ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಅಮಿತ್ ಶಾ Archives » Page 4 of 4 » Dynamic Leader
October 23, 2024
Home Posts tagged ಅಮಿತ್ ಶಾ (Page 4)
ರಾಜಕೀಯ

ಡಿ.ಸಿ.ಪ್ರಕಾಶ್ ಸಂಪದಕರು

ಕರ್ನಾಟಕದಲ್ಲಿ ತಮಿಳು ಭಾಷಿಕರು ಸುಮಾರು 1 ಕೋಟಿಗೂ ಮಿಗಿಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಆನೇಕಲ್, ಮಹದೇವಪುರ, ಕೆ.ಆರ್.ಪುರಂ, ಸಿ.ವಿ.ರಾಮನ್ ನಗರ, ಸರ್ವಜ್ಞ ನಗರ, ಪುಲಿಕೇಶಿನಗರ, ಶಿವಾಜಿನಗರ, ಶಾಂತಿನಗರ, ಬಿಟಿಎಂ ಲೇಔಟ್, ಜಯನಗರ, ಚಿಕ್ಕಪೇಟೆ, ಚಾಮರಾಜ ಪೇಟೆ, ಗಾಂಧಿನಗರ, ರಾಜಾಜಿನಗರ, ಯಶವಂತಪುರ ಹಾಗೂ ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು, ಮೈಸೂರು, ಹನೂರು, ಚಾಮರಾಜನಗರ, ಕೊಳ್ಳೇಗಾಲ, ಹಾಗೂ ಕೆಜಿಎಫ್ ಮುಂತಾದ 23 ಕ್ಷೇತ್ರಗಳಲ್ಲಿ ತಮಿಳರ ಮತಗಳೇ ನಿರ್ಣಾಯಕ.

ದಶಕಗಳ ಹಿಂದೆ ಈ ಕ್ಷೇತ್ರಗಳಲ್ಲಿ ತಮಿಳುನಾಡು ಮೂಲದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷದ ಅಭ್ಯರ್ಥಿಗಳು ಚುನಾವಣೆಗಳಲ್ಲಿ ಸ್ಪರ್ದಿಸುತ್ತಿದ್ದರು. ರಾಷ್ಟ್ರಮಟ್ಟದಲ್ಲಿ ಆಗುತ್ತಿರುವ ರಾಜಕೀಯ ಬದಲಾವಣೆಗಳು ಮತ್ತು ಎನ್‌ಡಿಎ ಹಾಗೂ ಯೂಪಿಎ ಮೈತ್ರಿ ಪಕ್ಷಗಳ ಕೋರಿಕೆಯ ಮೇರೆಗೆ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ಇಲ್ಲಿನ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿ ಚುನಾವಣೆಯಿಂದ ಹಿಂದೆ ಸರಿದವು.

ಯೂಪಿಎ ಮೈತ್ರಿ ಕೂಟದಲ್ಲಿರುವ ಡಿಎಂಕೆ ಮತ್ತು ಸಿದಂಬರಂ ಲೋಕಸಭಾ ಸದಸ್ಯ ತೋಲ್ ತಿರುಮಾವಳವನ್ ನೇತೃವದ “ವಿಡುದಲೈ ಚಿರುತ್ತೈಗಳ್” ಪಕ್ಷಕ್ಕೆ ಕರ್ನಾಟಕದಲ್ಲಿ ಶಾಖೆಗಳಿವೆ. ಮತ್ತು ಅಪಾರವಾದ ಕಾರ್ಯಕರ್ತರಿದ್ದಾರೆ. ವಿಚಾರವಾದಿ ಪೆರಿಯಾರ್ ರವರ ಅನುಯಾಯಿಗಳು ಸಾವಿರಾರು ಸಂಖ್ಯೆಯಲ್ಲಿದ್ದಾರೆ. ಇವರೆಲ್ಲರೂ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ. ಸಿಪಿಐ ಮತ್ತು ಸಿಪಿಐ(ಎಂ) ಪಕ್ಷಗಳು ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವುದಾಗಿ ಈಗಾಗಲೇ ಘೋಷಣೆ ಮಾಡಿದೆ.

