ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Annabhagya Archives » Dynamic Leader
October 23, 2024
Home Posts tagged Annabhagya
ರಾಜಕೀಯ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ “ಅನ್ನ ಭಾಗ್ಯ” ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ, ಮಾತನಾಡಿದರು:

“ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ, ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಅಕ್ಕಿಯನ್ನು ನಮಗೆ ಪುಕ್ಕಟ್ಟೆಯಾಗಿ ಕೊಡುತ್ತಿರಲಿಲ್ಲ; ಕೆಜಿಗೆ 34 ರೂ. ನಮ್ಮಿಂದ ತೆಗೆದುಕೊಳ್ಳುತ್ತಿದ್ದರು.

ಕನ್ನಡ ನಾಡಿನ ಜನರಿಗೆ ಅಕ್ಕಿ ಕೊಡುವುದನ್ನು ಬಂದ್ ಮಾಡಿದ ಕೇಂದ್ರ ಸರ್ಕಾರ, ಬಳಿಕ ಇ-ಹರಾಜು ಮೂಲಕ ಆ ಅಕ್ಕಿಯನ್ನು ಹರಾಜು ಹಾಕಲು ಮುಂದಾಯಿತು. ಆದರೆ, ಈಗ ಇ-ಹರಾಜು ಮೂಲಕ ಅಕ್ಕಿ ಖರೀದಿಸಲು ಯಾರೂ ಮುಂದೆ ಬರುತ್ತಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನು ನಾವು ಡರ್ಟಿ ಪಾಲಿಟಿಕ್ಸ್ ಅಂತ ಕರೆಯಬೇಕೋ ಬೇಡವೋ? ಇದನ್ನು ಕರ್ನಾಟಕದ ಜನತೆಯ ವಿರುದ್ಧದ ದ್ವೇಷದ ರಾಜಕಾರಣ ಎಂದು ಕರೆಯಬೇಕೋ ಬೇಡವೋ?

4 ಕೋಟಿ 42 ಲಕ್ಷ ಫಲಾನುಭವಿಗಳಿಗೆ ಈಗ ತಲಾ 170 ರೂ. ನೇರವಾಗಿ ಅವರ ಖಾತೆಗೆ ವರ್ಗಾವಣೆ ಆಗುತ್ತಿದೆ. ಬಡವರು, ಮಧ್ಯಮ ವರ್ಗದವರು ಎರಡು ಹೊತ್ತು ಅನ್ನ ತಿಂದರೆ ಬಿಜೆಪಿಗೆ ಯಾಕೆ ಹೊಟ್ಟೆಯುರಿ? ನಾಡಿನ ಜನತೆ ತಮ್ಮ ಖಾತೆಗೆ ಬರುವ ಹಣವನ್ನು ಊಟ, ಆಹಾರಕ್ಕಾಗಿ ಖರ್ಚು ಮಾಡಿ ನೆಮ್ಮದಿಯ ಬದುಕು ನಡೆಸಬೇಕು ಎಂದು ಮನವಿ ಮಾಡುತ್ತೇನೆ” ಎಂದರು.

ರಾಜಕೀಯ

“BJP-JDSನವರು ನಾವು ಕೊಟ್ಟ ಗ್ಯಾರಂಟಿಗಳು ಜಾರಿಯಾಗಲ್ಲ ಎಂದು ಕಂಡ ಕಂಡಲ್ಲಿ ಹೇಳಿಕೊಂಡು ತಿರುಗಾಡುತ್ತಿದ್ದರು. ಹಾಗೆ ಹೇಳಿಕೊಂಡು ತಿರುಗಾಡುವುದು ಅವರ ಸಹಜ ಗುಣ. ತಾನು ಕಳ್ಳ ಪರರ ನಂಬ ಮನಃಸ್ಥಿತಿ ಅವರದ್ದು”

