ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಿದ್ದರಾಮಯ್ಯ Archives » Page 5 of 13 » Dynamic Leader
October 16, 2024
Home Posts tagged ಸಿದ್ದರಾಮಯ್ಯ (Page 5)
ರಾಜಕೀಯ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಸಂಸತ್ತಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಹೇಳಿದರು.

ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು, ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಆದರೆ, ಎಂ.ಲಕ್ಷ್ಮಣ್ ಅವರು ಅಪ್ಪಟ ಒಕ್ಕಲಿಗರು. ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ, ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ನಮ್ಮ ನಾಡಿಗೆ ಪ್ರವಾಹ ಬಂದಾಗ ನರೇಂದ್ರ ಮೋದಿ ಬರಲಿಲ್ಲ; ಬರಗಾಲ ಬಂದಾಗಲೂ ಮೋದಿ ಬರಲಿಲ್ಲ. ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ; ಚುನಾವಣೆ ಬಂತು ನೋಡಿ – ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ ಎಂದು ವ್ಯಂಗ್ಯವಾಡಿದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ದೇವೇಗೌಡರು ಸಿದ್ದರಾಮಯ್ಯರಿಗೆ ಗರ್ವ ಇದೆ ಎನ್ನುತ್ತಿದ್ದಾರೆ.

ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ. ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್ ನವರು, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದು ಪುನರುಚ್ಚಿಸಿದರು.

ಆದ್ದರಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಬೇಕು. ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ ಎಂದು ಸವಾಲೆಸದರು.

ಪಶು ಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್,‌ ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ಮತ್ತು ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರುಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರು ಹಾಗೂ ಬ್ಲಾಕ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ

ಬೆಂಗಳೂರು: ನರೇಂದ್ರ ಮೋದಿ ಸರ್ಕಾರ ಜುಜುಬಿ ರೂ.12,000 ಕೊಟ್ಟು ಅದಕ್ಕೆ ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದು ಹೆಸರಿಟ್ಟಿರುವುದೇ ನಾಚಿಕೆಗೇಡು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪ್ರತಿ ಫಲಾನುಭವಿಗೆ ಒಂದೂವರೆ ಲಕ್ಷ ರೂಪಾಯಿ ಕೊಡುತ್ತದೆ. ರಾಜ್ಯ ಸರ್ಕಾರ 1 ಲಕ್ಷದ 28 ಸಾವಿರ ಕೊಡುತ್ತಿತ್ತು. ಉಳಿದ 3.80 ಲಕ್ಷ ರೂಪಾಯಿಯನ್ನು ಫಲಾನುಭವಿ ಕೊಡಬೇಕಿತ್ತು.

ಕೇಂದ್ರ ಸರ್ಕಾರ ಈ ಯೋಜನೆಯಡಿ ನೀಡಲಾದ ಪ್ರತಿ ಮನೆಗೆ 18% ರಂತೆ ಜಿಎಸ್‌ಟಿ ವಸೂಲಿ ಮಾಡುತ್ತದೆ. ಅಂದರೆ ಪ್ರತಿ ಕೊಳೆಗೇರಿ ಮನೆಗೆ 1 ಲಕ್ಷದ 38 ಸಾವಿರ ರೂಪಾಯಿಯನ್ನು ಜಿಎಸ್‌ಟಿ ಹೆಸರಲ್ಲಿ ಸಂಗ್ರಹಿಸುತ್ತದೆ. ಒಂದೂವರೆ ಲಕ್ಷ ರೂಪಾಯಿ ಸಹಾಯಧನ ಕೊಟ್ಟು, ಅದರಲ್ಲಿ 1 ಲಕ್ಷದ 38 ಸಾವಿರ ರೂಪಾಯಿ ವಾಪಾಸ್ ವಸೂಲಿ ಮಾಡಿದರೆ ಕೊಟ್ಟಿದ್ದು 12 ಸಾವಿರ ರೂಪಾಯಿ ಮಾತ್ರ.

ಕೊಳೆಗೇರಿ ನಿವಾಸಿಗಳಿಂದಲೂ 18% ಜಿಎಸ್‌‌ಟಿ ಸುಲಿಗೆ ಮಾಡುವ ಕ್ರಮ ಬಹಳ ಬೇಸರ ತಂದಿತು. ಹೀಗಾಗಿ ಪ್ರತಿಯೊಬ್ಬ ಫಲಾನುಭವಿ ಕಟ್ಟಬೇಕಿದ್ದ ಅವರ ಪಾಲಿನ 3 ಲಕ್ಷ 80 ಸಾವಿರ ರೂಪಾಯಿಯಲ್ಲಿ 1 ಲಕ್ಷ ಮಾತ್ರ ಅವರಿಂದ ಕಟ್ಟಿಸಿಕೊಂಡು ಉಳಿದ ಹಣವನ್ನು ನಮ್ಮ ಸರ್ಕಾರದಿಂದಲೇ ಕಟ್ಟಲು ನಿರ್ಧರಿಸಿದೆ. ಹೀಗಾಗಿ ಪ್ರತಿ ಕೊಳೆಗೇರಿ ಮನೆಗೆ 4 ಲಕ್ಷ ರೂಪಾಯಿಗೂ ಹೆಚ್ಚಿನ ಹಣವನ್ನು ನಮ್ಮ ರಾಜ್ಯ ಸರ್ಕಾರ ಕಟ್ಟುತ್ತಿದೆ.

ನರೇಂದ್ರ ಮೋದಿ ಸರ್ಕಾರ ಜುಜುಬಿ ರೂ.12,000 ಕೊಟ್ಟು ಅದಕ್ಕೆ ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದು ಹೆಸರಿಟ್ಟಿರುವುದೇ ನಾಚಿಕೆಗೇಡು ಎಂದು ಕಿಡಿಕಾರಿದ್ದಾರೆ.