ಆದರೆ, ಎನ್‌ಡಿಎ ಮೈತ್ರಿ ಮೈತ್ರಿಕೂಟದಲ್ಲಿರುವ ಎಐಎಡಿಎಂಕೆ ಪಕ್ಷವು, ಮಾಜಿ ಮುಖ್ಯಮಂತ್ರಿಗಳಾದ ಎಡಪ್ಪಾಡಿ ಪಳನಿಸ್ವಾಮಿ, ಒ.ಪನ್ನೀರ್ ಸೆಲ್ವಂ, ಶಶಿಕಲಾ ಮತ್ತು ಟಿಟಿವಿ ದಿನಕರನ್ ಮುಂತಾದವರ ನಾಯಕತ್ವದ ಕಚ್ಚಾಟದಿಂದ ನಾಲ್ಕು ಭಾಗಗಳಾಗಿ ಹೊಡೆದೋಗಿದೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಮೈತ್ರಿಕೂಟದಲ್ಲಿರುವ ಬಿಜೆಪಿ ಈಗ ಹೊರಗೆ ನಿಂತು ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಪಕ್ಷವನ್ನು ಬಾಯಿಗೆ ಬಂದಂತೆ ವಿಮರ್ಶೆ ಮಾಡಿಕೊಂಡು ತಿರುಗಾಡುತ್ತಿದೆ. ಈರೋಡು ಉಪ ಚುನಾವಣೆಯಿಂದ ಎಐಎಡಿಎಂಕೆ ಮತ್ತು ತಮಿಳುನಾಡು ಬಿಜೆಪಿಯ ಸಂಬಂಧ ಅಷ್ಟೇನು ಸರಿಯಾಗಿಲ್ಲ.

ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ, ಆಡಳಿತ ರೂಡ ಡಿಎಂಕೆ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವ ಜೊತೆಯಲ್ಲೇ ಮಿತ್ರ ಪಕ್ಷವಾದ ಎಐಎಡಿಎಂಕೆ ಪಕ್ಷದ ನಾಯಕರುಗಳನ್ನೂ ವಿಮರ್ಶೆ ಮಾಡುತ್ತಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ‘ದಿನನಿತ್ಯ ಪತ್ರಿಕೆಗಳಲ್ಲಿ, ಟಿ.ವಿ.ವಾಹಿನಿಗಳಲ್ಲಿ ಹಾಗೂ ಸಾಮಾಜಿಕ ಮಾದ್ಯಮಗಳಲ್ಲಿ ಸುದ್ದಿಯಾಗಬೇಕು ಎಂಬುದಕ್ಕಾಗಿ ಸಾಕ್ಷ್ಯದಾರ ವಿಲ್ಲದ ವಿಷಯಗಳನ್ನು ಮುನ್ನಲೆಗೆ ತಂದು ಅಣ್ಣಾಮಲೈ ಮಾತನಾಡುತ್ತಿದ್ದಾರೆ’ ಎಂದು ಅಲ್ಲಿನ ದಿಎಂಕೆ ನಾಯಕರು ಹೇಳುತ್ತಿದ್ದಾರೆ. 2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಲ್ಲಿನ ಬಿಜೆಪಿ ಪಕ್ಷವು ಸುಮಾರು 2.62% ಮತಗಳನ್ನು ಮಾತ್ರವೇ ಪಡೆದಿತ್ತು. ಆದರೆ, ಅಲ್ಲಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತಮಿಳುನಾಡಿನಲ್ಲಿ ಪ್ರಬಲವಾದ ವಿರೋಧ ಪಕ್ಷ ನಾವೇ ಎಂದು ಎಲ್ಲಡೆಯೂ ಹೇಳಿಕೊಂಡು ಬರುತ್ತಿದ್ದಾರೆ. ತನ್ನನ್ನು ಎಂಜಿಆರ್, ಜಯಲಲಿತಾ ಹಾಗೂ ಕರುಣಾನಿಧಿ ಅವರೊಂದಿಗೆ ಹೋಲಿಕೆ ಮಾಡಿ ಮಾತನಾಡಿ ಎಲ್ಲರ ನಗೆಪಾಟಿಗೆ ಕಾರಣರಾಗಿದ್ದಾರೆ.

‘ರಫೇಲ್ ಕೈಗಡಿಯಾರದ ಬಿಲ್ಲಿನ ವಿಚಾರದಲ್ಲಿ ನಕಲಿ ರಶೀದಿಯನ್ನು ತೋರಿಸಿ, ದಿನಕ್ಕೊಂದು ಮಾತನಾಡುತ್ತಿದ್ದಾರೆ’ ಎಂದು ಅಲ್ಲಿನ ಜನ ಆಕ್ರೋಶವನ್ನು ವ್ಯಕ್ತಪಡಿಸಿ, ಶೋಷಿಯಲ್ ಮೀಡಿಯಾದಲ್ಲಿ ಮನಸ್ಸಿಗೆ ಬಂದಂತೆ ಮೀಮ್ಸ್ ಗಳನ್ನು ಹಾಕಿ ಕೀಟಲೆ ಮಾಡುತ್ತಿರುವುದು ದಿನನಿತ್ಯದ ಟ್ರೆಂಡಿಂಗ್ ಆಗಿದೆ. ‘ರಫೇಲ್ ವಾಚ್‌ಗೆ ಬಿಲ್ಲನ್ನು ಕೇಳಿದರೆ, ಅದಕ್ಕೆ ಪ್ರತಿಯುತ್ತರವಾಗಿ ಡಿಎಂಕೆ ಸರ್ಕಾರದ ಭ್ರಷ್ಟಾಚಾರಗಳನ್ನು ಏಪ್ರಿಲ್ ಒಂದರಂದು ಬಯಲುಗೊಳಿಸುತ್ತೇನೆ ಎಂದು ಹೇಳಿ, ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಕೆಲವರ ಆಸ್ತಿ ಪಟ್ಟಿಯನ್ನು ತೋರಿಸಿ, ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಅವರ ಮಂತ್ರಿಮಂಡಲದ ಸಹದ್ಯೋಗಿಗಳು ರೂ.1,343,170,000,000 ಕೋಟಿಯಷ್ಟು ಭ್ರಷ್ಟಾಚಾರ ಮಾಡಿದ್ದಾರೆ’ ಎಂದು ಹೇಳುತ್ತಿದ್ದಾರೆ’ ಎಂದು ಅಲ್ಲಿಂದ ವರದಿಗಳು ಹೇಳುತ್ತಿದೆ. ಇದನ್ನೇ ಕಾಯುತ್ತಿದ್ದ ಡಿಎಂಕೆ ಪಕ್ಷವು ಸಂಘಟನಾ ಕಾರ್ಯದರ್ಶಿ ಆರ್.ಎಸ್.ಭಾರತಿಯ ಮೂಲಕ ತಕ್ಷಣ ಅಣ್ಣಮಲೈಗೆ ಲೀಗಲ್ ನೋಟೀಸ್ ಕಳುಹಿಸಿ, ‘ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಅವರ ಕುಟುಂಬ ಸದಸ್ಯರು ಮತ್ತು ಡಿಎಂಕೆ ನಾಯಕರ ವಿರುದ್ಧ ಇತ್ತೀಚಿಗೆ ಮಾಡಿದ ಭಾಷಣ ಮತ್ತು ಭ್ರಷ್ಟಾಚಾರ ಆರೋಪಗಳಿಗಾಗಿ ಸಾರ್ವಜನಿಕವಾಗಿ ಬೇಷರತ್ ಕ್ಷಮೆಯಾಚಿಸಬೇಕು ಮತ್ತು 48 ಗಂಟೆಗಳ ಒಳಗೆ 500 ಕೋಟಿ ರೂಪಾಯಿಗಳ ನಷ್ಟವನ್ನು ಪಾವತಿಸಬೇಕು. ಅದನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು’ ಎಂದು ಲೀಗಲ್ ನೋಟಿಸ್ ಕಳುಹಿಸಿತು.

