ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
AAP Archives » Dynamic Leader
October 20, 2024
Home Posts tagged AAP
ರಾಜಕೀಯ

ನವದೆಹಲಿ: “ಬಿಜೆಪಿಯ ಕ್ಷಣಗಣನೆ ಆರಂಭವಾಗಿದೆ. ಎಲ್ಲ ರಾಜ್ಯಗಳ ಚುನಾವಣೆಯಲ್ಲೂ ಸೋಲು ಕಾಣಲಿದೆ” ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕವನ್ನು ಮರು ನಿಗದಿಪಡಿಸಿದೆ. ಅದರಂತೆ ಅಕ್ಟೋಬರ್ 1ರ ಬದಲಾಗಿ ಅಕ್ಟೋಬರ್ 5 ರಂದು ಅಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಆಮ್ ಆದ್ಮಿ ಪಕ್ಷವು ಹರಿಯಾಣದ ಎಲ್ಲಾ ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆ.

ಈ ಹಿನ್ನೆಲೆಯಲ್ಲಿ, ಪಕ್ಷದ ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿದ್ದಾರೆ. “ಬಿಜೆಪಿಯ ಕ್ಷಣಗಣನೆ ಶುರುವಾಗಿದೆ. ಘೋಷಿಸಿದ ಎಲ್ಲಾ ಚುನಾವಣೆಗಳಲ್ಲೂ ಸೋಲುತ್ತದೆ. ಜನರು ತಮ್ಮನ್ನು ತಿರಸ್ಕರಿಸುತ್ತಿದ್ದಾರೆ ಎಂಬುದನ್ನು ಲೋಕಸಭೆ ಚುನಾವಣೆ ಫಲಿತಾಂಶದಿಂದ ಬಿಜೆಪಿಗೆ ಗೊತ್ತಾಗಿದೆ.

ಮುಂದಿನ ದಿನಗಳಲ್ಲಿ ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ನವದೆಹಲಿ ಚುನಾವಣೆಗಳಲ್ಲಿ ಬಿಜೆಪಿ ಸೋಲುವುದು ಖಚಿತ. ಚುನಾವಣಾ ದಿನಾಂಕಗಳನ್ನು ಬದಲಾಯಿಸುವ ಮೂಲಕ ಗೆಲ್ಲಲು ಸಾಧ್ಯವಿಲ್ಲ. ದೇಶದಾದ್ಯಂತ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಹರಿಯಾಣದಲ್ಲಿ ಪ್ರಚಾರ ನಡೆಸಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ದೇಶ

ನವದೆಹಲಿ: “ಆಮ್ ಆದ್ಮಿ ಪಕ್ಷ ನಮಗೆ ಮುಖ್ಯವಲ್ಲ; ರಾಷ್ಟ್ರ ಮುಖ್ಯ” ಎಂದು ತಿಹಾರ್ ಜೈಲಿನಲ್ಲಿ ಶರಣಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಾ ಇದನ್ನು ಹೇಳಿದರು. ಇದಾದ ಬಳಿಕ ತಿಹಾರ್ ಜೈಲಿಗೆ ಹೋಗಿ ಶರಣಾದರು.

ದೆಹಲಿ ಮದ್ಯ ನೀತಿ ಉಲ್ಲಂಘನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಮುಖ್ಯಮಂತ್ರಿ ಅರವಿಂದ್  ಕೇಜ್ರಿವಾಲ್ ಅವರಿಗೆ ನೀಡಲಾಗಿದ್ದ 21 ದಿನಗಳ ಮಧ್ಯಂತರ ಜಾಮೀನು ಇಂದು (ಜೂನ್ 02) ಮುಕ್ತಾಯಗೊಂಡಿದೆ. ಪರಿಣಾಮವಾಗಿ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ ಶರಣಾಗಲು ಹೊರಟರು. ಗಾಂಧಿ ಸ್ಮಾರಕಕ್ಕೆ ತೆರಳಿ ನಮನ ಸಲ್ಲಿಸಿದ ಬಳಿಕ ಪತ್ನಿ ಸಮೇತ ಕನ್ನಾಟ್ ಹನುಮಾನ್ ದೇವಸ್ಥಾನದಲ್ಲಿ ಸ್ವಾಮಿ ದರ್ಶನ ಪಡೆದರು. ನಂತರ ಅವರು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳನ್ನು ಭೇಟಿಯಾದರು.

ತ್ಯಾಗ
ಆಗ ಮಾತನಾಡಿದ ಕೇಜ್ರಿವಾಲ್,  “ನನ್ನ ವಿರುದ್ಧ ಯಾವುದೇ ಅಪರಾಧದ ಸಾಕ್ಷ್ಯಗಳಿಲ್ಲ. ಚುನಾವಣಾ ಪ್ರಚಾರಕ್ಕೆ ಅನುಕೂಲವಾಗುವಂತೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌ಗೆ ನಾನು ಕೃತಜ್ಞನಾಗಿದ್ದೇನೆ. ಆಮ್ ಆದ್ಮಿ ಪಕ್ಷ ನಮಗೆ ಮುಖ್ಯವಲ್ಲ. ರಾಷ್ಟ್ರ ಮುಖ್ಯ. 21 ದಿನಗಳಲ್ಲಿ ಒಂದು ನಿಮಿಷವನ್ನೂ ವ್ಯರ್ಥಮಾಡಲಿಲ್ಲ. ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಮತ್ತೆ ಜೈಲಿಗೆ ಹೋಗುತ್ತಿದ್ದೇನೆ. ಸರ್ವಾಧಿಕಾರದ ವಿರುದ್ಧ ಹೋರಾಡುತ್ತೇನೆ. ನನ್ನ ಪ್ರತಿ ಹನಿ ರಕ್ತವನ್ನೂ ದೇಶಕ್ಕಾಗಿ ತ್ಯಾಗ ಮಾಡುತ್ತೇನೆ. ಪ್ರಧಾನಿ ಮೋದಿ ನನ್ನನ್ನು (ಕೇಜ್ರಿವಾಲ್) ನುರಿತ ಕಳ್ಳ ಎಂದು ಕರೆಯುತ್ತಾರೆ.

