ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
BJp Archives » Page 5 of 9 » Dynamic Leader
October 23, 2024
Home Posts tagged BJp (Page 5)
ದೇಶ ರಾಜಕೀಯ

ಪಾಟ್ನಾ: 1871ರಲ್ಲಿ ಬ್ರಿಟಿಷ್ ಆಳ್ವಿಕೆಯಲ್ಲಿ ಭಾರತದಲ್ಲಿ ಜನಗಣತಿ ನಡೆಸಲಾಯಿತು. ತರುವಾಯ, 1881ರಲ್ಲಿ, ಭಾರತದಲ್ಲಿ ಮೊದಲ ಜಾತಿವಾರು ಜನಗಣತಿಯನ್ನು ನಡೆಸಲಾಯಿತು. ಅದರ ನಂತರ ಅಂತಿಮವಾಗಿ 1931ರಲ್ಲಿ ಜಾತಿವಾರು ಜನಗಣತಿಯನ್ನು ನಡೆಸಲಾಯಿತು. ಸ್ವಾತಂತ್ರ್ಯದ ನಂತರ 1951 ರಲ್ಲಿ ದೇಶವು ತನ್ನ ಮೊದಲ ಜನಗಣತಿಯನ್ನು ನಡೆಸಿತು. ಆದರೆ, ಅದರಲ್ಲಿ ಜಾತಿವಾರು ವಿವರಗಳನ್ನು ತೆಗೆದುಕೊಂಡಿಲ್ಲ.

1931ರ ಜಾತಿವಾರು ಜನಗಣತಿಯ ಪ್ರಕಾರ ಜಾತಿವಾರು ಮೀಸಲಾತಿಯನ್ನು ವರ್ಗೀಕರಿಸಲಾಯಿತು. ಅದು ಇದುವರೆಗೂ ಆಚರಣೆಯಲ್ಲಿದೆ. ಭಾರತದಲ್ಲಿ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಸಲಾಗುತ್ತದೆ. ಈ ಹಿನ್ನೆಲೆಯಲ್ಲಿ 2011ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಷ್ಟ್ರವ್ಯಾಪಿ ಜನಗಣತಿ ನಡೆಸಿ ಪೂರ್ಣಗೊಳಿಸಲಾಯಿತು.

ಆದರೆ, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಅದನ್ನು ಪ್ರಕಟಿಸಲಿಲ್ಲ. ಈ ಹಿನ್ನಲೆಯಲ್ಲಿ, ಜಾತಿವಾರು ಜನಗಣತಿ ನಡೆಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಆದರೆ, ಬಿಜೆಪಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಾಗಿದೆ.

ಏತನ್ಮಧ್ಯೆ, ಜೆಡಿಯು-ಕಾಂಗ್ರೆಸ್-ಆರ್.ಜೆ.ಡಿ ಮೈತ್ರಿ ಸರ್ಕಾರ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಕಳೆದ ತಿಂಗಳು ಜಾತಿವಾರು ಜನಗಣತಿ ಬಿಡುಗಡೆ ಮಾಡಲಾಯಿತು. ಇದರ ಬೆನ್ನಲ್ಲೇ ವಿವಿಧ ರಾಜ್ಯಗಳಲ್ಲಿ ಜಾತಿವಾರು ಜನಗಣತಿ ನಡೆಸುವುದಾಗಿ ಘೋಷಿಸಲಾಗಿದೆ. ಈ ಸಮೀಕ್ಷೆಯಿಂದ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢದಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ, ಮಾತನಾಡುವ ವೇಳೆ, “ಜಾತಿವಾರು ಗಣತಿಯನ್ನು ಬಿಜೆಪಿ ಎಂದಿಗೂ ವಿರೋಧಿಸಿಲ್ಲ “ಎಂದರು. “ಬಿಹಾರದಲ್ಲಿ ನಡೆದ ಜಾತಿವಾರು ಜನಗಣತಿಯಲ್ಲಿ ಯಾದವ ಮತ್ತು ಮುಸ್ಲಿಂ ಸಮುದಾಯದವರ ಸಂಖ್ಯೆ ಹೆಚ್ಚಾಗಿದ್ದು, ಇತರೆ ಸಮುದಾಯಗಳ ಸಂಖ್ಯೆ ಕಡಿಮೆಯಾಗಿದೆ” ಎಂದೂ ಆರೋಪಿಸಿದ್ದಾರೆ.

ಈ ಹಿನ್ನಲೆಯಲ್ಲಿ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಅಮಿತ್ ಶಾ ಅವರ ಆರೋಪವನ್ನು ಖಂಡಿಸಿದ್ದಾರೆ. ಮತ್ತು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಪೋಸ್ಟ್ ನಲ್ಲಿ “ಸುಳ್ಳು ಮತ್ತು ಗೊಂದಲವನ್ನು ಹರಡುವ ಬದಲು, ದಯವಿಟ್ಟು ಇದಕ್ಕೆ ಉತ್ತರಿಸಿ ಅಮಿತ್ ಶಾ ಜೀ” ಎಂದು ಹೇಳಿ 5 ಪ್ರಶ್ನೆಗಳು ಕೇಳಿದ್ದಾರೆ.

1. ಬಿಹಾರದ ಜಾತಿವಾರು ಜನಗಣತಿ ದತ್ತಾಂಶ ತಪ್ಪಾಗಿದ್ದರೆ, ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಲ್ಲಿ ಜಾತಿವಾರು ಜನಗಣತಿ ನಡೆಸಿ ಅದರ ಅಂಕಿ ಸಂಖ್ಯೆ ಮಾಹಿತಿಯನ್ನು ಏಕೆ ಪ್ರಕಟಿಸಲಿಲ್ಲ?

2. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಿಜೆಪಿ ಜಾತಿವಾರು ಜನಗಣತಿಯನ್ನು ಏಕೆ ನಡೆಸಲಿಲ್ಲ?

3. ಕೇಂದ್ರ ಸರ್ಕಾರದಲ್ಲಿ ಎಷ್ಟು ಕ್ಯಾಬಿನೆಟ್ ಮಂತ್ರಿಗಳು 𝐎𝐁𝐂 / 𝐒𝐂 / 𝐒𝐓 ವರ್ಗಕ್ಕೆ ಸೇರಿದ್ದಾರೆ ಮತ್ತು ಎಷ್ಟು ಮಂದಿ 𝐎𝐁𝐂 / 𝐒𝐂 / 𝐒𝐓 ವರ್ಗಕ್ಕೆ ಸೇರಿದವರಲ್ಲ; ಪಟ್ಟಿಯನ್ನು ಪ್ರಕಟಿಸಿ. ಹೀಗಿದ್ದರೂ ಅವರಿಗೆ ಏಕೆ ಅಮುಖ್ಯ ಇಲಾಖೆಗಳನ್ನು ನೀಡಲಾಗಿದೆ.

