ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Siddaramaiah Archives » Dynamic Leader
October 19, 2024
Home Posts tagged Siddaramaiah
ರಾಜ್ಯ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಮುವಾದ, ಸರ್ವಾಧಿಕಾರ ಮತ್ತು ಹಿಂಸೆಯಿಂದ ಕೂಡಿರುವ ಜಗತ್ತಿನಲ್ಲಿ ಸತ್ಯ, ಶಾಂತಿ ಮತ್ತು ಅಹಿಂಸೆಯ ಸಾಕಾರಮೂರ್ತಿಯಾಗಿದ್ದ ಮಹಾತ್ಮ ಗಾಂಧೀಜಿಯವರು ಮಾತ್ರ ನಮ್ಮ ಕೈಹಿಡಿದು ಮುನ್ನಡೆಸಬಲ್ಲರು ಎಂದು ಹೇಳಿದ್ದಾರೆ.

ಸತ್ಯದ ಸತ್ವ ಪರೀಕ್ಷೆಯನ್ನು ಎದುರಿಸುತ್ತಿರುವ ಈಗಿನ ನನ್ನ ಹೋರಾಟಕ್ಕೆ ಕೂಡಾ ಬಾಪುವಿನ ಬದುಕು ಮತ್ತು ಚಿಂತನೆಗಳೇ ಧೈರ್ಯ, ಶಕ್ತಿ ಮತ್ತು ಭರವಸೆಯನ್ನು ನೀಡಿದೆ ಎಂದು ಹೇಳಿದ್ದಾರೆ.

ರಾಜಕೀಯ

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ಸಮುದಾಯದ ನಾಯಕರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ. ಒಳಮೀಸಲಾತಿಯನ್ನು ದಲಿತ ಸಮುದಾಯ ಒಮ್ಮತದಿಂದ ಒಪ್ಪಿಕೊಂಡು ಅನುಷ್ಠಾನಕ್ಕೆ ಬೆಂಬಲ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ” ಎಂದು ಹೇಳಿದ್ದಾರೆ.

“ಸಚಿವರಾದ  ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಮತ್ತು ಮಾಜಿ ಸಚಿವ ಹೆಚ್.ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ ಮತ್ತು ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಇಂದು ನನ್ನನ್ನು ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸಿದರು. ಒಳಮೀಸಲಾತಿ ಜಾರಿ ವಿಚಾರದಲ್ಲಿ ನನ್ನ ಬದ್ಧತೆಯನ್ನು ಅವರಿಗೆ ತಿಳಿಸಿದೆ.

ನಾನು, ನಮ್ಮ ಪಕ್ಷ ಮತ್ತು ನಮ್ಮ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಪರವಾದ ಖಚಿತ ಮತ್ತು ದೃಢ ನಿಲುವು ಇದೆ. ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿಯ ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ” ಎಂದಿದ್ದಾರೆ.

“ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕೆನೆಪದರದ ವಿಚಾರ ಪ್ರಸ್ತಾಪವಾಗಿರುವುದು ಕೆಲವರಲ್ಲಿ ಗೊಂದಲ ಉಂಟು ಮಾಡಿದೆ. ನ್ಯಾಯಾಲಯದ ತೀರ್ಪಿನ ವಿಶ್ಲೇಷಣೆಗೆ ನಾನು ಹೋಗುವುದಿಲ್ಲ. ನಾನು ಅರ್ಥಮಾಡಿಕೊಂಡಂತೆ ಒಳ ಮೀಸಲಾತಿ ಜಾರಿಗೊಳಿಸಲು ಕೆನೆಪದರದ ವಿಚಾರ ಅಡ್ಡಿಯಾಗಲಾರದು. ಕೆನೆಪದರದ ಬಗ್ಗೆ ಇಡೀ ದಲಿತ ಸಮುದಾಯದ ನಿಲುವೇ ನನ್ನ ನಿಲುವೂ ಆಗಿದೆ” ಎಂದು ಸ್ಪಷ್ಟ ಪಡಿಸಿದ್ದಾರೆ.

“ಭಾರತೀಯ ಜನತಾ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ವಿರೋಧಿಗಳಾದ ಈ ಬಿಜೆಪಿ ನಾಯಕರ ಈ ಕುಟಿಲತನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ದಲಿತ ಸಮುದಾಯಕ್ಕೆ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ” ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಇಂದು ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ.

ಇದೇ ವೇಳೆ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಗಳ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೆ ಹೈಕೋರ್ಟ್ ಸೂಚಿಸಿದ್ದು ಈ ಮೂಲಕ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನಂತರ ನ್ಯಾಯಮೂರ್ತಿಗಳು ಮಧ್ಯಂತರ ಆದೇಶ ನೀಡಿದರು.

ಸಾಮಾಜಿಕ ಹೋರಾಟಗಾರರಾದ ಸ್ನೇಹಮಯಿ ಕೃಷ್ಣ ಮತ್ತು ಟಿ.ಜೆ.ಅಬ್ರಹಾಂ ಅವರು ಸಲ್ಲಿಸಿರುವ ದೂರುಗಳ ಮುಂದಿನ ವಿಚಾರಣೆಯನ್ನು ಆಗಸ್ಟ್ 20 ಮತ್ತು 21ರಂದು ವಿಶೇಷ ನ್ಯಾಯಾಲಯದಲ್ಲಿ ಕ್ರಮವಾಗಿ ನಡೆಯಲಿದೆ ಎಂದು ಅರ್ಜಿದಾರರ ಪರ ವಕೀಲರು ಸೂಚಿಸಿದ ನಂತರ ಮಧ್ಯಂತರ ಆದೇಶವನ್ನು ನೀಡಲಾಗಿದೆ. ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ದೂರುದಾರರಾದ ಪ್ರತಿವಾದಿಗಳಿಗೆ ಕಾಲಾವಕಾಶ ನೀಡಲಾಗಿದೆ.

ರಾಜಕೀಯ

ಬೆಂಗಳೂರು: “ನೇರ ಭಾಗಿಯಾಗದ ಆರ್ಥಹೀನ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರನ್ನು ಯೋಜಿಸಿ ಸಿಲುಕಿಸಲಾಗಿದೆ.  ಈ ಮೂಲಕ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಘಿ ಪ್ರೇರಿತ ಪಕ್ಷಗಳು ಹೊರಟಿವೆ. ಇದು ಜಾತಿ ಹಾಗೂ ಕೋಮು ಭ್ರಷ್ಟರ ನಡೆಯಾಗಿದೆ” ಎಂದು ಕರ್ನಾಟಕ ಮುಸ್ಲಿಂ ಯುನಿಟಿ (KMU)ಯ ರಾಜ್ಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್ ಹೇಳಿದ್ದಾರೆ.