ಸಮೀಕ್ಷೆಗಳು
ಎಲ್ಲಾ ಸಮೀಕ್ಷೆಗಳನ್ನು ಸುಳ್ಳಾಗಿಸಿ ಇಂಡಿಯಾ ಮೈತ್ರಿ ಪಕ್ಷಗಳು ಗೆಲ್ಲುತ್ತವೆ. ಎಲ್ಲಾ ಸಮೀಕ್ಷೆಗಳು ತಪ್ಪಾಗಿವೆ. ನನ್ನ ವಿರುದ್ಧದ ಆರೋಪಗಳಿಗೆ ಜಾರಿ ಇಲಾಖೆ ಕನಿಷ್ಠ ಒಂದೇ ಒಂದು ಸಾಕ್ಷ್ಯವನ್ನಾದರೂ ನೀಡಲು ಸಾದ್ಯವೇ? ನನ್ನ ಮನೆಯಲ್ಲಿ ಶೋಧ ನಡೆಸಿದಾಗ ಜಾರಿ ಇಲಾಖೆ ಏನನ್ನೂ ವಶಪಡಿಸಿಕೊಂಡಿಲ್ಲ. ದಬ್ಬಾಳಿಕೆಯ ಸರ್ಕಾರದ ವಿರುದ್ಧ ನೀವು ಧ್ವನಿ ಎತ್ತಬೇಕು. ಮತ ಎಣಿಕೆ ಸಂದರ್ಭದಲ್ಲಿ ಕೊನೆಯವರೆಗೂ ಇದ್ದು ನಿಗಾ ಇಡಬೇಕು.” ಎಂದು ಹೇಳಿದರು.

ಇದಾದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 4.50ರ ಹೊತ್ತಿಗೆ ತಿಹಾರ್ ಜೈಲಿಗೆ ಹೋಗಿ ಶರಣಾದರು.

ರಾಜಕೀಯ

ಮೋದಿ 3ನೇ ಬಾರಿ ಪ್ರಧಾನಿಯಾಗುವುದಿಲ್ಲ, ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ ಎಂದು ಎಎಪಿ ಶಾಸಕ ಸೋಮನಾಥ್ ಭಾರ್ತಿ ಹೇಳಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆಯನ್ನು ದೇಶಾದ್ಯಂತ 7 ಹಂತಗಳಲ್ಲಿ ನಡೆಸಲಾಗಿದೆ. 4 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಲೋಕಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಗೆಲ್ಲುತ್ತದೆ ಎಂದು ಚುನಾವಣೋತ್ತರ ಬಿಡುಗಡೆಯಾದ ಸಮೀಕ್ಷೆಯ ಫಲಿತಾಂಶಗಳು ಸೂಚಿಸುತ್ತದೆ.

ಎನ್ ಡಿಎ ಮೈತ್ರಿಕೂಟ 350ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದೂ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ, ಎಎಪಿ ಶಾಸಕ ಸೋಮನಾಥ್ ಭಾರ್ತಿ ಹೇಳುವಂತೆ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಜೂನ್ 4ರ ಮತ ಎಣಿಕೆ ನಂತರ ತಪ್ಪು ಎಂದು ಸಾಬೀತಾಗಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ 3ನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಭಾವುಕರಾಗಿ ಹೇಳಿದ್ದಾರೆ. ಸೋಮನಾಥ್ ಭಾರ್ತಿ ಅವರು ನವದೆಹಲಿ ಲೋಕಸಭಾ ಕ್ಷೇತ್ರಕ್ಕೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅವರ ವಿರುದ್ಧ ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಸ್ಪರ್ಧಿಸಿದ್ದಾರೆ. ಬಾನ್ಸುರಿಗೆ ಇದು ಮೊದಲ ಚುನಾವಣೆ.

2019ರಲ್ಲಿ ಬಿಜೆಪಿ ಎಲ್ಲಾ 7 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಈ ಬಾರೀ ಕನಿಷ್ಠ 6 ಕ್ಷೇತ್ರಗಳನ್ನಾದರೂ ಗೆಲ್ಲಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳುತ್ತಿವೆ. ಆದರೆ, ಸೋಮನಾಥ್ ಭಾರ್ತಿ ಅವರು ಪ್ರಕಟಿಸಿರುವ ಎಕ್ಸ್ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ, ಆಮ್ ಆದ್ಮಿ ಪಕ್ಷವು 4 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್ ಪಕ್ಷವು 3 ಕ್ಷೇತ್ರಗಳಲ್ಲಿ ಈ ಬಾರಿ ಗೆಲ್ಲುತ್ತದೆ ಎಂದು ಹೇಳಿದ್ದಾರೆ.

ನನ್ನ ಮಾತುಗಳನ್ನು ಬರೆದಿಟ್ಟುಕೊಳ್ಳಿ. ಮೋದಿ 3ನೇ ಅವಧಿಗೆ ಪ್ರಧಾನಿಯಾಗುವುದಿಲ್ಲ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ವಿರುದ್ಧ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ.

