ ಮಾಡಿಬಿಟ್ಟಿದೆ.ಈ ಅನ್ಯಾಯ ಸಹಿಸುವ ಪ್ರಶ್ನೆಯೇ ಇಲ್ಲ.ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು. ಸಂಕಷ್ಟಸೂತ್ರದ ಪಾಲನೆಗೆ ಒತ್ತಡ ಹೇರಬೇಕು.

ರಾಜಕೀಯ

ಬೆಂಗಳೂರು: ಬೆಂಗಳೂರು ವಿಕಾಸ ಸೌಧದಲ್ಲಿ ಇಂದು ಬ್ರ್ಯಾಂಡ್‌ ಬೆಂಗಳೂರು ಅಭಿಯಾನದ ಅಧಿಕೃತ ವೆಬ್‌ಸೈಟ್‌ ಅನ್ನು ಬಿಡುಗಡೆಗೊಳಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, “ಇಂದು ಇಡೀ ವಿಶ್ವವು ಬೆಂಗಳೂರಿನ ಪ್ರಗತಿಯ ಬಗ್ಗೆ ಗಮನಿಸುತ್ತಿದೆ. ಇದನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ brandbengaluru.karnataka.gov.in ಎನ್ನುವ ವೆಬ್ ಪೋರ್ಟಲ್‌ಅನ್ನು ಆರಂಭಿಸಲಾಗಿದೆ” ಎಂದರು.

“ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಾರ್ವಜನಿಕರು, ಬೆಂಗಳೂರಿನ ನಿವಾಸಿಗಳು, ಎನ್‌ಆರ್‌ಐಗಳು ತಮ್ಮ ಅಭಿಪ್ರಾಯಗಳನ್ನು ಈ ಪೋರ್ಟಲ್‌ ಮೂಲಕ ಹಂಚಿಕೊಳ್ಳಬಹುದಾಗಿದೆ. ಇಲ್ಲಿ ದಾಖಲಾಗುವ ಅಭಿಪ್ರಾಯಗಳ ಕುರಿತು ಪರಾಮರ್ಶೆ ನಡೆಸಿ ಸೂಕ್ತ ಸಲಹೆಗಳನ್ನು ಪರಿಗಣಿಸಲಾಗುವುದು.

ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ, ಟ್ರಾಫಿಕ್‌ ಸಮಸ್ಯೆ, ರಸ್ತೆಗುಂಡಿಗಳ ಸಮಸ್ಯೆ ಕುರಿತು ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ನಿವಾಸಿಗಳು, ಬೆಂಗಳೂರಿನಿಂದ ವಿದೇಶಕ್ಕೆ ತೆರಳಿ ನೆಲೆಸಿರುವವರೂ ಕೂಡ ಗಂಭೀರವಾಗಿ ನೋಡುತ್ತಿದ್ದಾರೆ. ಬೆಂಗಳೂರು ವಿಶ್ವದರ್ಜೆಯ ನಗರಗಳಿಗೆ ಸ್ಪರ್ಧೆಯೊಡ್ಡುವಂತೆ ಮಾಡಬೇಕು. ಇದಕ್ಕಾಗಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ.

ಕೆಲವು ನಿವೃತ್ತ ಅಧಿಕಾರಿಗಳು, ಉದ್ಯಮಿಗಳು, ನಿವಾಸಿಗಳು, ಸ್ಥಳೀಯ ಶಾಸಕರು, ಮಾಜಿ ಕಾರ್ಪೊರೇಟರ್‌ಗಳ ಅಭಿಪ್ರಾಯಗಳನ್ನು ಪಡೆದಿದ್ದೇನೆ. ನಿನ್ನೆಯಷ್ಟೇ ಘನತ್ಯಾಜ್ಯ ನಿರ್ವಹಣಾ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಬೆಂಗಳೂರಿನ ವಿವಿಧ ಜಂಕ್ಷನ್‌ಗಳಿಗೆ ಭೇಟಿ ನೀಡಿ ಅಲ್ಲಿನ ಟ್ರಾಫಿಕ್‌ ಸಮಸ್ಯೆಯನ್ನು ಕಣ್ಣಾರೆ ನೋಡಿದ್ದೇನೆ.