ಕೆಲವು ದಿನಗಳ ಹಿಂದೆ ಮಾತನಾಡಿದ ಅಣ್ಣಾಮಲೈ ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಮೈತ್ರಿಯನ್ನು ಮುಂದುವರಿಸಿದರೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಗರ್ವದಿಂದ ಕೇಂದ್ರದ ಬಿಜೆಪಿ ವರಿಷ್ಠರಿಗೆ ಬೆದರಿಕೆಯ ಸಂದೇಶವನ್ನು ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ‘ಮುಂದಿನ ಚುನಾವಣೆ ಎಐಎಡಿಎಂಕೆ ಜೊತೆಯಲ್ಲೇ’ ಎಂದು ಪ್ರತಿಕ್ರಿಯೆ ನೀಡಿದರು. ಇಷ್ಟಕ್ಕೆ ತನ್ನಗಾಗದ ಅಣ್ಣಾಮಲೈ ‘ಡಿಎಂಕೆ ಮಾತ್ರವಲ್ಲ ತಮಿಳುನಾಡಿನಲ್ಲಿ ಅಧಿಕಾರ ಚಲಾಯಿಸಿದ ಹಿಂದಿನ ಪಕ್ಷಗಳ ಭ್ರಷ್ಟಾಚಾರವನ್ನೂ ಬಯಲಿಗೆಳೆಯುತ್ತೇನೆ’ ಎಂದು ಎಐಎಡಿಎಂಕೆ ಪಕ್ಷಕ್ಕೆ ದಮಕಿ ಹಾಕಿದರು. ಇದರಿಂದ ಎಐಎಡಿಎಂಕೆ ಮತ್ತು ಬಿಜೆಪಿಯ ಸಂಬಂಧ ಅಳಸಿಹೋಗಿರುವುದು ಸುಳ್ಳೇನಲ್ಲ. ಇವರ ನಡವಳಿಕೆಯಿಂದ ಬೇಸತ್ತ ತಮಿಳುನಾಡು ಬಿಜೆಪಿಯ ರಾಜ್ಯಮಟ್ಟದ ಪದಾಧಿಕಾರಿಗಳು ಸುಮಾರು ಜನ ಪಕ್ಷವನ್ನು ತೊರೆದು ಬೇರೆ ಬೇರೆ ಪಕ್ಷಗಳಲ್ಲಿ ಸೇರಿಕೊಳುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಎನ್‌ಡಿಎ ಮಿತ್ರ ಪಕ್ಷವಾದ ಎಐಎಡಿಎಂಕೆ, ಕರ್ನಾಟಕದಲ್ಲಿ ತಮಿಳರ ಪ್ರಾಬಲ್ಯವಿರುವ ಕಡೆಗಳಲ್ಲಿ ಸ್ಪರ್ದಿಸಲು 4 ರಿಂದ 6 ಕ್ಷೇತ್ರಗಳನ್ನು ಒದಗಿಸಿಕೊಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಕೇಳಿತ್ತು. ಆದರೆ ಇದಕ್ಕೆ ಅಮಿತ್ ಶಾ ಒಪ್ಪಿಗೆ ನೀಡಲಿಲ್ಲವೆಂದು ಹೇಳಲಾಗುತ್ತಿದೆ. ಇದರಿಂದ ರೊಚ್ಚಿಗೆದ್ದ ಎಐಎಡಿಎಂಕೆ ಕೊನೆಯ ಕ್ಷಣದಲ್ಲಿ ಪುಲಿಕೇಶಿನಗರದಲ್ಲಿ ತಮ್ಮ ಅಭ್ಯರ್ಥಿ ಟಿ.ಅನ್ಬರಸನ್ ಅವರನ್ನು ಕಣಕ್ಕಿಳಿಸಿ ತಮ್ಮ ಪ್ರತಿರೋಧವನ್ನು ವ್ಯಕ್ತ ಪಡಿಸಿತು. ಈಗ ಬಿಜೆಪಿ ವರಿಷ್ಠರ ಕೋರಿಕೆಯ ಮೇರೆಗೆ ಅಲ್ಲಿ ತಮ್ಮ ಅಭ್ಯರ್ಥಿಯನ್ನು ವಾಪಸ್ಸು ಪಡೆದುಕೊಂಡಿದೆ.