ದೇಶ

ಸಂಸತ್ತಿನ ಚುನಾವಣೆಗೆ ಮುನ್ನ ಕೇಜ್ರಿವಾಲ್ ಅವರನ್ನು ಏಕೆ ಬಂಧಿಸಲಾಯಿತು ಮತ್ತು ತನಿಖೆಯ ಪ್ರಾರಂಭ ಮತ್ತು ಬಂಧನದ ನಡುವೆ ಏಕೆ ದೊಡ್ಡ ಅಂತರವಿದೆ ಎಂಬುದನ್ನು ವಿವರಿಸಿ- ಸುಪ್ರೀಂ ಕೋರ್ಟ್

ದೆಹಲಿ ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಸಮನ್ಸ್ ಅನ್ನು ಪದೇ ಪದೇ ನಿರ್ಲಕ್ಷಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಂಸತ್ ಚುನಾವಣೆ ಘೋಷಣೆಯಾದ ಐದನೇ ದಿನದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತು. ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಸೋಲಿಸಲು ಚುನಾವಣೆಗೆ ಮುನ್ನವೇ ಕೇಜ್ರಿವಾಲ್ ಅವರನ್ನು ಬಂಧಿಸಲಾಯಿತು ಎಂದು ಆಮ್ ಆದ್ಮಿ ಪಕ್ಷದ ಸಚಿವರು ಮತ್ತು ವಿರೋಧ ಪಕ್ಷಗಳು ಹೇಳುತ್ತಿವೆ.

ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್ ಅವರ ನ್ಯಾಯಾಲಯದ ಕಸ್ಟಡಿಯನ್ನು ಮೇ 7 ರವರೆಗೆ ವಿಸ್ತರಿಸಲಾಗಿದೆ. ಮತ್ತೊಂದೆಡೆ, ಮಧುಮೇಹಿಯಾಗಿರುವ ಕೇಜ್ರಿವಾಲ್‌ಗೆ ಜೈಲಿನಲ್ಲಿ ಹೆಚ್ಚು ಸಕ್ಕರೆ ಅಂಶವಿರುವ ಆಹಾರವನ್ನು ನೀಡಲಾಗುತ್ತಿದ್ದು, ಅವರ ಭೇಟಿಗೆ ಪತ್ನಿಗೂ ಅನುಮತಿ ನಿರಾಕರಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಈ ಹಿನ್ನಲೆಯಲ್ಲಿ, ಸಂಸತ್ ಚುನಾವಣೆಗೂ ಮುನ್ನವೇ ಕೇಜ್ರಿವಾಲ್ ಅವರನ್ನು ಬಂಧಿಸಿದ್ದು ಏಕೆ ಎಂದು ಜಾರಿ ಇಲಾಖೆಯನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಜಾರಿ ಇಲಾಖೆಯ ಬಂಧನದ ವಿರುದ್ಧ ಕೇಜ್ರಿವಾಲ್ ಅವರು ಸಲ್ಲಿಸಿರುವ ಮನವಿ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿ ದೀಪಂಕರ್ ದತ್ತಾ ನೇತೃತ್ವದ ಪೀಠದಲ್ಲಿ ವಿಚಾರಣೆಗೆ ಬಂದಿತು.

ಆಗ ಜಾರಿ ಇಲಾಖೆ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರನ್ನು ಪ್ರಶ್ನಿಸಿದ ಪೀಠ, “ಜೀವನ ಮತ್ತು ಸ್ವಾತಂತ್ರ್ಯ ಅತಿಮುಖ್ಯ. ನೀವು ಅದನ್ನು ಅಲ್ಲಗಳೆಯುವಂತಿಲ್ಲ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸಂಬಂಧಿಸಿದ ಪ್ರಕರಣದಲ್ಲಿ, ತನಿಖಾಧಿಕಾರಿಗಳು ತಮಗೆ ಕೆಲವು ಮಾಹಿತಿಗಳು ಸಿಕ್ಕಿರುವುದಾಗಿ ಹೇಳಿದ್ದರು.

ಆದರೆ ಕೇಜ್ರಿವಾಲ್ ಪ್ರಕರಣದಲ್ಲಿ ಅಂಥದ್ದೇನೂ ತರಲಾಗಿಲ್ಲ. ಈ ಪ್ರಕರಣದಲ್ಲಿ ಇದುವರೆಗೆ ಯಾವುದೇ ಸಂಪರ್ಕ ಕ್ರಮ ಕೈಗೊಂಡಿಲ್ಲ. ಬಹುಶಃ ಅಂತಹ ಕ್ರಮ ಕೈಗೊಂಡಿದ್ದರೆ, ಕೇಜ್ರಿವಾಲ್ ಈ ವಿಷಯದಲ್ಲಿ ಹೇಗೆ ಭಾಗಿಯಾಗಿದ್ದಾರೆ ಎಂಬುದನ್ನು ತಿಳಿಸಿ.

ಅಲ್ಲದೆ, ಸಂಸತ್ತಿನ ಚುನಾವಣೆಗೆ ಮುನ್ನ ಕೇಜ್ರಿವಾಲ್ ಅವರನ್ನು ಏಕೆ ಬಂಧಿಸಲಾಯಿತು ಮತ್ತು ತನಿಖೆಯ ಪ್ರಾರಂಭ ಮತ್ತು ಬಂಧನದ ನಡುವೆ ಏಕೆ ದೊಡ್ಡ ಅಂತರವಿದೆ ಎಂಬುದನ್ನು ವಿವರಿಸಿ” ಎಂದು ಹೇಳಿ ಶುಕ್ರವಾರ ಪ್ರತಿಕ್ರಿಯೆ ನೀಡುವಂತೆ ಜಾರಿ ಇಲಾಖೆಗೆ ಸೂಚಿಸಿದೆ.

ರಾಜಕೀಯ

ನವದೆಹಲಿ: ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಯು 45 ಸಂಶಯಾಸ್ಪದ ಕಂಪನಿಗಳಿಂದ 1,068 ಕೋಟಿ ರೂಪಾಯಿ ದೇಣಿಗೆಯನ್ನು ಪಡೆದಿದ್ದು, ಈ ಬಗ್ಗೆ ಕೇಂದ್ರ ಗುಪ್ತಚರ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷ ಒತ್ತಾಯಿಸಿದೆ.

