ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಹಾಸನ Archives » Dynamic Leader
October 23, 2024
Home Posts tagged ಹಾಸನ
ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 6 ದಿನಗಳ ಎಸ್.ಐ.ಟಿ ಕಸ್ಟಡಿಗೆ ನ್ಯಾಯಾಲಯ ಆದೇಶಿಸಿದೆ. ಜಾತ್ಯತೀತ ಜನತಾದಳದ ರಾಷ್ಟ್ರೀಯ ನಾಯಕ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಹಾಸನದ ಸಂಸದರಾಗಿದ್ದಾರೆ. ಮತ್ತೆ ಅದೇ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಕೆಲವು ಮಹಿಳೆಯರನ್ನು ಬೆದರಿಸಿ ಅತ್ಯಾಚಾರವೆಸಗಿದ್ದಾರೆ. ಸಾಕಷ್ಟು ಅಶ್ಲೀಲ ವಿಡಿಯೋಗಳನ್ನು ಹೊಂದಿದ್ದಾರೆ ಎಂದು ಕಳೆದ ತಿಂಗಳು ಹಲವು ಫೋಟೋ ಮತ್ತು ವಿಡಿಯೋಗಳು ಪೆನ್ ಡ್ರೈವ್ ಮೂಲಕ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿದ್ದವು ಎಂದು ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ, ಕಳೆದು ಏಪ್ರಿಲ್ 26 ರಂದು ಹಾಸನದಲ್ಲಿ ಮೊದಲ ಹಂತದ ಚುನಾವಣೆ ನಡೆದ ನಂತರ ಪ್ರಜ್ವಲ್ ಜರ್ಮನಿಗೆ ಪಲಾಯನ ಮಾಡಿದರು.

ಸಂತ್ರಸ್ತ ಮಹಿಳೆಯರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾದವು. ಈ ಪ್ರಕರಣವನ್ನು ವಿಶೇಷ ತನಿಖಾ ತಂಡವಾದ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಜ್ವಲ್ ರೇವಣ್ಣ ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅಲ್ಲಿ ಅವರನ್ನು ಎಸ್‌ಐಟಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.

ಈ ಹಿನ್ನೆಲೆಯಲ್ಲಿ, ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ವಿಶೇಷ ತನಿಖಾ ತಂಡ, 14 ದಿನಗಳ ಕಾಲ ಕಸ್ಟಡಿಗೆ ಪಡೆದು ತನಿಖೆ ನಡೆಸಲು ಅನುಮತಿ ಕೋರಿತ್ತು. ನ್ಯಾಯಾಧೀಶರು 6 ದಿನ ಮಾತ್ರ ರಿಮಾಂಡ್‌ಗೆ ಅನುಮತಿ ನೀಡಿದ್ದು, ಜೂನ್ 6 ರಂದು ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಆದೇಶಿಸಿದರು.  

ರಾಜ್ಯ

ಬೆಂಗಳೂರು: ಪ್ರಜ್ವಲ್ ಪೆನ್ ಡ್ರೈವ್ ಹಗರಣದಿಂದ ನಾಡಿನ ಜನತೆ ತಲೆ ಎತ್ತಿ ನಡೆಯದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ  ಅನೈತಿಕ ವ್ಯವಹಾರವನ್ನು ಹಿಡಿದು ಎರಡು ಪಕ್ಷಗಳು ಆರೋಪ ಪ್ರತ್ಯರೋಪ ಮಾಡುತ್ತಾ ಮಾತಿನ ಸಮರ ನಡೆಸುತ್ತಿರುವುದು ನಾಚಿಕೆಗೇಡಿನ ವಿಷಯ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ಅಭಿಪ್ರಾಯ ಪಟ್ಟಿದ್ದಾರೆ.

