ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಡಿ.ಕೆ.ಸುರೇಶ್ Archives » Dynamic Leader
October 23, 2024
Home Posts tagged ಡಿ.ಕೆ.ಸುರೇಶ್
ರಾಜ್ಯ

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಪುಟ್ಟಣ್ಣನವರು ಜಯಗಳಿಸಿದ ಹಿನ್ನೆಲೆಯಲ್ಲಿ ಕೆಂಗೇರಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿರುವುದು, ನರೇಂದ್ರ ಮೋದಿ ಅವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಆಗಿದೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಬಯಸುತ್ತೇನೆ. ಬಿಜೆಪಿಗೆ ಯಾವತ್ತೂ ವಿರುದ್ಧವಾಗಿರುತ್ತೇವೆ” ಎಂದು ಈ ಹಿಂದೆ ದೇವೇಗೌಡರು ಹೇಳಿದ್ದುದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

“ಈಗ ತಮ್ಮ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇಂದು ನಾಡಿನ ಜನತೆ ಪ್ರಜ್ಞಾವಂತರಾಗಿದ್ದಾರೆ. ಇವರ ಹೇಳಿಕೆಗಳನ್ನು ಪರಿಶೀಲಿಸಿ ತುಲನೆ ಮಾಡುವಷ್ಟು ತಿಳಿವಳಿಕೆ ನಾಡಿನ ಜನರಿಗೆ ಬಂದಿದೆ. ರಾಜಕೀಯವಾಗಿ ದೇವೇಗೌಡರು ತಮ್ಮ ಕುಟುಂಬದ ಉಳಿವಿಗಾಗಿ ಯಾವುದೇ ನಿರ್ಧಾರಕ್ಕೆ ಬಂದರೂ ಜನರು ಕಣ್ಣುಮುಚ್ಚಿಕೊಂಡು ಅವರನ್ನು ಬೆಂಬಲಿಸಬೇಕು ಎನ್ನುವ ಸಂದರ್ಭ ಈಗ ಇಲ್ಲ” ಎಂದು ಹೇಳಿದರು.

“ಹಿಂದೆ ನಾನು ಜೆಡಿಎಸ್ ನಲ್ಲಿದ್ದಾಗ, ಪುಟ್ಟಣ್ಣನವರಿಗೆ ಶಿಕ್ಷಕರು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದ್ದು, ಚುನಾವಣೆಗೆ ನಿಲ್ಲುವುದಾಗಿ ತಿಳಿಸಿದ್ದರು. 2002ರಲ್ಲಿ ಜನರ ಆಶೀರ್ವಾದದಿಂದ ಜಯಗಳಿಸಿದರು. ನಂತರ ಐದು ಬಾರಿ ಗೆದ್ದಿದ್ದಾರೆ. ಜನರ ಧ್ವನಿಯಾಗಿ ಸಮರ್ಥವಾಗಿ ಕೆಲಸ ಮಾಡಿದ್ದು, ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದರೂ ಅವರನ್ನು ಬೆಂಬಲಿಸಿದ ಶಿಕ್ಷಕ ಸಮುದಾಯದ ಪ್ರಜ್ಞಾವಂತಿಕೆಗೆ ಮೆಚ್ಚುವಂತದ್ದು” ಎಂದು ಹೇಳಿದರು.

“ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್ ಅವರನ್ನು ಕಣಕ್ಕೆ 4 ಬಾರಿ ಇಳಿಸಲಾಗಿದೆ. ಈ ಕ್ಷೇತ್ರದಲ್ಲಿ ಅವರು ಖಂಡಿತ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ಬಿಜೆಪಿಯವರು ನರೇಂದ್ರ ಮೋದಿಯವರ ಹೆಸರಿನಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆಯೇ ಹೊರತು, ಬಿಜೆಪಿಯವರಿಗೆ ಜನರ ಬಳಿ ಹೋಗಲು ಕಾರಣಗಳೇ ಇಲ್ಲ. ನರೇಂದ್ರ ಮೋದಿಯವರ ಹೆಸರಿನ ಮೇಲೆ ಗೆಲ್ಲುತ್ತೇವೆ ಎಂದು  ಬಿಜೆಪಿ ಭಾವಿಸಿದೆ. ನರೇಂದ್ರ ಮೋದಿಯವರು ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಾದಯಾತ್ರೆ ಮಾಡಿದ್ದರೂ ನಮಗೆ 136 ಸ್ಥಾನಗಳು ದೊರೆತವು” ಎಂದು ಸಮರ್ಥಿಸಿಕೊಂಡರು.

