ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಕಾಂಗ್ರೆಸ್ Archives » Dynamic Leader
October 19, 2024
Home Posts tagged ಕಾಂಗ್ರೆಸ್
ರಾಜಕೀಯ

ಹರಿಯಾಣ: ಜುಲಾನಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ 6000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಘೋಷಿಸಲಾಗಿದೆ. ಜಮ್ಮು-ಕಾಶ್ಮೀರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಬೆಳಗ್ಗೆ ಆರಂಭವಾಗಿದ್ದು, ಸದ್ಯಕ್ಕೆ ಬಿರುಸಿನಿಂದ ನಡೆಯುತ್ತಿದೆ.

ಇದರಲ್ಲಿ ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಿತು. ಬೆಳಗ್ಗೆಯಿಂದಲೇ ಈ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಅದರಲ್ಲಿ ಜುಲಾನಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಿದ್ದ ಸ್ಟಾರ್ ಅಭ್ಯರ್ಥಿ ಹಾಗೂ ಒಲಿಂಪಿಯನ್ ವಿನೇಶ್ ಫೋಗಟ್ ಬೆಳಗ್ಗೆಯಿಂದ ಮುನ್ನಡೆಯಲ್ಲಿದ್ದರು.

ಅದರ ನಂತರ, ಕೆಲಕಾಲ ಹಿನ್ನಡೆ ಅನುಭವಿಸಿದ ಅವರು ಮತ್ತೆ ಮುನ್ನಡೆ ಸಾಧಿಸಿದರು. ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪರವಾಗಿ ಸ್ಪರ್ಧಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್ ಅವರು ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಅವರನ್ನು 6 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.

ಅವರ ಗೆಲುವನ್ನು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಅಲ್ಲದೆ, ನಡೆಯುತ್ತಿರುವ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ ಎಂದು ವರದಿಗಳಾಗುತ್ತಿವೆ.

ದೇಶ ರಾಜಕೀಯ

ನವದೆಹಲಿ: ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್ ಬೆಲೆ ಏಕೆ ಕಡಿಮೆಯಾಗಿಲ್ಲ? ಎಂಬ ಪ್ರಶ್ನೆಯನ್ನು ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷ ಎತ್ತಿದೆ.

ಸಾರ್ವಜನಿಕ ವಲಯದ ತೈಲ ಕಂಪನಿಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಸ್ಥಿತಿಗತಿಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್‌ನ ದೇಶೀಯ ಬೆಲೆಗಳನ್ನು ಪ್ರತಿದಿನ ನಿಗದಿಪಡಿಸುತ್ತವೆ. ಕಳೆದ ಕೆಲವು ದಿನಗಳಿಂದ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಕಂಡು ಬರುತ್ತಿದ್ದರೂ ಪೆಟ್ರೋಲ್ ಡೀಸೆಲ್ ಬೆಲೆ ಯಾವುದೇ ಬದಲಾವಣೆಯಿಲ್ಲದೆ ಹೆಚ್ಚುತ್ತಲೇ ಇದೆ.

ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, “ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡದಿರುವುದು ಏಕೆ? ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಚ್ಚಾ ತೈಲ ಶೇ.32ರಷ್ಟು ಕುಸಿದಿದೆ. ಕಚ್ಚಾ ತೈಲ ಬೆಲೆಯಲ್ಲಿ 32.5% ಇಳಿಕೆಯಾಗಿದ್ದರೂ, ಬಿಜೆಪಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ನಿರಾಕರಿಸುತ್ತಿದೆ.

ಪ್ರಸ್ತುತ ಮಾರುಕಟ್ಟೆಯ ಸ್ಥಿತಿಗತಿಗಳ ಪ್ರಕಾರ, ಪೆಟ್ರೋಲ್ ಅನ್ನು ಲೀಟರ್‌ಗೆ ರೂ.48.27 ಮತ್ತು ಡೀಸೆಲ್‌ಗೆ ರೂ.69.00 ರಂತೆ ಮಾರಾಟ ಮಾಡಬೇಕು. 10 ವರ್ಷ 100 ದಿನಗಳಲ್ಲಿ ಬಿಜೆಪಿ ಸರ್ಕಾರ ಇಂಧನದ ಮೇಲೆ ತೆರಿಗೆ ವಿಧಿಸಿ ಜನರ 35 ಲಕ್ಷ ಕೋಟಿ ರೂಪಾಯಿ ಲೂಟಿ ಮಾಡಿದೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡದ ಬಿಜೆಪಿ ಸರ್ಕಾರವನ್ನು ಚುನಾವಣೆಯಲ್ಲಿ ಜನ ತಿರಸ್ಕರಿಸುತ್ತಾರೆ” ಎಂದು ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಪ್ರಶ್ನೆ:
ಈ ಬಗ್ಗೆ ಮಾತನಾಡಿರುವ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ (Derek O’Brien), “ಕಳೆದ 10 ವರ್ಷಗಳಲ್ಲಿ, ಕಚ್ಚಾ ತೈಲದ ಬೆಲೆ ತೀವ್ರವಾಗಿ ಕುಸಿದಿದ್ದರೂ, ಪೆಟ್ರೋಲ್ ಬೆಲೆ ಶೇ.30ರಷ್ಟು ಹೆಚ್ಚಾಗಿದೆ. ಇದರಿಂದ ತೈಲ ಕಂಪನಿಗಳು ಹೆಚ್ಚಿನ ಲಾಭ ಪಡೆಯುತ್ತವೆ. ಆದರೆ ಇದರ ಪ್ರಯೋಜನ ಜನಸಾಮಾನ್ಯರಿಗೆ ಸಿಗುತ್ತಿಲ್ಲ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾದರೂ ಪೆಟ್ರೋಲ್ ಬೆಲೆ ಕಡಿಮೆ ಮಾಡದಿರುವುದು ಏಕೆ?” ಎಂದು ಪ್ರಶ್ನಿಸಿದ್ದಾರೆ.