ದೆಹಲಿ,  ಮುಂಬೈನಲ್ಲಿ ಬೆಂಗಳೂರಿಗಿಂತ ಹೆಚ್ಚು ಟ್ರಾಫಿಕ್‌ ಸಮಸ್ಯೆ ಇದೆ. ಆದರೆ ಎಲ್ಲರೂ ಬೆಂಗಳೂರಿನ ಬಗ್ಗೆ ಹೆಚ್ಚು ಮಾತನಾಡುತ್ತಾರೆ. ಏಕೆಂದರೆ ಬೆಂಗಳೂರು ಇಂದು ಜಾಗತಿಕವಾಗಿ ಗುರುತಿಸಿಕೊಂಡಿದೆ. ಈಗ ಬಿಡುಗಡೆಗೊಳಿಸಿರುವ ಪೋರ್ಟಲ್‌ನಲ್ಲಿ ಹಳ್ಳಿಯಲ್ಲಿ ನೆಲೆಸಿರುವವರಿಂದ ಹಿಡಿದು ವಿದೇಶದಲ್ಲಿ ನೆಲೆಸಿರುವವರೂ ಸಲಹೆ ನೀಡಬಹುದಾಗಿದೆ” ಎಂದು ಹೇಳಿದ್ದಾರೆ.

Brand Bengaluru: Karnataka govt launches portal inviting suggestions on city development.
The Karnataka government on Wednesday launched a portal for people to share suggestions regarding the development of the city, under the title ‘Brand Bengaluru’. Stressing that public view was very important for the development of Bengaluru, Deputy Chief Minister DK Shivakumar said, “I have already held a meeting of all party MLAs from the city. I have discussed with brand ambassadors of Bengaluru from all sectors. Along with them, public opinion is also important. So we are starting a portal to collect opinions.”

ರಾಜಕೀಯ

ಬೆಂಗಳೂರು: ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದಂತೆ ತೆಲಂಗಾಣ ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಆಂಧ್ರದ ಮಾಜಿ ಮುಖ್ಯಮಂತ್ರಿ ರಾಜಶೇಖರ ರೆಡ್ಡಿ ಅವರ ಪುತ್ರಿ ಮತ್ತು ಆಂಧ್ರ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರು, ವೈಎಸ್ಆರ್ ತೆಲಂಗಾಣ ಪಕ್ಷದ ನಾಯಕಿಯಾಗಿದ್ದಾರೆ. ತೆಲಂಗಾಣದಲ್ಲಿ ಆಡಳಿತ ಪಕ್ಷದ ವಿರುದ್ಧ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ.

ರಾಜ್ಯಾದ್ಯಂತ ಪಾದಯಾತ್ರೆ ನಡೆಸಿ ಪಕ್ಷವನ್ನು ಬಲಪಡಿಸಿದ್ದಾರೆ. ಶರ್ಮಿಳಾ ಅವರ ಪಕ್ಷವು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನವಾದರೆ ತೆಲಂಗಾಣದಲ್ಲಿ ಕಾಂಗ್ರೆಸ್ ಬಲಗೊಳ್ಳಲಿದೆ. ಇದಕ್ಕಾಗಿ ಶರ್ಮಿಳಾ ಜೊತೆ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸುತ್ತಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದ ನಂತರ ಡಿ.ಕೆ.ಶಿವಕುಮಾರ್ ಅವರನ್ನು ಶರ್ಮಿಳಾ 2 ಬಾರಿ ಭೇಟಿ ಮಾಡಿದ್ದಾರೆ. ಆದರೆ, ‘ಇದು ಸೌಜನ್ಯದ ಭೇಟಿ, ಇದರಲ್ಲಿ ರಾಜಕೀಯ ಏನಿಲ್ಲ, ಡಿ.ಕೆ.ಶಿವಕುಮಾರ್ ಅವರು ನಮ್ಮ ಕುಟುಂಬದ ಸ್ನೇಹಿತರು’ ಎಂದು ಶರ್ಮಿಳಾ ಹೇಳಿದ್ದಾರೆ.

ತೆಲಂಗಾಣದಲ್ಲಿ ಈ ವರ್ಷ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಜ್ಯಸಭಾ ಸದಸ್ಯ. ರಾಮಚಂದ್ರ ರಾವ್ ಮತ್ತು ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶರ್ಮಿಳಾ ಅವರೊಂದಿಗೆ ಕಾಂಗ್ರೆಸ್ ಪಕ್ಷ ಸೇರಲು ನಿರಂತರವಾಗಿ ಮಾತುಕತೆ ನಡೆಸುತ್ತಿದ್ದಾರೆ.

