ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಯತೀಂದ್ರ ಸಿದ್ದರಾಮಯ್ಯ Archives » Dynamic Leader
October 16, 2024
Home Posts tagged ಯತೀಂದ್ರ ಸಿದ್ದರಾಮಯ್ಯ
ರಾಜಕೀಯ

ಮೈಸೂರು: ಇಂದು ವರುಣಾ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ಕೃತಜ್ಞತಾ ಸಮರ್ಪಣಾ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕಾರಣಕ್ಕಾಗಿ ನಾಡಿನ ಜನತೆಗೆ ನಾನು ಕೃತಜ್ಞ.

ಇದು ನನ್ನ ಕೊನೆಯ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. 2013ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ.

ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು, ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದಿದ್ದೆ. ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ, ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ ಎಂಬುದು ನನ್ನ ಭಾವನೆ.

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಗ್ಯಾರಂಟಿಗಳು ಜಾರಿ ಆಗುವುದಿಲ್ಲ, ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ನಾವು ಈಗ ಐದನ್ನೂ ಜಾರಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಬಡವರ-ಮಧ್ಯಮ ವರ್ಗದವರ ಪರವಾದ ಯೋಜನೆ ಘೋಷಿಸಿದಾಗ ಪ್ರಧಾನ ಮಂತ್ರಿ ಮೋದಿಯವರು ಜನರಿಗೆ ಅನುಕೂಲ ಮಾಡುವ ನಮ್ಮ ಯೋಜನೆಗೆ ತಮ್ಮ ಸಹಕಾರ ನೀಡಬೇಕಿತ್ತು. ಆದರೆ ಮೋದಿ ಅವರಿಗೆ ಬಡವರ-ಮಧ್ಯಮ ವರ್ಗದವರ ಪ್ರಗತಿ, ಅಭಿವೃದ್ಧಿ ಬೇಕಾಗಿಲ್ಲ. ಅದಕ್ಕೇ ಬಿಜೆಪಿಯವರು ಜನರಲ್ಲಿ ತಮ್ಮ ಸಂಪ್ರದಾಯದಂತೆ ಸುಳ್ಳುಗಳನ್ನು ಎರಚಾಡುತ್ತಾ ಗೊಂದಲ ಸೃಷ್ಟಿಸುತ್ತಿದ್ದಾರೆ” ಎಂದರು.