ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Parliament Election 2024 Archives » Dynamic Leader
October 19, 2024
Home Posts tagged Parliament Election 2024
ದೇಶ

ನಾಗರಕೋಯಿಲ್: ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನ ಜೂನ್ 1 ರಂದು  ಪೂರ್ಣಗೊಳ್ಳಲಿದ್ದು, ಇಂದು (ಮೇ 30) ಅಂತಿಮ ಹಂತದ ಪ್ರಚಾರ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಅವರು 3 ದಿನಗಳ ಭೇಟಿಗಾಗಿ ಕನ್ಯಾಕುಮಾರಿಗೆ ಬಂದಿದ್ದಾರೆ.

ರಸ್ತೆ ಮಾರ್ಗವಾಗಿ ಸರ್ಕಾರಿ ಅತಿಥಿಗೃಹಕ್ಕೆ ತೆರಳಿದ ಮೋದಿ, ಸ್ವಲ್ಪ ಸಮಯ ಅಲ್ಲಿ ವಿಶ್ರಾಂತಿ ಪಡೆದರು. ನಂತರ ಅಲ್ಲಿಂದ ಭಗವತಿ ಅಮ್ಮನ್ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಅವರಿಗೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಭಗವತಿ ಅಮ್ಮನವರ ಭಾವಚಿತ್ರವನ್ನು ಸ್ಮರಣಿಕೆಯಾಗಿ ನೀಡಲಾಯಿತು.

ಅಲ್ಲಿಂದ ಕಡಲತೀರಕ್ಕೆ ಹೊರಟ ಮೋದಿಯವರು ವಿಶೇಷ ದೋಣಿಯ ಮೂಲಕ ವಿವೇಕಾನಂದ ಬೆಟ್ಟೆಕ್ಕೆ ತೆರಳಿದರು. ಕನ್ಯಾಕುಮಾರಿಗೆ ಆಗಮಿಸಿರುವ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ತಮಿಳುನಾಡು ಬಿಜೆಪಿ ಸದಸ್ಯರು ಯಾರೂ ಬರಬಾದೆಂದು ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.

ಪ್ರಧಾನಿಯವರ ವೈಯಕ್ತಿಕ ಧ್ಯಾನ ಕಾರ್ಯಕ್ರಮವನ್ನು ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಬಾರದೆಂದು ಹೇಳಿದೆ. ಇದೇ ವೇಳೆ ಕೇಂದ್ರದ ಮಾಜಿ ಸಚಿವ ಪೊನ್ ರಾಧಾಕೃಷ್ಣನ್ ಅತಿಥಿ ಗೃಹಕ್ಕೆ ಬಂದಿದ್ದರು. ಪೊಲೀಸರು ಅವರಿಗೆ ಅನುಮತಿ ನಿರಾಕರಿಸಿದರು. ಇದಾದ ಬಳಿಕ ಅವರು ಅಲ್ಲಿಂದ ವಾಪಸ್ ತೆರಳಿದರು.

ದೇಶ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಸಂಜೆ ಕನ್ಯಾಕುಮಾರಿಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಕನ್ಯಾಕುಮಾರಿಯಲ್ಲಿ ಭದ್ರತಾ ವ್ಯವಸ್ಥೆ ಮಾಡಲಾಗುತ್ತಿದೆ.

ಮೇ 30 ರಂದು ತಮಿಳುನಾಡಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿ ಅವರು ಮೇ 31 ಮತ್ತು ಜೂನ್ 1 ರಂದು ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಬಂಡೆಯಲ್ಲಿ ಧ್ಯಾನ ಮಾಡಲಿದ್ದಾರೆ. ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಪ್ರಧಾನಿ ಮೋದಿ ಧ್ಯಾನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ 2019ರ ಸಂಸತ್ ಚುನಾವಣೆಯ ಕೊನೆಯ ಹಂತದ ಮತದಾನದ ವೇಳೆ ಪ್ರಧಾನಿ ಮೋದಿ ಹಿಮಾಲಯಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿ ಅಲ್ಲಿನ ಗುಹೆಯೊಂದಕ್ಕೆ ತೆರಳಿ ಧ್ಯಾನ ಮಾಡಿದರು. ಈ ಪ್ರಯಾಣದಲ್ಲಿ ಅವರು ಕೇದಾರನಾಥ ಶಿವ ದೇವಾಲಯದಲ್ಲಿ ಪೂಜೆಯನ್ನೂ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ, ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ಸೆಲ್ವಪೆರುಂತಗೈ ಅವರು ತಮ್ಮ ಎಕ್ಸ್ ಪೇಜ್ ನಲ್ಲಿ “ಪ್ರಜಾಪ್ರತಿನಿಧಿ ಕಾಯ್ದೆಯಂತೆ ಚುನಾವಣಾ ನೀತಿ ನಿಯಮಗಳು ಜಾರಿಯಲ್ಲಿರುವ ಕಾರಣ ಮೋದಿಯವರ ಕನ್ಯಾಕುಮಾರಿ ಕಾರ್ಯಕ್ರಮಕ್ಕೆ ಚುನಾವಣಾ ಆಯೋಗ ಅನುಮತಿ ನೀಡಬಾರದು.

ಚುನಾವಣೆಗೆ ಮುನ್ನ 48 ಗಂಟೆಗಳ ವಿರಾಮದ ವೇಳೆಯಲ್ಲಿ ಇಂತಹ ಘಟನೆಯ ಮೂಲಕ ಮಾಧ್ಯಮಗಳನ್ನು ಬಳಸಿಕೊಂಡು ರಹಸ್ಯವಾಗಿ ಪ್ರಚಾರ ಮಾಡಲು ಮೋದಿ ಪ್ರಯತ್ನಿಸುತ್ತಿರುವುದು ಸ್ಪಷ್ಟವಾಗಿದೆ. ನಾಳೆ (ಇಂದು) ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ನೀಡಬೇಕಿದೆ. ಅಗತ್ಯವಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್

ಇಸ್ಲಾಂ ವಿರೋಧದ ನಂತರ ಬಿಜೆಪಿ ವರ್ಣ ಆಧಾರಿತ ರಾಜಕಾರಣವನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡಿದೆ!