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ಇಂದಿನಿಂದ ಆರಂಭವಾಗಲಿದೆ. ಗೃಹಜ್ಯೋತಿ ಯೋಜನೆಯಡಿ ಈ ತಿಂಗಳಿನಿಂದ ನಮ್ಮ ಸರ್ಕಾರ 200 ಯೂನಿಟ್‌ವರೆಗೆ ವಿದ್ಯುತ್ ಉಚಿತವಾಗಿ ನೀಡಲಿದೆ. ಅನ್ನಭಾಗ್ಯ ಯೋಜನೆಯಡಿ 5 kg ಅಕ್ಕಿ ಹಾಗೂ ಇನ್ನುಳಿದ 5 kg ಅಕ್ಕಿಯ ಬದಲಾಗಿ ರೂ. 170 ನೀಡಲಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

“BJP-JDS ನವರು ನಾವು ಕೊಟ್ಟ ಗ್ಯಾರಂಟಿಗಳು ಜಾರಿಯಾಗಲ್ಲ ಎಂದು ಕಂಡ ಕಂಡಲ್ಲಿ ಹೇಳಿಕೊಂಡು ತಿರುಗಾಡುತ್ತಿದ್ದರು. ಹಾಗೆ ಹೇಳಿಕೊಂಡು ತಿರುಗಾಡುವುದು ಅವರ ಸಹಜ ಗುಣ. ತಾನು ಕಳ್ಳ ಪರರ ನಂಬ ಮನಃಸ್ಥಿತಿ ಅವರದ್ದು. ಆದರೆ ನಾವು ಅಧಿಕಾರಕ್ಕೆ ಬಂದ ಹದಿನೈದೇ ದಿನದಲ್ಲಿ ಶಕ್ತಿ ಯೋಜನೆ ತಂದೆವು. ಇಂದಿನಿಂದ‌ ಗೃಹಜ್ಯೋತಿ/ಅನ್ನಭಾಗ್ಯ ಜಾರಿಗೆ ಬರಲಿದೆ.

ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ಇಂದಿನಿಂದ ಜಾರಿಯಾಗುವ ಮೂಲಕ ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ‌ಮೂರು ಈಡೇರಿದಂತಾಗಿದೆ. ಗೃಹಲಕ್ಷ್ಮಿ ಯೋಜನೆ ಆಗಸ್ಟ್ 15 ರಂದು ಪ್ರಾರಂಭವಾಗಲಿದೆ. ಮಾತು ಕೊಡುವುದು ದೊಡ್ಡದಲ್ಲ. ಆದರೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ನಿಜವಾದ ಸವಾಲು. ಆ ಸವಾಲನ್ನು ನಾವು ಇಂದು ಮೆಟ್ಟಿ ನಿಂತಿದ್ದೇವೆ” ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಬಡತನ ರೇಖೆಗಿಂತ ಕೆಳಗಿರುವ ಪ್ರತಿ ವ್ಯಕ್ತಿಗೆ, ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವುದಾಗಿ, ಚುನಾವಣೆ ಸಂದರ್ಭದಲ್ಲಿ ಘೋಷಣೆ ಮಾಡಿತ್ತು. ಪ್ರತಿಷ್ಠಿತ ಅನ್ನಭಾಗ್ಯ ಯೋಜನೆಯನ್ನು ಜುಲೈ 1 ರಿಂದ ಜಾರಿಗೆ ತರಲು ಯೋಜನೆ ಹಾಕಿಕೊಂಡು, ಕೇಂದ್ರ ಸರ್ಕಾರದ ಬಳಿ ಹೆಚ್ಚುವರಿಯಾಗಿ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಹಣಕೊಟ್ಟು ಖರೀದಿ ಮಾಡಲು ಬೇಡಿಕೆ ಇಟ್ಟಿತ್ತು. ಆದರೆ, ಕೇಂದ್ರ ಸರ್ಕಾರ ಈ ಬೇಡಿಕೆಯನ್ನು ಒಪ್ಪಿಕೊಳ್ಳದೇ ರಾಜ್ಯಗಳಿಗೆ ಅಕ್ಕಿ ಮಾರಾಟವನ್ನು ಏಕಾಏಕಿ ನಿಲ್ಲಿಸಿತು.