4. 𝐎𝐁𝐂 / 𝐒𝐂 / 𝐒𝐓 ಬಣದಿಂದ ಎಷ್ಟು ಬಿಜೆಪಿ ಮುಖ್ಯಮಂತ್ರಿಗಳಿದ್ದಾರೆ? ಹಿಂದುಳಿದ ಮತ್ತು ಹಿಂದುಳಿದವರಲ್ಲದ ಮುಖ್ಯಮಂತ್ರಿಗಳ ಹೋಲಿಕೆ ಮಾಡಿ ಶೇಕಡಾವಾರು ಪ್ರಮಾಣವನ್ನು ತಿಳಿಸಿ.

5. ಕೇಂದ್ರ ಕ್ಯಾಬಿನೆಟ್ ಮಂತ್ರಿಗಳಲ್ಲಿ ಬಿಹಾರದಿಂದ ಎಷ್ಟು ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ಮಂತ್ರಿಗಳು ಇದ್ದಾರೆ? ಶೂನ್ಯವೇ 𝟎 ?

ಈ ಪ್ರಶ್ನೆಗಳಿಗೆ ಉತ್ತರಿಸುವುದರಿಂದ ನಿಮ್ಮನ್ನೂ ಸೇರಿಸಿ 8𝟓% ಹಿಂದುಳಿದ ಮತ್ತು ದಲಿತ ಹಿಂದೂಗಳ ಕಣ್ಣು ತೆರೆಯುತ್ತದೆ.” ಎಂದು ಉಲ್ಲೇಖಿಸಿದ್ದಾರೆ.

ದೇಶ

ಚೆನ್ನೈ: ಸನಾತನ ಕುರಿತು ಸಚಿವ ಉದಯನಿಧಿ ಸ್ಟಾಲಿನ್ ಮಾತನಾಡಿರುವುದು ವಿವಾದಕ್ಕೀಡಾಗಿದ್ದು ಇದಕ್ಕೆ ಸಂಬಂಧಿಸಿದ ಪ್ರಕರಣ ಚೆನ್ನೈ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರಂತೆ ಇಂದು ಪ್ರಕರಣದ ವಿಚಾರಣೆ ನಡೆದಾಗ ಉದಯನಿಧಿ ಪರವಾಗಿ ವಾದ ಮಂಡಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸನಾತನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸನಾತನ ಭಾಷಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ ಕ್ವೋ ವಾರಾಂಟೊ (Quo Warranto) ಪ್ರಕರಣವನ್ನು ವಜಾಗೊಳಿಸಬೇಕು. ಆರೋಪಿಗಳನ್ನು ಸಾಕ್ಷ್ಯ ಕೇಳುವುದು ಸಂವಿಧಾನ ಬಾಹಿರ.

ಆರೋಪ ಸಾಬೀತುಪಡಿಸಲು ಅರ್ಜಿದಾರರೇ ಸಾಕ್ಷ್ಯ ಸಲ್ಲಿಸಬೇಕು ಎಂದು ಸಚಿವ ಉದಯನಿಧಿ ಸ್ಟಾಲಿನ್ ಪರವಾಗಿ ವಾದಿಸಲಾಯಿತು. ಆದ್ದರಿಂದ ಸಾಕ್ಷ್ಯಾಧಾರಗಳನ್ನು ಸಲ್ಲಿಸಲು ವಿಫಲವಾಗಿರುವ ಪ್ರಕರಣವನ್ನು ವಜಾಗೊಳಿಸುವಂತೆ ಮನವಿ ಮಾಡಲಾಗಿತ್ತು.

ನಂತರ, ಮದ್ರಾಸ್ ಹೈಕೋರ್ಟ್ ಸಚಿವರಾದ ಉದಯನಿಧಿ ಸ್ಟಾಲಿನ್, ಶೇಖರ್ ಬಾಬು ಮತ್ತು ಇತರರ ವಿರುದ್ಧದ ಪ್ರಕರಣವನ್ನು ನವೆಂಬರ್ 7 ಕ್ಕೆ ಮುಂದೂಡಿತು.

ದೇಶ ರಾಜಕೀಯ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ‘ಸ್ಪೀಕಿಂಗ್ ಫಾರ್ ಇಂಡಿಯಾ ಪಾಡ್‌ಕಾಸ್ಟ್’ ಸರಣಿಯ 3ನೇ ಆಡಿಯೋ ಇಂದು ಬಿಡುಗಡೆಯಾಗಿದೆ. ಅದರಲ್ಲಿ ಮಾತನಾಡಿರುವ ಎಂ.ಕೆ.ಸ್ಟಾಲಿನ್, “ರಾಜಭವನಗಳ ಮೂಲಕ ರಾಜ್ಯ ಸ್ವಾಯತ್ತತೆಯನ್ನು ಬಿಜೆಪಿ ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಭಾರತ ಒಂದು ಸಂಯುಕ್ತ ರಾಷ್ಟ್ರ. ವಿವಿಧ ಸುಂದರವಾದ ಹೂವುಗಳಿಂದ ತುಂಬಿದ ಅದ್ಭುತ ಉದ್ಯಾನ. ಮುಖ್ಯಮಂತ್ರಿ ಆಗಿದ್ದಾಗ ರಾಜ್ಯ ಹಕ್ಕುಗಳ ಬಗ್ಗೆ ಮಾತನಾಡಿದ ನರೇಂದ್ರ ಮೋದಿ, ಪ್ರಧಾನಿಯಾದ ಬಳಿಕ ರಾಜ್ಯದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ.

ಬಿಜೆಪಿ, ರಾಜ್ಯಗಳನ್ನು ರದ್ದುಪಡಿಸಬೇಕೆಂದು ಬಯಸುತ್ತಿದೆ. ಸಿಎಜಿ ಮೂಲಕ ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದ ಅಧಿಕಾರಿಗಳು ಎಲ್ಲರನ್ನೂ ಬಿಜೆಪಿ ಸರ್ಕಾರ ತ್ವರಿತವಾಗಿ ವರ್ಗಾವಣೆ ಮಾಡಿದೆ. ಬಿಜೆಪಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ.