ಮುಸ್ಲಿಮರು ಮತ್ತು ಅಲ್ಪಸಂಖ್ಯಾತರನ್ನು ದಮನ ಮಾಡಿ, ವಿಭಜನೆಯನ್ನು ಸೃಷ್ಟಿಸಿ ಆ ಮೂಲಕ ಬಹುಸಂಖ್ಯಾತ ಸಮುದಾಯದ ಮತಗಳನ್ನು ಸೆಳೆಯುವುದು ಆರ್.ಎಸ್.ಎಸ್ ಸಿದ್ಧಾಂತದ ಬಿಜೆಪಿಯ ಉದ್ದೇಶವಾಗಿದೆ. ಹೀಗಾಗಿ ಜಾತಿ ತಾರತಮ್ಯ ಮತ್ತು ಧರ್ಮದ ಆಧಾರದ ಮೇಲೆ ತಾರತಮ್ಯದ ಬಗ್ಗೆ ಮಾತನಾಡುವುದು ಬಿಜೆಪಿಯ ಮೂಲ ರಚನೆಯಾಗಿದೆ.

ಆದರೂ ಇಂತಹ ಚಟುವಟಿಕೆಗಳು ಇಲ್ಲಿಯವರೆಗೆ ಗುಟ್ಟಾಗಿ ನಡೆಯುತ್ತಿದ್ದವು. ಆದರೆ ತನ್ನ 10 ವರ್ಷಗಳ ಆಡಳಿತದಲ್ಲಿ ಹಲವು ವೈಫಲ್ಯಗಳನ್ನು ಕಂಡ ಮೋದಿ ಸರಕಾರ, ಈ ಬಾರಿ ಖಂಡಿತವಾಗಿಯೂ ಸೋಲಲಿದೆ ಎಂದು ಅರಿವಾಗಿ, ನಿರಂತರ ದ್ವೇಷ ಅಭಿಯಾನಗಳನ್ನು ಮುನ್ನಡೆಸುತ್ತಿದೆ. ಈ ನಿಟ್ಟಿನಲ್ಲಿ, ಮೋದಿ ಈಗ ಮುಸ್ಲಿಮರನ್ನು ಹಿಂದಿನ ವರ್ಷಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಹಿರಂಗವಾಗಿ ಟೀಕಿಸುತ್ತಿದ್ದಾರೆ.

ಬಿಜೆಪಿ ನಾಯಕರು, ಮುಸ್ಲಿಮರು ಎಂದರೇ ಶತ್ರುಗಳು ಎಂಬಂತಹ ವರ್ತನೆಯನ್ನು ಬಿತ್ತುತ್ತಿದ್ದಾರೆ. ಇದರಿಂದಾಗಿ ಮುಸ್ಲಿಮರ ಅಸ್ತಿತ್ವವೇ ಪ್ರಶ್ನಾರ್ಹವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿಯವರು, ಮುಸ್ಲಿಮರ ಮೇಲೆ ದ್ವೇಷ ಸಾಧಿಸಿದರೆ ಸಾಕಾಗದು, ಜನಾಂಗೀಯ ದ್ವೇಷವನ್ನು ಬಿತ್ತಿದರೆ ಮಾತ್ರ ಮತಗಳು ಹೆಚ್ಚಾಗುತ್ತವೆ ಎಂದು ಭಾವಿಸಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ.

ಇತ್ತೀಚೆಗಷ್ಟೇ ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಮೋದಿ ಅವರು, ‘ಕಾಂಗ್ರೆಸ್ ಪಕ್ಷವು, ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಅವರಿಗೆ ಬಣ್ಣದ ಕಾರಣಕ್ಕಾಗಿಯೇ ಮತ ಹಾಕಲಿಲ್ಲ’ ಎಂಬ ಹೊಸ ಸುಳ್ಳನ್ನು ಉಗುಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ, ‘ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಸೂಚಿಸಿದಂತೆಯೇ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಕೂಡ ಮತ್ತೊಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿ ಬೆಂಬಲಿಸಿದವು, ಅದಕ್ಕೂ ಬಣ್ಣಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಏಕೆ ಆಹ್ವಾನಿಸಲಿಲ್ಲ? ಅವರ ಬಣ್ಣದ ಕಾರಣದಿಂದಲೇ ಎಂಬ ಪ್ರಶ್ನೆಗಳು ಮೋದಿಯತ್ತ ಹರಿದಾಡುತ್ತಿವೆ. ಇಂತಹ ಪ್ರಕ್ರಿಯೆಗಳು ನಡೆಯುತ್ತಿದ್ದರೂ ಚುನಾವಣಾ ಆಯೋಗ ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಿರುವುದು ಟೀಕೆಗೆ ಗುರಿಯಾಗಿದೆ.

ರಾಜಕೀಯ

ಬಿಜೆಪಿಯ ಸೋಲು ಅನಿವಾರ್ಯ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ದೃಢವಾಗಿ ಹೇಳಿದ್ದಾರೆ.!

18ನೇ ಲೋಕಸಭೆ ಚುನಾವಣೆ 7 ಹಂತಗಳಲ್ಲಿ ನಡೆಯಲಿದ್ದು, ಮೊದಲ 3 ಹಂತದ ಚುನಾವಣೆ ಪೂರ್ಣಗೊಂಡಿದೆ. ಈ ಲೋಕಸಭೆ ಚುನಾವಣೆಯಲ್ಲಿ 10 ವರ್ಷಗಳ ಫ್ಯಾಸಿಸ್ಟ್ ಬಿಜೆಪಿ ಆಡಳಿತವನ್ನು ಕಿತ್ತೊಗೆಯುವ ಏಕೈಕ ಉದ್ದೇಶದೊಂದಿಗೆ ವಿರೋಧ ಪಕ್ಷಗಳು ಒಗ್ಗೂಡಿ ಇಂಡಿಯಾ ಮೈತ್ರಿಕೂಟವನ್ನು ರಚಿಸಿಕೊಂಡು ಚುನಾವಣೆಯನ್ನು ಎದುರಿಸುತ್ತಿದೆ.

ಇಂಡಿಯಾ ಮೈತ್ರಿಕೂಟ ರಚನೆಯಾದಂದಿನಿಂದ ಬಿಜೆಪಿಯ ಸೋಲು ಆರಂಭವಾಗಿದೆ. ಇದೀಗ ಪೂರ್ಣಗೊಂಡಿರುವ ಮೂರು ಹಂತದ ಚುನಾವಣಾ ಸಮೀಕ್ಷೆಗಳು ಬಿಜೆಪಿಯ ಸೋಲನ್ನು ಖಚಿತಪಡಿಸಿವೆ ಎಂದು ಇಂಡಿಯಾ ಮೈತ್ರಿಕೂಟದ ನಾಯಕರು ಹೇಳುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ, ಬಿಜೆಪಿ ಸೋಲು ಅನಿವಾರ್ಯ ಎಂದಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಅದಕ್ಕಾದ ಕಾರಣಗಳನ್ನು ಪಟ್ಟಿ ಮಾಡಿ ತಮ್ಮ ‘ಎಕ್ಸ್’ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟಿಸಿದ್ದಾರೆ. ಅದರಲ್ಲಿ ಹಣದುಬ್ಬರ, ನಿರುದ್ಯೋಗ ಮತ್ತು ಭ್ರಷ್ಟಾಚಾರದಿಂದಾಗಿ ಬಿಜೆಪಿ ಜನಬೆಂಬಲವನ್ನು ಕಳೆದುಕೊಂಡಿದೆ. ಸಾಮಾಜಿಕ ನ್ಯಾಯದ ವಿರುದ್ಧ ನಿರಂತರವಾಗಿ ಮಾತನಾಡುತ್ತಿರುವುದರಿಂದ ಬಿಜೆಪಿ ಪರಿಶಿಷ್ಟ ಜಾತಿ/ಪಂಗಡಗಳು, ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ವರ್ಗದ ತನ್ನದೇ ಪಕ್ಷದ ಕಾರ್ಯಕರ್ತರ ಬೆಂಬಲವನ್ನು ಕಳೆದುಕೊಂಡಿದೆ.

ರೈತರ ಕಲ್ಯಾಣಕ್ಕೆ ವಿರುದ್ಧವಾದ ಕೃಷಿ ಕಾನೂನುಗಳನ್ನು ಜಾರಿಗೆ ತಂದ ನಂತರ ಬಿಜೆಪಿ ರೈತರ ಬೆಂಬಲವನ್ನು ಕಳೆದುಕೊಂಡಿದೆ. ಇರುವ ವೃತ್ತಿಗಳನ್ನು ಹಾಳು ಮಾಡಿ ಭವಿಷ್ಯವನ್ನು ಪ್ರಶ್ನಿಸುತ್ತಿರುವ ಬಿಜೆಪಿ, ಯುವಕರ ಬೆಂಬಲ ಕಳೆದುಕೊಂಡಿದೆ.

ಮಹಿಳೆಯರಿಗೆ ಆಗುತ್ತಿರುವ ಅನ್ಯಾಯದಿಂದ ಬಿಜೆಪಿ ಮಹಿಳೆಯರ ಬೆಂಬಲ ಕಳೆದುಕೊಂಡಿದೆ. ಸ್ಪರ್ದೆಯಲ್ಲಿ ಸೋಲಲು ಹೊರಟಿರುವ ಕುದುರೆಗೆ ನಾವೇಕೆ ಉಣಬಡಿಸಬೇಕು ಎಂದಿರುವ ಉದ್ಯಮಿಗಳ ಬೆಂಬಲವನ್ನು ಬಿಜೆಪಿ ಕಳೆದುಕೊಂಡಿದೆ. ಸೋಲನ್ನು ಎದುರಿಸುತ್ತಿರುವವರಿಗೆ ನಾವೇಕೆ ಬೆಂಬಲಿಸಬೇಕು ಎಂದಿರುವ ಮಾದ್ಯಮಗಳ ಬೆಂಬಲವನ್ನು ಬಿಜೆಪಿ ಕಳೆದುಕೊಂಡಿದೆ. ಇದರಿಂದ ಅನಿವಾರ್ಯ ಸೋಲಿನತ್ತ ಮುಖ ಮಾಡಿರುವ ಬಿಜೆಪಿ ಏನು ಮಾಡಬೇಕೆಂದು ತೋಚದೇ ತಮ್ಮ ದೋಣಿಗಳಲ್ಲೇ ರಂಧ್ರಗಳನ್ನು ಕೊರೆಯುತ್ತಿದ್ದಾರೆ ” ಎಂದು ಹೇಳಿದ್ದಾರೆ.  

ರಾಜಕೀಯ

ಈ ವಿಡಿಯೋ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮಾತ್ರವಲ್ಲ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಅಪರಾಧವೂ ಆಗಿದೆ!

ಕರ್ನಾಟಕ ಬಿಜೆಪಿಯ ಅಧಿಕೃತ ಎಕ್ಸ್ ಪೇಜ್ ನಲ್ಲಿ ಅನಿಮೇಟೆಡ್ ವಿಡಿಯೋವೊಂದನ್ನು ಹಾಕಲಾಗಿದೆ. ಆ ಅನಿಮೇಟೆಡ್ ವಿಡಿಯೋದಲ್ಲಿ, SC, ST ಮತ್ತು ಹಿಂದುಳಿದ ವರ್ಗಗಳನ್ನು (OBC) ಒಂದು ಬುಟ್ಟಿಯಲ್ಲಿ “ಮೊಟ್ಟೆ”ಯಂತೆ ಚಿತ್ರಿಸಲಾಗಿದೆ. ಇದು ಮೀಸಲಾತಿಯನ್ನು ಸೂಚಿಸುತ್ತದೆ. ಈ ಮೀಸಲಾತಿ ಬುಟ್ಟಿಗೆ ರಾಹುಲ್ ಗಾಂಧಿ ಮುಸ್ಲಿಂ ಸಮುದಾಯದ ಮತ್ತೊಂದು ದೊಡ್ಡ ಸೈಜಿನ “ಮೊಟ್ಟೆ”ಯನ್ನು ತಂದು ಹಾಕುತ್ತಾರೆ. ಕಾಂಗ್ರೆಸ್ ನಾಯಕರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗಿಂತ ಮುಸ್ಲಿಂ ಸಮುದಾಯಕ್ಕೆ ಹೆಚ್ಚಿನ ಅನುದಾನವನ್ನು ನೀಡುತ್ತಿದ್ದು, ಮತ್ತು ಅವರ ಮೀಸಲಾತಿ ಕೋಟಾವನ್ನು ಸಹ ಮುಸ್ಲಿಮರಿಗೆ ನೀಡುತ್ತಿದ್ದಾರೆ ಎಂಬಂತೆ ಬಿಂಬಿಸಲಾಗಿದೆ.