“ಜನಪರ ಆಡಳಿತವನ್ನು ಸಹಿಸಲಾರದೆ, ರಾಜ್ಯದಲ್ಲಿ ಕೋಮುವಾದಿಗಳು ಮತ್ತು ಜಾತಿವಾದಿ ಪಟ್ಟಭದ್ರ ಹಿತಾಸಕ್ತಿಗಳು ಅಧಿಕಾರದ ಖುರ್ಚಿಯ ಆಸೆಗಾಗಿ ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ. ಇದರ ಪ್ರೇರಣೆಯ ಭಾಗವಾಗಿಯೇ ರಾಜ್ಯಪಾಲರು ಈ ಆದೇಶವನ್ನು ನೀಡಿದ್ದಾರೆ ಎಂಬ ಗುಮಾನಿ ಪ್ರತಿ ಕರ್ನಾಟಕದ ಪ್ರಜೆಗೂ ಮೂಡಿದೆ” ಎಂದು ಹೇಳಿದ್ದಾರೆ.

“ಪ್ರಮುಖ ಹಾಗೂ ವಿಷೆಶವಾಗಿ ಶೋಷಿತ, ದಲಿತ, ಅಹಿಂದ, ಮುಖಂಡರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮೊದಲಿನಿಂದಲೂ ದೊಡ್ಡ ಮಟ್ಟದ ಷಡ್ಯಂತ್ರ ರೂಪಿಸಿದ್ದಾರೆ ಎಂಬುದು ಬಹಿರಂಗದ ಸತ್ಯದ ವಿಷಯ” ಎಂದು ಹೇಳಿದ್ದಾರೆ.

“ಈಗಾಗಲೇ ನಡೆಯುತ್ತಿರುವ ರಾಷ್ಟ್ರ ಮಟ್ಟದಲ್ಲಿ ಹಿಂದುಳಿದ ನಾಯಕರನ್ನು ಮೂಲೆಗುಂಪು ಮಾಡುವ ಪ್ರಕ್ರಿಯೆಯಲ್ಲಿ ಈಗ ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಿರುವುದರ ಹಿಂದೆ ಹಲವಾರು ರಾಜಕೀಯ ಕಾರಣಗಳಿವೆ.

ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಿ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ನಾಯಕತ್ವವನ್ನು ಕೊನೆಗಾಣಿಸಬಹುದು, ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಭವಿಷ್ಯದಲ್ಲಿ ಕರ್ನಾಟಕದ ರಾಜಕಾರಣದಿಂದ ಹಿಂದುಳಿದ ವರ್ಗಗಳನ್ನು ಅಧಿಕಾರದಿಂದ ದೂರ ಇಡಬಹುದು ಮತ್ತು ಸಿದ್ದರಾಮಯ್ಯರವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಆ ಮೂಲಕ ರಾಜ್ಯದ ಸಮಸ್ತ ಹಿಂದುಳಿದ ವರ್ಗಗಳು ಅಧಿಕಾರ ನಡೆಸಲು ಅಸಮರ್ಥರು ಎಂದು ಬಿಂಬಿಸಬಹುದು ಎನ್ನುವ ಹುನ್ನಾರದಿಂದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಮತ್ತು ವಾಲ್ಮೀಕಿ ನಿಗಮದ ವಿವಾದದಲ್ಲಿ ಅವರ ಹೆಸರನ್ನು ತಳಕು ಹಾಕಲಾಗುತ್ತಿದೆ; ಇದು ಖಂಡನೀಯ. ಅಲ್ಲದೆ ಇದು ಕೋಮುವಾದಿ ರಾಜಕೀಯದ ಭಾಗವೇ ಆಗಿದೆ” ಎಂದು ಕಿಡಿಕಾರಿದ್ದಾರೆ.

“ತಮ್ಮ ಮೇಲಿನ ಆರೋಪಕ್ಕೆ ಸ್ವತಃ ತಮ್ಮ ಸರಕಾರದಲ್ಲೇ ತನಿಖಾ ಆಯೋಗವನ್ನು ರಚಿಸಿರುವ ದೇಶದ ಏಕೈಕ ರಾಜಕಾರಣಿ ಸಿದ್ದರಾಮಯ್ಯ. ಇದು ಪ್ರತಿ ಅಹಿಂದ ವರ್ಗಗಳ ಹೆಮ್ಮೆಯು ಕೂಡ” ಎಂದು ಶ್ಲಾಘಿಸಿದ್ದಾರೆ.

“ಹಿಂದೆಯೂ ಸಹ ಹಿಂದುಳಿದ ವರ್ಗಗಳ ನಾಯಕರಾದ ದೇವರಾಜ ಅರಸು, ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರಂಸಿಂಗ್ ಮತ್ತಿತರರ ವಿರುದ್ಧ ಇಂತಹುದೇ ಷಡ್ಯಂತ್ರಗಳನ್ನು ರೂಪಿಸಲಾಗಿತ್ತು. ಆದರೆ, ಅಂದಿನ ಅಂತಹ ಅಹಿಂದ ವಿರೋಧಿ ಕುತಂತ್ರಗಳು ಇಂದು ನಡೇಯುವುದಿಲ್ಲ. ಇಂದು ಮುಸ್ಲಿಂ, ದಲಿತ, ಶೋಷಿತ ಸಮುದಾಯಗಳು ಜಾಗೃತವಾಗಿವೆ. ಎಂಬುದನ್ನು ಕರ್ನಾಟಕದ ಕೋಮುವಾದಿ ಹಾಗೂ ಜಾತಿವಾದಿ ಶಕ್ತಿಗಳು ಆರಿಯ ಬೇಕಿದೆ.

ಹಿಂದುಳಿದ ವರ್ಗದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವ ನಾಯಕರು ಈ ಮಟ್ಟದ ಕೊಳಕು ಹಾಗೂ ಅಪ್ರಬುದ್ಧ ರಾಜಕೀಯಕ್ಕೆ ಇಳಿದಿರುವುದು ನಾಚಿಕೆಗೇಡಿನ ಸಂಗತಿ. ಇಂತಹ ಹಿಂದುಳಿದ, ದಲಿತ, ಅಲ್ಪಸಂಖ್ಯಾತ, ಶೋಷಿತರ ವಿರೋಧಿಗಳಿಗೆ ತಕ್ಕ ಪಾಠವನ್ನು ಕಲಿಸುವ ಅನಿವಾರ್ಯತೆಯನ್ನು ನೀವೇ ರಾಜ್ಯದಲ್ಲಿ ನಿರ್ಮಾಣ ಮಾಡುತ್ತೀದ್ದೀರ” ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

“ರಾಜ್ಯ ಸರ್ಕಾರವನ್ನು ಅಸ್ಥಿರ ಗೊಳಿಸಿ, ಸಿದ್ದರಾಮಯ್ಯರವರನ್ನು ದುರ್ಬಲ ಗೊಳಿಸುವ ಈ ನೀಚ ಕುತಂತ್ರವನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರತಿ ತಾಲೂಕುಗಳಲ್ಲೂ ಹೋರಾಟ ನಡೆಸಲಾಗುವುದು” ಎಂದು ಹೇಳಿದ್ದಾರೆ.

