ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Rajnath Singh Archives » Dynamic Leader
October 23, 2024
Home Posts tagged Rajnath Singh
ಲೇಖನ

ಡಿ.ಸಿ.ಪ್ರಕಾಶ್

2024ರ ಸಂಸತ್ ಚುನಾವಣೆಯಲ್ಲಿ ಬಿಜೆಪಿ ಏಕ ಬಹುಮತದೊಂದಿಗೆ ಸರ್ಕಾರ ರಚಿಸುವ ನಿರೀಕ್ಷೆ ಇತ್ತು. ಅಲ್ಲದೆ ಚುನಾವಣೋತ್ತರ ಸಮೀಕ್ಷೆ ಫಲಿತಾಂಶದಲ್ಲಿ ಬಿ.ಜೆ.ಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸಲಿದೆ ಎಂದು ವರದಿಯಾಗಿತ್ತು. ಆದರೆ, ಸಮೀಕ್ಷೆಯ ಫಲಿತಾಂಶವನ್ನು ಸಂಪೂರ್ಣವಾಗಿ ಸುಳ್ಳಾಗಿಸಿ, ಬಿಜೆಪಿ 240 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತು.

ಬಿಜೆಪಿ, ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ ನೇತೃತ್ವದಲ್ಲಿ ಬಹುಮತ ಗಳಿಸಿದ್ದು, ಮತ್ತೆ ಸರ್ಕಾರ ರಚಿಸುವ ಕೆಲಸದಲ್ಲಿ ತೊಡಗಿದೆ. 2014 ಮತ್ತು 2019ರ ಸಂಸತ್ ಚುನಾವಣೆ ಫಲಿತಾಂಶಕ್ಕೆ ಹೋಲಿಸಿದರೆ ಪ್ರಸಕ್ತ ಚುನಾವಣೆಯಲ್ಲಿ ಬಿಜೆಪಿ ಕೆಲವೆಡೆ ಮಾತ್ರ ಗೆದ್ದಿದೆ. ಇದರಿಂದಾಗಿ ಮೈತ್ರಿ ಪಕ್ಷಗಳ ಬೆಂಬಲದೊಂದಿಗೆ ಬಿಜೆಪಿ ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ.

ಈ ಹಿನ್ನೆಲೆಯಲ್ಲಿ, ನಡೆದಿರುವ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಲು ವಿಫಲವಾಗಿರುವುದರಿಂದ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗವುದನ್ನು ಆರ್‌ಎಸ್‌ಎಸ್ ಬಯಸುತ್ತಿಲ್ಲ ಎಂದು ಶಿವಸೇನೆಯ ಸಂಜಯ್ ರಾವತ್ ಹೇಳಿದ್ದಾರೆ. ಮತ್ತು ಮೋದಿ ಬದಲು ಮತ್ತೊಬ್ಬರನ್ನು ಪ್ರಧಾನಿಯನ್ನಾಗಿ ನೇಮಿಸುವ ಬಗ್ಗೆಯೂ ಸಮಾಲೋಚನೆ ನಡೆಸುತ್ತಿರುವುದಾಗಿ ತಿಳಿಸಿದರು.

ಭಾರತದ ಮುಂದಿನ ಪ್ರಧಾನಿಯಾಗಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮಾಜಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರ ಹೆಸರನ್ನು ಪರಿಶೀಲಿಸಲಾಯಿತು. ಆದರೆ, ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ.

2024ರ ಸಂಸತ್ತಿನ ಚುನಾವಣಾ ಫಲಿತಾಂಶಗಳು ನರೇಂದ್ರ ಮೋದಿಯವರ ವಿರುದ್ಧವಾಗಿರುವುದರಿಂದ ನರೇಂದ್ರ ಮೋದಿ ಅವರು ಸ್ವಯಂಪ್ರೇರಿತರಾಗಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕಿತ್ತು. ಇದಕ್ಕೆ ವ್ಯತಿರಿಕ್ತವಾಗಿ, ಅವರು ಸರ್ಕಾರವನ್ನು ರಚಿಸಲು ಪ್ರಯತ್ನಿಸುತ್ತಿದ್ದಾರೆ. ಇದು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗುವುದು ಆರ್‌ಎಸ್‌ಎಸ್‌ಗೆ ಇಷ್ಟವಿಲ್ಲದೆ, ಬೇರೊಬ್ಬ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಮಾಡಲು ಪ್ರಯತ್ನಿಸಿದೆ. ಇದರ ಹೊರತಾಗಿಯೂ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವತ್ತ ಗಮನಹರಿಸಿದ್ದಾರೆ. ಎನ್‌ಡಿಎ ಭಾಗವಾಗಿರುವ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಈ ಹಿಂದೆ ಮೋದಿ ಮತ್ತು ಅಮಿತ್ ಶಾ ಅವರಿಂದ ಹೆಚ್ಚು ನೋವನ್ನು ಅನುಭವಿಸಿದ್ದಾರೆ. ಇದರಿಂದ ಯಾವಾಗ ಏನು ಬೇಕಾದರೂ ಆಗಬಹುದು ಎಂದು ಅವರು ಹೇಳಿದ್ದಾರೆ.

