ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
JDS Archives » Dynamic Leader
October 19, 2024
Home Posts tagged JDS
ರಾಜಕೀಯ

ಬೆಂಗಳೂರು: 2024ರ ಸಂಸತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸಿ ಗೆದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾಸ್ವಾಮಿ, 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಸಿಕೊಂಡ ನರೇಂದ್ರ ಮೋದಿ ಸರ್ಕಾರದಲ್ಲಿ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಅವರನ್ನು ಜೆಡಿಎಸ್ ಕಾರ್ಯಕರ್ತರು, ವಿಮಾನ ನಿಲ್ದಾಣದ ಬಳಿ ಅತ್ಯಂತ ಪ್ರೀತಿಯಿಂದ ಬರ ಮಾಡಿಕೊಂಡರು.

ಅದೇ ರೀತಿ ಕೇಂದ್ರ ಸರಕಾರದಲ್ಲಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ.ಭವನಕ್ಕೆ ಭೇಟಿ ನೀಡಿದ ಕುಮಾರಸ್ವಾಮಿಯನ್ನು ಪಕ್ಷದ ನಾಯಕರು, ಕಾರ್ಯಕರ್ತರು ವಿಶೇಷ ಅದರಾಭಿಮಾನದಿಂದ ಬರಮಾಡಿಕೊಂಡರು.

ಈ ಬಗ್ಗೆ ತಮ್ಮ ಎಕ್ಸ್ ಜಾಲತಾಣದಲ್ಲಿ, “ಎಲ್ಲರ ವಿಶ್ವಾಸ, ಅಭಿಮಾನಕ್ಕೆ ನಾನು ಋಣಿ. ಮುಖ್ಯವಾಗಿ ಈ ಅವಿಸ್ಮರಣೀಯ ಕ್ಷಣಗಳಿಗೆ ನೇರ ಕಾರಣರಾದ ಮಂಡ್ಯ ಲೋಕಸಭೆ ಕ್ಷೇತ್ರದ ಮಹಾಜನತೆಗೆ, ಸಮಸ್ತ ಕನ್ನಡಿಗರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.

ಕೇಂದ್ರ ಸರಕಾರದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ರಾಜಭವನಕ್ಕೆ ತೆರಳಿ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿದರು.

ಕೇಂದ್ರ ಸಚಿವರಾದ ಮೇಲೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿಯಾದ ತಂದೆ ಹೆಚ್.ಡಿ.ದೇವೇಗೌಡರನ್ನು ಮತ್ತು ತಾಯಿಯನ್ನು ಅವರ ಸ್ವಗೃಹದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು.

ದೇಶ

ನವದೆಹಲಿ: ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಸಂಸದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಲಾಗಿದೆ.

ಈ ಕುರಿತು ತಮ್ಮ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು “ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು” ಎಂದು ಹೇಳಿದ್ದಾರೆ.

I am deeply grateful to the Hon’ble Prime Minister, Shri.Narendramodi for appointing me as the Minister of Steel and Heavy Industries in the National Democratic Alliance (NDA) government, in its third consecutive term.

ದೇಶ

ನವದೆಹಲಿ: ದೇವೇಗೌಡರ ಪುತ್ರನ ಅಶ್ಲೀಲ ವಿಡಿಯೋ ವಿಚಾರದಲ್ಲಿ ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಗಾಂಧಿ ಪ್ರಶ್ನೆ ಎತ್ತಿದ್ದಾರೆ.

ಜಾತ್ಯತೀತ ಜನತಾ ದಳದ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ದೇವೇಗೌಡರ ಹಿರಿಯ ಮಗ ರೇವಣ್ಣ, ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವೀಡಿಯೋ ಪ್ರಕರಣ ರೂಪ ಪಡೆದುಕೊಂಡಿದೆ. ವಿಚಾರಣೆಗೆ ಹೆದರಿ ಅವರು ಜರ್ಮನಿಗೆ ಪಲಾಯನ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಕರ್ನಾಟಕ ಸರ್ಕಾರ ವಿಶೇಷ ತನಿಖಾ ಸಮಿತಿ (SIT) ಯನ್ನು ರಚಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಿಯಾಂಕಾ ಪ್ರಕಟಿಸಿರುವ ಪೋಸ್ಟ್‌ನಲ್ಲಿ, “10 ದಿನಗಳ ಹಿಂದೆ ಪ್ರಧಾನಿ ಕೈಕುಲುಕಿ, ಭುಜ ತಟ್ಟಿ ಕರ್ನಾಟಕ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಈಗ ದೇಶ ಬಿಟ್ಟು ತಲೆಮರೆಸಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಬದುಕನ್ನು ಹಾಳು ಮಾಡಿದ್ದಾರೆ.

ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಮಾಡಿದ ಅಪರಾಧಗಳನ್ನು ಕೇಳಿದರೆ ಹೃದಯ ಕಂಪಿಸುತ್ತದೆ. ಈ ಬಗ್ಗೆ ಪ್ರಧಾನಿ ಮೋದಿ ಬಾಯಿ ತೆರೆಯುತ್ತಾರಾ? ಪ್ರಧಾನಿ ಮೋದಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿರುವುದು ಏಕೆ? ಎಂದು ಪ್ರಧಾನಿ ಮೋದಿಯನ್ನು ಪ್ರಿಯಾಂಕಾ ವಾದ್ರಾ ಗಾಂಧಿ ಪ್ರಶ್ನಿಸಿದ್ದಾರೆ.

ರಾಜಕೀಯ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲದಿದ್ದರೆ ಐದು ಗ್ಯಾರಂಟಿಗಳು ರದ್ದಾಗುತ್ತವೆ ಎಂದು ಮಾಗಡಿ ವಿಧಾನಸಭೆ ಕ್ಷೇತ್ರದ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರು ಹೇಳಿರುವುದು ಕಾಂಗ್ರೆಸ್ ಸರಕಾರದ ಅಸಲಿ ಆಲೋಚನೆಯನ್ನು ಬಯಲು ಮಾಡಿದೆ. ಕೊಟ್ಟ ಕೈಯ್ಯಲ್ಲೆ ಕಸಿದುಕೊಳ್ಳುವ ಹುನ್ನಾರ ಇಲ್ಲಿ ಸ್ಫುಟವಾಗಿ ಗೋಚರಿಸುತ್ತಿದೆ ಎಂದು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.  

