ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
DY ChandraChud Archives » Dynamic Leader
October 23, 2024
Home Posts tagged DY ChandraChud
ದೇಶ

ಕೊಲಿಜಿಯಂ ಶಿಫಾರಸ್ಸು ಮಾಡಿದ 5 ನ್ಯಾಯಮೂರ್ತಿಗಳ ನೇಮಕ ಶೀಘ್ರ ಎಂದು ಸುಪ್ರೀಂಗೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ ನೀಡಿದೆ.

ಹೊಸದಹಲಿ: ಕೊಲಿಜಿಯಂ ಶಿಫಾರಸ್ಸು ಮಾಡಿರುವ ಐವರು ನ್ಯಾಯಮೂರ್ತಿಗಳ ನೇಮಕವನ್ನು ಶೀಘ್ರವೇ ಮಾಡಲಾಗುವುದು ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೊಲಿಜಿಯಂ ಮೂವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮತ್ತು ಇಬ್ಬರು ನ್ಯಾಯಮೂರ್ತಿಗಳು ಸೇರಿದಂತೆ ಐವರು ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಶಿಫಾರಸು ಮಾಡಿತ್ತು.

ನ್ಯಾಯಮೂರ್ತಿಗಳ ನೇಮಕ ವಿಳಂಬಕ್ಕೆ ಸಂಬಂಧಿಸಿದ ಪ್ರಕರಣ ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು. ನ್ಯಾಯಮೂರ್ತಿಗಳಾದ ಕೌಲ್ ಮತ್ತು ಎ.ಎಸ್.ಓಕಾ ಅವರನ್ನೊಳಗೊಂಡ ಪೀಠವು ಇದನ್ನು ಆಲಿಸಿತು.

ಆ ಸಮಯದಲ್ಲಿ ಮಾತನಾಡಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ಕೊಲಿಜಿಯಂ ಶಿಫಾರಸ್ಸು ಮಾಡಿರುವ 5 ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ಶೀಘ್ರದಲ್ಲೇ ನೇಮಕ ಮಾಡಲಾಗುವುದು ಎಂದರು.

ಇದು ಅತ್ಯಂತ ಮಹತ್ವದ ವಿಚಾರವಾಗಿದ್ದು, ಕೊಲಿಜಿಯಂ ಶಿಫಾರಸು ಮಾಡಿದ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಪೀಠ ಅಸಮಾಧಾನ ವ್ಯಕ್ತಪಡಿಸಿತು. ತುಂಬಾ ಮುಜುಗರ ತರುವಂತಹ ನಿರ್ದಾರವನ್ನು ತೆಗೆದುಕೊಳ್ಳಲು ನಮ್ಮನ್ನು ಬಲವಂತ ಮಾಡಬೇಡಿ ಎಂದೂ ಸೂಚಿಸಿತು.

ಈ ಹಿಂದೆ, ಕೊಲಿಜಿಯಂ, ಡಿಸೆಂಬರ್ 13, 2022 ರಂದು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿತ್ತಲ್, ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿವಿ ಸಂಜಯ್ ಕುಮಾರ್, ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿ ಅಶಾನುದ್ದೀನ್ ಅಮಾನುಲ್ಲಾ, ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಮನೋಜ್ ಮಿಶ್ರಾ ಮುಂತಾದ ಐವರು ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಸಿಪಾರಸು ಮಾಡಿತ್ತು.

ಈ ಐವರು ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಿದರೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ ಏರಲಿದೆ. ಸುಪ್ರೀಂ ಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಸೇರಿದಂತೆ ಒಟ್ಟು 34 ನ್ಯಾಯಾಧೀಶರು ಇರಬೇಕು. ಪ್ರಸ್ತುತ 27 ನ್ಯಾಯಾಧೀಶರಿದ್ದಾರೆ.

ದೇಶ

‘ಆಡಳಿತಾರೂಢ ಬಿಜೆಪಿ ಪಕ್ಷವು ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ತಮ್ಮ ಕೈವಶ ಮಾಡಿಕೊಳ್ಳಲು ಯತ್ನಿಸುತ್ತಿದೆ’ ಎಂದು ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕಾನೂನು ಸಚಿವ ಕಪಿಲ್ ಸಿಬಲ್ ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಲ್ಲಿ ನ್ಯಾಯಾಧೀಶರ ನೇಮಕವನ್ನು ಕೊಲಿಜಿಯಂ ಮುಖಾಂತ ಮಾಡಲಾಗುತ್ತದೆ. ಕೊಲಿಜಿಯಂನಲ್ಲಿರುವ ನ್ಯಾಯಾಧೀಶರ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರವು ಹೊಸ ನ್ಯಾಯಾಧೀಶರನ್ನು ನೇಮಕ ಮಾಡುತ್ತದೆ. ಅದರಂತೆ ದೇಶದ ವಿವಿಧ ನ್ಯಾಯಾಲಯಗಳಿಗೆ ನ್ಯಾಯಾಧೀಶರ ನೇಮಕಕ್ಕೆ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದರಿಂದಾಗಿ ಹಲವು ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ನೇಮಕವಾಗುತ್ತಿಲ್ಲ.

ಇದರಿಂದ ನ್ಯಾಯಾಂಗ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ಬೆಳಕಿಗೆ ಬಂದಿತು. ಹಾಗಾಗಿಯೇ ‘ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಕಡೆಗಣಿಸಿದ್ದರು’ ಎಂದು ರಾಜಕೀಯ ತಜ್ಞರು ಹೇಳುತ್ತಿದ್ದಾರೆ. ಮುಖ್ಯನ್ಯಾಯಮೂರ್ತಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸದೇ ಇರುವುದು ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲು ಎಂಬುದು ಗಮನಾರ್ಹ.

ಈ ಹಿನ್ನಲೆಯಲ್ಲಿ ಕಳೆದ ನವೆಂಬರ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಕೊಲಿಜಿಯಂ ವ್ಯವಸ್ಥೆಯನ್ನು ತೀವ್ರವಾಗಿ ಟೀಕಿಸಿದ್ದರು. ‘ಕೊಲಿಜಿಯಂ ಪದ್ಧತಿಯು ಮೂಲಭೂತವಾಗಿ ದೋಷಪೂರಿತವಾಗಿದೆ’ ಎಂದು ಟೀಕಿಸಿದ ಅವರು, ‘ಕೊಲಿಜಿಯಂ ವ್ಯವಸ್ಥೆಯಲ್ಲಿ ನ್ಯಾಯಾಧೀಶರು ತಮಗೆ ತಿಳಿದಿರುವ ವಕೀಲರನ್ನು ನ್ಯಾಯಾಧೀಶರನ್ನಾಗಿ ನಾಮನಿರ್ದೇಶನ ಮಾಡುತ್ತಾರೆ ಮತ್ತು ಅದೇ ರೀತಿ ತಮಗೆ ತಿಳಿದಿರುವ ನ್ಯಾಯಾಧೀಶರನ್ನು ಬಡ್ತಿಗೆ ಶಿಫಾರಸು ಮಾಡುತ್ತಾರೆ’ ಎಂದು ಆರೋಪಿಸಿದ್ದಾರೆ.

ತರುವಾಯ, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಕೂಡ ‘ನ್ಯಾಯಾಂಗವು ಸಂಸತ್ತನ್ನು ನಿಯಂತ್ರಿಸುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿನ್ನಲೆಯಲ್ಲಿ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, ‘ಆಡಳಿತಾರೂಢ ಬಿಜೆಪಿ ಪಕ್ಷವು ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಕೈವಶ ಮಾಡಿಕೊಳ್ಳಲು ಯತ್ನಿಸುತ್ತಿದೆ’ ಎಂದು ಗಂಭೀರವಾದ ಆರೋಪವನ್ನು ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕಾನೂನು ಸಚಿವ ಕಪಿಲ್ ಸಿಬಲ್, ‘ನ್ಯಾಯಾಂಗವನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದೆ. ಮತ್ತೊಂದು ಕಡೆ, ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ (NJAC) ರಚನೆಯಾಗುವ ಪರಿಸ್ಥಿತಿಯನ್ನು ಸೃಷ್ಠಿಸುವ ಪ್ರಯತ್ನವನ್ನೂ ಮಾಡುತ್ತಿದೆ.

ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಪ್ರಕರಣದಲ್ಲಿ ಕೇಶವಾನಂದ ಭಾರತಿ ಅವರ ತೀರ್ಪಿನಲ್ಲಿ ಹೇಳಲಾದ ಮೂಲಭೂತ ರಚನೆಯ ತತ್ವವು ಪ್ರಸ್ತುತ ಕಾಲದಲ್ಲಿ ಬಹಳ ಮುಖ್ಯವಾಗಿದೆ. ಉನ್ನತ ನ್ಯಾಯಾಂಗದ ನೇಮಕಾತಿಗಳ ಬಗ್ಗೆ ಸರ್ಕಾರವು ಅಂತಿಮವಾಗಿ ನಿರ್ಧರಿಸುವ ಅಧಿಕಾರವನ್ನು ಹೊಂದಿಲ್ಲ.

ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ (NJAC) ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ರೂಪದಲ್ಲಿ ಪರೀಕ್ಷೆಗೆ ಒಳಗಾಗುವ ಪರಿಸ್ಥಿತಿಯನ್ನು ಸೃಷ್ಟಿಸಲು ಅವರು ಎಲ್ಲಾ ರೀತಿಯಲ್ಲೂ ಪ್ರಯತ್ನಿಸುತ್ತಿದ್ದಾರೆ. ಕಾನೂನು ಸಚಿವರಿಗೆ ನ್ಯಾಯಾಲಯಗಳ ಕಾರ್ಯವೈಖರಿ ಬಗ್ಗೆ ಅರಿವಿಲ್ಲ. ನ್ಯಾಯಾಲಯದ ಕಾರ್ಯವಿಧಾನಗಳ ಬಗ್ಗೆ ಅವರಿಗೆ ತಿಳಿದಿಲ್ಲ ಎಂದು ನಾನು ಈಗಾಗಲೇ ಹೇಳಿದ್ದೇನೆ.

ಸರ್ಕಾರವು ಎಲ್ಲ ಸಂಸ್ಥೆಗಳನ್ನು (ಸಿಬಿಐ, ಇಡಿ, ಐಟಿ ಮುಂತಾದ) ತಮ್ಮ ವಶಕ್ಕೆ ತೆಗೆದುಕೊಂಡಿದೆ. ನ್ಯಾಯಾಂಗವು ಸ್ವಾತಂತ್ರ್ಯದ ಕೊನೆಯ ಭದ್ರಕೋಟೆಯಾಗಿದೆ. ಉಚ್ಚ ನ್ಯಾಯಾಲಯಕ್ಕೆ ನ್ಯಾಯಾಧೀಶರ ನೇಮಕವನ್ನು ಮಾಡುವ ಅಂತಿಮ ನಿರ್ದಾರದ ಅಧಿಕಾರವನ್ನು ಸರ್ಕಾರಕ್ಕೆ ಬಿಟ್ಟರೆ, ಸರ್ಕಾರವು ಈ ಸಂಸ್ಥೆಗಳನ್ನು ಅಧಿಕಾರದಲ್ಲಿರುವ ರಾಜಕೀಯ ಪಕ್ಷದ ಸಿದ್ಧಾಂತದೊಂದಿಗೆ ಶಾಮೀಲಾಗಿರುವ ವ್ಯಕ್ತಿಗಳಿಂದ ತುಂಬಿಸುತ್ತಾರೆ.

ಅವರು ಸ್ವಾಧೀನಪಡಿಸಿಕೊಂಡಿರುವ ಈ ಸಂಸ್ಥೆಗಳು ಸರ್ಕಾರದ ನಿರ್ದೇಶನದ ಮೇರೆಗೆ ಕಾರ್ಯನಿರ್ವಹಿಸುತ್ತಿವೆ ಅಥವಾ ಅವರಿಗೆ ತಿಳಿದಿರುವ ಕಾರಣಗಳಿಗಾಗಿ ಅವರು ಸರ್ಕಾರವನ್ನು ಮೆಚ್ಚಿಸಲು ಬಯಸುತ್ತಾರೆ ಎಂದು ನಾವು ಭಾವಿಸುತ್ತೇವೆ.

ಮೂಲಭೂತ ರಚನಾತ್ಮಕ ಸಿದ್ಧಾಂತವು ಎಷ್ಟು ಮುಖ್ಯವಾದದ್ದು ಎಂಬುದನ್ನು, ನಮ್ಮ ಜೀವನಕ್ಕೆ ಮೂಲಭೂತವಾದ ವಾಕ್ ಸ್ವಾತಂತ್ರ್ಯ, ಬದುಕುವ ಹಕ್ಕು ಮತ್ತು ಸ್ವಾತಂತ್ರ್ಯದಂತಹ ಸಂವಿಧಾನದ ಅಂಶಗಳನ್ನು ಪ್ರಸ್ತಾಪಿಸಿದ ಕೇಶವಾನಂದ ಭಾರತಿಯ ತೀರ್ಪು ಇಂತಹ ಸಮಯದಲ್ಲಿ ಎಷ್ಟು ಸರಿಯಾಗಿದೆ ಎಂಬುದು ನಮಗೆ ಅರಿವಾಗುತ್ತಿದೆ’ ಎಂದು ಅವರು ಹೇಳಿದರು.