ದೇಶ ರಾಜಕೀಯ

ನವದೆಹಲಿ: ಕನ್ಸಲ್ಟೆನ್ಸಿ ಹೆಸರಿನಲ್ಲಿ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ (Madhabi Puri Buch) ಅವರು ಮಹೀಂದ್ರಾ ಸೇರಿದಂತೆ ಕಂಪನಿಗಳಿಂದ 2.95 ಕೋಟಿ ರೂ.ಗಳನ್ನು ಪಡೆದಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

ಮಾಧವಿ ಬುಚ್ ಅವರು ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾದ (SEBI) ಅಧ್ಯಕ್ಷರಾಗಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್ ಪಕ್ಷ ಹಲವಾರು ಆರೋಪಗಳನ್ನು ಮಾಡುತ್ತಿದೆ.

ಇಂದು ಮಾತನಾಡಿದ ಕಾಂಗ್ರೆಸ್ ವಕ್ತಾರ ಪವನ್ ಖೇರ, “ಸೆಬಿ ಮುಖ್ಯಸ್ಥೆ ಮಾಧವಿ ಅವರು 2016 ರಿಂದ 2024ರ ಅವಧಿಯಲ್ಲಿ ಮಹೀಂದ್ರಾದಿಂದ 2.95 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಅವರ ಸಲಹಾ ಸಂಸ್ಥೆ ಅಗೋರಾ ಅಡ್ವೈಸರಿ (Agora Advisory) ಮೂಲಕ ಮೊತ್ತವನ್ನು ಸ್ವೀಕರಿಸಲಾಗಿದೆ.

ಮಾಧವಿ ಈ ಕಂಪನಿ ದಿವಾಳಿಯಾಗಿದೆ ಎಂದು ಹೇಳುತ್ತಿದ್ದಾರೆ. ಅದು ತಪ್ಪು. ಆ ಕಂಪನಿ ಕಾರ್ಯನಿರ್ವಹಿಸುತ್ತಿದೆ. ಹಣಕಾಸು ಕೂಡ ಪಡೆದಿದೆ. ಅದರಲ್ಲಿ ಮಾಧವಿ ಶೇ.99ರಷ್ಟು ಪಾಲು ಹೊಂದಿದ್ದಾರೆ. ಮಹೀಂದ್ರಾ ಅಲ್ಲದೆ ಡಾ.ರೆಡ್ಡೀಸ್, ಬಿಡ್ಲೈಟ್, ಐಸಿಐಸಿಐ, ಸೆಂಬ್ಕಾರ್ಪ್, ವಿಸು ಲೀಸಿಂಗ್ ಮುಂತಾದ ಕಂಪನಿಗಳು ಮಾಧವಿಯವರ ಅಗೋರಾ ಕಂಪನಿ ಸೇವೆಯನ್ನು ಪಡೆದುಕೊಂಡಿವೆ.

ಕಳೆದ ತಿಂಗಳು, ಐಸಿಐಸಿಐ ಬ್ಯಾಂಕ್‌ನಲ್ಲಿ ಉಭಯ ಸ್ಥಾನಗಳನ್ನು ನಿರ್ವಹಿಸುವ ಮೂಲಕ 16.80 ಕೋಟಿ ರೂಪಾಯಿ ಲಾಭ ಗಳಿಸಿದ್ದರು ಎಂದು ಕಾಂಗ್ರೆಸ್ ಆರೋಪಿಸಿತ್ತು. ಬ್ಯಾಂಕಿನವರೇ ಅದನ್ನು ನಿರಾಕರಿಸಿದ್ದು, ಇಂದು ಮತ್ತೊಂದು ಹೊಸ ಆರೋಪವನ್ನು ಕಾಂಗ್ರೆಸ್ ಮಾಡಿದೆ.

ರಾಜಕೀಯ

ಮೈಸೂರು: ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ ಮತ್ತು ಅಧಿಕಾರ ದುರ್ಬಳಕೆ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್ ನ ಜನತಂತ್ರ ವಿರೋಧಿ ನಡೆಯನ್ನು ವಿರೋಧಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

“ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ. ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ದೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ” ಎಂದು ಹೇಳಿದರು.

“ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ. ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ.

ಜೆಡಿಎಸ್ ನ ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ‘ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು’ ಎಂದು ದೇವೇಗೌಡರು ಹೇಳಿದ್ದರು. ‘ನರೇಂದ್ರ ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ’ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ” ಎಂದು ಕಿಡಿಕಾರಿದರು.

“ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ.

ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು. ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ.

ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ನಡೆಸಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಲುಗಾಡಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

“ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ.

ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ವಿಶೇಷ ತನಿಖಾ ದಳ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ಎಸ್‌ಐಟಿ ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಜ್ ಮಾಡಿದ್ದಾರೆ. ಇಷ್ಟು ಪರಿಣಾಮಕಾರಿಯಾಗಿ ಎಸ್‌ಐಟಿ ಯವರು ತನಿಖೆ ನಡೆಸಿದ್ದಾರೆ. ಆದರೂ, ಇಡಿಯವರು ಸ್ವಯಂಸ್ಫೂರ್ತಿಯಿಂದ ಕೇಸು ದಾಖಲಿಸಿಕೊಂಡು ತನಿಖೆ ನಡೆಸಿದರೂ ಸರ್ಕಾರದ ವಿರುದ್ಧ ಏನೂ ದಾಖಲೆ ಸಿಗಲಿಲ್ಲ. ಹೀಗಾಗಿ ಹಗರಣವೇ ಅಲ್ಲದ ಮೂಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು.

ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ” ಎಂದರು.

“ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು? ಸುಪ್ರೀಂಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ?

ಯಡಿಯೂರಪ್ಪ ಅವರು ಚೆಕ್ ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ”? ಎಂದು ಆಕ್ರೋಶ ವ್ಯಕ್ತಪಡಿಸಿದರು.

“15 ಬಜೆಟ್ ಮಂಡಿಸಿದ್ದೇನೆ. ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಮನೆ ಇಲ್ಲ, ಈಗ ಕಟ್ಟಿಸುತ್ತಿದ್ದೇನೆ. ಹಿಂದಿದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆ ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ” ಎಂದು ಸವಾಲೆಸದರು.

ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ. ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ಪರಮದ್ರೋಹ ಅಲ್ಲವೇ?” ಎಂದು ಕಿಡಿಕಾರಿದರು.  