ರಾಜ್ಯ

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಪುಟ್ಟಣ್ಣನವರು ಜಯಗಳಿಸಿದ ಹಿನ್ನೆಲೆಯಲ್ಲಿ ಕೆಂಗೇರಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿರುವುದು, ನರೇಂದ್ರ ಮೋದಿ ಅವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಆಗಿದೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಬಯಸುತ್ತೇನೆ. ಬಿಜೆಪಿಗೆ ಯಾವತ್ತೂ ವಿರುದ್ಧವಾಗಿರುತ್ತೇವೆ” ಎಂದು ಈ ಹಿಂದೆ ದೇವೇಗೌಡರು ಹೇಳಿದ್ದುದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

“ಈಗ ತಮ್ಮ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇಂದು ನಾಡಿನ ಜನತೆ ಪ್ರಜ್ಞಾವಂತರಾಗಿದ್ದಾರೆ. ಇವರ ಹೇಳಿಕೆಗಳನ್ನು ಪರಿಶೀಲಿಸಿ ತುಲನೆ ಮಾಡುವಷ್ಟು ತಿಳಿವಳಿಕೆ ನಾಡಿನ ಜನರಿಗೆ ಬಂದಿದೆ. ರಾಜಕೀಯವಾಗಿ ದೇವೇಗೌಡರು ತಮ್ಮ ಕುಟುಂಬದ ಉಳಿವಿಗಾಗಿ ಯಾವುದೇ ನಿರ್ಧಾರಕ್ಕೆ ಬಂದರೂ ಜನರು ಕಣ್ಣುಮುಚ್ಚಿಕೊಂಡು ಅವರನ್ನು ಬೆಂಬಲಿಸಬೇಕು ಎನ್ನುವ ಸಂದರ್ಭ ಈಗ ಇಲ್ಲ” ಎಂದು ಹೇಳಿದರು.

“ಹಿಂದೆ ನಾನು ಜೆಡಿಎಸ್ ನಲ್ಲಿದ್ದಾಗ, ಪುಟ್ಟಣ್ಣನವರಿಗೆ ಶಿಕ್ಷಕರು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದ್ದು, ಚುನಾವಣೆಗೆ ನಿಲ್ಲುವುದಾಗಿ ತಿಳಿಸಿದ್ದರು. 2002ರಲ್ಲಿ ಜನರ ಆಶೀರ್ವಾದದಿಂದ ಜಯಗಳಿಸಿದರು. ನಂತರ ಐದು ಬಾರಿ ಗೆದ್ದಿದ್ದಾರೆ. ಜನರ ಧ್ವನಿಯಾಗಿ ಸಮರ್ಥವಾಗಿ ಕೆಲಸ ಮಾಡಿದ್ದು, ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದರೂ ಅವರನ್ನು ಬೆಂಬಲಿಸಿದ ಶಿಕ್ಷಕ ಸಮುದಾಯದ ಪ್ರಜ್ಞಾವಂತಿಕೆಗೆ ಮೆಚ್ಚುವಂತದ್ದು” ಎಂದು ಹೇಳಿದರು.

“ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್ ಅವರನ್ನು ಕಣಕ್ಕೆ 4 ಬಾರಿ ಇಳಿಸಲಾಗಿದೆ. ಈ ಕ್ಷೇತ್ರದಲ್ಲಿ ಅವರು ಖಂಡಿತ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ಬಿಜೆಪಿಯವರು ನರೇಂದ್ರ ಮೋದಿಯವರ ಹೆಸರಿನಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆಯೇ ಹೊರತು, ಬಿಜೆಪಿಯವರಿಗೆ ಜನರ ಬಳಿ ಹೋಗಲು ಕಾರಣಗಳೇ ಇಲ್ಲ. ನರೇಂದ್ರ ಮೋದಿಯವರ ಹೆಸರಿನ ಮೇಲೆ ಗೆಲ್ಲುತ್ತೇವೆ ಎಂದು  ಬಿಜೆಪಿ ಭಾವಿಸಿದೆ. ನರೇಂದ್ರ ಮೋದಿಯವರು ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಾದಯಾತ್ರೆ ಮಾಡಿದ್ದರೂ ನಮಗೆ 136 ಸ್ಥಾನಗಳು ದೊರೆತವು” ಎಂದು ಸಮರ್ಥಿಸಿಕೊಂಡರು.

“ಮೋದಿಯವರು ಪ್ರಚಾರ ಮಾಡಿದ್ದ ಯಾವ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲೇ ಇಲ್ಲ. ಹೀಗಾಗಿ ನರೇಂದ್ರ ಮೋದಿಯವರ ಹೆಸರಿನ ಮೇಲೆಯೇ ಗೆಲ್ಲುತ್ತೇವೆ ಎನ್ನುವ ಇವರಷ್ಟು ಮೂರ್ಖರು ಯಾರೂ ಇಲ್ಲ. ಕೊಟ್ಟ ಮಾತಿನಂತೆ ನಡೆದುಕೊಳ್ಳವವರು, ಕೆಲಸ ಮಾಡಿರುವವರಿಗೆ ತಾನೇ ಕೂಲಿ ಕೊಡುವುದು. ಗೇಯುವ ಎತ್ತಿಗೆ ಹುಲ್ಲು ಹಾಕಬೇಕು. ಕಳ್ಳ ಎತ್ತಿಗೆ ಹುಲ್ಲು ಹಾಕಬಾರದು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅವರು 28ಕ್ಕೆ 28 ಗೆಲ್ಲುತ್ತೇವೆ ಎಂದುಕೊಂಡಿದ್ದಾರೆ” ಎಂದು ವ್ಯಂಗ್ಯವಾಡಿದರು.