ರಾಜ್ಯಗಳನ್ನು ರಕ್ಷಿಸೋಣ, ಭಾರತವನ್ನು ರಕ್ಷಿಸೋಣ, ಇಂಡಿಯಾ ಮೈತ್ರಿಕೂಟವನ್ನು ಗೆಲ್ಲಿಸೋಣ. ಕೇಂದ್ರದಲ್ಲಿ ಒಕ್ಕೂಟ ಸರ್ಕಾರ; ರಾಜ್ಯಗಳಲ್ಲಿ ಸ್ವಾಯತ್ತತೆ ಸರ್ಕಾರ ಇದುವೇ ನಿಜವಾದ ಪ್ರಜಾಪ್ರಭುತ್ವ ಆಗಿರುತ್ತದೆ” ಎಂದು ಹೇಳಿದರು.

ರಾಜಕೀಯ

ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನುಕೈ ಹಿಡಿದಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ?

ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ! ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ! ಎಂದು ಕಾಂಗ್ರೆಸ್ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕಿಡಿಕಾರಿದೆ.

ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕುಮಾರಸ್ವಾಮಿಯವರೇ, ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. “ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ” ಎಂದು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು.

ಕಾಂಗ್ರೆಸ್ ದಯಾಭಿಕ್ಷೆಯಿಂದ ಎರಡನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ! ಎಂದು ಹೇಳಿದೆ.

ಕುಮಾರಸ್ವಾಮಿಯವರೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿ ಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ… ನಿಮಗೇನಾದರೂ ಆತ್ಮಗೌರವ ಇದೆಯೇ?

ಇಡೀ ರಾಜ್ಯದ ಜನಕ್ಕೆ ಅರ್ಥವಾಗಿದೆ. ಅಧಿಕಾರದ ಕನಸು ನುಚ್ಚುನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿಭ್ರಂಶರಾಗಿದ್ದೀರಿ ಎಂದು ನೀವಾಡುವ ಒಂದೊಂದು ನುಡಿಯಲ್ಲೂ ಅದರದೇ ಪ್ರತಿಫಲನ. ಪಾಪ, ನಿಮ್ಮ ಸ್ಥಿತಿ ಕಂಡು ಅಯ್ಯೋ ಅನ್ನಿಸುತ್ತದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ.

ಅದು ಒತ್ತಟ್ಟಿಗಿರಲಿ, ನಿಮ್ಮನ್ನು, ನಿಮ್ಮ ಕುಟುಂಬದವರನ್ನು ದಶಕಗಳ ಕಾಲ ಪೊರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದಿರೇ ಹೊರತು ನಿಮ್ಮಿಂದ ಸಮುದಾಯವೇನೂ ಉದ್ಧಾರ ಆಗಿಲ್ಲ. ಎಷ್ಟೇ ಆಗಲಿ, ಒಕ್ಕಲಿಗರ ಆತ್ಮಗೌರವದ ಸಂಕೇತವಾದ ಆದಿ ಚುಂಚನಗಿರಿ ಮಠದ ಶ್ರೀ.ಬಾಲಗಂಗಾಧರನಾಥ ಸ್ವಾಮೀಜಿಗಳಿಗೇ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರಲ್ಲವೇ ನೀವು..?!

ಇನ್ನೊಂದೆಡೆ ಅಲ್ಪಸಂಖ್ಯಾತರ ಅಗತ್ಯವಿಲ್ಲ, ಅವರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಅನ್ನುತ್ತೀರಿ. ಹಾಗಾದರೆ ನಿಮಗೆ ನೀವೇ ಮತ ಹಾಕಿಕೊಂಡು ಗೆದ್ದಿರಾ ಕುಮಾರಣ್ಣ..?! ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕುಮಾರಸ್ವಾಮಿಯವರೇ, ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು? ಮಸೀದಿ ಹೊಕ್ಕಿದ್ದೇನು? ಆಹಾ..! ಅದೇನು ನಾಟಕ, ಅದೇನು ಪಂಚರಂಗಿ ಆಟ? ಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!

ಐಟಿ, ಇಡಿ ಕಿಂದರ ಜೋಗಿ ಅಮಿತ್ ಶಾ ಕಾಲಿಗೆ ಬಿದ್ದು ರಾಜಕೀಯ ವಿರೋಧಿಗಳಿಗೆ ಗುಂಡಿ ತೋಡುವುದರಲ್ಲಿ ಮಗ್ನರಾಗಿರುವ ಕುಮಾರಣ್ಣ ಒಂದು ವಿಷಯ ತಿಳಿದುಕೊಳ್ಳಿ. ನೀವೇ ನಿಮ್ಮ ಪಾಲಿನ ಭಸ್ಮಾಸುರ! ಸ್ವಲ್ಪ ಕಾಲ ತಡೆದು ನೋಡಿ, ನಿಮ್ಮ ಗುಂಡಿಯಲ್ಲಿ ಬಿದ್ದು ನೀವೇ ಹೆಂಗೆ ಒದ್ದಾಡುತ್ತೀರಿ ಅಂತಾ!

ಕೈಲಾಗದವರು ಮೈ ಪರಚಿಕೊಂಡರೆ ಆಗೋದು ಗಾಯ, ರಣ ಗಾಯ! ಕೈ ನಾಯಕರ ಮೇಲೆ ಬಿದ್ದರೇ ಕೈಲಾಸ ಪ್ರಾಪ್ತಿ ಆಗದು ಕುಮಾರಣ್ಣ. ನಿಮ್ಮ ಮಾತೇ ನಿಮ್ಮ ಪಾಲಿನ ಶತ್ರು! ಮಾತಾಡಿ, ಮಾತಾಡಿ ಮಂಡ್ಯ ಚುನಾವಣೆಯಲ್ಲಿ ನಿಮ್ಮ ಮಗನನ್ನು ಬಲಿ ಕೊಟ್ಟಿರಿ. ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷವನ್ನೇ ಅಡ್ಡಡ್ಡ ಉದ್ದುದ್ದ ಮಲಗಿಸಿದಿರಿ. ಈಗ ನಿಮ್ಮನ್ನು ನೀವೇ ಹಾಳು ಮಾಡಿಕೊಳ್ಳುತಿದ್ದೀರಿ..!

