ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Manish Sisodia Archives » Dynamic Leader
October 23, 2024
Home Posts tagged Manish Sisodia
ರಾಜಕೀಯ

ನವದೆಹಲಿ: “ಬಿಜೆಪಿಯ ಕ್ಷಣಗಣನೆ ಆರಂಭವಾಗಿದೆ. ಎಲ್ಲ ರಾಜ್ಯಗಳ ಚುನಾವಣೆಯಲ್ಲೂ ಸೋಲು ಕಾಣಲಿದೆ” ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಮುಖ್ಯ ಚುನಾವಣಾ ಆಯೋಗವು ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕವನ್ನು ಮರು ನಿಗದಿಪಡಿಸಿದೆ. ಅದರಂತೆ ಅಕ್ಟೋಬರ್ 1ರ ಬದಲಾಗಿ ಅಕ್ಟೋಬರ್ 5 ರಂದು ಅಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಆಮ್ ಆದ್ಮಿ ಪಕ್ಷವು ಹರಿಯಾಣದ ಎಲ್ಲಾ ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿದೆ.

ಈ ಹಿನ್ನೆಲೆಯಲ್ಲಿ, ಪಕ್ಷದ ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿದ್ದಾರೆ. “ಬಿಜೆಪಿಯ ಕ್ಷಣಗಣನೆ ಶುರುವಾಗಿದೆ. ಘೋಷಿಸಿದ ಎಲ್ಲಾ ಚುನಾವಣೆಗಳಲ್ಲೂ ಸೋಲುತ್ತದೆ. ಜನರು ತಮ್ಮನ್ನು ತಿರಸ್ಕರಿಸುತ್ತಿದ್ದಾರೆ ಎಂಬುದನ್ನು ಲೋಕಸಭೆ ಚುನಾವಣೆ ಫಲಿತಾಂಶದಿಂದ ಬಿಜೆಪಿಗೆ ಗೊತ್ತಾಗಿದೆ.

ಮುಂದಿನ ದಿನಗಳಲ್ಲಿ ಹರಿಯಾಣ, ಮಹಾರಾಷ್ಟ್ರ, ಜಾರ್ಖಂಡ್ ಮತ್ತು ನವದೆಹಲಿ ಚುನಾವಣೆಗಳಲ್ಲಿ ಬಿಜೆಪಿ ಸೋಲುವುದು ಖಚಿತ. ಚುನಾವಣಾ ದಿನಾಂಕಗಳನ್ನು ಬದಲಾಯಿಸುವ ಮೂಲಕ ಗೆಲ್ಲಲು ಸಾಧ್ಯವಿಲ್ಲ. ದೇಶದಾದ್ಯಂತ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಹರಿಯಾಣದಲ್ಲಿ ಪ್ರಚಾರ ನಡೆಸಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ದೇಶ

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ಒಂದೂವರೆ ವರ್ಷದ ಬಳಿಕ ಮನೀಶ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ದೆಹಲಿ ಆಮ್ ಆದ್ಮಿ ಸರ್ಕಾರದ ಹೊಸ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಆಮ್ ಆದ್ಮಿ ಪಕ್ಷದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತ್ತು. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿ 2023ರಲ್ಲಿ ಜಾರಿ ಇಲಾಖೆ ಬಂಧಿಸಿ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.

ಅವರ ವಿರುದ್ಧ ದೆಹಲಿ ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದೆ. ಅಲ್ಲಿ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ನಂತರ, ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಮೇಲ್ಮನವಿಯನ್ನು ಕೂಡ ಮೇ 21 ರಂದು ವಜಾಗೊಳಿಸಲಾಯಿತು. ಇದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಧೀಶರಾದ ಗವಾಯಿ ಮತ್ತು ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯ ಪೀಠವು ದಿನಾಂಕವನ್ನು ಸೂಚಿಸದೆ ಕಳೆದ 6 ರಂದು ಮುಂದೂಡಿದ್ದರು.

ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾಗೆ ಇಂದು (ಆಗಸ್ಟ್ 09) ಜಾಮೀನು ಮಂಜೂರಾಗಿದೆ. ರೂ.10 ಲಕ್ಷ ಪಾವತಿಸುವುದರೊಂದಿಗೆ, ಪಾಸ್‌ಪೋರ್ಟ್ ಒಪ್ಪಿಸುವಂತೆಯೂ ಆದೇಶಿಸಲಾಗಿದೆ.

ದೇಶ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಮಾಧ್ಯಮದವರನ್ನು ಭೇಟಿಯಾಗಿ ಮಾತನಾಡಿದರು:

ಕೇಂದ್ರ ಸರ್ಕಾರ ಮನೀಶ್ ಸಿಸೋಡಿಯಾ ಅವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದೆ. ಅವರನ್ನು ಬಂಧಿಸಿ ಒಂದು ವರ್ಷ ಕಳೆದಿದೆ. ಈ ಒಂದು ವರ್ಷದಲ್ಲಿ ನ್ಯಾಯಾಲಯಕ್ಕೆ ಒಂದೇ ಒಂದು ಸಾಕ್ಷ್ಯವನ್ನು ಮಂಡಿಸಲು ಸರಕಾರಕ್ಕೆ ಸಾಧ್ಯವಾಗಿಲ್ಲ. ಇದೊಂದು ಸುಳ್ಳು ಪ್ರಕರಣ.

75 ವರ್ಷಗಳ ನಂತರ ಮನೀಶ್ ಸಿಸೋಡಿಯಾ ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಉಜ್ವಲ ಭವಿಷ್ಯದ ಭರವಸೆಯನ್ನು ತಂದರು. ಅವರು ಬಡವರ ಮಕ್ಕಳಿಗೆ ಕನಸು ಕಾಣುವ ಹಕ್ಕನ್ನು ನೀಡಿದರು. ಅಂತಹ ವ್ಯಕ್ತಿಯನ್ನು ಸುಳ್ಳು ಪ್ರಕರಣದಲ್ಲಿ ಜೈಲಿಗೆ ಹಾಕಲಾಗಿದೆ.