ಪಕ್ಷ, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಅಪ್ಪಣೆ ಇಲ್ಲದೆ ಶಾಸಕರು ಇಂಥ ಮಹತ್ವದ ಹೇಳಿಕೆಯನ್ನು ಅದೂ ಚುನಾವಣೆ ಹೊತ್ತಿನಲ್ಲಿ ಕೊಡಲು ಸಾಧ್ಯವೇ? ಅಲ್ಲಿಗೆ ಯುದ್ಧಕ್ಕೆ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿದೆ. ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಒದ್ದಾಡುತ್ತಿರುವ ಸರಕಾರವು, ತನ್ನ ಶಾಸಕರೊಬ್ಬರ ಮೂಲಕ ರದ್ದು ಮಾಡುತ್ತೇವೆ ಎಂದು ಹೇಳಿಸಿದೆ ಎಂದೇ ಭಾವಿಸಬೇಕಾಗುತ್ತದೆ. ಅದು ನಿಜವೂ ಹೌದು ಎನ್ನುವುದು ನನ್ನ ಭಾವನೆ ಎಂದು ಹೇಳಿದ್ದಾರೆ.

ಆ ಶಾಸಕರ ಹೇಳಿಕೆಯ ಧಾಟಿ ಹೇಗಿದೆ ಎಂದರೆ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ, ಇಲ್ಲವಾದರೆ ನಿಮಗೆ ಕೊಟ್ಟಿರುವ ಗ್ಯಾರಂಟಿಗಳನ್ನು ಮುಲಾಜಿಲ್ಲದೆ ರದ್ದು ಮಾಡುತ್ತೇವೆ ಎಂದು ಬ್ಲ್ಯಾಕ್ ಮೇಲ್ ಮಾಡುವ ಧಾಟಿಯಲ್ಲಿದೆ ಇದು ಪ್ರಜಾಪ್ರಭುತ್ವಕ್ಕೆ, ಜನರ ನಂಬಿಕೆಗೆ ಎಸಗಿದ ಅಪಚಾರವಾಗಿದೆ ಎಂದು ಕಿಡಿಕಾರಿದ್ದಾರೆ.

ಆ ಶಾಸಕರು ಹಾಗೂ ಕಾಂಗ್ರೆಸ್ ಪಕ್ಷ ಅರ್ಥ ಮಾಡಿಕೊಳ್ಳಬೇಕು. ಚುನಾವಣೆಯಲ್ಲಿ ಗೆಲ್ಲುವ ಏಕೈಕ ಉದ್ದೇಶದಿಂದ ನೀವು ಪಂಚ ಗ್ಯಾರಂಟಿಗಳ ಭರವಸೆ ಕೊಟ್ಟಿದ್ದಿರಿ. ಆಮೇಲೆ ಅವುಗಳನ್ನು ಜಾರಿ ಮಾಡಿದ್ದೀರಿ. ‘ಗ್ಯಾರಂಟಿ ಕೊಡಿ, ನಿಮಗೆ ವೋಟು ಹಾಕುತ್ತೇವೆ’ ಎಂದು ಜನರೇನು ಕೇಳಿರಲಿಲ್ಲ. ವಾಸ್ತವ ಸ್ಥಿತಿ ಹೀಗಿದ್ದ ಮೇಲೆ ಈಗ ಗ್ಯಾರಂಟಿಗಳನ್ನು ಅದ್ಹೇಗೆ ವಾಪಸ್ ಪಡೆಯುತ್ತೀರಿ? ಕಾಂಗ್ರೆಸ್ ಸರಕಾರದ ವರ್ತನೆಗೆ ನನ್ನ ಹಾಗೂ ನಮ್ಮ ಪಕ್ಷದ ತೀವ್ರ ವಿರೋಧವಿದೆ ಎಂದು ಹೇಳಿದ್ದಾರೆ.  

ರಾಜಕೀಯ

ಬೆಂಗಳೂರು: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು ಕೆಳಗಿಳಿಸಿ, ರಾಷ್ಟ್ರ ಧ್ವಜ ಹಾರಿಸಿದ್ದನ್ನು ರಾಜಕೀಯ ಗೊಳಿಸಿ, ಜನರನ್ನು ದಾರಿತಪ್ಪಿಸುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವರ್ತನೆ ಖಂಡನೀಯ ಎಂದು ವೆಲ್‌ಫೇರ್ ಪಾರ್ಟಿಯ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ರಾಷ್ಟ್ರ ಧ್ವಜ ಅಥವಾ ಕನ್ನಡ ಧ್ವಜ ಹಾರಿಸಲು ಅನುಮತಿ ಪಡೆದು, ಕೇಸರಿ ಧ್ವಜ ಹಾರಿಸಲು ಪ್ರಯತ್ನಿಸುವುದು ಎಷ್ಟು ಸರಿ. ಮಾತ್ರವಲ್ಲ, 60 ಅಡಿ ಎತ್ತರದ ಸ್ಥಂಭಕ್ಕೆ ಅನುಮತಿ ಪಡೆದು 108 ಅಡಿ ಎತ್ತರದ ಸ್ಥಂಭ ಸ್ಥಾಪಿಸಲಾಗಿದೆ ಎಂದು ತಿಳಿದು ಬಂದಿದೆ. ಇದು ಸ್ಪಷ್ಟವಾದ ನಿಯಮ ಉಲ್ಲಂಘನೆಯಲ್ಲವೇ? ಸರ್ಕಾರದ ವಿರುದ್ಧ ಜನರನ್ನು ಈ ರೀತಿ ಎತ್ತಿ ಕಟ್ಟುವುದನ್ನು ಸಮರ್ಥಿಸಲಾಗದು.

ಈ ಮೂಲಕ ಜನರನ್ನು ಭಾವನಾತ್ಮಕವಾಗಿ ಕೆರಳಿಸುವ ರಾಜಕೀಯಕ್ಕೆ ಬಿಜೆಪಿ ಮತ್ತು ಜೆಡಿಎಸ್ ಮುಂದಾಗಿದೆಯೇ? ಎಂದು ಪ್ರಶ್ನಿಸಿರುವ ತಾಹೇರ್ ಹುಸೇನ್, ಸರಕಾರ ನಾಡಿನ ಜನತೆಗೆ ವಾಸ್ತವಾಂಶಗಳನ್ನು ತಿಳಿಸಿಕೊಡುವ ಪ್ರಯತ್ನ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.