“ಮುಡಾ ವಿಚಾರದಲ್ಲಿ ನನ್ನ ತಪ್ಪು ಎಲ್ಲಿದೆ? ಮುಡಾದ ಯಾವ ಸದಸ್ಯರಿಗೂ ನಾನು ಕರೆ ಮಾಡಿಲ್ಲ, ಬೇಡಿಕೆ ಇಟ್ಟಿಲ್ಲ, ಶಿಫಾರಸ್ಸು ಮಾಡಿಲ್ಲ. ನಾನು ಯಾವುದಕ್ಕೂ ಸಹಿ ಹಾಕಿಲ್ಲ. ಹೀಗಿದ್ದಾಗ ಇದರಲ್ಲಿ ನನ್ನ ಪಾತ್ರ ಏನಿದೆ?

ನಮ್ಮ ಜಮೀನು ಅಕ್ರಮವಾಗಿ ವಶಕ್ಕೆ ಪಡೆದು ಸೈಟು, ಪಾರ್ಕ್, ರಸ್ತೆ ಮಾಡಿ ಹಂಚಿಬಿಟ್ಟರು. ಇಲ್ಲಿ ತಪ್ಪು ಮಾಡಿರುವುದು ಮುಡಾ. ತಪ್ಪು ಒಪ್ಪಿಕೊಂಡು ನಂತರ ನನ್ನ ಕುಟುಂಬಕ್ಕೆ ಬದಲಿ ನಿವೇಶನ ನೀಡಿದ್ದಾರೆ. ನನ್ನ ಪತ್ನಿ ಬದಲಿ ಜಮೀನು ಕೊಡಿ ಎಂದು ಅರ್ಜಿ ಹಾಕಿದ್ದರೇ ವಿನಃ ಯಾವುದೇ ನಿರ್ಧಿಷ್ಟ ಜಾಗದಲ್ಲಿ ನಿವೇಶನ ಕೊಡಿ ಎಂದು ಕೇಳಿರಲಿಲ್ಲ.

ನಿವೇಶನ ಕೊಟ್ಟವರು ಜಿಜೆಪಿ ಸರ್ಕಾರದವರು. ಈಗ ಹಗರಣ ನಡೆದಿದೆ ಎನ್ನುತ್ತಿರುವವರು ಅವರೇ. ಇದರಲ್ಲೇ ಅವರ ಉದ್ದೇಶ ಏನಿದೆ ಎಂಬುದನ್ನು ರಾಜ್ಯದ ಜನ ಅರ್ಥಮಾಡಿಕೊಳ್ಳಬೇಕು” ಎಂದು ಮನವಿ ಮಾಡಿದರು.

ರಾಜಕೀಯ

ನವದೆಹಲಿ: ರಾಜಧಾನಿ ದೆಹಲಿಯ ನಾನಾ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನೂತನ ಸಂಸತ್ ಭವನದ ಮಧ್ಯಭಾಗದಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ಸೋರುವ ಜಾಗದಲ್ಲಿ ಪ್ಲಾಸ್ಟಿಕ್ ಬಕೆಟ್ ಇಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂಸತ್ತಿನ ಸಂಕೀರ್ಣದಲ್ಲಿ ಮಳೆ ನೀರು ಸಂಗ್ರಹವಾಗಿದ್ದು, ಹೊಸ ಕಟ್ಟಡದ ಮಧ್ಯ ಭಾಗದಲ್ಲಿ ಮಳೆ ನೀರು ಸೋರಿಕೆಯಾಗಿರುವುದನ್ನು ಪ್ರತಿಪಕ್ಷಗಳು ತೀವ್ರವಾಗಿ ಟೀಕಿಸಿವೆ.

ಈ ಹಿನ್ನೆಲೆಯಲ್ಲಿ, ನೂತನ ಸಂಸತ್ ಭವನದಲ್ಲಿ ಮಳೆ ನೀರು ಸೋರಿಕೆ ವಿಚಾರವಾಗಿ ಲೋಕಸಭೆಯಲ್ಲಿ ಚರ್ಚಿಸಲು ಕಾಂಗ್ರೆಸ್ ಸಂಸದ ಡಾ.ಮಾಣಿಕಂ ಠಾಕೂರ್ ಮುಂದೂಡಿಕೆ ನಿಲುವಳಿ ಸೂಚನೆ ನೀಡಿದ್ದಾರೆ.

ಆ ನೋಟಿಸ್‌ನಲ್ಲಿ ‘ಸಂಸತ್ತಿನ ಕೇಂದ್ರ ಭಾಗದಲ್ಲಿ ಮಳೆ ನೀರು ಸೋರಿಕೆ ವಿಚಾರವನ್ನು ನಿಲುವಳಿ ಸೂಚನೆಯಡಿ ಚರ್ಚಿಸಬೇಕು. ಸರ್ವ ಪಕ್ಷಗಳ ಸಂಸದರನ್ನೊಳಗೊಂಡ ವಿಶೇಷ ಸಮಿತಿ ರಚಿಸಿ ಸಂಸತ್ ಭವನ ಪರಿಶೀಲನೆ ನಡೆಸಬೇಕು’ ಎಂದು ಕೇಳಿಕೊಂಡಿದ್ದಾರೆ.

ದೇಶ ರಾಜಕೀಯ

 ಡಿ.ಸಿ.ಪ್ರಕಾಶ್

ಬಿಹಾರದಲ್ಲಿ, 2022 ರ ದ್ವಿತೀಯಾರ್ಧದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡ ನಿತೀಶ್ ಕುಮಾರ್, ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅದೇ ವರ್ಷದ ಅಕ್ಟೋಬರ್‌ನಲ್ಲಿ ರಾಜ್ಯ ಮಟ್ಟದ ಜಾತಿವಾರು ಸಮೀಕ್ಷೆಯನ್ನು ಬಿಡುಗಡೆ ಮಾಡಿದರು.

ಜೊತೆಗೆ, ರಾಜ್ಯ ಸರ್ಕಾರಿ ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸುವುದಾಗಿಯೂ ಭರವಸೆ ನೀಡಿದರು. ಅಂದಿನಿಂದ, ಕಾಂಗ್ರೆಸ್ ಸೇರಿದಂತೆ ‘ಇಂಡಿಯಾ ಮೈತ್ರಿಕೂಟ’ ಪಕ್ಷಗಳು ರಾಷ್ಟ್ರೀಯ ಮಟ್ಟದಲ್ಲಿ ಜಾತಿವಾರು ಜನಗಣತಿ ನಡೆಸುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿವೆ.