ನಿನ್ನೆ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತಮಾಡಿದ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ಜಾಸ್ಮಿನ್ ಶಾ ಅವರು, “ಬಿಜೆಪಿಗೆ 45 ಸಂಶಯಾಸ್ಪದ ಕಂಪನಿಗಳು ರೂ.1,068 ಕೋಟಿಯವರೆಗೆ ದೇಣಿಗೆ ನೀಡಿದೆ. ಅವು ನಷ್ಟದ ಕಂಪನಿಗಳಾಗಿವೆ. ಅಥವಾ ಅವರು ತೆರಿಗೆಗಳನ್ನು ಪಾವತಿಸದವರು ಅಥವಾ ಲಾಭಕ್ಕಿಂತ ಹೆಚ್ಚಾಗಿ ದೇಣಿಗೆ ನೀಡಿದವರಾಗಿದ್ದಾರೆ.

ಏಳು ವರ್ಷಗಳಲ್ಲಿ 33 ಕಂಪನಿಗಳು ಒಟ್ಟು ಒಂದು ಲಕ್ಷ ಕೋಟಿ ರೂಪಾಯಿಯವರೆಗೆ ನಷ್ಟ ಅನುಭವಿಸಿದ ಕಂಪನಿಗಳಾಗಿರುತ್ತವೆ. ಈ ಕಂಪನಿಗಳು ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿಗೆ 450 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿರುತ್ತವೆ. ಈ ಪೈಕಿ 17 ಕಂಪನಿಗಳು ಶೂನ್ಯ ತೆರಿಗೆ ಅಥವಾ ಋಣಾತ್ಮಕ ತೆರಿಗೆ ಪಾವತಿಸಿದ ಕಂಪನಿಗಳಾಗಿವೆ.

ಇದಲ್ಲದೆ, ಈ ಕಂಪನಿಗಳು ತೆರಿಗೆ ವಿನಾಯಿತಿಗಳನ್ನು ಸಹ ಪಡೆದಿರುತ್ತವೆ. ಅಲ್ಲದೆ, ಆರು ಕಂಪನಿಗಳು ಬಿಜೆಪಿಗೆ 600 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿವೆ. ಆ ಮೊತ್ತವು ಆ ಕಂಪನಿಗಳ ಲಾಭಕ್ಕಿಂತ ಹೆಚ್ಚಿನ ಮೊತ್ತವಾಗಿರುತ್ತದೆ. ಇನ್ನೊಂದು ಕಂಪನಿ ಅವರ ಲಾಭಕ್ಕಿಂತ 93 ಪಟ್ಟು ಹೆಚ್ಚು ನೀಡಿದೆ. ಮೂರು ಕಂಪನಿಗಳು 28 ಕೋಟಿ ದೇಣಿಗೆ ನೀಡಿ ಶೂನ್ಯ ತೆರಿಗೆ ಪಾವತಿಸಿವೆ. ಉದಾಹರಣೆಗೆ, ನಷ್ಟದ ನಡುವೆಯೂ ಅನೇಕ ಕಂಪನಿಗಳು ಉದಾರವಾಗಿ ಬಿಜೆಪಿಗೆ ದೇಣಿಗೆ ನೀಡಿದವು. ಅದರಲ್ಲಿ ಪ್ರಮುಖವಾದದ್ದು ಭಾರ್ತಿ ಏರ್‌ಟೆಲ್ ಕಂಪೆನಿ.

77,000 ಕೋಟಿ ನಷ್ಟ ಅನುಭವಿಸಿದರೂ ಕಂಪನಿ 200 ಕೋಟಿ ರೂಪಾಯಿ ದೇಣಿಗೆ ನೀಡಿದೆ. ಇದಕ್ಕೆ ಪ್ರತಿಯಾಗಿ ರೂ.8,200 ಕೋಟಿ ತೆರಿಗೆ ರಿಯಾಯಿತಿ ಪಡೆದುಕೊಂಡಿದೆ. ಇನ್ನೊಂದು ಕಂಪನಿ DLF. 7 ವರ್ಷಗಳಲ್ಲಿ 130 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಆದರೂ 25 ಕೋಟಿ ರೂಪಾಯಿ ದೇಣಿಗೆ ನೀಡಿ, 20 ಕೋಟಿ ರೂಪಾಯಿ ತೆರಿಗೆ ಲಾಭವನ್ನು ಪಡೆದುಕೊಂಡಿದೆ. ಧರಿವಾಲ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ 115 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿ, ಬಿಜೆಪಿಗೆ ಸುಮಾರು 24.96 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದೆ. ಈ ಕಂಪನಿಯ ನಷ್ಟ ರೂ.299 ಕೋಟಿಯಾಗಿದೆ. ಹೀಗಾಗಿ ಅವರು ಶೂನ್ಯ ತೆರಿಗೆ ಪಾವತಿಸಿದ್ದಾರೆ.

ಅದೇ ರೀತಿ ಪಿಆರ್‌ಎಲ್ ಡೆವಲಪರ್ಸ್ 20 ಕೋಟಿ ರೂಪಾಯಿ ಚುನಾವಣಾ ಬಾಂಡ್‌ಗಳನ್ನು ಖರೀದಿಸಿ, 10 ಕೋಟಿ ರೂಪಾಯಿ ದೇಣಿಗೆ ನೀಡಿ 4.7 ಕೋಟಿ ರೂಪಾಯಿ ತೆರಿಗೆ ವಿನಾಯಿತಿ ಪಡೆದುಕೊಂಡಿದೆ. ಈ ಕಂಪನಿ 1550 ಕೋಟಿ ನಷ್ಟವನ್ನು ಅನುಭವಿಸಿದ ಕಂಪನಿಯಾಗಿದೆ. ಯುಜಿಯಾ ಫಾರ್ಮಾ ಲಿಮಿಟೆಡ್ ಶರತ್ ಚಂದ್ರ ರೆಡ್ಡಿ ಅವರ ಕಂಪನಿಯಾಗಿದೆ. 7 ವರ್ಷದಲ್ಲಿ 28 ಕೋಟಿ ನಷ್ಟ ಅನುಭವಿಸಿದ್ದರೂ ಚುನಾವಣಾ ಬಾಂಡ್ ನಿಧಿಯಾಗಿ 15 ಕೋಟಿ ನೀಡಿ, ರೂ.7.20 ಕೋಟಿ ತೆರಿಗೆ ವಿನಾಯಿತಿ ಪಡೆದುಕೊಂಡಿದೆ.