ಹಣ, ಅಧಿಕಾರ ಬಳಸಿ ಅನೈತಿಕ ಸಂಬಂಧ ಬೆಳೆಸಿದ ಪ್ರಜ್ವಲ್ ರೇವಣ್ಣ ಪ್ರಕರಣದಿಂದ ರಾಜ್ಯದ ಮಾನ ಹರಾಜಾಗಿದೆ. ದೇಶದಾದ್ಯಂತ ಈ ಪ್ರಕರಣ ಸುದ್ದಿಯಾಗಿದೆ. ಅತ್ಯಾಚಾರ ಆರೋಪಿ ಪ್ರಜ್ವಲ್ ನನ್ನು ಹಿಡಿದು ಹೆಡೆಮುರಿಕಟ್ಟಿ ಬಂಧಿಸಿ ರಾಜ್ಯದ ಗೌರವ ಕಾಪಾಡುವ ಬದಲು, ಪೆನ್ ಡ್ರೈವ್ ಬಹಿರಂಗ ಪಡಿಸಿದವರು ಯಾರು ಎಂಬ ಚರ್ಚೆಯಾಗುತ್ತಿರುವುದು ಹಾಸ್ಯಾಸ್ಪದ. ರಾಜಕೀಯ ಪ್ರಭಾವ ಬಳಸಿ ದೇಶದಿಂದ ಆರೋಪಿಗಳು ಪರಾರಿಯಾಗುವುದು ಇಲ್ಲಿ ಸಾಮಾನ್ಯವಾಗಿದೆ.

ಇಂತಹ ಬೆಳವಣಿಗೆಗಳಿಗೆ ಅಂತ್ಯ ಹಾಡಬೇಕು. ಮೊದಲು ಆರೋಪಿ ಸ್ಥಾನದಲ್ಲಿರುವವರನ್ನು ಬಂಧಿಸಿ, ಸಂತ್ರಸ್ತರಿಗೆ ನ್ಯಾಯ ಒದಗಿಸಲು ಪಕ್ಷಗಳು ಪ್ರಯತ್ನಿಸಬೇಕಾಗಿದೆ. ಎಷ್ಟೇ ಪ್ರತಿಷ್ಠಿತ ಕುಟುಂಬವಾದರೂ ಸರಿ, ಇಂತಹ ಅನಾಗರಿಕ ಹಗರಣದ ಆರೋಪಿಗಳನ್ನು ಯಾರೂ ಬೆಂಬಲಿಸಬಾರದು. ಕನ್ನಡ ನಾಡಿನ ಮಾನಕ್ಕೆ ದಕ್ಕೆ ತಂದಿರುವ ಪ್ರಕರಣದಲ್ಲಿ ರಾಜಕೀಯವನ್ನು ಬದಿಗಿಟ್ಟು, ಪ್ರಾಮಾಣಿಕವಾಗಿ… ನ್ಯಾಯಬದ್ದವಾಗಿ… ವರ್ತಿಸಿ, ಆರೋಪಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ಕ್ರಮ ಕೈಗೊಂಡು, ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ತಾಹೇರ್ ಹುಸೇನ್ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

ರಾಜಕೀಯ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಎಸ್‌ಐಟಿ ಎನ್ನುವುದು ರಿಮೋಟ್ ಕಂಟ್ರೋಲ್ ಮೇಲೆ ಕೆಲಸ ಮಾಡುತ್ತಿದೆ. ಅದು ಸರ್ಕಾರದ ರಬ್ಬರ್ ಸ್ಟಾಂಪ್’’ ಎಂದು ಬಿಜೆಪಿ ನಾಯಕ ದೇವರಾಜೇಗೌಡರ ಆರೋಪ ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿದೆ. ಇದು ಅಪರಾಧಿಗಳನ್ನು ರಕ್ಷಿಸುವ ದುರುದ್ದೇಶದಿಂದ ತನಿಖೆಯ ಹಾದಿ ತಪ್ಪಿಸಲು ಮಾಡಿರುವ ಕುತಂತ್ರವಾಗಿದೆ ಎಂದಿದ್ದಾರೆ.

ಎಸ್‌ಐಟಿ ಸಂಪೂರ್ಣವಾಗಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಈ ಉದ್ದೇಶದಿಂದಲೇ ಆಯ್ದ ದಕ್ಷ ಅಧಿಕಾರಿಗಳನ್ನು ಸೇರಿಸಿಕೊಂಡು ಎಸ್‌ಐಟಿ ರಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು.