ಆದರೆ, ಈ ಬಗ್ಗೆ ಮೌನ ವಹಿಸಿದ್ದ ಬಿಜೆಪಿ ಸರ್ಕಾರ ಲೋಕಸಭೆ ಚುನಾವಣೆಯಲ್ಲಿ ಎಸ್.ಸಿ, ಎಸ್.ಟಿ ಮೀಸಲಾತಿಯನ್ನು ಕಸಿಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಪ್ರಚಾರ ಮಾಡಿತ್ತು. ಜಾತಿವಾರು ಗಣತಿಯನ್ನು ಬೆಂಬಲಿಸುವ ನಿತೀಶ್ ಕುಮಾರ್ ಮತ್ತು ಇತರರ ಬೆಂಬಲದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರವೂ ಬಿಜೆಪಿ ಈ ವಿಷಯದಲ್ಲಿ ಮೌನವಾಗಿದೆ.

ಆದರೂ, ಸರ್ಕಾರದ ಎಲ್ಲಾ ಯೋಜನೆಗಳು ಹಿಂದುಳಿದ, ಪರಿಶಿಷ್ಟ ಮತ್ತು ಬುಡಕಟ್ಟು ಜನರಿಗೆ ಸರಿಯಾಗಿ ಸಿಗುವಂತೆ ಮಾಡಲು ರಾಷ್ಟ್ರಮಟ್ಟದಲ್ಲಿ ಜಾತಿವಾರು ಜನಗಣತಿ ನಡೆಸಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಈ ಹಿನ್ನೆಲೆಯಲ್ಲಿ, 2024-25ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಕಳೆದ ವಾರ ಮಂಡಿಸಲಾಗಿತ್ತು. ಈ ಕುರಿತು ಲೋಕಸಭೆಯಲ್ಲಿ ಸೋಮವಾರ (ಜುಲೈ 29) ರಂದು ದಿನ ನಡೆದ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಕೇಂದ್ರ ಬಜೆಟ್‌ ತಯಾರಿಸುವಲ್ಲಿ 20 ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಆದರೆ ಹಿಂದುಳಿದ, ಪರಿಶಿಷ್ಟ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ಒಬ್ಬ ವ್ಯಕ್ತಿಯನ್ನೂ ಅದರಲ್ಲಿ ಸೇರಿಸಲಾಗಿಲ್ಲ.

ದೇಶದ ಶೇ.73ರಷ್ಟು ಜನಸಂಖ್ಯೆ ಹೊಂದಿರುವ ಈ ಮೂರು ಸಮುದಾಯಗಳಿಗೆ ಬಜೆಟ್ ನಲ್ಲಿ ಏನೂ ಸಿಗಲಿಲ್ಲ. ಇಂದಿನ ಭಾರತದಲ್ಲಿ ಕಮಲ ಆಕಾರದ ಚಕ್ರವ್ಯೂಹ ಇದೆ. ಯುವಕರು, ರೈತರು, ಮಹಿಳೆಯರು, ಸಣ್ಣ ಮತ್ತು ಮಧ್ಯಮ ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಇದನ್ನು ಮೋದಿ, ಅಮಿತ್ ಶಾ, ಮೋಹನ್ ಭಾಗವತ್, ಅಜಿತ್ ದೋವಲ್, ಅಂಬಾನಿ ಮತ್ತು ಅದಾನಿ ಮುಂತಾದ ಆರು ಜನರು ನಿಯಂತ್ರಿಸುತ್ತಾರೆ” ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಸಂಸದ ಅನುರಾಗ್ ಠಾಕೂರ್ ಅವರು ರಾಹುಲ್ ಗಾಂಧಿ ವಿರುದ್ಧ ಜಾತಿ, ಧರ್ಮದ ಆಧಾರದಲ್ಲಿ ಪರೋಕ್ಷ ವಾಗ್ದಾಳಿ ನಡೆಸಿದ್ದು, ಪ್ರಧಾನಿ ಮೋದಿ ಇದನ್ನು ಹೊಗಳಿದ್ದು ದೊಡ್ಡ ಚರ್ಚೆಗೆ ಗ್ರಾಸವಾಗಿದೆ.

ನಿನ್ನೆ ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣಕ್ಕೆ ಪ್ರತಿಕ್ರಿಯಿಸಿದ ಅನುರಾಗ್ ಠಾಕೂರ್, “ತನ್ನ ಜಾತಿ ಗೊತ್ತಿಲ್ಲದ ವ್ಯಕ್ತಿ ಜಾತಿವಾರು ಗಣತಿ ಬಗ್ಗೆ ಮಾತನಾಡುತ್ತಿದ್ದಾರೆ. ಅಲ್ಲದೆ, ಕೆಲವರು ಆಕಸ್ಮಿಕವಾಗಿ ಹಿಂದೂಗಳಾಗಿದ್ದಾರೆ. ಆದ್ದರಿಂದ, ಮಹಾಭಾರತದ ಬಗ್ಗೆ ಅವರ ಜ್ಞಾನವು ಹಾಗೆ ಆಗಿರುತ್ತದೆ” ಎಂದು ವಾಗ್ದಾಳಿ ನಡೆಸಿದರು.

ಅನುರಾಗ್ ಠಾಕೂರ್

ಇದಕ್ಕೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ, “ಆದಿವಾಸಿ, ದಲಿತ ಮತ್ತು ಹಿಂದುಳಿದವರ ಸಮಸ್ಯೆಗಳನ್ನು ಯಾರೇ ಎತ್ತಿದರೂ ಅವರನ್ನು ನಿಂದಿಸಲಾಗುತ್ತದೆ. ಆದಾಗ್ಯೂ, ನಾನು ಇದನ್ನು ಸಂತೋಷದಿಂದ ಸ್ವೀಕರಿಸುತ್ತೇನೆ. ಅನುರಾಗ್ ಠಾಕೂರ್ ನನ್ನನ್ನು ನಿಂದಿಸಿ ಅವಮಾನ ಮಾಡಿದ್ದಾರೆ.