ಅವರು ನಮಗೆ ಉದಾಹರಣೆಯಾಗಿದ್ದಾರೆ. ಅವರು ಬಿಜೆಪಿ ಸೇರಿದ್ದರೆ ಅವರ ಮೇಲಿನ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುತ್ತಿತ್ತು. ಆದರೆ ಅವರು ಸತ್ಯದ ಹಾದಿಯನ್ನು ಬಿಡಲಿಲ್ಲ ಎಂದು ಹೇಳಿದರು.

ದೇಶ ರಾಜಕೀಯ

ನವದೆಹಲಿ: ಮದ್ಯ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ. ಈ ಹಿನ್ನಲೆಯಲ್ಲಿ, ‘ಕೇಜ್ರಿವಾಲ್ ಅವರನ್ನು ಬಂಧಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಅವರನ್ನು ಬಂಧಿಸಿದರೆ ದೆಹಲಿ ಸರಕಾರ ಜೈಲಿನಿಂದಲೇ ಕಾರ್ಯನಿರ್ವಹಿಸಲಿದೆ’ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಆಡಳಿತ ನಡೆಸುತ್ತಿದೆ. ಕಳೆದ 2021-2022ರ ಹಣಕಾಸು ವರ್ಷದಲ್ಲಿ, ಮದ್ಯ ಮಾರಾಟದ ನೀತಿಯನ್ನು ತಿದ್ದುಪಡಿ ಮಾಡಲಾಯಿತು. ಇದು ಖಾಸಗಿ ಕಂಪನಿಗಳು ಹಾಗೂ ಸಗಟು ವ್ಯಾಪಾರಿಗಳಿಗೆ ಅನುಕೂಲವಾಗಿದ್ದು, ಈ ಮೂಲಕ ಹಲವು ಕೋಟಿ ರೂ.ಗಳ ವಂಚನೆ ನಡೆದಿದೆ ಎಂಬ ದೂರುಗಳು ಕೇಳಿಬಂದವು.

ಇದಕ್ಕೆ ಸಂಬಂಧಿಸಿದಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿದರು. ಇದರಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿತು. ಈ ಪ್ರಕರಣದಲ್ಲಿ, ಅಬಕಾರಿ ಇಲಾಖೆ ಉಸ್ತುವಾರಿ ವಹಿಸಿಕೊಂಡಿದ್ದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಯಿತು. ಅವರ ಜಾಮೀನು ಅರ್ಜಿಗಳನ್ನು ತಿರಸ್ಕರಿಸಲಾಗಿದೆ.

ಇತ್ತೀಚೆಗಷ್ಟೇ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು. ‘ಈ ವಿಷಯದಲ್ಲಿ ವಂಚನೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಹೀಗಾಗಿ ಜಾಮೀನು ನೀಡಲು ಸಾಧ್ಯವಿಲ್ಲ’ ಎಂದು ಆದೇಶ ಹೊರಡಿಸಿತು. ಈ ಹಿನ್ನಲೆಯಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಆಮ್ ಆದ್ಮಿ ಪಕ್ಷದ ಮುಖ್ಯ ಸಂಯೋಜಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶ್ನಾಲಯ ಸಮನ್ಸ್ ಜಾರಿಮಾಡಿದೆ.

ಇದರ ಪ್ರಕಾರ ಅರವಿಂದ್ ಕೇಜ್ರಿವಾಲ್ ಇಂದು ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಹಾಜರಾಗಲಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಅಧಿಕಾರಿಗಳು ಈಗಾಗಲೇ ವಿಚಾರಣೆ ನಡೆಸಿದ್ದಾರೆ. ಮೊದಲ ಬಾರಿಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ.

ಈ ಹಿನ್ನಲೆಯಲ್ಲಿ, ಆಮ್ ಆದ್ಮಿ ಪಕ್ಷದ ಹಿರಿಯ ನಾಯಕರು ತನಿಖೆಯ ನಂತರ ಅವರನ್ನು ಬಂಧಿಸುವ ಭೀತಿಯನ್ನು ವ್ಯಕ್ತಪಡಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಬಂಧಿಸಿದರೆ ಸರ್ಕಾರವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಇದರ ಬಗ್ಗೆ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯ ಸಚಿವ ಸೌರಭ್ ಭಾರದ್ವಾಜ್ ನಿನ್ನೆ ಹೇಳಿಕೆ ನೀಡಿದ್ದಾರೆ:

‘ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದರೆ, ಸರ್ಕಾರವನ್ನು ಯಾರು ಮುನ್ನಡೆಸುತ್ತಾರೆ ಎಂಬುದನ್ನು ಪಕ್ಷದ ಹಿರಿಯ ನಾಯಕರು ಒಟ್ಟಾಗಿ ನಿರ್ಧರಿಸುತ್ತಾರೆ. ಪಕ್ಷದ ಎಲ್ಲಾ ನಾಯಕರು ಜೈಲಿನಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಹಾಗೆ ಎಲ್ಲರನ್ನೂ ಜೈಲಿಗೆ ಹಾಕಿದರೆ ಜೈಲಿನಿಂದಲೇ ಆಡಳಿತ ನಡೆಸುತ್ತೇವೆ.

ಈ ಸರ್ಕಾರ ನೀಡುತ್ತಿರುವ ಉಚಿತ ವಿದ್ಯುತ್, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯಗಳನ್ನು ನಿಲ್ಲಿಸಬೇಕೆಂದು ಬಿಜೆಪಿ ಬಯಸುತ್ತಿದೆ. ಆದರೆ, ಅದು ಸಾಧ್ಯವಿಲ್ಲ; ಜೈಲಿನಲ್ಲಿದ್ದರೂ ಜನರ ಸೇವೆ ಮಾಡುತ್ತೇವೆ’ ಎಂದು ಅವರು ಹೇಳಿದರು. ಪಕ್ಷದ ಸಂಸದ ರಾಘವ್ ಚಂದಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ತನಿಖೆಯ ನಂತರ ಬಂಧಿಸುವ ಭೀತಿಯನ್ನು ವ್ಯಕ್ತಪಡಿಸಿದ್ದಾರೆ.

