ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಸಂಸತ್ ಚುನಾವಣೆ Archives » Page 2 of 3 » Dynamic Leader
October 23, 2024
Home Posts tagged ಸಂಸತ್ ಚುನಾವಣೆ (Page 2)
ರಾಜಕೀಯ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಜನರ ಧ್ವನಿ, ಸಂವಿಧಾನ ರಕ್ಷಣೆಯ ಧ್ವನಿ, ರಾಜ್ಯದ ಪರವಾದ ಧ್ವನಿ, ಸಾಮಾಜಿಕ ನ್ಯಾಯದ ಧ್ವನಿ, ಇವರು ನಮ್ಮ-ನಿಮ್ಮಲ್ಲರ ಧ್ವನಿಯಾಗಿ ಸಂಸತ್ತಿಗೆ ಹೋಗ್ತಾರೆ. ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸಿ ಕಳಿಸೋಣ ಎಂದು ಹೇಳಿದರು.

ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ ಸಾಮಾನ್ಯ ಒಕ್ಕಲಿಗ ಕುಟುಂಬದಿಂದ ಬಂದು, ಶ್ರಮದಿಂದ ಮೇಲೆ ಬಂದ ಕಾರ್ಯಕರ್ತ. ಇವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರವನ್ನು ವ್ಯಾಪಕವಾಗಿ ಮಾಡುತ್ತಿದ್ದಾರೆ. ಆದರೆ, ಎಂ.ಲಕ್ಷ್ಮಣ್ ಅವರು ಅಪ್ಪಟ ಒಕ್ಕಲಿಗರು. ಬಿಜೆಪಿ ಒಕ್ಕಲಿಗರಿಗೆ ಟಿಕೆಟ್ ತಪ್ಪಿಸಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ, ಆ ಕಾರಣಕ್ಕೇ ಲಕ್ಷ್ಮಣ್ ಅವರು ಒಕ್ಕಲಿಗರೇ ಅಲ್ಲ ಎನ್ನುವ ಅಪಪ್ರಚಾರ ಮಾಡುತ್ತಿದ್ದಾರೆ. ಈ ಸುಳ್ಳು ಮತ್ತು ಅಪಪ್ರಚಾರವನ್ನು ನಂಬಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ನಮ್ಮ ನಾಡಿಗೆ ಪ್ರವಾಹ ಬಂದಾಗ ನರೇಂದ್ರ ಮೋದಿ ಬರಲಿಲ್ಲ; ಬರಗಾಲ ಬಂದಾಗಲೂ ಮೋದಿ ಬರಲಿಲ್ಲ. ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾದಾಗಲೂ ಮೋದಿ ಬರಲಿಲ್ಲ; ಚುನಾವಣೆ ಬಂತು ನೋಡಿ – ಮೋದಿ ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಾರೆ ಎಂದು ವ್ಯಂಗ್ಯವಾಡಿದರು.

ಹೆಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ್ದೇ ಬಿಜೆಪಿ. ಹಾಗಂತ ಇದೇ ಕುಮಾರಸ್ವಾಮಿ ಬಯ್ಯುತ್ತಿದ್ದರು. ಈಗ ದೇವೇಗೌಡರು ಮತ್ತು ಕುಮಾರಸ್ವಾಮಿ ಇಬ್ಬರೂ ಬಿಜೆಪಿ ಜತೆ ಸೇರಿಕೊಂಡಿದ್ದಾರೆ. ಆದ್ದರಿಂದ ಇವರು ತಮ್ಮ ಪಕ್ಷದ ಹೆಸರಿನಲ್ಲಿರುವ ಸೆಕ್ಯುಲರ್ ಪದವನ್ನು ಕಿತ್ತಾಕೋದು ಉತ್ತಮ ಎಂದೆ. ಇಷ್ಟು ಹೇಳಿದ್ದಕ್ಕೇ ದೇವೇಗೌಡರು ಸಿದ್ದರಾಮಯ್ಯರಿಗೆ ಗರ್ವ ಇದೆ ಎನ್ನುತ್ತಿದ್ದಾರೆ.

ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ. ನಿಮ್ಮ ರಾಜಕೀಯ ನಿಲುವುಗಳಿಗೆ ಮಾಡುವ ವಿರೋಧ. ಯಾವುದೇ ಕಾರಣಕ್ಕೂ ದೇವೇಗೌಡರ ಬಗ್ಗೆ ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ. ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರನ್ನೂ ಬಳಸಿ ಬಿಸಾಡಿದ ಜೆಡಿಎಸ್ ನವರು, ನನ್ನನ್ನೂ ಪಕ್ಷದಿಂದ ಹೊರಗೆ ಹಾಕಿದರು. ಇದೇ ರೀತಿ ಹಲವು ನಾಯಕರನ್ನು ಬಳಸಿ ಬಿಸಾಕಿದ್ದಾರೆ. ಇವರ ಈ ರಾಜಕೀಯ ವರ್ತನೆಗೆ ಮಾತ್ರ ನಮ್ಮ ವಿರೋಧ ಎಂದು ಪುನರುಚ್ಚಿಸಿದರು.

ಆದ್ದರಿಂದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಕಣ್ಣೀರಿಗೆ ಮರಳಾಗದೆ, ಅವರ ಮಾತುಗಳನ್ನು, ಅವರ ವರ್ತನೆಯನ್ನು, ಪದೇ ಪದೇ ಬದಲಾಗುವ ಅವರ ನಿಲುವುಗಳನ್ನು ಪ್ರಶ್ನಿಸಿ ಪ್ರಭುದ್ಧವಾದ ಮತ್ತು ಖಚಿತವಾದ ರಾಜಕೀಯ ನಿರ್ಧಾರ ತೆಗೆದುಕೊಳ್ಳಬೇಕು. ಮೈಸೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮಾಡಿದ, ನಾನು ಮುಖ್ಯಮಂತ್ರಿಯಾಗಿ ಮಾಡಿದ ಅಭಿವೃದ್ಧಿ ಕೆಲಸಗಳು ಕಣ್ಣ ಮುಂದಿವೆ. ಬಿಜೆಪಿ, ಜೆಡಿಎಸ್ ಸರ್ಕಾರದಲ್ಲಿ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ ಎಂದು ಸವಾಲೆಸದರು.

ಪಶು ಸಂಗೋಪನಾ ಸಚಿವರಾದ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್,‌ ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ಮತ್ತು ಜಿಲ್ಲೆಯ ಶಾಸಕರುಗಳು, ಮಾಜಿ ಶಾಸಕರುಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರು ಹಾಗೂ ಬ್ಲಾಕ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜಕೀಯ

ಏಪ್ರಿಲ್ 19 ರಿಂದ ಸಂಸತ್ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್ಲಾ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ಆ ಮೂಲಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಇತ್ತೀಚಿಗೆ ತಲೆಗೆ ಪೆಟ್ಟಾದ ಕಾರಣ, ಕೆಲ ದಿನಗಳ ನಂತರ ಮತ್ತೆ ಸಕ್ರಿಯ ಪ್ರಚಾರದಲ್ಲಿ ತೊಡಗಿದ್ದಾರೆ.

ಅದರಂತೆ ನಿನ್ನೆ ಕೃಷ್ಣಾ ನಗರ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಮಹುವಾ ಮೊಯಿತ್ರಾ ಅವರಿಗಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ಕುರಿತು ಮಾತನಾಡಿದ ಅವರು, “ಬಿಜೆಪಿ ಮತ್ತು ಅದರ ಮೈತ್ರಿಕೂಟ ದೇಶಾದ್ಯಂತ 400 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಮಾತನಾಡುತ್ತಿದೆ. ನಾನು ನಿಮಗೆ (ಬಿಜೆಪಿ) ಸವಾಲು ಹಾಕುತ್ತೇನೆ. 400 ಸ್ಥಾನಗಳಲ್ಲಿ ಬೇಡ; ಬರೀ 200 ಸ್ಥಾನಗಳಲ್ಲಿ ಗೆದ್ದು ತೋರಿಸಿ.