ಚುನಾವಣೆಯಲ್ಲಿ ಗೆದ್ದ ನಂತರ ಪ್ರತಿ ಪಕ್ಷಗಳು ತಮ್ಮ ಸಂಸದರನ್ನು ಕರೆಸಿ ಸಮಾಲೋಚನೆ ನಡೆಸುವುದು ವಾಡಿಕೆ. ಈ ಸಮಾಲೋಚನಾ ಸಭೆಯಲ್ಲಿ ಆ ಪಕ್ಷದ ಸಂಸದೀಯ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಇತರ ವಿಷಯಗಳ ಬಗ್ಗೆಯೂ ಚರ್ಚೆ ನಡೆಯುತ್ತದೆ.

ಆದರೆ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ನರೇಂದ್ರ ಮೋದಿ ಅವರು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಮಾಲೋಚನಾ ಸಭೆಯನ್ನು ಕರೆದು, ತಮ್ಮನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ.

ಇದರ ಬೆನ್ನಲ್ಲೇ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ನೂತನ ಸಂಸತ್ ಸದಸ್ಯರ ಸಭೆ ದೆಹಲಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲು ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಬೆಂಬಲ ವ್ಯಕ್ತಪಡಿಸಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದರು.

ಇದರ ಬೆನ್ನಲ್ಲೇ ಮೋದಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದರು. ಅಲ್ಲದೇ ದೇಶದ ಮುಂದಿನ ಪ್ರಧಾನಿಯಾಗಿ ನರೇಂದ್ರ ಮೋದಿಯವರನ್ನು ಪ್ರಸ್ತಾಪಿಸುವುದಾಗಿ ಮಾಜಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದರು.

ತರುವಾಯ, ಅಮಿತ್ ಶಾ ಮತ್ತು ನಿತಿನ್ ಗಡ್ಕರಿ ಇಬ್ಬರೂ ಮೋದಿಯನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ನಿರ್ಧಾರವನ್ನು ಪ್ರಸ್ತಾಪಿಸಿದರು. ನಂತರ ಮೋದಿ ಪ್ರಧಾನಿಯಾಗಿ ಆಯ್ಕೆಯಾಗಿದ್ದನ್ನು ಅಧಿಕೃತವಾಗಿ ಘೋಷಿಸಲಾಯಿತು.

ಸಂಸತ್ ಚುನಾವಣೆಯ ಫಲಿತಾಂಶ ಪ್ರಕಟವಾದ ಮೂರು ದಿನಗಳಲ್ಲಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಪುನರಾಯ್ಕೆಯಾಗಿದ್ದಾರೆ. ಈ ಬಾರಿ ಸಮ್ಮಿಶ್ರ ಸರ್ಕಾರ ರಚನೆಯಾದ ನಂತರ ಹೊಸ ಸರ್ಕಾರ ಎಷ್ಟು ದಿನ ಇರಲಿದೆ ಎಂಬುದನ್ನು ಕಾದು ನೋಡಬೇಕಿದೆ.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಎಲ್‌.ಕೆ.ಅಡ್ವಾಣಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರನ್ನು 75 ವಯಸ್ಸಿನ ನಂತರ ” ಮಾರ್ಗದರ್ಶಕ್ ಮಂಡಲ್ ” ಎಂದು ಕರೆಯಲ್ಪಡುವ ಸ್ಟೀರಿಂಗ್ ಸಮಿತಿಗೆ ನೇಮಿಸಲಾಗಿತ್ತು. ಈ ನಿಯಮದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ವಿನಾಯಿತಿ ಸಿಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಈಗ 73 ವರ್ಷ ವಯಸ್ಸಾಗಿದೆ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಪ್ರಧಾನಿಯಾದಾಗ, ಮೋದಿ ಅವರು 78 ವರ್ಷ ವಯಸ್ಸಿನವರೆಗೆ ಅಧಿಕಾರದಲ್ಲಿ ಉಳಿಯಬೇಕಾಗುತ್ತಾದೆ. ಹಾಗಾಗಿ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಂತೆ 75 ವರ್ಷ ವಯಸ್ಸಿನ ನಂತರ ನಿವೃತ್ತಿಯಾಗಬೇಕು ಎಂದು ಬಲವಂತಮಾಡದೇ ಮೋದಿಯೇ ಪೂರ್ಣಾವಧಿಯವರೆಗೆ ಪ್ರಧಾನಿಯಾಗಿ ಮುಂದುವರಿಯಲು ಬಿಜೆಪಿ ತನ್ನ ನಿಲುವನ್ನು ಬದಲಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಪ್ರಧಾನಿ ಮೋದಿಯವರ ಹೆಸರಿನಲ್ಲಿ ಬಿಜೆಪಿ ದೇಶಾದ್ಯಂತ ಮತಗಳನ್ನು ಸಂಗ್ರಹಿಸುತ್ತಿದ್ದು, ಅವರು ನೇತೃತ್ವ ವಹಿಸಿಕೊಂಡ ನಂತರವೇ ವಿವಿಧ ಚುನಾವಣೆಗಳಲ್ಲಿ ಪಕ್ಷವು ಗೆಲುವು ಸಾಧಿಸುತ್ತಿದೆ ಎಂದು ಬಿಜೆಪಿ ನಾಯಕರು ಗಮನಸೆಳೆದಿದ್ದಾರೆ. ಆದ್ದರಿಂದ ಅವರಿಗೆ 75 ವಯಸ್ಸಿನ ನಿಯಮದಿಂದ ವಿನಾಯಿತಿ ಕಡ್ಡಾಯವೆಂದು ಪರಿಗಣಿಸಲಾಗಿದೆ.