ಜನರು ನಿಜಾಂಶಗಳನ್ನು ಅರಿತು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ  ಕಾಪಾಡಲು ಶ್ರಮಿಸಬೇಕು. ದ್ವೇಷದ ರಾಜಕೀಯಕ್ಕೆ ಯಾರೂ ಬಲಿಯಾಗಬಾರದು ಎಂದು ಅವರು ನಾಡಿನ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ರಾಜಕೀಯ

ಬೆಂಗಳೂರು: ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆನ್ನೆ ವ್ಯಂಗ್ಯವಾಗಿ ಹೇಳಿದ್ದರು. ಇದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ ಎಂದು ಹೇಳಿದ್ದಾರೆ.

‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ʼಗಂಭೀರ(!?)ʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು? ಎಂದು ವ್ಯಂಗ್ಯವಾಡಿದ್ದಾರೆ.

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ! ಅಲ್ಲವೇ? ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!

ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸರಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಸರಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ? ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ? ಎನ್ನುವುದು ನನ್ನ ವಿನಮ್ರ ಪ್ರಶ್ನೆ. ಎಂದು ಕಿಡಿಕಾರಿದ್ದಾರೆ.

236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ; 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಈ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್‌ ಮಂಡಿಸಿ ‘ವಿಶ್ವವಿಖ್ಯಾತ ವಿತ್ತತಜ್ಞ’ರಾಗಿ ಮೆರೆಯುತ್ತಿರುವವರು ನೀವು. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ‘ಜೋಪಾನ’ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ? ಎಂದು ಚೇಡಿಸಿದ್ದಾರೆ

ಹೋಗಲಿ, ನೀವು ಈ ರಾಜ್ಯದ ಮುಖ್ಯಮಂತ್ರಿ… ದೆಹಲಿಗೆ ಹೋಗಿ ಪ್ರಧಾನಿಗಳಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಅದನ್ನೂ ಮಾಡಲಿಲ್ಲ, ಪ್ರತಿಷ್ಠೆ ನಿಮಗೆ. ಪ್ರಧಾನಿಗಳನ್ನು ಸದಾ ನಿಂದಿಸುತ್ತಾ ಕುಳಿತರೆ ಲಾಭವೇನು? ಇಲ್ಲಿ ವರ್ಗಾವಣೆ ದಂಧೆ, ಕಮೀಷನ್ ವಸೂಲಿ, ಆಪರೇಷನ್‌ ಹಸ್ತ, ಡಿನ್ನರ್‌-ಬ್ರೇಕ್‌ ಫಾಸ್ಟ್‌ ಮೀಟಿಂಗುಗಳಲ್ಲಿಯೇ ʼಭಾರೀʼ ಬ್ಯುಸಿ‌ ಆಗಿರುವ ನಿಮಗೆ ದೆಹಲಿಗೆ ಜನರ ಅಹವಾಲು ತೆಗೆದುಕೊಂಡು ಹೋಗಲು ಸಮಯವಾದರೂ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ  

ಇದನ್ನೂ ಓದಿ: ಜೆಡಿಎಸ್ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ: ಸಿದ್ದರಾಮಯ್ಯ

ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ? ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿ ಪ್ರಧಾನಿಗಳನ್ನು,‌ ಸಂಬಂಧಿಸಿದ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ? ಎಷ್ಟು ಅರ್ಜಿ ಕೊಟ್ಟಿದ್ದೀರಿ? ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿನ್ನರ್‌-ಬ್ರೇಕ್‌ ಫಾಸ್ಟ್ ಮೀಟಿಂಗ್‌‌ ಮಾಡಿಕೊಂಡು ಆಪರೇಷನ್‌ ಹಸ್ತದ ಬಗ್ಗೆಯೇ ನಿಮ್ಮ ಸಚಿವರ ಬಳಿ ಅಲವತ್ತುಕೊಳ್ಳುತ್ತಿದ್ದೀರಿ. ಪಂಚರಾಜ್ಯಗಳಿಗೆ ಹಣ ಹಂಚಲು ರಾಜ್ಯವನ್ನು ದೋಚುವುದು ಹೇಗೆಂದು ಗುಟ್ಟು ಗುಟ್ಟಾಗಿ ಪಾಠ ಮಾಡುತ್ತಿದ್ದೀರಿ. ಜೆಡಿಎಸ್‌, ಬಿಜೆಪಿ ಶಾಸಕರು ಹಾಗೂ ಸೋತ ಅಭ್ಯರ್ಥಿಗಳನ್ನು ಆಪರೇಷನ್‌ ಮಾಡಲು ಗುಳ್ಳೆನರಿಗಳಂತೆ ಅವರ ಮನೆಗಳ ಮುಂದೆ ಕತ್ತಲಾದ ಮೇಲೆ ಹೊಂಚು ಹಾಕಿ ಕೂರುತ್ತಿದ್ದೀರಿ ಎಂದು ಕಟಕಿಯಾಡಿದ್ದಾರೆ.

ಕುತ್ತಿಗೆಗೆ ಗ್ಯಾರಂಟಿ ಬೋರ್ಡ್‌ ತಕಲಾಕ್ಕೊಂಡು ಹಾದಿಬೀದಿಯಲ್ಲಿ ಓಡಾಡುತ್ತಿದ್ದೀರಿ. ಐದು ತಿಂಗಳಿಗೇ ಭದ್ರತೆಯ ಗ್ಯಾರಂಟಿ ಇಲ್ಲದೆ ಬಾಲಗ್ರಹಪೀಡಿತ ನಿಮ್ಮ ಸರಕಾರ ಭಿನ್ನಮತಪೀಡಿತವಾಗಿದೆ. ಕುರ್ಚಿ ಉಳಿಸಿಕೊಳ್ಳಲು ನೀವೂ ಹೆಣಗಾಡುತ್ತಿದ್ದೀರಿ. ಹೌದಲ್ಲವೇ? ಆನ್ಸರ್ ಮಾಡಿ ಸನ್ಮಾನ್ಯ  ಸಿದ್ದರಾಮಯ್ಯನವರೇ? ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯ

ಬೆಂಗಳೂರು: ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಬಿಜೆಪಿ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ಹೇಳಿದ್ದಾರೆ.

ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಹೆಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊತೆ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಬಿಜೆಪಿ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ ಎಂದು ಕಿಡಿಕಾರಿದ್ದಾರೆ.

ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದು ವ್ಯಂಗ್ಯವಾಡಿದ್ದಾರೆ.

ರಾಜಕೀಯ

ಬೆಂಗಳೂರು: ವಿದ್ಯುತ್ ಕೃತಕ ಅಭಾವ ಸೃಷ್ಟಿ ನಿಮ್ಮದೇ ಷಡ್ಯಂತ್ರ. ಅದು ಉಲ್ಬಣಿಸಿದಷ್ಟೂ ನಿಮಗೆ ಕಲೆಕ್ಷನ್‌ ಹೆಚ್ಚು. ಖಾಸಗಿ ಕಂಪನಿಗಳಿಂದ ಖರೀದಿಸಿ ಕೈ ತುಂಬಾ ಕಮೀಷನ್ ಎತ್ತಲು ಹೊರಟಿದ್ದೀರಿ. ಇಲ್ಲ ಎಂದಾದರೆ ವಿದ್ಯುತ್‌ ಕ್ಷಾಮದ ವಾಸ್ತವತೆ ಬಗ್ಗೆ ‘ಶ್ವೇತಪತ್ರ’ ಹೊರಡಿಸಿ. ಈ ಬಗ್ಗೆ ನಿಮ್ಮ ಮೌನ ಏಕೆ? ಎಂದು ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

“ವೆಸ್ಟ್ ಎಂಡ್ ನಲ್ಲಿ ಆಡಳಿತ ನಡೆಸಿಲ್ಲ ಎನ್ನುವ ಗಿಲೀಟು ಗಿರಾಕಿ, ಆವತ್ತು ಮುಖ್ಯಮಂತ್ರಿ ನಿವಾಸವನ್ನೇಕೆ ತೆರವು ಮಾಡಲಿಲ್ಲ? 5 ವರ್ಷ ಸರಕಾರ ಕೊಟ್ಟ ಸಿದ್ದಪುರುಷ ಇನ್ನೊಬ್ಬರ ಹೆಸರಿನಲ್ಲಿ ಭಂಗಲೆ ಪಡೆದು ಸಾಸಿವೆ ಕಾಳಷ್ಟೂ ಸಂಕೋಚವಿಲ್ಲದೆ ಅದೇ ಜಾಗದಲ್ಲಿ ಹೆಗ್ಗಣವಾಗಿ ಮೈತ್ರಿ ಸರಕಾರಕ್ಕೆ ಕನ್ನ ಕೊರೆದಿದ್ದನ್ನು ಕನ್ನಡಿಗರು ಮರೆತಿಲ್ಲ. ಹೇಳಿದ್ದೇ ಹೇಳುವ ಕಿಸುಬಾಯಿ ದಾಸನಿಗೆ ಗೊತ್ತಿರುವುದು ಎರಡೇ; 1. ವೆಸ್ಟ್‌ ಎಂಡ್‌, 2. ಬಿಜೆಪಿ ಬಿ ಟೀಂ” ಎಂದು ಕಿಡಿಕಾರಿದ್ದಾರೆ.

“ಡೋಂಗೀ ಸಮಾಜವಾದಿ, ಪುಲ್ ಟೈಂ ಮೀರುಸಾದಿಕವಾದಿಗೆ ವೆಸ್ಟ್ ಎಂಡ್ ಸೋಂಕು ಮತ್ತೆ ತಗುಲಿದೆ. I.N.D.I.A. ಕೂಟದ ಸಭೆಯನ್ನು ಇದೇ ವೆಸ್ಟ್ ಎಂಡ್ ಬದಲಿಗೆ, ತಮ್ಮ ಸುತ್ತ ಕೆನೆಪದರ, ಒಳಪದರ, ತೆಳುಪದರದಂತೆ ತಲೆ ಎತ್ತಿರುವ ʼಪರ್ಸಂಟೇಜ್ ಪಟಾಲಂʼ ಏಳುಸುತ್ತಿನ ಕೋಟೆಯ ವಠಾರದಲ್ಲಿಯೇ ನಡೆಸಬೇಕಿತ್ತು. ಏಕೆ ನಡೆಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

“ಆಧುನಿಕ ಭಾರತದ ಈಸ್ಟ್‌ ಇಂಡಿಯಾ ಕಂಪನಿ ಕಾಂಗ್ರೆಸ್‌ಗೆ ಕರ್ನಾಟಕ ಪೊಗದಸ್ತು ಹುಲ್ಲುಗಾವಲು. ಸಿದ್ದಪುರುಷ @ಶೋಕಿಪುರುಷನೇ ಈ ಹುಲ್ಲುಗಾವಲಿನ ಮೇಟಿ. ವಿದ್ಯುತ್ ಕ್ಷಾಮ ಮತ್ತು ಬರದಲ್ಲಿ ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ! ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್‌ ಮ್ಯಾಚ್‌ ನೋಡುತ್ತಿದ್ದ!!!” ಎಂದು ಕಟುವಾಗಿ ಟೀಕಿಸಿದ್ದಾರೆ.

“5 ತಿಂಗಳಿಂದ ವಿದ್ಯುತ್ ಉತ್ಪಾದನೆ ಅಲಕ್ಷಿಸಿದ್ದೇಕೆ? ಹಾಹಾಕಾರ ಎದ್ದ ಮೇಲೆ ಅದು ಮಾಡಿದ್ದೇವೆ, ಇದು ಮಾಡಿದ್ದೇವೆ ಎಂದರೆ ಲೋಡ್ ಶೆಡ್ಡಿಂಗ್ ಏಕೆ ಬಂತು? 2013-2018ರಲ್ಲಿ 12,000 ಮೆ.ವ್ಯಾ. ಉತ್ಪಾದಿಸಿದ್ದೇವೆ ಎಂದು ನೀವೇ ಹೇಳಿದ್ದೀರಿ, ಸರಿ. ಈಗ ಮಳೆ ಕಡಿಮೆಯಾಗಿ ಜಲವಿದ್ಯುತ್‌ ಉತ್ಪಾದನೆ ಕುಸಿದಿದೆ, ನನಗೂ ಗೊತ್ತಿದೆ.