“ಮೋದಿಯವರು ಪ್ರಚಾರ ಮಾಡಿದ್ದ ಯಾವ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲೇ ಇಲ್ಲ. ಹೀಗಾಗಿ ನರೇಂದ್ರ ಮೋದಿಯವರ ಹೆಸರಿನ ಮೇಲೆಯೇ ಗೆಲ್ಲುತ್ತೇವೆ ಎನ್ನುವ ಇವರಷ್ಟು ಮೂರ್ಖರು ಯಾರೂ ಇಲ್ಲ. ಕೊಟ್ಟ ಮಾತಿನಂತೆ ನಡೆದುಕೊಳ್ಳವವರು, ಕೆಲಸ ಮಾಡಿರುವವರಿಗೆ ತಾನೇ ಕೂಲಿ ಕೊಡುವುದು. ಗೇಯುವ ಎತ್ತಿಗೆ ಹುಲ್ಲು ಹಾಕಬೇಕು. ಕಳ್ಳ ಎತ್ತಿಗೆ ಹುಲ್ಲು ಹಾಕಬಾರದು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅವರು 28ಕ್ಕೆ 28 ಗೆಲ್ಲುತ್ತೇವೆ ಎಂದುಕೊಂಡಿದ್ದಾರೆ” ಎಂದು ವ್ಯಂಗ್ಯವಾಡಿದರು.

“ದೇವೇಗೌಡರು ನರೇಂದ್ರ ಮೋದಿ ಅವರನ್ನು ಈಗ ಹೊಗಳಿದ್ದೆ ಹೊಗಳಿದ್ದು. ನನಗೂ ಅವರಿಗೂ ಅವಿನಾಭಾವ ಸಂಬಂಧ ಇದೆ, ಜನ್ಮ ಜನ್ಮದ ಸಂಬಂಧವಿದೆ ಅಂತಲೂ ಎನ್ನುತ್ತಾರೆ. ಗೌಡರು ಹೀಗೇಕಾದರು ಎಂದು ಆಶ್ಚರ್ಯವಾಗಿದೆ. ಇದೇ ದೇವೇಗೌಡರು ನರೇಂದ್ರ ಮೋದಿಯವರು ಪುನಃ ಪ್ರಧಾನಿಯಾದರೆ ನಾನು ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಹೊಗಳುತ್ತಾರೆ. ಇದೆಂತಹ ದ್ವಂದ್ವ? ದೇಶದ ಪ್ರಧಾನಮಂತ್ರಿಯಾಗಿದ್ದವರು ಈ ರೀತಿ ಹೇಳುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ” ಆಶ್ಚರ್ಯ ವ್ಯಕ್ತಪಡಿಸಿದರು.