“ದೇವೇಗೌಡರು ನರೇಂದ್ರ ಮೋದಿ ಅವರನ್ನು ಈಗ ಹೊಗಳಿದ್ದೆ ಹೊಗಳಿದ್ದು. ನನಗೂ ಅವರಿಗೂ ಅವಿನಾಭಾವ ಸಂಬಂಧ ಇದೆ, ಜನ್ಮ ಜನ್ಮದ ಸಂಬಂಧವಿದೆ ಅಂತಲೂ ಎನ್ನುತ್ತಾರೆ. ಗೌಡರು ಹೀಗೇಕಾದರು ಎಂದು ಆಶ್ಚರ್ಯವಾಗಿದೆ. ಇದೇ ದೇವೇಗೌಡರು ನರೇಂದ್ರ ಮೋದಿಯವರು ಪುನಃ ಪ್ರಧಾನಿಯಾದರೆ ನಾನು ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಹೊಗಳುತ್ತಾರೆ. ಇದೆಂತಹ ದ್ವಂದ್ವ? ದೇಶದ ಪ್ರಧಾನಮಂತ್ರಿಯಾಗಿದ್ದವರು ಈ ರೀತಿ ಹೇಳುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ” ಆಶ್ಚರ್ಯ ವ್ಯಕ್ತಪಡಿಸಿದರು.

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಬೆಜೆಪಿ ಕೇವಲ ನಿಮ್ಮ ಭಾವನೆಗಳನ್ನು ಕೆರಳಿಸುತ್ತದೆ – ನಾವು ನಿಮ್ಮ ಬದುಕಿಗೆ ಬೇಕಾದ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ. ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಹಿಂದಿನ ಸರ್ಕಾರ ಏಕೆ ಮಾಡಲಿಲ್ಲ? ಕೇವಲ ನಿಮ್ಮನ್ನು ಭಾವನಾತ್ಮಕವಾಗಿ ಮರುಳು ಮಾಡಿದರೆ ಸಾಕಾ? ನಾವು ನಿಮ್ಮನ್ನು ದೇವರು – ಧರ್ಮದ ಹೆಸರಲ್ಲಿ ಮರುಳು ಮಾಡಿ ಅಧಿಕಾರ ನಡೆಸುವುದಿಲ್ಲ. ಅನ್ನ, ಆರೋಗ್ಯ, ಅಕ್ಷರ, ಸೂರು, ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಹೇಳಿದರು.

3 ಸಾವಿರ ಕೋಟಿ ರೂಪಾಯಿಯನ್ನು ಕೆ.ಸಿ.ವ್ಯಾಲಿ ಮತ್ತು ಹೆಚ್.ಎನ್.ವ್ಯಾಲಿಗೆ ನಾವು ಖರ್ಚು ಮಾಡಿದ್ದೆವು ಮತ್ತು ಈಗ ವೃಷಭಾವತಿ ಯೋಜನೆಯನ್ನು 2,240 ಕೋಟಿ ಖರ್ಚು ಮಾಡಿ ಜಾರಿ ಮಾಡುತ್ತಿದ್ದೇವೆ. ಇದರಿಂದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ. ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ಇದರಿಂದ ನಾಲ್ಕೂ ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ಹೇಳಿದರು.

ಶಾಸಕ ಶ್ರೀನಿವಾಸ್ ಅವರು ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ ರೂ.850 ಕೋಟಿಗೂ ಹೆಚ್ಚು ಹಣವನ್ನು ಕ್ಷೇತ್ರಕ್ಕೆ ತಂದಿದ್ದಾರೆ. ಶ್ರೀನಿವಾಸ್ ಬಹಳ ಕ್ರಿಯಾಶೀಲ ಶಾಸಕ. ಹಿಡಿದ ಕೆಲಸ ಬಿಡಲ್ಲ. ನನ್ನ ಬಳಿಗೆ ಬಂದಾಗೆಲ್ಲಾ ನೆಲಮಂಗಲದ ಅಭಿವೃದ್ಧಿ ಬಗ್ಗೆಯೇ ಚರ್ಚೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ಹಣ ತರುತ್ತಿದ್ದಾರೆ. ಆದ್ದರಿಂದ ಶ್ರೀನಿವಾಸ್ ಅವರನ್ನು ಶಾಶ್ವತವಾಗಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದ ಜನರಿಗೆ ಅನ್ನ ಕೊಡಬೇಕು. ಅದಕ್ಕಾಗಿ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿ ಕೊಡ್ತೀವಿ, ನಮಗೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದೆವು. ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ ಅನ್ನ ಕೊಡಲು ನಿರಾಕರಿಸಿತು. ಬಡವರ ಅನ್ನ ವಿರೋಧಿಸುವ ಬಿಜೆಪಿಗೆ ನಾಚಿಕೆ ಕೂಡ ಆಗಲಿಲ್ಲ. ಬಳಿಕ ನಾವೇ ಅಕ್ಕಿ ಬದಲಿಗೆ ಹಣವನ್ನು ಪ್ರತಿಯೊಬ್ಬರ ಖಾತೆಗೆ ಹಾಕಿದರೆ, ಈ ಫಲಾನುಭವಿಗಳನ್ನು ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಬಡವರನ್ನು ಅವಮಾನಿಸುವುದು ಬಿಜೆಪಿಗೆ ಚಾಳಿ ಆಗಿಬಿಟ್ಟಿದೆ. ಬಡವರ ಹಸಿವನ್ನು ಹೀಯಾಳಿಸುವುದನ್ನು ಅವರು ತಕ್ಷಣ ನಿಲ್ಲಿಸಬೇಕು ಎಂದು ಕಿಡಿಕಾರಿದರು.

ರಾಜ್ಯ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ?

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.

ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ನಾಯಕರು ಈ ಬಗ್ಗೆ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ? ಎಂದು ಪ್ರಶ್ನಿಸಿದ್ದಾರೆ.