ಇದನ್ನೂ ಓದಿ: ಜೆಡಿ(ಎಸ್)ನ ಕೇರಳ ಘಟಕವು ಎಲ್‌ಡಿಎಫ್‌ನ ಅವಿಭಾಜ್ಯ ಅಂಗವಾಗಿ ಮುಂದುವರಿಯಲಿದೆ: ಹೆಚ್.ಡಿ.ಕುಮಾರಸ್ವಾಮಿ

ಅದರಲ್ಲಿ 3,000 ಮೆ.ವ್ಯಾ. ಇಲ್ಲ ಎಂದರೂ ಸಾರ್ವಜನಿಕ & ಖಾಸಗಿ ವಲಯ ಸೇರಿ ಒಟ್ಟು 29,000 ಮೆ.ವ್ಯಾ. ವಿದ್ಯುತ್‌ ಉತ್ಪಾದನೆ ಆಗಲೇಬೇಕಿತ್ತು. ಆಗಿಲ್ಲವೇಕೆ? ಏಕಾಎಕಿ ಉತ್ಪಾದನೆ ನಿಲ್ಲಿಸಿದ್ದೇಕೆ? ಜಲವಿದ್ಯುತ್‌ ಕೈಕೊಡುತ್ತದೆ ಎಂದು ಗೊತ್ತಿದ್ದರೂ ಕಲ್ಲಿದ್ದಲ ಸಂಗ್ರಹ ಇಟ್ಟುಕೊಳ್ಳಲಿಲ್ಲವಲ್ಲ, ಏಕೆ?

ಜಲ ವಿದ್ಯುತ್‌ ಹೊರತುಪಡಿಸಿ ಇತರೆ ಮೂಲಗಳ ವಿದ್ಯುತ್‌ ಉತ್ಪಾದನೆಗೂ ಖೋತಾ ಬೀಳಲಿಕ್ಕೆ ಪ್ರಕೃತಿ ಕಾರಣವೋ? ಅಥವಾ ನಿಮ್ಮ ʼಕೈ ಚಳಕʼವೇ ಕಾರಣವೋ? ಸತ್ಯ ಹೇಳಿದರೆ ನನ್ನ ಕಡೆಗೇ ಬೊಟ್ಟು ಮಾಡುತ್ತೀರಿ, ನಿಮ್ಮ ಸಚಿವರನ್ನು ….. ….. ಗಳಂತೆ ನನ್ನ ಮೇಲೆ ಛೂ ಬಿಡುತ್ತೀರಿ. ಎಷ್ಟು ದಿನ ನೆಪಗಳ ನಾಜೂಕತನ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮತ್ತೆ ಮತ್ತೆ ನಾನು ಹೇಳುತ್ತೇನೆ, ವಿದ್ಯುತ್ ಕೃತಕ ಅಭಾವ ಸೃಷ್ಟಿ ನಿಮ್ಮದೇ ಷಡ್ಯಂತ್ರ. ಅದು ಉಲ್ಬಣಿಸಿದಷ್ಟೂ ನಿಮಗೆ ಕಲೆಕ್ಷನ್‌ ಹೆಚ್ಚು. ಖಾಸಗಿ ಕಂಪನಿಗಳಿಂದ ಖರೀದಿಸಿ ಕೈ ತುಂಬಾ ಕಮೀಷನ್ ಎತ್ತಲು ಹೊರಟಿದ್ದೀರಿ. ಇಲ್ಲ ಎಂದಾದರೆ ವಿದ್ಯುತ್‌ ಕ್ಷಾಮದ ವಾಸ್ತವತೆ ಬಗ್ಗೆ ‘ಶ್ವೇತಪತ್ರ’ ಹೊರಡಿಸಿ. ಈ ಬಗ್ಗೆ ನಿಮ್ಮ ಮೌನ ಏಕೆ?” ಎಂದು ಆರೋಪಿಸಿದ್ದಾರೆ.

“ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ ನಂತರ ಇಂ’ಧನ’ ಇಲಾಖೆಯಲ್ಲೂ ನೀವು ನಗದೀಕರಣಕ್ಕೆ ನಾಂದಿ ಹಾಡಿದ್ದೀರಿ. ಖರೀದಿ ಖುಷಿಯಲ್ಲಿ ಪರ್ಸಂಟೇಜ್ ಪಟಾಲಂ ಸಂಭ್ರಮಿಸುತ್ತಿದೆ” ಎಂದು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.  

ರಾಜಕೀಯ

ಬೆಂಗಳೂರು: ತಮ್ಮ ಪಕ್ಷದ ಕೇರಳ ಘಟಕಕ್ಕೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರ್ಕಾರದ ಭಾಗವಾಗಿ ಉಳಿಯಲು ಅವಕಾಶ ನೀಡಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜನತಾ ದಳ (ಜಾತ್ಯತೀತ) ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಶ್ಲಾಘಿಸಿದ್ದಾರೆ.

ಭಾರತೀಯ ಜನತಾ ಪಕ್ಷದೊಂದಿಗೆ ಜೆಡಿಎಸ್ ಮೈತ್ರಿಯನ್ನು ಪಿಣರಾಯಿ ವಿಜಯನ್ ಬೆಂಬಲಿಸಿದ್ದಾರೆ ಎಂಬ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರ ಹೇಳಿಕೆಯನ್ನು ವಿಜಯನ್ ನಿರಾಕರಿಸಿದ ಒಂದು ದಿನದ ನಂತರ ಇದು ನಡೆದಿದೆ.

ಜೆಡಿ(ಎಸ್)ನ ಕೇರಳ ಘಟಕವು ಎಲ್‌ಡಿಎಫ್‌ನ ಅವಿಭಾಜ್ಯ ಅಂಗವಾಗಿ ಮುಂದುವರಿದಿದೆ ಎಂದು ಕುಮಾರಸ್ವಾಮಿ ಹೇಳಿದರು. “ಕೇರಳದ ಪರಿಸ್ಥಿತಿ ಕರ್ನಾಟಕಕ್ಕಿಂತ ಭಿನ್ನವಾಗಿದೆ. ನಮ್ಮಲ್ಲಿರುವ ಸಮಸ್ಯೆ ನಮ್ಮ ಪಕ್ಷಕ್ಕೆ ಸೀಮಿತವಾಗಿದೆ. ಇದರ ಬಗ್ಗೆ ನಾವು ಕೇರಳ ಮುಖ್ಯಮಂತ್ರಿಯೊಂದಿಗೆ ಚರ್ಚಿಸಲು ಬಯಸುವುದಿಲ್ಲ.” ಎಂದರು.