ದೇಶ ರಾಜಕೀಯ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನೂ ಬಂಧಿಸಬಹುದು ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಹೇಳಿದ್ದಾರೆ.

ಹೊಸ ಮದ್ಯ ನೀತಿಯಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬಂಧನಕ್ಕೊಳಗಾಗಿ ಸುಮಾರು 8 ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿಯನ್ನು ಹಲವು ಬಾರಿ ತಿರಸ್ಕರಿಸಲಾಗಿದೆ. ಇಂದಿನ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳೂ ಜಾಮೀನು ನೀಡಲು ನಿರಾಕರಿಸಿದ್ದಾರೆ. 338 ಕೋಟಿ ಅಕ್ರಮ ಹಣ ವಿನಿಮಯವಾಗಿರುವುದಾಗಿ ಇಡಿ ಅಧಿಕಾರಿಗಳು ಸಾಕ್ಷ್ಯ ಸಹಿತ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಇದನ್ನು ಕೋರ್ಟ್ ಒಪ್ಪಿಕೊಂಡಿದೆ.

ಇದರ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಮನೋಜ್ ತಿವಾರಿ, “ಅಕ್ರಮ ಹಣ ವರ್ಗಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಹಲವು ನಾಯಕರು ಸಂಪರ್ಕ ಹೊಂದಿದ್ದಾರೆ. ಹೀಗಾಗಿ ಪ್ರಮುಖ ಮುಖಂಡರು ಏಕೆ ಕೇಜ್ರಿವಾಲ್ ಕೂಡ ಬಂಧನವಾಗಬಹುದು. ಅಷ್ಟೊಂದು ಆಧಾರಗಳು ಇದೆ ಎಂದು ತಿಳಿಯುತ್ತೇನೆ” ಎಂದು ಹೇಳಿದ್ದಾರೆ.

ದೇಶ

ಡಿ.ಸಿ.ಪ್ರಕಾಶ್

ದೆಹಲಿ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ, ತಾನು ವಿರೋಧ ಪಕ್ಷವಾಗಿರುವ ರಾಜ್ಯಗಳಲ್ಲಿ ಹೇಗಾದರೂ ಮಾಡಿ, ಸರ್ಕಾರವನ್ನು ಉರುಳಿಸಿ, ಅಲ್ಲಿ ಅಧಿಕಾರವನ್ನು ಹಿಡಿಯಲು ನಾನಾ ರೀತಿಯ ಷಡ್ಯಂತ್ರಗಳನ್ನು ರೂಪಿಸುತ್ತಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಶಿವಸೇನೆ ಪಕ್ಷದ ಶಾಸಕರನ್ನು ಏಕನಾಥ್ ಶಿಂಧೆ ಮೂಲಕ ಖರೀದಿಸಿ ಸರ್ಕಾರವನ್ನು ಉರುಳಿಸಿತು.

ಹೀಗೆ ತಾನು ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ ಹೇಗಾದರು ಮಾಡಿ, ಅಡ್ಡದಾರಿಯಲ್ಲಿ ಅಧಿಕಾರವನ್ನು ಹಿಡಿಯಬೇಕು ಎಂದು ನಾನಾ ಬಗೆಯ ಕಸರತ್ತುಗಳನ್ನು ಮಾಡುತ್ತಿವೆ.  ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷವನ್ನು ಮಹಾರಾಷ್ಟ್ರ ಮಾದರಿಯಲ್ಲಿ ಕೆಡವಿ, ಅಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲು ನಾನಾ ಬಗೆಯ ತಂತ್ರಗಾರಿಕೆಗಳನ್ನು ಮಾಡುತ್ತಿವೆ.

ಅದರ ಭಾಗವಾಗಿ ದೆಹಲಿಯ ಉಪ ಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ ಅವರಿಗೂ ಆಮಿಷಗಳನ್ನು ತೋರಿಸಲಾಯಿತು. ಆದರೆ, ಅವರು ಇದು ಯಾವುದಕ್ಕೂ ಬಗ್ಗದ ಕಾರಣ, ಅವರ ಮೇಲೆ ಭ್ರಷ್ಟಾಚಾರ ಹಗರಣ ಹೂಡಿ, ಸಿಬಿಐ ಬಂಧಿಸುವಂತೆ ಮಾಡಿತು. ಇವರ ಬಂಧನವನ್ನು ಎಲ್ಲಾ ವಿರೋಧ ಪಕ್ಷಗಳು ತೀವ್ರವಾಗಿ ಖಂಡಿಸಿತು.

ಇದನ್ನೂ ಓದಿ: ಮನೀಶ್ ಸಿಸೋಡಿಯಾವನ್ನು ಅತ್ಯಂತ ಅಪಾಯಕಾರಿ ಕ್ರಿಮಿನಲ್‌ಗಳೊಂದಿಗೆ ಜೈಲಿನಲ್ಲಿ ಇರಿಸಲಾಗಿದೆ.

ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಕೊನೆಗೊಂಡಿತು. ಇದರಿಂದ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಸಿಬಿಐ, ವಿಶೇಷ ನ್ಯಾಯಾಲಯಕ್ಕೆ ಕರೆತಂದಿತು. ಆಗ ಮನೀಶ್ ಸಿಸೋಡಿಯಾ ಅವರ ಮುಂದೆ ಮುಗಿಬಿದ್ದ ಪತ್ರಕರ್ತರ ಜತೆ ಮಾತನಾಡಲು ಯತ್ನಿಸಿದಾಗ, ಭದ್ರತಾ ಕಾರ್ಯಕ್ಕೆ ಬಂದಿದ್ದ ಪೊಲೀಸ್ ಅಧಿಕಾರಿಯೊಬ್ಬರು, ಅವರ ಕುತ್ತಿಗೆಯನ್ನು ಹಿಡಿದು ನ್ಯಾಯಾಲಯದ ಕೋಣೆಗೆ ಎಳೆದೊಯ್ದರು.

ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ; ಡಿಎಂಕೆ  ಖಂಡನೆ!

ಪೊಲೀಸರ ಈ ಕ್ರಮವನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ. ಮನೀಶ್ ಸಿಸೋಡಿಯಾ ಅವರನ್ನು ಹೀಗೆ ನಡೆಸಿಕೊಳ್ಳುವಂತೆ ಪೊಲೀಸರಿಗೆ ಆದೇಶಿಸಿದವರು ಯಾರು? ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಈ ಹಿನ್ನಲೆಯಲ್ಲಿ, ದೆಹಲಿ ವಿಶೇಷ ನ್ಯಾಯಾಲಯವು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಜೂನ್ 1 ರವರೆಗೆ ವಿಸ್ತರಿಸಿದೆ.

ದೇಶ

ದೆಹಲಿಯಲ್ಲಿ ಮದ್ಯಪಾನ ನೀತಿ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಮನೀಶ್ ಸಿಸೋಡಿಯಾ ಅವರನ್ನು ಅತ್ಯಂತ ಅಪಾಯಕಾರಿ ಕ್ರಿಮಿನಲ್‌ಗಳೊಂದಿಗೆ ಜೈಲಿನಲ್ಲಿ ಇರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಆಮ್ ಆದ್ಮಿ ಪಕ್ಷದ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಘೋರ ಅಪರಾಧಗಳನ್ನು ಮಾಡಿದ ಕ್ರಿಮಿನಲ್‌ಗಳೊಂದಿಗೆ ತಿಹಾರ್ ಜೈಲಿನಲ್ಲಿ ಇರಿಸಲ್ಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿ ಮದ್ಯ ನೀತಿಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ನ್ಯಾಯಾಲಯದ ಅನುಮತಿಯೊಂದಿಗೆ ಅವರನ್ನು ಏಳು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಪಡೆದುಕೊಂಡಿತ್ತು. ಮಾರ್ಚ್ 6 ರಂದು ಸಿಬಿಐ ಕಸ್ಟಡಿ ಅಂತ್ಯಗೊಂಡಿದ್ದರಿಂದ ಸಿಸೋಡಿಯಾ ಅವರನ್ನು ದೆಹಲಿಯ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ವಿಶೇಷ ನ್ಯಾಯಾಧೀಶರು ಸಿಸೋಡಿಯಾ ಅವರನ್ನು ಮಾರ್ಚ್ 20 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಅಲ್ಲದೆ, ಸಿಸೋಡಿಯಾ ಅವರಿಗೆ ಅಗತ್ಯ ಔಷಧಿಗಳು, ಮೂಗು ಕನ್ನಡಿ, ಡೈರಿ, ಪೆನ್ನು ಮತ್ತು ಭಗವದ್ಗೀತೆಯ ಪುಸ್ತಕವನ್ನು ಪೂರೈಸಲು ಅನುಮತಿಯನ್ನೂ ನೀಡಿದರು. ಸಿಸೋಡಿಯಾ ಅವರ ಮನವಿಯ ಮೇರೆಗೆ ಧ್ಯಾನ ಸೌಲಭ್ಯವಿರುವ ಕೊಠಡಿಯನ್ನು ಒದಗಿಸಲು ಪರಿಗಣಿಸುವಂತೆ ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತು. ತದನಂತರ, ನ್ಯಾಯಾಲಯದ ಆದೇಶದ ಮೇರೆಗೆ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಯಿತು. ಆದರೆ, ನ್ಯಾಯಾಲಯದ ಸೂಚನೆಯ ಮೇರೆಗೆ ಅಲ್ಲಿ ಅವರಿಗೆ ಧ್ಯಾನದ ಸೌಲಭ್ಯವಿರುವ ಕೊಠಡಿಯನ್ನು ಒದಗಿಸದೇ, ಅಪಾಯಕಾರಿ ಕ್ರಿಮಿನಲ್‌ಗಳಿರುವ ಸೆಲ್ ನಲ್ಲಿ ಇಡಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

‘ಸಿಸೋಡಿಯಾ ಜೀವಕ್ಕೆ ಅಪಾಯವನ್ನುಂಟುಮಾಡುವ ಪಿತೂರಿಯೊಂದಿಗೆ ಅವರನ್ನು ಅತ್ಯಂತ ಅಪಾಯಕಾರಿಯಾದ  ಅಪರಾಧಿಗಳಿರುವ ಸೆಲ್ ನಲ್ಲಿ ಇಡಲಾಗಿದೆ. ಇದೊಂದು ರಾಜಕೀಯ ಸೇಡಿನ ಘೋರ ಕೃತ್ಯವಾಗಿದೆ’ ಎಂದು ಆಮ್ ಆದ್ಮಿ ಶಾಸಕ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಅಲ್ಲದೆ, ತಿಹಾರ್ ಜೈಲು ಸಂಖ್ಯೆ 1ರಲ್ಲಿ ಇರುವ ಎಲ್ಲಾ ಕೈದಿಗಳು ಹಿಂಸಾತ್ಮಕ ಘಟನೆಗಳಲ್ಲಿ ಭಾಗಿಯಾಗಿದ್ದವರು. ಅವರಲ್ಲಿ ಅನೇಕರು ಮಾನಸಿಕ ಅಸ್ವಸ್ಥರು ಕೂಡ ಆಗಿದ್ದಾರೆ. ಈಗಾಗಲೇ ಹಲವು ಕೊಲೆ ಪ್ರಕರಣಗಳನ್ನು ಎದುರಿಸುತ್ತಿರುವವರೂ ಇದ್ದಾರೆ. ಹಲವು ಷಡ್ಯಂತ್ರಗಳ ಹೊರತಾಗಿಯೂ ದೆಹಲಿಯಲ್ಲಿ ಸತತವಾಗಿ  ಮೂರು ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷವನ್ನು ಸೋಲಿಸುವಲ್ಲಿ ಬಿಜೆಪಿ ವಿಫಲವಾಯಿತು. ಆದ್ದರಿಂದ ಇಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಇದು ಭಾರತದ ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ’ ಎಂದು ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ.

