ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
BBMP Archives » Dynamic Leader
October 23, 2024
Home Posts tagged BBMP
ಬೆಂಗಳೂರು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಖ್ಯ ಇಂಜಿನಿಯರ್ ಸಿ.ಎಂ.ಶಿವಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.

ಬಿಬಿಎಂಪಿಯ ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್‌ನಲ್ಲಿ ಆಗಸ್ಟ್ 11 ರಂದು ಸಂಭವಿಸಿದ್ದ ಅಗ್ನಿ ಅವಘಡದಲ್ಲಿ 45 ವರ್ಷದ ಶಿವಕುಮಾರ್ ಅವರು ಸೇರಿದಂತೆ 9 ನೌಕರರು ಗಾಯಗೊಂಡಿದ್ದರು.ಶೇ. 25 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಶಿವಕುಮಾರ್ ಅವರನ್ನು ಕಳೆದ ಕೆಲ ದಿನಗಳ ಹಿಂದೆ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಶಿವಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅಪೊಲೋ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಮೃತರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಅಗ್ನಿ ಅನಾಹುತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುಣ ನಿಯಂತ್ರಣ ಮತ್ತು ಗುಣ ಭರವಸೆ ವಿಭಾಗದ ಮುಖ್ಯ ಅಭಿಯಂತರರಾದ ಸಿ.ಎಂ.ಶಿವಕುಮಾರ್ ಅವರು ಮೃತಪಟ್ಟಿರುವ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ಬಿಬಿಎಂಪಿ ಮುಖ್ಯ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಶಿವಕುಮಾರ್ ಅವರು ಮೈಸೂರು ಜಿಲ್ಲೆಯ ನಂಜನಗೂಡು ಮೂಲದವರಾಗಿದ್ದು, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ರಾಜಕೀಯ ರಾಜ್ಯ

ಬೆಂಗಳೂರು: ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ.50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ.70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನಃ ಚಾಲನೆ ನೀಡಲಾಗುವುದು” ಎಂದು ಹೇಳಿದ್ದಾರೆ.

ರಾಜಕೀಯ

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳು ಆದ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು:
ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು; ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ; ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್‌ಗಳನ್ನು ಸೇವೆಯಿಂದ ಅಮಾನತು ಮಾಡುವಂತೆ ಸೂಚನೆ ನೀಡಿದ್ದಾರೆ. ಈಜಿಪುರ ಮೇಲ್ಸೇತುವೆ ಯೋಜನೆಯನ್ನು ತಕ್ಷಣ ಪೂರ್ಣಗೊಳಿಸಲು, ಅಗತ್ಯವಿರುವ ಆಡಳಿತಾತ್ಮಕ ನಿರ್ಣಯಗಳನ್ನು ತಕ್ಷಣ ಕೈಗೊಳ್ಳಬೇಕು ಎಂದೂ ಆದೇಶ ಮಾಡಿದ್ದಾರೆ.

ಬೆಂಗಳೂರಿನ ಮುಂದಿನ 20 ವರ್ಷಗಳ ಅಗತ್ಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಒಟ್ಟಾರೆಯಾಗಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಚಾಲನೆ ನೀಡಿದ್ದಾರೆ! ಬೆಂಗಳೂರಿನ ಕೆಲವೆಡೆ ಹೋರ್ಡಿಂಗ್‌ಗಳನ್ನು ಅಳವಡಿಸಲು ಅನುಮತಿ ನೀಡಿದ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.

ಬೆಂಗಳೂರು

ಡಿ.ಸಿ.ಪ್ರಕಾಶ್

ತಿರುಮಂಗಲಂ: ತಮಿಳುನಾಡಿನ ತಿರುಮಂಗಲಂ ನಗರ ಪುರಸಭೆಯು ಸಾರ್ವಜನಿಕರಿಂದ ಸಂಗ್ರಹಿಸುವ ತಾಜ್ಯವನ್ನು ವಿಂಗಡಣೆ ಮಾಡಿ ಕೊಳೆತ ಹಸಿ ತ್ಯಾಜ್ಯದಿಂದ ನೈಸರ್ಗಿಕ ಗೊಬ್ಬರವನ್ನು ತಯಾರಿಸಿ ರೈತರಿಗೆ ಉಚಿತವಾಗಿ ವಿತರಿಸುತ್ತಿರುವುದು ಸುದ್ದಿಯಾಗಿದೆ.

ತಿರುಮಂಗಲಂ ಪುರಸಭೆಯಲ್ಲಿ ಪ್ರತಿದಿನ 12 ಮೆಟ್ರಿಕ್ ಟನ್ ಕಸವನ್ನು ಸ್ವಚ್ಚತಾ ಕಾರ್ಯಕರ್ತರಿಂದ ಸಂಗ್ರಹಿಸಲಾಗುತ್ತಿದೆ. ಸಂಗ್ರಹಿಸಲಾದ ಕಸವನ್ನು ಸಂಗ್ರಹ ಕೇಂದ್ರಕ್ಕೆ ತಂದು, ಒಣ ತ್ಯಾಜ್ಯ ಮತ್ತು ಹಸಿ ತ್ಯಾಜ್ಯವೆಂದು ಇಬ್ಬಾಗವಾಗಿ ವಿಂಗಡಿಸಲಾಗುತ್ತದೆ. ನಂತರ ಸಂಗ್ರಹ ಕೇಂದ್ರದಲ್ಲಿರುವ ಗ್ರೈಂಡಿಂಗ್ ಯಂತ್ರಗಳ ಮೂಲಕ ಸಣ್ಣ ಸಣ್ಣ ತುಂಡುಗಳಾಗಿ ಪುಡಿಮಾಡಲಾಗುತ್ತದೆ.