ರಾಜಕೀಯ

ಬೆಂಗಳೂರು: ದಕ್ಷಿಣ ರಾಜ್ಯಗಳು ಅದರಲ್ಲಿಯೂ ವಿಶೇಷವಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ನನ್ನ ಧರ್ಮ. ಕೇಂದ್ರ ಸರ್ಕಾರ ರಾಜ್ಯದ ಮೇಲೆ ತೋರಿಸುತ್ತಿರುವ ಮಲತಾಯಿ ಧೋರಣೆಯನ್ನು ಪ್ರಶ್ನೆ ಮಾಡುವ ಹಕ್ಕು ಎಲ್ಲರಿಗೂ ಇದೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಈ ಅನ್ಯಾಯ ಹೀಗೆ ಮುಂದುವರೆದರೆ, ಪ್ರತ್ಯೇಕದ ಕೂಗು ಈಗಾಗಲೇ ಎಲ್ಲಡೆಯೂ ಕೇಳಿ ಬರುತ್ತಿದೆ; ನಾನೂ ಹೇಳಿದ್ದೇನೆ. ಭಾರತೀಯ ಜನತಾ ಪಕ್ಷದವರು ನನ್ನ ಹೇಳಿಕೆಯನ್ನು ತಿರುಚುವುದರಲ್ಲಿ ನಿಸ್ಸೀಮರು. ನಮ್ಮ ರಾಜ್ಯ ಕೇಂದ್ರದ ಬೊಕ್ಕಸಕ್ಕೆ ಅತಿ ಹೆಚ್ಚು ಕೊಡುಗೆ ನೀಡುವ ರಾಜ್ಯಗಳಲ್ಲಿ ಒಂದಾಗಿದೆ. ಅದಕ್ಕೆ ಪ್ರತಿಯಾಗಿ ನಾವು ಪಡೆದುಕೊಂಡ ಅನುದಾನ ಕಡಿಮೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಯೋಜನೆಗಳ ವಿಚಾರದಲ್ಲಿ ಸಂಪೂರ್ಣ ಮಲತಾಯಿ ಧೋರಣೆ ನಮಗೆ ಸಿಕ್ಕಿದೆ. ಕರ್ನಾಟಕ ಭಾರತದಲ್ಲೇ ಇದೆ. ಇದನ್ನು ಒಕ್ಕೂಟ ಸರ್ಕಾರ ಮರೆಯಬಾರದು ಇದಕ್ಕೆ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದರೆ ನಾವು “ಪ್ರತ್ಯೇಕತಾವಾದಿ”ಗಳು! ಎಂದು ಬಣ್ಣಿಸುತ್ತಾರೆ. ಮೇಕೆದಾಟು, ಮಹದಾಯಿ, ಬರ ಪರಿಹಾರ ಇರಲಿ, ಕೇಂದ್ರ ಬಿಜೆಪಿ ಸರಕಾರ ನಮ್ಮ ಯಾವುದೇ ಸಮಸ್ಯೆಗಳಿಗೆ ಈವರೆಗೆ ಸ್ಪಂದಿಸಿಲ್ಲ ಎಂದು ಹೇಳಿದ್ದಾರೆ.

ನಮ್ಮ ನಾಡಿನ ಭಾಷೆ ಉಳಿಸಿಕೊಳ್ಳಲು ನಾಮಫಲಕಗಳನ್ನು ಕನ್ನಡದಲ್ಲಿ ಕಡ್ಡಾಯ ಮಾಡಿದರೆ, ಅದನ್ನು ಬದಲಾಯಿಸಲು ಸುಗ್ರೀವಾಜ್ಞೆಗಳನ್ನೂ ಇವರು ರಾತ್ರೋ ರಾತ್ರಿ ತರುತ್ತಾರೆ. ದೇಶಭಕ್ತಿ, ಐಕ್ಯತೆ ಮತ್ತು ಸಮಗ್ರತೆ ಬಗ್ಗೆ ಬೋಗಸ್ ಜನತಾ ಪಾರ್ಟಿಯವರಿಂದ ಕಲಿಯುವ ದುಸ್ಥಿತಿ ನಮಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ರವರು ನಿನ್ನೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮುಂಬರುವ ಬಜೆಟ್‌ನಲ್ಲಿ ಕ್ಷೇತ್ರಕ್ಕೆ ಅನುದಾನ ಮೀಸಲಿರಿಸುವಂತೆ ಮನವಿ ಮಾಡಿದ್ದಾರೆ.

ಮುಖ್ಯವಾಗಿ ಆನೇಕಲ್ ತಾಲ್ಲೂಕಿನಲ್ಲಿ ಹಸಿರುಮನೆ ಹೂ ಬೆಳೆಗಾರರಿಗೆ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿರುವುದು ಗಮನಾರ್ಹ ವಿಷಯವಾಗಿದೆ.

ಸಂಸದರ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವಸತಿ ರಹಿತರಿಗೆ ಅನುಕೂಲ ಆಗುವಂತೆ ರಾಜೀವ್ ಗಾಂಧಿ ವಸತಿ ನಿಗಮದ ಅಡಿಯಲ್ಲಿ ವಸತಿ ಕಲ್ಪಿಸುವಂತೆ ಬಜೆಟ್‌ನಲ್ಲಿ ಅನುವು ಮಾಡಿಕೊಡಲು ಮನವಿ ಮಾಡಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ವಸತಿ ರಹಿತ ಬಡವರಿಗೆ ಮುಂದಿನ ದಿನಗಳಲ್ಲಿ ಮನೆಗಳು ಸಿಗುವ ಲಕ್ಷಣಗಳು ಕಂಡುಬರುತ್ತಿವೆ.

ಒಟ್ಟಾರೆಯಾಗಿ ಇವರ ಕ್ಷೇತ್ರದ ಅಡಿಯಲ್ಲಿ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದ್ದಾರೆ. ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಸಿ.ಬಾಲಕೃಷ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.