ಎಲ್‌ಡಿಎಫ್‌ನಲ್ಲಿ ಜೆಡಿಎಸ್‌ನ ನಿರಂತರ ಭಾಗವಹಿಸುವಿಕೆಗಾಗಿ ವಿಜಯನ್‌ಗೆ ಕೃತಜ್ಞತೆ ಸಲ್ಲಿಸಿದ ಕುಮಾರಸ್ವಾಮಿ, ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯದಲ್ಲಿ ಭಾಗವಹಿಸಿದ್ದಕ್ಕಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕ್ಯಾಬಿನೆಟ್ ಮಂತ್ರಿಗಳನ್ನು ಟೀಕಿಸಿದರು.

ಪಾಕಿಸ್ತಾನವನ್ನು ಬೆಂಬಲಿಸಲು ರಾಜ್ಯ ಸಚಿವ ಸಂಪುಟವು ಪಂದ್ಯಕ್ಕೆ ಹಾಜರಾಗಿ ಅವರ ಆದ್ಯತೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆಯೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. “ಇದು ಭಾರತ ಮತ್ತು ಪಾಕಿಸ್ತಾನದ ಪಂದ್ಯವಾಗಿದ್ದರೆ, ಅದು ಉತ್ತಮವಾಗಿತ್ತು. ಆದರೆ ಪಂದ್ಯ ನಡೆದಿದ್ದು ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವೆ. ಅವರು ಪಾಕಿಸ್ತಾನಕ್ಕೆ ಅಥವಾ ಆಸ್ಟ್ರೇಲಿಯಾಕ್ಕೆ ಬೆಂಬಲ ನೀಡಿದ್ದಾರೆಯೇ? ರಾಜ್ಯ ಸಂಕಷ್ಟದಲ್ಲಿದೆ, ಸರ್ಕಾರ ಕ್ರಿಕೆಟ್ ಪಂದ್ಯವನ್ನು ನೋಡುತ್ತಿದೆ” ಎಂದು ಕುಮಾರಸ್ವಾಮಿ ಹೇಳಿದರು.

“ಅವರು ಭರವಸೆ ನೀಡಿದ್ದನ್ನು ಮಾಡಿದ್ದೇವೆ ಎಂದು ಹೇಳುತ್ತಾರೆ, ಆದರೆ ರೈತರು ಸಂಕಷ್ಟದಲ್ಲಿದ್ದಾರೆ. ಸರಕಾರ ಕೇಂದ್ರ ಸರಕಾರದಿಂದ ಹಣ ಕೇಳುತ್ತಿದೆ. ಕೇಂದ್ರ ಸರ್ಕಾರಕ್ಕೆ ಸರ್ಕಾರ ಪತ್ರ ಬರೆದಿದೆ. ಈಗ ಸರ್ಕಾರ ಕೇಂದ್ರದ ಮೊರೆ ಹೋಗಬೇಕು,’’ ಎಂದು ಹೇಳಿದ ಅವರು, ರೂ.4,860 ಕೋಟಿ ಬೆಳೆ ನಷ್ಟ ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿಗಳ ಹೇಳಿಕೆಯನ್ನು ಉಲ್ಲೇಖಿಸಿದರು. ಇನ್ನು ಕೆಲವು ಜಿಲ್ಲೆಗಳಲ್ಲಿ ರಾಜ್ಯದ ರೈತರು ನೀರಿನ ಕೊರತೆ ಎದುರಿಸುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡರು ಆರೋಪಿಸಿದ್ದಾರೆ.

ಈ ವಾರದ ಆರಂಭದಲ್ಲಿ ಸಿದ್ದರಾಮಯ್ಯ ಅವರು ಬರಗಾಲದಿಂದ ರಾಜ್ಯದ ರೈತರು ರೂ.30,000 ಕೋಟಿ ನಷ್ಟ ಅನುಭವಿಸಿದ್ದಾರೆ ಎಂದು ಹೇಳಿದ್ದರು. 42 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆ ನಷ್ಟವಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯ ನಿಯಮಗಳ ಪ್ರಕಾರ, ನಾವು ಕೇಂದ್ರ ಸರ್ಕಾರದಿಂದ ರೂ.4,860 ಕೋಟಿ ಕೇಳಿದ್ದೇವೆ ಮತ್ತು ಕೇಂದ್ರ ತಂಡವು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜಕೀಯ

ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನುಕೈ ಹಿಡಿದಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ?

ಕೈ ಹಿಡಿದವರ ತಲೆ ಕಡಿಯುವ, ಹೆಗಲು ಕೊಟ್ಟವರ ಬೆನ್ನಿಗೆ ಚೂರಿ ಹಾಕುವ, ನಂಬಿದವರಿಗೆ ನಾಮ ಬಳಿಯುವ ಕುಮಾರಸ್ವಾಮಿ ರಾಮಾಯಣದ ಮಂಥರೆ, ಮಹಾಭಾರತದ ಶಕುನಿಯೇ ಸರಿ! ಕ್ಷಣಕ್ಕೊಂದು ಬಣ್ಣ, ದಿನಕ್ಕೊಂದು ವೇಷ ತೊಡುವ ನಿಮ್ಮ ಬಣ್ಣದೋಕುಳಿಯಾಟಕ್ಕೆ ಗೋಸುಂಬೆಯೇ ಲಾಗ ಹೊಡೆದಿದೆ! ಎಂದು ಕಾಂಗ್ರೆಸ್ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕಿಡಿಕಾರಿದೆ.

ಹಿಂದಿನ ನಿಮ್ಮ ಎಲ್ಲ ಅಕ್ರಮ, ಅನಾಚಾರ, ಅವ್ಯವಹಾರಗಳು ಹೊರಬರುತ್ತವೆ ಎಂದು ಹೆದರಿ ಬಿಜೆಪಿ ಸೆರಗಿನೊಳಗೆ ಸೇರಿಕೊಂಡಿರುವ ನಿಮ್ಮ ಜಾತ್ಯತೀತತೆ ನಾಟ್ಯಕ್ಕೆ ಬೆರಗಾಗಿ ತೆನೆ ಹೊತ್ತ ಮಹಿಳೆಯೇ “ಕೋಮು-ಕುಂಡ”ದಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕುಮಾರಸ್ವಾಮಿಯವರೇ, ಮೊದಲ ಬಾರಿ ನಿಮ್ಮನ್ನು ಸಿಎಂ ಮಾಡಿದ ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸದೆ ವಚನ ಭ್ರಷ್ಟರಾದಿರಿ, ದ್ರೋಹ ಮಾಡಿದಿರಿ. ಕಾಂಗ್ರೆಸ್ ನಿಮ್ಮನ್ನು ಸಿಎಂ ಮಾಡಿದಾಗ ಯಡಿಯೂರಪ್ಪ ಅಸೆಂಬ್ಲಿಯಲ್ಲಿ ಹೇಳಿದ್ದರು. “ಶಿವಕುಮಾರ್, ಈ ಅಪ್ಪ ಮಕ್ಕಳನ್ನು ನಂಬಬೇಡಿ, ಬಳಸಿ ಬಿಸಾಡುತ್ತಾರೆ. ಹಾವು ಇವರ ಲಾಂಚನ” ಎಂದು. ಆದರೆ ಸಿದ್ದಾಂತಕ್ಕಾಗಿ ಕಾಂಗ್ರೆಸ್ ನಿಮ್ಮ ಜತೆ ನಿಂತಿತ್ತು.

ಕಾಂಗ್ರೆಸ್ ದಯಾಭಿಕ್ಷೆಯಿಂದ ಎರಡನೇ ಬಾರಿಗೆ ಸಿಎಂ ಆದ ನಿಮಗೆ ಕಿಂಚಿತ್ತಾದರೂ ನಿಯತ್ತು ಬೇಡವೇ? ಓಹ್.. ಕ್ಷಮಿಸಿ, ಆತ್ಮಸಾಕ್ಷಿ ಮಾರಿಕೊಂಡೇ ರಾಜಕೀಯ ಬಯಲಾಟ ಆಡುವ ನಿಮ್ಮಂತವರಿಂದ ನೀತಿ, ನಿಯತ್ತು, ನೈತಿಕತೆ ನಿರೀಕ್ಷೆ ಮಾಡುವುದೇ ಮಹಾಪಾಪ! ಎಂದು ಹೇಳಿದೆ.

ಕುಮಾರಸ್ವಾಮಿಯವರೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಅನ್ಯ ರಾಜ್ಯದ ಪೇಶ್ವೆ ಎಂದು ನಿಂದಿಸಿದಿರಿ. 2.50 ಕೋಟಿಯಂತೆ ಸರಕಾರಿ ಹುದ್ದೆ ಮಾರಿಕೊಂಡ ಭ್ರಷ್ಟ ಎಂದಿರಿ. ಸಿ ಟಿ ರವಿಯನ್ನು ಲೂಟಿ ರವಿ ಎಂದು ನಾಮಕರಣ ಮಾಡಿದವರೂ ನೀವೇ. ಇವತ್ತು ಅವರದ್ದೇ ಅಂಗಿ ಚುಂಗು ಹಿಡಿದು ನಿಂತಿದ್ದೀರಲ್ಲಾ… ನಿಮಗೇನಾದರೂ ಆತ್ಮಗೌರವ ಇದೆಯೇ?

ಇಡೀ ರಾಜ್ಯದ ಜನಕ್ಕೆ ಅರ್ಥವಾಗಿದೆ. ಅಧಿಕಾರದ ಕನಸು ನುಚ್ಚುನೂರಾದ ನಂತರ ನೀವೆಷ್ಟು ಹತಾಶರಾಗಿದ್ದೀರಿ, ಮತಿಭ್ರಂಶರಾಗಿದ್ದೀರಿ ಎಂದು ನೀವಾಡುವ ಒಂದೊಂದು ನುಡಿಯಲ್ಲೂ ಅದರದೇ ಪ್ರತಿಫಲನ. ಪಾಪ, ನಿಮ್ಮ ಸ್ಥಿತಿ ಕಂಡು ಅಯ್ಯೋ ಅನ್ನಿಸುತ್ತದೆ. ಇದೇ ಸ್ಥಿತಿ ಮುಂದುವರೆದರೆ ಬೀದಿಯಲ್ಲಿ ಅಂಗಿ ಹರಿದುಕೊಂಡು ಓಡಾಡುವ ದಿನ ದೂರವಿಲ್ಲ ಎಂಬುದನ್ನು ನೆನೆದು ಭಯವೂ ಆಗುತ್ತದೆ.

ಅದು ಒತ್ತಟ್ಟಿಗಿರಲಿ, ನಿಮ್ಮನ್ನು, ನಿಮ್ಮ ಕುಟುಂಬದವರನ್ನು ದಶಕಗಳ ಕಾಲ ಪೊರೆದ ಒಕ್ಕಲಿಗರು ನನಗೆ ಮತ ಹಾಕಿಲ್ಲ ಎನ್ನುವ ಮೂಲಕ ಅವರಿಗೆ ದ್ರೋಹ, ಅವಮಾನ ಮಾಡಿರುವ ನಿಮ್ಮನ್ನು ಆ ಭೈರವೇಶ್ವರನೂ ಕ್ಷಮಿಸುವುದಿಲ್ಲ. ಒಕ್ಕಲಿಗರಿಂದ ನೀವು ಬೆಳೆದಿರೇ ಹೊರತು ನಿಮ್ಮಿಂದ ಸಮುದಾಯವೇನೂ ಉದ್ಧಾರ ಆಗಿಲ್ಲ. ಎಷ್ಟೇ ಆಗಲಿ, ಒಕ್ಕಲಿಗರ ಆತ್ಮಗೌರವದ ಸಂಕೇತವಾದ ಆದಿ ಚುಂಚನಗಿರಿ ಮಠದ ಶ್ರೀ.ಬಾಲಗಂಗಾಧರನಾಥ ಸ್ವಾಮೀಜಿಗಳಿಗೇ ಸೆಡ್ಡು ಹೊಡೆದು ಮತ್ತೊಂದು ಮಠ ಕಟ್ಟಿದ ಮಹಾನುಭಾವರಲ್ಲವೇ ನೀವು..?!