ನಿಯತ್ತು ಮತ್ತು ಕುಮಾರಸ್ವಾಮಿ ಎರಡೂ ವಿರುದ್ಧ ಪದಗಳು ಎಂಬುದು ಜಗಜ್ಜಾಹಿರು! ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನು “ಕೈ ಹಿಡಿದ” ಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ? ಅದೂ ಇಲ್ಲ. ಹತಾಶೆ ಆತ್ಮಸಾಕ್ಷಿಯನ್ನೇ ಕೊಂದಿದೆ!

ಹೀಗಾಗಿ ನಿಮ್ಮಂತವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ, ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತಾಡುತ್ತಾ ಹೋಗಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ, ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ನೀವು ಮಾತಾಡಿ, ಮಾತಾಡುತ್ತಾ ಹೋಗಿ… ಅಲ್ ದ ಬೆಸ್ಟ್! ಎಂದು ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ.

ದೇಶ ರಾಜಕೀಯ

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಉಳಿದಿದ್ದು, ಮೈತ್ರಿ ಮಾತುಕತೆ, ಕ್ಷೇತ್ರ ಹಂಚಿಕೆ, ಅಭ್ಯರ್ಥಿ ಆಯ್ಕೆ, ಪ್ರಚಾರದಂತಹ ಹಲವು ಕಾರ್ಯಗಳು ನಡೆಯುತ್ತಿವೆ. ಭಾರತವನ್ನು ಆಳುವ ಅವಕಾಶ ಯಾರಿಗೆ ಸಿಗಲಿದೆ ಮತ್ತು ಆಡಳಿತದ ಜವಾಬ್ದಾರಿಯನ್ನು ಜನತೆ ಯಾರ ಕೈಗೆ ನೀಡಲಿದ್ದಾರೆ ಎಂಬುದು ಭಾರೀ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಸಮೀಕ್ಷೆಯ ಫಲಿತಾಂಶಗಳು!
ಲೋಕಸಭೆ ಚುನಾವಣೆಯ ಮುನ್ನೋಟವಾಗಿ ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ಮುಂತಾದ ಐದು ರಾಜ್ಯಗಳ ಚುನಾವಣೆಗಳು ನಡೆಯಲಿವೆ. ಈ ಚುನಾವಣಾ ಫಲಿತಾಂಶಗಳನ್ನು ನಾವು ಜನರ ಮನಸ್ಥಿತಿಯನ್ನು ಊಹಿಸುವ ಮಾರ್ಗವಾಗಿ ನೋಡಬಹುದು. ಐದು ರಾಜ್ಯಗಳ ಚುನಾವಣಾ ದಿನಾಂಕಗಳನ್ನು ನಿನ್ನೆ ಅಧಿಕೃತವಾಗಿ ಘೋಷಿಸಲಾಗಿದೆ. ಈ ಹಿನ್ನಲೆಯಲ್ಲಿ ಐದು ರಾಜ್ಯಗಳ ಚುನಾವಣೆಗೆ ಸಂಬಂಧಿಸಿದ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ABP-C Voter ಸಂಸ್ಥೆಗಳು ಜಂಟಿಯಾಗಿ ಈ ಸಮೀಕ್ಷೆಯನ್ನು ನಡೆಸಿ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ.

ಮಧ್ಯಪ್ರದೇಶ:
ಮಧ್ಯಪ್ರದೇಶದ ಒಟ್ಟು 230 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ 113 ರಿಂದ 125 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ 104 ರಿಂದ 116 ಸ್ಥಾನಗಳನ್ನು ಗೆಲ್ಲಲಿದೆ. ಸಮೀಕ್ಷೆಯ ಪ್ರಕಾರ ಬಿಎಸ್‌ಪಿ 0 ರಿಂದ 2 ಸ್ಥಾನಗಳನ್ನು ಗೆಲ್ಲಲಿದೆ ಮತ್ತು ಇತರರು 0 ರಿಂದ 3 ಸ್ಥಾನಗಳನ್ನು ಗೆಲ್ಲಲಿದ್ದಾರೆ. ವ್ಯತ್ಯಾಸ ಕಡಿಮೆ ಆಗಿರುವುದರಿಂದ ಕೊನೆಯ ಕ್ಷಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಪಕ್ಷಗಳ ಪೈಕಿ ಯಾವುದೇ ಪಕ್ಷ ಸರ್ಕಾರವನ್ನು ರಚಿಸಬಹುದು.

ಛತ್ತೀಸ್‌ಗಢ:
ಛತ್ತೀಸ್‌ಗಢದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 45ರಿಂದ 51ರಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಬಿಜೆಪಿ 39 ರಿಂದ 45 ಸ್ಥಾನಗಳನ್ನು ಪಡೆಯಲಿದೆ. ಇತರರು 0 ರಿಂದ 2 ಸ್ಥಾನಗಳನ್ನು ಪಡೆಯಬಹುದು. ಇಲ್ಲಿ ಕಾಂಗ್ರೆಸ್ ಗೆದ್ದರೂ ವ್ಯತ್ಯಾಸ ಕಡಿಮೆಯಾಗಿರುವುದರಿಂದ ಕೊನೆಯ ಕ್ಷಣದಲ್ಲಿ ಅಚ್ಚರಿಗೆ ಕೊರತೆ ಇರುವುದಿಲ್ಲ.

ತೆಲಂಗಾಣ:
ತೆಲಂಗಾಣ ರಾಜ್ಯವು 119 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಇದರಲ್ಲಿ ಕಾಂಗ್ರೆಸ್ ಪಕ್ಷ 48 ರಿಂದ 60 ಸ್ಥಾನಗಳನ್ನು ಗೆಲ್ಲಲಿದೆ. ಚಂದ್ರಶೇಖರ್ ರಾವ್ ಅವರ  ಬಿಆರ್‌ಎಸ್ 43 ರಿಂದ 55 ಸ್ಥಾನಗಳನ್ನು ಪಡೆಯಲಿದೆ. ಬಿಜೆಪಿ 5 ರಿಂದ 11 ಸ್ಥಾನಗಳನ್ನು ಮಾತ್ರ ಪಡೆಯಲಿದೆ. ಇತರರು 5 ರಿಂದ 11 ಸ್ಥಾನಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಇಲ್ಲಿ ಕಾಂಗ್ರೆಸ್ Vs ಬಿಆರ್‌ಎಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಸದ್ಯ ಇಲ್ಲಿಯೂ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸುತ್ತಿದೆ. ಆದರೆ ವ್ಯತ್ಯಾಸವು ಕಡಿಮೆ ಎಂಬುದು ಗಮನಾರ್ಹ.