ಎಸ್‌ಐಟಿ ತನಿಖೆಯ ಯಶಸ್ಸು ಈಗ ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ. ವಿದೇಶದಲ್ಲಿದ್ದಾನೆ ಎಂದು ಹೇಳಲಾದ ಆರೋಪಿ ಪ್ರಜ್ವಲ್ ರೇವಣ್ಣನವರನ್ನು ಭಾರತಕ್ಕೆ ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ. ಜೆಡಿಎಸ್ ಜೊತೆ ಈಗಲೂ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಹೇಳಿದ್ದಾರೆ.

ರಾಜಕೀಯ

ನವದೆಹಲಿ: ಪ್ರಧಾನಿ ಮೋದಿಯವರ ರಾಜಕೀಯ ಕುಟುಂಬದ ಸದಸ್ಯರಾಗಿರುವ ಕ್ರಿಮಿನಲ್‌ಗಳಿಗೆ ಭದ್ರತೆಯ ಭರವಸೆ ಇದೆಯೇ? ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಮೌನವಾಗಿರುವುದೇಕೆ? ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬಿಜೆಪಿ ಮೈತ್ರಿಕೂಟದ ಸದಸ್ಯ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಪ್ರಕರಣದಿಂದ ಇಡೀ ದೇಶವೇ ತಲೆ ತಗ್ಗಿಸುವಂತಾಗಿದೆ. ಇದನ್ನು ರಾಹುಲ್ ಗಾಂಧಿ ಖಂಡಿಸಿದ್ದಾರೆ. ಈ ಕುರಿತು ಅವರು ತಮ್ಮ ಎಕ್ಸ್ ಪೇಜ್ ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, “ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಪ್ರಧಾನಿ ಮೋದಿ ಮೌನವಾಗಿರುವುದು ಏಕೆ? ಪ್ರಧಾನಿ ಉತ್ತರಿಸಬೇಕು.

ಭಾರತದ ಜನತೆಗೆ ಅನ್ಯಾಯವಾಗುತ್ತಿರುವಾಗ ಪ್ರಧಾನಿ ಮೋದಿ ಅಪರಾಧಿಗಳಿಗೆ ಬೆಂಬಲ ನೀಡುವ ಹಾಗೆ ಮೌನವಹಿಸುತ್ತಿದ್ದಾರೆ. ಇಷ್ಟು ದೊಡ್ಡ ಅಪರಾಧಿ ದೇಶದಿಂದ ಅಷ್ಟು ಸುಲಭವಾಗಿ ತಪ್ಪಿಸಿಕೊಳ್ಳುವುದು ಹೇಗೆ? ಅಪರಾಧಿಗಳಿಗೆ ಪ್ರಧಾನಿ ಮೋದಿಯವರ ಮೌನ ಬೆಂಬಲವು ದೇಶಾದ್ಯಂತ ಅಪರಾಧಿಗಳನ್ನು ಹುರಿದುಂಬಿಸುತ್ತದೆ. ಪ್ರಧಾನಿ ಮೋದಿಯವರ ರಾಜಕೀಯ ಕುಟುಂಬದ ಸದಸ್ಯರಾಗಿರುವ ಕ್ರಿಮಿನಲ್‌ಗಳಿಗೆ ಭದ್ರತೆಯ ಭರವಸೆ ಇದೆಯೇ? ಎಂದು ಕೇಳಿದ್ದಾರೆ.

ರಾಜಕೀಯ

ಬೆಂಗಳೂರು: ಹಾಸನದ  ಸಂಸದ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಿಂದ ರಾಜ್ಯವು ದೇಶದ ಮುಂದೆ ತಲೆತಗ್ಗಿಸುವಂತೆ ಮಾಡಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ರಾಜ್ಯ ಅಧ್ಯಕ್ಷ ಅಡ್ವೊಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ಇಂತಹ ವಿಕೃತಿ ಹೊಂದಿರುವವ ಜನ ಪ್ರತಿನಿಧಿಯಾಗಿರುವುದು ಸಂಸತ್ತಿನ ಇತಿಹಾಸಕ್ಕೆ ಕಪ್ಪು ಚುಕ್ಕೆ. ನೈತಿಕ ಅ ಅಧಃಪತನದ ಪರಮಾವಧಿಯಿದು. ಇಂತಹ ಜನಪ್ರತಿನಿಧಿಯಿಂದ ಸಮಾಜ ದೇಶ ಹೇಗೆ ಉದ್ದಾರವಾದೀತು?

