ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ನಾಥೂರಾಂ ಗೋಡ್ಸೆ Archives » Dynamic Leader
October 20, 2024
Home Posts tagged ನಾಥೂರಾಂ ಗೋಡ್ಸೆ
ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-2023’ ಪ್ರದಾನ ಮಾಡಿ ಮಾತನಾಡಿದರು.

2014ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ, ಮಹಾತ್ಮ ಗಾಂಧಿಯವರ ಜಯಂತಿಯಂದು ಗಾಂಧಿ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿ, ಗಾಂಧಿಜೀಯವರ ತತ್ವಾದರ್ಶಗಳ ಹಾದಿಯಲ್ಲಿ ನಡೆಯುವ ವ್ಯಕ್ತಿ ಅಥವಾ ಸಂಘಸಂಸ್ಥೆಗಳಿಗೆ ಗಾಂಧಿ ಪ್ರಶಸ್ತಿಯನ್ನು ನೀಡಬೇಕೆಂದು ಆದೇಶ ಹೊರಡಿಸಲಾಯಿತು. ಪ್ರಶಸ್ತಿಗೆ ಆರ್ಹರಾಗುವವರು ಗಾಂಧಿಜೀಯವರ ತತ್ವಗಳಲ್ಲಿ ನಂಬಿಕೆಯಿಟ್ಟುವವರಾಗಿರಬೇಕು. ಧಾರವಾಡದ ಗರಗ ಕ್ಷೇತ್ರಿಯ ಸೇವಾ ಸಂಘ ಖಾದಿ ಉತ್ಪನ್ನ ಮತ್ತು ಮಾರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಭಾರತದ ರಾಷ್ಟ್ರಧ್ವಜ ತಯಾರಕರಾಗಿದ್ದಾರೆ. ಇಲ್ಲಿ ತಯಾರಾಗುವ ರಾಷ್ಟ್ರಧ್ವಜವನ್ನು ಇಡೀ ದೇಶಕ್ಕೆ ಸರಬರಾಜು ಮಾಡಲಾಗುತ್ತದೆ. ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನರಾದ ಈ ಸಂಸ್ಥೆಯ ಎಲ್ಲರಿಗೂ ಅಭಿನಂದನೆಗಳು ಹಾಗೂ ಪ್ರಶಸ್ತಿಯ ಆಯ್ಕೆ ಸಮಿತಿಗೆ ಧನ್ಯವಾದಗಳು ಎಂದು ಹೇಳಿದರು.

ಮಹಾತ್ಮ ಗಾಂಧಿಯವರ ವಿಚಾರಧಾರೆ ಎಲ್ಲ ಕಾಲಕ್ಕೂ ಪ್ರಸ್ತುತ. ವಕೀಲ ವೃತ್ತಿಯಲ್ಲಿದ್ದ ಗಾಂಧಿಯವರು ದಕ್ಷಿಣಾ ಆಫ್ರಿಕಾದಲ್ಲಿ ವರ್ಣಬೇಧದಿಂದ ಅವಮಾನಿತರಾದರು. ಆ ದೇಶದಲ್ಲಿ ವರ್ಣಬೇಧದ ವಿರುದ್ಧ ಹೋರಾಟ ನಡೆಸಿದರು. ಗೋಪಾಲಕೃಷ್ಣ ಗೋಖಲೆಯವರು ಕಾಂಗ್ರೆಸ್ ನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಗಾಂಧಿಯವರ ಹೋರಾಟವನ್ನು ನೋಡಿ, ಭಾರತವನ್ನು ಬ್ರಿಟೀಷರ ದಾಸ್ಯದಿಂದ ತಪ್ಪಿಸಲು ಗಾಂಧಿಯವರು ನೇತೃತ್ವವನ್ನು ವಹಿಸಲು ಕೋರಿದರು. 1915ರಲ್ಲಿ ಗಾಂಧಿಯವರು ಭಾರತಕ್ಕೆ ಬಂದರು. ಭಾರತದ ಸಾಮಾಜಿಕ ವ್ಯವಸ್ಥೆ, ಜನರ ಬದುಕನ್ನು ಅರಿಯಲು ರೈಲಿನಲ್ಲಿ 3ನೇ ದರ್ಜೆಯಲ್ಲಿಯೇ ಪ್ರಯಾಣ ಮಾಡಿ ಇಡೀ ಭಾರತವನ್ನು ಸುತ್ತಿದ್ದ ಅತ್ಯಂತ ಸರಳ ಜೀವಿ ಅವರು ಎಂದು ಗಾಂಧಿಯನ್ನು ಸ್ಮರಿಸಿದರು.

ಗಾಂಧಿಯವರ ಮಾತು ಹಾಗೂ ಕೃತಿಯಲ್ಲಿ ವ್ಯತ್ಯಾಸವಿರಲಿಲ್ಲ. ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ, ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಅನುಸರಿಸಿದರು. ಅಹಿಂಸೆಯ ಹಾದಿಯಲ್ಲಿ ನಡೆದು ಸ್ವಾತಂತ್ರ್ಯ ಪಡೆಯಲು ಹೊರಟ ದೇಶವೆಂದರೆ ಅದು ಭಾರತ. ಗಾಂಧಿಯವರು ದೊಡ್ಡ ಮಾನವತಾವಾದಿ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸ್ವಭಾವವನ್ನು ಬೆಳೆಸಿಕೊಳ್ಳುವ ಮೂಲಕ ಗಾಂಧಿಯವರಿಗೆ ನಿಜವಾದ ಗೌರವ ಅರ್ಪಿಸಿದಂತಾಗುತ್ತದೆ. ಅವರು ನಡೆದ ದಾರಿಯಲ್ಲಿ ನಡೆಯುವ ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಗಾಂಧಿಯವರಿಗೆ ಮಹಾತ್ಮ ಎಂದು ಬಿರುದು ನೀಡಿದವರು ರವೀಂದ್ರನಾಥ ಟಾಗೋರ್ ಅವರು. ಸುಭಾಷ್ ಚಂದ್ರ ಬೋಸ್ ಅವರು ರಾಷ್ಟ್ರಪಿತ ಎಂದು ಕರೆದರು. ದೇಶದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡಲು ಕೊನೆಯವರೆಗೂ ಶ್ರಮಿಸಿದ್ದರು. ಆದರೆ ನಾಥೂರಾಂ ಗೋಡ್ಸೆಯವರ ಮತಾಂಧತೆಯಿಂದ ಅವರು ಅಸುನೀಗಿದರು. ನಾಥೂರಾಂ ಅವರನ್ನು ಪೂಜಿಸುವವರು ಈ ದೇಶದಲ್ಲಿರುವುದು ವಿಷಾದನೀಯ. ಇಂತಹವರ ಬಗ್ಗೆ ನಾವು ಜಾಗೃತರಾಗಿರಬೇಕು ಎಂದು ಕಿಡಿಕಾರಿದರು.

ಭಾರತ ಹಳ್ಳಿಗಳ ದೇಶ. ಹಳ್ಳಿಗಳ ಸ್ವಾವಂಬನೆಯಿಂದ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ. ನಮ್ಮ ದೇಶಕ್ಕೆ ದೊಡ್ಡ ಕೈಗಾರಿಕೆಗಳ ಬದಲು ಗುಡಿ ಕೈಗಾರಿಕೆಗಳು ಬರಬೇಕು. ಅವರು ಹೇಳಿದ ಪಂಚಾಯತ್ ರಾಜ್ ವ್ಯವಸ್ಥೆಯಂತೆ ಅಧಿಕಾರ ಹಳ್ಳಿಯಿಂದ ದಿಲ್ಲಿಗೆ ಹೋಗಬೇಕೆ ಹೊರತು, ದಿಲ್ಲಿಯಿಂದ ಹಳ್ಳಿಗೆ ಬರಬಾರದು ಎಂದಿದ್ದರು. ದೇಶ, ರಾಜ್ಯ, ಜಿಲ್ಲೆ, ಹಳ್ಳಿ ನಾಲ್ಕು ಹಂತದಲ್ಲಿ ಅಧಿಕಾರದ ವಿಕೇಂದ್ರೀಕರಣವು, ಜನರ ಪಾಲ್ಗೊಳ್ಳುವಿಕೆಯಿಂದ ಜನತಂತ್ರದ ವಿಕೇಂದ್ರೀಕರಣ ಸಾಧ್ಯ. ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಗಾಂಧಿಯವರ ಚಿಂತನೆಗಳೇ ಪ್ರೇರಣೆ ಎಂದು ಮೊಳಗಿದರು.

ಮಹಿಳಾ ಸ್ವಾತಂತ್ರ್ಯ ಹಾಗೂ ಸಬಲೀಕರಣದ ಬಗ್ಗೆ ಗಾಂಧಿಯವರು ಅಪಾರವಾದ ಬದ್ಧತೆ ಹೊಂದಿದ್ದರು. ಮಹಿಳೆಯರ ಅಭಿವೃದ್ಧಿಯಿಂದ ನಾಡು, ದೇಶದ ಅಭಿವೃದ್ಧಿ ಸಾಧ್ಯ. ನಮ್ಮ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದೆ. ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಅನ್ನಭಾಗ್ಯ ಯೋಜನೆಗಳು ಗಾಂಧಿ ತತ್ವಗಳನ್ನು ಅವಲಂಬಿಸಿದೆ ಎಂದು ತಮ್ಮ ಸರ್ಕಾರದ ಯೋಜನೆಗಳನ್ನು ಸಮರ್ಥಿಸಿಕೊಂಡರು.

ಇಂದು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯಾಗಿದ್ದು, ಇಡೀ ದೇಶದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಭಾರತ ಕಂಡ ಪ್ರಾಮಾಣಿಕ ರಾಜಕಾರಣಿ ಲಾಲ್ ಬಹದ್ದೂರ್ ಶಾಸ್ತ್ರಿ. ಸ್ವಾತಂತ್ರ್ಯ ಹೋರಾಟಗಾರರಾಗಿ, ಗಾಂಧಿವಾದಿಯಾಗಿ ಬದುಕಿದವರು. ಅವರನ್ನು ಈ ಸಂದರ್ಭದಲ್ಲಿ ಗೌರವದಿಂದ ನೆನೆಯುತ್ತೇನೆ ಎಂದು ಹೇಳಿದರು.