2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು? ಇದು ದೇಶದ ರಕ್ಷಣೆಯ ಹೊಣೆ ಹೊತ್ತಿರುವ ಎನ್.ಐ.ಎ, RAW ಗಳ ವೈಫಲ್ಯವಲ್ಲವೇ? ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಸಾವು ನೋವಿನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು ಎಂದು ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು ಹಾಗೂ ಹಿಂದೊಮ್ಮೆ ಬಿಜೆಪಿ ಕಚೇರಿ ಮುಂದೆಯೇ ಬಾಂಬ್ ಸ್ಫೋಟವಾಗಿತ್ತು. ಆಗ ಬಿಜೆಪಿಯೇ ಅಧಿಕಾರದಲ್ಲಿದ್ದರು. ಅವರಂತೆಯೇ ಇದನ್ನು ನಾವು ರಾಜಕೀಯ ದೃಷ್ಟಿಯಿಂದ ನೋಡಿದೆವಾ? ಎಂದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯ

ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ರಾಜ್ಯದಾದ್ಯಂತ ನಿರ್ಮಿಸಲಾದ 36,789 ಮನೆಗಳನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬೆಂಗಳೂರು ನಗರದ ಕೆ.ಆರ್.ಪುರಂನಲ್ಲಿರುವ ನಗರೇಶ್ವರ ನಾಗೇನಹಳ್ಳಿಯಲ್ಲಿ ಉದ್ಘಾಟಸಿ, ಫಲಾನುಭವಿಗಳಿಗೆ ಸ್ವಾಧೀನ ಪತ್ರ ವಿತರಿಸಿದರು.

ಇದನ್ನೂ ಓದಿ: ಕೊಳಗೇರಿ ಜನರ ಮನೆಗಳನ್ನು ಶಾಸಕ ಬೈರತಿ ಬಸವರಾಜ್ ಹಿಂಬಾಲಕರಿಗೆ ಹಂಚಿಕೆ ಮಾಡುತ್ತಿರುವ ಕೊಳಗೇರಿ ಮಂಡಳಿಯ ಭ್ರಷ್ಟ ಅಧಿಕಾರಿಗಳು!

ನಗರೇಶ್ವರ ನಾಗೇನಹಳ್ಳಿಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ನಿರ್ಮಿಸಿರುವ ಒಟ್ಟು 768+294=1062 ಮನೆಗಳ ಕಾಮಗಾರಿ ಇನ್ನು ಪೂರ್ಣಗೊಂಡಿಲ್ಲ. ನಿರ್ಮಾಣ ಹಂತದಲ್ಲಿರುವ ಸದರಿ ಮನೆಗಳ ಫಲಾನುಭವಿಗಳು ಯಾರು ಕೂಡ ಘೋಷಿತ ಕೊಳಗೇರಿ ನಿವಾಸಿಗಳಾಗಿರುವುದಿಲ್ಲ. ಅಪೂರ್ಣ ಸ್ಥಿತಿಯಲ್ಲಿರುವ ಕೊಳಗೇರಿ ಜನರ ಮನೆಗಳಿಗೆ ಬಣ್ಣ ಬಳಿದು ಉದ್ಘಾಟಸಿದ್ದೂ ಅಲ್ಲದೇ ಇತರ ವರ್ಗದವರಿಗೆ ಸ್ವಾಧೀನ ಪತ್ರಗಳನ್ನು ಸಹ ವಿತರಿಸಲಾಗಿದೆ.

ಇದನ್ನೂ ಓದಿ: ಮನೆಗಳ ಹಂಚಿಕೆಯಲ್ಲಿ ಅಕ್ರಮ: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ವಿರುದ್ಧ ಲೋಕಾಯುಕ್ತರಲ್ಲಿ ದೂರು! 

ಸದರಿ ಮನೆಗಳ ಫಲಾನುಭವಿಗಳೆಲ್ಲರೂ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಬಸವರಾಜ್ ಅವರ ಹಿಂಬಾಲಕರು, ಅವರ ಪಕ್ಷದ (ಬಿಜೆಪಿ) ಕಾರ್ಯಕರ್ತರು ಮತ್ತು ಅನುಕೂಲಸ್ಥ ವರ್ಗದ ಜನರಾಗಿದ್ದಾರೆ. ಇಂತಹವರಿಗೆ ಕೊಳಗೇರಿ ಜನರ ಮನೆಗಳನ್ನು ಹಂಚಿಕೆ ಮಾಡಲು ಮಂಡಳಿಯ ನಿಯಮಗಳಲ್ಲಿ ಅವಕಾಶವಿಲ್ಲ. ಇದರ ಬಗ್ಗೆ ಈಗಾಗಲೇ ಲೋಕಾಯುಕ್ತರಲ್ಲಿ ದೂರು ದಾಖಲಾಗಿದೆ. ಆದರೂ ಸದರಿ ಮನೆಗಳನ್ನು ಮುಖ್ಯಮಂತ್ರಿಗಳಿಂದ ಉದ್ಘಾಟನೆ ಮಾಡಲಾಗಿದೆ.

ಉದ್ಯೋಗ ರಾಜ್ಯ

ಬೆಂಗಳೂರು: ‘2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ನಿಜ ಹೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು?’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.

‘ನರೇಂದ್ರ ಮೋದಿಯವರೇ, ನಿಮ್ಮದೇ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಜಿತೇಂದರ್ ಸಿಂಗ್ ಅವರು 2022ರ ಜುಲೈ ನಲ್ಲಿ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ “2014-15 ಮತ್ತು 2021-22ರ ಅವಧಿಯ ನಡುವೆ ಕೇವಲ 7 ಲಕ್ಷ ಹೊಸ ಉದ್ಯೋಗಗಳು ಮಾತ್ರ ಸೃಷ್ಟಿಯಾಗಿತ್ತು ಎಂದು ಹೇಳಿದ್ದರು. ಅಂತಿಮ ಸತ್ಯ ಇದೇ ಇರಬಹುದಾ?’ ಎಂದು ಕೇಳಿದ್ದಾರೆ.