7 ವರ್ಷದಲ್ಲಿ ರೂ.86 ಕೋಟಿ ನಷ್ಟವನ್ನು ಉಂಟುಮಾಡಿಕೊಂಡಿದ್ದ ಮೈತ್ರಾ ಎನರ್ಜಿ ಪ್ರೈವೇಟ್ ಲಿಮಿಟೆಡ್ ಕಂಪನಿ, 19 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್ ಗಳನ್ನು ಖರೀದಿಸಿ, 9.99 ಕೋಟಿ ಪಾವತಿಸುವ ಮೂಲಕ ರೂ.126 ಕೋಟಿ ತೆರಿಗೆ ವಿನಾಯಿತಿ ಪಡೆದುಕೊಂಡಿದೆ.

ಪಿರಮಲ್ ಕ್ಯಾಪಿಟಲ್ ಮತ್ತು ಹೌಸಿಂಗ್ ಫೈನಾನ್ಸ್ ಲಿಮಿಟೆಡ್ 10 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸುವ ಮೂಲಕ 16,376 ಕೋಟಿ ರೂಪಾಯಿ ನಷ್ಟವನ್ನು ಅನುಭವಿಸಿದರೂ 10 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ. ಇದಕ್ಕೆ ರೂ.5178.50 ಕೋಟಿ ರೂ. ತೆರಿಗೆ ವಿನಾಯಿತಿ ಸಿಕ್ಕಿದೆ.

ಓರಿಯಂಟಲ್ ಸೌತ್ ದೆಹಲಿ ಹೊಟೇಲ್ ಪ್ರೈವೇಟ್ ಲಿಮಿಟೆಡ್ 5 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ್ದು, 5 ಕೋಟಿ ದೇಣಿಗೆಯನ್ನೂ ನೀಡಿದೆ. ಕಂಪನಿ 49 ಕೋಟಿ ನಷ್ಟವನ್ನು ಅನುಭವಿಸಿದ್ದು, ಶೂನ್ಯ ತೆರಿಗೆ ಪಾವತಿಸಿದೆ. ವಿಲೇಜ್ ಡಿ ನಂದಿ ಪ್ರೈವೇಟ್ ಲಿಮಿಟೆಡ್ ಚುನಾವಣಾ ಬಾಂಡ್‌ಗಳನ್ನು ರೂ.5 ಕೋಟಿಗೆ ಖರೀದಿಸಿದೆ. ಮತ್ತು ರೂ.48 ಕೋಟಿ ನಷ್ಟದ ಹೊರತಾಗಿಯೂ, ಸಂಪೂರ್ಣ ಮೊತ್ತವನ್ನು ದೇಣಿಗೆಯಾಗಿ ನೀಡಿದೆ.

ರೂ.167 ಕೋಟಿ ನಷ್ಟವನ್ನು ಅನುಭವಿಸಿದ ಟಕಿಡೋ ಲೀಸಿಂಗ್ ಆಪರೇಟರ್ಸ್ ಪ್ರೈವೇಟ್ ಲಿಮಿಟೆಡ್ 4 ಕೋಟಿ ಮೌಲ್ಯದ ಬಾಂಡ್ ಖರೀದಿಸಿ ಸಂಪೂರ್ಣ ಹಣವನ್ನು ನೀಡಿದೆ. ಇದಲ್ಲದೇ ಇನ್ನೂ ಹಲವು ಕಂಪನಿಗಳು ತಮ್ಮ ಲಾಭದ ಆರು ಪಟ್ಟು ಹಣವನ್ನು ಉದಾರವಾಗಿ ನೀಡಿದೆ. ಇದೆಲ್ಲವೂ ಅತ್ಯಂತ ಅನುಮಾನಾಸ್ಪದವಾಗಿದೆ. ಈ ಕಂಪನಿಗಳು ಮತ್ತು ಸಂಬಂಧಪಟ್ಟ ಬಿಜೆಪಿ ಮುಖಂಡರ ವಿರುದ್ಧ ಕೂಡಲೇ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ದೇಶ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಮಾಧ್ಯಮದವರನ್ನು ಭೇಟಿಯಾಗಿ ಮಾತನಾಡಿದರು:

ಕೇಂದ್ರ ಸರ್ಕಾರ ಮನೀಶ್ ಸಿಸೋಡಿಯಾ ಅವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದೆ. ಅವರನ್ನು ಬಂಧಿಸಿ ಒಂದು ವರ್ಷ ಕಳೆದಿದೆ. ಈ ಒಂದು ವರ್ಷದಲ್ಲಿ ನ್ಯಾಯಾಲಯಕ್ಕೆ ಒಂದೇ ಒಂದು ಸಾಕ್ಷ್ಯವನ್ನು ಮಂಡಿಸಲು ಸರಕಾರಕ್ಕೆ ಸಾಧ್ಯವಾಗಿಲ್ಲ. ಇದೊಂದು ಸುಳ್ಳು ಪ್ರಕರಣ.

75 ವರ್ಷಗಳ ನಂತರ ಮನೀಶ್ ಸಿಸೋಡಿಯಾ ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಉಜ್ವಲ ಭವಿಷ್ಯದ ಭರವಸೆಯನ್ನು ತಂದರು. ಅವರು ಬಡವರ ಮಕ್ಕಳಿಗೆ ಕನಸು ಕಾಣುವ ಹಕ್ಕನ್ನು ನೀಡಿದರು. ಅಂತಹ ವ್ಯಕ್ತಿಯನ್ನು ಸುಳ್ಳು ಪ್ರಕರಣದಲ್ಲಿ ಜೈಲಿಗೆ ಹಾಕಲಾಗಿದೆ.