ಮಿಜೋರಾಂ:
ಈಶಾನ್ಯ ರಾಜ್ಯ ಮಿಜೋರಾಂ 40 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಇಲ್ಲಿ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ ಪಕ್ಷ 13 ರಿಂದ 17 ಸ್ಥಾನಗಳನ್ನು ಪಡೆಯಲಿದೆ. ಕಾಂಗ್ರೆಸ್ 10 ರಿಂದ 14 ಸ್ಥಾನಗಳನ್ನು ಗೆಲ್ಲಲಿದೆ. ಸೋರಂ ಪೀಪಲ್ಸ್ ಮೂವ್‌ಮೆಂಟ್ 9 ರಿಂದ 13 ಸ್ಥಾನಗಳನ್ನು ಪಡೆಯಲಿದೆ. ಇತರರಿಗೆ 0 ರಿಂದ 3 ಸ್ಥಾನಗಳನ್ನು ಪಡೆಯುವ ಅವಕಾಶಗಳಿವೆ.

ರಾಜಸ್ಥಾನ:
ರಾಜಸ್ಥಾನದ ಒಟ್ಟು 200 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 127 ರಿಂದ 137 ಸ್ಥಾನಗಳನ್ನು ಗೆಲ್ಲಲಿದೆ ಎಂದು ವರದಿಯಾಗಿದೆ. ಕಾಂಗ್ರೆಸ್ ಪಕ್ಷ 59 ​​ರಿಂದ 69 ಸ್ಥಾನಗಳನ್ನು ಪಡೆದು ಪ್ರಮುಖ ವಿರೋಧ ಪಕ್ಷವಾಗಲಿದೆ ಎಂದು ಹೇಳಲಾಗುತ್ತಿದೆ. ಇತರರು 2 ರಿಂದ 6 ಸ್ಥಾನ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಚುನಾವಣಾ ಆಯೋಗವು ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಮುಂಬರುವ ಸಂಸತ್ತಿನ ಚುನಾವಣೆಯ ಮುನ್ನೋಟ ಎಂದು ಪರಿಗಣಿಸಲಾಗಿದೆ. ಹೀಗಾಗಿ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಐದು ರಾಜ್ಯಗಳ ಚುನಾವಣಾ ಕಾರ್ಯದಲ್ಲಿ ಕೆಲ ತಿಂಗಳ ಹಿಂದೆಯೇ ನಿರತವಾಗಿದ್ದು, ಇದೀಗ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.

ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇಂದು ಪ್ರಕಟಿಸಿದ್ದಾರೆ. ಅದರಂತೆ ಛತ್ತೀಸ್ ಗಢದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 7 ರಂದು ಮಿಜೋರಾಂ, ನವೆಂಬರ್ 17 ರಂದು ಮಧ್ಯಪ್ರದೇಶ, ನವೆಂಬರ್ 23 ರಂದು ರಾಜಸ್ಥಾನ ಮತ್ತು ನವೆಂಬರ್ 30 ರಂದು ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ ಎಂದು ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಪಕ್ಷ ಆಡಳಿತ ನಡೆಸುತ್ತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಭಾರತ್ ರಾಷ್ಟ್ರ ಸಮಿತಿ ಮತ್ತು ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಆಡಳಿತ ನಡೆಸುತ್ತಿದೆ. ರಾಜಸ್ಥಾನ 200 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಅಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಆಂತರಿಕ ಸಂಘರ್ಷ ಕಾಂಗ್ರೆಸ್ ಗೆ ಹಿನ್ನಡೆಯಾಗಿ ಪರಿಣಮಿಸಿತ್ತು. ಆದರೆ, ಕಾಂಗ್ರೆಸ್ ವರಿಷ್ಠರು ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಸರಿಪಡಿಸಿದ ನಂತರ, ಪರಿಸ್ಥಿತಿ ಸ್ಥಿರವಾಗಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜಸ್ಥಾನದಲ್ಲಿ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅಲ್ಲಿ ರೂ.7,000 ಕೋಟಿಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದರು. ರಾಜಸ್ಥಾನದಲ್ಲಿ ಕಾಂಗ್ರೆಸ್‌ನಂತೆಯೇ ಬಿಜೆಪಿಯಲ್ಲೂ ಗುಂಪು ಸಂಘರ್ಷಗಳಿವೆ. ಈ ಬಾರಿಯೂ ಬಿಜೆಪಿಯ ಮಾಜಿ ಮುಖ್ಯಮಂತ್ರಿ ವಸುಂದರಾ ರಾಜೇ ಸಿಂಧಿಯಾ ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಗಲಿಲ್ಲ. ಇದರಿಂದ ಉದ್ಭವಿಸಿರುವ ಆಂತರಿಕ ಕಲಹಗಳನ್ನು ನಿಭಾಯಿಸಲು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ವಿಧಾನಸಭೆ ಚುನಾವಣೆ ನಡೆಸಲು ನಿರ್ಧರಿಸಿದೆ.

ಮಧ್ಯಪ್ರದೇಶದಲ್ಲಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. 230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜ್ಯದಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು. ಕಮಲ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಒಂದು ವರ್ಷ ಆಡಳಿತ ನಡೆಸಿತು. ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದ ಕೆಲವು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡಿದ್ದರಿಂದ, ಬಿಜೆಪಿ ಅಧಿಕಾರ ಹಿಡಿಯಿತು.

ಕಳೆದ ಕೆಲವು ತಿಂಗಳುಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಚುನಾವಣಾ ಭರವಸೆಗಳ ಘೋಷಣೆಯಲ್ಲಿ ಭಾರಿ ಪೈಪೋಟಿ ಏರ್ಪಟ್ಟಿದೆ. ಮಹಿಳೆಯರಿಗೆ ತಿಂಗಳಿಗೆ ರೂ.1,000 ನೀಡುವ ಯೋಜನೆಯನ್ನು ಬಿಜೆಪಿ ಸರ್ಕಾರ ಆರಂಭಿಸಿತು. ಆದರೆ, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ರೂ.1,500 ನೀಡಲಾಗುವುದು ಎಂದು ಹೇಳಿದೆ. ಅಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ ಎಂದು ವರದಿಗಳು ತಿಳಿಸುತ್ತಿವೆ.

ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ ರಾವ್ ನೇತೃತ್ವದಲ್ಲಿ ಭಾರತ್ ರಾಷ್ಟ್ರ ಸಮಿತಿ ಪಕ್ಷ ಆಡಳಿತ ನಡೆಸುತ್ತಿದೆ. ಹೇಗಾದರೂ ಮಾಡಿ ಅಲ್ಲಿ ಅಧಿಕಾರ ಹಿಡಿಯಬೇಕೆಂದು ಬಿಜೆಪಿ ಕಳೆದ ಕೆಲವು ತಿಂಗಳುಗಳಿಂದ ಕಸರತ್ತು ನಡೆಸುತ್ತಿದೆ. ಅದೇ ಸಮಯದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರಭಾವ ಹೆಚ್ಚಾಗಿದೆ.

ಹೀಗಾಗಿ ಕಾಂಗ್ರೆಸ್ ಪಕ್ಷವೂ ಅಧಿಕಾರ ಹಿಡಿಯಲು ತೀವ್ರ ಪೈಪೋಟಿ ನಡೆಸುತ್ತಿದೆ. ಭಾರತ್ ರಾಷ್ಟ್ರ ಸಮಿತಿಯ 12 ಮಾಜಿ ಸಚಿವರು ಸೇರಿದಂತೆ 35 ಪ್ರಮುಖ ಕಾರ್ಯಕರ್ತರು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು. ಇದು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಉತ್ತೇಜನ ನೀಡಿದೆ. ತೆಲಂಗಾಣ ಚುನಾವಣಾ ಕ್ಷೇತ್ರವು ಬಿಆರ್‌ಎಸ್, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆಯಾಗಿ ಮಾರ್ಪಟ್ಟಿದೆ.

ದೇಶ

ಪಾಟ್ನಾ: ಬಿಹಾರದಲ್ಲಿ ಬಿಜೆಪಿಯನ್ನು ಬೆಳೆಸಿದ ದಿಗ್ಗಜ ನಾಯಕ ಕೈಲಾಸಪತಿ ಮಿಶ್ರಾ ಅವರ 100ನೇ ಜನ್ಮದಿನದ ಅಂಗವಾಗಿ ಪಾಟ್ನಾದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಮುಖಂಡ ಜೆಪಿ ನಡ್ಡಾ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಡ್ಡಾ, ದೇಶಾದ್ಯಂತ ಪ್ರಾದೇಶಿಕ ಪಕ್ಷಗಳು ಕುಟುಂಬ ಪ್ರಾಬಲ್ಯ ಹೊಂದಿವೆ. ಸ್ವಹಿತಾಸಕ್ತಿಯ ನಾಯಕರು ಮೊದಲು ಪ್ರಾದೇಶಿಕ ಪಕ್ಷಗಳನ್ನು ಪ್ರಾರಂಭಿಸುತ್ತಾರೆ. ನಂತರ ಅವರು ಅದನ್ನು ಕುಟುಂಬ ಪಕ್ಷಗಳಾಗಿ ಪರಿವರ್ತಿಸುತ್ತಾರೆ. ಇದುವೇ ಅವರ ಶೈಲಿ. ಪ್ರಾದೇಶಿಕ ಪಕ್ಷಗಳು ಒಂದು ಕುಟುಂಬಕ್ಕೆ ಬದ್ಧವಾಗಿ, ಭ್ರಷ್ಟಾಚಾರದಲ್ಲಿ ಸಿಲುಕಿಕೊಳ್ಳುತ್ತದೆ.

ಈಗ ಜನರ ಮನಸ್ಥಿತಿ ಬದಲಾಗಿದೆ. ಅವರು ಇನ್ನು ಮುಂದೆ ಪ್ರಾದೇಶಿಕ ಪಕ್ಷಗಳನ್ನು ಸಹಿಸುವುದಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ಕುಟುಂಬ ಪ್ರಾಬಲ್ಯವಿರುವ ಪ್ರಾದೇಶಿಕ ಪಕ್ಷಗಳು ನೆಲಕಚ್ಚುವುದು ಖಚಿತ. ಹಿಂದಿನ ಕಾಂಗ್ರೆಸ್ ಆಡಳಿತದಲ್ಲಿ, 12 ಲಕ್ಷ ಕೋಟಿ ರೂ.ಗಳ ವರೆಗೆ ಭ್ರಷ್ಟಾಚಾರ ನಡೆದಿದೆ. ಹೊಸದಾಗಿ ಆರಂಭವಾದ ‘ಇಂಡಿಯಾ’ ಮೈತ್ರಿಕೂಟದ ಉದ್ದೇಶ ಭ್ರಷ್ಟಾಚಾರವನ್ನು ಪೋಷಿಸುವುದು ಮತ್ತು ಭ್ರಷ್ಟ ರಾಜಕೀಯ ಕುಟುಂಬಗಳನ್ನು ರಕ್ಷಿಸುವುದೇ ಆಗಿದೆ.

ಬಡವರ ಬದುಕನ್ನು ಹಸನುಗೊಳಿಸುವುದೇ ಬಿಜೆಪಿಯ ಗುರಿಯಾಗಿದೆ. ಮೋದಿ ಸರ್ಕಾರ ತಂದ ಯೋಜನೆಗಳಿಂದ ಇತರೆ ಹಿಂದುಳಿದವರು ಲಾಭ ಪಡೆದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುವುದರೊಂದಿಗೆ 2025ರಲ್ಲಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸುತ್ತೇವೆ ಎಂದು ಹೇಳಿದರು.

ದೇಶ

“ನ್ಯೂಸ್‌ ಕ್ಲಿಕ್” ಪ್ರಗತಿಪರ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸಲು ಭಾರತದ ಆನ್‌ಲೈನ್ ಮಾಧ್ಯಮವಾಗಿದೆ. 2009ರಲ್ಲಿ ಪ್ರಾರಂಭವಾದ ನ್ಯೂಸ್‌ ಕ್ಲಿಕ್ ವಿವಿಧ ಜನರಪರ ಚಳುವಳಿಗಳು ಮತ್ತು ಪ್ರತಿಭಟನೆಗಳನ್ನು ವರದಿ ಮಾಡುವ ಜೊತೆಗೆ ಸರ್ಕಾರದ ತಪ್ಪು ನೀತಿಗಳ ಬಗ್ಗೆ ವಿವರವಾದ ಸುದ್ದಿಗಳನ್ನು ನೀಡುವಲ್ಲಿಯೂ ಇದು ಪ್ರಸಿದ್ಧವಾಗಿದೆ. PPK ನ್ಯೂಸ್ ಕ್ಲಿಕ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್ ಒಡೆತನದ ಈ ಕಂಪನಿಯನ್ನು ಪ್ರಬೀರ್ ಪುರ್ಕಾಯಸ್ಥ ಸ್ಥಾಪಿಸಿದ್ದಾರೆ.