‘ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲುವ ಆತ್ಮವಿಶ್ವಾಸ ವ್ಯಕ್ತಪಡಿಸುವ ಪ್ರಧಾನಿ ನರೇಂದ್ರ ಮೋದಿ ಅವರು ಈಗ ತರಾತುರಿಯಿಂದ ಉದ್ಯೋಗ ಮೇಳಗಳನ್ನು ಆಯೋಜಿಸಲು ಕಾರಣ ಯುವಜನರ ಮೇಲಿನ ಕಾಳಜಿಯೇ? ಇಲ್ಲವೇ ಉದ್ಯೋಗ ಇಲ್ಲದೆ ರೊಚ್ಚಿಗೆದ್ದಿರುವ ನಿರುದ್ಯೋಗಿ ಯುವಜನರ ಆಕ್ರೋಶವೇ?

ಪ್ರಧಾನಿಯವರೇ, ಈಗ ನಿಮ್ಮದೇ ಬಿಜೆಪಿ ಸರ್ಕಾರದ ಅಧಿಕೃತ ಅಂಕಿಅಂಶಗಳನ್ನು ಮುಂದಿಟ್ಟುಕೊಂಡು ಮಾತಾಡೋಣ. 2017-18ರ ಎನ್.ಎಸ್.ಎಸ್.ಒ ವರದಿಯ ಪ್ರಕಾರ ಕಳೆದ 45 ವರ್ಷಗಳಲ್ಲೇ ದೇಶದ ನಿರುದ್ಯೋಗ ಪ್ರಮಾಣ ಅತಿ ಗರಿಷ್ಠ ಮಟ್ಟಕ್ಕೆ, ಅಂದರೆ 6.1 ಗೆ ತಲುಪಿದೆ. 2011-12ರಲ್ಲಿ ಈ ಪ್ರಮಾಣ ಶೇ 2.2 ಆಗಿತ್ತು.

ನೆನಪಿರಲಿ, ಕೋವಿಡ್ ಕಾಲದಲ್ಲಿ ನಿರುದ್ಯೋಗದ ಪ್ರಮಾಣ ಜಗತ್ತಿನಾದ್ಯಂತ ಹೆಚ್ಚಾಗಿದ್ದು ನಿಜ. ಆದರೆ ನಮ್ಮಲ್ಲಿ ಇದು 2014-15ರಿಂದಲೇ ಇದು ಪ್ರಾರಂಭವಾಗಿತ್ತು. 2016ರಲ್ಲಿ ನಡೆದ ನೋಟು ಅಮಾನ್ಯೀಕರಣದಿಂದ ಕೈಗಾರಿಕೆಗಳೆಲ್ಲ ಮುಚ್ಚಿಹೋಗಿ ನಿರುದ್ಯೋಗ ಪ್ರಮಾಣ ಮಿತಿ ಮೀರತೊಡಗಿದ್ದನ್ನು ಹಲವಾರು ಆರ್ಥಿಕ ತಜ್ಞರೇ ವಿವರಿಸಿ ಹೇಳಿದ್ದಾರೆ. ಈ ಕಾರಣಕ್ಕಾಗಿಯೇ, 2017-18ರ ಎನ್.ಎಸ್.ಎಸ್.ಒ ಸರ್ವೇಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲು ವಿಳಂಬ ಮಾಡಿತ್ತೇ?

ವಿಶ್ವಬ್ಯಾಂಕ್ 2022ರಲ್ಲಿ ನೀಡಿದ್ದ ವರದಿ ಪ್ರಕಾರ ನಿರುದ್ಯೋಗದ ಪ್ರಮಾಣ ಪಾಕಿಸ್ತಾನದಲ್ಲಿ ಶೇ.11.3ರಷ್ಟಿದ್ದರೆ, ಬಾಂಗ್ಲಾದೇಶದಲ್ಲಿ 12.9 ರಷ್ಟಿತ್ತು. ಭೂತಾನ್ ನಲ್ಲಿ ಶೇ. 14.4 ರಷ್ಟಿದ್ದರೆ, ಚೀನಾದಲ್ಲಿ 13.2 ರಷ್ಟಿತ್ತು. ಆದರೆ, ಅದೇ ಅವಧಿಯಲ್ಲಿ ನಮ್ಮ ಭಾರತದಲ್ಲಿ ನಿರುದ್ಯೋಗ ದರ ಶೇ 23.22 ರಷ್ಟಿತ್ತು. ಇತ್ತೀಚೆಗೆ ಅಂತಾರಾಷ್ಟ್ರೀಯ ಲೇಬರ್ ಆರ್ಗನೈಸೆಷನ್ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ ನಿರುದ್ಯೋಗದ ಪ್ರಮಾಣದಲ್ಲಿ ನಮ್ಮ ದೇಶ, ನೆರೆಯ ದೇಶಗಳಾದ ಮ್ಯಾನ್ಮರ್, ಬಾಂಗ್ಲಾ, ಮಾರಿಷಸ್ ಗಿಂತಲೂ ಕೆಳಗಿನ ಸ್ಥಾನದಲ್ಲಿರುವುದು ನಿಜವಲ್ಲವೇ ನರೇಂದ್ರ ಮೋದಿ ಅವರೇ?’ ಎಂದು ವ್ಯಂಗ್ಯವಾಡಿದ್ದಾರೆ.

‘ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್‌ ಎಕನಾಮಿ ವರದಿ ಪ್ರಕಾರ ದೇಶದ ನಿರುದ್ಯೋಗ ಪ್ರಮಾಣ 2014ರಲ್ಲಿ 5.44% ಇದ್ದದ್ದು 2023ರ ಅಕ್ಟೋಬರ್‌ನಲ್ಲಿ 10.05% ತಲುಪಿದೆ. ಇನ್ನು ವಯಸ್ಸಿನ ಆಧಾರದಲ್ಲಿ ನೋಡೋದಾದ್ರೆ 20 ರಿಂದ 24ರ ವಯೋಮಾನ – 43.65% ನಿರುದ್ಯೋಗಿಗಳಿದ್ದರೆ; 25 ರಿಂದ 29 ವಯೋಮಾನದವರಲ್ಲಿ -14.33%; 30 ರಿಂದ 34 ವಯೋಮಾನದವರಲ್ಲಿ -2.49% ನಿರುದ್ಯೋಗಿಗಳಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರವೇ ಪ್ರತಿ ಮೂರು ತಿಂಗಳಿಗೊಮ್ಮೆ ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ (ಪಿಎಲ್ಎಫ್ ಎಸ್) ಪ್ರಕಾರ 2019 ರಿಂದ 2022 ರವರೆಗಿನ ಅವಧಿಯಲ್ಲಿ ದೇಶದ ನಿರುದ್ಯೋಗ ಪ್ರಮಾಣ 22.9% ಏರಿಕೆಯಾಗಿದೆ. ಏರಿಕೆಯಾಗಿರುವುದು ಉದ್ಯೋಗಗಳ ಸಂಖ್ಯೆ ಅಲ್ಲ, ಸುಳ್ಳುಗಳ ಸಂಖ್ಯೆ ಅಷ್ಟೆ ಅಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