“ಸಾಂವಿಧಾನಿಕ ಹುದ್ದೆಯಲ್ಲಿರುವ ಮಾನ್ಯ ರಾಜ್ಯಪಾಲರು ಒಂದು ರಾಜಕೀಯ ಪಕ್ಷದ ಪ್ರತಿನಿದಿಯಂತೆ ವರ್ತಿಸುತ್ತಿರುವುದು ಅಕ್ಷಮ್ಯ ಹಾಗೂ ಸಂವಿಧಾನ ವಿರೋಧಿಯಾಗಿದೆ. ಇದು ಪ್ರಜಾಪ್ರಭುತ್ವದ ನಡೆಯಲ್ಲ” ಎಂದು ಖಂಡಿಸಿದ್ದಾರೆ.  

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿಯು ರಾಜಕೀಯ ಪ್ರೇರಿತವಾಗಿ ಮಾಡಿರುವ ಸುಳ್ಳು ಆರೋಪವನ್ನೇ ಆಧಾರವಾಗಿಟ್ಟುಕೊಂಡು, ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ವಾಗಿದೆ. ಇದನ್ನು ಕರ್ನಾಟಕ ಮುಸ್ಲಿಂ ಯುನಿಟಿ (KMU) ಖಂಡಿಸುತ್ತದೆ” ಎಂದು ಹೇಳಿದ್ದಾರೆ.

“ಬಿಜೆಪಿ ಮತ್ತು ಮಿತ್ರಪಕ್ಷದ ಹತ್ತಾರು ಹಗರಣಗಳ ತನಿಖೆಗೆ ಅನುಮತಿ ಕೋರಿರುವ ಕಡತಗಳು ರಾಜಭವನದಲ್ಲಿ ವರ್ಷಗಳಿಂದ ಬಾಕಿ ಉಳಿದಿದ್ದರೂ ರಾಜ್ಯಪಾಲರು ಯಾಕೆ ತಲೆ ಕೆಡಿಸಿಕೊಂಡಿಲ್ಲ? ಎಂಬ ನಾಗರೀಕರ ಪ್ರಶ್ನೆಗೆ ರಾಜಭವನ ಉತ್ತರಿಸಬೇಕಿದೆ.

ರಾಜಭವನ ಕೇಸರೀಕರಣ ಗೊಳ್ಳಬಾರದು ಮತ್ತು ರಾಜ್ಯಪಾಲರು ಒಂದು ಪಕ್ಷದ ಏಜೆಂಟ್ ರಂತೆ ವರ್ತಿಸಬಾರದು. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಮೂಲಕ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಬೆಲೆ ನೀಡಬೇಕು ಎಂಬುದು ನಮ್ಮ ಆಗ್ರಹವಾಗಿದೆ” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ವಿರುದ್ಧದ ಅನ್ಯಾಯ, ಸಂವಿಧಾನ ವಿರೋಧಿ, ಸಂವಿಧಾನದ ಮೂಲ ಆಶಯಗಳಿಗೆ ಧಕ್ಕೆತರುವ ರಾಜ್ಯಪಾಲರ ಈ ನಡೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸುತ್ತದೆ” ಎಂದು ಕರ್ನಾಟಕ ಮುಸ್ಲಿಂ ಯುನಿಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಖಾಸಿಂ ಸಾಬ್ ಹೇಳಿದ್ದಾರೆ.  

ರಾಜ್ಯ

78ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ನಾಡಿನ ಜನತೆಗೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದೇಶ!

ಆತ್ಮೀಯ ಬಂಧುಗಳೆ, ನಾಡಿನ ಸಮಸ್ತ ಜನತೆಗೆ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು.

ಸ್ವಾತಂತ್ರ್ಯದ ಅರಿವು ಮತ್ತು ದೇಶದ ಮೇಲಿನ ಅಭಿಮಾನದ ಕಿಚ್ಚನ್ನು ಹೊತ್ತಿಸಿದ್ದು ರಾಷ್ಟ್ರೀಯ ಚಳುವಳಿ. ಅದರ ನೇತೃತ್ವವನ್ನು ಹೊತ್ತಿದ್ದು ಮಹಾತ್ಮ ಗಾಂಧೀಜಿಯವರ ಮುಂದಾಳತ್ವದ ರಾಷ್ಟ್ರೀಯ ಕಾಂಗ್ರೆಸ್. ಈ ರಾಷ್ಟ್ರೀಯ ಚಳುವಳಿಯ ಭದ್ರ ಬುನಾದಿ ಮೇಲೆ ರೂಪುಗೊಂಡಿದ್ದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ್ದ ಭಾರತದ ಸಂವಿಧಾನ ಮತ್ತು ಅದನ್ನು ಆಧರಿಸಿದ ಪ್ರಜಾಪ್ರಭುತ್ವ.

ಸ್ವಾತಂತ್ರ್ಯೋತ್ಸವ ಎನ್ನುವುದು ಕೇವಲ ಸಂಭ್ರಮಾಚರಣೆಯ ದಿನ ಆಗಬಾರದು, ಇದು ಪ್ರಜೆಗಳಾದ ನಮ್ಮೆಲ್ಲರ ಕರ್ತವ್ಯವನ್ನು ನೆನಪು ಮಾಡಿಕೊಳ್ಳುವ ದಿನವೂ ಆಗಬೇಕು.

ಪ್ರಜೆಗಳಾಗಿ ನಾವು ಪ್ರತಿಕ್ಷಣವೂ ಜಾಗೃತರಾಗಿದ್ದು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದಮನ ಮಾಡುವ ದುಷ್ಟಶಕ್ತಿಗಳ ಕುಟಿಲ ಪ್ರಯತ್ನವನ್ನು ವಿಫಲಗೊಳಿಸಿ ಅದನ್ನು ರಕ್ಷಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ.