ಕರ್ನಾಟಕ ಬಿಜೆಪಿಯು ತಮ್ಮ ಅಧಿಕೃತ ಎಕ್ಸ್ ಪೇಜ್ ನಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಮತ್ತು ಧಾರ್ಮಿಕ ಸಂಘರ್ಷವನ್ನು ಸೃಷ್ಟಿಸುವ ಸಲುವಾಗಿ, ಅನಿಮೇಟೆಡ್ ವಿಡಿಯೋವನ್ನು ಪ್ರಕಟಿಸಿದ್ದಕ್ಕಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಸಾಮಾಜಿಕ ಮಾಧ್ಯಮ ಉಸ್ತುವಾರಿ ಅಮಿತ್ ಮಾಳವೀಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತು.

ಈ ವಿಡಿಯೋ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮಾತ್ರವಲ್ಲದೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಅಪರಾಧವೂ ಆಗಿದೆ ಎಂದೂ ಕಾಂಗ್ರೆಸ್ ಪಕ್ಷ ಪ್ರತಿಪಾದಿಸಿತು. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಸಾಮಾಜಿಕ ಜಾಲತಾಣ ಉಸ್ತುವಾರಿ ಅಮಿತ್ ಮಾಳವೀಯ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮತೀಯ ಘರ್ಷಣೆ ಹಾಗೂ ದ್ವೇಷ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿನ್ನಲೆಯಲ್ಲಿ, ಕರ್ನಾಟಕ ಬಿಜೆಪಿಯ ಎಕ್ಸ್ ಪೇಜ್ ನಲ್ಲಿ ಮುಸ್ಲಿಮರ ಬಗ್ಗೆ ಪ್ರಕಟಿಸಿರುವ ಅನಿಮೇಟೆಡ್ ವಿಡಿಯೋವನ್ನು ತಕ್ಷಣ ತೆಗೆದು ಹಾಕುವಂತೆ ಚುನಾವಣಾ ಆಯೋಗ ಎಕ್ಸ್ ಜಾಲತಾಣ ಕಂಪನಿಗೆ ಸೂಚಿಸಿದೆ.

ರಾಜಕೀಯ

ನವದೆಹಲಿ: ಜೂನ್ 4ರ ನಂತರ ಮೋದಿ ಮಾಜಿ ಪ್ರಧಾನಿಯಾಗಲಿದ್ದಾರೆ. ಜನರು ಅವರನ್ನು ಅಧಿಕಾರದಿಂದ ಹೊರಹಾಕುತ್ತಾರೆ ಎಂಬುದು ಅವರಿಗೂ (ಮೋದಿ) ತಿಳಿದಿದೆ. 1984 ರಿಂದ ನಾವು ಗೆಲ್ಲದ ಕ್ಷೇತ್ರದಲ್ಲೂ ಬಿಜೆಪಿ ಹೆಣಗಾಡುತ್ತಿದೆ ಎಂದು ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಈ ಸಂಬಂಧ ಜೈರಾಮ್ ರಮೇಶ್ ಅವರು ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ, ಲೋಕಸಭೆ ಚುನಾವಣೆಯ ಮೊದಲ ಹಂತದ ನಂತರ, ಇಂಡಿಯಾ ಮೈತ್ರಿಕೂಟವು ಬಹುಮತದ ಸ್ಥಾನಗಳನ್ನು ಪಡೆಯುತ್ತದೆ ಎಂಬುದು ಸ್ಪಷ್ಟವಾಯಿತು. ಇಂದು ನಡೆಯುತ್ತಿರುವ 3ನೇ ಹಂತದ ಚುನಾವಣೆಯ ನಂತರವೂ ಇದೇ ಪರಿಸ್ಥಿತಿ ಇರಲಿದೆ.

1984ರ ನಂತರ ನಾವು ಗುಜರಾತ್‌ನ ಸೂರತ್‌ ಕ್ಷೇತ್ರದಿಂದ ಗೆದ್ದಿಲ್ಲ. ಅಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆದರಿಕೆ ಹಾಕಿ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳ ನಾಮಪತ್ರವನ್ನೂ ಹಿಂಪಡೆಯಲಾಗಿದೆ. 1984 ರಿಂದ ನಾವು ಗೆಲ್ಲದಿದ್ದರೂ ಅವರು ಗೆಲ್ಲಲು ಹೆಣಗಾಡುತ್ತಿದ್ದಾರೆ; ಅದಕ್ಕೆ ಈ ಅಡ್ಡದಾರಿಯನ್ನು ಆಯ್ಕೆಮಾಡಿಕೊಂಡರು. ಇದುವೇ ಅಲ್ಲಿನ ವಾಸ್ಥವಾಂಶ.

ಜೂನ್ 4ರ ನಂತರ ಮೋದಿ ಮಾಜಿ ಪ್ರಧಾನಿಯಾಗಲಿದ್ದಾರೆ. ಜನರು ಅವರನ್ನು ಅಧಿಕಾರದಿಂದ ಹೊರಹಾಕುತ್ತಾರೆ ಎಂಬುದು ಅವರಿಗೂ (ಮೋದಿ) ತಿಳಿದಿದೆ. ಜೂನ್ 4ರ ನಂತರ ಅವರು ಪ್ರಧಾನಿಯಾಗುವುದಿಲ್ಲವಾದ್ದರಿಂದ, ಈಗ ಅವರು ಆರಾಮವಾಗಿ ಕಚೇರಿಯಲ್ಲಿ ಕುಳಿತುಕೊಳ್ಳಲಿ ಎಂದು ಅವರು ಹೇಳಿದ್ದಾರೆ.