ಸಿಸೋಡಿಯಾ ಅವರಿಗಿಂತ ಮೊದಲು, ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಸತ್ಯೇಂದರ್ ಜೈನ್ ಕಳೆದ ಮೇ ತಿಂಗಳಿನಿಂದ ತಿಹಾರ್ ಜೈಲಿನಲ್ಲಿದ್ದಾರೆ. ಸುಳ್ಳು ಪ್ರಕರಣದಲ್ಲಿ ಇಬ್ಬರ ಬಂಧನದ ವಿರುದ್ಧ ದೆಹಲಿಯಲ್ಲಿ ಜನರನ್ನು ನೇರವಾಗಿ ಭೇಟಿ ಮಾಡಿ ನ್ಯಾಯ ಕೇಳುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಅದರಂತೆ ಆಮ್ ಆದ್ಮಿ ಪಕ್ಷವು ದೆಹಲಿಯಲ್ಲಿ ಮನೆ ಮನೆಗೆ ತೆರಳಿ ಜನರನ್ನು ಭೇಟಿ ಮಾಡುವ ತಯಾರಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಅದರ ಭಾಗವಾಗಿ ದೆಹಲಿಯ 250 ವಾರ್ಡ್‌ಗಳಿಂದ ಪ್ರತಿನಿಧಿಗಳನ್ನು ಆಹ್ವಾನಿಸಿ ಆಮ್ ಆದ್ಮಿ ಪಕ್ಷದ ಪ್ರಧಾನ ಕಚೇರಿಯಲ್ಲಿ ತರಬೇತಿ ನೀಡಲಾಗುತ್ತಿದೆ. ಮಾರ್ಚ್ 13 ರಂದು ಜನರನ್ನು ಭೇಟಿ ಮಾಡುವ ಅಭಿಯಾನ ಆರಂಭವಾಗಲಿದೆ ಎಂದು ಆಮ್ ಆದ್ಮಿ ಪಕ್ಷದ ಸಂಘಟಕ ಗೋಪಾಲ್ ರಾಯ್ ಹೇಳಿದ್ದಾರೆ. ಮನೆ ಮನೆಗೆ ತೆರಳಿ, ಸಿಸೋಡಿಯಾ ಮತ್ತು ಜೈನ್ ಬಂಧನವನ್ನು ಖಂಡಿಸಿ ಪ್ರಧಾನಿಗೆ ಕಳುಹಿಸುವ ಪತ್ರಕ್ಕೆ ದೆಹಲಿಯ ಜನರಿಂದ ಸಹಿ ಪಡೆಯುವ ಬಗ್ಗೆಯೂ ಆಮ್ ಆದ್ಮಿ ಪಕ್ಷ ಯೋಚಿಸುತ್ತಿದೆ.

ಸತ್ಯೇಂದರ್ ಜೈನ್ ಅವರನ್ನು ಬಂಧಿಸಿದಾಗಲೂ ದೊಡ್ಡ ಪ್ರತಿಭಟನೆ ಇರಲಿಲ್ಲ. ಆದರೆ, ಮನೀಶ್ ಸಿಸೋಡಿಯಾ ಬಂಧನವನ್ನು ವಿವಿಧ ಪಕ್ಷಗಳ ಮುಖಂಡರು ಖಂಡಿಸಿದ್ದಾರೆ. ಶರತ್ ಪವಾರ್, ಫಾರೂಕ್ ಅಬ್ದುಲ್ಲಾ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್ ಮತ್ತು ಉದ್ಧವ್ ಠಾಕ್ರೆ ಸೇರಿದಂತೆ ಒಂಬತ್ತು ವಿರೋಧ ಪಕ್ಷದ ನಾಯಕರು ಮನೀಶ್ ಸಿಸೋಡಿಯಾ ಬಂಧನವನ್ನು ಖಂಡಿಸಿ ಮತ್ತು ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಆಮ್ ಆದ್ಮಿ ಪಕ್ಷವು ತನ್ನ ಸಚಿವರು, ಶಾಸಕರು ಮತ್ತು ಪಕ್ಷದ ಪದಾಧಿಕಾರಿಗಳು ವಸತಿ ಪ್ರದೇಶಗಳಿಗೆ ತೆರಳಿ ಸಿಸೋಡಿಯಾ ಮತ್ತು ಜೈನ್ ವಿರುದ್ಧದ ಸುಳ್ಳು ಪ್ರಕರಣಗಳ ಬಗ್ಗೆ ಜನರಿಗೆ ತಿಳಿಸಲು ಸೂಚಿಸಲಾಗಿದೆ. ಕೇಂದ್ರ ಸರ್ಕಾರದ ಇಂತಹ ನಡೆಗೆ ರಾಜಕೀಯ ವಲಯದಲ್ಲಿ ಹಾಗೂ ಜನರಲ್ಲಿ ವಿರೋಧದ ಭಾವ ಮೂಡಿಸುವ ಪ್ರಯತ್ನಗಳು ನಡೆಯುತ್ತಿವೆ. ಇದು 2024ರಲ್ಲಿ ನಡೆಯಲಿರುವ ಸಂಸತ್ ಚುನಾವಣೆಗೆ ಬಿಜೆಪಿ ವಿರುದ್ಧದ ಪ್ರಚಾರವೂ ಆಗಲಿದೆಯಂತೆ.