ಆದರೆ, ನಾನು ಅವರಿಂದ ಯಾವುದೇ ಕ್ಷಮೆಯನ್ನು ಬಯಸುವುದಿಲ್ಲ. ನೀವು ನನ್ನನ್ನು ಎಷ್ಟು ಬೇಕಾದರೂ ಅವಮಾನಿಸಬಹುದು. ಸಂಸತ್ತಿನಲ್ಲಿ ಜಾತಿವಾರು ಜನಗಣತಿಯನ್ನು ನಾವು ಅಂಗೀಕರಿಸುತ್ತೇವೆ” ಎಂದರು. ಮತ್ತೊಂದೆಡೆ, ಸಮಾಜವಾದಿ ನಾಯಕ ಅಖಿಲೇಶ್ ಯಾದವ್, “ಅದು ಹೇಗೆ ಒಬ್ಬರ ಜಾತಿಯನ್ನು ಕೇಳುವುದು?” ಎಂದು ಅನುರಾಗ್ ಠಾಕೂರ್ ಅವರನ್ನು ಪ್ರಶ್ನಿಸಿದರು.

ಅಲ್ಲದೆ, ಅನೇಕ ವಿರೋಧ ಪಕ್ಷದ ಸಂಸದರು ಸಹ ಅನುರಾಗ್ ಠಾಕೂರ್ ಅವರ ಇಂತಹ ಭಾಷಣವನ್ನು ವಿರೋಧಿಸಿದರು. ಆದರೆ, ಸದನದಲ್ಲಿ ನಡೆದ ಈ ಘಟನೆಗೆ ಇನ್ನಷ್ಟು ತುಪ್ಪ ಸುರಿಯುವ ಸಲುವಾಗಿ ಪ್ರಧಾನಿ ಮೋದಿ, ನನ್ನ ಯುವ ಮತ್ತು ಶಕ್ತಿಯುತ ಸಹೋದ್ಯೋಗಿ ಅನುರಾಗ್ ಠಾಕೂರ್ ಅವರ ಈ ಭಾಷಣ, ಕೇಳಲೇಬೇಕು. ಸತ್ಯ ಮತ್ತು ಹಾಸ್ಯದ ಈ ಪರಿಪೂರ್ಣ ಮಿಶ್ರಣವು ಇಂಡಿಯಾ ಮೈತ್ರಿಕೂಟದ ಕೊಳಕು ರಾಜಕೀಯವನ್ನು ಬಹಿರಂಗಪಡಿಸುತ್ತದೆ” ಎಂದು ಟ್ವೀಟ್ ಮಾಡಿ, ಅನುರಾಗ್ ಠಾಕೂರ್ ಅವರು ಸದನದಲ್ಲಿ ಮಾಡಿದ ಭಾಷಣದ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಪುಟ X ನಲ್ಲಿ ಹಂಚಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ಅನುರಾಗ್ ಠಾಕೂರ್ ಅವರು ಅಖಿಲೇಶ್ ಯಾದವ್ ಅವರ ಹಳೆಯ ವಿಡಿಯೋವನ್ನು ಕಟ್ ಮಾಡಿ, “ನೀವು ಜಾತಿಯ ಬಗ್ಗೆ ಅದು ಹೇಗೆ ಕೇಳಬಹುದು ಅಖಿಲೇಶ್ ಯಾದವ್?” ಎಂದು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.

ಮತ್ತೊಂದೆಡೆ, ಕಮ್ಯುನಿಸ್ಟ್ ಪಕ್ಷದ ಸಂಸದ ಸಿ.ವೆಂಕಟೇಶನ್ ಅವರು ತಮ್ಮ ಎಕ್ಸ್ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ, “ನಿನ್ನೆ ಸಂಸತ್ತಿನಲ್ಲಿ, ‘ತನ್ನ ಜಾತಿ ಗೊತ್ತಿಲ್ಲದ ವ್ಯಕ್ತಿ ಜಾತಿವಾರು ಗಣತಿ ಬಗ್ಗೆ ಮಾತನಾಡಬಹುದಾ?’ ಎಂದು ರಾಹುಲ್ ಗಾಂಧಿ ಬಗ್ಗೆ ಅನುರಾಗ್ ಠಾಕೂರ್ ಮಾತನಾಡಿದರು.

ಈ ಭಾಷಣವನ್ನು ಎಲ್ಲರೂ ಕೇಳಲೇಬೇಕಾದ ಅತ್ಯುತ್ತಮ ಭಾಷಣ ಎಂದು ಪ್ರಧಾನಿ ತಮ್ಮ ‘ಎಕ್ಸ್’ ಸೈಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ದೇಶದ ಅತ್ಯುನ್ನತ ಸದನಗಳಲ್ಲಿ ಬಿಜೆಪಿಯ ಧ್ವನಿ ಎಷ್ಟು ನೋವಿನಿಂದ ಹೊರಹೊಮ್ಮುತ್ತಿದೆ ಎಂಬುದನ್ನು ನೋಡಿ” ಎಂದು ಟೀಕಿಸಿದ್ದಾರೆ. ಅವರನ್ನು ಅನುಸರಿಸಿ ಹಲವು ವಿರೋಧ ಪಕ್ಷಗಳ ನಾಯಕರು, ಅನುರಾಗ್ ಠಾಕೂರ್ ಅವರ ಕ್ರಮವನ್ನು ಖಂಡಿಸುತ್ತಾ, ಮೋದಿಯವರ ಹೊಗಳಿಕೆಯನ್ನು ಟೀಕಿಸುತ್ತಿದ್ದಾರೆ.

ಅಲ್ಲದೆ, ಅನುರಾಗ್ ಠಾಕೂರ್ ಅವರ ವೀಡಿಯೊವನ್ನು ವೀಕ್ಷಿಸಲು ಮೋದಿಯವರ ಮನವಿಗೆ ವಿರುದ್ಧವಾಗಿ ಕಾಂಗ್ರೆಸ್ ಪಕ್ಷವು, ಇದು ಸಂಸತ್ತಿನ ವಿಶೇಷ ಹಕ್ಕುಗಳ ಉಲ್ಲಂಘನೆ ಮತ್ತು ಅಸಂವಿಧಾನಿಕ ಎಂದು ಲೋಕಸಭೆಯ ರೂಲ್ ಬುಕ್ ಚಾಪ್ಟರ್ 20ರ ರೂಲ್ ನಂಬರ್ 222ರ ಪ್ರಕಾರ ಮೋದಿಯವರ ವಿರುದ್ಧ ಹಕ್ಕುಚ್ಯುತಿ (Privilege Motion Notice) ಮಂಡಿಸಿದೆ.