ರಾಜಕೀಯ

ರಾಯ್‌ ಬರೇಲಿ (ಯುಪಿ): ದೇಶದ್ರೋಹಿ (Traitors) ಎಂದು ಕರೆಯುವ ಸರ್ಕಾರ ದೇಶದಲ್ಲಿ ಸ್ಥಾಪನೆಯಾಗುತ್ತದೆ ಎಂದು ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರು ಊಹಿಸಿರಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಬೇಸರ ವ್ಯಕ್ತಪಡಿಸಿದರು.

ಪ್ರಚಾರದ ಹಾದಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷೆಯ ಬಗ್ಗೆಯೂ ಅವರು ವಾಗ್ದಾಳಿ ನಡೆಸಿದರು.

ರಾಯ್ ಬರೇಲಿ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ”ಮಹಾತ್ಮ ಗಾಂಧಿ, ಪಂಡಿತ್ ಜವಾಹರಲಾಲ್ ನೆಹರು ಮುಂತಾದವರು ಜನರ ಹಕ್ಕುಗಳನ್ನು ಬಲಪಡಿಸಲು ಚಳುವಳಿಗಳನ್ನು ಕೈಗೊಂಡರು. ಅವರನ್ನು ದೇಶದ್ರೋಹಿಗಳೆಂದು ಕರೆದು (ಜನರಿಗೆ) ‘ನೀವು ನಮಗೆ 400 ಸ್ಥಾನಗಳನ್ನು ನೀಡಿದರೆ, ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ’ ಎಂದು ಹೇಳುವ ಸರ್ಕಾರ ಬರುತ್ತದೆ ಎಂದು ಅವರು ಎಂದಿಗೂ ಊಹಿಸಿರಲಿಲ್ಲ” ಎಂದು ಹೇಳಿದರು.

ರಾಜಕೀಯ

ಅಹಮದಾಬಾದ್: ಗಾಂಧಿ ನಗರ ಕ್ಷೇತ್ರದ ವ್ಯಾಪ್ತಿಯ ರಾನಿಬ್ ಪ್ರದೇಶದ ನಿಶಾನ್ ಹೈಸ್ಕೂಲ್ ಮತಗಟ್ಟೆಯಲ್ಲಿ ಪ್ರಧಾನಿ ಮೋದಿ ಮತ ಚಲಾಯಿಸಿದರು. ಮತದಾನದ ನಂತರ ಅವರು ನೀಡಿದ ಸಂದರ್ಶನದಲ್ಲಿ, “ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಜನರು ಯಾವುದೇ ತೊಂದರೆಯಿಲ್ಲದೆ ಅತ್ಯಂತ ಸುಲಭವಾಗಿ ಮತ ಚಲಾಯಿಸಿದರು. ಹಿಂಸಾಚಾರವಿಲ್ಲದೆ ಅತ್ಯುತ್ತಮ ವ್ಯವಸ್ಥೆ ಮಾಡಿರುವ ಚುನಾವಣಾ ಆಯೋಗಕ್ಕೆ ನನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ” ಎಂದರು

ಲೋಕಸಭೆ ಚುನಾವಣೆಯ 3ನೇ ಹಂತದ ಮತದಾನ ಇಂದು (ಮೇ 07) 12 ರಾಜ್ಯಗಳ 94 ಕ್ಷೇತ್ರಗಳಲ್ಲಿ ನಡೆಯುತ್ತಿದೆ. ಪ್ರಧಾನಿ ಮೋದಿ ತಮ್ಮ ತವರು ರಾಜ್ಯ ಗುಜರಾತ್‌ನ ಅಹಮದಾಬಾದ್‌ನ ಗಾಂಧಿ ನಗರ ಕ್ಷೇತ್ರದ ರಾಣಿಬ್ ಪ್ರದೇಶದ ಬಳಿಯ ನಿಶಾನ್ ಹೈಯರ್ ಸೆಕೆಂಡರಿ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವಾಗತಿಸಿದರು. ಮಕ್ಕಳು ಪೇಂಟಿಂಗ್‌ಗಳನ್ನು ಪ್ರಧಾನಿ ಮೋದಿ ಅವರಿಗೆ ತೋರಿಸಿದಾಗ ಅವರು ಅದಕ್ಕೆ ಸಹಿ ಹಾಕಿದರು. ಅನೇಕ ಜನರು ಪ್ರಧಾನಿಗೆ ಹಸ್ತಲಾಘವ ಮಾಡಿದರು. ಅನೇಕ ಮಕ್ಕಳನ್ನು ಕೈಗೆ ತೆಗೆದುಕೊಂಡ ಪ್ರಧಾನಿ ಮೋದಿ ಮಕ್ಕಳನ್ನು ಮುದ್ದಾಡಿದರು.

ಪ್ರಧಾನಿ ಮೋದಿ ಅವರನ್ನು ನೋಡಲು ಮಕ್ಕಳು ಸೇರಿದಂತೆ ಜನಸಾಗರವೇ ನೆರೆದಿತ್ತು. ಜನ ಪ್ರಧಾನಿ ಮೋದಿಯವರೊಂದಿಗೆ ಮೊಬೈಲ್‌ನಲ್ಲಿ ಸೆಲ್ಫಿ ತೆಗೆಸಿಕೊಂಡರು. ಪ್ರಜಾಸತ್ತಾತ್ಮಕ ಕರ್ತವ್ಯ ನಿರ್ವಹಿಸಿದ ಪ್ರಧಾನಿ ಮೋದಿ ಮತಗಟ್ಟೆಯ ಬಳಿ ಜನರ ಮಧ್ಯೆ ನಿಂತು ಮತ ಚಲಾಯಿಸಿದ ಬೆರಳನ್ನು ಎತ್ತಿ ತೋರಿಸಿದರು.