ಈ ಕರ್ತವ್ಯದ ಪಾಲನೆಯೇ ನಿಜವಾದ ದೇಶಭಕ್ತಿ, ಇದು ತ್ಯಾಗ-ಬಲಿದಾನದ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಮ್ಮ ಹಿರಿಯರಿಗೆ ಸಲ್ಲಿಸುವ ಗೌರವವೂ ಹೌದು.

ದೇಶಭಕ್ತಿ ಎನ್ನುವುದು ನನ್ನ ಪಾಲಿಗೆ ಕೇವಲ ರಾಜಕೀಯ ಬೂಟಾಟಿಕೆಯ ಘೋಷಣೆ ಅಲ್ಲ. ಅದು ನಾಡಿನ ಪ್ರತಿಯೊಬ್ಬ ಪ್ರಜೆಯ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ದಿ ಹಾಗೂ ಸಾಮಾಜಿಕ ಸಾಮರಸ್ಯದ ರಕ್ಷಣೆಯ ಹೊಣೆಗಾರಿಕೆಯ ಸಂಕಲ್ಪ.

ಈ ಹೊಣೆಗಾರಿಕೆಯನ್ನು ಪ್ರಾಮಾಣಿಕವಾಗಿ ನೆರವೇರಿಸಿ ರಾಜ್ಯದ ಜನರ ಶ್ರೇಯೋಭಿವೃದ್ಧಿ ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕೆ ಎದುರಾಗುವ ಸವಾಲುಗಳಿಂದ ಕುಗ್ಗುವ, ಜಗ್ಗುವ ಇಲ್ಲವೇ ಹಿಮ್ಮೆಟ್ಟುವ ಪ್ರಶ್ನೆಯೇ ಇಲ್ಲ. ಈ ಹೋರಾಟದ ಕೆಚ್ಚಿಗೆ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಬದುಕೇ ದೊಡ್ಡ ಸ್ಪೂರ್ತಿ.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನಾವು ಎದುರಿಸಿದ್ದ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂದು ಸಾಧ್ಯವಾಗಿದೆ ಎಂದು ಹೇಳಲು ಹೆಮ್ಮೆ ಎನಿಸುತ್ತಿದೆ. ಬಡತನ, ಅನಕ್ಷರತೆ, ನಿರುದ್ಯೋಗ ಸಮಸ್ಯೆಗಳನ್ನು ಯಶಸ್ವಿಯಾಗಿ ಎದುರಿಸಿದ್ದೇವೆ. ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬನೆಯನ್ನು ಸಾಧಿಸಿದ್ದೇವೆ.

ಆದರೆ ಜಾತಿ ಮತ್ತು ಧರ್ಮದ ಸೋಗಿನಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಸಾಮರಸ್ಯವನ್ನು ಕೆಡಿಸುವ ಪ್ರಯತ್ನ ನಮ್ಮ ಅಭಿವೃದ್ಧಿಯ ಓಟಕ್ಕೆ ತೊಡರುಗಾಲಾಗಿದೆ. ಇಂತಹ ಪ್ರಯತ್ನಗಳನ್ನು ಭಂಗಗೊಳಿಸಿ ಶರಣರು, ಸಂತರು, ಸೂಫಿಗಳು, ದಾರ್ಶನಿಕರು ಜನ್ಮ ತಳೆದ ನಮ್ಮ ಕನ್ನಡನಾಡನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ.

ನಮ್ಮ ರಾಜ್ಯದ ಸರ್ವರನ್ನೂ ಒಳಗೊಂಡ ಸುಸ್ಥಿರ ಅಭಿವೃದ್ಧಿ ಮಾದರಿ ಇಂದು “ಕರ್ನಾಟಕ ಮಾದರಿ’ ಎಂದು ದೇಶಪ್ರಸಿದ್ಧವಾಗಿದೆ ಎಂದು ಹೇಳಲು ನನಗೆ ಹೆಮ್ಮೆ ಅನಿಸುತ್ತಿದೆ. ನಮ್ಮ ರಾಜ್ಯ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿಯನ್ನು ಸಾಧಿಸಿದ್ದು, ಹಲವು ಕ್ಷೇತ್ರಗಳಲ್ಲಿ ದೇಶಕ್ಕೆ ಮಾದರಿಯಾಗಿದೆ. ವಿಜ್ಞಾನ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ.

ಮೂಲಸೌಕರ್ಯಗಳ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ, ಕೈಗಾರಿಕಾ ಅಭಿವೃದ್ಧಿ, ಕೌಶಾಲ್ಯಾಭಿವೃದ್ಧಿ, ಆರೋಗ್ಯ, ಶಿಕ್ಷಣ, ಸಮಾಜ ಕಲ್ಯಾಣ, ಉದ್ಯೋಗ ಸೃಷ್ಟಿ, ಜನಸ್ನೇಹಿ ಆಡಳಿತ ನಮ್ಮ ಕನಸು ಮಾತ್ರವಲ್ಲ; ಇದೇ ಗುರಿಯಾಗಿದೆ. ಈ ಗುರಿ ಸಾಧನೆಯತ್ತ ಮುನ್ನಡೆಯುವುದೇ ನಮ್ಮ ಧ್ಯೇಯವಾಗಿದೆ.

ಸಾರ್ವತ್ರಿಕ ಕನಿಷ್ಠ ಆದಾಯ (Universal Basic Income) ಪರಿಕಲ್ಪನೆಯಲ್ಲಿ, ಎಲ್ಲರಿಗೂ ಬದುಕಲು ಬೇಕಾದಷ್ಟು ಆದಾಯ ಸಿಗಬೇಕು ಎಂಬ ಕಾರಣದಿಂದಲೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಬೆಲೆ ಏರಿಕೆ, ನಿರುದ್ಯೋಗದಿಂದ ತತ್ತರಿಸಿರುವ ಜನತೆಗೆ ಇವು ಆರ್ಥಿಕ ಶಕ್ತಿಯನ್ನು ನೀಡುತ್ತಿವೆ. ಅದರಲ್ಲೂ ನೇರವಾಗಿ ಹಣಕಾಸಿನ ನೆರವು ಒದಗಿಸುವ ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳು ಸಾರ್ವತ್ರಿಕ ಕನಿಷ್ಠ ಆದಾಯ ಮಾದರಿಯ ಕಲ್ಯಾಣ ಯೋಜನೆಗಳಾಗಿವೆ.

ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆಗಳು ಲಿಂಗ ಸಮಾನತೆಯತ್ತ ದೃಢ ಹೆಜ್ಜೆಯನ್ನು ಇರಿಸಿದೆ. ದುಡಿಮೆ ಮಾಡುತ್ತಿರುವ ಮಹಿಳೆಯರಿಗೂ ಅವರ ಖರ್ಚಿನ ದೊಡ್ಡ ಮೊತ್ತವನ್ನು ಉಳಿಸಿ, ಅವರ ಆರ್ಥಿಕ ಸ್ವಾತಂತ್ರ್ಯವನ್ನು ಹೆಚ್ಚಿಸಿದೆ.

ಗ್ಯಾರಂಟಿ ಯೋಜನೆಗಳಿಗೆ ಕಳೆದ ವರ್ಷ ನಾವು 36 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಿದ್ದೇವೆ. ಈ ವರ್ಷ ಈ ಯೋಜನೆಗಳಿಗೆ 52 ಸಾವಿರ ಕೋಟಿ ರೂಪಾಯಿ ನಿಗದಿಪಡಿಸಿದ್ದೇವೆ. ಕರ್ನಾಟಕದ ಈ ಯೋಜನೆ ದೇಶಕ್ಕೆ ಮಾದರಿ ಎಂದರೆ ಖಂಡಿತಾ ಅತಿಶಯೋಕ್ತಿಯಾಗಲಾರದು.

ಕಳೆದ ವರ್ಷ ಅನಾವೃಷ್ಟಿಯಿಂದಾಗಿ ನಮ್ಮ ರೈತರು ಸಂಕಷ್ಟ ಎದುರಿಸಬೇಕಾಯಿತು. ಕೇಂದ್ರ ಸರ್ಕಾರ ನೆರವು ನೀಡದಿದ್ದರೂ, ರೈತರ ನೆರವಿಗೆ ನಾವು ಕೈಜೋಡಿಸಿದ್ದೇವೆ. ಬೆಳೆ ನಷ್ಟ ಅನುಭವಿಸಿದ 38,58,737 ರೈತರಿಗೆ ಒಟ್ಟಾರೆಯಾಗಿ 3454.22 ಕೋಟಿ ರೂಪಾಯಿ ಬೆಳೆಹಾನಿ ಪರಿಹಾರ ವಿತರಿಸಲಾಗಿದೆ.

ಪ್ರಸ್ತುತ ಅತಿ ಮಳೆಯಿಂದಾಗಿ ತೊಂದರೆಗೊಳಗಾದ ಜನತೆಯ ನೆರವಿಗೆ ಸರ್ಕಾರ ಧಾವಿಸಿದೆ. ಅತಿವೃಷ್ಟಿಯಿಂದ ಪೂರ್ಣವಾಗಿ ಮನೆ ಕಳೆದುಕೊಂಡವರಿಗೆ 1 ಲಕ್ಷ 20 ಸಾವಿರ ರೂಪಾಯಿ ಪರಿಹಾರ ಒದಗಿಸುವುದರೊಂದಿಗೆ ಮನೆಯನ್ನು ನಿರ್ಮಿಸಿ ಕೊಡಲು ನಾವು ನಿರ್ಧರಿಸಿದ್ದೇವೆ.

ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ಚೇತೋಹಾರಿಯಾಗಿದ್ದರೆ, ಆರ್ಥಿಕ ಅಭಿವೃದ್ಧಿಯೆಡೆಗಿನ ನಮ್ಮ ಕಾರ್ಯಕ್ರಮಗಳು, ಪ್ರಯತ್ನಗಳು ಸ್ಥಿರತೆ ತರುವ ಸಾಧನಗಳಾಗಿವೆ. ನಮ್ಮ ರಾಜ್ಯ ಹೂಡಿಕೆದಾರರ ನೆಚ್ಚಿನ ತಾಣವಾಗಿದ್ದು, 2023-24ನೇ ಸಾಲಿನಲ್ಲಿ 54,427  ಕೋಟಿ ರೂಪಾಯಿ ವಿದೇಶಿ ಬಂಡವಾಳ ಹೂಡಿಕೆ ಆರ್ಕಷಿಸುವುದರೊಂದಿಗೆ ದೇಶದಲ್ಲಿ 3ನೇ ಸ್ಥಾನದಲ್ಲಿದೆ.

ಪ್ರಸ್ತುತ ಸಾಲಿನಲ್ಲಿ ರಾಜ್ಯದಲ್ಲಿ ವಿವಿಧ ಸಂಸ್ಥೆಗಳೊಂದಿಗೆ 42,915 ಕೋಟಿ ರೂಪಾಯಿ ಹೂಡಿಕೆಗೆ 13 ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಇದರಿಂದ ರಾಜ್ಯದಲ್ಲಿ 22,600 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ರಾಜ್ಯದ ವಾಣಿಜ್ಯ ವಹಿವಾಟು ಕ್ಷೇತ್ರ ಅತ್ಯಂತ ಬಲಿಷ್ಠವಾಗಿದೆ. 2023-24ನೇ ಸಾಲಿನಲ್ಲಿ ರಾಜ್ಯವು 1,66,545 ಮಿಲಿಯನ್ ಯುಎಸ್ ಡಾಲರ್ ಮೊತ್ತದ ರಫ್ತು ಮಾಡಿ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ.

ರಾಜ್ಯದ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಈ ಬಾರಿ ಹೆಚ್ಚಿನ ಅನುದಾನ ಒದಗಿಸಲಾಗಿದೆ. ಎತ್ತಿನ ಹೊಳೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಈವರೆಗೆ 855.02 ಕೋಟಿ ರೂಪಾಯಿ,  ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರಡಿ 151.16 ಕೋಟಿ ರೂಪಾಯಿ ವೆಚ್ಚ ಭರಿಸಲಾಗಿದೆ.

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ಪಿ.ಎಂ.ಜಿ.ಎಸ್.ವೈ, ನಮ್ಮ ಗ್ರಾಮ ನಮ್ಮ ರಸ್ತೆ ಮತ್ತು ವಿಶೇಷ ಅಭಿವೃದ್ಧಿ ಯೋಜನೆಗಳಡಿ ಒಟ್ಟು 803 ಕಿಮೀ ಉದ್ದದ ರಸ್ತೆಯನ್ನು 463.11 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ಶೋಷಿತರ ಅಭಿವೃದ್ಧಿ ನಮ್ಮ ಬದ್ಧತೆ. ಸ್ವಾತಂತ್ರ್ಯದ ಫಲವನ್ನು ಸಮಾಜದ ಕಟ್ಟಕಡೆಯ ಪ್ರಜೆಗೂ ತಲುಪಿಸುವುದು ನಮ್ಮ ಕನಸು. ಈ ನಿಟ್ಟಿನಲ್ಲಿ ಸರ್ಕಾರ ಯೋಜನಾಬದ್ಧವಾಗಿ ಹೆಜ್ಜೆ ಇರಿಸುತ್ತಿದೆ.