ಅವರು ನಮಗೆ ಉದಾಹರಣೆಯಾಗಿದ್ದಾರೆ. ಅವರು ಬಿಜೆಪಿ ಸೇರಿದ್ದರೆ ಅವರ ಮೇಲಿನ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುತ್ತಿತ್ತು. ಆದರೆ ಅವರು ಸತ್ಯದ ಹಾದಿಯನ್ನು ಬಿಡಲಿಲ್ಲ ಎಂದು ಹೇಳಿದರು.

Uncategorized

ದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ. ದೆಹಲಿ ಸರ್ಕಾರದ ಮದ್ಯ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ಇಲಾಖೆ ಅಕ್ರಮ ಹಣ ವರ್ಗಾವಣೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಪ್ರಕರಣ ದಾಖಲಿಸಿದೆ. ಪ್ರಕರಣದಲ್ಲಿ ಹಾಜರಾಗುವಂತೆ ಹಲವು ಬಾರಿ ನೋಟಿಸ್ ನೀಡಿದರೂ ಕೇಜ್ರಿವಾಲ್ ಹಾಜರಾಗಲಿಲ್ಲ.

ಈ ಹಿನ್ನಲೆಯಲ್ಲಿ, ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರ ಮನೆ ಮೇಲೆ ಜಾರಿ ಇಲಾಖೆ ಇಂದು ದಾಳಿ ನಡೆಸುತ್ತಿದೆ. ಅದೇ ರೀತಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕರ ಮನೆ ಮೇಲೂ ದಾಳಿ ನಡೆಸಲಾಗುತ್ತಿದೆ.

ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್

ಇದಕ್ಕೂ ಮುನ್ನ ಇಂದು ಬೆಳಗ್ಗೆ 10 ಗಂಟೆಗೆ ಜಾರಿ ಇಲಾಖೆಯನ್ನು ಬಹಿರಂಗಪಡಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ಸಚಿವೆ ಅತಿಶಿ ಮರ್ಲೆನಾ ಹೇಳಿದ್ದ ಹಿನ್ನಲೆಯಲ್ಲಿ, ಇಂದು ಪಕ್ಷದ ಪದಾಧಿಕಾರಿಗಳ ಮನೆ ಮೇಲೆ ಜಾರಿ ಇಲಾಖೆ ದಾಳಿ ನಡೆಸಿರುವ ಘಟನೆ ಸಂಚಲನ ಮೂಡಿಸಿದೆ.

ಆಪರೇಷನ್ ಕಮಲ ನಡೆಸುವ ಹೊಣೆಯನ್ನು ಬಿಜೆಪಿ ತನಿಖಾ ಸಂಸ್ಥೆಗಳಿಗೆ ವಹಿಸಿದೆ ಎಂದು ತಟಸ್ಥವಾದ ಮಾಧ್ಯಮಗಳು ವಿಮರ್ಶಿಸುತ್ತಿದೆ. ಮತ್ತು ಕೆಲಸ ಮಾಡದ ಮಾಧ್ಯಮಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ದೇಶ

ನವದೆಹಲಿ: ಆಮ್ ಆದ್ಮಿ ಶಾಸಕರನ್ನು ಖರೀದಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಈ ಬಗ್ಗೆ ಕೇಜ್ರಿವಾಲ್ ಅವರು ತಮ್ಮ ‘ಎಕ್ಸ್’ ಸೈಟ್ ನಲ್ಲಿ ನೀಡಿರುವ ಹೇಳಿಕೆಯಲ್ಲಿ, “ಕಳೆದ 9 ವರ್ಷಗಳಿಂದ ಆಮ್ ಆದ್ಮಿ ಸರ್ಕಾರವನ್ನು ಉರುಳಿಸಲು ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ. ಬಿಜೆಪಿಯ ಪ್ರಯತ್ನ ಯಶಸ್ವಿಯಾಗಲಿಲ್ಲ. ಆಮ್ ಆದ್ಮಿ ಶಾಸಕರನ್ನು ಖರೀದಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು 7 ಶಾಸಕರಿಗೆ ಬಿಜೆಪಿ 25 ಕೋಟಿ ರೂ.ವರೆಗೆ ಮಾತುಕತೆ ನಡೆಸಿದೆ. 21 ಶಾಸಕರ ಜತೆ ಮಾತುಕತೆ ನಡೆಸಲಾಗಿದೆ.

ದೇವರು ಮತ್ತು ಜನರ ಬೆಂಬಲ ಯಾವಾಗಲೂ ನಮ್ಮ ಮೇಲಿದೆ. ನಮ್ಮ ಎಲ್ಲಾ ಶಾಸಕರು ಒಟ್ಟಿಗೆ ಇದ್ದಾರೆ. ಆಮ್ ಆದ್ಮಿ ಸರ್ಕಾರ ಎಷ್ಟು ಒಳ್ಳೆಯ ಕೆಲಸ ಮಾಡಿದೆ ಎಂಬುದು ದೆಹಲಿಯ ಜನರಿಗೆ ಗೊತ್ತಿದೆ. ದೆಹಲಿಯ ಜನರು ಆಮ್ ಆದ್ಮಿ ಪಕ್ಷವನ್ನು ತುಂಬಾ ಪ್ರೀತಿಸುತ್ತಾರೆ.

ಹಾಗಾಗಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸೋಲಿಸುವ ಬಿಜೆಪಿಯ ಪ್ರಯತ್ನ ಯಶಸ್ವಿಯಾಗುವುದಿಲ್ಲ. ಬಿಜೆಪಿಯವರು ನನ್ನನ್ನು ಬಂಧಿಸಿ ಸುಳ್ಳು ಮೊಕದ್ದಮೆ ಹೂಡಿ ಸರ್ಕಾರವನ್ನು ಉರುಳಿಸಲು ಬಯಸುತ್ತಿದ್ದಾರೆ” ಎಂದು ಕೇಜ್ರಿವಾಲ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

2014ರಲ್ಲಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿತ್ತು. ಅಂದಿನಿಂದ ಕೇಂದ್ರ ಸರ್ಕಾರವು ದೆಹಲಿ ಸರ್ಕಾರದ ನಿರ್ಧಾರಗಳಲ್ಲಿ ನಿರಂತರವಾಗಿ ಹಸ್ತಕ್ಷೇಪ ಮಾಡುತ್ತಾ ಬರುತ್ತಿದೆ. ಇದರಿಂದಾಗಿ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದ ನಡುವೆ ಸಂಘರ್ಷ ಏರ್ಪಟ್ಟಿದೆ. ಮತ್ತು 2019ರಲ್ಲಿ ನ್ಯಾಯಾಧೀಶ ಅಶೋಕ್ ಭೂಷಣ್ ಅವರ ಪೀಠವು “ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ” ಎಂದು ತೀರ್ಪು ನೀಡಿತ್ತು. ತರುವಾಯ, ಕೇಂದ್ರ ಸರ್ಕಾರದ ಅಧಿಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಲಾಯಿತು.

ಈ ಪ್ರಕರಣದಲ್ಲಿ ಸಾಂವಿಧಾನಿಕ ಪೀಠದ 5 ನ್ಯಾಯಮೂರ್ತಿಗಳು ಇತ್ತೀಚೆಗೆ ಸರ್ವಾನುಮತದ ತೀರ್ಪು ನೀಡಿದರು. ನ್ಯಾಯಮೂರ್ತಿಗಳ ತೀರ್ಪಿನಲ್ಲಿ, ‘‘2019ರಲ್ಲಿ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ ಪೀಠ ನೀಡಿದ ತೀರ್ಪಿಗೆ ಒಮ್ಮತವಿಲ್ಲ; ಜನರ ಹಿತವನ್ನು ಈಡೇರಿಸಲಿಕ್ಕಾಗಿಯೇ ಕಾನೂನುಗಳನ್ನು ಅಂಗೀಕರಿಸುವ ಅಧಿಕಾರವನ್ನು ಶಾಸಕಾಂಗ ಸಭೆಗಳಿಗೆ ನೀಡಲಾಗಿದೆ.

ಇದು ಕೇಂದ್ರಾಡಳಿತ ಪ್ರದೇಶವಾಗಿದ್ದರೂ, ದೆಹಲಿ ಸರ್ಕಾರ ಒಕ್ಕೂಟದ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತದೆ. ಪ್ರಜಾಪ್ರಭುತ್ವ ಮತ್ತು ಒಕ್ಕೂಟದ ನೀತಿ ಎಂದರೆ ನಮ್ಮ ರಾಜಕೀಯ ಶಾಸನದ ಮೂಲಭೂತ ರಚನೆಯ ಅಂಗ. ಕೆಲವು ನಿರ್ದಿಷ್ಟ ಅಂಶಗಳಲ್ಲಿ ಮಾತ್ರ ಕೇಂದ್ರ ಸರ್ಕಾರವು ಮಧ್ಯ ಪ್ರವೇಶಿಸುವ ಅಧಿಕಾರವನ್ನು ಹೊಂದಿರುತ್ತದೆ. ಅಧಿಕಾರಿಗಳು, ಸಚಿವರ ಆದೇಶವನ್ನು ಕಾರ್ಯಗತಗೊಳಿಸುವುದನ್ನು ತಡೆದರೆ, ಜಂಟಿ ಹೊಣೆಗಾರಿಕೆಗೆ ತೊಂದರೆಯಾಗುತ್ತದೆ.

ವಿಧಾನಸಭೆಯ ಅಧಿಕಾರಕ್ಕೆ ಹೊರಗೆ ಇರುವ ಕೆಲವು ಅಂಶಗಳಲ್ಲಿ ಮಾತ್ರ ಲೆಫ್ಟಿನೆಂಟ್ ಗವರ್ನರ್ ಮಧ್ಯೆ ಪ್ರವೇಶಿಸಬಹುದು. ಜನರ ಆಯ್ಕೆಯನ್ನು ಪ್ರತಿನಿಧಿಸುವ ಅಧಿಕಾರವನ್ನು ಶಾಸನಸಭೆಗೆ ನೀಡಲಾಗಿದೆ. ಪ್ರಜಾಪ್ರಭುತ್ವ ಸರ್ಕಾರದಲ್ಲಿ ಆಡಳಿತದ ಅಧಿಕಾರ, ಜನರಿಂದ ಆಯ್ಕೆಯಾದವರೊಂದಿಗೆ ಮಾತ್ರ ಇರಬೇಕು. ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್‌ಗಿಂತ ಮುಖ್ಯಮಂತ್ರಿಗೆ ಹೆಚ್ಚಿನ ಅಧಿಕಾರವಿದೆ” ಎಂದು ಹೇಳಿದೆ.

ಆದರೆ, ಸುಪ್ರೀಂ ಕೋರ್ಟ್‌ನ ಈ ಐತಿಹಾಸಿಕವಾದ ತೀರ್ಪನ್ನು ರದ್ದುಗೊಳಿಸುವ ಸಲುವಾಗಿ, ಕೇಂದ್ರ ಸರ್ಕಾರ ದೆಹಲಿಯ ಅಧಿಕಾರವನ್ನು ಲೆಫ್ಟಿನೆಂಟ್ ಗವರ್ನರ್‌ಗೆ ನೀಡುವ ತುರ್ತು ಕಾನೂನನ್ನು ರಾತ್ರೋರಾತ್ರಿ ಜಾರಿಗೆ ತಂದಿದೆ. ಜನರಿಂದ ಆಯ್ಕೆಯಾದ ಶಾಸಕಾಂಗಕ್ಕೆ ಅಧಿಕಾರ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಹಿನ್ನಲೆಯಲ್ಲಿ, ‘ಯಾವುದೇ ಶಾಸಕಾಂಗ ಅಥವಾ ನ್ಯಾಯಾಲಯವು ಆದೇಶವನ್ನು ಬದಲಾಯಿಸಲು ಸಾಧ್ಯವಿಲ್ಲ’ ಎಂಬ ಷರತ್ತಿನೊಂದಿಗೆ ಕೇಂದ್ರ ಸರ್ಕಾರ ತುರ್ತು ಕಾನೂನನ್ನು ಜಾರಿಗೆ ತಂದಿದೆ.