ಹಿಂದೂ ಹೆಣ್ಣು ಮಕ್ಕಳ ವಕ್ತಾರರಂತೆ ಪೋಸು ಕೊಟ್ಟು ಮಾಧ್ಯಮಗಳ ಮುಂದೆ ನಾಲಗೆ ಹರಿಯ ಬಿಡುವ ಬಿಜೆಪಿಯ ವಾಕ್ಚತುರ ಹೋರಾಟಗಾರರು ಏಕೆ ಮೌನವಾಗಿದ್ದಾರೆ? ಅಲ್ಪಸಂಖ್ಯಾತ ವರ್ಗದ ಯುವಕರಿಂದ ಲೈಂಗಿಕ ಅಪರಾಧ ನಡೆದರೆ ಮಾತ್ರ ಹೋರಾಟವೇ? ಈ ಸಂತ್ರಸ್ತ ಹೆಣ್ಮಕ್ಕಳ ಪರ ಹೋರಾಡದೆ ಏಕೆ ಇವರೆಲ್ಲ ತೆಪ್ಪಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಂತ್ರಸ್ತ ಮಹಿಳೆಯರು ಪ್ರಜ್ವಲ್ ಜೊತೆಗೆ ಅವರ ತಂದೆ ಮಾಜಿ ಸಚಿವ ಹೆಚ್.ಡಿ.ರೇವಣ್ಣನವರ ಮೇಲೆಯೂ ಆರೋಪ ಹೊರಿಸಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಬುಗಿಲೆದ್ದ ಪ್ರತಿಭಟನೆಗಳಿಂದ ಪಾರಾಗಲು ಕಾಟಾಚಾರದ ತನಿಖೆ ಆಗಬಾರದು. ಯಾಕೆಂದರೆ ಇಂತಹ ತನಿಖೆಗಳು ದಡ ಸೇರಿದ್ದು ವಿರಳ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಹಣದಿಂದ ಗ್ರಾಮೀಣ ಹೆಣ್ಣು ಮಕ್ಕಳು ಅಡ್ಡ ದಾರಿ ಹಿಡಿಯುತ್ತಾರೆಂಬ ಅರ್ಥದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೊದಲು ತಮ್ಮ ಪರಿವಾರದ ಕಡೆಗೆ ತಿರುಗಿ ನೋಡಲಿ. ನಂತರ  ಬಡ ಹೆಣ್ಣುಮಕ್ಕಳ ಬಗ್ಗೆ ಮಾತನಾಡಲಿ ಎಂದು ವ್ಯಂಗ್ಯವಾಡಿದ್ದಾರೆ.

ಹೆಣ್ಮಕ್ಕಳ ಅಸಹಾಯಕತೆಯನ್ನು ದುರುಪಯೋಗ ಪಡಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸತ್ಯಾಸತ್ಯತೆ ಹೊರ ಬರಲೇಬೇಕು. ತಪ್ಪು ಮಾಡಿ ದೇಶ ಬಿಟ್ಟು ವಿದೇಶಕ್ಕೆ ಪಲಾಯನ ಮಾಡುವುದು ಇಂದು ಸಾಮಾನ್ಯವಾಗಿದೆ. ಈ ವಿದೇಶ ಪಲಾಯನದಲ್ಲಿ ಯಾರದ್ದಾದರೂ ಪ್ರಭಾವ ಇದೆಯೇ ಎಂಬ ಕುರಿತೂ ತನಿಖೆ ಆಗಬೇಕಾಗಿದೆ ಎಂದು ಅವರು ಹೇಳಿದ್ದಾರೆ.