ಈ ಹಿನ್ನಲೆಯಲ್ಲಿ, ದೆಹಲಿ ಪೊಲೀಸರು ನ್ಯೂಸ್‌ ಕ್ಲಿಕ್ ಮಾಧ್ಯಮದ ಕಚೇರಿ ಮತ್ತು ಅದರ ವಿವಿಧ ವರದಿಗಾರರು ಹಾಗೂ ಉದ್ಯೋಗಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ. ಭಾರತದ ವಿರುದ್ಧದ ಚಟುವಟಿಕೆಗಳಿಗಾಗಿ ಚೀನಾದಿಂದ ಪರೋಕ್ಷವಾಗಿ ಹಣ ಪಡೆದ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ವಿಶೇಷ ಪೊಲೀಸ್ ತಂಡ 30 ಸ್ಥಳಗಳಲ್ಲಿ ದಾಳಿಯನ್ನು ನಡೆಸಿದ್ದಾರೆ.

ದಾಳಿ ಪೂರ್ಣಗೊಂಡ ನಂತರ, ಅಧಿಕಾರಿಗಳು ನ್ಯೂಸ್‌ ಕ್ಲಿಕ್ ಕಚೇರಿಗೆ ಬೀಗ ಜಡಿದಿದ್ದಾರೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ವಿರುದ್ಧ ರಚನೆಯಾಗಿರುವ “ಇಂಡಿಯಾ ಮೈತ್ರಿಕೂಟ” ಈ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ಇದರ ಬಗ್ಗೆ ಹೊರಡಿಸಿರುವ ಮಾಧ್ಯಮ ಪ್ರಕಟಣೆಯಲ್ಲಿ,

“ಜನಸಾಮಾನ್ಯರಿಗೆ ಸತ್ಯವನ್ನು ವಿವರಿಸುವವರ ವಿರುದ್ಧ ಬಿಜೆಪಿ ಕಾರ್ಯನಿರ್ವಹಿಸುತ್ತಲೇ ಇದೆ. ಹಿಂಸಾಚಾರ ಮತ್ತು ವಿಭಜನೆಯನ್ನು ಪ್ರಚೋದಿಸುವವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಉದ್ಯಮಿಗಳು ಅವರಿಗೆ ಅಗತ್ಯವಿರುವ ಮಾಧ್ಯಮಗಳನ್ನು ವಶಪಡಿಸಿಕೊಳ್ಳಲು ಸಹಾಯ ಮಾಡಲು ಇಂತಹ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ.

ಸರ್ಕಾರದ ತಪ್ಪುಗಳನ್ನು ಅಂಕಿಅಂಶಗಳೊಂದಿಗೆ ಮಾಧ್ಯಮಗಳು ವಿಶ್ಲೇಷಿಸುವುದನ್ನು ಮತ್ತು ವರದಿ ಮಾಡುವುದನ್ನು ಈ ಸರ್ಕಾರ ತಡೆಯಲು ಯತ್ನಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಪ್ರಬುದ್ಧ ಪ್ರಜಾಪ್ರಭುತ್ವ ಎಂದು ಪರಿಗಣಿಸಲ್ಪಟ್ಟಿದ್ದ ಭಾರತಕ್ಕೆ ಇದು ಭಾರೀ ಹಿನ್ನಡೆಯಾಗಲಿದೆ. ಬಿಬಿಸಿ, ನ್ಯೂಸ್ ಲಾಂಡ್ರಿ, ದೈನಿಕ್ ಬಜಾರ್, ಭಾರತ್ ಸಮಾಚಾರ್ ಮತ್ತು ವೈರ್ ಮುಂತಾದ ಮಾಧ್ಯಮಗಳನ್ನು ಗುರಿಯಾಗಿಸಿಕೊಂಡಿದ್ದ ಸಾಲಿನಲಿನಲ್ಲಿ ಇದೀಗ ನ್ಯೂಸ್‌ ಕ್ಲಿಕ್‌ ಸೇರ್ಪಡೆಯಾಗಿದೆ” ಎಂದು ವಿರೋಧಪಕ್ಷಗಳ “ಇಂಡಿಯಾ ಮೈತ್ರಿಕೂಟ” ತಮ್ಮ ಆಕ್ರೋಶವನ್ನು ಹೊರಹಾಕಿದೆ.

ರಾಜಕೀಯ

ಹೈದರಾಬಾದ್: ತಮಿಳುನಾಡಿನಲ್ಲಿರುವ ಹಿಂದೂ ದೇವಾಲಯಗಳನ್ನು ಡಿಎಂಕೆ ಸರ್ಕಾರ ಅತಿಕ್ರಮಣ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಬಹಿರಂಗ ಆರೋಪ ದೇಶಾದ್ಯಂತ ಸಂಚಲನ ಮೂಡಿಸಿದೆ. ಬಿಜೆಪಿ ಈಗಾಗಲೇ ‘ಸನಾತನ’ ವಿಚಾರದಲ್ಲಿ ಡಿಎಂಕೆ ವಿರುದ್ಧ ಭಾರತದಾದ್ಯಂತ ಪ್ರಚಾರ ನಡೆಸುತ್ತಿದ್ದು, ಈ ಆರೋಪವನ್ನು ಪ್ರಧಾನಿ ಮೋದಿ ಸಾರ್ವಜನಿಕವಾಗಿ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ತೆಲಂಗಾಣ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ತೆಲಂಗಾಣದಲ್ಲಿ ಆಡಳಿತಾರೂಢ ಭಾರತೀಯ ರಾಷ್ಟ್ರ ಸಮಿತಿ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ತೆಲಂಗಾಣದಲ್ಲಿ ಇಲ್ಲಿಯವರೆಗೆ ನೆಲೆ ಸ್ಥಾಪಿಸದ ಬಿಜೆಪಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಗಮನಾರ್ಹ ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದರಿಂದ ತೆಲಂಗಾಣದಲ್ಲಿ ಈ ಬಾರಿ ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂದು ಬಿಜೆಪಿ ಕಸರತ್ತು ನಡೆಸುತ್ತಿದೆ.