ನಂತರ ಈ ಕೇಂದ್ರದಲ್ಲಿರುವ ತೊಟ್ಟಿಗಳಲ್ಲಿ ಇಎಂ ದ್ರಾವಣವನ್ನು (ಸಲ್ಯೂಷನ್) ಬಳಸಿ 21 ದಿನಗಳ ಕಾಲ ಕೊಳೆಯಲು ಬಿಡಲಾಗುತ್ತದೆ. ನಂತರ ಅವುಗಳನ್ನು ತೊಟ್ಟಿಯಿಂದ ಹೊರತೆಗೆದು ಮತ್ತೆ 24 ದಿನಗಳವರೆಗೆ ಒಣಗಿಸಿ ನೈಸರ್ಗಿಕ ಗೊಬ್ಬರವಾಗಿ ಪರಿವರ್ತಿಸಲಾಗುತ್ತದೆ. ಈ ನೈಸರ್ಗಿಕ ಗೊಬ್ಬರಗಳನ್ನು ಮನೆಯಲ್ಲಿ ಬೆಳೆಸುವ ಗಿಡಗಳು, ಬಳ್ಳಿಗಳು ಮತ್ತು ರೈತರಿಗೆ ಉಚಿತವಾಗಿ ನೀಡಲಾಗುತ್ತದೆ. ನೈಸರ್ಗಿಕ ಗೊಬ್ಬರ ಬೇಕಾದವರು ನಗರಸಭೆಯ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಬಹುದು ಎಂದೂ ಪ್ರಕಟಣೆಯನ್ನೂ ನೀಡಲಾಗಿದೆ. ನಗರಸಭೆ ಮೂಲಕ ದೊರೆಯುವ ನೈಸರ್ಗಿಕ ಗೊಬ್ಬರವನ್ನು ಪಡೆಯಲು ಜನರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ.

ಸಾಂದರ್ಭಿಕ ಚಿತ್ರ

ಇದಲ್ಲದೇ ಒಣ ತ್ಯಾಜ್ಯಗಳಾದ ರಟ್ಟು, ಹಾಲಿನ ಪ್ಯಾಕೆಟ್, ಪ್ಲಾಸ್ಟಿಕ್ ಕವರ್ ಇತ್ಯಾದಿಗಳನ್ನು ಸ್ವಚ್ಛತಾ ಕಾರ್ಮಿಕರೇ ತೆಗೆದುಕೊಳ್ಳುತ್ತಾರೆ. ಉಳಿದ ತ್ಯಾಜ್ಯಗಳಾದ ರಬ್ಬರ್, ಟೈರ್ ಮತ್ತು ಹಳೆಯ ಶೂಗಳನ್ನು ತಿರುಮಂಗಲಂ ಪುರಸಭೆಯ ಮೂಲಕ ಸಿಮೆಂಟ್ ಕಂಪೆನಿಗಳಿಗೆ ಕಳುಹಿಸಿಕೊಡಲಾಗುತ್ತದೆ. ಹಸಿ ತ್ಯಾಜ್ಯವನ್ನು ನೈಸರ್ಗಿಕ ಗೊಬ್ಬರವಾಗಿ ಪರಿವರ್ತಿಸುವ ತಂತ್ರಗಾರಿಕೆ ನಮಗೆ ತಿಳಿದಿದ್ದರೂ ನಾವು ಆ ಪ್ರಯತ್ನಕ್ಕೆ ಕೈಹಾಕಲಿಲ್ಲ ಎಂದು ಭಾವಿಸುತ್ತೇನೆ. ನಾವು ಯಾಕೆ ಇಂತಹ ಪ್ರಯತ್ನವನ್ನು ಮಾಡಬಾರದು ಎಂಬುದು ನನ್ನ ಪ್ರಶ್ನೆಯಾಗಿದೆ.

ಬೆಂಗಳೂರು ನಗರದಲ್ಲಿ ಸಂಗ್ರಹಿಸಲಾಗುವ ಹಸಿ ತ್ಯಾಜ್ಯವನ್ನು ನೈಸರ್ಗಿಕ ಗೊಬ್ಬರವಾಗಿ ಪರಿವರ್ತಿಸಿ ಹಂಚಿಕೆ ಮಾಡಿದರೆ, ನಮ್ಮ ಅಕ್ಕಪಕ್ಕದಲ್ಲಿರುವ ಎಲ್ಲಾ ಜಿಲ್ಲೆಗಳಿಗೂ ಉಚಿತವಾಗಿ ನೈಸರ್ಗಿಕ ಗೊಬ್ಬರವನ್ನು ಹಂಚಿಕೆಮಾಡಬಹುದು ಅಲ್ಲವೇ? ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ನಮ್ಮ ಸುತ್ತಮುತ್ತ ಇರುವ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ಇದರ ಬಗ್ಗೆ ಯೋಚಿಸಬೇಕು.