ಅದೇ ರೀತಿ ಕಳೆದ 2021ರ ವಿಧಾನಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿತ್ತು. ಆದರೆ ಅಂತಿಮವಾಗಿ ಅವರಿಗೆ ಕೇವಲ 77 ಸ್ಥಾನಗಳು ಮಾತ್ರವೇ ಸಿಕ್ಕಿದ್ದು. ಆ 77 ರಲ್ಲಿ ಕೂಡ ಕೆಲವರು ನಮ್ಮಲ್ಲಿ (ತೃಣಮೂಲ ಕಾಂಗ್ರೆಸ್‌) ಸೇರಿಕೊಂಡಿದ್ದಾರೆ. ಹೀಗಾಗಿ ಬಿಜೆಪಿಯವರು ಹೇಳುವುದನ್ನು ಗಂಭೀರವಾಗಿ ಪರಿಗಣಿಸಬೇಡಿ’’ ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಅವರು, “ಬಿಜೆಪಿ ಖಾಲಿ (ಡಮ್ಮಿ) ಪಕ್ಷ. ಬಿಜೆಪಿಯವರು ಜನರಿಗೆ ಸುಳ್ಳು ಭರವಸೆಗಳನ್ನು ಮಾತ್ರವೇ ನೀಡುತ್ತಾರೆ. ಸಿಎಎ (CAA) ಕಾನೂನು ಬದ್ಧವಾದ ನಾಗರಿಕರನ್ನು ವಿದೇಶಿಯರನ್ನಾಗಿ ಮಾಡುವ ತಂತ್ರವಾಗಿದೆ. ಸಿಎಎ ಮೊದಲು ಬಂದರೆ, ನಂತರ ಎನ್‌ಆರ್‌ಸಿ (NRC) ಬರುತ್ತದೆ. ಪಶ್ಚಿಮ ಬಂಗಾಳದಲ್ಲಿ ಸಿಎಎ, ಎನ್‌ಆರ್‌ಸಿಯಂತಹ ಯಾವುದನ್ನೂ ನಾವು ಅನುಮತಿಸುವುದಿಲ್ಲ.

ನೀವು ಮತ್ತೆ ಕೇಂದ್ರ ಬಿಜೆಪಿ ಸರ್ಕಾರವನ್ನು ನಂಬಿದರೆ, ಅವರು ನಿಮ್ಮನ್ನೂ ವಿದೇಶಿಯರನ್ನಾಗಿ ಮಾಡುತ್ತಾರೆ. ಬಿಜೆಪಿಯವರನ್ನು ಎಂದಿಗೂ ನಂಬಬೇಡಿ. ‘ಬಿಜೆಪಿ ನಾಯಕರು ಸಿಎಎಗೆ ಏಕೆ ಅರ್ಜಿ ಸಲ್ಲಿಸಲಿಲ್ಲ? ಏಕೆಂದರೆ ಅವರು ಅರ್ಜಿ ಸಲ್ಲಿಸಿದರೆ, ಅವರು ತಮ್ಮನ್ನು ವಿದೇಶಿಯರೆಂದು ಘೋಷಿಸಬೇಕು. ಹಾಗಾಗಿ ಅವರು ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.” ಎಂದರು.

ದೇಶ

ಚುನಾವಣಾ ಬಾಂಡ್‌ಗಳ ಯೋಜನೆಗೆ ಸುಪ್ರೀಂ ಕೋರ್ಟ್ ನಿಷೇಧ ಹೇರುವ ಮೂರು ದಿನಗಳ ಮೊದಲು, ರೂ.10,000 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಮುದ್ರಿಸಲು ಸೆಕ್ಯುರಿಟಿ ಪ್ರಿಂಟಿಂಗ್ ಮತ್ತು ಮಿಂಟಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾಗೆ (SPMCIL) ಹಣಕಾಸು ಸಚಿವಾಲಯ ಅನುಮೋದನೆ ನೀಡಿತ್ತು ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

ತಲಾ ರೂ.1 ಕೋಟಿ ರೂಪಾಯಿಯ 10,000 ಚುನಾವಣಾ ಬಾಂಡ್‌ಗಳನ್ನು ಮುದ್ರಿಸಲು ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿತ್ತು ಎಂಬ ಮಾಹಿತಿಯು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಯಿಂದ ಬಹಿರಂಗಗೊಂಡಿದೆ. 10,000 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳ ಮುದ್ರಣವನ್ನು ನಿಲ್ಲಿಸುವಂತೆ ಹಣಕಾಸು ಸಚಿವಾಲಯ ಕಳೆದ ತಿಂಗಳು 28 ರಂದು ಆದೇಶ ನೀಡಿತ್ತು.

ಚುನಾವಣಾ ಬಾಂಡ್‌ಗಳನ್ನು ನಿಷೇಧಿಸಿದ ಸುಪ್ರೀಂ ಕೋರ್ಟ್‌ನ ಆದೇಶ ಹೊರಬಿದ್ದ 2 ವಾರಗಳ ನಂತರ, ಮುದ್ರಣವನ್ನು ಸ್ಥಗಿತಗೊಳಿಸುವಂತೆ ಎಸ್‌ಬಿಐ ಹಣಕಾಸು ಸಚಿವಾಲಯವನ್ನು ಕೋರಿದ ನಂತರ ಈ ಆದೇಶ ಹೊರಡಿಸಲಾಗಿದೆ. ಆದರೆ, ಅಷ್ಟರೊಳಗೆ ಸೆಕ್ಯುರಿಟಿ ಪ್ರಿಂಟಿಂಗ್ ಮತ್ತು ಮಿಂಟಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ  10,000 ಚುನಾವಣಾ ಬಾಂಡ್‌ಗಳಲ್ಲಿ ತಲಾ ರೂ.1 ಕೋಟಿಯ 8,350 ಚುನಾವಣಾ ಬಾಂಡ್‌ಗಳನ್ನು ಸಿದ್ಧಪಡಿಸಿ ಎಸ್‌ಬಿಐಗೆ ಕಳುಹಿಸಿಕೊಟ್ಟಿತ್ತು. ಹಾಗಾಗಿ ಉಳಿದ 1,650 ಚುನಾವಣಾ ಪತ್ರಿಕೆಗಳ ಮುದ್ರಣವನ್ನು ಮಾತ್ರ ತಡೆಹಿಡಿಯಲಾಗಿದೆ.

ವ್ಯಕ್ತಿಗಳು ಮತ್ತು ಕಾರ್ಪೊರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ರೂ.1,000, ರೂ.10,000, ರೂ.1 ಲಕ್ಷ, ರೂ.10 ಲಕ್ಷ ಮತ್ತು 1 ಕೋಟಿ ರೂ.ಗಳ ಬಾಂಡ್‌ಗಳನ್ನು ವಿತರಿಸಲು ಅವಕಾಶ ನೀಡುವ ಸಲುವಾಗಿ ಎಲೆಕ್ಟೋರಲ್ ಬಾಂಡ್ ಯೋಜನೆ ಪರಿಚಯಿಸಲಾಯಿತು. ರಾಜಕೀಯ ಪಕ್ಷದಿಂದ 15 ದಿನಗಳೊಳಗೆ ಬಾಂಡ್‌ಗಳಿಂದ ಹಣವನ್ನು ಪಡೆಯಬಹುದು. ಆದರೆ, ಯಾವ್ಯಾವ ರಾಜಕೀಯ ಪಕ್ಷಗಳಿಗೆ ಯಾರು ಹಣ ನೀಡಿದ್ದಾರೆ ಎಂಬ ಮಾಹಿತಿಯನ್ನು ಇದರಲ್ಲಿ ಸೂಚ್ಯವಾಗಿ ರಕ್ಷಿಸಲಾಗುತ್ತದೆ ಎಂಬುದು ಗಮನಾರ್ಹ.