ಮತದಾನ ಕೇಂದ್ರದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, “ಇಂದು ಮೂರನೇ ಹಂತದ ಮತದಾನ. ಚುನಾವಣೆ ವೇಳೆ ಯಾವುದೇ ಹಿಂಸಾಚಾರದ ಘಟನೆಗಳು ವರದಿಯಾಗಿಲ್ಲ. ಇದೊಂದು ಹಿಂಸಾಚಾರ ಮುಕ್ತ ಚುನಾವಣೆ. ಉತ್ತಮ ಕೆಲಸ ಮಾಡಿದ್ದಕ್ಕಾಗಿ ಚುನಾವಣಾ ಆಯೋಗಕ್ಕೆ ನನ್ನ ನಮನಗಳು. ಪ್ರಜಾಪ್ರಭುತ್ವವನ್ನು ಜನರ ಹಬ್ಬದಂತೆ ಆಚರಿಸಬೇಕು. ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಜನರು ಯಾವುದೇ ತೊಂದರೆಯಿಲ್ಲದೆ ಅತ್ಯಂತ ಸುಲಭವಾಗಿ ಮತ ಚಲಾಯಿಸಿದರು. ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಜನರು ಸಾಕಷ್ಟು ನೀರು ಕುಡಿಯಬೇಕು. ಎಲ್ಲರೂ ತಪ್ಪದೇ ಬಂದು ಮತದಾನ ಮಾಡಬೇಕು” ಎಂದು ಅವರು ಹೇಳಿದರು.

ರಾಜಕೀಯ

7 ಹಂತದ ಲೋಕಸಭೆ ಚುನಾವಣೆಯ ಮೊದಲ ಎರಡು ಹಂತಗಳು ಮುಗಿದಿವೆ. ಮೂರನೇ ಹಂತದ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಸಂಸತ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು.

ಆಗ ಮಾತನಾಡಿದ ರಾಹುಲ್ ಗಾಂಧಿ, “ಮೀಸಲಾತಿಯನ್ನು ತೆಗೆದುಹಾಕಲು ಮತ್ತು ಸಂವಿಧಾನವನ್ನು ಬದಲಾಯಿಸಲು ಬಯಸುತ್ತಿರುವ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಯಸುತ್ತಿದೆ. ಆದರೆ ಅವರಿಗೆ 150 ಸೀಟುಗಳೂ ಸಿಗುವುದಿಲ್ಲ.

ಇಂಡಿಯಾ ಮೈತ್ರಿಕೂಟ ಸರ್ಕಾರದ ನಂತರ ನಾವು ಮೀಸಲಾತಿಯನ್ನು ರಕ್ಷಿಸುವುದಲ್ಲದೆ ಜನರಿಗೆ ಅಗತ್ಯ ಮೀಸಲಾತಿಯನ್ನು ನೀಡುತ್ತೇವೆ. ಸಂವಿಧಾನ, ಜನರ ಹಕ್ಕು, ಮೀಸಲಾತಿ ಇತ್ಯಾದಿಗಳನ್ನು ಉಳಿಸಲು ಈ ಚುನಾವಣೆಯಲ್ಲಿ ಹೋರಾಟ ನಡೆಸುತ್ತಿದ್ದೇವೆ.

ಆದಿವಾಸಿಗಳು, ದಲಿತರು ಮತ್ತು ಹಿಂದುಳಿದವರಂತಹ ದೇಶದ ಜನರಿಗೆ ಏನೆಲ್ಲಾ ಹಕ್ಕುಗಳು ಸಿಕ್ಕಿವೆಯೋ ಅದು ಸಂವಿಧಾನದ ಮೂಲಕ ಮಾತ್ರ. ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದಾರೆ. ಇದರಿಂದ ದೇಶದಲ್ಲಿ ನಿರುದ್ಯೋಗ ಪ್ರಮಾಣ 45 ವರ್ಷಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದೆ” ಎಂದರು.

ರಾಜಕೀಯ

ಬೆಳಗಾವಿ: ಬೆಳಗಾವಿಯಲ್ಲಿ ಇಂದು ಆಯೋಜಿಸಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್.ಎಸ್.ಎಸ್ ಹೇಳುತ್ತಿದ್ದು, ಇವರಿಂದ ಸಂವಿಧಾನ ಉಳಿಸಬೇಕಾದ ಅನಿವಾರ್ಯ ಸ್ಥಿತಿ ಇದೆ. ಹಾಗಾಗಿ ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಹೇಳಿದರು.

ಅಂಬೇಡ್ಕರ್ ಅವರು ನೀಡಿರುವ ಭಾರತೀಯ ಸಂವಿಧಾನವು ಎಲ್ಲರಿಗೂ ಸಮಾನ ಅವಕಾಶ, ಸಮ ಸಮಾಜದ ಗ್ಯಾರಂಟಿ ನೀಡುತ್ತದೆ. ಇದಕ್ಕೆ ವಿರುದ್ಧವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ. ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ, ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಎಂದರು.

ರಾಜ್ಯದ ಬಡ ಜನರ ತುತ್ತಿನ ಚೀಲ ತುಂಬಿಸುವ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ಪೂರೈಸಲು ಕೋರಿದಾಗ, ಅಕ್ಕಿ ದಾಸ್ತಾನಿದ್ದರೂ ಕೇಂದ್ರ ಬಿಜೆಪಿ ಸರ್ಕಾರ ಅಕ್ಕಿ ನೀಡಲು ಒಪ್ಪಲಿಲ್ಲ. ಆದ್ದರಿಂದ ನಮ್ಮ ಸರ್ಕಾರ ಅಕ್ಕಿ ಬದಲು ಕೆಜಿಗೆ 34 ರೂ.ನಂತೆ 5 ಕೆ.ಜಿಗೆ 170 ರೂ. ಹಾಗೆ ಜುಲೈ ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆ ಮಾಡುತ್ತಿದೆ ಎಂದು ಹೇಳಿದರು.

ಗೃಹಜ್ಯೋತಿಯನ್ನು ಜುಲೈ ತಿಂಗಳಲ್ಲಿ ಜಾರಿ ಮಾಡಲಾಯಿತು. 1.60 ಕೋಟಿ ಫಲಾನುಭವಿಗಳಿಗೆ ಅಂದರೆ ರಾಜ್ಯದ ಸುಮಾರು 92% ಜನರಿಗೆ ಇದರಿಂದ ಲಾಭವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಮನೆ ಯಜಮಾನಿಯರಿಗೆ ತಲಾ 2,000 ರೂ.ನಂತೆ ಆಗಸ್ಟ್ ತಿಂಗಳಿನಿಂದ ಜಾರಿ ಮಾಡಲಾಯಿತು.

