ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Kerala Governor Archives » Dynamic Leader
October 23, 2024
Home Posts tagged Kerala Governor
ದೇಶ

ತಿರುವನಂತಪುರಂ: ಕೇರಳದಲ್ಲಿ ಮಾರ್ಕ್ಸಿಸ್ಟ್ ಕಮ್ಯುನಿಸ್ಟ್ ಮತ್ತು  ಇಂಡಿಯಾ ಕಮ್ಯುನಿಸ್ಟ್ ನೇತೃತ್ವದ ಎಡಪಂಥೀಯ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ. ಪಿಣರಾಯಿ ವಿಜಯನ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ.

ಏತನ್ಮಧ್ಯೆ, ಕೇರಳ ಸರ್ಕಾರ ಮತ್ತು ರಾಜ್ಯ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ವಿವಿಧ ವಿಷಯಗಳಲ್ಲಿ ದೀರ್ಘಕಾಲದಿಂದ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಕೇರಳ ವಿಧಾನಸಭೆಯ ಇತ್ತೀಚಿನ ಅಧಿವೇಶನದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ರಾಜ್ಯ ಸರ್ಕಾರದ ನೀತಿಗಳನ್ನು ಓದುವ ಬದಲು ಭಾಷಣದ ಕೊನೆಯ ಪ್ಯಾರಾವನ್ನು ಮಾತ್ರ ಓದಿ ವಿಧಾನಸಭೆಯಿಂದ ಹೊರನಡೆದರು. ಈ ಘಟನೆ ರಾಜ್ಯ ರಾಜಕಾರಣದಲ್ಲಿ ಭಾರೀ ಆಘಾತವನ್ನುಂಟು ಮಾಡಿತ್ತು.

ಈ ವೇಳೆ, ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕರ ಪ್ರದೇಶದಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಇಂದು ಮಧ್ಯಾಹ್ನ ಕಾರಿನಲ್ಲಿ ತೆರಳುತ್ತಿದ್ದರು. ಆದರೆ, ಕೊಟ್ಟಾರಕ್ಕರದಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸುವುದನ್ನು ವಿರೋಧಿಸಿ ಆಡಳಿತಾರೂಢ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್‌ ಪಕ್ಷದ ವಿದ್ಯಾರ್ಥಿ ಘಟಕವಾದ ಭಾರತೀಯ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಐಎಫ್‌) ಪ್ರತಿಭಟನೆ ನಡೆಸಿತು.

ನಿಲಮ್ಮಲ್ ಪ್ರದೇಶದಲ್ಲಿ ರಾಜ್ಯಪಾಲರ ಕಾರು ಸಾಗುತ್ತಿದ್ದಂತೆ ರಸ್ತೆಯ ಇಕ್ಕೆಲಗಳಲ್ಲಿ ಜಮಾಯಿಸಿದ ಎಸ್ಐಎಫ್ ಕಾರ್ಯಕರ್ತರು ರಾಜ್ಯಪಾಲರ ಆಗಮನದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಕೆರಳಿದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತಮ್ಮ ಕಾರಿನಿಂದ ಇಳಿದು ರಸ್ತೆಯಲ್ಲಿ ನಡೆದರು.

ಜನನಿಬಿಡ ಎಂಸಿ ರಸ್ತೆಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕಾರಿನಿಂದ ಇಳಿದು ಪ್ರತಿಭಟನಾಕಾರರ ಕಡೆಗೆ ಹೋದರು. ಈ ವೇಳೆ ರಸ್ತೆ ಬದಿ ಜಮಾಯಿಸಿದ್ದ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಕೆರಳಿದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ರಸ್ತೆ ಬದಿಯ ಟೀ ಅಂಗಡಿಗೆ ತೆರಳಿ ಆಸನದಲ್ಲಿ ಕುಳಿತು ಧರಣಿ ನಡೆಸಿದರು. ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸರ ವಿರದ್ದವೂ ವಾಗ್ದಾಳಿ ನಡೆಸಿದರು.

ಅಲ್ಲದೆ, ಪ್ರತಿಭಟನೆಯಲ್ಲಿ ತೊಡಗಿದ್ದವರಿಗೆ ಪೊಲೀಸರು ರಕ್ಷಣೆ ನೀಡುತ್ತಿದ್ದಾರೆ ಎಂದು ರಾಜ್ಯಪಾಲರು ಆರೋಪಿಸಿದರು. ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿ ಸಾಕ್ಷ್ಯ ಒದಗಿಸದ ಹೊರತು ಇಲ್ಲಿಂದ ಕದಲುವುದಿಲ್ಲ ಎಂದು ಎಚ್ಚರಿಸಿದರು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿದ ರಾಜ್ಯಪಾಲರು, ಉನ್ನತ ಪೊಲೀಸ್ ಅಧಿಕಾರಿಯನ್ನು ಸಂಪರ್ಕಿಸಿ ಅಥವಾ ಪ್ರಧಾನ ಮಂತ್ರಿ ಕಚೇರಿಗೆ ಕರೆ ಮಾಡಿ ಎಂದು ಸಹಾಯಕರಿಗೆ ಸೂಚಿಸಿದರು.