ಬೆಂಗಳೂರು ನಗರದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕೆಂದು ಕಾರ್ಯತಂತ್ರ ರೂಪಿಸಿರುವ  ಬಿಜೆಪಿಗೆ, ತಮಿಳುನಾಡು ಬಿಜೆಪಿ ಅಧ್ಯಕ್ಷ ಹಾಗೂ ಕರ್ನಾಟಕ ಚುನಾವಣೆ ಸಹ ಉಸ್ತುವಾರಿಯಾದ ಅಣ್ಣಾಮಲೈ ಅವರಿಂದ ತಮಿಳರ ಪ್ರಾಬಲ್ಯವಿರುವ 23 ಕ್ಷೇತ್ರಗಳಲ್ಲಿ ತಮಿಳರ ಮತಗಳು ಕೈತಪ್ಪಿ ಹೋಗುವುದು ಬಹುತೇಕ ಖಚಿತವಾಗಿದೆ. ಕಾರಣ ಇಲ್ಲಿನ ಬಹುಪಾಲು ತಮಿಳರು ಇನ್ನು ಡಿಎಂಕೆ, ಎಐಎಡಿಎಂಕೆ, ವಿಡುದಲೈ ಚಿರುತ್ತೈಗಳ್, ದ್ರಾವಿಡರ್ ಕಳಗಂ ಹಾಗೂ ದ್ರಾವಿಡರ್ ವಿಡುದಲೈ ಕಳಗಂ ಮೂಂತಾದ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಉಳಿದವರಲ್ಲಿ ಹೆಚ್ಚಿನವರು ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಇದ್ದಾರೆ. ಬಿಜೆಪಿಯಲ್ಲಿ ಬೆರಳೆನಿಕೆಯ ತಮಿಳರೆ ಇದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಡಿಎಂಕೆ ವರಿಷ್ಠ ದಿವಂಗತ ಎಂ.ಕರುಣಾನಿಧಿ ಅವರ ಆಡಳಿತಾವದಿಯಲ್ಲಿ ಬೆಂಗಳೂರಿನಲ್ಲಿ ತಿರುವಳ್ಳುವರ್ ಪ್ರತಿಮೆ ಹಾಗೂ ಚೆನ್ನೈನಲ್ಲಿ ಸರ್ವಜ್ಞರ ಪ್ರತಿಮೆಯನ್ನು ಸ್ಥಾಪಿಸಲಾಯಿತು. ಇದರಿಂದ ಕರ್ನಾಟಕದಲ್ಲಿ ಯಡಿಯೂರಪ್ಪನವರ ಮೇಲೆ ಇಲ್ಲಿನ ತಮಿಳರು ಅಪಾರವಾದ ಗೌರವವನ್ನು ಇಟ್ಟಿದ್ದರು. ಈಗ ಅಣ್ಣಾಮಲೈಯಿಂದ ಅದೂ ಇಲ್ಲದಂತೆ ಆಗಿದೆ. ತಮಿಳುನಾಡಿನಲ್ಲಿರುವ ಆಡಳಿತ ಪಕ್ಷವಾದ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳನ್ನು ಹಾಗೂ ವಿರೋಧ ಪಕ್ಷವಾದ ಎಐಎಡಿಎಂಕೆಯನ್ನು ಕಟುವಾಗಿ ಟೀಕಿಸಿಕೊಂಡು ಇಲ್ಲಿಗೆ ಬಂದು ತಮಿಳರಲ್ಲಿ ಮತ ಕೇಳಿದರೆ ಯಾರುತಾನೇ ಓಟು ನೀಡುತ್ತಾರೆ.        

ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ಖಲಿಸ್ತಾನ್ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸುತ್ತಿರುವ ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಮುಖಂಡ ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪೊಲೀಸರ ಈ ಕ್ರಮದಿಂದ ಅಮೆರಿಕ, ಆಸ್ಟ್ರೇಲಿಯಾದಂತಹ ದೇಶಗಳಲ್ಲಿ ನೆಲೆಸಿರುವ ಖಲಿಸ್ತಾನ್ ಬೆಂಬಲಿಗರು ಆಕ್ರೋಶಗೊಂಡಿದ್ದಾರೆ. ಲಂಡನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ದಾಳಿ ಮಾಡಿದ ಖಲಿಸ್ತಾನದ ಬೆಂಬಲಿಗರು, ಭಾರತದ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಖಲಿಸ್ತಾನದ ಧ್ವಜವನ್ನು ಹಾರಿಸುಲು ಮಾಡಿದ ದಾಂದಲೆಗಳನ್ನು ನಾವು ನೋಡಿದೆವು. ಅದೇ ರೀತಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಉಪ ರಾಯಭಾರಿ ಕಚೇರಿ ಮೇಲೆಯೂ ಖಲಿಸ್ತಾನ್ ಬೆಂಬಲಿಗರು ದಾಳಿ ನಡೆಸಿದ್ದಾರೆ. ಅಮೃತಪಾಲ್ ಸಿಂಗ್ ಅವರನ್ನು ಬೆಂಬಲಿಸಿ ಕೆಲವರು ಆಸ್ಟ್ರೇಲಿಯಾ ಸಂಸತ್ತಿನ ಮುಂದೆಯೂ ಪ್ರತಿಭಟನೆ ನಡೆಸಿದ್ದಾರೆ.

ಲಂಡನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ

ಅಮೃತಪಾಲ್ ಸಿಂಗ್ ಅವರನ್ನು ಬಂಧಿಸಲು ಕಳೆದ ವಾರ ಪೊಲೀಸರು ಮುಂದಾದರು. ಆದರೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅಮೃತಪಾಲ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಕಾರಿನಿಂದ ಇಳಿದು ಬೈಕ್ ನಲ್ಲಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಂದೆಡೆ, ಅಮೃತಪಾಲ್ ಅವರನ್ನು ಪೊಲೀಸರು ಬಂದಿಸಿದ್ದಾರೆ ಎಂದು  ಹೇಳುವ ಅವರ ಬೆಂಬಲಿಗರು, ಅಮೃತಪಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಆಲಿಸಿದ ನ್ಯಾಯಾಧೀಶರು, ‘ಪಂಜಾಬ್ ರಾಜ್ಯದ 80,000 ಪೊಲೀಸರನ್ನು ಧಿಕ್ಕರಿಸಿ ಪರಾರಿಯಾಗುವುದು ಹೇಗೆ ಎಂದು ಪ್ರಶ್ನಿಸಿದರು. ಹಾಗಿದ್ದಲ್ಲಿ, ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ’ ಎಂದ ನ್ಯಾಯಾಧೀಶರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ನ್ಯಾಯಾಲಯದ ಟೀಕೆ ಹಿನ್ನೆಲೆಯಲ್ಲಿ ಪೊಲೀಸರು ಶೋಧ ಕಾರ್ಯವನ್ನು ತೀವ್ರಗೊಳಿಸಿದ್ದಾರೆ. ಆರು ವಿಭಿನ್ನ ನೋಟಗಳಲ್ಲಿ ಅಮೃತಪಾಲ್ ಸಿಂಗ್ ಅವರ ಛಾಯಾಚಿತ್ರಗಳನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ ಶಾಂತಿ, ಸೌಹಾರ್ದತೆಗೆ ಭಂಗ ತಂದ ಆರೋಪದ ಮೇಲೆ 154 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಪಾಲ್ ಮತ್ತು ಅವರ ಕೆಲವು ಬೆಂಬಲಿಗರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹಾಕಲಾಗಿದೆ. ಅಮೃತಪಾಲ್ ಅವರ ಕೆಲವು ಬಂಧಿತ ಬೆಂಬಲಿಗರನ್ನು ಭದ್ರತಾ ಕಾರಣಗಳಿಗಾಗಿ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿ ಇರಿಸಲಾಗಿದೆ. ಅಮೃತಪಾಲ್ ಸಿಂಗ್ ಅವರ ತವರು ಗ್ರಾಮ ಜಲ್ಲುಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಅಸ್ಸಾಂನ ದಿಬ್ರುಗಢ ಜೈಲ್