ದುರ್ಬಲ ಹಾಗೂ ಶೋಷಿತ ಸಮುದಾಯಗಳ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಸತಿ ಶಾಲೆಗಳು, ಹಾಸ್ಟೆಲುಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ನಮ್ಮ ಗುರಿ ಸ್ಪಷ್ಟವಾಗಿದೆ. ಬುದ್ಧ, ಬಸವಾದಿ ಶರಣರು, ಡಾ.ಬಾಬಾ ಸಾಹೇಬ್ ಅಂಬೇಡ್ಕರ್, ನಾರಾಯಣ ಗುರು, ಸಾವಿತ್ರಿ ಬಾಯಿ ಪುಲೆಯಂತಹ ಮಹಾನರು, ದಾರ್ಶನಿಕರು ತೋರಿಸಿ ಕೊಟ್ಟ ಮಾನವೀಯತೆಯ ಹಾದಿಯಲ್ಲಿ ಮುನ್ನಡೆಯಲು ನಾವು ಪ್ರಯತ್ನಿಸುತ್ತಿದ್ದೇವೆ.

ಪ್ರಜಾಪ್ರಭುತ್ವವನ್ನು ಉಳ್ಳವರ ಆಡುಂಬೊಲವನ್ನಾಗಿಸಲು ನಾವು ಎಂದಿಗೂ ಅವಕಾಶ ಕೊಡುವುದಿಲ್ಲ. ಸಂವಿಧಾನವೇ ನಮಗೆ ಮಾರ್ಗದರ್ಶಕ. ಇಲ್ಲಿ ಎಲ್ಲರೂ ಸಮಾನರು. ಸರ್ವಜನ ಕಲ್ಯಾಣವೇ ಪ್ರಜಾಪ್ರಭುತ್ವದ ಅಂತಿಮ ಗುರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಕಲ್ಯಾಣ ಕಾರ್ಯಕ್ರಮಗಳ ಲಾಭ ದೊರೆಯಬೇಕೆಂಬ ತುಡಿತ ನಮ್ಮ ಸರ್ಕಾರದ ಪ್ರತಿಯೊಂದು ನಡೆಯಲ್ಲೂ ಸ್ಪಷ್ಟವಾಗಿ ಗುರುತಿಸಬಹುದು.

ಸಾಮಾಜಿಕ ಸಮಾನತೆ, ಆರ್ಥಿಕ ಸ್ವಾತಂತ್ರ್ಯ, ಪ್ರತಿಯೊಬ್ಬರಿಗೂ ನೆಮ್ಮದಿಯಿಂದ, ಗೌರವದಿಂದ ಬದುಕುವ ವಾತಾವರಣ ಕಲ್ಪಿಸಲು ನಾವು ಬದ್ಧರಾಗಿದ್ದೇವೆ. ಜನಕಲ್ಯಾಣದ ಬಗ್ಗೆ ನಮ್ಮ ನಿಲುವು, ದಾರಿ ಅತ್ಯಂತ ಸ್ಪಷ್ಟವಾಗಿದೆ.

ಸಾವಿರಾರು ಭಾಷೆಗಳು, ನೂರಾರು ಧರ್ಮಗಳು, ವೈವಿಧ್ಯಮಯ ಆಚಾರ ವಿಚಾರಗಳು, ಸಂಸ್ಕೃತಿ ಮೇಳೈಸಿರುವ ನಮ್ಮ ದೇಶ ಸಮೃದ್ಧ ನಾಗರಿಕತೆಯ ತೊಟ್ಟಿಲು. ಪರಸ್ಪರ ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆಯನ್ನು ನಮಗೆ ಯಾರೂ ಕಲಿಸಿಕೊಡಬೇಕಾದ ಅಗತ್ಯವಿಲ್ಲ. ಇವು ಕೇವಲ ಬಾಯಿಮಾತಿನ ಸವಕಲು ಪದಗಳಲ್ಲ. ಸಾವಿರಾರು ವರ್ಷಗಳಿಂದ ನಾವು ಇದನ್ನು ಪಾಲಿಸಿಕೊಂಡು ಬಂದಿದ್ದೇವೆ.

ಈ ಸಾಮಾಜಿಕ ಮೌಲ್ಯಗಳಿಗೆ ಕುಂದುಂಟು ಮಾಡುವ ಶಕ್ತಿಗಳ ವಿರುದ್ಧ ಸದಾ ಜಾಗೃತರಾಗಿರಬೇಕಾಗಿದೆ. ಸ್ವಾತಂತ್ರ್ಯದ ಈ ಸಂಭ್ರಮದ ಸಂದರ್ಭದಲ್ಲಿ ಪರಸ್ಪರ ಸಾಮರಸ್ಯ, ಸೌಹಾರ್ದವನ್ನು ಇನ್ನಷ್ಟು ಬಲಪಡಿಸುವ, ಆ ಮೂಲಕ ದಾರ್ಶನಿಕರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯುವ ಸಂಕಲ್ಪ ಮಾಡಬೇಕಾಗಿದೆ.

ಸಾವಿರಾರು ಮಹನೀಯರ ಹೋರಾಟ, ತ್ಯಾಗ, ಪರಿಶ್ರಮಗಳ ಫಲವನ್ನು ನಾವು ಇಂದು ಉಣ್ಣುತ್ತಿದ್ದೇವೆ. ಇಂದು ನಮ್ಮ ಕೈಯಲ್ಲಿರುವ ಸ್ವಾತಂತ್ರ್ಯದ ದೀವಿಗೆಯನ್ನು ಮುಂದಿನ ತಲೆಮಾರಿಗೆ ಜತನದಿಂದ ತಲುಪಿಸುವ ಅತ್ಯಂತ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.

ಈ ಹೊಣೆಗಾರಿಕೆಯನ್ನು ಅರಿತುಕೊಂಡು ನಾವು ಮುನ್ನಡೆಯಬೇಕಿದೆ. ನಾಡಿನ ಸಮಸ್ತರಿಗೂ ಮತ್ತೊಮ್ಮೆ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರುತ್ತೇನೆ. ಜೈ ಹಿಂದ್, ಜೈ ಕರ್ನಾಟಕ” ಎಂದು ಹೇಳಿದ್ದಾರೆ.

ರಾಜಕೀಯ

ಮೈಸೂರು: ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಹೇಳಿದರು.

“ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ” ಎಂದು ಹೇಳಿದರು.

“ಮುಡಾ ಅಕ್ರಮವಾಗಿ ನಮ್ಮ ಜಮೀನನ್ನು ಸ್ವಾಧೀನ ಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ 2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ ಅರ್ಜಿ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ” ಎಂದು ಹೇಳಿದರು.

“ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ” ಎಂದು ಕಿಡಿಕಾರಿದರು.

“ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ” ಎಂದು ಹೇಳಿದರು.

“ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ” ಎಂದು ಗುಡುಗಿದರು.

ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂಬ ವಿಶ್ವಾಸವಿದೆ” ಎಂದು ಹೇಳಿದರು.

ರಾಜಕೀಯ

ಮೈಸೂರು: “ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಬಿಜೆಪಿ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಅಪಾದಿಸಿದರು.

“ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ” ಎಂದು ಕಿಡಿಕಾರಿದರು.

“ನಿನ್ನೆ ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು ನಾನು ಸಭೆಗೆ ಹೋಗದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟೀಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟೀಸನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ” ಎಂದು ಹೇಳಿದರು.

“ಕೆ.ಜೆ.ಅಬ್ರಹಾಂ ಅವರ ಇತಿಹಾಸ ನೋಡಿದರೆ ಅವರೊಬ್ಬ ಬ್ಲಾಕ್ ಮೇಲರ್ ಎಂದು ಗೊತ್ತಾಗುತ್ತದೆ. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ.

ಅಬ್ರಹಾಂ ಅವರು ಜುಲೈ 26 ರಂದು ಬೆಳಿಗ್ಗೆ 11.30ಕ್ಕೆ ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರ ಬೆಂಬಲದಿಂದ ಆಯ್ಕೆಯಾದ ಮುಖ್ಯಮಂತ್ರಿಗೆ ನೋಟೀಸು ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಏನು ನೋಡದೇ ಆತುರವಾಗಿ ನಿರ್ಧಾರ ಮಾಡಿದ್ದಾರೆ. ಅಂದೇ ನೋಟೀಸು ನೀಡಿದ್ದಾರೆ” ಎಂದು ಕಿಡಿಕಾರಿದರು.

“ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಗೆ ವಿಶೇಷ ಕರ್ತವ್ಯಾಧಿಕಾರಿ ಪ್ರಭು ಶಂಕರ್ ಎಂಬುವರು ಕರೆ ಮಾಡಿ ಶೋಕಾಸ್ ನೋಟಿಸ್ ಸಿದ್ಧವಿದೆ ತೆಗೆದುಕೊಳ್ಳಬೇಕು ಎಂದಿದ್ದಾರೆ. ರಾತ್ರಿಯಾಗಿರುವುದರಿಂದ ಅದನ್ನು ಪಡೆಯಲಾಗಲಿಲ್ಲ. ಮಾರನೇ ದಿನ 2.00 ಗಂಟೆಗೆ ನೋಟೀಸನ್ನು ಆತುರವಾಗಿ ಕೊಟ್ಟಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ಇಂದ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? ನನ್ನ ತಪ್ಪು ಏನೂ ಇಲ್ಲದೆ ಇದ್ದರೂ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

“ರಾಜ್ಯಪಾಲರಿಗೆ ಸಲಹೆ ನೀಡಬೇಕಿರುವುದು ನಮ್ಮ ಮಂತ್ರಿಮಂಡಲದವರು; ನಾವು ಸಲಹೆ ನೀಡಿಲ್ಲ. ಮುಖ್ಯ ಕಾರ್ಯದರ್ಶಿಗಳು ವಿವರವಾದ ಪತ್ರವನ್ನು ಜುಲೈ 26 ರಂದು ಸಂಜೆ 6.30 ಗಂಟೆಗೆ ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಅದನ್ನೂ ಅವರು ನೋಡಿಲ್ಲ. ಮೂಡಾ ಪ್ರಕರಣದ ಬಗ್ಗೆ ನ್ಯಾಯಾಂಗ ಆಯೋಗವನ್ನು ಜುಲೈ 14 ರಂದು ಸರ್ಕಾರ ರಚಿಸಿದೆ; ಆಯೋಗದ ವರದಿಯನ್ನು ನಿರೀಕ್ಷಿಸಲಾಗಿದೆ. ತನಿಖೆ ನಡೆಸಿ ತಪ್ಪುಗಳಾಗಿದ್ದರೆ ವರದಿ ಸಲ್ಲಿಸುತ್ತಾರೆ. ಅದನ್ನೂ ಪರಿಗಣಿಸದೆ ರಾಜ್ಯಪಾಲರು ನೋಟೀಸು ನೀಡಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿಯವರುಗಳ ಮೇಲೆ ವರ್ಷಗಟ್ಟಲೇ ಇಂದ ದೂರಿದೆ. ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ? ನನ್ನ ತಪ್ಪು ಏನೂ ಇಲ್ಲದೆ ಇದ್ದರೂ ಅನಗತ್ಯವಾಗಿ ಈ ರೀತಿ ಮಾಡುತ್ತಿದ್ದಾರೆ” ಎಂದು ಹೇಳಿದರು.

“ರಾಜ್ಯಪಾಲರ ನೋಟೀಸಿನಿಂದ ಆರ್.ಅಶೋಕ್ ಅವರು ಹೆದರಿರಬಹುದು, ನನಗೆ ಯಾಕೆ ಹೆದರಿಕೆಯಾಗಬೇಕು? ಕಾನೂನಿನ ರೀತ್ಯಾ ಅವರು ನೋಟೀಸು ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪು ಮಾಡಿಲ್ಲ” ಎಂದು ಪುನರುಚ್ಚಿಸಿದರು.

“ಬಿಜೆಪಿ ಪಾದಯಾತ್ರೆ ಮಾಡುವ ಬಗ್ಗೆ ನಮ್ಮ ಅಭ್ಯಂತರವಿಲ್ಲ. ಕೇಂದ್ರ ಸಚಿವರು ಹಾಗೂ ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಪಾದಯಾತ್ರೆ ಬೇಡ ಎಂದರು. ಮಳೆ ಹೆಚ್ಚಾಗಿದೆ, ಜಲಾಶಯಗಳು ತುಂಬಿ ಪ್ರವಾಹ ಬಂದಿದೆ ಅದರ ಕಡೆಗೆ ಗಮನ ನೀಡಬೇಕೆಂದು ಹೇಳಿದರು. ಈಗ ಅದು ಮರೆತುಹೋಯಿತೇ? ಹಾಗಾದರೆ ಅವರು ಈಗ ಸ್ವ ಇಚ್ಛೆಯಿಂದ ಮಾಡುತ್ತಿಲ್ಲ ಎಂದಾಯಿತು” ಎಂದು ಲೇವಡಿ ಮಾಡಿದರು.