ಇದೇ ವೇಳೆ, ಮೋದಿ ಅವರು ಸ್ಟೀರಿಂಗ್ ಕಮಿಟಿಗೆ ಹೋಗಬೇಕು ಎಂದು ಹಿರಿಯ ನಾಯಕರು ಒಮ್ಮತದ ಅಭಿಪ್ರಾಯ ಮಂಡಿಸಿದರೆ ಅರ್ಧದಷ್ಟು ಅವಧಿಗೆ ಮತ್ತೊಂದು ಪ್ರಧಾನಿಯನ್ನು ನೇಮಿಸಬಹುದು ಎಂದೂ ಹೇಳಲಾಗುತ್ತಿದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆಗೆ ಅವಕಾಶವಿಲ್ಲ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ನರೇಂದ್ರ ಮೋದಿಯಷ್ಟೇ ಅಲ್ಲ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ವಯಸ್ಸು ಏರಿದ್ದರೂ ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ. 72 ವರ್ಷದ ರಾಜನಾಥ್ ಸಿಂಗ್ ಅವರು ಲಕ್ನೋದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಘೋಷಿಸಿದೆ.

ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಸಚಿವರಾದರೆ 77ರ ತನಕ ಅಧಿಕಾರದಲ್ಲಿ ಮುಂದುವರಿಯಬಹುದು. ಇದನ್ನು ಇತರ ಭಾರತೀಯ ಜನತಾ ಪಕ್ಷದ ನಾಯಕರು ಒಪ್ಪಿಕೊಳ್ಳುತ್ತಾರೆಯೇ ಎಂಬ ಪ್ರಶ್ನೆಯೂ ಮೋದಿ ಮತ್ತು ರಾಜನಾಥ್ ಸಿಂಗ್ ಅವರ ಆಯ್ಕೆಯಿಂದಾಗಿ ಉದ್ಭವಿಸಿದೆ.

ಈ ಹಿಂದೆ ಕಲ್‍ರಾಜ್ ಮಿಶ್ರಾ ಅವರಂತಹ ಕೇಂದ್ರ ಸಚಿವರು ತಮ್ಮ 75ನೇ ವಯಸ್ಸಿನಲ್ಲಿ ರಾಜೀನಾಮೆ ನೀಡಿದ್ದರು ಎಂದು ಬಿಜೆಪಿಗರು ಗಮನಸೆಳೆದಿದ್ದಾರೆ. ಅದೇ ರೀತಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ವಯಸ್ಸು 75 ದಾಟುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿಯಬೇಕಾಯಿತು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ಆನಂದಿಬೆನ್ ಪಟೇಲ್ ಕೂಡ ಇದೇ ರೀತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ನಂತರ ರಾಜ್ಯಪಾಲರಾಗಿ ನೇಮಕವಾದರು.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಮಾತ್ರ ಹೊರಬಿದ್ದಿದ್ದು, ಮುಂದಿನ ಪಟ್ಟಿಗಳಲ್ಲಿ 70 ದಾಟಿದ ಹಿರಿಯ ನಾಯಕರಿಗೆ ಮತ್ತೆ ಚುನಾವಣೆಯಲ್ಲಿ ಸ್ಪರ್ದಿಸಲು ಬಿಜೆಪಿ ಅವಕಾಶ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕು. ಮತ್ತು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಅಧಿಕಾರಕ್ಕೆ ಬಂದು, ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ, ಪೂರ್ಣಾವಧಿಯವರೆಗೂ ಅಧಿಕಾರದಲ್ಲಿ ಮುಂದುವರಿಯುತ್ತಾರೆಯೇ ಎಂಬುದು ಅನುಮಾನವೇ ಎಂದು ಬಿಜೆಪಿಯಲ್ಲೇ ಗುಸುಗುಸು ಮಾತನಾಡಿಕೊಳ್ಳುತ್ತಿದ್ದಾರೆ.