ತರುವಾಯ, ರಾಜ್ಯಪಾಲರು ಧರಣಿ ಕುಳಿತ ಪ್ರದೇಶಕ್ಕೆ ದೌಡಾಯಿಸಿದ ಉನ್ನತ ಪೊಲೀಸ್ ಅಧಿಕಾರಿಗಳು, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 17 ಎಸ್ಐಎಫ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ ದಾಖಲೆಗಳನ್ನು ಅವರಿಗೆ ನೀಡಿದರು. ಇದರ ನಂತರ, ಟೀ ಅಂಗಡಿಯಲ್ಲಿ 2 ಗಂಟೆಗಳ ಕಾಲ ಧರಣಿ ಕುಳಿತ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಧರಣಿ ಮುಗಿಸಿ ಕೊಟ್ಟಾರಕ್ಕರೆಗೆ ತೆರಳಿದರು.

ಈ ಘಟನೆ ಕೇರಳದಲ್ಲಿ ಸಂಚಲನ ಮೂಡಿಸಿರುವ ಹಿನ್ನೆಲೆಯಲ್ಲಿ, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿಯೊಂದಿಗೆ ಝಡ್ ಪ್ಲಸ್ ಭದ್ರತೆ ನೀಡುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

ದೇಶ ರಾಜಕೀಯ

ತಿರುವನಂತಪುರಂ: ಕೇರಳ ವಿಧಾನಸಭೆಯಲ್ಲಿ ಅಂಗೀಕರಿಸಿದ 8 ವಿಧೇಯಕಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ವಿರುದ್ಧ ರಾಜ್ಯ ಸರ್ಕಾರ ಇಂದು (ನ.2) ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಕೇರಳ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಬಹಳ ದಿನಗಳಿಂದ ವಾಗ್ವಾದ ನಡೆಯುತ್ತಿದ್ದು, ಇದೀಗ ರಾಜ್ಯಪಾಲರ ವಿರುದ್ಧ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ, ‘ಜನರಿಂದ ಆಯ್ಕೆಯಾದ ಸರ್ಕಾರವು ಜನರ ಅನುಕೂಲಕ್ಕಾಗಿ ಜಾರಿಗೆ ತರುವ ಕಾನೂನುಗಳನ್ನು ಅನುಮೋದಿಸದೇ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿರುವ ರಾಜ್ಯಪಾಲರ ಧೋರಣೆಯು ಕಾನೂನು ಮತ್ತು ಪ್ರಜಾಪ್ರಭುತ್ವ ಸೇರಿದಂತೆ ನಮ್ಮ ಸಂವಿಧಾನದ ಮೂಲ ಉದ್ದೇಶಗಳನ್ನು ಹಾಳುಮಾಡುವುದಾಗಿದೆ’ ಎಂದು ಹೇಳಿದೆ. ಮುಂದುವರಿದು, ‘ನಿಗದಿತ ಸಮಯದಲ್ಲಿ ವಿಧೇಯಕಗಳಿಗೆ ಅನುಮೋದನೆ ನೀಡುವಂತೆ ರಾಜ್ಯಪಾಲರಿಗೆ ನಿರ್ದೇಶನ ನೀಡಬೇಕು’ ಎಂದೂ ಕೋರಲಾಗಿದೆ.

ಈ ಹಿಂದೆಯೂ ಇದೇ ರೀತಿಯಲ್ಲಿ ರಾಜ್ಯಪಾಲರು ಸರ್ಕಾರದ ಮಸೂದೆಗಳಿಗೆ ಅನುಮೋದನೆ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ, ತಮಿಳುನಾಡು ಸರ್ಕಾರ ರಾಜ್ಯಪಾಲ ಆರ್‌.ಎನ್.ರವಿ ವಿರುದ್ಧ ಮತ್ತು ಪಂಜಾಬ್ ಸರ್ಕಾರ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಈ ಹಿನ್ನಲೆಯಲ್ಲಿ, ಕೇರಳ ಸರ್ಕಾರ ಕೂಡ ರಾಜ್ಯಪಾಲರ ವಿರುದ್ಧ ಪ್ರಕರಣ ದಾಖಲಿಸಿದ್ದು ಸಂಚಲನ ಮೂಡಿಸಿದೆ.