“ಮಳೆಯಿಂದ ಮನೆ ಬಿದ್ದಿರುವುದು, ರಸ್ತೆ ಹಾಳಾಗಿರುವುದು, ಸೇತುವೆಗಳು, ವಿದ್ಯುತ್ ಕಂಬಗಳು ಬಿದ್ದಿರುವುದ್ದರ ಬಗ್ಗೆ ವರದಿ ತರಿಸಲಾಗುತ್ತಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಎಸ್.ಡಿ.ಆರ್.ಎಫ್ ಮಾರ್ಗಸೂಚಿ ಪ್ರಕಾರ ಎಷ್ಟು ಕೊಡಬೇಕೋ ಅಷ್ಟು ಪರಿಹಾರ ನೀಡಿ ಮನೆಯನ್ನೂ ಕಟ್ಟಿಕೊಡಲಾಗುವುದು” ಎಂದು ಮಳೆ ಸಂತ್ರಸ್ತರಿಗೆ ಭರವಸೆ ನೀಡಿದರು.

ರಾಜಕೀಯ

ಬೆಂಗಳೂರು: ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಸಿದ್ದರಾಮಯ್ಯ ನವರೇ.. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮೂಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ ‘ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ?’ ‘ಸುಳ್ಳು ಸಂಶೋಧಕ ಸಿದ್ದರಾಮಯ್ಯ’ನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು ನನ್ನ ಮೇಲೆ, ಇನ್ನಿತರರ ಮೇಲೆ ಸಿಡಿಸಲು ಹೊರಟು ಲಜ್ಜೆಗೇಡಿತನದ ಪರಮಾವಧಿ ಮೆರೆದಿದ್ದೀರಿ ಎಂದು ಕಿಡಿಕಾರಿದ್ದಾರೆ.

‘ಮೂಡಾ ಭೂಮಿಯನ್ನು ಮುಖ್ಯಮಂತ್ರಿ ಕುಟುಂಬ ಮುಕ್ಕಿ ತಿಂದಿದೆ’ ಎಂದು ಇಡೀ ದೇಶ ಮಾತನಾಡುತ್ತಿದೆ. ದಾಖಲೆಗಳು ಹಾದಿಬೀದಿಯಲ್ಲಿ ಹೊರಳಾಡುತ್ತಿವೆ! ನಿಮ್ಮ ಸಮಾಜವಾದಿ ಮುಖವಾಡ, ಅಹಿಂದಾ ಅಲಂಕಾರ, ಸತ್ಯವಂತನ ಸಿಂಗಾರ.. ಇದೆಲ್ಲವೂ ಕಳಚಿಬಿದ್ದಿದೆ. ಅಸಹ್ಯವಾಗುವಷ್ಟು ಅನಾಚಾರ ಮಾಡಿ ಅಹಿಂದ ರಕ್ಷಣೆ ಪಡೆಯಲು ಯತ್ನಿಸುತ್ತಿರುವ ನಿಮ್ಮ ಅಸಹಾಯತೆ ನನಗೆ ಅರ್ಥವಾಗುತ್ತದೆ. ಪಾಪ.. ನಿಮ್ಮ ಪಕ್ಷದವರೇ ನಿಮಗೆ ‘ಶರಪಂಜರ’ ಸೃಷ್ಟಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಕುಮಾರಸ್ವಾಮಿ ರಾಜ್ಯಕ್ಕೆ ಕೈಗಾರಿಕೆ ತರಲಿ, ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎನ್ನುತ್ತೀರಿ. ಅದು ನನಗೆ ಗೊತ್ತಿದೆ. ನಾನು ಕೇಂದ್ರ ಸಚಿವನಾಗಿ ಇನ್ನೂ ಎರಡು ತಿಂಗಳಾಗಿಲ್ಲ. ರಾಜ್ಯದ ಕೆಲಸ ಮಾಡೋಣ ಎಂದರೆ ನಿಮ್ಮ ಅಸಹಕಾರ, ಅಸೂಯೆ ಅಡ್ಡಿ. ಒಂದು ನಾಲಿಗೆ ಮೇಲೆ ಸಹಕಾರ, ಅಸಹಕಾರ.. ಇದು ಹೇಗೆ ಸಾಧ್ಯ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

ಎರಡು ಮುಖ, ಎರಡು ನಾಲಿಗೆ, ಎರಡು ವ್ಯಕ್ತಿತ್ವ, ಎರಡು ನೀತಿ.. ನಿಮ್ಮ ಐಡಿಯಾಲಜಿ! ಆ ಸಿದ್ದಾಲಜಿ (Siddalogy) ನನಗೆ ಗೊತ್ತಿಲ್ಲದಲ್ಲ ಸಿದ್ದರಾಮಯ್ಯನವರೇ.. ರಾಜ್ಯಕ್ಕೆ ಒಳ್ಳೆಯದಾಗಲಿ ಎನ್ನುವ ಆಶಯ ಇರಲಿ, ನನ್ನ ಮೇಲೆ ಅಸೂಯೆ ಏಕೆ? ನಿಮ್ಮ ಸಕಲ ಗುಣಗಳ ಸಿದ್ದಾಲಜಿ ನನಗೆ ಚೆನ್ನಾಗಿಯೇ ಗೊತ್ತಿದೆ ಎಂದು ಹೇಳಿದ್ದಾರೆ.

ರಾಜ್ಯ ಶಿಕ್ಷಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಅವರಿಗೆ ಧನ್ಯವಾದಗಳು” ಎಂದು ಹೇಳಿದರು.

“ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗಲು ಸಾಧ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ” ಎಂದು ಹೇಳಿದರು.

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ರಾಜ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಇಂದು ವಿಧಾನಸೌಧದಲ್ಲಿ ಭೇಟಿಯಾಗಿ ಅಭಿನoದನೆ ಸಲ್ಲಿಸಿದರು.

ಆಗಸ್ಟ್‌ 1 ರಿಂದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿ ಮಾಡುವುದಾಗಿ ನಿರ್ಧರಿಸಲಾಗಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗ ವರದಿ ಜಾರಿ ಕುರಿತು ಸಂಪುಟ ಒಪ್ಪಿಗೆ ಸೂಚಿಸಿತ್ತು.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನoದನೆ ಸಲ್ಲಿಸಿದರು. ಉಪಮುಖ್ಯಮಂತ್ರಿಗಳಾದ  ಡಿ.ಕೆ.ಶಿವಕುಮಾರ್ ಹಾಗೂ ಸಂಘದ ಪದಾಧಿಕಾರಿಗಳು ಈ ವೇಳೆ ಹಾಜರಿದ್ದರು.