ಅಮ್ಜಲಂದರ್ ಪ್ರದೇಶದಲ್ಲಿ ಯಾರೂ ಗಮನಿಸದೆ ನಿಲ್ಲಿಸಿದ್ದ ಇಸುಜು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರಿನಿಂದ ಪಿಸ್ತೂಲ್, ಕತ್ತಿ ಮತ್ತು ವಾಕಿಟಾಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದಿರಾಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಖಲಿಸ್ತಾನ್ ಚಳವಳಿ ಆರಂಭಿಸಿ ಹಿಂಸಾಚಾರದಲ್ಲಿ ತೊಡಗಿದ್ದ ಭಿಂದ್ರನ್ ವಾಲೆ ಸೇನೆಯ ಕಾರ್ಯಾಚರಣೆಯಲ್ಲಿ ಹತರಾಗಿದ್ದರು. ಇಂತಹ ಪರಿಸ್ಥಿತಿಯ ಭೀತಿ ಈಗ ಪಂಜಾಬ್ ಜನರಲ್ಲಿ ಮೂಡಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಪೊಲೀಸ್ ಹಾಗೂ ಅರೆಸೇನಾ ಪಡೆಗಳು ಪಥಸಂಚಲನ ನಡೆಸಿ ಜನರ ಆತಂಕವನ್ನು ದೂರ ಮಾಡಿದೆ.

‘ಅಕಲ್ ತಖ್ತ್’ ಎಂಬ ಸಿಖ್ ಸಂಘಟನೆಯು ಪಂಜಾಬ್‌ನಲ್ಲಿ ಭಯೋತ್ಪಾದಕ ಪರಿಸ್ಥಿತಿಯನ್ನು ಸೃಷ್ಟಿಸಬೇಡಿ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕೇಳಿಕೊಂಡಿದೆ. ಪಂಜಾಬ್ ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಚರ್ಚಿಸಲು ಅಕಲ್ ತಖ್ತ್ ಸಂಘಟನೆಯು ಇತರ ಸಿಖ್ ಸಂಘಟನೆಗಳನ್ನು ಆಹ್ವಾನಿಸಿದೆ. ಅದರಂತೆ ಮಾರ್ಚ್ 27 ರಂದು ಸಿಖ್ ಸಂಘಟನೆಗಳ ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ತಿಳಿಸಲಾಗಿದೆ.

ಫೆಬ್ರವರಿ 23 ರಂದು ಅಮೃತಪಾಲ್ ಸಿಂಗ್ ಅವರ ಬೆಂಬಲಿಗರು ಅಜ್ನಾಲಾ ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ ನಂತರ, ಕೇಂದ್ರ ಸರ್ಕಾರವು ಪಂಜಾಬ್‌ನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲು ಪ್ರಾರಂಭಿಸಿದೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು. ರಾಷ್ಟ್ರದ ವಿರುದ್ಧ ಯಾವುದೇ ಶಕ್ತಿಗೆ ವರ್ತಿಸಲು ನಾವು ಬಿಡುವುದಿಲ್ಲ ಎಂದು ಭಗವಂತ್ ಸಿಂಗ್ ಮಾನ್ ಹೇಳಿದ್ದಾರೆ. ಪ್ರತ್ಯೇಕತಾವಾದಿ ಚಟುವಟಿಕೆಗಳ ವಿರುದ್ಧ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಕೈಜೋಡಿಸಿವೆ. ಯಾವುದೇ ಹಿಂಸಾಚಾರವಿಲ್ಲದೆ ಶಾಂತಿ ನೆಲೆಸಬೇಕು ಎಂಬುದು ಪಂಜಾಬ್ ಜನತೆಯ ಆಶಯವಾಗಿದೆ.