ಕೆಲವು ದಿನಗಳ ಹಿಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದ ಸಂದರ್ಭದಲ್ಲೂ ಇದರ ಬಗ್ಗೆ ಪ್ರಸ್ತಾಪ ಮಾಡಿದ್ದರು. ಅಮಿತ್ ಶಾ ಅವರು ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡುವುದಾಗಿ ಹೇಳಿದ್ದರು ಎಂದು ಪತ್ರಿಕೆಗಳಲ್ಲಿ ವರದಿಯಾಗಿತ್ತು. ಆದರೆ, ರಾಜ್ಯ ಸರ್ಕಾರದ ಬೇಡಿಕೆಗಳಿಗೆ ಕೇಂದ್ರವು ಸೊಪ್ಪುಹಾಕಲಿಲ್ಲ. ಅದೇ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಬೇರೆ ಮೂಲಗಳಿಂದಲೂ ಅಕ್ಕಿ ಖರೀದಿಗೆ ಪ್ರಯತ್ನ ಮಾಡುತಿತ್ತು.

ಆಂಧ್ರಪ್ರದೇಶ, ತೆಲಂಗಾಣ, ಪಂಜಾಬ್ ಮುಂತಾದ ರಾಜ್ಯಗಳೂ ತಮ್ಮ ಬಳಿ ಅಷ್ಟೊಂದು ಅಕ್ಕಿ ಸಂಗ್ರವಿಲ್ಲ ಎಂದು ಹೇಳಿ ಕೈ ತೊಳೆದುಕೊಂಡಿತು. ರಾಜಕೀಯವಾಗಿ ಸೇಡು ತೀರಿಸಿಕೊಂಡ ಬಿಜೆಪಿ, ಅಕ್ಕಿ ಕೊಡುವ ವಿಚಾರವನ್ನು ಮುಂದಿಟ್ಟು, ಕಾಂಗ್ರೆಸ್ ಸರಕಾರವನ್ನು ಜನರ ಮುಂದೆ ಬೆತ್ತಲೆಗೊಳೀಸುವ ಪ್ರಯತ್ನವನ್ನು ಮಾಡಿತು. ಕೆಳದ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ 90% ಮತದಾರರು, ರಾಜ್ಯ ಸರ್ಕಾರದ ಪ್ರತಿಷ್ಠಿತ ಅನ್ನಭಾಗ್ಯ ಯೋಜನೆಯ ಫಲಾನುಭವಿಳು ಎಂಬುದನ್ನು ಬಿಜೆಪಿ ಈ ಸಂದರ್ಭದಲ್ಲಿ ಮರೆಯಬಾರದು.

“10 ಕೆಜಿ ಅಕ್ಕಿಯನ್ನು ಕೊಡಲಾಗದ ಸರ್ಕಾರ”, “ಕೇಂದ್ರ ಕೊಡುವ ಅಕ್ಕಿಗೆ ಸಿದ್ದರಾಮಯ್ಯ ಫೋಟೋ ಅಳವಡಿಸಿಕೊಳ್ಳೂವ ಪ್ರಯತ್ನ”, “ಅಕ್ಕಿ ಕೊಡುವ ಘೋಷಣೆಗೆ ಮುಂಚೆ ಕೇಂದ್ರದ ಅನುಮತಿಯನ್ನು ಪಡೆಯಲಾಗಿತ್ತೆ”, ಮೋದಿ ಕೊಡುವ 5 ಕೆಜಿ ಅಕ್ಕಿಯೊಂದಿಗೆ ಸರ್ಕಾರ ಕೊಡುವ 10 ಕೆಜಿ ಅಕ್ಕಿಯನ್ನೂ ಸೇರಿಸಿ 15 ಕೆಜಿ ಅಕ್ಕಿ ಕೊಡಿ” ಎಂಬಿತ್ಯಾದಿ ತಲೆಹರಟೆ ರಾಜಕೀಯವನ್ನು, ಕಳೆದ ಒಂದು ತಿಂಗಳಿನಿಂದ ಬಿಜೆಪಿಯ ಕೆಲವು ನಾಯಕರು ಮಾಡುತ್ತಿರುವುದು ನಾಚಿಕೆಗೇಡು.