ನಿರುದ್ಯೋಗಿ ಪದವೀಧರರಿಗೆ 2 ವರ್ಷಗಳವರೆಗೆ ತಿಂಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದವರಿಗೆ ತಲಾ 2000 ರೂ. ನೀಡುವ ಯುವನಿಧಿ ಯೋಜನೆಯನ್ನು ವಿವೇಕಾನಂದರ ಜನ್ಮದಿನಾಚರಣೆಯಂದು ಜಾರಿ ಮಾಡಲಾಯಿತು. ಈ ಅವಧಿಯಲ್ಲಿ ಬೇಡಿಕೆಯಿರುವ ತರಬೇತಿಯನ್ನು ಯುವಜನರಿಗೆ ನೀಡಿ, ಅವರಿಗೆ ಉದ್ಯೋಗ ದೊರೆಯಲು ಶಕ್ತಿ ತುಂಬಲಾಗುವುದು.

ಹಿಂದೆಯೂ ನಾವು ನೀಡಿದ ಭರವಸೆಗಳನ್ನು ಈಡೇರಿಸಿದ್ದೆವು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ 5 ಗ್ಯಾರಂಟಿಗಳನ್ನು ನೀಡಿದ್ದು ಜನರಿಗೆ ವಿಶ್ವಾಸ ಬಂದಿದೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ಎಂದು ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಂಡರು.

ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು. ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ ಎಂದರು, ಲೋಕಸಭಾ ಚುನಾವಣೆ ತನಕ ಮಾತ್ರ ನೀಡಿ, ನಂತರ ನಿಲ್ಲಿಸುತ್ತಾರೆ ಎಂಬ ಸುಳ್ಳುಗಳನ್ನು ಸೃಷ್ಟಿಸಿದ್ದಾರೆ. ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 52,009 ಕೋಟಿ ರೂ.ಗನ್ನು ಇಟ್ಟಿದ್ದೇವೆ. ಅಭಿವೃದ್ಧಿ ಕೆಲಸಗಳಿಗೆ 68 ಸಾವಿರ ಕೋಟಿಗಳನ್ನೂ ಸೇರಿದಂತೆ 2024-25 ರಲ್ಲಿ ಒಟ್ಟು 1.20 ಲಕ್ಷ ಕೋಟಿ ಇಟ್ಟಿದ್ದೇವೆ.

ನಮ್ಮ ಸರ್ಕಾರದ ಬಜೆಟ್ ಗಾತ್ರ 3.71 ಲಕ್ಷ ಕೋಟಿ, ಬೊಮ್ಮಾಯಿಯವರ ಬಜೆಟ್ 23-24ರಲ್ಲಿ 3.09 ಲಕ್ಷ ಕೋಟಿ. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಜನರಿಗೆ ಕಾಂಗ್ರೆಸ್ ನ ಮೇಲೆ ವಿಶ್ವಾಸ ಕಡಿಮೆಯಾಗಲಿ ಎಂದು ಹುನ್ನಾರ ಮಾಡುತ್ತಿದ್ದಾರೆ. ಬಿಜೆಪಿ ಅವರಿಗೆ ಗ್ಯಾರಂಟಿ ಯೋಜನೆಗಳನ್ನು ಕಂಡರೆ ಆಗುವುದಿಲ್ಲ. ಅದನ್ನು ನಿಲ್ಲಿಸಬೇಕೆಂಬುದು ಅವರ ಪಿತೂರಿಯಾಗಿದೆ. ಬಡವರು, ರೈತರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರ ಏಳಿಗೆ ಅವರಿಗೆ ಮುಖ್ಯವಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 10 ವರ್ಷಗಳಿಂದ ಯಾವುದೇ ಸಾಧನೆಗಳನ್ನು ಮಾಡಿಲ್ಲ. 2014ರಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಆದರೆ ಮೋದಿಯವರು ದ್ವೇಷದ ಭಾಷಣ ಮಾಡುತ್ತಿದ್ದಾರೆ. ಮತಗಳ ಕ್ರೋಢೀಕರಣ, ಧರ್ಮದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ರಾಹುಲ್ ಗಾಂಧಿ ಅವರು ದೇಶದ ಉದ್ದಗಲಕ್ಕೂ ಪಾದಯಾತ್ರೆ ಹಾಗೂ ನ್ಯಾಯ ಯಾತ್ರೆ ಮಾಡಿದರು. ದೇಶ ವಿಭಜನೆ ಮಾಡಲು ಮೋದಿಯವರು ಮಾಡಿರುವ ಪ್ರಯತ್ನಗಳಿಂದ ಬೇಸತ್ತಿದ್ದ ಜನರ ಒಡೆದ ಮನಸ್ಸನ್ನು ಒಗ್ಗೂಡಿಸಲು ಯಾತ್ರೆ ಕೈಗೊಂಡು ಯಶಸ್ವಿಯಾದರು ಎಂದು ಭಾರತ್ ಜೋಡೋ ಯಾತ್ರೆಗಳನ್ನು ಸಮರ್ಥಿಸಿಕೊಂಡರು.

ಕಾಂಗ್ರೆಸ್ ಪಕ್ಷ ನೀಡಿರುವ 25 ಗ್ಯಾರಂಟಿಗಳಿಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಯವರು ಸಹಿ ಮಾಡಿ ಹಂಚಿದ್ದಾರೆ. ಬಡಕುಟುಂಬದ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ನೀಡುವ ಮಹಾಲಕ್ಷ್ಮಿ ಯೋಜನೆ, ಯುವನ್ಯಾಯದಡಿ ಮೊದಲ ಉದ್ಯೋಗದ ಜೊತೆಗೆ ವರ್ಷಕ್ಕೆ 1 ಲಕ್ಷ ರೂ. ನೀಡುವ ಯೋಜನೆ, ರೈತರ ಬೆಳೆಗೆ ನ್ಯಾಯಯುತ ಬೆಲೆ, ಸಾಲ ಮನ್ನಾ, ಸ್ವಾಮಿನಾಥನ್ ವರದಿ ಜಾರಿ ಬೇಡಿಕೆಗಳನ್ನು ಈಡೇರಿಸುವ ‘ರೈತ ನ್ಯಾಯ’ ಯೋಜನೆಗಳ ಭರವಸೆ ನೀಡಿದರು.