ದೇಶ

ನವದೆಹಲಿ: ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ  ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೆಪ್ಟೆಂಬರ್ 7 ರಂದು ಭಾರತ್ ಜೋಡೋ ಯಾತ್ರೆಯನ್ನು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಆರಂಭಿಸಿದ್ದರು. ತರುವಾಯ, ಯಾತ್ರೆಯು ವಿವಿಧ ರಾಜ್ಯಗಳಲ್ಲಿ ಸಂಚರಿಸಿ ಇಂದು ಕಾಶ್ಮೀರದಲ್ಲಿ ನಡೆಯುತ್ತಿದೆ.

ಜನವರಿ 30ರಂದು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಯಾತ್ರೆ ಮುಕ್ತಾಯವಾಗಲಿದೆ. ರಾಹುಲ್ ಗಾಂಧಿ ಅಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಖರ್ಗೆಯವರು 21 ಪಕ್ಷಗಳ ನಾಯಕರುಗಳಿಗೆ ಆಹ್ವಾನ ನೀಡಿದ್ದಾರೆ.

ಈ ಸಂದರ್ಭದಲ್ಲಿ ನಿನ್ನೆ (ಜನವರಿ 27) ಕಾಶ್ಮೀರದಲ್ಲಿ ಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಅಲ್ಲಿ ಭದ್ರತಾ ಕರ್ತವ್ಯಕ್ಕೆ ಪೊಲೀಸರು ಇಲ್ಲದ ಕಾರಣ ಪಾದಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.

‘ಜನಸಂದಣಿಯನ್ನು ನಿಯಂತ್ರಿಸಬೇಕಾದ ಪೊಲೀಸರು ಎಲ್ಲೂ ಕಾಣಲಿಲ್ಲ. ನಾವು ಸುರಂಗವನ್ನು ದಾಟಿದ ನಂತರ, ಪೊಲೀಸ್ ಭದ್ರತೆಗೆ ಅಡ್ಡಿಯಾಯಿತು. ಭದ್ರತೆ ಕೊರತೆಯಾಗಿದೆ’ ಎಂದು ರಾಹುಲ್ ಆರೋಪಿಸಿದ್ದರು.

ಈ ಹಿನ್ನಲೆಯಲ್ಲಿ ಖರ್ಗೆಯವರು ಅಮಿತ್ ಶಾ ಅವರಿಗೆ ಪತ್ರವೊಂದನ್ನು ಬರೆದು, ‘ಇಂದು ಮತ್ತು ನಾಳೆ ಎರಡು ದಿನ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ಸಾದ್ಯತೆಯಿದೆ.

ಜನವರಿ 30 ರಂದು ಶ್ರೀನಗರದಲ್ಲಿ ನಡೆಯುವ ಸಮಾರೋಪ ಸಮಾರಂಭದಲ್ಲಿ ಹೆಚ್ಚಿನ ಜನರು ಸೇರುತ್ತಾರೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಈ ವಿಚಾರದಲ್ಲಿ ನೀವು ತಕ್ಷಣ ಮಧ್ಯಪ್ರವೇಶಿಸಿ, ಶ್ರೀನಗರದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭಕ್ಕೆ ಹೆಚ್ಚಿನ ರೀತಿಯಲ್ಲಿ ಭದ್ರತೆಯನ್ನು ಒದಗಿಸಲು ಅಧಿಕಾರಿಗಳಿಗೆ ಸೂಕ್ತ ಆದೇಶ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದ ಖರ್ಗೆಯವರು ‘ಯಾತ್ರೆಯಲ್ಲಿ ಭದ್ರತೆಯ ಕೊರೆತೆಯಿದೆ’ ಎಂದು ಆಪಾದಿಸಿದ್ದರು. ಇದಕ್ಕೆ ಪ್ರತಿಯುತ್ತರ ನೀಡಿದ್ದ ಗೃಹ ಸಚಿವಾಲಯ, ‘ಯಾತ್ರೆಯಲ್ಲಿ ಭದ್ರತೆಯ ಕೊರತೆ ಇಲ್ಲ’ ಎಂದು ಹೇಳಿದ್ದು ಗಮನಾರ್ಹ.