ಕೇಂದ್ರ ಸರ್ಕಾರದ ಗೋದಾಮುಗಳಲ್ಲಿ ಹೆಚ್ಚುವರಿಯಾಗಿ ಸಂಗ್ರಹ ಮಾಡಿಟ್ಟಿರುವ ಅಕ್ಕಿಯನ್ನು ಕೊಡದೇ ತಡೆಮಾಡಿ, ಜನರಿಗೆ ಅಕ್ಕಿ ಕೊಡುವಂತೆ ಸರ್ಕಾರವನ್ನು ಪೀಡಿಸುತ್ತಿರುವ ರಾಜ್ಯ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಇಬ್ಬಗೆಯ ನೀತಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ ಎಂಬುದನ್ನು, ಬಿಜೆಪಿ ಏಕೆ ಗಮನಿಸುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಜನರ ಮೂಲಭೂತ ಸೌಲಭ್ಯಗಳ ಮೇಲೆ ಬಿಜೆಪಿ ಚೆಲ್ಲಾಟ ಆಡುತ್ತಿರುವುದನ್ನು ನಿಲ್ಲಿಸದಿದ್ದರೆ, ಹಿಂದಿನ ಫಲಿತಾಂಷವೇ ಮುಂದಿನ ಚುನಾವಣೆಯಲ್ಲೂ ಮರುಕಳಿಸುತ್ತದೆ ಎಂಬುದನ್ನು ಬಿಜೆಪಿಗರು ಅರ್ಥ ಮಾಡಿಕೊಳ್ಳಬೇಕು.    

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ-2013ರ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ನಗರ ಮತ್ತು ಗ್ರಾಮೀಣ ಪ್ರದೇಶದ ಅರ್ಹ ಬಡಜರಿಗೆ 5 ಕೆಜಿ ಅಕ್ಕಿಯನ್ನು ಕೊಡುವ ಕಾಯ್ದೆಯನ್ನು ತಂದಿದ್ದು, ಅಂದಿನ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ (ಯುಪಿಎ) ಸರ್ಕಾರ. ಅದನ್ನು ಮರೆಮಾಚುತ್ತಿರುವ ಬಿಜೆಪಿ ನಾಯಕರು, “ಮೋದಿ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ; ಮೋದಿ ಅಕ್ಕಿ- ಮೋದಿ ಅಕ್ಕಿ” ಎಂದು ಹೇಳಿಕೊಂಡು ಓಡಾಡುವುದು ಅಮಾಯಕರನ್ನು ನಂಬಿಸಿ, ವಂಚಿಸುವ ಕೃತ್ಯವಲ್ಲದೇ ಮತ್ತೇನು ಇಲ್ಲ.

ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯ್ ಅವರು, “170 ರೂಪಾಯಿಗೆ ಎರಡು ಕೆಜಿ ಅಕ್ಕಿಯೂ ಬರಲ್ಲ” ಎಂದಿದ್ದಾರೆ. ಇವರ ಕಾಲದಲ್ಲಿ ಬಡವರಿಗೆ ಪಡಿತರದಲ್ಲಿ ಜೀರಾ, ಕೇಸರ್ ಕಲಿ, ಬುಲೆಟ್ ರೈಸ್ ಮುಂತಾದ ಸ್ಥಿತಿವಂತರು ತಿನ್ನುವ ಅಕ್ಕಿ ನೀಡಲಾಗುತಿತ್ತೇ ಎಂಬುದನ್ನು ಅವರು ಈ ರಾಜ್ಯದ ಜನತೆಗೆ ಹೇಳಬೇಕು. 10 ಕೆಜಿ, 15 ಕೆಜಿ ಅಕ್ಕಿಗೂ ಪರದಾಡುವಂತ ಬಡಜನರು ಇನ್ನೂ ಈ ದೇಶದಲ್ಲಿ ಇದ್ದಾರೆ ಎಂಬುದಕ್ಕೆ ನೀವುಗಳೇ ಸಾಕ್ಷಿ. ಭಾರತ ಇನ್ನು ಆರ್ಥಿಕ ಪ್ರಗತಿಯನ್ನು ಹೊಂದಿಲ್ಲ; ಇನ್ನು ಬಡತನದಲ್ಲಿಯೇ ಇದೆ ಎಂಬುದನ್ನು ಮೋದಿ ಅವರ 9 ವರ್ಷಗಳ ಆಡಳಿತ ಈ ಜಗತ್ತಿಗೆ ತೋರಿಸಿಕೊಟ್ಟಿದೆ.