ರಾಜಕೀಯ

ಬೆಂಗಳೂರು: ಈ ಬಾರಿ ಕರ್ನಾಟಕದಲ್ಲಿ “ಇಂಡಿಯಾ” ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ತಮ್ಮ ಬೆಂಬಲ ಎಂದು “ಕರ್ನಾಟಕ ತಮಿಳರ ಸಂಘ” ತೀರ್ಮಾನಿಸಿದೆ ಎಂದು ಅದರ ಅಧ್ಯಕ್ಷ ಪ್ರಕಾಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸುಮಾರು 80 ಲಕ್ಷ ತಮಿಳರಿದ್ದಾರೆ. ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ,  ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಮುಂತಾದ ಜಿಲ್ಲೆಗಳಲ್ಲಿ ಮತ್ತು ಕೋಲಾರದ ಕೆಜಿಎಫ್‌ನಲ್ಲಿ ವ್ಯಾಪಕವಾಗಿ ವಾಸಿಸುತ್ತಿದ್ದಾರೆ. ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಶಿವಮೊಗ್ಗ ಮತ್ತು ಕೋಲಾರದ ಕೆಜಿಎಫ್‌ನಲ್ಲಿ ತಮಿಳರೆ ನಿರ್ಣಾಯಕರು.

ಆದರೆ, ತಮಿಳರಿಗೆ ಇಲ್ಲಿ ಯಾವುದೇ ರಾಜಕೀಯ ಪ್ರಾತಿನಿತ್ಯ ನೀಡುವುದಿಲ್ಲ. ಇಲ್ಲಿ ಎಲ್ಲರಿಗೂ ಜಾತಿ ಆಧಾರದ ಮೇಲೆಯೆ ಅವಕಾಶ ನೀಡಲಾಗುತ್ತಿದೆ. ಆದರೆ ಬೆಂಗಳೂರಿನಲ್ಲಿ ಯಾರೊಬ್ಬರೂ ತಮ್ಮ ಜಾತಿಯ ಮತಗಳಿಂದ ಗೆದ್ದು ಬರುವುದಿಲ್ಲ. ಗೆಲ್ಲಬೇಕಾದರೆ ಅವರಿಗೆ ತಮಿಳರು ಮತ್ತು ಕೊಳಗೇರಿ ಜನರ ಮತಗಳು ಬೇಕು. ಬೆಂಗಳೂರಿನ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಜನರಲ್ಲಿ ಸುಮಾರು ಶೇ.60ರಷ್ಟು ಜನ ತಮಿಳು ಭಾಷಿಕರಾಗಿದ್ದಾರೆ ಎಂಬುದು ಇಲ್ಲಿ ಗಮನಾರ್ಹ.

ಕಳೆದ ರಾಜ್ಯ ಬಿಜೆಪಿ ಸರ್ಕಾರದಲ್ಲಿ, ಮತಾಂತರ ನಿಷೇಧ ಕಾಯಿದೆ, ಗೋಹತ್ಯೆ ನಿಷೇಧ ಕಾಯಿದೆ ಮುಂತಾದ ಸಂವಿಧಾನ ವಿರೋಧಿ ಕಾಯಿದೆಗಳನ್ನು ತಂದು ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದಬ್ಬಾಳಿಕೆ ಮಾಡಲಾಯಿತು. ಇದರಿಂದ ಕರ್ನಾಟಕದಲ್ಲಿ ಮುಸ್ಲಿಮರು ಮಾತ್ರವಲ್ಲ ತಮಿಳು ಕ್ರೈಸ್ತರು ಮತ್ತು ಆದಿ ದ್ರಾವಿಡ (ತಮಿಳರು) ಸಮುದಾಯವು ಕೂಡ ದಬ್ಬಾಳಿಕೆಯನ್ನು ಎದುರಿಸಬೇಕಾಯಿತು.

ಬೆಂಗಳೂರು ಮಹಾನಗರದ ಸುತ್ತಮುತ್ತ ಮತ್ತು ಕೆಜಿಎಫ್‌ನಲ್ಲಿರುವ ಕ್ರೈಸ್ತರಲ್ಲಿ ಶೇ.80ರಷ್ಟು ಜನ ತಮಿಳು ಕ್ರೈಸ್ತರಾಗಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃದ ಕಾಂಗ್ರೆಸ್ ಸರ್ಕಾರ ಬಂದಮೇಲೆ ರಾಜ್ಯದಲ್ಲಿ ಅಲ್ಪಸಂಖ್ಯಾತರು ವಿಶೇಷವಾಗಿ ತಮಿಳು ಕ್ರೈಸ್ತರು ಹಾಗೂ ಆದಿ ದ್ರಾವಿಡ ಸಮುದಾಯವು ನಿಟ್ಟುಸಿರು ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

2024-25ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ರೂ.500 ಕೋಟಿ ನಿರೀಕ್ಷಿಸಲಾಗಿತ್ತು. ಆದರೆ, ರೂ.200 ಕೋಟಿಯಷ್ಟೆ ಘೋಷಣೆ ಮಾಡಲಾಗಿದೆ. ತಮಿಳು ಕ್ರೈಸ್ತರಿಗೆ ಇದರಲ್ಲೂ ಸ್ವಲ್ಪ ಮಟ್ಟಿಗೆ ಪಾಲು ದೊರೆತಿದೆ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ 5 ಗ್ಯಾರಂಟಿ (ಅನ್ನ ಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಉಚಿತ ಪ್ರಯಾಣ, ಯುವನಿಧಿ)  ಯೋಜನೆಯಿಂದ ಕರ್ನಾಟಕ ತಮಿಳರು ಹೆಚ್ಚಾಗಿ ಅನುಕೂಲ ಪಡೆದಿದ್ದಾರೆ. ವಿಶೇಷವಾಗಿ ಕೊಳಗೇರಿಗಳಲ್ಲಿ ವಾಸವಾಗಿರುವ ಅಸಂಘಟಿ ತಮಿಳು ಕೂಲಿ ಕಾರ್ಮಿಕರು ಹೆಚ್ಚಿನ ರೀತಿಯಲ್ಲಿ ಅನುಕೂಲತೆಯನ್ನು ಪಡೆದುಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ, ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು, ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿ ತಮಿಳುನಾಡಿನವರು ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ತಮಿಳರ ಮಧ್ಯೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಶೋಭಾ ಕರಂದ್ಲಾಜೆ ವಿರುದ್ಧ ತಮಿಳುನಾಡಿನಲ್ಲಿ ಪ್ರಕರಣಗಳು ದಾಖಲಾದವು. ಡಿಎಂಕೆ ದೂರಿನ ಮೇರೆಗೆ, ಕರ್ನಾಟಕದಲ್ಲೂ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ. ಶೋಭಾ ಕರಂದ್ಲಾಜೆ ಅವರ ಈ ಹೇಳಿಕೆಯಿಂದ ಕರ್ನಾಟಕ ತಮಿಳರು ಆಘಾತಕ್ಕೆ ಒಳಗಾಗಿದ್ದಾರೆ.

ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಮಾನ ಅವಕಾಶಕ್ಕಾಗಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಜಾತಿಗಣತಿ ನಡೆಸುವ ಆಶ್ವಾಸನೆಯನ್ನು ನೀಡಿದೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ಮತ್ತು ಅತೀ ಹಿಂದುಳಿದ, ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ಶೈಕ್ಷಣಿಕವಾಗಿ, ಔದ್ಯೋಗಿಕವಾಗಿ ಹಾಗೂ ಆರ್ಥಿಕವಾಗಿ ಇನ್ನು ಹೆಚ್ಚಾಗಿ ಪ್ರಗತಿ ಹೊಂದಲು ಅನುಕೂಲವಾಗಬಹುದು; ಇದು ಸ್ವಾಗತಾರ್ಹ.