ತರುವಾಯ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಪಕ್ಷಕ್ಕೆ ವಿಲೀನಗೊಳಿಸಲು ಶರ್ಮಿಳಾ ಒಪ್ಪಿಗೆ ಸೂಚಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಗುಸುಗುಸು ಇದೆ. ಹಾಗೆ ವಿಲೀನವಾದರೆ ತೆಲಂಗಾಣ ರಾಜ್ಯದ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಶರ್ಮಿಳಾ ಅವರನ್ನು ಘೋಷಿಸಲಾಗುವುದು ಎಂದು ಅವರ ಪಕ್ಷದವರು ಹೇಳುತ್ತಿದ್ದಾರೆ.

ಇದು ತೆಲಂಗಾಣ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ರಾಜಕೀಯ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  

“ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು. ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ.

ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇಂಥವರ ಕುರಿತು ನಾವು ಎಚ್ಚರದಿಂದಿರಬೇಕು. ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ.

ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ.

ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ” ಎಂದರು.

ರಾಜಕೀಯ

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳು ಆದ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು:
ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು; ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ; ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್‌ಗಳನ್ನು ಸೇವೆಯಿಂದ ಅಮಾನತು ಮಾಡುವಂತೆ ಸೂಚನೆ ನೀಡಿದ್ದಾರೆ. ಈಜಿಪುರ ಮೇಲ್ಸೇತುವೆ ಯೋಜನೆಯನ್ನು ತಕ್ಷಣ ಪೂರ್ಣಗೊಳಿಸಲು, ಅಗತ್ಯವಿರುವ ಆಡಳಿತಾತ್ಮಕ ನಿರ್ಣಯಗಳನ್ನು ತಕ್ಷಣ ಕೈಗೊಳ್ಳಬೇಕು ಎಂದೂ ಆದೇಶ ಮಾಡಿದ್ದಾರೆ.

ಬೆಂಗಳೂರಿನ ಮುಂದಿನ 20 ವರ್ಷಗಳ ಅಗತ್ಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಒಟ್ಟಾರೆಯಾಗಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಚಾಲನೆ ನೀಡಿದ್ದಾರೆ! ಬೆಂಗಳೂರಿನ ಕೆಲವೆಡೆ ಹೋರ್ಡಿಂಗ್‌ಗಳನ್ನು ಅಳವಡಿಸಲು ಅನುಮತಿ ನೀಡಿದ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.

ರಾಜಕೀಯ

ಬೆಂಗಳೂರು: “ಮೇಕೆದಾಟು ಯೋಜನೆಗೆ ಹಿಂದಿನ ಸರ್ಕಾರ ಒಂದು ಸಾವಿರ ಕೋಟಿ ರೂ. ಘೋಷಿಸಿದೆ. ಆದರೆ, ಖರ್ಚು ಮಾಡಿಲ್ಲ. ಯೋಜನೆಯನ್ನು ಸಾಕಾರಗೊಳಿಸಲು ಆ ಹಣ ಬಳಕೆಯಾಗಲಿದೆ. ತಮಿಳುನಾಡಿನ ನಮ್ಮ ಸಹೋದರರ ಮೇಲೆ ಕೋಪವಾಗಲೀ, ದ್ವೇಷವಾಗಲೀ ಇಲ್ಲ. ಅವರೂ ನಮ್ಮ ಅಣ್ಣತಮ್ಮಂದಿರಂತೆ.

ಕರ್ನಾಟದಲ್ಲಿ ನೆಲೆಸಿರುವ ತಮಿಳಿಗರು ಹಾಗೂ ತಮಿಳುನಾಡಿನಲ್ಲಿ ನೆಲೆಸಿರುವ ಕನ್ನಡಿಗರು ಕಾವೇರಿ ನೀರು ಕುಡಿಯುತ್ತಿದ್ದಾರೆ. ಕೋರ್ಟು, ಕಚೇರಿ ಅಲೆದದ್ದು ಸಾಕು. ಮೇಕೆದಾಟು ಯೋಜನೆಯಿಂದ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಕಾವೇರಿ ಪಾತ್ರದಲ್ಲಿರುವ ರೈತರಿಗೆ ನೀರಾವರಿ ಹಾಗೂ ಶ್ರೀಸಾಮಾನ್ಯರಿಗೆ ಕುಡಿಯುವ ನೀರು ಎರಡೂ ಲಭಿಸಲಿದೆ.

ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ. ನಿಮ್ಮಲ್ಲಿ ಹೃದಯ ಶ್ರೀಮಂತಿಕೆ ಇದೆ; ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ; ಒಬ್ಬರಿಗೊಬ್ಬರು ಸಹಕರಿಸುತ್ತಾ ಜೊತೆಯಾಗಿ ಸಾಗೋಣ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.