ಈ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ತನ್ನ ಚುನಾವಣಾ ಗ್ಯಾರಂಟಿಯನ್ನು ಪೂರೈಸಲು ಅಗತ್ಯವಾದ ದೊಡ್ಡ ಪ್ರಮಾಣದ ಅಕ್ಕಿಯನ್ನು ಸಂಗ್ರಹಿಸಲು ತೊಂದರೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂ.ನಂತೆ ಹಣ ಪಾವತಿಸಲು ನಿರ್ಧರಿಸಿದೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರವು ಉಚಿತವಾಗಿ ನೀಡುವ ಐದು ಕೆಜಿ ಅಕ್ಕಿ ಜೊತೆಗೆ ತಿಂಗಳಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅಕ್ಕಿ ಸಂಗ್ರಹಿಸಲು ಸಾಧ್ಯವಾಗದ ಕಾರಣ ಜುಲೈನಿಂದಲೇ ಹಣ ಪಾವತಿ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಭಾರತೀಯ ಆಹಾರ ನಿಗಮ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳ ಪ್ರಮಾಣಿತ ದರವನ್ನು ನಿಗದಿಪಡಿಸಿರುವುದರಿಂದ ಪ್ರತಿಯೊಬ್ಬ ಫಲಾನುಭವಿಗೆ 34 ರೂಗಳನ್ನು ನೀಡಲು ಸಂಪುಟ ಸಭೆ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ, “ನಾವು ಅಕ್ಕಿ ಖರೀದಿಸಲು ಎಲ್ಲಾ ಪ್ರಯತ್ನ ಮಾಡಿದೆವು. ಆದರೆ ನಮಗೆ ಅಗತ್ಯವಿರುವಷ್ಟು ಅಕ್ಕಿಯನ್ನು ಪೂರೈಸಲು ಯಾವುದೇ ಸಂಸ್ಥೆ ಮುಂದೆ ಬಂದಿಲ್ಲ. ಹೀಗಾಗಿ ಅಕ್ಕಿ ಖರೀದಿ ತಡವಾಗುತ್ತಿದೆ. ಹೀಗಾಗಿ ಅಕ್ಕಿ ಬದಲಿಗೆ ಹಣ ನೀಡಲು ಸಂಪುಟ ಸಭೆ ತೀರ್ಮಾನಿಸಿದೆ.

ಒಂದು ಕಾರ್ಡ್‌ನಲ್ಲಿ ಒಬ್ಬ ವ್ಯಕ್ತಿ ಇದ್ದರೆ, ಆ ವ್ಯಕ್ತಿಗೆ ಅನ್ನ ಭಾಗ್ಯ ಯೋಜನೆಯಡಿ ಐದು ಕೆಜಿ ಹೆಚ್ಚುವರಿ ಅಕ್ಕಿಗೆ ತಿಂಗಳಿಗೆ 170 ರೂ. ಸಿಗುತ್ತದೆ ಎಂದು ಸಚಿವರು ವಿವರಿಸಿದರು. ಪಡಿತರ ಚೀಟಿಯಲ್ಲಿ ಇಬ್ಬರಿದ್ದರೆ ಅವರು 340 ರೂ.ಗೆ ಅರ್ಹರಾಗಿರುತ್ತಾರೆ. ಐವರು ಸದಸ್ಯರಿದ್ದರೆ ಅವರಿಗೆ ತಿಂಗಳಿಗೆ 850 ರೂಪಾಯಿಯನ್ನು ನೀಡಲಾಗುತ್ತದೆ. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಸರ್ಕಾರ ವ್ಯವಸ್ಥೆ ಮಾಡಿದೆ. ಇದು ಜುಲೈ 1ರಿಂದಲೇ ಜಾರಿಗೆ ಬರಲಿದೆ” ಎಂದು ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ. ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು, ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು.

ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತರಲು ರಾಜ್ಯಕ್ಕೆ ಹೆಚ್ಚುವರಿಯಾಗಿ ಬೇಕಾಗಿರುವ ಅಕ್ಕಿಯನ್ನು ಖರೀದಿಸಲು ಕಾಲವಿಳಂಬ ಆಗುತ್ತಿದ್ದರೂ ಅದಕ್ಕೆ ಬದಲಾಗಿ ಫಲಾನುಭವಿಗಳಿಗೆ ಹಣ ಕೊಡುವ ಮೂಲಕ ಯೋಜನೆಯನ್ನು ಜುಲೈ 1 ರಿಂದಲೇ ಜಾರಿಗೊಳಿಸಬೇಕು ಎಂಬ ರಾಜ್ಯ ಸರ್ಕಾರದ ನಿರ್ಧಾರ ಶ್ಲಾಘನೀಯವಾದದ್ದು. ಏನೇ ಇರಲಿ, ರಾಜಕೀಯವಾಗಿ ಇದು ಬಿಜೆಪಿಗೆ ಮತ್ತೊಂದು ಮುಖಭಂಗವೇ.

ರಾಜಕೀಯ

ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಮೋಸದ ಪಟ್ಟಿ ಹೇಳುತ್ತಾ ಹೋದರೆ ಪುಸ್ತಕವೇ ಬರೆಯಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

“ನೀವು ಮನೆಗೆ ಮಾರಿ, ಪರರಿಗೆ ಉಪಕಾರಿ. ನಿಮ್ಮ ಈ ಮನೆಮುರಕುತನಕ್ಕೆ ಈಗಾಗಲೇ ಜನ ಪಾಠ ಕಲಿಸಿದ್ದಾರೆ‌.‌ ಆದರೂ ನಿಮಗೆ ಬುದ್ದಿ ಬಂದಿಲ್ಲ. ಕೇಂದ್ರ ಎಲ್ಲವನ್ನೂ ಕರ್ನಾಟಕಕ್ಕೆ ಕೊಡಲಿ ಎಂಬ ಸ್ವಾರ್ಥ ನಮ್ಮಲಿಲ್ಲ. ಗೋದಾಮುಗಳಲ್ಲಿ ಅಕ್ಕಿಯನ್ನು ಕೊಳೆಯಿಸುವ ಬದಲು ಬಡವರಿಗೆ ಕೊಡಿ ಎಂದಿದ್ದೇವೆ. ಅದೂ ಮಾರುಕಟ್ಟೆ ದರದಲ್ಲಿ. ಇದು ತಪ್ಪೆ” ಎಂದು ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್‌ ಅವರನ್ನು ಪ್ರಶ್ನೆ ಮಾಡಿದ್ದಾರೆ.

“ಕೇಂದ್ರದ ನಿಮ್ಮ BJP ಸರ್ಕಾರ ಕರ್ನಾಟಕಕ್ಕೆ ಮಾಡಿರುವ ಅನ್ಯಾಯ ಒಂದೇ ಎರಡೇ? GST ಬಾಕಿಯಲ್ಲಿ ಮೋಸ, GST ಪರಿಹಾರದಲ್ಲಿ ಮೋಸ, ನೆರೆ ಪರಿಹಾರದಲ್ಲಿ ಮೋಸ, ಬರ ಪರಿಹಾರದಲ್ಲೂ ಮೋಸ, ಯೋಜನೆ ಅನುಷ್ಠಾನದಲ್ಲೂ ಮೋಸ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ಮಾಡಿರುವ ಮೋಸದ ಪಟ್ಟಿ ಹೇಳುತ್ತಾ ಹೋದರೆ ಪುಸ್ತಕವೇ ಬರೆಯಬಹುದು.