ಮೋದಿ ಸರ್ಕಾರಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ; ಅತ್ಯಾಚಾರವೆಂಬುದು ಸಾಮಾನ್ಯವಾಗಿದೆ. ಅಲ್ಪಸಂಖ್ಯಾತರಿಗೆ ಭದ್ರತೆಯಿಲ್ಲ. ಬಿಜೆಪಿ ಸಂಸದರ ವರ್ತನೆಗೆ ಕಡಿವಾಣವಿಲ್ಲ. ಅವರ ನಾಲಿಗೆಯಲ್ಲಿ ಹಿಡಿತವಿಲ್ಲ; ಸಂವಿಧಾನ ಬದಲಿಸುವ ಬಗ್ಗೆ ಮಾತನಾಡುತ್ತಾರೆ. ರಾಜ್ಯದ, ತಮ್ಮ ಕ್ಷೇತ್ರದ ಬಗ್ಗೆ ಕಾಳಜಿಯಿಲ್ಲ; ಅವರಿಗೆ ಜನರ ಸಮಸ್ಯೆಗಳು ಅರ್ಥವಾಗುತ್ತಿಲ್ಲ. ಒಟ್ಟಾರೆಯಾಗಿ ಪ್ರಧಾನಿ ಮೋದಿಯ ಮುಂದೆ ಮಾತನಾಡುವುದೇ ಇಲ್ಲ. ಇಂತಹ ಸಂಸದರು ಮತ್ತೊಮ್ಮೆ ಬೇಕೆ?

ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಏರಿಕೆ, ಜಿಎಸ್‌ಟಿಯಲ್ಲಿ ತಾರತಮ್ಯ, ಉದ್ಯೋಗದ ನೇಮಕಾತಿಯಲ್ಲಿ ಉತ್ತರದವರಿಗೆ ಆದ್ಯತೆ, ಅತಿವೃಷ್ಟಿ-ಅನಾವೃಷ್ಟಿಯ ಕಾಲದಲ್ಲಿ ಅನುದಾನದ ನಿರಾಕರಣೆ, ಹಣ ನೀಡುತ್ತೇವೆ ಎಂದರೂ ರಾಜ್ಯಕ್ಕೆ ಅಕ್ಕಿ ಕೊಡದೆ “ಭಾರತ್ ರೈಸ್” ಹೆಸರಿನಲ್ಲಿ ಹಕ್ಕಿಯನ್ನು ಕಡಿಮೆ ಬೆಲೆಗೆ ನೇರವಾಗಿ ಮಾರಟ ಮಾಡುವುದು ಮುಂತಾದ ಇನ್ನು ಹಲವಾರು ಜನವಿರೋಧಿ ಕಾರ್ಯಗಳಿಂದ ಜನ ಬೇಸತ್ತು ಹೋಗಿದ್ದಾರೆ.

ಆದ್ದರಿಂದ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕ ತಮಿಳರ ಸಂಘವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ತೀರ್ಮಾನವನ್ನು ಮಾಡಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಶಿವಮೊಗ್ಗ ಮತ್ತು ಕೋಲಾರದ ಕೆಜಿಎಫ್‌ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ತಿಗಳನ್ನು ಬೆಂಬಲಿಸಿ ಪ್ರಚಾರ ಮಾಡುವುದರೊಂದಿಗೆ ಅವರ ಗೆಲುವಿಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡುವುದೆಂದು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದೇಶ

ಮನೀಶ್ ಸಿಸೋಡಿಯಾ ಸೇರಿದಂತೆ ನಾಯಕರ ಸತತ ಬಂಧನಗಳು ಮತ್ತು ಇದೀಗ ಕೇಜ್ರಿವಾಲ್ ಬಂಧನವು ಆಮ್ ಆದ್ಮಿ ಪಕ್ಷದ ಭವಿಷ್ಯವನ್ನು ಪ್ರಶ್ನಿಸುವಂತೆ ಮಾಡಿದೆ!

‘ಜೈಲಿನಲ್ಲಿದ್ದರೂ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದು ದೆಹಲಿ ಸಚಿವೆ ಆತಿಶಿ ಹೇಳಿದ್ದಾರೆ. ಆದರೆ, ಕಾನೂನು ಏನು ಹೇಳುತ್ತದೆ? ಪ್ರಜಾಪ್ರತಿನಿಧಿ ಕಾಯಿದೆ, 1951ರ ಪ್ರಕಾರ, ಜನರಿಂದ ಆಯ್ಕೆಯಾದ ನಾಯಕನನ್ನು ಕ್ರಿಮಿನಲ್ ಪ್ರಕರಣದಲ್ಲಿ ಬಂಧಿಸಿದರೆ, ಅವರು ತಪ್ಪಿತಸ್ಥರೆಂದು ಸಾಬೀತಾಗುವವರೆಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳುತ್ತದೆ.ಇದು ನೈತಿಕವಾಗಿ ಸರಿ ಎಂದರೆ, ಹೆಚ್ಚಿನ ತಜ್ಞರ ಉತ್ತರವು ಇಲ್ಲ ಎಂಬುದಾಗಿದೆ.

ಕೇಜ್ರಿವಾಲ್ ಅವರು ಅಧಿಕಾರದಲ್ಲಿ ಮುಂದುವರಿಯಲು ಬಯಸಿದರೂ ದೆಹಲಿ ಲೆಫ್ಟಿನೆಂಟ್ ಗವರ್ನರ್, ಸಾಂವಿಧಾನಿಕ ಯಂತ್ರೋಪಕರಣಗಳು ಸ್ಥಗಿತಗೊಂಡಿದೆ ಎಂದು ಹೇಳಿ, ಆರ್ಟಿಕಲ್ 239 ಎಬಿ ಮೂಲಕ ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು. ಆರ್ಟಿಕಲ್ 239 ಎಎ ಮೂಲಕ ಸರ್ಕಾರವನ್ನು ವಿಸರ್ಜಿಸಲು ಸಹ ಆದೇಶಿಸಬಹುದು.

ತಿಹಾರ್ ಜೈಲಿನ ಮಾಜಿ ಕಾನೂನು ಅಧಿಕಾರಿ ಸುನಿಲ್ ಗುಪ್ತಾ, ‘‘ಜೈಲಿನಿಂದ ಸರಕಾರ ನಡೆಸುವುದು ತುಂಬಾ ಕಷ್ಟದ ಕೆಲಸ. ಕುಟುಂಬದವರು, ಸಂಬಂಧಿಕರು ಅಥವಾ ಪಕ್ಷದ ಸದಸ್ಯರು ಯಾರೇ ಆಗಿರಲಿ, ವಾರಕ್ಕೆ ಎರಡು ಬಾರಿ ಮಾತ್ರ ಅವರನ್ನು ಭೇಟಿ ಮಾಡಬಹುದು ಎಂಬುದು ಜೈಲಿನ ನಿಯಮ. ಈ ನಿರ್ಬಂಧಗಳೊಂದಿಗೆ ಆಡಳಿತ ನಡೆಸುವುದು ಸುಲಭವಲ್ಲ,” ಎಂದು ಹೇಳಿದ್ದಾರೆ.

ಈ ಸಮಸ್ಯೆಯು ಎಎಪಿ-ಕಾಂಗ್ರೆಸ್ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದರೂ ಮದ್ಯದ ನೀತಿ ಹಗರಣವನ್ನು ಮೊದಲು ಬಯಲಿಗೆಳೆದದ್ದು ಕಾಂಗ್ರೆಸ್ ಎಂಬುದರಿಂದ ಈ ಸಂಬಂಧ ಹಳಸಲು ಕಾರಣವಾಗಬಹುದು. ಪ್ರಧಾನಿ ಮೋದಿಯವರನ್ನು ತೀವ್ರವಾಗಿ ಟೀಕಿಸಿದ ನಾಯಕರಲ್ಲಿ ಕೇಜ್ರಿವಾಲ್ ಕೂಡಾ ಒಬ್ಬರಾಗಿದ್ದರು.