ದೇಶ

ರಾಹುಲ್ ಗಾಂಧಿ ಹಿಂದೂ ಧರ್ಮದ ವಿರುದ್ಧ ಮಾತನಾಡಿಲ್ಲ ಎಂದು ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ್ ಅಭಿಪ್ರಾಯಪಟ್ಟಿದ್ದಾರೆ!

ಸಂಸತ್ತಿನ ಚುನಾವಣಾ ಪ್ರಚಾರದ ಸಮಯದಲ್ಲಿ, ಪ್ರಧಾನಿ ಮೋದಿಯಿಂದ ಹಿಡಿದು ಬಿಜೆಪಿ ಬೆಂಬಲಿಗರವರೆಗೆ ಎಲ್ಲರೂ ನಿರಂತರವಾಗಿ ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಮೈತ್ರಿಕೂಟ ಹಿಂದೂಗಳಿಗೆ ಮತ್ತು ಹಿಂದೂ ಧರ್ಮಕ್ಕೆ ವಿರೋಧವಾಗಿದೆ ಎಂದು ಮಾತನಾಡುತ್ತಿದ್ದರು. ಆದರೂ ಇವರ ಚುನಾವಣಾ ಪ್ರಚಾರ ಕೈಕೊಡಲಿಲ್ಲ. ಇಂಡಿಯಾ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷವು ಪ್ರಸ್ತುತ ಸಂಸತ್ತಿನಲ್ಲಿ ಹೆಚ್ಚಿನ ಬಲದೊಂದಿಗೆ ಇವೆ. ಇದು ಬಿಜೆಪಿಯವರಿಗೆ ಭಯ ಮತ್ತು ಕೋಪಕ್ಕೂ ಕಾರಣವಾಗಿದೆ.

ಹಾಗಾಗಿಯೇ ಬಿಜೆಪಿ ಸರ್ಕಾರ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಹೇಳಿದ್ದನ್ನು ತಿರುಚಿ, ಹಿಂದೂ ಧರ್ಮದ ವಿರುದ್ಧ ರಾಹುಲ್ ಗಾಂಧಿ ಮಾತನಾಡಿದ್ದಾರೆ ಎಂದು ಸುಳ್ಳು ಮಾತನಾಡಿದರು. ಅಲ್ಲದೆ, ರಾಹುಲ್ ಗಾಂಧಿ ಮನೆ ಮುಂದೆ ಬಿಜೆಪಿ ಸದಸ್ಯರು ಮುತ್ತಿಗೆ ಹಾಕಿದರು. ಕೇಂದ್ರ ಬಿಜೆಪಿ ಸರ್ಕಾರವನ್ನು ಯಾರು ಟೀಕಿಸಿದರೂ ಅವರನ್ನು ಬಿಜೆಪಿಯವರು ನಿರಂತರವಾಗಿ ಹಿಂದೂ ವಿರೋಧಿಗಳು ಮತ್ತು ಹಿಂದೂ ಧರ್ಮದ ವಿರೋಧಿಗಳು ಎಂದು ಬಿಂಬಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ, ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ್ ಪ್ರತಿಕ್ರಿಯಿಸಿ, ರಾಹುಲ್ ಗಾಂಧಿ ಹಿಂದೂ ಧರ್ಮದ ವಿರುದ್ಧ ಮಾತನಾಡಿಲ್ಲ ಎಂದು ಹೇಳಿದ್ದಾರೆ. ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಿಂದೂ ಧರ್ಮದ ವಿರುದ್ಧ ಮಾತನಾಡಿಲ್ಲ. ಆದರೆ ಮಾಧ್ಯಮಗಳು ಮತ್ತು ಬಿಜೆಪಿ ಐಟಿ ಸೆಲ್‌ಗಳು ರಾಹುಲ್ ಗಾಂಧಿ ಹಿಂದೂ ವಿರೋಧಿ ಎಂಬಂತೆ ಸುಳ್ಳುಗಳನ್ನು ಹಬ್ಬಿಸುತ್ತಿವೆ’’ ಎಂದು ಹೇಳಿದ್ದಾರೆ.

ದೇಶ

ನವದೆಹಲಿ: ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕು ಕಾಂಗ್ರೆಸ್‌ಗೆ ಇಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

25 ಜೂನ್ 1975 ರಂದು ಭಾರತದಲ್ಲಿ ಮೊದಲ ಬಾರಿಗೆ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಈ ಕುರಿತು ಪ್ರಧಾನಿ ಮೋದಿ ಅವರು ತಮ್ಮ ‘ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, “ಇಂದು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲರನ್ನೂ ಗೌರವಿಸುವ ದಿನವಾಗಿದೆ. ಕಾಂಗ್ರೆಸ್ ಸರ್ಕಾರ ಹೇರಿದ ತುರ್ತು ಪರಿಸ್ಥಿತಿಯು ಅವರು ಭಾರತದ ಸಂವಿಧಾನವನ್ನು ಹೇಗೆ ಸಂಪೂರ್ಣವಾಗಿ ಬುಡಮೇಲು ಮಾಡಿದರು ಎಂಬುದನ್ನು ನೆನಪಿಸುತ್ತದೆ.

ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕು ಇಲ್ಲ. ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಿದವರು ಮತ್ತು ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದವರು ಇವರು. ತುರ್ತು ಪರಿಸ್ಥಿತಿ ಹೇರಲು ಕಾರಣವಾದ ಭಾವನೆ ಅವರ ಪಕ್ಷದ ಸದಸ್ಯರಲ್ಲಿ ಜೀವಂತವಾಗಿದೆ.