ನೀವು ಈ ರಾಜ್ಯದ ಮನೆ ಮಗನಾಗಿ ಬಡವರ ಹೊಟ್ಟೆ ತುಂಬಿಸುವ ಅನ್ನಭಾಗ್ಯ ಯೋಜನೆಗೆ ಹೆಗಲು ಕೊಡಬೇಕು. ರಾಜ್ಯದ ಬಡವರಿಗೆ ಅಕ್ಕಿ ಕೊಡದೇ ದ್ವೇಷದ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಕೇಂದ್ರ ನಾಯಕರಿಗೆ ತಿಳಿಹೇಳಬೇಕು. ಅದು ಬಿಟ್ಟು ಮೋದಿಯವರ ದ್ವೇಷದ ಬೆಂಕಿಗೆ ನೀವೆ ತುಪ್ಪ ಸುರಿದರೆ ಬಡವರ ಶಾಪ ನಿಮಗೆ ತಟ್ಟದಿರುತ್ತದೆಯೇ” ಎಂದು ಹೇಳಿದ್ದಾರೆ.

ರಾಜಕೀಯ

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹ ಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

“ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದೇನೆ. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಗೃಹ ಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲಾಗುವುದು. ಜೂನ್‌ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.

ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್‌ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ ಸೆಪ್ಟೆಂಬರ್‌ 30 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ ಆಧಾರ್‌, ಆರ್.ಆರ್.ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ.

ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ 17 ಅಥವಾ 18 ರಂದು ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಚರ್ಚಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್‌ 15 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಗೆ ಆನ್‌ಲೈನ್‌ ನಲ್ಲಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಅರ್ಜಿದಾರರು ರೇಷನ್‌ ಕಾರ್ಡ್‌ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ, ಆಧಾರ್‌ ಸಂಯೋಜನೆಯಾಗಿರುವ ಬ್ಯಾಂಕ್‌ ಖಾತೆಯ ವಿವರವನ್ನು ಒದಗಿಸಬೇಕು. ಈ ದಾಖಲೆಗಳ ಪ್ರತಿಗಳನ್ನು ಆಫ್‌ಲೈನ್‌ ಅರ್ಜಿಗಳೊಂದಿಗೂ ಸಲ್ಲಿಸಬಹುದು.

ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್‌ ಖಾತೆಗೆ ನೆರವಿನ ಮೊತ್ತ ಜಮೆ ಆಗಲಿದೆ. ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಶೇ.85ಕ್ಕೂ ಹೆಚ್ಚು ಕುಟುಂಬಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಪಾವತಿದಾರರಲ್ಲದ ಎಪಿಎಲ್‌ ಕಾರ್ಡುದಾರರಿಗೂ ಈ ಸೌಲಭ್ಯ ದೊರೆಯಲಿದೆ

ರಾಜಕೀಯ

ಮಂಗಳೂರು: ಸಾರ್ವಜನಿಕ ಬಸ್‌ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವುದಾಗಿ ಕಾಂಗ್ರೆಸ್ ಪಕ್ಷವು ಇಂದು ಐದನೇ ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ಮೊದಲ 4 ಗ್ಯಾರಂಟಿ ಯೋಜನೆಯನ್ನು ಸೇರಿ, ಈ ಐದೂ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಲಾಗುವುದು ಎಂಬ ಭರವಸೆಯನ್ನು ಸಹ ನೀಡಿದೆ.

ಮಂಗಳೂರಿನಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಪ್ರಚಾರ ಸಮಾವೇಶದಲ್ಲಿ ರಾಹುಲ್‌ ಗಾಂಧಿ 5ನೇ ಗ್ಯಾರಂಟಿಯನ್ನು ಘೋಷಣೆ ಮಾಡಿದರು. ಬಳಿಕ ಮಾತನಾಡಿ ರಾಹುಲ್‌ ಗಾಂಧಿ, “ಮೋದಿ ಅವರೇ ನಮ್ಮ ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಹೇಳಿದ್ದೀರಿ. ಈ ಸಂದರ್ಭದಲ್ಲಿ ನಿಮಗೆ ಒಂದು ಸವಾಲು ಹಾಕುತ್ತಿದ್ದೇನೆ. ನಮ್ಮ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು, ನಾವು ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ನಾವು ಈ ಯೋಜನೆಗಳನ್ನು ಜಾರಿ ಮಾಡಿದ ನಂತರ ನೀವು ದೇಶದಲ್ಲಿ ಈ ಯೋಜನೆಗಳನ್ನು ಜಾರಿ ಮಾಡಲು ಸಿದ್ಧರಿದ್ದೀರಾ”? ಎಂದು ಸವಾಲು ಹಾಕಿದರು.