ಇದನ್ನೂ ಓದಿ: ಸ್ಥಳೀಯ ಅಧಿಕಾರಿಗಳ ಕುಮ್ಮಕ್ಕಿನಿಂದ ದಲಿತ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬಹಿಷ್ಕಾರ!

ಆ ನಿಟ್ಟಿನಲ್ಲಿ ಇಂದು ತೆಲಂಗಾಣದ ನಿಜಾಮಾಬಾದ್‌ನಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು ಭಾಷಣ ಮಾಡಿದರು. ತಮ್ಮ ಭಾಷಣದ ಭಾಗವಾಗಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರವನ್ನೂ ಮೋದಿ ಟೀಕಿಸಿ ಮಾತನಾಡಿದರು.

“ತಮಿಳುನಾಡಿನಲ್ಲಿ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಹಿಂದೂ ಜನರ ಜೀವ ಉಸಿರಾದ ಸನಾತನ ಧರ್ಮ ನಾಶವಾಗಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಾರ್ವಜನಿಕವಾಗಿ ಹೇಳುತ್ತಿದ್ದಾರೆ. ಅದರ ಭಾಗವಾಗಿ ತಮಿಳುನಾಡಿನಲ್ಲಿ ಹಿಂದೂ ದೇವಾಲಯಗಳನ್ನು ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಹಿಂದೂ ದೇವಾಲಯಗಳನ್ನು ತಮಿಳುನಾಡು ಸರ್ಕಾರ ವಶಪಡಿಸಿಕೊಂಡಿದೆ. ಇದು ಅತ್ಯಂತ ದೊಡ್ಡ ಅರಾಜಕತೆ.

ಇದನ್ನೂ ಓದಿ: 19 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ: ಅಕ್ಟೋಬರ್ 14 ರಂದು ಅಮೇರಿಕಾದಲ್ಲಿ ಅನಾವರಣ!

ಹಿಂದೂ ದೇವಾಲಯಗಳ ನಿಯಂತ್ರಣದಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ದನಿಯೆತ್ತಿದೆ? ಕಾಂಗ್ರೆಸಿಗೆ ಧೈರ್ಯವಿದ್ದರೆ ಅವರು ತಮಿಳುನಾಡಿನಲ್ಲಿ ಹಾಗೆ ಹೇಳಲು ಸಾಧ್ಯವೇ? ನೀವು (ಕಾಂಗ್ರೆಸ್) ಡಿಎಂಕೆ ಸರ್ಕಾರದ ಜೊತೆ ಮೈತ್ರಿ ಮಾಡಿಕೊಂಡಿದ್ದೀರಿ; ಹಾಗಾಗಿ ಹಿಂದೂ ದೇವಾಲಯಗಳ ನಿರ್ವಹಣೆಯಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ನೀವು ಡಿಎಂಕೆಗೆ ಹೇಳಬೇಕು” ಎಂದು ಮೋದಿ ಹೇಳಿದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಮಧ್ಯಪ್ರದೇಶದಲ್ಲಿ ಸೋಲನ್ನು ತಪ್ಪಿಸಲು ಬಿಜೆಪಿಯಿಂದ ಕೇಂದ್ರ ಸಚಿವರಿಗೆ ಶಾಸಕ ಟಿಕೆಟ್ ನೀಡಲಾಗಿದೆ. ಮಧ್ಯಪ್ರದೇಶದಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 230 ಸ್ಥಳಗಳಲ್ಲಿ ಕಾಂಗ್ರೆಸ್ ಪಕ್ಷ 114 ಸ್ಥಾನಗಳನ್ನು ಗೆದ್ದುಕೊಂಡಿತು. ಆ ನಂತರ ಸಣ್ಣ ಪಕ್ಷಗಳ ಬೆಂಬಲದೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು.

ಆದರೆ ಕಳೆದ 2020ರಲ್ಲಿ 6 ಸಚಿವರು ಸೇರಿದಂತೆ 22 ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದರು. ಇದರಿಂದ ಕಾಂಗ್ರೆಸ್ ಸರ್ಕಾರ ಉರುಳಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿತು. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಲ್ಲಿ ಅಸಮಾಧಾನದ ಅಲೆ ಎದ್ದಿದೆ.

ಸದ್ಯದಲ್ಲೇ ಅಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಕಾಂಗ್ರೆಸ್ ಬಹುಮತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಇತ್ತೀಚಿನ ಸಮೀಕ್ಷೆಗಳು ಬಹಿರಂಗಪಡಿಸಿವೆ. ಇದರಿಂದ ಬಿಜೆಪಿ ನಾಯಕತ್ವ ತೀವ್ರ ಆಘಾತಕ್ಕೊಳಗಾಗಿದೆ.

ಈ ಹಿನ್ನಲೆಯಲ್ಲಿ, ಮಧ್ಯಪ್ರದೇಶದಲ್ಲಿ ಸೋಲು ತಪ್ಪಿಸಲು ಬಿಜೆಪಿಯಿಂದ ಕೇಂದ್ರ ಸಚಿವರಿಗೆ ವಿಧಾನಸಭೆಗೆ ಟಿಕೆಟ್ ನೀಡಲಾಗಿದೆ. ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಫಗನ್ ಸಿಂಗ್ ಕುಲಸ್ತೆ ಸೇರಿದಂತೆ 7 ಸಂಸದರನ್ನು ಬಿಜೆಪಿ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ.

ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸುವ ಮೂಲಕ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ. ಈಗಾಗಲೇ ಅಲ್ಲಿ ಬಿಜೆಪಿ ವರ್ಚಸ್ಸು ಕುಸಿದಿದ್ದು, ಜನರಿಗೆ ಒಂದಷ್ಟು ಪರಿಚಿತ ಮುಖಗಳನ್ನು ಬಳಸಿಕೊಂಡರೆ ಅಲ್ಲಿ ಆಗಿರುವ ಹಾನಿಯನ್ನು ಸ್ವಲ್ಪ ಕಡಿಮೆ ಮಾಡಬಹುದು ಎಂದು ಬಿಜೆಪಿ ಭಾವಿಸಿದೆ ಎನ್ನಲಾಗಿದೆ.