ದೇಶ

ಡಿ.ಸಿ.ಪ್ರಕಾಶ್, ಸಂಪಾದಕರು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರದಲ್ಲಿ, ಉಪ ಮುಖ್ಯಮಂತ್ರಿಯಾಗಿದ್ದ ಮನೀಶ್ ಸಿಸೋಡಿಯಾ, ಅರವಿಂದ್ ಕೇಜ್ರಿವಾಲ್ ಅವರಿಗೆ ಅತ್ಯಂತ ಹತ್ತಿರದವರು. ಹೀಗಾಗಿ ಅವರನ್ನು ತಮ್ಮ ಪಕ್ಷಕ್ಕೆ ಸೆಳೆದುಕೊಂಡು ದೆಹಲಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸಿತು. ಆದರೆ ಇದ್ಯಾವುದಕ್ಕೂ ಮಣಿಯದ ಮನೀಶ್ ಸಿಸೋಡಿಯಾ, ಬಿಜೆಪಿ ತನ್ನೊಂದಿಗೆ ಚೌಕಾಸಿ ಮಾಡಿದ ವಿಷಯವನ್ನು ಸಾರ್ವಜನಿಕವಾಗಿ ಬಯಲುಮಾಡಿದರು. ಇದರಿಂದ ಮನೀಶ್ ಸಿಸೋಡಿಯಾ ವಿರುದ್ಧ ಬಿಜೆಪಿ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿತ್ತು.

ಈ ಹಿನ್ನೆಲೆಯಲ್ಲಿ, 2021ರ ಕೊನೆಯಲ್ಲಿ ದೆಹಲಿಯಲ್ಲಿ ಹೊಸ ಮದ್ಯ ನೀತಿಯನ್ನು ಜಾರಿಗೆ ತರಲಾಯಿತು. ಅದರಂತೆ, ಆದಾಯವನ್ನು ಹೆಚ್ಚಿಸುವುದು, ಮದ್ಯದ ಮಾರಾಟದಲ್ಲಿ ಸಮಾನ ವಿತರಣೆಯನ್ನು ಖಚಿತಪಡಿಸಿಕೊಳ್ಳುವುದು ಮತ್ತು ಕಳ್ಳತನ ಹಾಗೂ ಮಾಫಿಯಾವನ್ನು ಕೊನೆಗೊಳಿಸಲು ದೆಹಲಿಯನ್ನು 32 ವಲಯಗಳನ್ನಾಗಿ ವಿಂಗಡಿಸಿ, ಪ್ರತಿ ವಲಯದಲ್ಲಿ 27 ಮದ್ಯದ ಅಂಗಡಿಗಳನ್ನು ಪ್ರಾರಂಭಿಸಲಾಯಿತು. ಖಾಸಗಿ ಬಾರ್‌ಗಳು ನಗರದ ಹೊರಗೆ ಕಾರ್ಯನಿರ್ವಹಿಸಲು ಅನುಮತಿ ನೀಡಿತು. ಈ ಹಿನ್ನೆಲೆಯಲ್ಲಿ ದೆಹಲಿಯ ಡೆಪ್ಯುಟಿ ಗವರ್ನರ್ ವಿ.ಕೆ.ಸಕ್ಸೇನಾ ಅವರು ಕಳೆದ ವರ್ಷ ಜುಲೈನಲ್ಲಿ ದೆಹಲಿ ಸರ್ಕಾರದ 2021-22ನೇ ಸಾಲಿನ ಹೊಸ ಮದ್ಯ ನೀತಿಯಲ್ಲಿ ವಿವಿಧ ಅಕ್ರಮಗಳು ನಡೆದಿದೆ ಎಂದು ಆರೋಪಿಸಿ, ದೆಹಲಿ ಅಬಕಾರಿ ನೀತಿ 2021-22 ಕುರಿತು ಸಿಬಿಐ ತನಿಖೆಗೆ ಶಿಫಾರಸು ಮಾಡಿದರು. ಆ ಬಳಿಕ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 15 ಮಂದಿಯ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ನಂತರ ಮನೀಶ್ ಸಿಸೋಡಿಯಾ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿತು. ಆದರೆ ಸಿಬಿಐ ಯಾವುದೇ ಸಾಕ್ಷ್ಯವನ್ನು ವಶಪಡಿಸಿಕೊಂಡಿಲ್ಲ ಎಂದು ಹೇಳಲಾಗುತ್ತಿದೆ. ಅಲ್ಲದೇ ಈ ಪ್ರಕರಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಪುತ್ರಿ ಕವಿತಾ ಮತ್ತು ಆಂಧ್ರದ ವೈಎಸ್ಆರ್ ಕಾಂಗ್ರೆಸ್ ಸಂಸದ ಶ್ರೀನಿವಾಸಲು ರೆಡ್ಡಿ ಹಾಗೂ ಅವರ ಪುತ್ರ ಮಕುಂದ ರಾಘವ ರೆಡ್ಡಿಯ ಮೇಲೂ ಆರೋಪ ಮಾಡಲಾಗಿತ್ತು.

ಕಳೆದ ಫೆಬ್ರವರಿ 26 ರಂದು ಸಿಬಿಐ ಸುಮಾರು 8 ಗಂಟೆಗಳ ವಿಚಾರಣೆ ಬಳಿಕ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿತು. ನಂತರ ಅವರು ಕಳೆದ ಮಂಗಳವಾರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ನಂತರ ಮನೀಶ್ ಸಿಸೋಡಿಯಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಮತ್ತೆ ಎರಡು ದಿನಗಳ ಕಾಲ ಸಿಬಿಐ ಕಸ್ಟಡಿಯನ್ನು ವಿಸ್ತರಿಸಿ ಕಳೆದ ಶುಕ್ರವಾರ ಆದೇಶಿಸಿತು. ಈ ಹಿನ್ನೆಲೆಯಲ್ಲಿ ಮನೀಶ್ ಸಿಸೋಡಿಯಾ ಬಿಡುಗಡೆಗೆ ಆಗ್ರಹಿಸಿ 9 ವಿರೋಧ ಪಕ್ಷಗಳು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದೆ. ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಅವರು ಪ್ರಧಾನಿಗೆ ಪತ್ರವನ್ನು ಬರೆದಿದ್ದಾರೆ.