ಸಾಂದರ್ಭಿಕ ಚಿತ್ರ

ಈ ಹಿಂದೆ ಕಾಂಗ್ರೆಸ್ಪಕ್ಷ ಘೋಷಿಸಿದ ನಾಲ್ಕು ಗ್ಯಾರಂಟಿಗಳು:
ಗ್ಯಾರಂಟಿ-1: ಭಾಗ್ಯಜ್ಯೋತಿ ಯೋಜನೆಯಲ್ಲಿ ರಾಜ್ಯದಲ್ಲಿ ಪ್ರತಿ ಮನೆಗೂ 200 ಯೂನಿಟ್‌ನಷ್ಟು ಉಚಿತವಾಗಿ ವಿದ್ಯುತ್‌ ನೀಡಲಾಗುವುದು.

ಗ್ಯಾರಂಟಿ-2: ಗೃಹಲಕ್ಷ್ಮೀ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಪ್ರತಿ ತಿಂಗಳು ರೂ.2 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು.
ಗ್ಯಾರಂಟಿ-3: ಬಿಪಿಎಲ್‌ ಕುಟುಂಬಗಳಿಗೆ ಪ್ರತಿ ತಿಂಗಳು ತಲಾ ಒಬ್ಬ ವ್ಯಕ್ತಿಗೆ 10 ಕೆ.ಜಿ ಅನ್ನಭಾಗ್ಯ ಅಕ್ಕಿ ನೀಡಲಾಗುವುದು.
ಗ್ಯಾರಂಟಿ-4: ಯುವ ನಿಧಿ ಯೋಜನೆಯಲ್ಲಿ ಪದವೀಧರ ನಿರುದ್ಯೋಗ ಯುವಜನರಿಗೆ ಪ್ರತಿ ತಿಂಗಳು 3 ಸಾವಿರ ಭತ್ಯೆ, ಡಿಪ್ಲೊಮೋ ಮುಗಿಸಿದವರಿಗೆ ಒಂದೂವರೆ ಸಾವಿರ ರೂಪಾಯಿ ಭತ್ಯೆ ನೀಡುವುದಾಗಿ ಭರವಸೆ ನೀಡಿದೆ.

“ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 150 ಸ್ಥಾನ ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. 40% ಕಮೀಷನ್ ಪಡೆಯುವ ಬಿಜೆಪಿಗೆ‌ 40 ಸೀಟ್ ಅಷ್ಟೇ ನೀಡಿ” ಎಂದರು.

“ಇಂದು ಯಾವ ಪರಿಸ್ಥಿತಿ ಇದೆ ಎಂದರೆ, ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ; ಏನೇ ಆದರೂ ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿಸಲು ಸಾಧ್ಯವಿಲ್ಲ. 40 ಕೋಟಿ ಜನ ಮತ್ತೆ ಬಡತನ ರೇಖೆಗಿಂತ ಕೆಳಗೆ ಹೋಗಿದ್ದಾರೆ. ದೇಶದ ಶೇ.1ರಷ್ಟು ಜನರ ಬಳಿ ದೇಶದ 40% ಸಂಪತ್ತು ಇದೆ. 90 ಲಕ್ಷ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಮುಚ್ಚಿವೆ ಇದು ಬಿಜೆಪಿಯ ವಿಕಾಸ. ಭ್ರಷ್ಟಾಚಾರ 40%, ನಿರುದ್ಯೋಗ, ಬೆಲೆ ಏರಿಕೆಯೆ ಬಿಜೆಪಿಯ ಸಾಧನೆ” ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು.