ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
B Team Archives » Dynamic Leader
October 23, 2024
Home Posts tagged B Team
ರಾಜಕೀಯ

ಬೆಂಗಳೂರು: ಜಾತ್ಯತೀತ ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ಪೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ ಸಿದ್ದರಾಮಯ್ಯನವರೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.   

ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್ ಮೆಂಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ ಕಾಂಗ್ರೆಸ್ ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ? ಎಂದು ವ್ಯಂಗ್ಯವಾಡಿದ್ದಾರೆ.

ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ನಿಮಗೆ ನಾಚಿಕೆ ಆಗುವುದಿಲ್ಲವೇ? ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಖಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ಪ್ರಕರಣದ ಪ್ರಮುಖ ಮಾಹಿತಿಯನ್ನು ಕೆನಡಾ ಹಂಚಿಕೊಂಡರೆ ತನಿಖೆಗೆ ಸಿದ್ಧ!

2006ರಲ್ಲಿ ಜಿಜೆಪಿ ಜತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು ಜೆಡಿಎಸ್ ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ? ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು ಎಂದು ಮೂದಲಿಸಿದ್ದಾರೆ.

ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖಾರವಾಗಿ ಪ್ರಶ್ನಿಸಿದ್ದಾರೆ.

ರಾಜಕೀಯ

ಬೆಂಗಳೂರು: ‘ಬಾಳೆಗೊಂದು ಏಟು, ಬಾಳಿಗೊಂದು ಮಾತು’ ಎನ್ನುವ ಮಾತಿದೆ. ಸುಳ್ಳುಪೊಳ್ಳುಗಳ ಸೌಧದ ಮೇಲೆ ನಿಂತಿರುವ ಕಾಂಗ್ರೆಸ್ ಪಕ್ಷಕ್ಕೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ!! ಮೂರ್ಖರಿಗೆ ಎಷ್ಟು ಹೇಳಿದರೂ ಅಷ್ಟೇ, ಅರ್ಥವೇ ಆಗುವುದಿಲ್ಲ ಎಂದು ಜೆಡಿಎಸ್ ಪಕ್ಷ ಕಾಂಗ್ರೆಸನ್ನು ತರಾಟೆಗೆ ತೆಗೆದುಕೊಂಡಿದೆ.

ಹೆಚ್.ಡಿ.ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆಯಲ್ಲಿ ಪಕ್ಷ ವಿಸರ್ಜನೆ ಮಾತು ಹೇಳಿದ್ದು ನಿಜ. “ನನಗೆ ಬಹುಮತದ ಸರಕಾರ ಕೊಟ್ಟರೆ 5 ವರ್ಷದಲ್ಲಿ ಪಂಚರತ್ನಗಳನ್ನು ಜಾರಿ ಮಾಡುವೆ. ಮಾತು ತಪ್ಪಿದರೆ ಮತ್ತೆಂದೂ ಬಾರಿ ಮತ ಕೇಳಲು ಬರುವುದಿಲ್ಲ, ಪಕ್ಷವನ್ನೇ ವಿಸರ್ಜಿಸುತ್ತೇನೆ” ಎಂದಿದ್ದರು. ಈ ಹೇಳಿಕೆಯ ವಿಡಿಯೋ, ಸುದ್ದಿಗಳಿವೆ ಗಮನಿಸಬಹುದು.

ಕಾಂಗ್ರೆಸ್ ಪಕ್ಷಕ್ಕೆ ಈ ಪರಿಯ ಅಜ್ಞಾನವೇ? ಪರಮಾಶ್ಚರ್ಯ!! ವರ್ಷದ ಕೂಳಿನ ಪಂಚರತ್ನಗಳಿಗೂ, ಒಪ್ಪೊತ್ತಿನ ಹರುಷದ ನಕಲಿ ಗ್ಯಾರಂಟಿಗಳಿಗೂ ಹೋಲಿಕೆಯೇ? ಎಲ್ಲರಿಗೂ ಫ್ರೀ ಫ್ರೀ ಎಂದು ಹೇಳಿ ಪಂಗನಾಮ ಹಾಕಿದ್ದು ಗೊತ್ತಿಲ್ಲದ ಸಂಗತಿಯೇ? ಎಲ್ಲಾ ಕಾಲದಲ್ಲಿಯೂ ಟೋಪಿ ಹಾಕಬಹುದು ಎನ್ನುವ ಅಹಂಕಾರವೇ?

ಇದನ್ನೂ ಓದಿ: ದೀಪಾವಳಿಯಂದು 2 ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸಬಹುದು: ಸುಪ್ರೀಂ ಕೋರ್ಟ್

ಕೆಟ್ಟ ದಾರಿಯಲ್ಲಿ ಅಧಿಕಾರ ಹಿಡಿಯುವುದು ಕಾಂಗ್ರೆಸ್ ಚಾಳಿ. ಶೆಟ್ಟರ್, ಸವದಿಯಂಥ ಬಿಜೆಪಿಗರನ್ನು ಬಲೆಬೀಸಿ ಬಿಗಿದಪ್ಪಿಕೊಂಡ ಹಸ್ತಪಕ್ಷಕ್ಕೆ, ಮೈಯ್ಯೆಲ್ಲಾ ಉರಿ ಹತ್ತಿಕೊಂಡಿದೆ. ಸ್ವಇಚ್ಛೆಯಿಂದಲೇ ಉರಿ ಇಟ್ಟುಕೊಂಡರೆ ಹೊಣೆ ಯಾರು? ಬಹುಶಃ,ಅಂಗೈಲಿ ಕೇಶವೇಕೆ ಬೆಳೆಯುತ್ತಿಲ್ಲವೆಂದು ಕೈಕೈ ಉಜ್ಜಿಕೊಳ್ಳುತ್ತಿದೆಯಾ ಕಾಂಗ್ರೆಸ್?

ಜೆಡಿಎಸ್‌ ಬಿಜೆಪಿ ಬಾಗಿಲಿಗೆ ಪದೇಪದೆ ಹೋಗುತ್ತದೆಂದು ಹಲ್ಲು ಗಿಂಜುವ ಕಾಂಗ್ರೆಸ್ಸಿಗರಿಗೆ; ಅದೇ ಬಿಜೆಪಿ ಜತೆ ಅಧಿಕಾರ ಅನುಭವಿಸಿದ ನಿತೀಶ್‌ ಕುಮಾರ್‌, ಮಮತಾ ಬ್ಯಾನರ್ಜಿ, ಸ್ಟಾಲಿನ್, ಉದ್ಧವಠಾಕ್ರೆ ಮನೆಗಳ ಸುತ್ತ ಗಿರಕಿ ಹೊಡೆಯಲು ಸಂಕೋಚವಿಲ್ಲ! ಗಂಗೆಯಲ್ಲಿ ಮಿಂದರೆ ಕಾಗೆ ಕೋಗಿಲೆ ಆಗುತ್ತದೆಯೇ ಕಾಮಾಲೆ ಕಣ್ಣಿನ ಕಾಂಗ್ರೆಸ್ಸಿಗರೇ?

ಪ್ರಜಾಪ್ರಭುತ್ವದಲ್ಲಿ ಮೈತ್ರಿ, ಹೊಂದಾಣಿಕೆ ಸಾಮಾನ್ಯ. ಆಯಾ ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತದೆ. ದೇಶ ವಿದೇಶದಲ್ಲೂ ಇದ್ದದ್ದೇ. ಆದರೆ, ನಮ್ಮ ಪಕ್ಷವನ್ನು ಬಿಜೆಪಿ ಬೀ ಟೀಂ ಎಂದು ಮೂದಲಿಸುವ ಕಾಂಗ್ರೆಸ್ಸಿಗೆ, ಸ್ವತಃ ತಾನೇ ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎನ್ನುವುದು ಮರೆತಿದೆ. ದುರದೃಷ್ಟಕ್ಕೆ ಇಂಥ ಜಾಣರೋಗಕ್ಕೆ ಮದ್ದಿಲ್ಲ!! ಎಂದು ಹೇಳಿದೆ.