ಇನ್ನೊಂದೆಡೆ ಅಲ್ಪಸಂಖ್ಯಾತರ ಅಗತ್ಯವಿಲ್ಲ, ಅವರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಅನ್ನುತ್ತೀರಿ. ಹಾಗಾದರೆ ನಿಮಗೆ ನೀವೇ ಮತ ಹಾಕಿಕೊಂಡು ಗೆದ್ದಿರಾ ಕುಮಾರಣ್ಣ..?! ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕುಮಾರಸ್ವಾಮಿಯವರೇ, ಹಿಂದೆ ನೀವು ಮಕ್ಮಲ್ ಟೋಪಿ ಹಾಕಿದ್ದೇನು? ಬಿರಿಯಾನಿ ತಿಂದಿದ್ದೇನು? ಮಸೀದಿ ಹೊಕ್ಕಿದ್ದೇನು? ಆಹಾ..! ಅದೇನು ನಾಟಕ, ಅದೇನು ಪಂಚರಂಗಿ ಆಟ? ಈಗ, ಅಲ್ಪಸಂಖ್ಯಾತರನ್ನು ನಂಬಿಕೊಂಡು ರಾಜಕಾರಣ ಮಾಡಿಲ್ಲ ಎನ್ನುವ ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?!

ಐಟಿ, ಇಡಿ ಕಿಂದರ ಜೋಗಿ ಅಮಿತ್ ಶಾ ಕಾಲಿಗೆ ಬಿದ್ದು ರಾಜಕೀಯ ವಿರೋಧಿಗಳಿಗೆ ಗುಂಡಿ ತೋಡುವುದರಲ್ಲಿ ಮಗ್ನರಾಗಿರುವ ಕುಮಾರಣ್ಣ ಒಂದು ವಿಷಯ ತಿಳಿದುಕೊಳ್ಳಿ. ನೀವೇ ನಿಮ್ಮ ಪಾಲಿನ ಭಸ್ಮಾಸುರ! ಸ್ವಲ್ಪ ಕಾಲ ತಡೆದು ನೋಡಿ, ನಿಮ್ಮ ಗುಂಡಿಯಲ್ಲಿ ಬಿದ್ದು ನೀವೇ ಹೆಂಗೆ ಒದ್ದಾಡುತ್ತೀರಿ ಅಂತಾ!

ಕೈಲಾಗದವರು ಮೈ ಪರಚಿಕೊಂಡರೆ ಆಗೋದು ಗಾಯ, ರಣ ಗಾಯ! ಕೈ ನಾಯಕರ ಮೇಲೆ ಬಿದ್ದರೇ ಕೈಲಾಸ ಪ್ರಾಪ್ತಿ ಆಗದು ಕುಮಾರಣ್ಣ. ನಿಮ್ಮ ಮಾತೇ ನಿಮ್ಮ ಪಾಲಿನ ಶತ್ರು! ಮಾತಾಡಿ, ಮಾತಾಡಿ ಮಂಡ್ಯ ಚುನಾವಣೆಯಲ್ಲಿ ನಿಮ್ಮ ಮಗನನ್ನು ಬಲಿ ಕೊಟ್ಟಿರಿ. ವಿಧಾನಸಭೆ ಚುನಾವಣೆಯಲ್ಲಿ ನಿಮ್ಮ ಪಕ್ಷವನ್ನೇ ಅಡ್ಡಡ್ಡ ಉದ್ದುದ್ದ ಮಲಗಿಸಿದಿರಿ. ಈಗ ನಿಮ್ಮನ್ನು ನೀವೇ ಹಾಳು ಮಾಡಿಕೊಳ್ಳುತಿದ್ದೀರಿ..!

ನಿಯತ್ತು ಮತ್ತು ಕುಮಾರಸ್ವಾಮಿ ಎರಡೂ ವಿರುದ್ಧ ಪದಗಳು ಎಂಬುದು ಜಗಜ್ಜಾಹಿರು! ನಿಮ್ಮ ಕುಟುಂಬಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಸಿದ್ಧಾಂತಕ್ಕೂ ನೀವು ನಿಯತ್ತಾಗಿಲ್ಲ. ನಿಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರಿಗೂ ನಿಯತ್ತಾಗಿಲ್ಲ. ನಿಮ್ಮನ್ನು “ಕೈ ಹಿಡಿದ” ಜನರಿಗೂ ನಿಯತ್ತಾಗಿಲ್ಲ. ನಿಮ್ಮನ್ನು ನಂಬಿದ ಸಮುದಾಯಕ್ಕೂ ನಿಯತ್ತಾಗಿಲ್ಲ. ಕುಲದ ಮಠಕ್ಕೂ ಕೊಡಲಿ ಕಾವಾದಿರಿ. ಕೊನೇ ಪಕ್ಷ ನಿಮ್ಮ ಆತ್ಮಸಾಕ್ಷಿಗಾದರೂ ನಿಯತ್ತಾಗಿದ್ದೀರಾ? ಅದೂ ಇಲ್ಲ. ಹತಾಶೆ ಆತ್ಮಸಾಕ್ಷಿಯನ್ನೇ ಕೊಂದಿದೆ!

ಹೀಗಾಗಿ ನಿಮ್ಮಂತವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುವ ಅಗತ್ಯವಿಲ್ಲ. ನೀವೀಗ ನಿರುದ್ಯೋಗಿ, ಪರರ ನಿಂದನೆಗೆ ಸಾಕಷ್ಟು ಸಮಯವಿದೆ. ಮಾತಾಡುತ್ತಾ ಹೋಗಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ಕೆಲಸವಿದೆ, ಜನ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಮರೆತು ಹಾದಿ ಬೀದಿಯಲ್ಲಿ ಹೋಗುವವರಿಗೆಲ್ಲ ಉತ್ತರ ಕೊಡುತ್ತಾ ಹೋದರೆ ನಿಮಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ನೀವು ಮಾತಾಡಿ, ಮಾತಾಡುತ್ತಾ ಹೋಗಿ… ಅಲ್ ದ ಬೆಸ್ಟ್! ಎಂದು ಕರ್ನಾಟಕ ಕಾಂಗ್ರೆಸ್ ವ್ಯಂಗ್ಯವಾಡಿದೆ.