‘2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ! ಕರ್ನಾಟಕವೊಂದರಲ್ಲೇ 2021ರಲ್ಲಿ 1,129 ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರಿಗೆಲ್ಲಿಯ ರೋಜಗಾರ್ ಮೇಳ ನರೇಂದ್ರ ಮೋದಿ ಅವರೇ?

ಉದ್ಯೋಗ ಅರಸಿ, ದೇಶದಿಂದ ವಿದೇಶಕ್ಕೆ ವಲಸೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಫ್ರಾನ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದ ವಿಮಾನದಲ್ಲಿ 66 ಮಂದಿ ಗುಜರಾತಿಗಳಿದ್ದರು. ತಮ್ಮನ್ನು ಗುಜರಾತಿನಿಂದ ಅಮೆರಿಕಾಗೆ ಅಕ್ರಮವಾಗಿ ಕರೆದೊಯ್ಯಲು ಏಜೆಂಟ್ ಗಳಿಗೆ ತಲಾ 60-80 ಲಕ್ಷ ರೂಪಾಯಿಗಳನ್ನು ನೀಡಿದ್ದರು ಎಂಬ ಅಂಶ ವಿಚಾರಣೆಯಲ್ಲಿ ಬಹಿರಂಗವಾಗಿತ್ತು.

2018 ರಿಂದ 2019ರ ವರೆಗೆ 8,027 ಮಂದಿ, 2019 ರಿಂದ 2020ರ ವರೆಗೆ 19,883 ಮಂದಿ, 2020 ರಿಂದ 2021ರ ವರೆಗೆ 30,662 ಮಂದಿ, 2021 ರಿಂದ 2022ರ ವರೆಗೆ 63,927 ಮಂದಿ ಭಾರತೀಯರು ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿ ಬಂಧನಕ್ಕೊಳಗಾಗಿದ್ದಾರೆ. ಈ ಅಕ್ರಮ ವಲಸಿಗರ ಪೈಕಿ ಬಹುಪಾಲು ಜನರು ಗುಜರಾತ್ ಮತ್ತು ಪಂಜಾಬ್ ರಾಜ್ಯಗಳಿಗೆ ಸೇರಿದವರು ಎಂಬುದು ಗಮನಿಸಬೇಕಾದ ಅಂಶ ಅಲ್ಲವೇ?

ಇದು ಹೊಸ ಉದ್ಯೋಗಗಳ ಸೃಷ್ಟಿಯ ಕಥೆಯಾದರೆ, ಇರುವ ಸರ್ಕಾರಿ ಉದ್ಯೋಗಗಳ ಭರ್ತಿಯಲ್ಲೂ ತೀರಾ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಬಿಜೆಪಿ ಆಡಳಿತದಲ್ಲಿ ವಿವಿಧ ಇಲಾಖೆಯ 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಸಣ್ಣಪುಟ್ಟ ಹುದ್ದೆಗಳಿಗೂ ಸ್ನಾತಕೋತ್ತರ ಪದವೀಧರ, ಬಿಇ, ಎಂಬಿಬಿಎಸ್ ಪದವಿ ಪಡೆದವರು ಅರ್ಜಿ ಸಲ್ಲಿಸುವ ವಿದ್ಯಮಾನ ಇತ್ತೀಚೆಗೆ ಸಾಮಾನ್ಯವಾಗುತ್ತಿದೆ. ದೇಶದ ಯುವಜನರು ನಿರುದ್ಯೋಗದ ದಳ್ಳುರಿಯಲ್ಲಿ ಬೇಯ್ತಾ ಇದ್ದಾರೆ. ಕಳೆದ ವರ್ಷಾಂತ್ಯದಲ್ಲಿ ಸಂಸತ್ತಿನ ಭದ್ರತೆಯನ್ನು ಬೇಧಿಸಿ, ಒಳನುಸುಳಿ ಹೊಗೆಬಾಂಬ್ ಸಿಡಿಸುವ ಮಟ್ಟಿಗೆ ಹತಾಶರಾಗಿದ್ದ ಯುವಕರು ಕೂಡಾ ನಿರುದ್ಯೋಗಕ್ಕೆ ಬಲಿಯಾದವರಲ್ಲವೇ  ನರೇಂದ್ರ ಮೋದಿ ಅವರೇ?

‘ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಉದ್ಯೋಗ ಭರ್ತಿಗಾಗಿ ಸರ್ಕಾರಗಳು ನಿರ್ದಿಷ್ಟ ನೇಮಕಾತಿ ಪ್ರಕ್ರಿಯೆ ನಡೆಸುತ್ತವೆ. ಇದಕ್ಕಾಗಿಯೇ ಯುಪಿಎಸ್‌ಸಿ, ಎಸ್ಎಸ್‌ಸಿ, ಲೋಕಸೇವಾ ಆಯೋಗಗಳಗಳಿವೆ. ಹೀಗಿರುವಾಗ ಸಾಕ್ಷಾತ್ ಪ್ರಧಾನಿಯವರೇ ವೀಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳ ವಿತರಿಸುತ್ತಿರುವುದು ಯಾವ ಉದ್ಯೋಗಗಳಿಗೆ? ರೋಜ್ ಗಾರ್ ಮೇಳದಲ್ಲಿ ನೀಡಲಾಗುತ್ತಿರುವ ಉದ್ಯೋಗಗಳು ಯಾವುದು? ಇವುಗಳು ಖಾಯಂ ಉದ್ಯೋಗವೇ?ತಾತ್ಕಾಲಿಕವೇ? ಅರೆಕಾಲಿಕವೇ? ಪೂರ್ಣಕಾಲಿಕವೇ? ಈ ಉದ್ಯೋಗಗಳನ್ನು ನೀಡುವಾಗ ಮೀಸಲಾತಿಯನ್ನು ಅನುಸರಿಸಲಾಗಿದೆಯೇ? ಅರ್ಹತೆಗಷ್ಟೇ ಪ್ರಾಮುಖ್ಯ ನೀಡಲಾಗಿದೆಯೇ? ರಾಜಕೀಯ ಒಲವು-ನಿಲುವುಗಳನ್ನು ಪರಿಗಣಿಸಲಾಗಿತ್ತೇ? ಪ್ರಧಾನಿಗಳೇ ಈ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ’ ಎಂದು ಕಿಡಿಕಾರಿದ್ದಾರೆ.  

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರೈತ ಸಂಘ ಫ್ರೀಡಂಪಾರ್ಕ್ ನಲ್ಲಿ ರೈತ ನಾಯಕ ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರ 88ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ರೈತ ಸಮಾವೇಶವನ್ನು ಉದ್ಘಾಟಿಸಿ, ಬಳಿಕ ರೈತ ಪರ ಬಜೆಟ್ ರೂಪಿಸಲು ರೈತ ಸಂಘ ನೀಡಿದ ಹಕ್ಕೊತ್ತಾಯಗಳನ್ನು ಸ್ವೀಕರಿಸಿ ಮಾತನಾಡಿದರು.

ರೈತರು ನೀಡಿದ ಹಕ್ಕೊತ್ತಾಯಗಳನ್ನು ಗಂಭೀರವಾಗಿ ಪರಿಗಣಿಸಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ “ಭೂ ಸುಧಾರಣಾ ಕಾಯ್ದೆ 2020″ಕ್ಕೆ ತಿದ್ದುಪಡಿ ತರಲಾಗುವುದು ಎಂದು ಹೇಳಿದರು.

ನಂಜುಂಡಸ್ವಾಮಿಯವರು ಸಂಘಟಿಸಿದ ಸ್ಟಡಿ ಸರ್ಕಲ್ ಮೂಲಕ ಹಲವು ವಿಚಾರಗಳ ಒಳನೋಟ ದೊರೆಯಿತು. ಸಮಾಜವಾದಿ ಆರ್ಥಿಕತೆ, ಸಮಾಜವಾದಿ ರಾಜಕಾರಣದ ಬಗ್ಗೆ ಸ್ಪಷ್ಟತೆ ಸಿಕ್ಕಿತು. ಈ ಸ್ಟಡಿ ಸರ್ಕಲ್ ಗೆ ಬಹಳ ಮಂದಿ ಉಪನ್ಯಾಸಕರು, ಪ್ರೊಫೆಸರ್ ಗಳು, ಸಾಹಿತಿಗಳು ಬರುತ್ತಿದ್ದರು. ಇವರೆಲ್ಲರ ಮಾರ್ಗದರ್ಶನ ನನಗೆ ಅನುಕೂಲವಾಯಿತು ಎಂದು ಹೇಳಿದರು.

ನಂಜುಂಡಸ್ವಾಮಿಯವರು ಕಡೆಯವರೆಗೂ ರೈತರ ಪರವಾಗಿ ಕ್ರಿಯಾಶೀಲವಾಗಿದ್ದರು. ಸಮಾಜವಾದಿ ಆಶಯಗಳ ಪರವಾಗಿದ್ದ ಅವರು ಬೆಳೆಸಿದ ರೈತ ಚಳವಳಿ, ರೈತರ ಸಮಸ್ಯೆ ಪರಿಹಾರಕ್ಕೆ ಆಸರೆ ಆಯಿತು. ರೈತ ಹೋರಾಟ ಮತ್ತು ರೈತ ಸಮಾವೇಶಗಳಲ್ಲಿ ಭಾಗವಹಿಸುವುದು ನನಗೂ ಬಹಳ ಸಂತಸ ಮತ್ತು ಹೆಮ್ಮೆಯ ವಿಷಯ. ನಂಜುಂಡಸ್ವಾಮಿ ಮತ್ತು ರೈತ ಹೋರಾಟಗಳು ಸಮಾಜ ಮತ್ತು ಸರ್ಕಾರಗಳ ಮೇಲೆ ಪರಿಣಾಮ ಬೀರಿದೆ. ನಂಜುಂಡಸ್ವಾಮಿಯವರ ರೈತ ಹೋರಾಟ ನನಗೆ ರಾಜಕೀಯ ಪ್ರೇರಣೆಯಾಗಿದೆ ಎಂದು ಹೇಳಿದರು.

ಬಡಗಲಾಪುರ ನಾಗೇಂದ್ರ ಅವರು ಅಧ್ಯಕ್ಷತೆ ವಹಿಸಿದ್ದ ರೈತ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್.ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ದಲಿತ ಮುಖಂಡ ಮಾವಳ್ಳಿ ಶಂಕರ್, ಹಿಂದುಳಿದ ಮತ್ತು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸಂಚಾಲಕರಾದ ಕುಮಾರ್ ಸಮತಳ ಸೇರಿ ಹಲವು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ದೇಶ

ನವದೆಹಲಿ: ಉತ್ತರಪ್ರದೇಶಕ್ಕೆ ಹಂಚಿಕೆಯಾದ ಮೊತ್ತವು ಒಟ್ಟು 5 ರಾಜ್ಯಗಳಿಗೆ ಹಂಚಿಕೆಯಾದ ಮೊತ್ತಕ್ಕಿಂತ ಸುಮಾರು 50 ಸಾವಿರ ಕೋಟಿ ಹೆಚ್ಚು ಎಂದು ತಮಿಳುನಾಡು ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲ್ ಸೇವೆಗಳ ಸಚಿವ ಡಾ.ಪಳನಿವೇಲ್ ತ್ಯಾಗರಾಜನ್ (ಪಿಟಿಆರ್) ಹೇಳಿದ್ದಾರೆ.

ಕೇರಳ, ತಮಿಳುನಾಡು ದೆಹಲಿ ಹಾಗೂ ಪಂಜಾಬ್ ರಾಜ್ಯಗಳ ನಾಯಕರು “GST ಹಣದ ಮರು ಹಂಚಿಕೆ ಮತ್ತು ಅನುದಾನ ಹಂಚಿಕೆಯಲ್ಲಿ ರಾಜ್ಯಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ರಾಜಧಾನಿ ದೆಹಲಿಯಲ್ಲಿ ನೆನ್ನೆ ಪ್ರತಿಭಟನೆ ನಡೆಸಿದ್ದರು. ಇದರಲ್ಲಿ ತಮಿಳುನಾಡು ಸರ್ಕಾರದ ಪರವಾಗಿ ಭಾಗವಹಿಸಿ ಡಾ.ಪಳನಿವೇಲ್ ತ್ಯಾಗರಾಜನ್ ಮಾತನಾಡಿದರು.

“ಕಳೆದ 5 ವರ್ಷಗಳಲ್ಲಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ದಕ್ಷಿಣ ರಾಜ್ಯಗಳು GST ಮತ್ತು ನೇರ ತೆರಿಗೆಗಳಿಗೆ ಕೊಡುಗೆ ನೀಡಿದ ಒಟ್ಟು ತೆರಿಗೆ (ಆಮದು ಸುಂಕದ ಮೇಲಿನ GST ಹೊರತುಪಡಿಸಿ) – 22,26,983.39 ಕೋಟಿ.

ಕಳೆದ ಐದು ವರ್ಷಗಳಲ್ಲಿ ಉತ್ತರ ಪ್ರದೇಶ ಕೊಡುಗೆ ನೀಡಿದ ಮೊತ್ತ ರೂ.3,41,817.60 ಕೋಟಿಗಳು.
(Difference in Contribution: Rs.18,85,166 Crores)

ಕಳೆದ 5 ವರ್ಷಗಳಲ್ಲಿ ಮೇಲೆ ತಿಳಿಸಲಾದ ದಕ್ಷಿಣದ ರಾಜ್ಯಗಳಿಗೆ ಬಿಡುಗಡೆಯಾದ ಕೇಂದ್ರ ತೆರಿಗೆಗಳು ಮತ್ತು ಸುಂಕಗಳು (ಒಟ್ಟು) – ರೂ.6,42,295.05 ಕೋಟಿಗಳು.

ಉತ್ತರ ಪ್ರದೇಶಕ್ಕೆ ಬಿಡುಗಡೆಯಾದ ಮೊತ್ತ – 6,91,375.12 ಕೋಟಿ ರೂ.
(Difference in sharing: Rs.49,080 Crores)

ಒಂದು ರಾಜ್ಯಕ್ಕೆ ಹಂಚಿಕೆಯಾದ ಮೊತ್ತವು ಒಟ್ಟು 5 ರಾಜ್ಯಗಳಿಗೆ ಹಂಚಿಕೆಯಾದ ಮೊತ್ತಕ್ಕಿಂತ ಸುಮಾರು 50 ಸಾವಿರ ಕೋಟಿ ಹೆಚ್ಚು” ಎಂದು ಹೇಳಿದ್ದಾರೆ.

ಇದೇ ವಿಚಾರಕ್ಕಾಗಿ ಮೊನ್ನೆ ಕರ್ನಾಟಕ ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮುಂದಾಳುತ್ವದಲ್ಲಿ ದೆಹಲಿ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಎಂಬುದು ಗಮನಾರ್ಹ.

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಸಾವಿರಾರು ಸಂಖ್ಯೆಯಲ್ಲಿ ಜನರು ತಮ್ಮ ಅಹವಾಲುಗಳನ್ನು ಹೊತ್ತು ಜನಸ್ಪಂದನಕ್ಕೆ ಆಗಮಿಸಿದ್ದಾರೆ. ಇಂದು ಇಡೀ ದಿನ ಇವರೆಲ್ಲರ ಸಮಸ್ಯೆಗಳಿಗೆ ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯೊಳಗೆ ಪರಿಹಾರ ಒದಗಿಸುವ ಮೂಲಕ ಕಣ್ಣೀರು ಒರೆಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಹೇಳಿದರು.

ಕಳೆದ ಬಾರಿಯ ಜನಸ್ಪಂದನದ ಅಭೂತಪೂರ್ವ ಯಶಸ್ಸು ಈ ಬಾರಿ ನಿರೀಕ್ಷೆಗೂ ಮೀರಿದಷ್ಟು ಜನರನ್ನು ಕರೆತಂದಿದೆ. ಎಲ್ಲರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸುತ್ತೇವೆ, ಆಗಮಿಸಿರುವ ಬಂಧುಗಳು ಯಾವುದೇ ಗೊಂದಲಗಳಿಗೆ ಎಡೆಮಾಡಿಕೊಡದೆ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.

ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ.98ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ. ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ಹೇಳಿದರು.

ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ಹೇಳಿದರು.

ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ‘ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ’ ಎಂದಿದ್ದರು. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅಸಮಾನತೆ ನಿವಾರಿಸುವ ಕಾರ್ಯಕ್ರಮ ಎಂದು ವಿರೋಧ ಪಕ್ಷಗಳನ್ನು ಕುಟುಕಿದರು.

ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು, ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ-ಬದಲಾವಣೆ ತರಲು ಜನಸ್ಪಂದನ ಅಗತ್ಯವಾಗಿದೆ ಎಂದು ಹೇಳಿದರು.