ಪತ್ರದಲ್ಲಿ ‘ಭಾರತವನ್ನು ನೀವು ಇನ್ನೂ ಪ್ರಜಾಪ್ರಭುತ್ವ ಎಂದು ಒಪ್ಪುತ್ತೀರಿ ಎಂದು ನಾವು ಭಾವಿಸುತ್ತೇವೆ. ಪ್ರತಿಪಕ್ಷಗಳ ಸದಸ್ಯರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳ ಘೋರ ನಿಂದನೆಯನ್ನು ನೋಡಿದರೆ, ನಾವು ಪ್ರಜಾಪ್ರಭುತ್ವದಿಂದ ನಿರಂಕುಶ ಪ್ರಭುತ್ವಕ್ಕೆ ಸಾಗಿದ್ದೇವೆ ಎಂಬುದನ್ನು ತೋರಿಸುತ್ತಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದೆ. 2014 ರಿಂದ ನಿಮ್ಮ ಆಡಳಿತದಲ್ಲಿರುವ ಗುಪ್ತಚರ ಸಂಸ್ಥೆಗಳಿಂದ ದಾಖಲಾದ, ಬಂಧಿಸಲಾದ, ವಿಚಾರಣೆ ಅಥವಾ ತನಿಖೆಗೆ ಒಳಗಾದ ಒಟ್ಟು ಪ್ರಮುಖ ರಾಜಕಾರಣಿಗಳ ಸಂಖ್ಯೆಯಲ್ಲಿ ವಿರೋಧ ಪಕ್ಷಗಳೇ ಗರಿಷ್ಠ ಸಂಖ್ಯೆಯಲ್ಲಿದೆ. ಕುತೂಹಲಕಾರಿಯೆಂದರೆ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವಿರೋಧ ಪಕ್ಷದ ರಾಜಕಾರಣಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ತನಿಖಾ ಸಂಸ್ಥೆಗಳು ಮುಂದೂಡುತ್ತಿವೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶಾರದಾ ನಿಧಿ ಭ್ರಷ್ಟಾಚಾರ ಪ್ರಕರಣವನ್ನು ಹೊಂದಿದ್ದರು. ಆದರೆ ಅವರು ಬಿಜೆಪಿ ಸೇರಿದ ನಂತರ ಪ್ರಕರಣವು ಪ್ರಗತಿ ಕಾಣಲಿಲ್ಲ. ಅದೇ ರೀತಿ, ತೃಣಮೂಲ ಕಾಂಗ್ರೆಸ್‌ನ ಮಾಜಿ ನಾಯಕ ಸುವೇಂದು ಅಧಿಕಾರಿ ಮತ್ತು ಮುಕುಲ್ ರಾಯ್, ನಾರದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಇಡಿ ಮತ್ತು ಸಿಬಿಐ ಸ್ಕ್ಯಾನರ್‌ಗೆ ಒಳಗಾಗಿದ್ದರು. ಆದರೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ ನಂತರ ಪ್ರಕರಣಗಳು ಪ್ರಗತಿಯೇ ಕಾಣಲಿಲ್ಲ. 2014 ರಿಂದ ಪ್ರತಿಪಕ್ಷ ನಾಯಕರ ಮೇಲಿನ ದಾಳಿಗಳು, ಕಾನೂನು ಕ್ರಮಗಳು ಮತ್ತು ಬಂಧನಗಳ ಸಂಖ್ಯೆ ಗಮನಾರ್ಹವಾಗಿ ಹೆಚ್ಚಾಗಿದೆ. ಲಾಲು ಪ್ರಸಾದ್ ಯಾದವ್ (ಆರ್‌ಜೆಡಿ), ಸಂಜಯ್ ರಾವತ್ (ಶಿವಸೇನೆ), ಅಜಂ ಖಾನ್ (ಸಮಾಜವಾದಿ), ನವಾಬ್ ಮಲಿಕ್, ಅನಿಲ್ ದೇಶಮುಖ್ (ಎನ್‌ಸಿಪಿ), ಅಭಿಷೇಕ್ ಬ್ಯಾನರ್ಜಿ (ಟಿಎಂಸಿ) ಅನೇಕ ಉದಾಹರಣೆಗಳು ಇದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ದೇಶ

2024ರ ಸಂಸತ್ತಿನ ಚುನಾವಣೆಯಲ್ಲಿ ಜನ ಬಡ್ಡಿ ಸಮೇತ ಅಸಲನ್ನೂ ಮರುಪಾವತಿಸಲಿದ್ದಾರೆ ಎಂದು ಮನೀಶ್ ಸಿಸೋಡಿಯಾ ಬಂಧನವನ್ನು ಡಿಎಂಕೆ ಖಂಡಿಸಿದೆ.

ಚೆನ್ನೈ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ, ಡಿಎಂಕೆ ಖಜಾಂಚಿ ಟಿ.ಆರ್.ಬಾಲು ಖಂಡನೆ.

ಈ ಕುರಿತು ಡಿಎಂಕೆ ಖಜಾಂಚಿ ಹಾಗೂ ಡಿಎಂಕೆ ಪಕ್ಷದ ಸಂಸದೀಯ ಸಮಿತಿ ಅಧ್ಯಕ್ಷ ಟಿ.ಆರ್.ಬಾಲು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, “ಆಮ್ ಆದ್ಮಿ ನೇತೃತ್ವದ ದೆಹಲಿ ಸರ್ಕಾರದ ಹೊಸ ಮದ್ಯ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿರುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ. ವಿಚಾರಣೆಗೆ ಹಾಜರಾಗುವ ಮೊದಲು ‘ಸಿಬಿಐ ತನ್ನನ್ನು ಬಂದಿಸಲಿದೆ’ ಎಂದು ಮನೀಶ್ ಸಿಸೋಡಿಯಾ ಹೇಳಿದಂತೆಯೇ ಕೇಂದ್ರ ಸರ್ಕಾರದ ಸಿಬಿಐ ಇದೀಗ ಅವರನ್ನು ಬಂಧಿಸಿ 5 ದಿನಗಳ ಕಸ್ಟಡಿ ಪಡೆದಿದೆ.

ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳನ್ನು ವಿರೋಧ ಪಕ್ಷಗಳ ಮೇಲೆ ಬಳಸಿಕೊಳ್ಳುವ ಬಿಜೆಪಿಯ ಪ್ರವೃತ್ತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇಂದ್ರ ಸರಕಾರದ ಅಧೀನದಲ್ಲಿರುವ ಎಲ್ಲಾ ಸಂಸ್ಥೆಗಳನ್ನು ತನ್ನ ಮಿತ್ರಪಕ್ಷಗಳೆಂದು ಬಿಂಬಿಸುವ ಮೂಲಕ ಪ್ರತಿಪಕ್ಷ ನಾಯಕರ ಮೇಲೆ ದಬ್ಬಾಳಿಕೆ ನಡೆಸುವ ಪ್ರವೃತ್ತಿ ಕಳವಳಕಾರಿಯಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಮಾತ್ರವಲ್ಲ, ಘೋರ ಕಾನೂನು ಭಾಹಿರವೂ ಆಗಿದೆ. ಈ ಆಡಳಿತದಲ್ಲಿ ಗುಪ್ತಚರ ಸಂಸ್ಥೆಗಳ ಸ್ವಾತಂತ್ರ್ಯವು ಗಾಳಿಯಲ್ಲಿ ಹಾರಿದಂತೆ ಬೇರೆ ಯಾವ ಆಡಳಿತದಲ್ಲೂ ಹೀಗಾಗಲಿಲ್ಲ. ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ಒಬ್ಬೊಬ್ಬರನ್ನಾಗಿ ಬಂಧಿಸುತ್ತಿರುವುದು ಇದರಿಂದ ಸಾಬೀತಾಗುತ್ತಿದೆ.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಮ್ಮ ನೀತಿಗಳಿಗೆ ವಿರುದ್ಧವಾಗಿ ಯೋಚಿಸುವ ಸಾಹಿತಿಗಳು, ಪತ್ರಕರ್ತರು, ಚಿಂತಕರು, ಕಲಾವಿದರಿಗೆ ಬೆದರಿಕೆ ಹಾಕುವ ಪ್ರವೃತ್ತಿ ಆರಂಭವಾಗಿದೆ. ಬಿಜೆಪಿಯ ಇಂತಹ ಅಧಿಕಾರ ಬೆದರಿಕೆಯ ಆಕ್ಟೋಪಸ್ ಕೈಗಳು, 2024ರ ಸಂಸತ್ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ, ಅದು ಈಗ ಅತ್ಯಂತ ವೇಗವಾಗಿ ಮತ್ತು ಅರಾಜಕವಾಗಿ ವಿರೋಧ ಪಕ್ಷಗಳತ್ತ ಸಾಗಿ ಬರುತ್ತಿದೆ. “ಸಿಬಿಐಗೆ ಬಂಧಿಸಲು ಇಷ್ಟವಿಲ್ಲ. ಆದರೆ ರಾಜಕೀಯ ಒತ್ತಡದಿಂದ ಈ ಬಂಧನ ಮಾಡಲಾಗುತ್ತಿದೆ,’’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಪವನ್ನು ಸುಲಭವಾಗಿ ತಳ್ಳಿ ಹಾಕುವಂತಿಲ್ಲ.

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬರುತ್ತಿರುವ ಹಿಮಾಲಯದ ಆರೋಪಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಆಡಳಿತ ಪಕ್ಷವು ಈ ರೀತಿಯ ಬಂಧನಕ್ಕೆ ಮುಂದಾಗಿದೆ. ವಿರೋಧ ಪಕ್ಷಗಳ ಮೇಲೆ ಸೇಡು ತೀರಿಸಿಕೊಳ್ಳಲು, ಅಧಿಕಾರದಲ್ಲಿದ್ದಾಗ ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಂಡವರು, ನಂತರ ಇತಿಹಾಸದ ಕಸದ ಬುಟ್ಟಿಗೆ ಎಸೆಯಲ್ಪಟ್ಟ ಅನೇಕ ಉದಾಹರಣೆಗಳಿವೆ ಎಂಬುದನ್ನು ಕೇಂದ್ರ ಬಿ.ಜೆ.ಪಿ ಸರ್ಕಾರದಲ್ಲಿ ಸಿಬಿಐ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರು ಇದನ್ನು ನೆನಪು ಮಾಡಿಕೊಳ್ಳಬೇಕೆಂದು ನಾನು ಅವರಲ್ಲಿ ಕೇಳಿಕೊಳ್ಳುತ್ತೇನೆ.

ಮಾಧ್ಯಮಗಳನ್ನು ಬಳಸಿಕೊಂಡು ಸತ್ಯಗಳನ್ನು ಎಷ್ಟೇ ಮರೆಮಾಚಿದರೂ ಅದು ಜನಸಮೂಹದ ಮಧ್ಯೆ ಅಂಬಲವಾಗಿ ಬಿಡುತ್ತದೆ. ವಿರೋಧ ಪಕ್ಷಗಳ ಮೇಲೆ ಸೇಡು ತೀರಿಸಿಕೊಂಡು, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಉಗ್ರ ಪ್ರವೃತ್ತಿಯನ್ನು ಒಕ್ಕೂಟ ಬಿಜೆಪಿ ಸರಕಾರ ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಈ ವಿಷಯಗಳನ್ನು ಗಮನಿಸುತ್ತಿರುವ ಜನರು ಕೇವಲ ವೀಕ್ಷಕರಾಗಿರುವುದಿಲ್ಲ; ಅವರು ಪಾಠ ಕಲಿಸುವ ನ್ಯಾಯಾಧೀಶರಾಗುತ್ತಾರೆ. ಮತ್ತು 2024ರ ಸಂಸತ್ತಿನ ಚುನಾವಣೆಯಲ್ಲಿ ಬಡ್ಡಿ ಸಮೇತ ಅಸಲನ್ನು ಮರು ಪಾವತಿಸುತ್ತಾರೆ ಎಂದು ನಾನು ನಿಮಗೆ ಎಚ್ಚರಿಸಲು ಬಯಸುತ್ತೇನೆ” ಎಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.