ಅಧಿಕಾರ ಉಳಿಸಿಕೊಳ್ಳಲು ಅಂದಿನ ಕಾಂಗ್ರೆಸ್ ಸರಕಾರ ಪ್ರಜಾಪ್ರಭುತ್ವದ ತತ್ವವನ್ನು ಕಡೆಗಣಿಸಿತು. ಕಾಂಗ್ರೆಸ್ ಪಕ್ಷಕ್ಕೆ ಮಣಿಯದವರನ್ನು ಹಿಂಸಿಸಲಾಯಿತು. ದುರ್ಬಲ ವರ್ಗಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕವಾಗಿ ಪ್ರತಿಗಾಮಿ ನೀತಿಗಳನ್ನು ಅನಾವರಣಗೊಳಿಸಲಾಯಿತು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ 

ದೇಶಾದ್ಯಂತ 7 ಹಂತಗಳಲ್ಲಿ ನಡೆದ 18ನೇ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಏಕ ಬಹುಮತದೊಂದಿಗೆ ಸರ್ಕಾರ ರಚಿಸುವ ಶಕ್ತಿ ಕಂಡುಬಂದಿಲ್ಲ. ಆದರೂ ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಸೇರಿ ಸತತ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದೆ.ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ, ಕೇರಳದ ವಯನಾಡು ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಿದ್ದರು. ಮತದಾನ ಮುಗಿದ ನಂತರ ಅವರು ಕಾಂಗ್ರೆಸ್ ಭದ್ರಕೋಟೆಯಾದ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲೂ ನಾಮಪತ್ರ ಸಲ್ಲಿಸಿದರು.

ಇದಾದ ಬಳಿಕ, ನಡೆದ ಮತ ಎಣಿಕೆ ವೇಳೆ ಎರಡೂ ಕ್ಷೇತ್ರಗಳಲ್ಲಿ ರಾಹುಲ್ ಗಾಂಧಿ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದರು. ವಯನಾಡಿನಲ್ಲಿ ರಾಹುಲ್ ಗಾಂಧಿ 6,47,445 ಮತಗಳನ್ನು ಪಡೆದು ಆನಿ ರಾಜಾ ಅವರನ್ನು 3,64,422 ಮತಗಳ ಅಂತರದಿಂದ ಸೋಲಿಸಿದರು. ಅದೇ ರೀತಿ ಉತ್ತರಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ 6,87,649 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿಯನ್ನು 3,90,030 ಮತಗಳ ಅಂತರದಿಂದ ಸೋಲಿಸಿದ್ದು ಗಮನಾರ್ಹ.

ಈ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿ ಸ್ಪರ್ದಿಸಿ ಗೆದ್ದ ಎರಡು ಕ್ಷೇತ್ರಗಳ ಪೈಕಿ, ಒಂದರಲ್ಲಿ ರಾಜೀನಾಮೆ ನೀಡಬೇಕಾಗಿದೆ. ಅಂದರೆ, 2 ಕ್ಷೇತ್ರಗಳಲ್ಲಿ ಸ್ಪರ್ದಿಸಿ ಗೆಲುವು ಸಾದಿಸಿದ ಒಬ್ಬ ಅಭ್ಯರ್ಥಿ, 14 ದಿನಗಳೊಳಗೆ ಯಾವುದಾದರೊಂದು ಕಡೆ ಸಂಸದ ಅಥವಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬುದು ನಿಯಮ. ಇದನ್ನು ಆಧರಿಸಿ, ಇಂದು ರಾಹುಲ್ ಗಾಂಧಿ ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಅಲ್ಲದೇ ಆ ಕ್ಷೇತ್ರದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ರಾಹುಲ್ ಗಾಂಧಿಯ ಸಹೋದರಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ದಿಸಲಿದ್ದಾರೆ ಎಂದೂ ಅವರು ಹೇಳಿದ್ದಾರೆ.

2019ರಲ್ಲಿ ವಯನಾಡು ಕ್ಷೇತ್ರದಿಂದ ಆಯ್ಕೆಯಾದ ರಾಹುಲ್ ಗಾಂಧಿ ಅದೇ ವರ್ಷ ಕಾಂಗ್ರೆಸ್ ಭದ್ರಕೋಟೆಯಾದ ಅಮೇಥಿಯಲ್ಲೂ ಸ್ಪರ್ದೆಗಿಳಿದರು. ಆದರೆ, ಅಲ್ಲಿ ಸ್ಮೃತಿ ಇರಾನಿ ಎದುರು ಸೋತರು. ತರುವಾಯ, ಅವರು ವಯನಾಡ್ ಕ್ಷೇತ್ರದ ಸಂಸದರಾಗಿ ಮುಂದುವರೆದರು. ಈ ಬಾರಿಯೂ ವಯನಾಡ್‌ನಲ್ಲಿ ಸ್ಪರ್ದೆಗಿಳಿದ ಅವರು ಅಮೇಥಿಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್‌ನ ಹಿರಿಯ ನಾಯಕರ ಒತ್ತಾಯದ ಹೊರತಾಗಿಯೂ ಅವರು ಸ್ಪರ್ಧಿಸಲಿಲ್ಲ. ಏತನ್ಮಧ್ಯೆ, ಕಾಂಗ್ರೆಸ್ ಭದ್ರಕೋಟೆಯಾದ ರಾಯ್ ಬರೇಲಿಯ ಸಂಸದೆ ಸೋನಿಯಾ ಗಾಂಧಿ, ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಆ ಕ್ಷೇತ್ರದಲ್ಲಿ ರಾಹುಲ್ ಅವರನ್ನು ಕಣಕ್ಕಿಳಿಸಲಾಯಿತು. ಈಗ ಅವರು ರಾಯ್ ಬರೇಲಿಯ ಸಂಸದರಾಗಿ ಆಯ್ಕೆಯಾಗಿದ್ದಾರೆ.

ರಾಜಕೀಯಕ್ಕೆ ಬರಲು ನನಗೆ ಯಾವುದೇ ಹಿಂಜರಿಕೆ ಇಲ್ಲ – ಪ್ರಿಯಾಂಕಾ ಗಾಂಧಿ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ವಯನಾಡಿನ ಜನತೆಗೆ ನನ್ನ ಧನ್ಯವಾದಗಳು; ವಯನಾಡಿಗೆ ಭೇಟಿ ನೀಡುವುದನ್ನು ಮುಂದುವರಿಸಲಾಗುವುದು. ಕಳೆದ 5 ವರ್ಷಗಳಿಂದ ವಯನಾಡಿನ ಜನರು ನನಗೆ ನೀಡಿದ ಬೆಂಬಲ ಮತ್ತು ಪ್ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ. ನಾನು ಯಾವಾಗಲೂ ವಯನಾಡಿನ ಜನರ ಪರವಾಗಿ ನಿಲ್ಲುತ್ತೇನೆ. ಪ್ರಿಯಾಂಕಾ ಗಾಂಧಿ ಖಂಡಿತಾ ಇಲ್ಲಿ ಗೆಲ್ಲುತ್ತಾರೆ. ನಾನು ಮತ್ತು ನನ್ನ ಸಹೋದರಿ ವಯನಾಡಿನ ಜನರನ್ನು ಪ್ರತಿನಿಧಿಸಲಿದ್ದೇವೆ” ಎಂದು ಹೇಳಿದರು.

“ನಂತರ ಮಾತನಾದಿಡ ಪ್ರಿಯಾಂಕಾ ಗಾಂಧಿ “ವಯನಾಡಿನಲ್ಲಿ ಸ್ಪರ್ಧಿಸುವುದು ಬಹಳ ಖುಷಿ ತಂದಿದೆ; ಮತ ರಾಜಕೀಯಕ್ಕೆ ಬರಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ? ರಾಹುಲ್ ಗಾಂಧಿ ಚೆಕ್ ಮೇಟ್?

ರಾಜ್ಯ

ಬೆಂಗಳೂರು: ಕರ್ನಾಟಕ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದೆ. ಅದರಂತೆ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಕ್ರಮವಾಗಿ ಶೇ.29.84 ಮತ್ತು ಶೇ.18.44ಕ್ಕೆ ಪರಿಷ್ಕರಿಸಿದೆ.

ಈ ತೆರಿಗೆ ಹೆಚ್ಚಳದಿಂದಾಗಿ ಪೆಟ್ರೋಲ್ ಬೆಲೆ ರೂ.3, ಡೀಸೆಲ್ ಬೆಲೆ ರೂ.3.50ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿರುವ ಬಿಜೆಪಿ, ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕೆ ಎಂದು ಒತ್ತಾಯಿಸಿದೆ.

ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಮ್ಮ ‘ಎಕ್ಸ್’ ಜಾಲತಾಣದಲ್ಲಿ ಪ್ರಕಟಿಸಿರುವ ಪ್ರಕಟಣೆಯಲ್ಲಿ, “ಕಾಂಗ್ರೆಸ್ಸಿಗರೇ, ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನೂ ಬೇಡಿರಲಿಲ್ಲ; ನೀವು ಯಾವ ಭಾಗ್ಯವನ್ನು ಕೊಡದಿದ್ದರೂ ಪರವಾಗಿಲ್ಲ. ಬೆಲೆ ಏರಿಕೆಯ ದೌರ್ಭಾಗ್ಯವನ್ನು ಮಾತ್ರ ನಮ್ಮ ಮೇಲೆ ಹೇರಬೇಡಿ. ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಧಿಕಾರಕ್ಕೇರುವ ಒಂದೇ ಕಾರಣಕ್ಕಾಗಿ ಪಂಚ ಭಾಗ್ಯದ ಮೋಡಿ ಮಾಡಿ, ನೀವು ರಾಜ್ಯದ ಮತದಾರರನ್ನು ದಿಕ್ಕು ತಪ್ಪಿಸಿದ್ದು ನಾಡಿನ ದೌರ್ಭಾಗ್ಯವಲ್ಲದೇ ಬೇರೇನೂ ಅಲ್ಲ” ಎಂದು ಆಕ್ರೋಶ ವ್ಯಕ್ತಪ್ಡಿಸಿದ್ದಾರೆ.

“ದಿನ ಬಳಕೆ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ಸರಣೀ ರೂಪದಲ್ಲಿ ಏರಿಸುತ್ತಲೇ ಇದ್ದೀರಿ, ಇದೀಗ ಪೆಟ್ರೋಲ್ ಬೆಲೆ ರೂ.3, ಡೀಸೆಲ್ ಬೆಲೆ ರೂ.3.50ಕ್ಕೆ ದರಗಳನ್ನು ಏರಿಸಿ ಜನಸಾಮಾನ್ಯರ ಕೈ ಸುಟ್ಟಿದ್ದೀರಿ. ಈ ಬೆಲೆ ಏರಿಕೆಯ ಪ್ರತಿಕೂಲ ಪರಿಣಾಮ ಸಹಜವಾಗಿಯೇ ಸರಕು ಸಾಗಾಣಿಕೆ, ಹಾಗೂ ಸಾರಿಗೆ ದರಗಳೂ ವಿಪರೀತ ಹೆಚ್ಚಳ ಕಂಡು ದಿನಬಳಕೆಯ ಅಗತ್ಯ ವಸ್ತುಗಳ ಬೆಲೆಯೂ ಏರಲಿದೆ” ಎಂದು ಕಿಡಿಕಾರಿದ್ದಾರೆ.

“ಬರಿದಾಗಿರುವ ನಿಮ್ಮ ಖಜಾನೆ ತುಂಬಿಸಲು ಜನಸಾಮಾನ್ಯರು ಹಾಗೂ ಕಡು ಬಡವರ ಜೇಬು ಖಾಲಿ ಮಾಡಲು ಹೊರಟಿರುವ ನಿಮ್ಮ ಜನ ವಿರೋಧಿ ನೀತಿ ನಿರ್ಧಾರಗಳನ್ನು ಬಿಜೆಪಿ ಪ್ರಬಲವಾಗಿ ಖಂಡಿಸಿ ಪ್ರತಿಭಟಿಸುತ್ತದೆ. ಈ ಕೂಡಲೇ ಪೆಟ್ರೋಲ್ ಡೀಸೆಲ್ ದರ ಏರಿಕೆ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳದಿದ್ದರೆ ಜನಾಕ್ರೋಶವನ್ನು ಪ್ರತಿನಿಧಿಸಿ ಜಿಜೆಪಿ ಬೀದಿಗಿಳಿದು ಹೋರಾಡಲಿದೆ” ಎಂದು ಹೇಳಿದ್ದಾರೆ.

“ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಮುಖ್ಯಮಂತ್ರಿಗಳು ಹಾಗೂ ಸರಕಾರ ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ, ಸೋಮವಾರ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿಭಟನೆ ನಡೆಸುತ್ತೇವೆ. ಹಾಗಾಗಿ ಇಂಧನ ಬೆಲೆ ಏರಿಕೆ ನಿರ್ಧಾರವನ್ನು ಈ ಕೂಡಲೇ ಕೈಬಿಡಬೇಕು” ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.