ಅವರ ರಾಜಕೀಯ ದಳಪತಿ ಮನೀಶ್ ಸಿಸೋಡಿಯಾ ಸೇರಿದಂತೆ ನಾಯಕರ ಸತತ ಬಂಧನಗಳು ಮತ್ತು ಇದೀಗ ಕೇಜ್ರಿವಾಲ್ ಬಂಧನವು ಆಮ್ ಆದ್ಮಿ ಪಕ್ಷದ ಭವಿಷ್ಯವನ್ನು ಪ್ರಶ್ನಿಸುವಂತೆ ಮಾಡಿದೆ. ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದ ಹೇಮಂತ್ ಸೊರನ್, ಕೇಜ್ರಿವಾಲ್ ಬಂಧನದಿಂದ ‘ಭ್ರಷ್ಟಾಚಾರದಲ್ಲಿ ತೊಡಗಿರುವವರ ವಿರುದ್ಧ ಮೋದಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತಿದ್ದಾರೆ’ ಎಂಬ ಮಾತು ಲೋಕಸಭೆ ಚುನಾವಣೆ ವೇಳೆ ವ್ಯಾಪಕವಾಗಿ ಕೇಳಿಬರುವ ಸಾದ್ಯತೆಗಳಿವೆ.  

ರಾಜ್ಯ

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಪುಟ್ಟಣ್ಣನವರು ಜಯಗಳಿಸಿದ ಹಿನ್ನೆಲೆಯಲ್ಲಿ ಕೆಂಗೇರಿಯಲ್ಲಿ ಆಯೋಜಿಸಿದ್ದ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿರುವುದು, ನರೇಂದ್ರ ಮೋದಿ ಅವರನ್ನು ವಿಪರೀತ ಹೊಗಳುತ್ತಿರುವುದು ನನಗೆ ತುಂಬಾ ಆಶ್ಚರ್ಯ ಆಗಿದೆ. ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಬಯಸುತ್ತೇನೆ. ಬಿಜೆಪಿಗೆ ಯಾವತ್ತೂ ವಿರುದ್ಧವಾಗಿರುತ್ತೇವೆ” ಎಂದು ಈ ಹಿಂದೆ ದೇವೇಗೌಡರು ಹೇಳಿದ್ದುದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

“ಈಗ ತಮ್ಮ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇಂದು ನಾಡಿನ ಜನತೆ ಪ್ರಜ್ಞಾವಂತರಾಗಿದ್ದಾರೆ. ಇವರ ಹೇಳಿಕೆಗಳನ್ನು ಪರಿಶೀಲಿಸಿ ತುಲನೆ ಮಾಡುವಷ್ಟು ತಿಳಿವಳಿಕೆ ನಾಡಿನ ಜನರಿಗೆ ಬಂದಿದೆ. ರಾಜಕೀಯವಾಗಿ ದೇವೇಗೌಡರು ತಮ್ಮ ಕುಟುಂಬದ ಉಳಿವಿಗಾಗಿ ಯಾವುದೇ ನಿರ್ಧಾರಕ್ಕೆ ಬಂದರೂ ಜನರು ಕಣ್ಣುಮುಚ್ಚಿಕೊಂಡು ಅವರನ್ನು ಬೆಂಬಲಿಸಬೇಕು ಎನ್ನುವ ಸಂದರ್ಭ ಈಗ ಇಲ್ಲ” ಎಂದು ಹೇಳಿದರು.

“ಹಿಂದೆ ನಾನು ಜೆಡಿಎಸ್ ನಲ್ಲಿದ್ದಾಗ, ಪುಟ್ಟಣ್ಣನವರಿಗೆ ಶಿಕ್ಷಕರು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದ್ದು, ಚುನಾವಣೆಗೆ ನಿಲ್ಲುವುದಾಗಿ ತಿಳಿಸಿದ್ದರು. 2002ರಲ್ಲಿ ಜನರ ಆಶೀರ್ವಾದದಿಂದ ಜಯಗಳಿಸಿದರು. ನಂತರ ಐದು ಬಾರಿ ಗೆದ್ದಿದ್ದಾರೆ. ಜನರ ಧ್ವನಿಯಾಗಿ ಸಮರ್ಥವಾಗಿ ಕೆಲಸ ಮಾಡಿದ್ದು, ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದರೂ ಅವರನ್ನು ಬೆಂಬಲಿಸಿದ ಶಿಕ್ಷಕ ಸಮುದಾಯದ ಪ್ರಜ್ಞಾವಂತಿಕೆಗೆ ಮೆಚ್ಚುವಂತದ್ದು” ಎಂದು ಹೇಳಿದರು.

“ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್ ಅವರನ್ನು ಕಣಕ್ಕೆ 4 ಬಾರಿ ಇಳಿಸಲಾಗಿದೆ. ಈ ಕ್ಷೇತ್ರದಲ್ಲಿ ಅವರು ಖಂಡಿತ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ಬಿಜೆಪಿಯವರು ನರೇಂದ್ರ ಮೋದಿಯವರ ಹೆಸರಿನಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆಯೇ ಹೊರತು, ಬಿಜೆಪಿಯವರಿಗೆ ಜನರ ಬಳಿ ಹೋಗಲು ಕಾರಣಗಳೇ ಇಲ್ಲ. ನರೇಂದ್ರ ಮೋದಿಯವರ ಹೆಸರಿನ ಮೇಲೆ ಗೆಲ್ಲುತ್ತೇವೆ ಎಂದು  ಬಿಜೆಪಿ ಭಾವಿಸಿದೆ. ನರೇಂದ್ರ ಮೋದಿಯವರು ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಾದಯಾತ್ರೆ ಮಾಡಿದ್ದರೂ ನಮಗೆ 136 ಸ್ಥಾನಗಳು ದೊರೆತವು” ಎಂದು ಸಮರ್ಥಿಸಿಕೊಂಡರು.

“ಮೋದಿಯವರು ಪ್ರಚಾರ ಮಾಡಿದ್ದ ಯಾವ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲೇ ಇಲ್ಲ. ಹೀಗಾಗಿ ನರೇಂದ್ರ ಮೋದಿಯವರ ಹೆಸರಿನ ಮೇಲೆಯೇ ಗೆಲ್ಲುತ್ತೇವೆ ಎನ್ನುವ ಇವರಷ್ಟು ಮೂರ್ಖರು ಯಾರೂ ಇಲ್ಲ. ಕೊಟ್ಟ ಮಾತಿನಂತೆ ನಡೆದುಕೊಳ್ಳವವರು, ಕೆಲಸ ಮಾಡಿರುವವರಿಗೆ ತಾನೇ ಕೂಲಿ ಕೊಡುವುದು. ಗೇಯುವ ಎತ್ತಿಗೆ ಹುಲ್ಲು ಹಾಕಬೇಕು. ಕಳ್ಳ ಎತ್ತಿಗೆ ಹುಲ್ಲು ಹಾಕಬಾರದು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅವರು 28ಕ್ಕೆ 28 ಗೆಲ್ಲುತ್ತೇವೆ ಎಂದುಕೊಂಡಿದ್ದಾರೆ” ಎಂದು ವ್ಯಂಗ್ಯವಾಡಿದರು.

“ದೇವೇಗೌಡರು ನರೇಂದ್ರ ಮೋದಿ ಅವರನ್ನು ಈಗ ಹೊಗಳಿದ್ದೆ ಹೊಗಳಿದ್ದು. ನನಗೂ ಅವರಿಗೂ ಅವಿನಾಭಾವ ಸಂಬಂಧ ಇದೆ, ಜನ್ಮ ಜನ್ಮದ ಸಂಬಂಧವಿದೆ ಅಂತಲೂ ಎನ್ನುತ್ತಾರೆ. ಗೌಡರು ಹೀಗೇಕಾದರು ಎಂದು ಆಶ್ಚರ್ಯವಾಗಿದೆ. ಇದೇ ದೇವೇಗೌಡರು ನರೇಂದ್ರ ಮೋದಿಯವರು ಪುನಃ ಪ್ರಧಾನಿಯಾದರೆ ನಾನು ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಹೊಗಳುತ್ತಾರೆ. ಇದೆಂತಹ ದ್ವಂದ್ವ? ದೇಶದ ಪ್ರಧಾನಮಂತ್ರಿಯಾಗಿದ್ದವರು ಈ ರೀತಿ ಹೇಳುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ” ಆಶ್ಚರ್ಯ ವ್ಯಕ್ತಪಡಿಸಿದರು.

ದೇಶ ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಎಲ್‌.ಕೆ.ಅಡ್ವಾಣಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರನ್ನು 75 ವಯಸ್ಸಿನ ನಂತರ ” ಮಾರ್ಗದರ್ಶಕ್ ಮಂಡಲ್ ” ಎಂದು ಕರೆಯಲ್ಪಡುವ ಸ್ಟೀರಿಂಗ್ ಸಮಿತಿಗೆ ನೇಮಿಸಲಾಗಿತ್ತು. ಈ ನಿಯಮದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ವಿನಾಯಿತಿ ಸಿಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ.

ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಈಗ 73 ವರ್ಷ ವಯಸ್ಸಾಗಿದೆ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಪ್ರಧಾನಿಯಾದಾಗ, ಮೋದಿ ಅವರು 78 ವರ್ಷ ವಯಸ್ಸಿನವರೆಗೆ ಅಧಿಕಾರದಲ್ಲಿ ಉಳಿಯಬೇಕಾಗುತ್ತಾದೆ. ಹಾಗಾಗಿ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರಂತೆ 75 ವರ್ಷ ವಯಸ್ಸಿನ ನಂತರ ನಿವೃತ್ತಿಯಾಗಬೇಕು ಎಂದು ಬಲವಂತಮಾಡದೇ ಮೋದಿಯೇ ಪೂರ್ಣಾವಧಿಯವರೆಗೆ ಪ್ರಧಾನಿಯಾಗಿ ಮುಂದುವರಿಯಲು ಬಿಜೆಪಿ ತನ್ನ ನಿಲುವನ್ನು ಬದಲಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಪ್ರಧಾನಿ ಮೋದಿಯವರ ಹೆಸರಿನಲ್ಲಿ ಬಿಜೆಪಿ ದೇಶಾದ್ಯಂತ ಮತಗಳನ್ನು ಸಂಗ್ರಹಿಸುತ್ತಿದ್ದು, ಅವರು ನೇತೃತ್ವ ವಹಿಸಿಕೊಂಡ ನಂತರವೇ ವಿವಿಧ ಚುನಾವಣೆಗಳಲ್ಲಿ ಪಕ್ಷವು ಗೆಲುವು ಸಾಧಿಸುತ್ತಿದೆ ಎಂದು ಬಿಜೆಪಿ ನಾಯಕರು ಗಮನಸೆಳೆದಿದ್ದಾರೆ. ಆದ್ದರಿಂದ ಅವರಿಗೆ 75 ವಯಸ್ಸಿನ ನಿಯಮದಿಂದ ವಿನಾಯಿತಿ ಕಡ್ಡಾಯವೆಂದು ಪರಿಗಣಿಸಲಾಗಿದೆ.

ಇದೇ ವೇಳೆ, ಮೋದಿ ಅವರು ಸ್ಟೀರಿಂಗ್ ಕಮಿಟಿಗೆ ಹೋಗಬೇಕು ಎಂದು ಹಿರಿಯ ನಾಯಕರು ಒಮ್ಮತದ ಅಭಿಪ್ರಾಯ ಮಂಡಿಸಿದರೆ ಅರ್ಧದಷ್ಟು ಅವಧಿಗೆ ಮತ್ತೊಂದು ಪ್ರಧಾನಿಯನ್ನು ನೇಮಿಸಬಹುದು ಎಂದೂ ಹೇಳಲಾಗುತ್ತಿದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆಗೆ ಅವಕಾಶವಿಲ್ಲ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ನರೇಂದ್ರ ಮೋದಿಯಷ್ಟೇ ಅಲ್ಲ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ವಯಸ್ಸು ಏರಿದ್ದರೂ ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ. 72 ವರ್ಷದ ರಾಜನಾಥ್ ಸಿಂಗ್ ಅವರು ಲಕ್ನೋದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಘೋಷಿಸಿದೆ.

ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಸಚಿವರಾದರೆ 77ರ ತನಕ ಅಧಿಕಾರದಲ್ಲಿ ಮುಂದುವರಿಯಬಹುದು. ಇದನ್ನು ಇತರ ಭಾರತೀಯ ಜನತಾ ಪಕ್ಷದ ನಾಯಕರು ಒಪ್ಪಿಕೊಳ್ಳುತ್ತಾರೆಯೇ ಎಂಬ ಪ್ರಶ್ನೆಯೂ ಮೋದಿ ಮತ್ತು ರಾಜನಾಥ್ ಸಿಂಗ್ ಅವರ ಆಯ್ಕೆಯಿಂದಾಗಿ ಉದ್ಭವಿಸಿದೆ.

ಈ ಹಿಂದೆ ಕಲ್‍ರಾಜ್ ಮಿಶ್ರಾ ಅವರಂತಹ ಕೇಂದ್ರ ಸಚಿವರು ತಮ್ಮ 75ನೇ ವಯಸ್ಸಿನಲ್ಲಿ ರಾಜೀನಾಮೆ ನೀಡಿದ್ದರು ಎಂದು ಬಿಜೆಪಿಗರು ಗಮನಸೆಳೆದಿದ್ದಾರೆ. ಅದೇ ರೀತಿ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ವಯಸ್ಸು 75 ದಾಟುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿಯಬೇಕಾಯಿತು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ಆನಂದಿಬೆನ್ ಪಟೇಲ್ ಕೂಡ ಇದೇ ರೀತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ನಂತರ ರಾಜ್ಯಪಾಲರಾಗಿ ನೇಮಕವಾದರು.

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಮಾತ್ರ ಹೊರಬಿದ್ದಿದ್ದು, ಮುಂದಿನ ಪಟ್ಟಿಗಳಲ್ಲಿ 70 ದಾಟಿದ ಹಿರಿಯ ನಾಯಕರಿಗೆ ಮತ್ತೆ ಚುನಾವಣೆಯಲ್ಲಿ ಸ್ಪರ್ದಿಸಲು ಬಿಜೆಪಿ ಅವಕಾಶ ನೀಡಲಿದೆಯೇ ಎಂಬುದನ್ನು ಕಾದು ನೋಡಬೇಕು. ಮತ್ತು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಅಧಿಕಾರಕ್ಕೆ ಬಂದು, ಮೋದಿ ಮತ್ತೊಮ್ಮೆ ಪ್ರಧಾನಿಯಾದರೆ, ಪೂರ್ಣಾವಧಿಯವರೆಗೂ ಅಧಿಕಾರದಲ್ಲಿ ಮುಂದುವರಿಯುತ್ತಾರೆಯೇ ಎಂಬುದು ಅನುಮಾನವೇ ಎಂದು ಬಿಜೆಪಿಯಲ್ಲೇ ಗುಸುಗುಸು ಮಾತನಾಡಿಕೊಳ್ಳುತ್ತಿದ್ದಾರೆ.

ದೇಶ

‘ಭಾರತೀಯರೆಲ್ಲರೂ ನನ್ನ ಕುಟುಂಬ’ ಎಂದು ಭಾ‍ಷಣ ಮಾಡಿದ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ ನಟ ಪ್ರಕಾಶ್ ರಾಜ್, ‘ಮಣಿಪುರದ ಜನರು ಕೂಡ ನಿಮ್ಮ ಕುಟುಂಬವೇ’ ಎಂದು ಕೇಳಿದ್ದಾರೆ.

ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ ಮಾರ್ಚ್ 3 ರಂದು ನಡೆದ “ಜನ್ ವಿಶ್ವಾಸ್” ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್, “ಪ್ರಧಾನಿ ಮೋದಿಯವರು ರಾಷ್ಟ್ರೀಯ ಜನತಾ ದಳ ಸೇರಿದಂತೆ ವಿವಿಧ ಪಕ್ಷಗಳ ವಿರುದ್ಧ ಕುಟುಂಬ ರಾಜಕಾರಣದ ಆರೋಪಗಳನ್ನು ಎತ್ತುತ್ತಿದ್ದಾರೆ. ನರೇಂದ್ರ ಮೋದಿ ಕುಟುಂಬ ಆಡಳಿತದ ಮೇಲೆ ದಾಳಿ ನಡೆಸುತ್ತಿದ್ದಾರೆ.

ನಿಮಗೆ ಏಕೆ ಮಕ್ಕಳು ಅಥವಾ ಕುಟುಂಬವಿಲ್ಲ ಎಂಬುದನ್ನು ನೀವು (ಮೋದಿ) ಹೇಳಬೇಕು? ಹಲವು ಕುಟುಂಬಗಳು ರಾಜಕೀಯದಲ್ಲಿದ್ದರೆ ಅದು ಕುಟುಂಬ ಆಡಳಿತವೇ? ಇದು ಉತ್ತರಾಧಿಕಾರ ರಾಜಕಾರಣವೇ? ನಿಮಗೆ (ಮೋದಿ) ಕುಟುಂಬವಿಲ್ಲದಿದ್ದರೆ, ಯಾರು ಏನು ಮಾಡಲು ಸಾಧ್ಯ?” ಎಂದು ಕಟುವಾಗಿ ಟೀಕಿಸಿದ್ದರು.

ಈ ಹಿನ್ನೆಲೆಯಲ್ಲಿ, ನಿನ್ನೆ ತಮಿಳುನಾಡಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಚೆನ್ನೈನ ನಂದನಂನಲ್ಲಿ ಬಿಜೆಪಿ ವತಿಯಿಂದ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. “ನಾನು ಕುಟುಂಬ ಆಡಳಿತ ಎಂದು ಮಾತನಾಡುವುದರಿಂದ ಮೋದಿಗೆ ಕುಟುಂಬವೇ ಇಲ್ಲ ಎಂದು “ಇಂಡಿಯಾ” ಮೈತ್ರಿಕೂಟದ ನಾಯಕರು ಮಾತನಾಡುತ್ತಿದ್ದಾರೆ.

ನನ್ನ ಜೀವನ ಒಂದು ತೆರೆದ ಪುಸ್ತಕ. ದೇಶದ 140 ಕೋಟಿ ಜನರು ನನ್ನ ಕುಟುಂಬದವರೇ ಆಗಿದ್ದಾರೆ. ಕೋಟ್ಯಾಂತರ ಹೆಣ್ಣುಮಕ್ಕಳು, ತಾಯಂದಿರು ಮತ್ತು ಸಹೋದರಿಯರೆಲ್ಲರೂ ಮೋದಿಯ ಕುಟುಂಬಕ್ಕೆ ಸೇರಿದವರೇ” ಎಂದು ಹೇಳುವ ಮೂಲಕ ಲಾಲು ಪ್ರಸಾದ್ ಯಾದವ್ ಅವರ ಪ್ರಶ್ನೆಗೆ ತಕ್ಕ ಉತ್ತರ ನೀಡಿದರು.

ಈ ಹಿನ್ನೆಲೆಯಲ್ಲಿ, ದೇಶದ ಜನರೆಲ್ಲ ನನ್ನ ಕುಟುಂಬ ಎಂಬ ಪ್ರಧಾನಿ ಮೋದಿ ಹೇಳಿಕೆ ವಿರುದ್ಧ ನಟ ಪ್ರಕಾಶ್ ರಾಜ್ ಪ್ರಶ್ನೆ ಎತ್ತಿದ್ದಾರೆ. ಈ ಸಂಬಂಧ ಅವರು ತಮ್ಮ ‘ಎಕ್ಸ್’ ಸೈಟ್‌ನಲ್ಲಿ, “ಮಣಿಪುರದ ಜನರು, ದೇಶದ ರೈತರು, ನಿರುದ್ಯೋಗಿ ಯುವಕರು ನಿಮ್ಮ ಕುಟುಂಬವೇ?” ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮಣಿಪುರದಲ್ಲಿ ಭುಗಿಲೆದ್ದ ಕೋಮುಗಲಭೆ ಇಂದಿಗೂ ಮುಂದುವರೆದಿದೆ. ಈ ವಿಚಾರದಲ್ಲಿ ಮೋದಿ ಇನ್ನೂ ಆ ರಾಜ್ಯಕ್ಕೆ ಭೇಟಿ ನೀಡಿ ಜನರನ್ನು ಭೇಟಿ ಮಾಡಿಲ್ಲ. ಇನ್ನೂ ಮಣಿಪುರದಲ್ಲಿ ಉದ್ವಿಗ್ನತೆ ಕಡಿಮೆಯಾಗಿಲ್ಲ. ಇದರ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಈ ಪ್ರಶ್ನೆ ಎತ್ತಿರುವುದು ಗಮ್ನಾರ್ಹ.

ರಾಜಕೀಯ

ನವದೆಹಲಿ: ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಪ್ರಧಾನಿ ಮೋದಿ ಮತ್ತೊಮ್ಮೆ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಸಂಸತ್ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಇವೆ. ಚುನಾವಣಾ ಆಯೋಗ ಶೀಘ್ರವೇ ಘೋಷಣೆ ಮಾಡುವ ನಿರೀಕ್ಷೆ ಇದೆ.

ಯಾವಾಗ ಬೇಕಾದರೂ ಚುನಾವಣಾ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಚುನಾವಣಾ ಕಣದಲ್ಲಿ ಮೊದಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ವಿರೋಧ ಪಕ್ಷಗಳ ಮೇಲೆ ಒತ್ತಡ ಹೇರಲು ಆಡಳಿತಾರೂಢ ಬಿಜೆಪಿ ಸಿದ್ಧವಾಗುತ್ತಿದೆ. ಆ ಮೂಲಕ ನಿನ್ನೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕತ್ವ ಸಮಾಲೋಚನೆ ನಡೆಸಿದೆ.

ಇದರ ಬೆನ್ನಲ್ಲೇ ದೇಶಾದ್ಯಂತ ರಾಷ್ಟ್ರೀಯ ಪಕ್ಷಗಳು ಹಾಗೂ ಪ್ರಾದೇಶಿಕ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಕಾರ್ಯದಲ್ಲಿ ನಿರತರಾಗಿರುವಾಗಲೇ ಅಭ್ಯರ್ಥಿಗಳ ಘೋಷಣೆ ಕೂಡ ಪ್ರಕಟವಾಗುತ್ತಿದೆ.

ಈ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್.ಡಿ.ಎ) ನೇತೃತ್ವ ವಹಿಸಿರುವ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಮತ್ತಿತರರು ಸೇರಿದ್ದಾರೆ. ಅದರಂತೆ ಪ್ರಧಾನಿ ಮೋದಿ ಮತ್ತೆ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಈ ಸಂಬಂಧ ಮಾತನಡಿದ ಬಿ.ಜೆ.ಪಿ.ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವಡೆ, “ಮೊದಲ ಹಂತವಾಗಿ 16 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ” ಎಂದು ಹೇಳಿದರು.

ಅಭ್ಯರ್ಥಿಗಳ ಮೊದಲ ಪಟ್ಟಿಯ ಪ್ರಕಾರ 34 ಸಚಿವರು ಮತ್ತೆ ಸ್ಪರ್ಧಿಸುತ್ತಿದ್ದಾರೆ. ಪಟ್ಟಿಯಲ್ಲಿ 28 ಮಹಿಳೆಯರು ಮತ್ತು 47 ಮಂದಿ 50 ವರ್ಷದೊಳಗಿನವರು. ಉತ್ತರಪ್ರದೇಶ-51, ಪಶ್ಚಿಮ ಬಂಗಾಳ-20, ತೆಲಂಗಾಣ-9, ಗುಜರಾತ್ -15 ಮಧ್ಯಪ್ರದೇಶ-24, ರಾಜಸ್ಥಾನ-15, ಕೇರಳ-12, ಜಾರ್ಖಂಡ್, ಛತ್ತೀಸ್‌ಗಢ ತಲಾ 11.

ಪ್ರಧಾನಿ ಮೋದಿ, ವಾರಣಾಸಿ; ಸಚಿವ ಅಮಿತ್ ಶಾ, ಗಾಂಧಿನಗರದಲ್ಲಿ ಸ್ಪರ್ದಿಸುತ್ತಿದ್ದಾರೆ.

ರಾಜಕೀಯ

ಡಿ.ಸಿ.ಪ್ರಕಾಶ್ ಸಂಪಾದಕರು

ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಾರ್ಟಿ-3, ಕಾಂಗ್ರೆಸ್-2, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟ-1 ಸ್ಥಾನಕ್ಕೆ ಸ್ಪರ್ಧಿಸಲು ಒಪ್ಪಂದ ನಡೆದಿವೆ ಎಂಬ ವರದಿಗಳು ಬರುತ್ತಿವೆ!

ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಾರ್ಟಿ ಮತ್ತು ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯೊಂದಿಗೆ ಕಾಂಗ್ರೆಸ್ ಪಕ್ಷವು ಸುಗಮ ಕ್ಷೇತ್ರ ಒಪ್ಪಂದವನ್ನು ಮಾಡಿಕೊಂಡಿದೆ ಎಂದು ವರದಿಯಾಗಿವೆ. ಈ ಕುರಿತು ಅಧಿಕೃತ ಅಧಿಸೂಚನೆ ಹೊರ ಬೀಳುವುದೊಂದೆ ಬಾಕಿ.

ಕಾಂಗ್ರೆಸ್ ಪಕ್ಷವು ‘ಇಂಡಿಯಾ’ ಮೈತ್ರಿಕೂಟದಲ್ಲಿರುವ ಆಮ್ ಆದ್ಮಿ ಪಕ್ಷ, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಾರ್ಟಿಯೊಂದಿಗೆ ಕ್ಷೇತ್ರ ಒಪ್ಪಂದದ ಮಾತುಕತೆಗಳನ್ನು ನಡೆಸಿತು. ಆದರೆ, ಈ ಮಾತುಕತೆಗಳಲ್ಲಿ ಆರಂಭದಲ್ಲಿ ಭಾರಿ ಹಿನ್ನಡೆ ಉಂಟಾಯಿತು. ಅಲ್ಲದೆ, ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸಿದ್ದ ನಿತೀಶ್ ಕುಮಾರ್, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ ಮತ್ತೆ ಪಲಾಯನ ಮಾಡಿದರು. ಉತ್ತರಪ್ರದೇಶದಲ್ಲಿ ರಾಷ್ಟ್ರೀಯ ಲೋಕದಳ ಕೂಡ ಬಿಜೆಪಿ ಕಡೆಗೆ ಓಡಿ ಹೋಯಿತು.

‘ಇಂಡಿಯಾ’ ಮೈತ್ರಿಕೂಟವು ಲೋಕಸಭೆ ಚುನಾವಣೆಯನ್ನು ಎದುರಿಸಲಿದೆಯೇ? ‘ಇಂಡಿಯಾ ಮೈತ್ರಿಕೂಟ ಉಳಿಯುತ್ತದೆಯೇ? ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಮುಗಿಲುಮುಟ್ಟಿದವು. ಈ ಹಿನ್ನಲೆಯಲ್ಲಿ, ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ 5 ರಾಜ್ಯಗಳಲ್ಲಿ ಸೀಟು ಹಂಚಿಕೆ ನಿರ್ಧಾರ ಪ್ರಕಟಿಸಿತು. ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಪ್ರಬಲವಾಗಿರುವುದರಿಂದ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧಾರ ಕೈಗೊಂಡಿತು. ಉತ್ತರಪ್ರದೇಶದಲ್ಲೂ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಸುಲಲಿತವಾಗಿ ಕ್ಷೇತ್ರ ಒಪ್ಪಂದವನ್ನು ಮಾಡಿಕೊಂಡಿತು.

ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವು ಡಿಎಂಕೆ ಜೊತೆ ಸೀಟು ಹಂಚಿಕೆಗೆ ಮಾತುಕತೆ ನಡೆಸುತ್ತಿದೆ. ಈ ಮಾತುಕತೆ ಶೀಘ್ರದಲ್ಲೇ ಅಂತ್ಯಗೊಳ್ಳಲಿದೆ ಎಂದು ವರದಿಗಳಾಗಿವೆ. ಆಂಧ್ರಪ್ರದೇಶದಲ್ಲಿ, ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಶರ್ಮಿಳಾ ಎಡಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಕೇರಳದಲ್ಲಿ ಎಡ ಪಕ್ಷಗಳು ಮತ್ತು ಕಾಂಗ್ರೆಸ್ ಪ್ರಬಲ ಪಕ್ಷಗಳಾಗಿರುವುದರಿಂದ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿವೆ.

ಅದೇ ರೀತಿ ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಜೊತೆ ಕಾಂಗ್ರೆಸ್ ಪಕ್ಷ ನಡೆಸಿದ ಸೀಟು ಹಂಚಿಕೆಯ ಮೊದಲ ಹಂತದ ಮಾತುಕತೆಯಲ್ಲಿ ಭಾರಿ ಹಿನ್ನಡೆಯಾಗಿತ್ತು. ಇದರಿಂದ ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದರು.

ಆದರೆ, ಕಾಂಗ್ರೆಸ್ ಪಕ್ಷವು ಸೀಟು ಹಂಚಿಕೆ ಬಗ್ಗೆ ನಿರಂತರ ಮಾತುಕತೆ ನಡೆಸಿದ ಪರಿಣಾಮ, ಪ್ರಸ್ತುತ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಾರ್ಟಿ-3, ಕಾಂಗ್ರೆಸ್-2, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟ-1 ಸ್ಥಾನಕ್ಕೆ ಸ್ಪರ್ಧಿಸಲು ಒಪ್ಪಂದ ನಡೆದಿವೆ ಎಂಬ ವರದಿಗಳು ಬರುತ್ತಿವೆ. ಈ ಕುರಿತು ಅಧಿಕೃತ ಅಧಿಸೂಚನೆ ಯಾವಾಗ ಬೇಕಾದರೂ ಬಿಡುಗಡೆಯಾಗಬಹುದು ಎಂದು ಹೇಳಲಾಗುತ್ತಿದೆ. ಇದರಿಂದ ಬಿಜೆಪಿಯ 370 ಕ್ಷೇತ್ರಗಳ ಕನಸು ಬಗ್ನವಾಗವ ಕಾಲ ಸಮೀಪಿಸುತ್ತಿದೆಯೇ ಎಂಬುದನ್ನು ಕಾದು ನೋಡಣ.