ಮುಂದಿನ 6 ತಿಂಗಳೊಳಗೆ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದರೆ ಮಾತ್ರ ಈ ಸುಗ್ರೀವಾಜ್ಞೆ ಕಾನೂನಾಗಲಿದೆ. ಈ ಹಿನ್ನಲೆಯಲ್ಲಿ ದೆಹಲಿಯ ಆಮ್ ಆದ್ಮಿ ಸರ್ಕಾರವು ಈ ಕಾನೂನನ್ನು ಜಾರಿಗೆ ತರದಂತೆ ತಡೆಯಲು ಪ್ರಯತ್ನಿಸುತ್ತಿದೆ. ಲೋಕಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಬಹುಮತವನ್ನು ಹೊಂದಿವೆ.

ಇದರಿಂದಾಗಿ ವಿರೋಧ ಪಕ್ಷಗಳ ಬೆಂಬಲ ಪಡೆಯಲು ದೆಹಲಿ ಸರ್ಕಾರ ತೀವೃತೆಯನ್ನು ತೋರುತ್ತಿದೆ. ಇದಕ್ಕಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಪಕ್ಷ ನಾಯಕರನ್ನು ಭೇಟಿ ಮಾಡಿ ಬೆಂಬಲ ಕೋರುತ್ತಿದ್ದಾರೆ. ಅವರು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಮತ್ತು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿ ಬೆಂಬಲ ಕೋರಿದ್ದಾರೆ. ಇದೀಗ ಎನ್‌ಸಿಪಿ ನಾಯಕ ಶರದ್ ಪವಾರ್ ಅವರನ್ನು ಭೇಟಿಮಾಡಿ ಬೆಂಬಲ ಕೋರಿದ್ದಾರೆ. ಬಳಿಕ ಮಾತನಾಡಿದ ಅರವಿಂದ್ ಕೇಜ್ರಿವಾಲ್, “ರಾಜ್ಯಸಭೆಯಲ್ಲಿ ತುರ್ತು ಕಾಯ್ದೆಯನ್ನು ಸೋಲಿಸಿದರೆ, ಅದುವೇ 2024ರ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಪಂದ್ಯ ಆಗಲಿದೆ. 2024ರಲ್ಲಿ ಮೋದಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬ ಸಂದೇಶ ಇದಾಗಿರುತ್ತದೆ” ಎಂದು ಹೇಳಿದರು.

   

ರಾಜಕೀಯ

ಕೋಲ್ಕತ್ತಾ: ದೆಹಲಿ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತಂದಿರುವ ತುರ್ತು ಕಾಯ್ದೆಯನ್ನು ವಿರೋಧಿಸುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಬಂಗಾಳ ಮುಖ್ಯಮಂತ್ರಿ ಮಮತಾ ಬೆಂಬಲ ನೀಡಿದ್ದಾರೆ.

ದೆಹಲಿ ಸರ್ಕಾರದ ಅಧಿಕಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, “ದೆಹಲಿ ಸರ್ಕಾರವು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಹೊಂದಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿತು. ಇದರ ವಿರುದ್ಧ ಕೇಂದ್ರ ಸರ್ಕಾರ ಹೊಸ ತುರ್ತು ಕಾಯ್ದೆಯನ್ನು ಜಾರಿಗೆ ತಂದಿದೆ. ಇದನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷದ ಸಂಸದರು ವಿರೋಧಿಸಿದ್ದಾರೆ. ಈ ಹಿನ್ನಲೆಯಲ್ಲಿ ದೆಹಲಿ ಸರ್ಕಾರಕ್ಕೆ ಬೆಂಬಲವನ್ನು ಪಡೆಯಲು ಬಿಜೆಪಿ ಆಡಳಿತವಿಲ್ಲದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಕೇಜ್ರಿವಾಲ್ ಮುಂದಾಗಿದ್ದಾರೆ.

ಈ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಯೋಜಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಪಕ್ಷದ ಮುಖಂಡರು ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದರು. ಆಗ ಇಬ್ಬರೂ ಕೇಂದ್ರ ಸರ್ಕಾರದ ತುರ್ತು ಕಾಯ್ದೆ ಬಗ್ಗೆ ಚರ್ಚೆ ನಡೆಸಿದರು.

ನಂತರ, ಮಮತಾ ಬ್ಯಾನರ್ಜಿ ಅವರು ಸುದ್ದಿಗಾರರಿಗೆ ಸಂದರ್ಶನ ನೀಡಿದರು:
“ದೆಹಲಿ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರದ ತುರ್ತು ಮಸೂದೆಯನ್ನು ತೃಣಮೂಲ ಕಾಂಗ್ರೆಸ್ ವಿರೋಧಿಸಲಿದೆ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ಒಂದಾಗುವಂತೆ ಒತ್ತಾಯಿಸುತ್ತೇವೆ. ಕೇಂದ್ರ ಸರ್ಕಾರವು ಸಂವಿಧಾನವನ್ನು ಬದಲಾಯಿಸುತ್ತದೆಯೋ ಅಥವಾ ದೇಶದ ಹೆಸರನ್ನು ಬದಲಾಯಿಸುತ್ತದೆಯೋ ಎಂಬ ಭಯ ನಮಗಿದೆ” ಎಂದರು.