ನರೇಂದ್ರ ಮೋದಿ ಅವರು ರೈತರ ಸಾಲ ಮನ್ನಾ ಮಾಡಲಿಲ್ಲ. ಸ್ವಾಮಿನಾಥನ್ ವರದಿ ಜಾರಿ ಮಾಡಲಿಲ್ಲ. ಆದರೆ ಅಂಬಾನಿ, ಅದಾನಿಗಳಿಗೆ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ರೈತರ ಸಾಲ ಮನ್ನಾ ಮಾಡಲು ನೋಟ್ ಪ್ರಿಂಟ್ ಮಾಡುವ ಮಿಷನ್ ಇಲ್ಲ ಎಂದು ಬಿಜೆಪಿಯವರು ಹೇಳುತ್ತಾರೆ. ಸಂಸದ ತೇಜಸ್ವಿ ಸೂರ್ಯ, ರೈತರ ಸಾಲ ಮನ್ನಾ ಮಾಡಿದರೆ ದೇಶಕ್ಕೆ ಒಳಿತಲ್ಲ ಎಂದಿದ್ದಾರೆ. ರೈತರ ಸಾಲ ಮನ್ನಾ ಮಾಡಬಾರದೆಂಬುದು ಬಿಜೆಪಿ ಅವರ ಹಿಡೆನ್ ಅಜೆಂಡಾ ಎಂದು ಕಿಡಿಕಾರಿದರು.

ಅವಕಾಶ ವಂಚಿತರಿಗೆ ನ್ಯಾಯ ನೀಡಲು, ಸರ್ಕಾರದ ಅನುಕೂಲ ದೊರಕಿಸಿಕೊಡಲು ಜಾತಿಗಣತಿ ಅತಿ ಮುಖ್ಯ. ಪಾಲುದಾರಿಕೆ ನ್ಯಾಯ, ಶ್ರಮಿಕ ನ್ಯಾಯ ಯೋಜನೆ ಗ್ಯಾರಂಟಿಗಳನ್ನು ಜಾರಿ ಮಾಡಲಾಗುವುದು. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಗ್ಯಾರಂಟಿಗಳನ್ನು ಜಾರಿ ಮಾಡಲಾಗಿದೆ. ಹೀಗೆ ದೇಶಾದ್ಯಂತ ಜಾರಿಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ದೊಡ್ಡ ಅನ್ಯಾಯ ಮಾಡಿದ್ದಾರೆ. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತದೆ. ಆದರೆ ರಾಜ್ಯಕ್ಕೆ 100 ರೂ.ಗೆ ಕೇವಲ 13 ರೂ. ಮರಳಿ ಬರುತ್ತಿದೆ. 11,495 ಕೋಟಿ ರೂ.ಗಳನ್ನು 15ನೇ ಹಣಕಾಸು ಆಯೋಗ ನಿರ್ಧರಿಸಿತ್ತು. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಲು ತಿಳಿಸಿದ್ದರೂ ಅವರು ಮಾಡಲಿಲ್ಲ. ರಾಜ್ಯಕ್ಕಾಗಿರುವ ಇಷ್ಟೆಲ್ಲಾ ಅನ್ಯಾಯವನ್ನು ರಾಜ್ಯದ 25 ಸಂಸದರಲ್ಲಿ ಯಾರೊಬ್ಬರೂ ಧ್ವನಿ ಎತ್ತಲಿಲ್ಲ. ಮೋದಿಯವರ ಎದುರು ನಿಂತು ಮಾತನಾಡಲು ಹೆದರುತ್ತಾರೆ. ಆದರೆ ಡಿ.ಕೆ.ಸುರೇಶ್ ಮಾತ್ರ ಪ್ರಶ್ನಿಸಿದ್ದರು.

ರಾಜ್ಯದ ಬಹುತೇಕ ತಾಲ್ಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 23 ರಂದು ಬರಪರಿಹಾರಕ್ಕೆ ಮನವಿ ಮಾಡಲಾಗಿದೆ. ರೂ.18,172 ಕೋಟಿ ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಕೇಳಿದೆವು. 48 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ನಾಶವಾಗಿದೆ. ಕೇಂದ್ರ ತಂಡ ಬರಪರಿಹಾರ ಅಧ್ಯಯನ ಮಾಡಿದ್ದಾರೆ. ರಾಜ್ಯದ ಮಂತ್ರಿಗಳು, ನಾನು ಕೇಂದ್ರ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕೋರಿದರೂ ಮನ್ನಣೆ ಸಿಗಲಿಲ್ಲ. ಆದ್ದರಿಂದ ಮನವಿ ಸಲ್ಲಿಸಿದ 7 ತಿಂಗಳ ನಂತರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆವು. ಸುಪ್ರೀಂ ಕೋರ್ಟ್ ಚಾಟಿ ಬೀಸುವ ತನಕ ಒಂದು ರೂ. ಕೊಡಲಿಲ್ಲ. ರೂ.3,454 ಕೋಟಿ ನಂತರ ಕೊಟ್ಟರು.

ರಾಜ್ಯದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಬದಲಿಸಲು ಅವಕಾಶ ಸಿಕ್ಕಿದೆ. ಕರ್ನಾಟಕಕ್ಕೆ ಮೋದಿಯವರು ಕೇವಲ ಚೊಂಬು ನೀಡಿದ್ದಾರೆ. ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಜನರು ತಮ್ಮ ಮತಗಳ ಮೂಲಕ ಛಾಟಿ ಬೀಸುತ್ತಾರೆ. ಈ ಬಾರಿ ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ. ರಾಜ್ಯದಿಂದ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ಮೋದಿಯವರಿಗೆ ಜನ ತಕ್ಕ ಪಾಠ ಕಲಿಸಬೇಕು ಎಂದು ರಾಜ್ಯದ ಜನರಿಗೆ ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.