ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Construction Workers Archives » Dynamic Leader
October 17, 2024
Home Posts tagged Construction Workers
ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕ ಇಲಾಖೆಯು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ. ಪ್ರತಿಯೊಬ್ಬರೂ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಬಸವಣ್ಣನವರು ಕಾಯಕ ಪದ್ಧತಿಯನ್ನು ಹೇಳಿದರು. ಸಂವಿಧಾನದ ಪ್ರಕಾರ ಪ್ರತಿಯೊಬ್ಬರೂ ಸಮಾಜದ ಸಂಪತ್ತಿನಲ್ಲಿ ಸಮಪಾಲು ಹೊಂದಬೇಕು. ಹೀಗಾಗಿ ನಾವು ಕಾರ್ಮಿಕರ ಮಕ್ಕಳಿಗೆ ಈ ರೀತಿಯ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಇದರಿಂದ ಸಮ ಸಮಾಜದ ಆಶಯಗಳನ್ನು ಜಾರಿಗೊಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಶೂದ್ರ ಮತ್ತು ಮಹಿಳೆಯರನ್ನು ಶತ- ಶತಮಾನಗಳ ಕಾಲ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗಿತ್ತು. ಈ ಕಾರಣಕ್ಕೇ ಶೂದ್ರ ವರ್ಗಗಳು ಹಿಂದುಳಿಯುವಂತಾಯಿತು. ಅಸಮಾನತೆ ಹೆಚ್ಚಾಯಿತು. ಈ ಅಸಮಾನತೆಯನ್ನು ಅಳಿಸುವ ಉದ್ದೇಶ ನಮ್ಮ ಸರ್ಕಾರದ್ದು. 9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ ಆಗುತ್ತಿದೆ. ಇದರ ಸದುಪಯೋಗ ಪಡಿಸಿಕೊಂಡು ಶಿಕ್ಷಣವಂತರಾಗಬೇಕು. ಶಿಕ್ಷಣದಿಂದ ಅಸಮಾನತೆ ದೂರ ಮಾಡಬಹುದು ಎಂದರು.

ಸಹಾಯ ಧನ ಪಡೆಯುತ್ತಿರುವ ಇವರೆಲ್ಲರೂ ಅಸಂಘಟಿತ ಕಾರ್ಮಿಕರ ಮಕ್ಕಳು. ಶೇ.83ರಷ್ಟು ಕಾರ್ಮಿಕರು ಇವತ್ತಿಗೂ ಅಸಂಘಟಿತರಾಗಿದ್ದಾರೆ. ದೇಶದಲ್ಲಿ ರೈತ ಸಮುದಾಯವನ್ನು ಬಿಟ್ಟರೆ ಎರಡನೇ ಅತೀ ದೊಡ್ಡ ಸಮುದಾಯ ಕಾರ್ಮಿಕ ಸಮುದಾಯ. ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪಟ್ಟಭದ್ರರನ್ನು ನಾವು ದೂರ ಇಡಬೇಕು. ಈ ಪಟ್ಟ ಭದ್ರರು ಸಾಮಾಜಿಕ ನ್ಯಾಯದ ವಿರೋಧಿಗಳು. ಈ ವಿಭಜಕರು ಶೂದ್ರ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆ ಬರುವುದನ್ನು ವಿರೋಧಿಸುತ್ತಾರೆ. ಆದ್ದರಿಂದ ಜಾತಿ-ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವವರನ್ನು ನಾವು ವಿರೋಧಿಸಬೇಕು ಎಂದು ಹೇಳಿದರು.

ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಿಂದ ನಾವು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲ ಆಗುವ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡರು.